Tuesday, February 15, 2022

ದೂರ ಶಿಕ್ಷಣ ನಿರ್ದೇಶನಾಲಯದ ನೂತನ ನಿರ್ದೇಶಕರಾಗಿ ಡಾ.ಬಿ.ಎಸ್ ಬಿರಾದಾರ ನೇಮಕ : ನೂತನ ಪರಿಶೀಲನಾ ಸಮಿತಿ ಅಸ್ತಿತ್ವಕ್ಕೆ

    ಭದ್ರಾವತಿ, ಫೆ. ೧೫ : ಕುವೆಂಪು ವಿಶ್ವ ವಿದ್ಯಾನಿಲಯದ ದೂರ ಶಿಕ್ಷಣ ನಿರ್ದೇಶನಾಲಯದ ನೂತನ ನಿರ್ದೇಶಕರಾಗಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ.ಬಿ.ಎಸ್ ಬಿರಾದಾರ ಅವರನ್ನು ನೇಮಕಗೊಳಿಸಿ ಮಾನವ ಸಂಪನ್ಮೂಲ ಮತ್ತು ನಿರ್ವಹಣೆ ವಿಭಾಗದ ಕುಲಸಚಿವರು ಅಧಿಸೂಚನೆ ಹೊರಡಿಸಿದ್ದಾರೆ.
    ಪ್ರಸ್ತುತ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಎಸ್.ಎನ್ ಯೋಗೀಶ್ ಅವರನ್ನು ಬಿಡುಗಡೆಗೊಳಿಸಲಾಗಿದೆ. ದೂರ ಶಿಕ್ಷಣ ನಿರ್ದೇಶನಾಲಯದಲ್ಲಿ ಕೋಟ್ಯಾಂತರ ರು. ಬಾಕಿ ಉಳಿಸಿಕೊಂಡು ವಿಶ್ವ ವಿದ್ಯಾನಿಲಯಕ್ಕೆ ನಷ್ಟ ಉಂಟುಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಂಡಿಕೇಟ್ ಸದಸ್ಯರ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಇದಕ್ಕೆ ಪೂರಕ ಎಂಬಂತೆ ಇದೀಗ ನಿರ್ದೇಶಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ ಎನ್ನಲಾಗಿದೆ.
    ನೂತನ ಪರಿಶೀಲನಾ ಸಮಿತಿ:
    ದೂರ ಶಿಕ್ಷಣ ನಿರ್ದೇಶನಾಲಯಕ್ಕೆ ಸಂಬಂಧಿಸಿದಂತೆ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನಲೆಯಲ್ಲಿ ಪ್ರವೇಶಾತಿ ಶುಲ್ಕ, ಅಧ್ಯಯನ ಕೇಂದ್ರಗಳಿಂದ ಬರಬೇಕಾದ ಬಾಕಿ ಶುಲ್ಕಗಳ ವಿವರ ಹಾಗು ಇನ್ನಿತರ ಮಾಹಿತಿಗಳನ್ನು ಪರಿಶೀಲಿಸಿ ವರದಿ ನೀಡಲು ವಿಶ್ವವಿದ್ಯಾನಿಲಯ ನೂತನ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ.
    ಸಮಿತಿ ಅಧ್ಯಕ್ಷರಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ ಡೀನರ್ ಪ್ರೊ. ರಿಯಾಜ್ ಮಹಮೂದ್ ಮತ್ತು ಸದಸ್ಯರಾಗಿ ಸ್ನಾತಕೋತ್ತರ ಪ್ರಾಣಿಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ಎಂ. ವೆಂಕಟೇಶ್ವರಲು, ಸಿಂಡಿಕೇಟ್ ಸದಸ್ಯ ಜಿ. ಧರ್ಮಪ್ರಸಾದ್, ಶಿಕ್ಷಣ ಮಂಡಳಿ ಸದಸ್ಯ ಎಸ್. ಚಂದ್ರಶೇಖರ್ ಹಾಗು ಸಂಚಾಲಕರಾಗಿ ದೂರ ಶಿಕ್ಷಣ ನಿರ್ದೇಶನಾಲಯದ ಉಪ ಕುಲಸಚಿವರನ್ನು ನೇಮಕಗೊಳಿಸಲಾಗಿದೆ ಎಂದು ವಿಶ್ವ ವಿದ್ಯಾನಿಲಯದ ಕುಲಸಚಿವರು ಅಧಿಸೂಚನೆ ಹೊರಡಿಸಿದ್ದಾರೆ.

ಸಮವಸ್ತ್ರ ವಿವಾದ : ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿನಿಯರಿಂದ ಪ್ರತಿಭಟನೆ

ಭದ್ರಾವತಿ ತಾಲೂಕಿನ ದೊಣಬಘಟ್ಟ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಶಾಲಾ ಸಮವಸ್ತ್ರ ವಿವಾದ ಕಾಣಿಸಿಕೊಂಡಿದ್ದು, ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿನಿಯರು ಶಾಲೆ ಹಾಗು ಗ್ರಾಮ ಪಂಚಾಯಿತಿ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
    ಭದ್ರಾವತಿ, ಫೆ. ೧೫ : ಇದೀಗ ಪುನಃ ತಾಲೂಕಿನಲ್ಲಿ ಶಾಲಾ ಸಮವಸ್ತ್ರ ವಿವಾದ ಕಾಣಿಸಿಕೊಂಡಿದ್ದು, ಅತಿ ಹೆಚ್ಚು ಮುಸ್ಲಿಂ ಸಮುದಾಯದವರು ವಾಸಿಸುತ್ತಿರುವ ದೊಣಬಘಟ್ಟ ಗ್ರಾಮ ಪಂಚಾಯಿತಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿನಿಯರು ಶಾಲೆ ಹಾಗು ಗ್ರಾಮ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.
    ಎಂದಿನಂತೆ ಹಿಜಾಬ್ ಧರಿಸಿಕೊಂಡು ಶಾಲೆಗೆ ಆಗಮಿಸಿದ ವಿದ್ಯಾರ್ಥಿನಿಯರನ್ನು ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶದಂತೆ ಶಾಲೆ ಆವರಣ ಪ್ರವೇಶಿಸಲು ಶಾಲಾ ಆಡಳಿತ ಮಂಡಳಿ ನಿರಾಕರಿಸಿದ ಹಿನ್ನಲೆಯಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿನಿಯರು ಕೊನೆಗೆ ಗ್ರಾಮ ಪಂಚಾಯಿತಿ ಕಛೇರಿವರೆಗೂ ಮೆರವಣಿಗೆ ನಡೆಸಿ ಅಲ್ಲಿಯೂ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿನಿಯರಿಗೆ ಮುಸ್ಲಿಂ ಸಮುದಾಯದ ಪುರುಷ ವಿದ್ಯಾರ್ಥಿಗಳು ಸಹ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇದರಿಂದಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು.
    ಪ್ರತಿಭಟನೆ ನಡೆಸಿದ ವಿದ್ಯಾರ್ಥಿನಿಯರು ಕೊನೆಗೆ ಶಾಲೆಗೆ ಹಾಜರಾಗದೆ ಮನೆಗಳಿಗೆ ಹಿಂದಿರುಗಿದರು. ಯಾವುದೇ ರೀತಿ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.
    ಈ ಹಿಂದೆ ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಹಿಜಾಬ್ ವಿವಾದ ಕಾಣಿಸಿಕೊಂಡಿದ್ದು, ಕೊನೆಗೆ ಒಂದು ಹಂತಕ್ಕೆ ಬಂದು ತಲಿಪಿತ್ತು. ಈ ನಡುವೆ ಸರ್ಕಾರ ಕಾಲೇಜುಗಳಿಗೆ ರಜೆ ಘೋಷಿಸಿರುವುದರಿಂದ ನಿಯಂತ್ರಣಕ್ಕೆ ಬಂದಿದೆ.

