Friday, February 4, 2022

ಶಾಸಕರ ಹೆಸರಿನಲ್ಲಿ ಅಕ್ರಮ ಬಡಾವಣೆ, ನಿವಾಸಿಗಳಿಗೆ ದೃಢೀಕರಣ ಪತ್ರ

ಬಿಜೆಪಿ ಹೋರಾಟಕ್ಕೆ ತಹಸೀಲ್ದಾರ್ ತಲೆ ದಂಡ..?, ವರ್ಗಾವಣೆ ಖಂಡಿಸಿ ಫೆ. ೫ರಂದು ಪ್ರತಿಭಟನೆ

ತಹಸೀಲ್ದಾರ್ ಪ್ರದೀಪ್ ಆರ್ ನಿಕ್ಕಮ್
    ಭದ್ರಾವತಿ, ಫೆ. ೪: ಅಕ್ರಮವಾಗಿ ಬಡಾವಣೆ ನಿರ್ಮಿಸಿಕೊಂಡು ನಿವಾಸಿ ದೃಢೀಕರಣ ನೀಡಲಾಗಿದೆ ಎಂದು ಆರೋಪಿಸಿ ಕೆಲವು ದಿನಗಳ ಹಿಂದೆ ತಾಲೂಕು ಬಿಜೆಪಿ ಮಂಡಲ ವತಿಯಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಗಿತ್ತು. ಇದಕ್ಕೆ ಪೂರಕವೆಂಬಂತೆ ಇದೀಗ ತಹಸೀಲ್ದಾರ್ ವರ್ಗಾವಣೆ ಸುದ್ದಿ ವ್ಯಾಪಕವಾಗಿ ಹರಡಿದ್ದು, ವರ್ಗಾವಣೆ ಹಿಂದೆ ಕಾಣದ ಕೈಗಳು ಕೆಲಸ ಮಾಡಿವೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ.
    ತಾಲೂಕಿನ ಕಂಬದಾಳು ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಳಿಕಲ್ ಬೆಟ್ಟದಲ್ಲಿರುವ ಅರಣ್ಯ ಇಲಾಖೆಗೆ ಸೇರಿರುವ ಜಾಗವನ್ನು ಕೆಲವರು ಅಕ್ರಮವಾಗಿ ಕಬಳಿಸಿಕೊಂಡು ಶೆಡ್‌ಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿದ್ದು, ಈ ಜಾಗಕ್ಕೆ ಬಿ.ಕೆ ಸಂಗಮೇಶ್ವರ್ ಬಡಾವಣೆ ಎಂಬ ಹೆಸರನ್ನು ನಾಮಕರಣಗೊಳಿಸಿ ನಿವಾಸಿಗಳಿಗೆ ಬಡಾವಣೆ ಹೆಸರಿನಲ್ಲಿ ನಿವಾಸಿ ದೃಢೀಕರಣ ನೀಡಲಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಗಿತ್ತು.  ಅಲ್ಲದೆ ನಿವಾಸಿ ದೃಢೀಕರಣ ಪತ್ರ ನೀಡಲು ಕಾರಣಕರ್ತರಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ಪೂರಕವೆಂಬಂತೆ ಇದೀಗ ತಹಸೀಲ್ದಾರ್ ಪ್ರದೀಪ್ ಆರ್ ನಿಕ್ಕಮ್ ವರ್ಗಾವಣೆ ಸುದ್ದಿ ಕೇಳಿ ಬರುತ್ತಿದೆ.
    ಪುರಸಭೆ ತಹಸೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರದೀಪ್ ಆರ್ ನಿಕ್ಕಮ್ ಕಳೆದ ವರ್ಷ ಜುಲೈ ತಿಂಗಳಿನಲ್ಲಿ ವರ್ಗಾವಣೆಗೊಂಡು ಬಂದಿದ್ದರು. ಇವರ ವಿರುದ್ಧ ಇದುವರೆಗೂ ಯಾವುದೇ ಆರೋಪಗಳು ಕೇಳಿ ಬಂದಿರಲಿಲ್ಲ. ಉತ್ತಮವಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.
    ಕಛೇರಿಯಲ್ಲಿ ಪಾರದರ್ಶಕ ಆಡಳಿತಕ್ಕೆ ಹೆಚ್ಚಿನ ಒತ್ತುವ ನೀಡುವ ಜೊತೆಗೆ ಹೊಸತನ ರೂಪಿಸಿದ್ದರು. ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಸಿಬ್ಬಂದಿಗಳು ಹಾಗು ದಾನಿಗಳಿಂದ ಆರ್ಥಿಕ ನೆರವು ಸಂಗ್ರಹಿಸಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದರು. ಇದರ ಜೊತೆಗೆ ಹಲವಾರು ಅಕ್ರಮಗಳ ವಿರುದ್ಧ ಧ್ವನಿ ಎತ್ತಿದ್ದರು. ಇದೀಗ ಇವರ ವರ್ಗಾವಣೆ ಸುದ್ದಿ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
    ವರ್ಗಾವಣೆ ವಿರುದ್ಧ ಫೆ.೫ರಂದು ಹೋರಾಟ :
    ದಕ್ಷ, ಪ್ರಾಮಾಣಿಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ತಹಸೀಲ್ದಾರ್ ಪ್ರದೀಪ್ ಆರ್. ನಿಕ್ಕಮ್ ಅವರನ್ನು ಉದ್ದೇಶ ಪೂರ್ವಕವಾಗಿ ವರ್ಗಾವಣೆ ಗೊಳಿಸುತ್ತಿರುವುದನ್ನು ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಮತ್ತು ಸುವರ್ಣ ಮಹಿಳಾ ವೇದಿಕೆ ಖಂಡಿಸಿದೆ.
    ತಹಸೀಲ್ದಾರ್ ವರ್ಗಾವಣೆ ರದ್ದು ಮಾಡುವ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಸಲ್ಲಿಸಿ ಗಮನ ಸೆಳೆಯಲು ಫೆ.೫ರಂದು ಬೆಳಿಗ್ಗೆ ೧೧.೫೯ಕ್ಕೆ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.

