Monday, February 14, 2022

ಕರ್ತವ್ಯ ಲೋಪ : ಅಬಕಾರಿ ಇಲಾಖೆ ನಿರೀಕ್ಷಕ, ಉಪ ನಿರೀಕ್ಷಕರನ್ನು ಸೇವೆಯಿಂದ ಅಮಾನತುಗೊಳಿಸಿ

ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ  ಶಶಿಕುಮಾರ್ ಎಸ್ ಗೌಡ  ಏಕಾಂಗಿ ಹೋರಾಟ


ಭದ್ರಾವತಿ ತಾಲೂಕಿನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ಲೋಪವೆಸಗಿದ್ದು, ಈ ಹಿನ್ನಲೆಯಲ್ಲಿ ಇಲಾಖೆಯ ಠಾಣಾ ನಿರೀಕ್ಷಕ ಮತ್ತು ಉಪ ನಿರೀಕ್ಷಕರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ  ಶಶಿಕುಮಾರ್ ಎಸ್ ಗೌಡ ಸೋಮವಾರ ತಾಲೂಕು ಕಛೇರಿ ಮುಂಭಾಗ ಏಕಾಂಗಿ ಹೋರಾಟ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

    ಭದ್ರಾವತಿ, ಫೆ. ೧೪: ತಾಲೂಕಿನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ಲೋಪವೆಸಗಿದ್ದು, ಈ ಹಿನ್ನಲೆಯಲ್ಲಿ ಇಲಾಖೆಯ ಠಾಣಾ ನಿರೀಕ್ಷಕ ಮತ್ತು ಉಪ ನಿರೀಕ್ಷಕರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ  ಶಶಿಕುಮಾರ್ ಎಸ್ ಗೌಡ ಸೋಮವಾರ ತಾಲೂಕು ಕಛೇರಿ ಮುಂಭಾಗ ಏಕಾಂಗಿ ಹೋರಾಟ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
    ತಾಲೂಕಿನ ಡೈರಿ ವೃತ್ತದಲ್ಲಿ ರಸ್ತೆ ಪಕ್ಕದಲ್ಲಿರುವ ಮದ್ಯದಂಗಡಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಮಹಿಳೆಯರು, ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಸ್ಥಳೀಯ ನಿವಾಸಿಗಳು ನಿರ್ಭೀತಿಯಿಂದ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಮದ್ಯ ಸೇವನೆ ಮಾಡುವವರಿಂದ ಪ್ರತಿ ದಿನ ಗುಂಪು ಗಲಾಟೆ, ಹೊಡೆದಾಟ ಸೇರಿದಂತೆ ಗಂಭೀರ ಪ್ರಕರಣಗಳು ನಡೆಯುತ್ತಿವೆ. ಈ ಸಂಬಂಧ ಈಗಾಗಲೇ ಹಲವಾರು ಬಾರಿ ಹೋರಾಟ ನಡೆಸಿ ನ್ಯೂಟೌನ್ ಪೊಲೀಸ್ ಠಾಣೆಗೆ ಸಹ ದೂರು ನೀಡಲಾಗಿದೆ. ಅಲ್ಲದೆ ಅಬಕಾರಿ ಇಲಾಖೆಗೂ ಮನವಿ ಸಲ್ಲಿಸಲಾಗಿದೆ. ಮದ್ಯದಂಗಡಿಗಳಿಂದ ಶಾಂತಿಗೆ ಭಂಗವಾಗುತ್ತಿದ್ದರೂ ಸಹ ಯಾವುದೇ ಕೈಗೊಂಡಿಲ್ಲ ಎಂದು ದೂರಲಾಗಿದೆ.
    ತಾಲೂಕಿನ ಸಿ.ಎಲ್ ೨ ಮದ್ಯದಂಗಡಿಗಳಲ್ಲಿ ಎಂಆರ್‌ಪಿ ದರದಲ್ಲಿ ಮದ್ಯ ಮಾರಾಟ ಮಾಡಬೇಕು. ಆದರೆ ಅಧಿಕ ಬೆಲೆಗೆ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಅಲ್ಲದೆ ಮದ್ಯ ಖರೀದಿಗೆ ರಶೀದಿಯನ್ನು ನೀಡುತ್ತಿಲ್ಲ. ಜೊತೆಗೆ ಸಾರ್ವಜನಿಕರಿಗೆ ಕಾಣುವಂತೆ ಮದ್ಯದ ಹೆಸರು ಹಾಗು ಬೆಲೆ ಪ್ರಕಟಗೊಳಿಸುತ್ತಿಲ್ಲ. ಈ ಮದ್ಯದಂಗಡಿಗಳಲ್ಲಿ ಪಾರ್ಸಲ್‌ಗೆ ಮಾತ್ರ ಅವಕಾಶವಿದೆ. ಆದರೆ ಸ್ಥಳದಲ್ಲಿಯೇ ಮದ್ಯ ಸೇವನೆಗೆ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ. ಈ ಎಲ್ಲಾ ವಿಚಾರಗಳಿಗೆ ಸಂಬಂಧಿಸಿದಂತೆ ಈಗಾಗಲೇ ಅಬಕಾರಿ ಇಲಾಖೆಗೆ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನಲೆಯಲ್ಲಿ ಕರ್ತವ್ಯ ಲೋಪದ ಆಧಾರದ ಮೇಲೆ ಇಲಾಖೆಯ ಠಾಣಾ ನಿರೀಕ್ಷಕ ಮತ್ತು ಉಪ ನಿರೀಕ್ಷಕರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಲಾಗಿದೆ.
    ಮನವಿ ಸಲ್ಲಿಸುವ ಸಂದರ್ಭದಲ್ಲಿ ಮುಖಂಡರಾದ ಶೇಖರಪ್ಪ, ಸುಬ್ಬೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಉಪ ತಹಸೀಲ್ದಾರ್ ಅರಸು ಮತ್ತು ಮಂಜಾನಾಯ್ಕ ಮನವಿ ಸ್ವೀಕರಿಸಿದರು.

