Sunday, February 13, 2022

ದಲಿತ ಮುಖಂಡ ರಂಗನಾಥ್ ನಿಧನ


ರಂಗನಾಥ್
    ಭದ್ರಾವತಿ, ಫೆ. ೧೩: ನಗರದ ಹೊಸಬುಳ್ಳಾಪುರ ನಿವಾಸಿ, ದಲಿತ ಮುಖಂಡ ರಂಗನಾಥ್(೪೭) ಅನಾರೋಗ್ಯದಿಂದ ನಿಧನ ಹೊಂದಿದರು.
    ಪತ್ನಿ, ಒಂದು ಗಂಡು, ಒಂದು ಹೆಣ್ಣು ಮಕ್ಕಳನ್ನು ಹೊಂದಿದ್ದರು. ಮೃತರ ಅಂತ್ಯಕ್ರಿಯೆ ಭಾನುವಾರ ಬೈಪಾಸ್ ರಸ್ತೆಯಲ್ಲಿರುವ  ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ರಂಗನಾಥ್‌ರವರು ಹಲವಾರು ದಲಿತ ಹೋರಾಟಗಳಲ್ಲಿ ಪಾಲ್ಗೊಂಡಿದ್ದರು. ಮೃತರ ನಿಧನಕ್ಕೆ ಡಿಎಸ್‌ಎಸ್ ಮುಖಂಡರಾದ ಕಾಣಿಕ್‌ರಾಜ್ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.

ಫೆ.೨೮ರಂದು ವಿಇಎಸ್ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಸರ್ವ ಸದಸ್ಯರ ಸಭೆ

ಭದ್ರಾವತಿ, ಫೆ. ೧೩: ನಗರದ ಹೊಸಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸರ್ವ ಸದಸ್ಯರ ವಿಶೇಷ ಮಹಾಸಭೆ ಫೆ.೨೮ರಂದು ಸಂಜೆ ೫.೩೦ಕ್ಕೆ ಸಂಸ್ಥೆಯ ಆಡಳಿತ ಕಛೇರಿಯಲ್ಲಿ ನಡೆಯಲಿದೆ.
    ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಸಭೆಗೆ  ಆಗಮಿಸಲಿದ್ದು, ವಿದ್ಯಾಸಂಸ್ಥೆ ಛೇರ್‍ಮನ್ ಬಿ.ಎಲ್ ರಂಗಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿದ್ಯಾಸಂಸ್ಥೆಯ ಎಲ್ಲಾ ಪದಾಧಿಕಾರಿಗಳು, ನಿರ್ದೇಶಕರು ಹಾಗು ಸದಸ್ಯರು ಪಾಲ್ಗೊಳ್ಳುವಂತೆ ಕೋರಲಾಗಿದೆ.

ಶುದ್ಧ ಕುಡಿಯುವ ನೀರಿನ ವ್ಯವಸ್ಥೆ : ಕೃತಜ್ಞತೆ

ಭದ್ರಾವತಿ ತಾಲೂಕಿನ ಬಾರಂದೂರು ಸರ್ಕಾರಿ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಕೊಟ್ಟ ಸ್ನೇಹ ಜೀವಿ ಬಳಗಕ್ಕೆ ಶಾಲಾ ಆಡಳಿತ ಮಂಡಳಿ ಕೃತಜ್ಞತೆ ಸಲ್ಲಿಸುವ ಜೊತೆಗೆ ಬಳಗದ ಪೊಲೀಸ್ ಉಮೇಶ್ ಅವರನ್ನು ಸನ್ಮಾನಿಸಿ ಗೌರವಿಸಿತು.
    ಭದ್ರಾವತಿ, ಫೆ. ೧೩: ತಾಲೂಕಿನ ಬಾರಂದೂರು ಸರ್ಕಾರಿ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಕೊಟ್ಟ ಸ್ನೇಹ ಜೀವಿ ಬಳಗಕ್ಕೆ ಶಾಲಾ ಆಡಳಿತ ಮಂಡಳಿ ಕೃತಜ್ಞತೆ ಸಲ್ಲಿಸಿದೆ.
    ಸುಮಾರು ೪೦ ಸಾವಿರ ರು. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಕೊಟ್ಟಿರುವ ಸ್ನೇಹ ಜೀವಿ ಬಳಗದ ಸೇವಾ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸುವ ಜೊತೆಗೆ ಬಳಗದ ಪೊಲೀಸ್ ಉಮೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಬಳಗದ ಪ್ರಮುಖರಾದ ಮುಳ್ಕೆರೆ ಲೋಕೇಶ್, ಮೇಘರಾಜ್, ಸುಹಾಸ್, ಕೃಷ್ಣ ಹಾಗು ಶಾಲಾ ಆಡಳಿತ ಮಂಡಳಿ ಪ್ರಮುಖರು, ಶಿಕ್ಷಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Saturday, February 12, 2022