Monday, February 14, 2022

ರೈಲ್ವೆ ಮೇಲ್ಸೇತುವೆ ಕಾಮಗಾರಿ ವೀಕ್ಷಿಸಿದ ಸಂಸದ ಬಿವೈ ರಾಘವೇಂದ್ರಗ


ಸಂಸದ ಬಿ.ವೈ ರಾಘವೇಂದ್ರ ಭದ್ರಾವತಿ ಕಡದಕಟ್ಟೆ ರೈಲ್ವೆ ಗೇಟ್ ಬಳಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಮಂಗಳವಾರ ವೀಕ್ಷಿಸಿದರು.

    ಭದ್ರಾವತಿ, ಫೆ. ೧೫ : ಸಂಸದ ಬಿ.ವೈ ರಾಘವೇಂದ್ರ ನಗರದ ಕಡದಕಟ್ಟೆ ರೈಲ್ವೆ ಗೇಟ್ ಬಳಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಮಂಗಳವಾರ ವೀಕ್ಷಿಸಿದರು.

ಕಾಮಗಾರಿ ಪ್ರಗತಿ ಪರಿಶೀಲಿಸಿದ ಸಂಸದರು, ಕಾಮಗಾರಿ ತಕ್ಷಣ ಮುಕ್ತಾಯಗೊಳಿಸುವ ನಿಟ್ಟಿನಲ್ಲಿ ಹೆಚ್ಚಿನ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.  ಜೊತೆಗೆ ರೈಲ್ವೆ ಮೇಲ್ಸೇತುವೆ ನಿರ್ಮಾಣದಿಂದ ಸ್ಥಳೀಯರಿಗೆ ಉಂಟಾಗುತ್ತಿರುವ ಸಾಧಕ-ಬಾಧಕಗಳ ಕುರಿತು ಚರ್ಚಿಸಿದರು. 

ಹಲವು ವರ್ಷಗಳ ಬೇಡಿಕೆಯಂತೆ ರೈಲ್ವೆ ಮೇಲ್ಸೇತುವೆ ಮಂಜೂರಾತಿ ಮಾಡಿಸಿಕೊಡುವಲ್ಲಿ ಸಂಸದ ಬಿ.ವೈ ರಾಘವೇಂದ್ರ ಯಶಸ್ವಿಯಾಗಿದ್ದು, ಕೆಲವು ದಿನಗಳ ಹಿಂದೆ ಕಾಮಗಾರಿ ಆರಂಭಗೊಂಡಿದೆ. ಮೆ|| ಎಸ್‌ಆರ್‌ಸಿ ಕಂಪನಿ ಇನ್‌ಫ್ರಾ ಪ್ರೈವೇಟ್ ಲಿಮಿಟೆಡ್, ಹೈದರಬಾದ್ ರವರಿಗೆ ಗುತ್ತಿಗೆ ನೀಡಲಾಗಿದ್ದು, ಕಾಮಗಾರಿ ಪ್ರಾರಂಭಗೊಂಡ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಜ.೧೬ರಂದು ದ್ವಿಚಕ್ರ ವಾಹನ ಹೊರತುಪಡಿಸಿ ಇತರೆ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಸೂಚಿಸಿ ಆದೇಶ ಹೊರಡಿಸಿದ್ದರು. ಇದಕ್ಕೂ ಮೊದಲು ಕಾಮಗಾರಿ ನಡೆಸುತ್ತಿರುವ ಸ್ಥಳದಲ್ಲಿ ವಾಸಿಸುತ್ತಿರುವ ನಿವಾಸಿಗಳಿಗೆ ಬೇರೆಡೆ ನಿವೇಶನ ಮಂಜೂರಾತಿ ಮಾಡುವ ಜೊತೆಗೆ ಭೂ ಪರಿಹಾರ ಸಹ ನೀಡಿ ಮುಂದಿನ ಕ್ರಮಕ್ಕೆ ಆದೇಶಿಸಿದ್ದರು. ಈ ಎಲ್ಲಾ ಬೆಳವಣಿಗೆಗಳ ನಡುವೆ ಇದೀಗ ಮೊದಲ ಬಾರಿಗೆ ಸಂಸದರು ಖುದ್ದಾಗಿ ಕಾಮಗಾರಿ ವೀಕ್ಷಿಸಿದರು. 