Sunday, February 13, 2022

ಧಾರ್ಮಿಕ ಉಡುಪು ವಿವಾದ : ಶಾಲಾ-ಕಾಲೇಜುಗಳ ಬಳಿ ನಿಷೇದಾಜ್ಞೆ ಜಾರಿ

    ಭದ್ರಾವತಿ, ಫೆ. ೧೩: ವಿದ್ಯಾಸಂಸ್ಥೆಗಳ ಆವರಣದಲ್ಲಿ ಧಾರ್ಮಿಕ ಉಡುಪುಗಳನ್ನು ಧರಿಸುವ ಸಂಬಂಧ ಉಂಟಾಗಿರುವ ವಿವಾದದ ಹಿನ್ನಲೆಯಲ್ಲಿ ತಾಲೂಕಿನಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮವಾಗಿ ತಹಸೀಲ್ದಾರ್ ಆರ್. ಪ್ರದೀಪ್‌ರವರು ಫೆ.೧೪ರಂದು ಬೆಳಿಗ್ಗೆ ೬ ಗಂಟೆಯಿಂದ ಫೆ.೧೫ರ ರಾತ್ರಿ ೧೦ ಗಂಟೆವರೆಗೆ ಎಲ್ಲಾ ಶಾಲಾ-ಕಾಲೇಜುಗಳ ಆವರಣದಿಂದ ೨೦೦ ಮೀಟರ್ ಅಂತರದಲ್ಲಿ ಕಲಂ ೧೪೪ರ ಅಡಿ ನಿಷೇದಾಜ್ಞೆ ಜಾರಿಗೊಳಿಸಿ ಭಾನುವಾರ ಆದೇಶ ಹೊರಡಿಸಿದ್ದಾರೆ.
    ವಿದ್ಯಾಸಂಸ್ಥೆಗಳ ಆವರಣದಲ್ಲಿ ಧಾರ್ಮಿಕ ಉಡುಪು(ಹಿಜಾಬ್, ಕೇಸರಿ ಶಾಲು ಇತ್ಯಾದಿ)ಗಳನ್ನು ಧರಿಸುವ ಸಂಬಂಧ ಉಂಟಾಗಿರುವ ವಿವಾದದ ಹಿನ್ನಲೆಯಲ್ಲಿ ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆ ಪ್ರಗತಿಯಲ್ಲಿದ್ದು, ನ್ಯಾಯಾಲಯದ ಮಧ್ಯಂತರ ಆದೇಶದ ನಿರ್ದೇಶನಗಳಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ನಡೆಸಲು ಸರ್ಕಾರ ನಿರ್ಧರಿಸಿದೆ. ಈ ನಡುವೆ ಧಾರ್ಮಿಕ ಉಡುಪು(ಹಿಜಾಬ್, ಕೇಸರಿ ಶಾಲು ಇತ್ಯಾದಿ)ಗಳನ್ನು ಧರಿಸುವ ಸಂಬಂಧ ಬೆಂಬಲಿಸಿ ಅಥವಾ ವಿರೋಧಿಸಿ ಪ್ರತಿಭಟನೆ ಅಥವಾ ಮೆರವಣಿಗೆಗಳು ನಡೆಯುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮವಾಗಿ ಉಪವಿಭಾಗಾಧಿಕಾರಿಗಳ ಉಪಸ್ಥಿತಿಯಲ್ಲಿ ತಾಲೂಕು ಮಟ್ಟದ ಕಂದಾಯ, ಪೊಲೀಸ್ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ನಂತರ ನಿಷೇದಾಜ್ಞೆ ಜಾರಿಗೊಳಿಸಿದ್ದಾರೆ. ತಾಲೂಕಿನಲ್ಲಿ ನಿಷೇದಾಜ್ಞೆ ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪ್ರತಿಯೊಬ್ಬರು ಶಾಂತಿ ಸುವ್ಯವಸ್ಥೆಗೆ ಸಹಕರಿಸುವಂತೆ ಕೋರಿದ್ದಾರೆ.

ದಲಿತ ಮುಖಂಡ ರಂಗನಾಥ್ ನಿಧನ


ರಂಗನಾಥ್
    ಭದ್ರಾವತಿ, ಫೆ. ೧೩: ನಗರದ ಹೊಸಬುಳ್ಳಾಪುರ ನಿವಾಸಿ, ದಲಿತ ಮುಖಂಡ ರಂಗನಾಥ್(೪೭) ಅನಾರೋಗ್ಯದಿಂದ ನಿಧನ ಹೊಂದಿದರು.
    ಪತ್ನಿ, ಒಂದು ಗಂಡು, ಒಂದು ಹೆಣ್ಣು ಮಕ್ಕಳನ್ನು ಹೊಂದಿದ್ದರು. ಮೃತರ ಅಂತ್ಯಕ್ರಿಯೆ ಭಾನುವಾರ ಬೈಪಾಸ್ ರಸ್ತೆಯಲ್ಲಿರುವ  ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ರಂಗನಾಥ್‌ರವರು ಹಲವಾರು ದಲಿತ ಹೋರಾಟಗಳಲ್ಲಿ ಪಾಲ್ಗೊಂಡಿದ್ದರು. ಮೃತರ ನಿಧನಕ್ಕೆ ಡಿಎಸ್‌ಎಸ್ ಮುಖಂಡರಾದ ಕಾಣಿಕ್‌ರಾಜ್ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.