ನಗರಸಭೆ ಆದಾಯ ಹೆಚ್ಚಿಸಿಕೊಳ್ಳುವ ಯೋಜನೆಗಳನ್ನು ರೂಪಿಸಿಕೊಳ್ಳಿ

ಪೂರ್ವಭಾವಿ ಬಜೆಟ್ ಮಂಡನೆ ಸಭೆಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸಲಹೆ


    ಭದ್ರಾವತಿ, ಫೆ. ೪: ನಗರಸಭೆ ಆದಾಯ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಅಗತ್ಯವಿರುವ ಯೋಜನೆಗಳನ್ನು ರೂಪಿಸಿಕೊಳ್ಳುವಂತೆ ಶುಕ್ರವಾರ ನಡೆದ ನಗರಸಭೆ ಬಜೆಟ್(ಆಯವ್ಯಯ) ಮಂಡನೆ ಪೂರ್ವಭಾವಿ ಸಭೆಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸಲಹೆಗಳು ವ್ಯಕ್ತವಾದವು.
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಗರದ ಏಳಿಗೆಗೆ ಹಾಗು ನಾಗರೀಕ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಅಂದಾಜು ೫೩೨೩ ಲಕ್ಷ ರು. ವೆಚ್ಚದ ಬಜೆಟ್ ಮಂಡನೆಗೆ ಅಗತ್ಯವಿರುವ ಸಲಹೆ ಮತ್ತು ಮಾರ್ಗದರ್ಶನ ನಗರದ ವಿವಿದ ಸಂಘ-ಸಂಸ್ಥೆಗಳ ಮುಖಂಡರಿಂದ ವ್ಯಕ್ತವಾದವು.
    ಸಭೆ ಆರಂಭಗೊಳ್ಳುತ್ತಿದ್ದಂತೆ ನಗರಸಭೆ ಮಾಜಿ ಉಪಾಧ್ಯಕ್ಷ ಟಿ. ವೆಂಕಟೇಶ್ ಮಾತನಾಡಿ, ಪೂರ್ವಭಾವಿ ಸಭೆಯಲ್ಲಿ ಚರ್ಚಿಸಲು ಪೂರಕವಾದ ಮಾಹಿತಿಗಳನ್ನು ಇದುವರೆಗೂ ನೀಡಿಲ್ಲ. ಇದರಿಂದಾಗಿ ಯಾವ ರೀತಿ ಚರ್ಚೆ ನಡೆಸಬೇಕೆಂಬ ಗೊಂದಲ ನಿರ್ಮಾಣವಾಗಿದೆ. ತಕ್ಷಣ ಪೂರಕ ಮಾಹಿತಿ ನೀಡುವಂತೆ ಆಗ್ರಹಿಸಿದರು. ಇದಕ್ಕೆ ಧ್ವನಿಗೂಡಿಸಿದ ದಿ ಎಕ್ಸ್‌ಟೆನ್‌ಷನ್ ಹೌಸ್ ಬಿಲ್ಡಿಂಗ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಬಿ.ಎಸ್ ನಾರಾಯಣಪ್ಪ ಪೂರ್ವಭಾವಿ ಸಭೆಗೆ ಅಗತ್ಯವಿರುವ ಪೂರಕವಾದ ಮಾಹಿತಿಗಳನ್ನು ಮುಂಚಿತವಾಗಿ ಪತ್ರಕರ್ತರಿಗೆ ನೀಡಬೇಕಾಗಿದೆ. ಇದರಿಂದ ಸಭೆಗೆ ಬರುವ ಮೊದಲೇ ಎಲ್ಲರಿಗೂ ಪೂರಕ ಮಾಹಿತಿ ತಿಳಿದುಬರುತ್ತದೆ.  ಈ ಹಿಂದಿನಿಂದಲೂ ಮೊದಲೇ ಪೂರಕ ಮಾಹಿತಿಗಳನ್ನು ನೀಡಲಾಗುತ್ತಿತ್ತು. ಆದರೆ ಈ ಬಾರಿ ಪತ್ರಕರ್ತರೇ ಕೇಳುವಂತಹ ಸ್ಥಿತಿ ಉದ್ಭವವಾಗಿದೆ ಎಂದರು.
    ಮನೆ ಮಾಲೀಕರ ಸಂಘದ ಅಧ್ಯಕ್ಷ ಟಿ.ಜಿ ಬಸವರಾಜಯ್ಯ ಮಾತನಾಡಿ, ಪೂರಕ ಮಾಹಿತಿಯಲ್ಲಿ ಕಳೆದ ಸಾಲಿನ ಬಜೆಟ್ ಅಂಕಿ-ಅಂಶಗಳನ್ನು ನೀಡಿಲ್ಲ. ಇದರಿಂದಾಗಿ ಈ ಬಾರಿ ಯಾವುದಕ್ಕೆ ಎಷ್ಟು ಹಣ ಮೀಸಲಿಡಬೇಕೆಂಬುದು ತಿಳಿದು ಬರುತ್ತಿಲ್ಲ. ನಗರದಲ್ಲಿ ನೈರ್ಮಲ್ಯೀಕರಣ ವ್ಯವಸ್ಥಿತವಾಗಿ ನಡೆಯುತ್ತಿಲ್ಲ. ಈ ಹಿನ್ನಲೆಯಲ್ಲಿ ಇನ್ನೂ ಹೆಚ್ಚಿನ ಹಣ ಮೀಸಲಿಟ್ಟು ವ್ಯವಸ್ಥಿತವಾಗಿ ನಡೆಸುವ ಮೂಲಕ ನಗರವನ್ನು ಮಾದರಿಯನ್ನಾಗಿಸಬೇಕೆಂದರು.