ರೈಲ್ವೆ ಇಲಾಖೆ  ಹಿರಿಯ ಅಧಿಕಾರಿಗಳು, ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಜೆ ನಾಗರಾಜ್, ನಗರಸಭೆ ಅಧ್ಯಕ್ಷೆ  ಗೀತಾ ರಾಜಕುಮಾರ್, ಸಣ್ಣ ಕೈಗಾರಿಕಾ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ, ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್, ಪೌರಾಯುಕ್ತ  ಕೆ. ಪರಮೇಶ, ಕಂದಾಯ, ಲೋಕೋಪಯೋಗಿ, ಮೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


“೨ ವರ್ಷದ ಅವಧಿಯಲ್ಲಿ ಸುಮಾರು ೨೬ ಕೋ.ರು. ವೆಚ್ಚದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಮುಕ್ತಾಯಗೊಳಿಸಲು ಟೆಂಡರ್‌ನಲ್ಲಿ ಸೂಚಿಸಲಾಗಿದೆ. ಸ್ಥಳೀಯರ ಮನವಿ ಮೇರೆಗೆ ಕಾಮಗಾರಿಯನ್ನು ಸಾಧ್ಯವಾದಷ್ಟು ೧ ವರ್ಷದ ಅವಧಿಯಲ್ಲಿ ಮುಕ್ತಾಯಗೊಳಿಸುವಂತೆ ಹಾಗು ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡುವಂತೆ ಮತ್ತು ಪ್ರಾಥಮಿಕ ಹಂತದ ನೆಲಮಟ್ಟದ ಕಾಮಗಾರಿಯನ್ನು ಮುಂದಿನ ೩-೪ ತಿಂಗಳಲ್ಲಿ ಮುಕ್ತಾಯಗೊಳಿಸುವಂತೆ ರೈಲ್ವೆ ಇಲಾಖೆ ಅಧಿಕಾರಿಗಳಿಗೆ, ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಅಲ್ಲದೆ ಸಾರ್ವಜನಿಕರ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡುವಂತೆ. ಈ ಭಾಗದಲ್ಲಿ ಕೇವಲ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದ್ದು, ಸಾರ್ವಜನಿಕರು ಕಾಮಗಾರಿ ಯಶಸ್ವಿಯಾಗಿ ಮುಕ್ತಾಯಗೊಳಿಸಲು ಎಲ್ಲಾ ರೀತಿಯ ಸಹಕಾರ ನೀಡುವಂತೆ ಮನವಿ ಮಾಡುತ್ತೇನೆ. 

   - ಬಿ.ವೈ. ರಾಘವೇಂದ್ರ, ಲೋಕಸಭಾ ಸದಸ್ಯರು, ಶಿವಮೊಗ್ಗ 




ಫೆ.೧೫ರಂದು ಸಂಸದರಿಂದ ರೈಲ್ವೆ ಮೇಲ್ಸೇತುವೆ ಕಾಮಗಾರಿ ವೀಕ್ಷಣೆ

    ಭದ್ರಾವತಿ, ಫೆ. ೧೪: ನಗರದ ಕಡದಕಟ್ಟೆ ರೈಲ್ವೆ ಗೇಟ್ ಬಳಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ವೀಕ್ಷಣೆಗೆ ಫೆ.೧೫ರಂದು ಬೆಳಿಗ್ಗೆ ೮.೩೦ಕ್ಕೆ ಸಂಸದ ಬಿ.ವೈ ರಾಘವೇಂದ್ರ ಆಗಮಿಸಲಿದ್ದಾರೆ.
    ಹಲವಾರು ವರ್ಷಗಳ ಬೇಡಿಕೆಯಂತೆ ಇದೀಗ ಕಳೆದ ಕೆಲವು ದಿನಗಳಿಂದ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ಆರಂಭಗೊಂಡ ನಂತರ ಮೊದಲ ಸಂಸದ ಬಿ.ವೈ ರಾಘವೇಂದ್ರ ಭೇಟಿ ನೀಡುತ್ತಿದ್ದಾರೆ. ರೈಲ್ವೆ ಇಲಾಖೆ ಅಧಿಕಾರಿಗಳು, ಸ್ಥಳೀಯ ಮುಖಂಡರು ಉಪಸ್ಥಿತರಿರುವರು.