ರವಿಕುಮಾರ್ ನಿಧನ

ರವಿಕುಮಾರ್
    ಭದ್ರಾವತಿ, ಫೆ. ೧೨: ಹಳೇನಗರದ ಶ್ರೀ ಹಳದಮ್ಮ ದೇವಿ ದೇವಸ್ಥಾನ ಸಮೀಪದ ನಿವಾಸಿ, ಆಟೋ ಚಾಲಕ ರವಿಕುಮಾರ್(೪೫) ಶನಿವಾರ ಹೃದಯಾಘಾತದಿಂದ ನಿಧನ ಹೊಂದಿದರು.
    ತಾಯಿ ಹಾಗು ಇಬ್ಬರು ಗಂಡು ಮಕ್ಕಳನ್ನು ಹೊಂದಿದ್ದರು. ರವಿಕುಮಾರ್ ಕಳೆದ ಸುಮಾರು ೨೫ ವರ್ಷಗಳಿಂದ ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಸೇವೆ ಸಲ್ಲಿಸುತ್ತಿದ್ದರು.
    ಇವರ ನಿಧನಕ್ಕೆ ದೇವಸ್ಥಾನದ ಪ್ರಧಾನ ಅರ್ಚಕ ರಂಗನಾಥ ಶರ್ಮ ಹಾಗು ಕುಟುಂಬ ವರ್ಗದವರು ಸಂತಾಪ ಸೂಚಿಸಿದ್ದು, ದೇವರು ಇವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ ಹಾಗು ಕುಟುಂಬ ವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ವಿಜೃಂಭಣೆಯಿಂದ ಜರುಗಿದ ಸುರಗಿತೋಪ್ ಶ್ರೀ ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವ

ಭದ್ರಾವತಿ ನಗರಸಭೆ ವಾರ್ಡ್ ನಂ.೨೦ರ ವ್ಯಾಪ್ತಿಯ ಸುರಗಿತೋಪ್ ಶ್ರೀ ಚೌಡೇಶ್ವರಿ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.
    ಭದ್ರಾವತಿ, ಫೆ. ೧೨: ನಗರಸಭೆ ವಾರ್ಡ್ ನಂ.೨೦ರ ವ್ಯಾಪ್ತಿಯ ಸುರಗಿತೋಪ್ ಶ್ರೀ ಚೌಡೇಶ್ವರಿ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.
    ಜಾತ್ರಾ ಮಹೋತ್ಸವದ ಅಂಗವಾಗಿ ಗಂಗಾಪೂಜೆ, ಅನ್ನಸಂತರ್ಪಣೆ, ರಾಜಬೀದಿ ಉತ್ಸವ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಎರಡು ದಿನಗಳ ಕಾಲ ನಡೆದ ಕಾರ್ಯಕ್ರಮದ ನೇತೃತ್ವವನ್ನು ವಾರ್ಡಿನ ಸದಸ್ಯೆ ಜಯಶೀಲ ಸುರೇಶ್ ವಹಿಸಿದ್ದರು.
    ಶಾಸಕ ಬಿ.ಕೆ ಸಂಗಮೇಶ್ವರ್, ಪ್ರಮುಖರಾದ ಶಾರದ ಅಪ್ಪಾಜಿ, ಜಿ. ಧರ್ಮಪ್ರಸಾದ್, ಮಂಗೋಟೆ ರುದ್ರೇಶ್, ಎಸ್. ಮಣಿಶೇಖರ್, ಎಂ.ಎ ಅಜಿತ್, ನಗರಸಭೆ ಪೌರಾಯುಕ್ತ ಕೆ. ಪರಮೇಶ್, ಪರಿಸರ ಅಭಿಯಂತರ ಪ್ರಭಾಕರ್, ಮಂಜುನಾಥ್, ದೇವಸ್ಥಾನ ಟ್ರಸ್ಟ್ ಗೌರವಾಧ್ಯಕ್ಷ ರಾಮಕೃಷ್ಣ, ಅಧ್ಯಕ್ಷ ಶಿವರಾಜ್, ಉಪಾಧ್ಯಕ್ಷ ಉಮೇಶ್, ಖಜಾಂಚಿ ರವಿ, ಕಾರ್ಯದರ್ಶಿ ಪರಮೇಶ್ ಸೇರಿದಂತೆ ಪದಾಧಿಕಾರಿಗಳು, ಸುರಗಿತೋಪು, ಕಾಗದನಗರ, ಜೆಪಿಎಸ್ ಕಾಲೋನಿ, ಬಾಲಭಾರತಿ, ನ್ಯೂಟೌನ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಭಕ್ತಾಧಿಗಳು ಪಾಲ್ಗೊಂಡಿದ್ದರು.