    ನಗರಸಭಾ ವ್ಯಾಪ್ತಿಯ ಎಲ್ಲಾ ಕನ್ಸರ್‍ವೆನ್ಸಿ ರಸ್ತೆಗಳನ್ನು ಹಾಗು ಚರಂಡಿಗಳನ್ನು ಸ್ವಚ್ಛಗೊಳಿಸುವುದು. ಇದರಿಂದ ರೋಗರುಜಿನಗಳು ಕಾಣಿಸಿಕೊಳ್ಳುವುದಿಲ್ಲ. ಜೊತೆಗೆ ಸೊಳ್ಳೆಗಳ ಹಾವಳಿ ಕಡಿಮೆಯಾಗಲಿದೆ.  ಈ ಹಿನ್ನಲೆಯಲ್ಲಿ ಇದಕ್ಕೆ ತಗುಲುವ ವೆಚ್ಚವನ್ನು ಬಜೆಟ್‌ನಲ್ಲಿ ತೆಗೆದಿರಿಸಬೇಕೆಂದರು.
    ನಗರಸಭೆ ವತಿಯಿಂದ ನೀರಿನ ನಿರ್ವಹಣೆಗೆ ಮಾಡುತ್ತಿರುವ ಖರ್ಚು ಅಧಿಕವಾಗಿದ್ದು, ಇದನ್ನು ಕಡಿಮೆಗೊಳಿಸಬೇಕು. ಭದ್ರಾ ನದಿಯು ನಗರದ ಮಧ್ಯ ಭಾಗದಲ್ಲಿ ಹರಿಯುತ್ತಿದ್ದರೂ ಸಹ ನೀರಿಗೆ ಹೆಚ್ಚಿನ ಶುಲ್ಕ ವಸೂಲಾತಿ ಮಾಡುತ್ತಿರುವುದು ಸರಿಯಲ್ಲ. ಅನಗತ್ಯವಾಗಿರುವ ಬೀದಿ ನಲ್ಲಿಗಳನ್ನು ಮತ್ತು ಅನಧಿಕೃತ ನಲ್ಲಿಗಳನ್ನು ಪತ್ತೆ ಹಚ್ಚಿ ನೀರು ಸರಬರಾಜು ಸ್ಥಗಿತಗೊಳಿಸುವುದು. ಪೌರಸೇವಾ ನೌಕರರು ಮತ್ತು ಧಾರ್ಮಿಕ ಕೇಂದ್ರಗಳು ಹೊರತುಪಡಿಸಿ ಬೇರೆ ಯಾರಿಗೂ ಉಚಿತವಾಗಿ ನೀರಿನ ವ್ಯವಸ್ಥೆ ಕಲ್ಪಿಸಬಾರದು. ಬಾಡಿಗೆ ಮನೆಗಳಿಂದಲೂ ನೀರಿನ ಶುಲ್ಕ ವಸೂಲಾತಿ ಮಾಡಬೇಕೆಂದರು.
    ಬೀದಿ ದೀಪಗಳನ್ನು ಸರಿಯಾಗಿ ನಿರ್ವಹಿಸಬೇಕು. ನಿಗದಿತ ಸಮಯಕ್ಕೆ ಸರಿಯಾಗಿ ಬೀದಿಗಳನ್ನು ನಂದಿಸಬೇಕು. ಇದರಿಂದ ಅನಗತ್ಯವಾಗಿ ವಿದ್ಯುತ್ ಪೋಲಾಗುವುದನ್ನು ತಡೆಯಬಹುದಾಗಿದ್ದು, ಜೊತೆಗೆ ಮುಖ್ಯರಸ್ತೆ ಸೇರಿದಂತೆ ಎಲ್ಲಾ ರಸ್ತೆಗಳಲ್ಲಿ ಎಲ್‌ಇಡಿ ದೀಪಗಳನ್ನು ಅಳವಡಿಸಬೇಕು. ಇದರಿಂದ ವಿದ್ಯುತ್ ಉಳಿತಾಯವಾಗಲಿದೆ. ನಗರಸಭೆ ವ್ಯಾಪ್ತಿಯ ಎಲ್ಲಾ ಉದ್ದಿಮೆ ಹಾಗು ಅಂಗಡಿ ಮುಂಗಟ್ಟುಗಳು ಕಡ್ಡಾಯವಾಗಿ ಪರವಾನಗಿ ಪಡೆಯುವಂತೆ ಕ್ರಮ ಕೈಗೊಂಡು ಆದಾಯ ಹೆಚ್ಚಿಸಿಕೊಳ್ಳುವಂತೆ ಸಲಹೆ ನೀಡಿದರು.
    ಟಿ. ವೆಂಕಟೇಶ್ ಮಾತನಾಡಿ, ನಗರಸಭೆ ವ್ಯಾಪ್ತಿಯ ವಾಣಿಜ್ಯ ಪ್ರದೇಶಗಳಲ್ಲಿ ಖಾಲಿ ಇರುವ ನಿವೇಶನಗಳನ್ನು ಆರ್ಥಿಕವಾಗಿ ಲಾಭ ತಂದುಕೊಡುವ ನಿಟ್ಟಿನಲ್ಲಿ ಸದ್ಬಳಕೆ ಮಾಡಿಕೊಳ್ಳುವ ಬದಲು ವಿವಿಧ ಸಂಘ-ಸಂಸ್ಥೆಗಳಿಗೆ ನೀಡುತ್ತಿರುವುದು ಸರಿಯಲ್ಲ. ಜೊತೆಗೆ ನಗರಸಭೆ ವ್ಯಾಪ್ತಿಯಲ್ಲಿ ಖಾಸಗಿ ಹಾಗು ಅನಧಿಕೃತ ಬಡಾವಣೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ನಗರಸಭೆಗೆ ಯಾವುದೇ ರೀತಿ ಆದಾಯ ಬರುತ್ತಿಲ್ಲ. ಈ ಹಿನ್ನಲೆಯಲ್ಲಿ ಬಡಾವಣೆಗಳ ನಿರ್ಮಾಣಕ್ಕೆ ಕಡಿವಾಣ ಹಾಕಬೇಕು. ಶಿವಮೊಗ್ಗ ಮತ್ತು ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ಕೇವಲ ಶಿವಮೊಗ್ಗಕ್ಕೆ ಮಾತ್ರ ಸೀಮಿತವಾಗಿರುವಂತೆ ಕೆಲಸ ಮಾಡುತ್ತಿದ್ದು, ಹೊಸ ಯೋಜನೆಗಳು ನಗರಕ್ಕೆ ಮಂಜೂರಾಗುತ್ತಿಲ್ಲ. ಇದರಿಂದ ನಗರಸಭೆಗೆ ಬರಬೇಕಾದ ಆದಾಯ ಕುಂಠಿತವಾಗುತ್ತಿದ್ದು, ಈ ಬಗ್ಗೆ ಗಮನ ಹರಿಸಬೇಕೆಂದು ಸಲಹೆ ನೀಡಿದರು.
    ಹಿರಿಯ ಪತ್ರಕರ್ತ ಎನ್. ಬಾಬು ಮಾತನಾಡಿ, ನಗರಸಭೆ ವ್ಯಾಪ್ತಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಒಳಚರಂಡಿ ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿ ನಗರದ ಜನತೆಗೆ ಶಾಪವಾಗಿ ಪರಿಣಮಿಸಿದೆ. ಈ ಕುರಿತು ಹಲವಾರು ಬಾರಿ ಗಮನಕ್ಕೆ ತಂದರೂ ಇದುವರೆಗೂ ಯಾವುದೇ ಕಠಿಣ ಕ್ರಮಗಳನ್ನು ಕೈಗೊಂಡಿಲ್ಲ. ಜೊತೆಗೆ ನೀರಿನ ಮೀಟರ್ ಅಳವಡಿಕೆ ಕಾಮಗಾರಿ ಸಹ ಅತ್ಯಂತ ಕಳಪೆಯಿಂದ ಕೂಡಿದ್ದು, ಈ ಎರಡು ಕಾಮಗಾರಿಗಳ ವಿರುದ್ಧ ದೊಡ್ಡ ಮಟ್ಟದ ಚಳುವಳಿ ನಡೆಸಬೇಕಾದ ಅನಿವಾರ್ಯತೆ ಇದೆ. ಇದೆ ರೀತಿ ಕಂದಾಯ ಪಾವತಿಗೆ ರಶೀದಿ ನೀಡುತ್ತಿಲ್ಲ. ಕಳೆದ ಒಂದು ವರ್ಷದ ಹಿಂದಿನ ರಶೀದಿ ಇಂದಿಗೂ ಲಭ್ಯವಾಗಿಲ್ಲ. ಜನರು ಅಲೆದಾಡುವಂತಾಗಿದೆ. ಇವೆಲ್ಲವನ್ನು ಸರಿಪಡಿಸಿಕೊಳ್ಳಬೇಕೆಂದು ಎಚ್ಚರಿಸಿದರು.
    ಇದೆ ಹಲವಾರು ಮಂದಿ ಸಲಹೆ, ಮಾರ್ಗದರ್ಶನಗಳನ್ನು ನೀಡಿದರು. ಇದಕ್ಕೂ ಮೊದಲು ಕಂದಾಯಾಧಿಕಾರಿ ರಾಜ್‌ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ೧೩೫೬ ಲಕ್ಷ ರು. ನಗರಸಭೆಯಿಂದ ಮತ್ತು ೩೯೬೭ ಲಕ್ಷ ರು. ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಅನುದಾನ ಒಟ್ಟು ೫೩೨೩ ಲಕ್ಷ ರು. ಆದಾಯ ನಿರೀಕ್ಷಿಸಲಾಗಿದೆ. ಇದಕ್ಕೆ ಸರಿ ಹೊಂದುವಂತೆ ಬಜೆಟ್ ಮಂಡನೆ ರೂಪುರೇಷೆಗಳನ್ನು ಸಿದ್ದಪಡಿಸಲಾಗಿದ್ದು, ಈ ಹಿನ್ನಲೆಯಲ್ಲಿ ನಗರದ ಬೆಳವಣಿಗೆಗೆ ಅಗತ್ಯವಿರುವ ಸಲಹೆ, ಮಾರ್ಗದರ್ಶನ ನೀಡುವ ಮೂಲಕ ಸಹಕರಿಸುವಂತೆ ಮನವಿ ಮಾಡಿದರು.
    ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್, ಪೌರಾಯುಕ್ತ ಕೆ. ಪರಮೇಶ್, ನಗರಸಭೆ ೩೫ ವಾರ್ಡ್‌ಗಳ ಸದಸ್ಯರು ಹಾಗು ೫ ಜನ ನೂತನ ನಾಮನಿರ್ದೇಶನಗೊಂಡ ಸದಸ್ಯರು, ನಗರಸಭೆ ವಿವಿಧ ವಿಭಾಗಗಳ ಅಧಿಕಾರಿಗಳು ಉಪಸ್ಥಿತರಿದ್ದರು.


ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಶುಕ್ರವಾರ ಬಜೆಟ್ ಮಂಡನೆ ಪೂರ್ವಭಾವಿ ಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.

ಬೌದ್ಧ ಧರ್ಮದ ಆಚರಣೆಯಂತೆ ಗೃಹ ಪ್ರವೇಶ ನೆರವೇರಿಸಿ ಗಮನ ಸೆಳೆದ ನಗರಸಭೆ ಸದಸ್ಯೆ

ಭದ್ರಾವತಿ ನಗರಸಭೆ ಸದಸ್ಯೆ ಪ್ರೇಮ ಬದರಿನಾರಾಯಣ್ ಶುಕ್ರವಾರ ನಗರದ ಉಜ್ಜನಿಪುರ ಬೈಪಾಸ್ ರಸ್ತೆ ಸಂಬುದ್ಧ ಉದ್ಯಾನವನ ಎದುರು ನೂತನವಾಗಿ ನಿರ್ಮಿಸಿರುವ ಲುಂಬಿನಿ ನಿವಾಸದ ಗೃಹ ಪ್ರವೇಶವನ್ನು ಬೌದ್ಧ ಧರ್ಮದ ಆಚರಣೆಯಂತೆ ನೆರವೇರಿಸುವ ಮೂಲಕ ಗಮನ ಸೆಳೆದರು. ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ನಗರಸಭೆ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಿ ಶುಭ ಹಾರೈಸಿದರು.
    ಭದ್ರಾವತಿ, ಫೆ. ೪: ನಗರಸಭೆ ಸದಸ್ಯೆ ಪ್ರೇಮ ಬದರಿನಾರಾಯಣ್ ಶುಕ್ರವಾರ ನಗರದ ಉಜ್ಜನಿಪುರ ಬೈಪಾಸ್ ರಸ್ತೆ ಸಂಬುದ್ಧ ಉದ್ಯಾನವನ ಎದುರು ನೂತನವಾಗಿ ನಿರ್ಮಿಸಿರುವ ಲುಂಬಿನಿ ನಿವಾಸದ ಗೃಹ ಪ್ರವೇಶವನ್ನು ಬೌದ್ಧ ಧರ್ಮದ ಆಚರಣೆಯಂತೆ ನೆರವೇರಿಸುವ ಮೂಲಕ ಗಮನ ಸೆಳೆದರು.
    ಬೌದ್ಧ ಉಪಾಸಕರಾದ ಪ್ರೊ. ರಾಚಪ್ಪ ಆಚರಣೆಗಳನ್ನು ನೆರವೇರಿಸಿಕೊಟ್ಟರು. ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಬದರಿನಾರಾಯಣ್‌ರವರು ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಸ್ವಾಗತಿಸಿದರು.
    ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ನಗರಸಭೆ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಿ ಶುಭ ಹಾರೈಸಿದರು.