ನಮ್ಮ ವೃತ್ತಿ ಜೀವನ ವಿದ್ಯೆ ಕಲಿತುಕೊಂಡವರು ನೆನಪಿಸುವಂತಿರಲಿ : ಎನ್.ಎಂ ರಮೇಶ್

ಭದ್ರಾವತಿ ನ್ಯೂಟೌನ್ ಸೆಂಟ್‌ಚಾರ್ಲ್ಸ್ ಶಾಲೆಯ ಸಭಾಂಗಣದಲ್ಲಿ  ಆಂಗ್ಲ ಭಾಷಾ ಶಿಕ್ಷಕರ ವೇದಿಕೆ (ಸ್ಟೀಲ್ ಟೌನ್ ಇಂಗ್ಲೀಷ್ ಟೀಚರ್‍ಸ್ ಫೋರಮ್) ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಾಗಾರದಲ್ಲಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಆಡಳಿತ ವಿಭಾಗದ ಉಪನಿರ್ದೇಶಕ ಎನ್.ಎಂ ರಮೇಶ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
    ಭದ್ರಾವತಿ, ಫೆ. ೧೪: ನಮ್ಮ ವೃತ್ತಿ ಜೀವನ ನಮ್ಮಿಂದ ವಿದ್ಯೆ ಕಲಿತುಕೊಂಡವರು ನೆನಪಿಸಿಕೊಳ್ಳುವಂತಿರಬೇಕು. ಆಗ ಮಾತ್ರ ಅದು ಸಾರ್ಥಕವಾಗುತ್ತದೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಆಡಳಿತ ವಿಭಾಗದ ಉಪನಿರ್ದೇಶಕ ಎನ್.ಎಂ ರಮೇಶ್ ಹೇಳಿದರು.
    ಅವರು ಸೋಮವಾರ ನಗರದ ನ್ಯೂಟೌನ್ ಸೆಂಟ್‌ಚಾರ್ಲ್ಸ್ ಶಾಲೆಯ ಸಭಾಂಗಣದಲ್ಲಿ  ಆಂಗ್ಲ ಭಾಷಾ ಶಿಕ್ಷಕರ ವೇದಿಕೆ (ಸ್ಟೀಲ್ ಟೌನ್ ಇಂಗ್ಲೀಷ್ ಟೀಚರ್‍ಸ್ ಫೋರಮ್) ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಾಗಾರದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಸರ್ಕಾರಿ ಸೇವೆಯಲ್ಲಿರುವವರು ಸದಾ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ನಾವು ನಿರ್ವಹಿಸುವ ಕರ್ತವ್ಯ ಸಾರ್ಥಕಗೊಳ್ಳಬೇಕು. ಶಿಕ್ಷಕರು ಮಕ್ಕಳಿಗೆ ಹೇಳಿಕೊಡುವ ಪಾಠ ಭವಿಷ್ಯದಲ್ಲಿ ಅವರು ನೆನಪಿಸಿಕೊಳ್ಳುವಂತಿರಬೇಕು. ಅದರಲ್ಲೂ ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳ ಮೇಲೆ ಹೆಚ್ಚಿನ ನಿಗಾವಹಿಸಬೇಕು. ನಮ್ಮ ಶಿಕ್ಷಕ ವೃತ್ತಿ ಸಾರ್ಥಕಪಡಿಸಿಕೊಳ್ಳಬೇಕೆಂದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಮಾತನಾಡಿ, ಮಕ್ಕಳಿಗೆ ಆಂಗ್ಲ ಭಾಷಾ ವಿಷಯ ಕಲಿಕೆ ತುಂಬಾ ಕಷ್ಟಕರವಾಗಿದೆ. ಆಂಗ್ಲ ಭಾಷೆ ಸರಳವಾಗಿ ಕಲಿಯುವಂತೆ ಮಾಡುವ ನಿಟ್ಟಿನಲ್ಲಿ ಶಿಕ್ಷಕರ ಶ್ರಮ ಹೆಚ್ಚಿನದ್ದಾಗಿದೆ. ಪ್ರಸ್ತುತ ಬದಲಾದ ಕಾಲಘಟ್ಟದಲ್ಲಿ ಇಂದಿನ ಶಿಕ್ಷಣ ವ್ಯವಸ್ಥೆಗೆ ಶಿಕ್ಷಕರು ಸಹ ಹೊಂದಿಕೊಳ್ಳುವ ಅನಿವಾರ್ಯತೆ ಎದುರಾಗಿದೆ. ಈ ನಿಟ್ಟಿನಲ್ಲಿ ಇಂತಹ ಕಾರ್ಯಾಗಾರಗಳು ಹೆಚ್ಚು ಸಹಕಾರಿಯಾಗಲಿವೆ ಎಂದರು.
    ಕಾರ್ಯಾಗಾರದಲ್ಲಿ ವೇದಿಕೆ ಅಧ್ಯಕ್ಷ ಎಂ. ದಿವಾಕರ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಆಂಗ್ಲ ಭಾಷೆಯನ್ನು ಸರಳವಾಗಿ ಅರ್ಥ ಮಾಡಿಸುವ ವಿಧಾನಗಳು, ಅನುತ್ತೀರ್ಣಗೊಂಡ ಮಕ್ಕಳ ಆಂಗ್ಲ ಭಾಷಾ ಕಲಿಕೆಯಲ್ಲಿನ ನ್ಯೂನ್ಯತೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ವಿವರಿಸಿದರು.
    ನಿವೃತ್ತಿ ಹೊಂದುತ್ತಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ತಹಸೀಲ್ದಾರ್ ಪ್ರದೀಪ್ ಆರ್  ನಿಕ್ಕಮ್ ಪಾಲ್ಗೊಂಡಿದ್ದರು. ವೇದಿಕೆ ಕಾರ್ಯದರ್ಶಿ ವೈ. ಗಣೇಶ್, ಸೈಂಟ್‌ಚಾರ್ಲ್ಸ್ ಶಾಲೆಯ ಮಂಜುಳಾ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಶಿಕ್ಷಣ ಸಂಯೋಜಕ ರವಿಕುಮಾರ್,  ಪ್ರಭು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಭಾರತಿ ಕೇಶವಭಟ್ ಪ್ರಾರ್ಥಿಸಿದರು. ಜಯಕುಮಾರ್ ಸ್ವಾಗತಿಸಿದರು. ವಿವಿಧ ಶಾಲೆಗಳ ಆಂಗ್ಲ ಭಾಷಾ ಶಿಕ್ಷಕರು ಪಾಲ್ಗೊಂಡಿದ್ದರು.