ಫೆ.೨೮ರಂದು ವಿಇಎಸ್ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಸರ್ವ ಸದಸ್ಯರ ಸಭೆ

ಭದ್ರಾವತಿ, ಫೆ. ೧೩: ನಗರದ ಹೊಸಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸರ್ವ ಸದಸ್ಯರ ವಿಶೇಷ ಮಹಾಸಭೆ ಫೆ.೨೮ರಂದು ಸಂಜೆ ೫.೩೦ಕ್ಕೆ ಸಂಸ್ಥೆಯ ಆಡಳಿತ ಕಛೇರಿಯಲ್ಲಿ ನಡೆಯಲಿದೆ.
    ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಸಭೆಗೆ  ಆಗಮಿಸಲಿದ್ದು, ವಿದ್ಯಾಸಂಸ್ಥೆ ಛೇರ್‍ಮನ್ ಬಿ.ಎಲ್ ರಂಗಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿದ್ಯಾಸಂಸ್ಥೆಯ ಎಲ್ಲಾ ಪದಾಧಿಕಾರಿಗಳು, ನಿರ್ದೇಶಕರು ಹಾಗು ಸದಸ್ಯರು ಪಾಲ್ಗೊಳ್ಳುವಂತೆ ಕೋರಲಾಗಿದೆ.

ಶುದ್ಧ ಕುಡಿಯುವ ನೀರಿನ ವ್ಯವಸ್ಥೆ : ಕೃತಜ್ಞತೆ

ಭದ್ರಾವತಿ ತಾಲೂಕಿನ ಬಾರಂದೂರು ಸರ್ಕಾರಿ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಕೊಟ್ಟ ಸ್ನೇಹ ಜೀವಿ ಬಳಗಕ್ಕೆ ಶಾಲಾ ಆಡಳಿತ ಮಂಡಳಿ ಕೃತಜ್ಞತೆ ಸಲ್ಲಿಸುವ ಜೊತೆಗೆ ಬಳಗದ ಪೊಲೀಸ್ ಉಮೇಶ್ ಅವರನ್ನು ಸನ್ಮಾನಿಸಿ ಗೌರವಿಸಿತು.
    ಭದ್ರಾವತಿ, ಫೆ. ೧೩: ತಾಲೂಕಿನ ಬಾರಂದೂರು ಸರ್ಕಾರಿ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಕೊಟ್ಟ ಸ್ನೇಹ ಜೀವಿ ಬಳಗಕ್ಕೆ ಶಾಲಾ ಆಡಳಿತ ಮಂಡಳಿ ಕೃತಜ್ಞತೆ ಸಲ್ಲಿಸಿದೆ.
    ಸುಮಾರು ೪೦ ಸಾವಿರ ರು. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಕೊಟ್ಟಿರುವ ಸ್ನೇಹ ಜೀವಿ ಬಳಗದ ಸೇವಾ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸುವ ಜೊತೆಗೆ ಬಳಗದ ಪೊಲೀಸ್ ಉಮೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಬಳಗದ ಪ್ರಮುಖರಾದ ಮುಳ್ಕೆರೆ ಲೋಕೇಶ್, ಮೇಘರಾಜ್, ಸುಹಾಸ್, ಕೃಷ್ಣ ಹಾಗು ಶಾಲಾ ಆಡಳಿತ ಮಂಡಳಿ ಪ್ರಮುಖರು, ಶಿಕ್ಷಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Saturday, February 12, 2022