Thursday, February 3, 2022

ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಗೆ ದಿನಾಂಕ, ವೇಳೆ ನಿಗದಿಪಡಿಸಿ

ಅಕ್ರಮವಾಗಿ ಪಡಿತರ ಮಾರಾಟಕ್ಕೆ ಯತ್ನಿಸಿ ಸಿಕ್ಕಿ ಬಿದ್ದಿರುವ ಮಾಲೀಕನ ಪರವಾನಗಿ ರದ್ದುಪಡಿಸಿ

ಭದ್ರಾವತಿ ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ನಿಗದಿತ ದಿನಾಂಕ ಹಾಗು ವೇಳೆಯಲ್ಲಿ ಪಡಿತರ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಆಮ್ ಆದ್ಮಿ ಪಾರ್ಟಿ ವತಿಯಿಂದ ಗುರುವಾರ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಫೆ. ೩: ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ನಿಗದಿತ ದಿನಾಂಕ ಹಾಗು ವೇಳೆಯಲ್ಲಿ ಪಡಿತರ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಆಮ್ ಆದ್ಮಿ ಪಾರ್ಟಿ ವತಿಯಿಂದ ಗುರುವಾರ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
    ಕಳೆದ ಕೆಲವು ದಿನಗಳ ಹಿಂದೆ ನಗರಸಭೆ ವ್ಯಾಪ್ತಿಯ ಸಿದ್ದಾಪುರ ತಾಂಡದ ನ್ಯಾಯಬೆಲೆ ಅಂಗಡಿಯೊಂದರಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ದಾಳಿ ನಡೆಸಿ ವಶಪಡಿಸಿಕೊಂಡಿರುವುದಕ್ಕೆ ಕ್ಷೇತ್ರದ ನಾಗರೀಕರ ಪರವಾಗಿ ಪಕ್ಷ ತಹಸೀಲ್ದಾರ್ ಪ್ರದೀಪ್ ಆರ್ ನಿಕ್ಕಮ್ ಅವರನ್ನು ಅಭಿನಂದಿಸುವ ಜೊತೆಗೆ ಕ್ಷೇತ್ರದಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ನಿಗದಿತ ದಿನಾಂಕ ಹಾಗು ವೇಳೆಯಲ್ಲಿ ಪಡಿತರ ವಿತರಿಸುತ್ತಿಲ್ಲ. ಇದರಿಂದಾಗಿ ನಾಗರೀಕರು ಪಡಿತರ ಪಡೆಯಲು ತೊಂದರೆ ಅನುಭವಿಸುವಂತಾಗಿದೆ. ವಿತರಕರು ನಿಗದಿಪಡಿಸುವ ದಿನಾಂಕ ಹಾಗು ವೇಳೆ ಎದುರು ನೋಡುವಂತೆ ಮತ್ತು ದಿನವಿಡೀ ಸರದಿ ಸಾಲಿನಲ್ಲಿ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
    ಪಕ್ಷದ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ತಾಲೂಕು ಸಂಚಾಲಕ ಅಬ್ದುಲ್ ಖದೀರ್ ಮತ್ತು ಜಿಲ್ಲಾ ಮುಖಂಡ ಡಿ.ಎಸ್ ಪರಮೇಶ್ವರಚಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
        ಅಂಗಡಿ ಮಾಲೀಕನ ಪರವಾನಗಿ ರದ್ದು ಮಾಡಿ:
    ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಮಾರಾಟಕ್ಕೆ ಯತ್ನಿಸಿ ಸಿಕ್ಕಿ ಬಿದ್ದಿರುವ ಸಿದ್ದಾಪುರ ತಾಂಡದ ನ್ಯಾಯಬೆಲೆ ಅಂಗಡಿ ಮಾಲೀಕನ ಪರವಾನಗಿ ತಕ್ಷಣ ರದ್ದುಪಡಿಸುವಂತೆ ಆಗ್ರಹಿಸಿ ಜನತಾದಳ(ಸಂಯುಕ್ತ) ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ಗುರುವಾರ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ  ಹೋರಾಟ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು.
    ಅಕ್ರಮವಾಗಿ ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹಿಸಲಾಗಿದ್ದ ಅಕ್ಕಿಯನ್ನು ಬುಲೆರೋ ವಾಹನದಲ್ಲಿ ಸಾಗಿಸಲು ಯತ್ನಿಸಿ ಸ್ಥಳೀಯರ ಎದುರು ಸಿಕ್ಕಿಬಿದ್ದಿದ್ದು, ಅಲ್ಲದೆ ನ್ಯಾಯಬೆಲೆ ಅಂಗಡಿ ಮಾಲೀಕ ಯೋಗೇಶ್ ನಾಯ್ಕ ಮತ್ತು ಬುಲೆರೋ ವಾಹನದ ಚಾಲಕ ಪರಾರಿಯಾಗಿದ್ದಾರೆ. ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ. ಇವೆಲ್ಲವನ್ನು ಗಮನಿಸಿದಾಗ ಪಡಿತರ ಚೀಟಿದಾರರಿಗೆ ಉದ್ದೇಶ ಪೂರ್ವಕವಾಗಿ ವಂಚಿಸಿರುವುದು ಕಂಡು ಬರುತ್ತಿದೆ. ಈ ಹಿನ್ನಲೆಯಲ್ಲಿ ತಕ್ಷಣ ಅಂಗಡಿ ಮಾಲೀಕನ ಪರವಾನಗಿ ರದ್ದುಪಡಿಸುವಂತೆ ಆಗ್ರಹಿಸಿದ್ದಾರೆ.  ಗ್ರಾಮಸ್ಥರಾದ ರಮೇಶ್, ಮಂಜುನಾಥ್ ಮತ್ತು ನಾಗರಾಜ್ ಉಪಸ್ಥಿತರಿದ್ದರು.


ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಮಾರಾಟಕ್ಕೆ ಯತ್ನಿಸಿ ಸಿಕ್ಕಿ ಬಿದ್ದಿರುವ ಭದ್ರಾವತಿ ಸಿದ್ದಾಪುರ ತಾಂಡದ ನ್ಯಾಯಬೆಲೆ ಅಂಗಡಿ ಮಾಲೀಕನ ಪರವಾನಗಿ ತಕ್ಷಣ ರದ್ದುಪಡಿಸುವಂತೆ ಆಗ್ರಹಿಸಿ ಜನತಾದಳ(ಸಂಯುಕ್ತ) ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ಗುರುವಾರ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ  ಹೋರಾಟ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು.

ಕೆಎಸ್‌ಆರ್‌ಟಿಸಿ ಘಟಕದಲ್ಲಿ ಶ್ರೀ ಚೌಡೇಶ್ವರಿ ದೇವಿ ವಾರ್ಷಿಕ ಮಹೋತ್ಸವ

ಭದ್ರಾವತಿ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಘಟಕದಲ್ಲಿ ಗುರುವಾರ ಶ್ರೀ ಚೌಡೇಶ್ವರಿ ದೇವಿ ವಾರ್ಷಿಕ ಮಹೋತ್ಸವ ಅದ್ದೂರಿಯಾಗಿ ಜರುಗಿತು. ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಪಾಲ್ಗೊಂಡು ದೇವಿಗೆ ಪೂಜೆ ಸಲ್ಲಿಸುವ ಮೂಲಕ ಭಕ್ತರಿಗೆ ಆಶೀರ್ವದಿಸಿದರು.
    ಭದ್ರಾವತಿ, ಫೆ. ೩: ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಘಟಕದಲ್ಲಿ ಗುರುವಾರ ಶ್ರೀ ಚೌಡೇಶ್ವರಿ ದೇವಿ ವಾರ್ಷಿಕ ಮಹೋತ್ಸವ ಅದ್ದೂರಿಯಾಗಿ ಜರುಗಿತು.
    ಮಹೋತ್ಸವದ ಅಂಗವಾಗಿ ವಿಶೇಷ ಪೂಜೆ, ಅಲಂಕಾರ, ಹೋಮ-ಹವನ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
    ಘಟಕದ ವ್ಯವಸ್ಥಾಪಕಿ ಅಂಬಿಕಾ ಸುದೇಂದ್ರ ಮಹೋತ್ಸವದ ನೇತೃತ್ವ ವಹಿಸಿದ್ದರು. ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಪಾಲ್ಗೊಂಡು ಶ್ರೀ ಚೌಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಭಕ್ತರಿಗೆ ಆಶೀರ್ವದಿಸಿದರು.
ಘಟಕದ ಅಧಿಕಾರಿಗಳು, ಸಿಬ್ಬಂದಿಗಳು, ಚಾಲಕರು, ನಿರ್ವಾಹಕರು ಹಾಗು ಕುಟುಂಬ ವರ್ಗದವರು ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.