ಅಂತರಾಷ್ಟ್ರೀಯ ಯೋಗಪಟ್ಟು ಡಿ. ನಾಗರಾಜ್‌ಗೆ ರಾಜ್ಯಮಟ್ಟದ ಸಹೃದಯ ಯೋಗ ಶಿಕ್ಷಕ ಪ್ರಶಸ್ತಿ


ಯೋಗ ಭಂಗಿಯಲ್ಲಿ ಡಿ. ನಾಗರಾಜ್
    ಭದ್ರಾವತಿ, ಫೆ. ೧೪: ಸಾಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ೨೧ನೇ ವರ್ಷದ ಸಾಗರೋತ್ಸವ ಕಾರ್ಯಕ್ರಮದಲ್ಲಿ ನಗರದ ವಿವೇಕಾನಂದ ಯೋಗ ಕೇಂದ್ರದ ಅಧ್ಯಕ್ಷ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಂತರಾಷ್ಟ್ರೀಯ ಯೋಗಪಟು ಡಿ. ನಾಗರಾಜ್‌ರವರಿಗೆ ರಾಜ್ಯಮಟ್ಟದ ಸಹೃದಯ ಯೋಗ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
    ಡಿ. ನಾಗರಾಜ್‌ರವರ ೪ ದಶಕಗಳ ಯೋಗ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದ್ದು, ಪ್ರಶಸ್ತಿಯನ್ನು ಶಾಸಕ ಹರತಾಳು ಹಾಲಪ್ಪ ವಿತರಿಸಿದರು.
    ರಾಜಗುರು ಹಿರೇಮಠ ಕೆಳದಿ ಬಂದಗದ್ದೆಯ ಡಾ. ಮಹೇಶ್ವರ ಶಿವಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯವಹಿಸಿದ್ದರು. ಸಾಗರ ನಗರಸಭೆ ಅಧ್ಯಕ್ಷೆ ಮಧುರ ಶಿವಾನಂದ್, ಪೌರಾಯುಕ್ತ ರಾಜು ಡಿ. ಬಣಕಾರ್,  ಡಾ. ರಾಜನಂದಿನಿ ಕಾಗೋಡು, ಡಾ. ವೆಂಕಟೇಶ್ ಜೋಯ್ಸ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಹೃದಯ ಬಳಗದ ಅಧ್ಯಕ್ಷ ಜಿ. ನಾಗೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕರ್ತವ್ಯ ಲೋಪ : ಅಬಕಾರಿ ಇಲಾಖೆ ನಿರೀಕ್ಷಕ, ಉಪ ನಿರೀಕ್ಷಕರನ್ನು ಸೇವೆಯಿಂದ ಅಮಾನತುಗೊಳಿಸಿ

ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ  ಶಶಿಕುಮಾರ್ ಎಸ್ ಗೌಡ  ಏಕಾಂಗಿ ಹೋರಾಟ


ಭದ್ರಾವತಿ ತಾಲೂಕಿನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ಲೋಪವೆಸಗಿದ್ದು, ಈ ಹಿನ್ನಲೆಯಲ್ಲಿ ಇಲಾಖೆಯ ಠಾಣಾ ನಿರೀಕ್ಷಕ ಮತ್ತು ಉಪ ನಿರೀಕ್ಷಕರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ  ಶಶಿಕುಮಾರ್ ಎಸ್ ಗೌಡ ಸೋಮವಾರ ತಾಲೂಕು ಕಛೇರಿ ಮುಂಭಾಗ ಏಕಾಂಗಿ ಹೋರಾಟ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