ವಿಜೃಂಭಣೆಯಿಂದ ಜರುಗಿದ ೨೯ನೇ ವರ್ಷದ ಶ್ರೀ ಶನೈಶ್ವರ ಜಾತ್ರಾ ವಾರ್ಷಿಕೋತ್ಸವ


ಭದ್ರಾವತಿ ನಗರದ ಹೊಸಮನೆ ಮುಖ್ಯರಸ್ತೆ ಪಶು ಆಸ್ಪತ್ರೆ ಮುಂಭಾಗದಲ್ಲಿರುವ ಶ್ರೀ ಶನೈಶ್ವರ ದೇವಸ್ಥಾನದ ೨೯ನೇ ವರ್ಷದ ಜಾತ್ರಾ ವಾರ್ಷಿಕೋತ್ಸವ ಶುಕ್ರವಾರದಿಂದ ಆರಂಭಗೊಂಡಿದ್ದು, ದೇವಸ್ಥಾನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು.
    ಭದ್ರಾವತಿ, ಫೆ. ೧೨: ನಗರದ ಹೊಸಮನೆ ಮುಖ್ಯರಸ್ತೆ ಪಶು ಆಸ್ಪತ್ರೆ ಮುಂಭಾಗದಲ್ಲಿರುವ ಶ್ರೀ ಶನೈಶ್ವರ ದೇವಸ್ಥಾನದ ೨೯ನೇ ವರ್ಷದ ಜಾತ್ರಾ ವಾರ್ಷಿಕೋತ್ಸವ ಶುಕ್ರವಾರದಿಂದ ಆರಂಭಗೊಂಡಿದ್ದು, ಶನಿವಾರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
        ಶುಕ್ರವಾರ ಸಂಜೆ ಗಣಪತಿ ಪೂಜೆ, ಪುಣ್ಯಾಹ, ಕಂಕಣ ಬಂಧನ, ೧೦೮ ಕಲಶ ಪ್ರತಿಷ್ಠೆ, ಕಲಾಶಾಧಿವಾಸ, ಹೋಮ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆgಗಳೊಂದಿಗೆ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಲಾಯಿತು. ಶನಿವಾರ ಸಾಮೂಹಿಕ ನವಗ್ರಹ ಹೋಮ, ಶನೈಶ್ವರ ಹೋಮ, ಶ್ರೀಸ್ವಾಮಿಗೆ ೧೦೮ ಕಲಶದ ಕುಂಭಾಭಿಷೇಕ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ಅನ್ನಸಂತರ್ಪಣೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
    ಫೆ.೧೩ರ ಭಾನುವಾರ ಶ್ರೀ ಸ್ವಾಮಿಗೆ ಪಂಚಾಮೃತ ಅಭಿಷೇಕ, ಸಾಮೂಹಿಕ ಸತ್ಯನಾರಾಯಣ ಸ್ವಾಮಿ ಪೂಜೆ ಹಾಗು ವಿಶೇಷ ಹೂವಿನ ಅಲಂಕಾರ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಹಾಗು ಅನ್ನಸಂತರ್ಪಣೆ ನಡೆಯಲಿದೆ.
    ದೇವಸ್ಥಾನ ಸಮಿತಿ ಅಧ್ಯಕ್ಷ ಎನ್.ಆರ್ ಗೋವಿಂದಸ್ವಾಮಿ, ಗೌರವ ಸಲಹೆಗಾರ ಎಸ್.ಎನ್ ಸುಭಾಷ್, ಉಪಾಧ್ಯಕ್ಷ ಎ.ಎಂ ದೇವೇಂದ್ರ, ಕಾರ್ಯದರ್ಶಿ ಎಚ್.ಎಂ ತಿಪ್ಪೇಸ್ವಾಮಿ, ಸಹಕಾರ್ಯದರ್ಶಿ ಎಂ.ಆರ್ ಮಹೇಶ್, ಖಜಾಂಚಿ ಡಿ.ಎಚ್. ಮುಕುಂದಪ್ಪ, ಕಾರ್ಯಕಾರಿ ಸಮಿತಿ ಸದಸ್ಯರಾದ ಚೌಡಪ್ಪ, ಮಲ್ಲೇಶಪ್ಪ, ಎಂ.ವಿ ಆನಂದ್‌ಮೂರ್ತಿ ಮತ್ತು ಅಜಯ್ ಸೇರಿದಂತೆ ಸುತ್ತಮತ್ತ ಅಂಗಡಿಮುಂಗಟ್ಟುಗಳ ವ್ಯಾಪಾರಸ್ಥರು, ಸ್ಥಳೀಯ ನಿವಾಸಿಗಳು, ಭಕ್ತಾಧಿಗಳು ಪಾಲ್ಗೊಂಡಿದ್ದರು.