ಮಂಗಳ ವಾದ್ಯ ಕಲಾವಿದರ ಸಮುದಾಯ ಭವನ ನಿವೇಶನ ಖರೀದಿಗೆ ೧ ಲಕ್ಷ ರು. ದೇಣಿಗೆ : ಶಾಸಕ ಬಿ.ಕೆ ಸಂಗಮೇಶ್ವರ್

ಭದ್ರಾವತಿ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನ ಮುಂಭಾಗದಲ್ಲಿರುವ ಶ್ರೀ ರಾಮ ದೇವಾಸ್ಥಾನದಲ್ಲಿ ತಾಲೂಕು ಸವಿತಾ ಸಮಾಜ ಮಂಗಳ ವಾದ್ಯ ಕಲಾವಿದರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೧೭ನೇ ವರ್ಷ ಶ್ರೀ ತ್ಯಾಗರಾಜ ಸ್ವಾಮಿ ಆರಾಧನಾ ಮಹೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.   
    ಭದ್ರಾವತಿ, ಫೆ. ೩: ಮಂಗಳ ವಾದ್ಯ ಕಲಾವಿದರ ಸಮುದಾಯ ಭವನಕ್ಕೆ ನಿವೇಶನ ಖರೀದಿಸಲು ವೈಯಕ್ತಿಕವಾಗಿ ೧ ಲಕ್ಷ ರು. ದೇಣಿಗೆ ನೀಡುವ ಜೊತೆಗೆ ೧೦ ಲಕ್ಷ ರು. ಅನುದಾನ ಬಿಡುಗಡೆಗೊಳಿಸುವುದಾಗಿ ಶಾಸಕ ಬಿ.ಕೆ ಸಂಗಮೇಶ್ವರ್ ಭರವಸೆ ನೀಡಿದರು.
    ಅವರು ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನ ಮುಂಭಾಗದಲ್ಲಿರುವ ಶ್ರೀ ರಾಮ ದೇವಾಸ್ಥಾನದಲ್ಲಿ ತಾಲೂಕು ಸವಿತಾ ಸಮಾಜ ಮಂಗಳ ವಾದ್ಯ ಕಲಾವಿದರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೧೭ನೇ ವರ್ಷ ಶ್ರೀ ತ್ಯಾಗರಾಜ ಸ್ವಾಮಿ ಆರಾಧನಾ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಶುಭ ಸಮಾರಂಭಗಳಲ್ಲಿ ಮಂಗಳ ವಾದ್ಯ ಕಲಾವಿದರ ಕೊಡುಗೆ ಅನನ್ಯವಾಗಿದ್ದು, ವೃತ್ತಿ ಬದುಕಿನ ಜೊತೆಗೆ ಕಲಾ ಸೇವೆಯಲ್ಲಿ ತೊಡಗಿರುವುದು ಹೆಮ್ಮೆಯ ವಿಚಾರವಾಗಿದೆ. ಸರ್ಕಾರದ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ಕಲ್ಪಿಸಿಕೊಡುವ ಜೊತೆಗೆ ವೈಯಕ್ತಿಕವಾಗಿ ಸಹ ಸಾಧ್ಯವಾದಷ್ಟು ನೆರವು ಕಲ್ಪಿಸಿ ಕೊಡುವ ಮೂಲಕ ಸಂಕಷ್ಟಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.
    ನಗರಸಭೆ ಉಪಾಧ್ಯಕ್ಷ ಚನ್ನಪ್ಪ ಮಾತನಾಡಿ, ಮಂಗಳ ವಾದ್ಯಕ್ಕೆ ಮನಸ್ಸಿನಲ್ಲಿನ ನೋವುಗಳನ್ನು ದೂರ ಮಾಡುವ ಅದ್ಭುತ ಶಕ್ತಿ ಇದೆ. ಶುಭ ಸಮಾರಂಭಗಳಲ್ಲಿ ಪ್ರತಿಯೊಬ್ಬರ ಮನಸ್ಸಿಗೆ ನೆಮ್ಮದಿ ನೀಡುವ ಮಂಗಳ ವಾದ್ಯಕ್ಕೆ ಇಂದಿಗೂ ಹೆಚ್ಚಿನ ಮಹತ್ವವಿದೆ. ಈ ಕಲಾವಿದರ ಬದುಕು ವಿಭಿನ್ನವಾಗಿದ್ದು, ಸಮಾಜದಲ್ಲಿ ಯಾರೊಂದಿಗೂ ಸಂಘರ್ಷಕ್ಕೆ ಇಳಿಯದೆ ತಮ್ಮಷ್ಟಕ್ಕೆ ತಾವು ಬದುಕು ಕಟ್ಟಿಕೊಂಡಿದ್ದಾರೆ. ಇಂತಹ ಕಲಾವಿದರಿಗೆ ಸಂಕಷ್ಟಗಳಿಗೆ ಸ್ಪಂದಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ನಗರಸಭೆ ವತಿಯಿಂದ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯವಿರುವ ನಿವೇಶನ ಕಲ್ಪಿಸಿ ಕೊಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.
    ಸಂಘದ ಅಧ್ಯಕ್ಷ ಪಿ. ವರದರಾಜು(ಮಹೇಶ್) ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷರಾದ ಗೋವಿಂದರಾಜು, ಎನ್. ರಮೇಶ್, ಪ್ರಧಾನ ಕಾರ್ಯದರ್ಶಿ ತುಳಸಿ ಏಳುಮಲೈ, ಖಜಾಂಚಿ ಬೊಮ್ಮನಕಟ್ಟೆ ಚನ್ನಯ್ಯ, ಗೌರವ ಸಲಹೆಗಾರರಾದ ಗಣೇಶ್, ಅರುಳಲಿಂಗಂ, ಡೋಲು ರಾಜಣ್ಣ, ರಮೇಶ್, ಹೊನ್ನಟ್ಟಿ ಹೊಸೂರು ರಾಜಣ್ಣ, ಪ್ರಕಾಶ್, ಸುರೇಶ್, ಶ್ರೀನಿವಾಸ, ಹಂಸಲಿಂಗಂ, ಶಿವಶಂಕರ್, ಜನ್ನಾಪುರ ಮಹೇಶ್, ರವಿಚಂದ್ರ, ಏಳುಮಲೈ, ಮೂರ್ತಿ,  ಸವಿತಾ ಸಮಾಜ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಎಸ್ ರಮೇಶ್,  ತಾಲೂಕು ಉಪಾಧ್ಯಕ್ಷ ಜಿ. ವೆಂಕಟೇಶ್, ಮಾಜಿ ಅಧ್ಯಕ್ಷ ಎಂ. ರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Wednesday, February 2, 2022