    ಭದ್ರಾವತಿ, ಫೆ. ೧೪: ತಾಲೂಕಿನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ಲೋಪವೆಸಗಿದ್ದು, ಈ ಹಿನ್ನಲೆಯಲ್ಲಿ ಇಲಾಖೆಯ ಠಾಣಾ ನಿರೀಕ್ಷಕ ಮತ್ತು ಉಪ ನಿರೀಕ್ಷಕರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ  ಶಶಿಕುಮಾರ್ ಎಸ್ ಗೌಡ ಸೋಮವಾರ ತಾಲೂಕು ಕಛೇರಿ ಮುಂಭಾಗ ಏಕಾಂಗಿ ಹೋರಾಟ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
    ತಾಲೂಕಿನ ಡೈರಿ ವೃತ್ತದಲ್ಲಿ ರಸ್ತೆ ಪಕ್ಕದಲ್ಲಿರುವ ಮದ್ಯದಂಗಡಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಮಹಿಳೆಯರು, ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಸ್ಥಳೀಯ ನಿವಾಸಿಗಳು ನಿರ್ಭೀತಿಯಿಂದ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಮದ್ಯ ಸೇವನೆ ಮಾಡುವವರಿಂದ ಪ್ರತಿ ದಿನ ಗುಂಪು ಗಲಾಟೆ, ಹೊಡೆದಾಟ ಸೇರಿದಂತೆ ಗಂಭೀರ ಪ್ರಕರಣಗಳು ನಡೆಯುತ್ತಿವೆ. ಈ ಸಂಬಂಧ ಈಗಾಗಲೇ ಹಲವಾರು ಬಾರಿ ಹೋರಾಟ ನಡೆಸಿ ನ್ಯೂಟೌನ್ ಪೊಲೀಸ್ ಠಾಣೆಗೆ ಸಹ ದೂರು ನೀಡಲಾಗಿದೆ. ಅಲ್ಲದೆ ಅಬಕಾರಿ ಇಲಾಖೆಗೂ ಮನವಿ ಸಲ್ಲಿಸಲಾಗಿದೆ. ಮದ್ಯದಂಗಡಿಗಳಿಂದ ಶಾಂತಿಗೆ ಭಂಗವಾಗುತ್ತಿದ್ದರೂ ಸಹ ಯಾವುದೇ ಕೈಗೊಂಡಿಲ್ಲ ಎಂದು ದೂರಲಾಗಿದೆ.
    ತಾಲೂಕಿನ ಸಿ.ಎಲ್ ೨ ಮದ್ಯದಂಗಡಿಗಳಲ್ಲಿ ಎಂಆರ್‌ಪಿ ದರದಲ್ಲಿ ಮದ್ಯ ಮಾರಾಟ ಮಾಡಬೇಕು. ಆದರೆ ಅಧಿಕ ಬೆಲೆಗೆ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಅಲ್ಲದೆ ಮದ್ಯ ಖರೀದಿಗೆ ರಶೀದಿಯನ್ನು ನೀಡುತ್ತಿಲ್ಲ. ಜೊತೆಗೆ ಸಾರ್ವಜನಿಕರಿಗೆ ಕಾಣುವಂತೆ ಮದ್ಯದ ಹೆಸರು ಹಾಗು ಬೆಲೆ ಪ್ರಕಟಗೊಳಿಸುತ್ತಿಲ್ಲ. ಈ ಮದ್ಯದಂಗಡಿಗಳಲ್ಲಿ ಪಾರ್ಸಲ್‌ಗೆ ಮಾತ್ರ ಅವಕಾಶವಿದೆ. ಆದರೆ ಸ್ಥಳದಲ್ಲಿಯೇ ಮದ್ಯ ಸೇವನೆಗೆ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ. ಈ ಎಲ್ಲಾ ವಿಚಾರಗಳಿಗೆ ಸಂಬಂಧಿಸಿದಂತೆ ಈಗಾಗಲೇ ಅಬಕಾರಿ ಇಲಾಖೆಗೆ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನಲೆಯಲ್ಲಿ ಕರ್ತವ್ಯ ಲೋಪದ ಆಧಾರದ ಮೇಲೆ ಇಲಾಖೆಯ ಠಾಣಾ ನಿರೀಕ್ಷಕ ಮತ್ತು ಉಪ ನಿರೀಕ್ಷಕರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಲಾಗಿದೆ.
    ಮನವಿ ಸಲ್ಲಿಸುವ ಸಂದರ್ಭದಲ್ಲಿ ಮುಖಂಡರಾದ ಶೇಖರಪ್ಪ, ಸುಬ್ಬೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಉಪ ತಹಸೀಲ್ದಾರ್ ಅರಸು ಮತ್ತು ಮಂಜಾನಾಯ್ಕ ಮನವಿ ಸ್ವೀಕರಿಸಿದರು.