ರವಿಕುಮಾರ್ ನಿಧನ

ರವಿಕುಮಾರ್
    ಭದ್ರಾವತಿ, ಫೆ. ೧೨: ಹಳೇನಗರದ ಶ್ರೀ ಹಳದಮ್ಮ ದೇವಿ ದೇವಸ್ಥಾನ ಸಮೀಪದ ನಿವಾಸಿ, ಆಟೋ ಚಾಲಕ ರವಿಕುಮಾರ್(೪೫) ಶನಿವಾರ ಹೃದಯಾಘಾತದಿಂದ ನಿಧನ ಹೊಂದಿದರು.
    ತಾಯಿ ಹಾಗು ಇಬ್ಬರು ಗಂಡು ಮಕ್ಕಳನ್ನು ಹೊಂದಿದ್ದರು. ರವಿಕುಮಾರ್ ಕಳೆದ ಸುಮಾರು ೨೫ ವರ್ಷಗಳಿಂದ ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಸೇವೆ ಸಲ್ಲಿಸುತ್ತಿದ್ದರು.
    ಇವರ ನಿಧನಕ್ಕೆ ದೇವಸ್ಥಾನದ ಪ್ರಧಾನ ಅರ್ಚಕ ರಂಗನಾಥ ಶರ್ಮ ಹಾಗು ಕುಟುಂಬ ವರ್ಗದವರು ಸಂತಾಪ ಸೂಚಿಸಿದ್ದು, ದೇವರು ಇವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ ಹಾಗು ಕುಟುಂಬ ವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ವಿಜೃಂಭಣೆಯಿಂದ ಜರುಗಿದ ಸುರಗಿತೋಪ್ ಶ್ರೀ ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವ

ಭದ್ರಾವತಿ ನಗರಸಭೆ ವಾರ್ಡ್ ನಂ.೨೦ರ ವ್ಯಾಪ್ತಿಯ ಸುರಗಿತೋಪ್ ಶ್ರೀ ಚೌಡೇಶ್ವರಿ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.
    ಭದ್ರಾವತಿ, ಫೆ. ೧೨: ನಗರಸಭೆ ವಾರ್ಡ್ ನಂ.೨೦ರ ವ್ಯಾಪ್ತಿಯ ಸುರಗಿತೋಪ್ ಶ್ರೀ ಚೌಡೇಶ್ವರಿ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.
    ಜಾತ್ರಾ ಮಹೋತ್ಸವದ ಅಂಗವಾಗಿ ಗಂಗಾಪೂಜೆ, ಅನ್ನಸಂತರ್ಪಣೆ, ರಾಜಬೀದಿ ಉತ್ಸವ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಎರಡು ದಿನಗಳ ಕಾಲ ನಡೆದ ಕಾರ್ಯಕ್ರಮದ ನೇತೃತ್ವವನ್ನು ವಾರ್ಡಿನ ಸದಸ್ಯೆ ಜಯಶೀಲ ಸುರೇಶ್ ವಹಿಸಿದ್ದರು.
    ಶಾಸಕ ಬಿ.ಕೆ ಸಂಗಮೇಶ್ವರ್, ಪ್ರಮುಖರಾದ ಶಾರದ ಅಪ್ಪಾಜಿ, ಜಿ. ಧರ್ಮಪ್ರಸಾದ್, ಮಂಗೋಟೆ ರುದ್ರೇಶ್, ಎಸ್. ಮಣಿಶೇಖರ್, ಎಂ.ಎ ಅಜಿತ್, ನಗರಸಭೆ ಪೌರಾಯುಕ್ತ ಕೆ. ಪರಮೇಶ್, ಪರಿಸರ ಅಭಿಯಂತರ ಪ್ರಭಾಕರ್, ಮಂಜುನಾಥ್, ದೇವಸ್ಥಾನ ಟ್ರಸ್ಟ್ ಗೌರವಾಧ್ಯಕ್ಷ ರಾಮಕೃಷ್ಣ, ಅಧ್ಯಕ್ಷ ಶಿವರಾಜ್, ಉಪಾಧ್ಯಕ್ಷ ಉಮೇಶ್, ಖಜಾಂಚಿ ರವಿ, ಕಾರ್ಯದರ್ಶಿ ಪರಮೇಶ್ ಸೇರಿದಂತೆ ಪದಾಧಿಕಾರಿಗಳು, ಸುರಗಿತೋಪು, ಕಾಗದನಗರ, ಜೆಪಿಎಸ್ ಕಾಲೋನಿ, ಬಾಲಭಾರತಿ, ನ್ಯೂಟೌನ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಭಕ್ತಾಧಿಗಳು ಪಾಲ್ಗೊಂಡಿದ್ದರು.