ಸರ್‌ಎಂವಿ ಕಾಲೇಜಿಗೆ ತಹಸೀಲ್ದಾರ್ ಪ್ರದೀಪ್ ಆರ್ ನಿಕ್ಕಮ್ ಭೇಟಿ : ಪರಿಶೀಲನೆ

ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಕಳೆದ ಕೆಲವು ದಿನಗಳಿಂದ ಉಂಟಾಗಿರುವ ಗೊಂದಲದ ವಾತಾವರಣದ ಹಿನ್ನಲೆಯಲ್ಲಿ ಬುಧವಾರ ತಹಸೀಲ್ದಾರ್ ಪ್ರದೀಪ್ ಆರ್ ನಿಕ್ಕಮ್ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾಲೇಜು ಆಡಳಿತ ಮಂಡಳಿ ಜೊತೆಗೆ ಚರ್ಚಿಸಿದರು.
    ಭದ್ರಾವತಿ, ಫೆ. ೨: ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಕಳೆದ ಕೆಲವು ದಿನಗಳಿಂದ ಉಂಟಾಗಿರುವ ಗೊಂದಲದ ವಾತಾವರಣದ ಹಿನ್ನಲೆಯಲ್ಲಿ ಬುಧವಾರ ತಹಸೀಲ್ದಾರ್ ಪ್ರದೀಪ್ ಆರ್ ನಿಕ್ಕಮ್ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
    ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಬರುವ ಸಂಬಂಧ ಕಾಲೇಜಿನಲ್ಲಿ ಮಂಗಳವಾರ ಉಂಟಾಗಿದ್ದ ಗೊಂದಲದ ವಾತಾವರಣದ ಹಿನ್ನಲೆಯಲ್ಲಿ ತಹಸೀಲ್ದಾರ್ ಪ್ರದೀಪ್ ಆರ್ ನಿಕ್ಕಮ್ ಮತ್ತು ನಗರ ಪೊಲೀಸ್ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ಹಾಗು ಗುಪ್ತ ದಳ ಸಿಬ್ಬಂದಿಗಳು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
    ಕಾಲೇಜು ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಯಾವುದೇ ರೀತಿ ಸಮಸ್ಯೆ ಉಂಟಾಗದಂತೆ ಎಚ್ಚರವಹಿಸುವಂತೆ ಸೂಚಿಸಿದರು. ಈ ನಡುವೆ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ. ಧನಂಜಯ ಕಾಲೇಜಿನಲ್ಲಿ ಇದೀಗ ಸಮಸ್ಯೆ ಅಂತ್ಯಕ್ಕೆ ಬಂದಿದ್ದು, ವಿದ್ಯಾರ್ಥಿಗಳು ಪೂರಕವಾಗಿ ಸ್ಪಂದಿಸುತ್ತಿದ್ದಾರೆ. ಹಿಜಾಬ್ ಸಂಬಂಧ ಈಗಾಗಲೇ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ಈ ಕುರಿತು ಮುಸ್ಲಿಂ ವಿದ್ಯಾರ್ಥಿನಿಯರಿಗೂ ತಿಳಿವಳಿಕೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.
    ಕಾಲೇಜಿನ ಉಪನ್ಯಾಸಕರಾದ ಡಾ. ಮಂಜುನಾಥ್, ಶಿವರುದ್ರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಕೇಸರಿ ವಸ್ತ್ರದೊಂದಿಗೆ ತರಗತಿಗೆ ಹಾಜರು:
    ಕಾಲೇಜಿನಲ್ಲಿ ಬುಧವಾರ ಮತ್ತು ಶನಿವಾರ ಸಮವಸ್ತ್ರ ಕಡ್ಡಾಯಗೊಳಿಸದಿರುವ ಹಿನ್ನಲೆಯಲ್ಲಿ ಯಾವುದೇ ಸಮಸ್ಯೆ ಕಂಡು ಬರಲಿಲ್ಲ. ಆದರೆ ಈ ನಡುವೆ ಕೆಲವು ಹಿಂದೂ ವಿದ್ಯಾರ್ಥಿಗಳು ಕೇಸರಿ ವಸ್ತ್ರದೊಂದಿಗೆ ತರಗತಿಗಳಿಗೆ ಹಾಜರಾದರು. ಆದರೆ ಯಾವುದೇ ಅಹಿತಕರ ಘಟನೆಗಳು ನಡೆಯಲಿಲ್ಲ.