Friday, February 11, 2022

ಶ್ರೀ ಚೌಡೇಶ್ವರಿ ದೇವಸ್ಥಾನ ಲೋಕಾರ್ಪಣೆ : ಧಾರ್ಮಿಕ ಸಭೆ


ಭದ್ರಾವತಿ ತಾಲೂಕಿನ ಕುಮರಿ ನಾರಾಯಣಪುರದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಚೌಡೇಶ್ವರಿ ದೇವಸ್ಥಾನದ ಲೋಕಾರ್ಪಣೆ ಶುಕ್ರವಾರ ನೆರವೇರಿತು. ಈ ಸಂಬಂಧ ಧಾರ್ಮಿಕ ಸಭೆಯಲ್ಲಿ ಆಯೋಜಿಸಲಾಗಿತ್ತು.
    ಭದ್ರಾವತಿ, ಫೆ. ೧೧: ತಾಲೂಕಿನ ಕುಮರಿ ನಾರಾಯಣಪುರದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಚೌಡೇಶ್ವರಿ ದೇವಸ್ಥಾನದ ಲೋಕಾರ್ಪಣೆ ಶುಕ್ರವಾರ ನೆರವೇರಿತು.
    ಲೋಕಾರ್ಪಣೆ ಅಂಗವಾಗಿ ಆಯೋಜಿಸಲಾಗಿದ್ದ ಧಾರ್ಮಿಕ ಸಭೆಯಲ್ಲಿ ಶ್ರೀ ಕ್ಷೇತ್ರ ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀ ಗುಣನಂದನಾಥ ಸ್ವಾಮೀಜಿ ಮತ್ತು ಅರಕೆರೆ ವಿರಕ್ತ ಮಠದ ಶ್ರೀ ಕರಿಸಿದ್ದೇಶ್ವರ ಸ್ವಾಮೀಜಿ ದಿವ್ಯ ಸಾನಿಧ್ಯವಹಿಸಿದ್ದರು.
ಶಾಸಕ ಬಿ.ಕೆ ಸಂಗಮೇಶ್ವರ್, ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ಎಸ್. ಮಣಿಶೇಖರ್, ಎಪಿಎಂಸಿ ಸದಸ್ಯೆ ರತ್ನಮ್ಮ,  ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ವೆಂಕಟೇಶ್ ಹಾಗು ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಇದಕ್ಕೂ ಮೊದಲು ವಿವಿಧ ಧಾರ್ಮಿಕ ಆಚರಣೆಗಳು ಜರುಗಿದವು. ಕುಮರಿ ನಾರಾಯಣಪುರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರು ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು.