Thursday, February 24, 2022

ಜನಪರ ಯೋಜನೆಗಳು ಜಾರಿಗೆ ಬರದಂತೆ ತಡೆಯಲು ಕಾಂಗ್ರೆಸ್ ಕುತಂತ್ರ

೨ ಕೋ. ರು. ವೆಚ್ಚದ ಅಧಿವೇಶನ ಮೊಟಕು : ಎಂ.ಪಿ ರೇಣುಕಾಚಾರ್ಯ


ಭದ್ರಾವತಿ ಹೊಸಮನೆ ಶಿವಾಜಿ ವೃತ್ತದಲ್ಲಿ ಬಿಜೆಪಿ ಮಂಡಲ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಜನ ವಿರೋಧಿ ಕಾಂಗ್ರೆಸ್ ವಿರುದ್ಧ ಜನಜಾಗೃತಿ ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಪಾಲ್ಗೊಂಡು ಮಾತನಾಡಿದರು.
    ಭದ್ರಾವತಿ, ಫೆ. ೨೪: ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಜನಪರ ಯೋಜನೆಗಳು ಜಾರಿಗೆ ಬರದಂತೆ ತಡೆಯುವ ಉದ್ದೇಶದಿಂದ ವಿಧಾನಸಭೆ ಅಧಿವೇಶನ ಮೊಟಕುಗೊಳ್ಳುವಂತೆ ವಿರೋಧ ಪಕ್ಷವಾದ ಕಾಂಗ್ರೆಸ್ ಈ ಬಾರಿ ಕುತಂತ್ರ ನಡೆಸಿತು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಆರೋಪಿಸಿದರು.
    ಅವರು ಗುರುವಾರ ಹೊಸಮನೆ ಶಿವಾಜಿ ವೃತ್ತದಲ್ಲಿ ಬಿಜೆಪಿ ಮಂಡಲ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜನ ವಿರೋಧಿ ಕಾಂಗ್ರೆಸ್ ವಿರುದ್ಧ ಜನಜಾಗೃತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
    ಹಿಜಾಬ್ ಸಂಬಂಧ ಕಾಂಗ್ರೆಸ್ ಅನುಸರಿಸುತ್ತಿರುವ ಗೊಂದಲದ ನಿಲುವಿನಿಂದ ಜನರ ಮನಸ್ಸನ್ನು ಬೇರೆಡೆಗೆ ಸೆಳೆಯುವ ಉದ್ದೇಶದಿಂದ ವಿನಾಕಾರಣ ಸುಮಾರು ೨ ಕೋ. ರು. ವೆಚ್ಚದ ಅಧಿವೇಶನ ಹಾಳು ಮಾಡಲಾಗಿದೆ. ಸರ್ಕಾರಕ್ಕೆ ಸೂಕ್ತ ಸಲಹೆ, ಸಹಕಾರ ನೀಡುವ ಮೂಲಕ ರಾಜ್ಯದ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ವಿರೋಧ ಪಕ್ಷ ಅಸಭ್ಯ ಘೋಷಣೆಗಳ ಮೂಲಕ ಕೀಳುಮಟ್ಟದ ಸಂಸ್ಕೃತಿಯನ್ನು ಪ್ರದರ್ಶಿಸಿದೆ. ಮತ್ತೊಂದೆಡೆ ಹಿಜಾಬ್ ಸಂಬಂಧ ಹೋರಾಟ ನಡೆಸುವ ಕೆಲವೇ ಕೆಲವು ಮಂದಿಗೆ ಕಾನೂನು ಹೋರಾಟ ನಡೆಸಲು ಎಲ್ಲಾ ರೀತಿಯ ಸಿದ್ದತೆಯನ್ನು ಕಾಂಗ್ರೆಸ್ ಪಕ್ಷ ಮಾಡಿ ಕೊಟ್ಟಿದೆ ದೂರಿದರು.
    ಶಿವಮೊಗ್ಗದಲ್ಲಿ ಹಿಜಾಬ್ ಸಂಬಂಧ ನಡೆದ ಗಲಭೆ ಹಿನ್ನಲೆಯಲ್ಲಿ ಡಿ.ಕೆ ಶಿವಕುಮಾರ್‌ರವರು ನೀಡಿದ ಪ್ರಚೋದನಾಕಾರಿ ಹೇಳಿಕೆಯೇ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡಿದೆ. ಬದಲಾದ ಮನಸ್ಥಿತಿಯೇ ಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಕಾರಣ ಎಂದು ಆರೋಪಿಸಿ ಹತ್ಯೆಗೈದವರನ್ನು ತಕ್ಷಣ ಬಂಧಿಸ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ಅಧ್ಯಕ್ಷತೆ ವಹಿಸಿದ್ದರು. ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್, ಜಿ.ಪಂ. ಮಾಜಿ ಸದಸ್ಯ ಎಸ್. ಕುಮಾರ್, ಸೂಡಾ ಸದಸ್ಯ ವಿ. ಕದಿರೇಶ್, ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ಆರ್.ಎಸ್ ಶೋಭಾ, ರಾಮನಾಥ್ ಬರ್ಗೆ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಪಕ್ಷದ ಪ್ರಮುಖರಾದ ಪ್ರಧಾನ ಕಾರ್ಯದರ್ಶಿಗಳಾದ ಚನ್ನೇಶ್, ಪಿ. ರಂಗಸ್ವಾಮಿ, ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪಾಟೀಲ್, ಯುವ ಘಟಕದ ಅಧ್ಯಕ್ಷ ವಿಜಯ್, ಎಸ್.ಸಿ ಘಟಕದ ಅಧ್ಯಕ್ಷ ಗಣೇಶ್ ರಾವ್, ಎಂ. ಮಂಜುನಾಥ್, ಕೃಷ್ಣ ಛಲವಾದಿ, ಬಿ.ಎಸ್ ಶ್ರೀನಾಥ್, ಅವಿನಾಶ್, ಮಲ್ಲೇಶ್, ಸುಲೋಚನಾ ಪ್ರಕಾಶ್, ಎಸ್.ಎನ್ ನಾಗಮಣಿ, ಮಂಜುಳ, ಶ್ಯಾಮಲ, ಕವಿತಾ ಸುರೇಶ್ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಅಂಚೆ ಜೀವ ವಿಮೆ ಜನಸಾಮಾನ್ಯರಿಗೆ ತಲುಪಿಸಲಿ : ಪ್ರಹ್ಲಾದ್ ನಾಯಕ್


ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಭದ್ರಾ ಅತಿಥಿ ಗೃಹದ ಸಭಾಂಗಣದಲ್ಲಿ ಅಯೋಜಿಸಲಾಗಿದ್ದ ಅಂಚೆ ಜೀವ ವಿಮೆ ಮತ್ತು ಗ್ರಾಮೀಣ ಅಂಚೆ ಜೀವ ವಿಮೆ ಮೇಳವನ್ನು ಅಂಚೆ ಇಲಾಖೆ ಶಿವಮೊಗ್ಗ ವಿಭಾಗದ ಅಧೀಕ್ಷಕ ಜಿ. ಹರೀಶ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
    ಭದ್ರಾವತಿ, ಫೆ. ೨೪: ಪ್ರಸ್ತುತ ಜಿಲ್ಲೆಯಲ್ಲಿ ಭಾರತೀಯ ಅಂಚೆ ಇಲಾಖೆ ವ್ಯಾಪಕವಾಗಿ ವಿಸ್ತರಿಸಿಕೊಂಡಿದ್ದು, ಅಲ್ಲದೆ ಸೇವಾ ಕಾರ್ಯ ವ್ಯಾಪ್ತಿಯನ್ನೂ ಸಹ ಹೆಚ್ಚಿಸಿಕೊಂಡಿದೆ. ಅಂಚೆ ಜೀವ ವಿಮೆ ಮತ್ತು ಗ್ರಾಮೀಣ ಅಂಚೆ ಜೀವ ವಿಮೆ ಯೋಜನೆಗಳು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಬೇಕೆಂದು ಅಂಚೆ ನಿರೀಕ್ಷಿಕ ಪ್ರಹ್ಲಾದ ನಾಯಕ್ ಮನವಿ ಮಾಡಿದರು.
    ಅವರು ಗುರುವಾರ ನಗರದ ನ್ಯೂಟೌನ್ ವಿಐಎಸ್‌ಎಲ್ ಭದ್ರಾ ಅತಿಥಿ ಗೃಹದ ಸಭಾಂಗಣದಲ್ಲಿ ಅಯೋಜಿಸಲಾಗಿದ್ದ ಅಂಚೆ ಜೀವ ವಿಮೆ ಮತ್ತು ಗ್ರಾಮೀಣ ಅಂಚೆ ಜೀವ ವಿಮೆ ಮೇಳದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.
    ಜೀವ ವಿಮೆ ಯೋಜನೆಯಿಂದಾಗಿ ಅಂಚೆ ನೌಕರರು ಜನರೊಂದಿಗೆ ಹೆಚ್ಚಿನ ಸಂಪರ್ಕ ಸಾಧಿಸುವ ಜೊತೆಗೆ ಸಾಮಾನ್ಯ ಜನರು ಭವಿಷ್ಯದಲ್ಲಿ ಆರ್ಥಿಕವಾಗಿ ಭದ್ರತೆ ಹೊಂದಲು ಅಗತ್ಯವಿರುವ ಸೇವೆಯನ್ನು ನೀಡಬಹುದಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಶಿವಮೊಗ್ಗ ವಿಮಾ ವಿಭಾಗದಲ್ಲಿ ಭದ್ರಾವತಿ, ಶಿವಮೊಗ್ಗ ಮತ್ತು ಸಾಗರದಲ್ಲಿ ವಿಭಾಗಗಳನ್ನು ತೆರೆಯಲಾಗಿದೆ. ಹಲವಾರು ವಿಮಾ ಯೋಜನೆಗಳು ಅಸ್ತಿತ್ವದಲ್ಲಿದ್ದು, ಈ ಯೋಜನೆಗಳು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
    ಭದ್ರಾವತಿ ಪ್ರಧಾನ ಅಂಚೆ ಕಛೇರಿಯ ಪೋಸ್ಟ್ ಮಾಸ್ಟರ್ ವಿ. ಶಶಿಧರ್ ಅಧ್ಯಕ್ಷತೆ ವಹಿಸಿದ್ದರು. ಅಂಚೆ ಇಲಾಖೆ ಶಿವಮೊಗ್ಗ ವಿಭಾಗದ ಅಧೀಕ್ಷಕ ಜಿ. ಹರೀಶ್, ಉಪ ಅಧೀಕ್ಷಕರಾದ ಕೆ.ಆರ್ ಉಷಾ, ನಾಗರಾಜ್, ವಿಐಎಸ್‌ಎಲ್ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್ ಪ್ರವೀಣ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Wednesday, February 23, 2022

ಸಮಾಜಕ್ಕೆ ಉತ್ತಮ ಸಂದೇಶದ ಜೊತೆಗೆ ಚಿತ್ರರಂಗದಲ್ಲಿಯೇ ಎಲ್ಲವನ್ನೂ ಕಂಡುಕೊಂಡು ಡಾ. ರಾಜ್‌ಕುಮಾರ್ ಕುಟುಂಬ

ಡಾ. ರಾಜ್‌ಕುಮಾರರ ದೇಗುಲ, ಪುನೀತ್ ರಾಜ್‌ಕುಮಾರ್ ಪುತ್ಥಳಿ ಅನಾವರಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಬಿ.ವೈ ರಾಘವೇಂದ್ರ ಪ್ರಶಂಸೆ


ಭದ್ರಾವತಿ ನಗರಸಭೆ ೩ನೇ ವಾರ್ಡ್ ವ್ಯಾಪ್ತಿಯ ಬಿ.ಎಚ್ ರಸ್ತೆ ಚಾಮೇಗೌಡ ಏರಿಯಾದಲ್ಲಿರುವ ಡಾ. ರಾಜ್‌ಕುಮಾರ್ ಅಭಿಮಾನಿಗಳ ಬಳಗ ಹಾಗು ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ರಾಜ್‌ಕುಮಾರರ ದೇಗುಲ ಹಾಗು ಪುತ್ಥಳಿ ಆನಾವರಣಕ್ಕೆ ಬುಧವಾರ ಸಂಸದ ಬಿ.ವೈ ರಾಘವೇಂದ್ರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
    ಭದ್ರಾವತಿ, ಫೆ. ೨೩: ಕರ್ನಾಟಕ ರತ್ನ, ವರನಟ ಡಾ. ರಾಜ್‌ಕುಮಾರ್ ಕುಟುಂಬದವರು ತಮ್ಮ ಇಡೀ ಬದುಕನ್ನು ಕೇವಲ ಚಿತ್ರರಂಗ ಹಾಗು ಸಮಾಜ ಸೇವೆಗೆ ಮಾತ್ರ ಮೀಸಲಿಡುವ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆಂದು ಸಂಸದ ಬಿ.ವೈ ರಾಘವೇಂದ್ರ ಪ್ರಶಂಸೆ ವ್ಯಕ್ತಪಡಿಸಿದರು.
    ಅವರು ಬುಧವಾರ ನಗರಸಭೆ ೩ನೇ ವಾರ್ಡ್ ವ್ಯಾಪ್ತಿಯ ಬಿ.ಎಚ್ ರಸ್ತೆ ಚಾಮೇಗೌಡ ಏರಿಯಾದಲ್ಲಿರುವ ಡಾ. ರಾಜ್‌ಕುಮಾರ್ ಅಭಿಮಾನಿಗಳ ಬಳಗ ಹಾಗು ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ರಾಜ್‌ಕುಮಾರರ ದೇಗುಲ ಹಾಗು ಪುತ್ಥಳಿ ಆನಾವರಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
    ಡಾ. ರಾಜ್‌ಕುಮಾರ್ ಕುಟುಂಬದವರು ಚಿತ್ರರಂಗದಲ್ಲಿಯೇ ಎಲ್ಲವನ್ನು ಕಂಡು ಕೊಂಡಿದ್ದಾರೆ. ಆ ಮೂಲಕ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡಿದ್ದಾರೆ. ಹಲವಾರು ಸಮಾಜಮುಖಿ ಸೇವಾ ಕಾರ್ಯಗಳನ್ನು ಕೈಗೊಂಡಿದ್ದಾರೆ. ಆದರ್ಶತನದ ಬದುಕನ್ನು ಈ ನಾಡಿಗೆ ನೀಡಿದ್ದಾರೆ. ರಾಜ್‌ಕುಮಾರ್‌ರವರು ಒಂದು ವೇಳೆ ರಾಜಕೀಯಕ್ಕೆ ಪ್ರವೇಶಿಸಿದ್ದರೇ ಅವರನ್ನು ನಾವೆಲ್ಲರೂ ಮುಖ್ಯಮಂತ್ರಿ ಸ್ಥಾನದಲ್ಲಿ ನೋಡಬೇಕಾಗಿರುತ್ತಿತ್ತು. ಆದರೆ ಈ ಕುಟುಂಬದವರು ಯಾವುದಕ್ಕೂ ಆಸೆ ಪಡದೆ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದಾರೆ. ಇಂತಹ ಕುಟುಂಬದ ಪುನೀತ್‌ರಾಜ್‌ಕುಮಾರ್‌ರವರ ಪುತ್ಥಳಿ ಜಿಲ್ಲೆಯಲ್ಲಿ ಅದರಲ್ಲೂ ಭದ್ರಾವತಿಯಲ್ಲಿ ನಿರ್ಮಾಣಗೊಳ್ಳುತ್ತಿರುವುದು ತುಂಬಾ ಸಂತಸದ ಸಂಗತಿಯಾಗಿದೆ ಎಂದರು.

ಒಟ್ಟು ೨೦ ಲಕ್ಷ ರು. ಅಂದಾಜು ವೆಚ್ಚದಲ್ಲಿ ದೇಗುಲ ಮತ್ತು ಪುತ್ಥಳಿ ನಿರ್ಮಿಸಲಾಗುತ್ತಿದೆ. ಕಂಚು ಸೇರಿದಂತೆ ಇನ್ನಿತರ ಲೋಹ ಬಳಸಿ ಸುಮಾರು ೬.೫ ಲಕ್ಷ ರು. ವೆಚ್ಚದಲ್ಲಿ ೩ ಅಡಿ ಎತ್ತರ, ೨ ಅಡಿ ಅಗಲ ಹೊಂದಿರುವ ಪುತ್ಥಳಿಯನ್ನು ನಗರದ ಉಜ್ಜನಿಪುರದ ವಿಷ್ಣು ಆರ್ಟ್ಸ್‌ರವರು ನಿರ್ಮಿಸುತ್ತಿದ್ದಾರೆ. ಈ ಕಾರ್ಯಕ್ಕೆ ಸಂಸದರು ರು. ೫೧,೦೦೦ ದೇಣಿಗೆ ನೀಡಿದ್ದು, ಇದೆ ರೀತಿ ಹಲವು ಮಂದಿ ಗಣ್ಯರು, ದಾನಿಗಳು, ಅಭಿಮಾನಿಗಳು ದೇಣಿಗೆ ನೀಡಿದ್ದಾರೆ.
                                                 - ಅಪ್ಪು, ಅಧ್ಯಕ್ಷರು, ಕರ್ನಾಟಕ ರತ್ನ ಪುನೀತ್‌ರಾಜ್‌ಕುಮಾರ್ ಅಭಿಮಾನಿಗಳ ಸಂಘ

    ನಗರಸಭಾ ಸದಸ್ಯ ಬಿ.ಕೆ ಮೋಹನ್ ಮಾತನಾಡಿ, ಕಳೆದ ೫-೬ ದಶಕಗಳಿಂದ ಡಾ. ರಾಜ್‌ಕುಮಾರ್ ಅಭಿಮಾನಿಗಳ ಬಳಗ ಯಾವುದೇ ರಾಜಕೀಯ ಹಿತಾಸಕ್ತಿಗೆ ಒಳಗಾಗದೆ ಮುನ್ನಡೆದುಕೊಂಡು ಬರುತ್ತಿರುವುದು ಜಿಲ್ಲೆಯಲ್ಲಿಯೇ ವಿಶೇಷವಾಗಿದೆ. ಎಲ್ಲಾ ಧರ್ಮ, ಜಾತಿ, ಪಂಗಡ, ಎಲ್ಲಾ ರಾಜಕೀಯ ಪಕ್ಷಗಳ, ವಿವಿಧ ಸಂಘಟನೆಗಳು ಒಟ್ಟಾಗಿ ಅಭಿಮಾನಿ ಬಳಗ ರೂಪಿಸಿಕೊಂಡಿರುವುದು ಸಮಾಜಕ್ಕೆ ಮಾದರಿಯಾಗಿದೆ. ಈ ಸಂಘಟನೆ ಇದೀಗ ರಾಜ್‌ಕುಮಾರ್‌ರವರ ದೇಗುಲ ಪುನೀತ್‌ರಾಜ್‌ಕುಮಾರ್‌ರವರ ಪುತ್ಥಳಿ ನಿರ್ಮಾಣಕ್ಕೆ ಮುಂದಾಗಿರುವುದು ಒಳ್ಳೆಯ ಬೆಳೆವಣಿಗೆಯಾಗಿದೆ ಎಂದರು.
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಬಿಜೆಪಿ ಮುಖಂಡ ಬಿ.ಕೆ ಶ್ರೀನಾಥ್, ನಗರಸಭಾ ಸದಸ್ಯರಾದ ವಿ. ಕದಿರೇಶ್, ಜಾರ್ಜ್, ಡಾ. ರಾಜ್‌ಕುಮಾರ್ ಹಾಗು ಪುನೀತ್‌ರಾಜ್‌ಕುಮಾರ್ ಅಭಿಮಾನಿ ಬಳಗದ ಪದಾಧಿಕಾರಿಗಳು, ಪ್ರಮುಖರು, ಸ್ಥಳೀಯ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿರಿದ್ದರು.


ಭದ್ರಾವತಿ ನಗರಸಭೆ ೩ನೇ ವಾರ್ಡ್ ವ್ಯಾಪ್ತಿಯ ಬಿ.ಎಚ್ ರಸ್ತೆ ಚಾಮೇಗೌಡ ಏರಿಯಾದಲ್ಲಿರುವ ಡಾ. ರಾಜ್‌ಕುಮಾರ್ ಅಭಿಮಾನಿಗಳ ಬಳಗ ಹಾಗು ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ರಾಜ್‌ಕುಮಾರರ ದೇಗುಲ ಹಾಗು ಪುತ್ಥಳಿ ಆನಾವರಣಕ್ಕೆ ಬುಧವಾರ ಸಂಸದ ಬಿ.ವೈ ರಾಘವೇಂದ್ರ ಗುದ್ದಲಿ ಪೂಜೆ ನೆರವೇರಿಸಿದರು.




ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಗೆ ಖಂಡನೆ, ಸಂತಾಪ

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯನ್ನು ಖಂಡಿಸಿ ಭದ್ರಾವತಿ ಶಿವಾಜಿ ವೃತ್ತದಲ್ಲಿ ಬುಧವಾರ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸುವ ಜೊತೆಗೆ ಸಂತಾಪ ಸೂಚಿಸಲಾಯಿತು.
    ಭದ್ರಾವತಿ, ಫೆ. ೨೩: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯನ್ನು ಖಂಡಿಸಿ ನಗರದಲ್ಲಿ ಬುಧವಾರ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸುವ ಜೊತೆಗೆ ಸಂತಾಪ ಸೂಚಿಸಲಾಯಿತು.
     ನಗರದ ಹೊಸಮನೆ ಶಿವಾಜಿ ವೃತ್ತದಲ್ಲಿ ರಾಷ್ಟ್ರೀಯ ಬಜರಂಗದಳ, ಕೇಸರಿ ಪಡೆ, ಹಿಂದೂ ಕೋಟೆ ಮತ್ತು ರಾಮ್ ಸೇನೆ ವತಿಯಿಂದ ಬಜರಂಗದಳ ಕಾರ್ಯಕರ್ತ ಹರ್ಷ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸಂತಾಪ ಸೂಚಿಸಲಾಯಿತು. ನಂತರ ಮಾತನಾಡಿದ ಪ್ರಮುಖರು ಹತ್ಯೆಯನ್ನು ತೀವ್ರವಾಗಿ ಖಂಡಿಸಿದರು.
    ಹಿಂದೂಪರ ಸಂಘಟನೆಗಳಿಂದ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಇದಕ್ಕೆ ಪೊಲೀಸ್ ಇಲಾಖೆ ಅನುಮತಿ ನೀಡದ ಹಿನ್ನಲೆಯಲ್ಲಿ ಶಿವಾಜಿ ವೃತ್ತದಲ್ಲಿ ವೃತ್ತದಲ್ಲಿ ಕೇವಲ ಪ್ರತಿಭಟನೆ ನಡೆಸಲಾಯಿತು ಎಂದು ಸಂಘಟನೆಯ ಪ್ರಮುಖರು ಆರೋಪಿಸಿದ್ದಾರೆ.
    ಪ್ರಮುಖರಾದ ಬಿ.ವಿ ಚಂದನ್‌ರಾವ್, ನವೀನ್, ಮನು ಗೌಡ, ಜೀವನ್, ಗಿರೀಶ್, ಮಂಜುನಾಥ್, ಕಿರಣ್, ಹಿಂದೂ ಕೋಟೆ  ಮಂಜುನಾಥ್, ಉಮೇಶ್ ಗೌಡ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಕೇಂದ್ರ, ರಾಜ್ಯ ಸರ್ಕಾರಗಳ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಬಿ. ವೈ ರಾಘವೇಂದ್ರ

ಶ್ರಮ ಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ವತಿಯಿಂದ ಭದ್ರಾವತಿ ಗಾಂಧಿನಗರದ ಆಗಮುಡಿ(ಮೊದಲಿಯಾರ್) ಸಮುದಾಯ ಭವನದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಇ-ಶ್ರಮ್ ಕಾರ್ಡ್ ವಿತರಣೆ ಹಾಗು ಕಾರ್ಮಿಕ ಇಲಾಖೆಯಿಂದ ಕಿಟ್ ವಿತರಣಾ ಕಾರ್ಯಕ್ರಮವನ್ನು ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಿದರು.
    ಭದ್ರಾವತಿ, ಫೆ. ೨೩: ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಅಸಂಘಟಿತ ಕಾರ್ಮಿಕರಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಸಂಸದ ಬಿ.ವೈ. ರಾಘವೇಂದ್ರ ಮನವಿ ಮಾಡಿದರು.
    ಅವರು ಬುಧವಾರ ಶ್ರಮ ಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ವತಿಯಿಂದ ಗಾಂಧಿನಗರದ ಆಗಮುಡಿ(ಮೊದಲಿಯಾರ್) ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಇ-ಶ್ರಮ್ ಕಾರ್ಡ್ ವಿತರಣೆ ಹಾಗು ಕಾರ್ಮಿಕ ಇಲಾಖೆಯಿಂದ ಕಿಟ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಅಸಂಘಟಿತ ಕಾರ್ಮಿಕರು ಸಹ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳುವ ನಿಟ್ಟಿನಲ್ಲಿ ಅಗತ್ಯವಿರುವ ಯೋಜನೆಗಳನ್ನು ಕೇಂದ್ರ ಹಾಗು ರಾಜ್ಯ ಸರ್ಕಾರಗಳು ರೂಪಿಸಿವೆ. ಈ ಯೋಜನೆಗಳು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಸಂಘಟನೆಗಳ ಪಾತ್ರ ಪ್ರಮುಖವಾಗಿವೆ ಎಂದರು.
    ನಗರಸಭಾ ಸದಸ್ಯ ಬಿ.ಕೆ ಮೋಹನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸುದೀಪ್‌ಕುಮಾರ್, ಸದಸ್ಯರಾದ ವಿ. ಕದಿರೇಶ್, ಮಣಿ ಎಎನ್‌ಎಸ್, ಜಾರ್ಜ್, ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಸಿ.ಬಿ ರಂಗಯ್ಯ, ಕಾರ್ಮಿಕ ನಿರೀಕ್ಷಕಿ ಮುಮ್ತಾಜ್ ಬೇಗಂ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸದಸ್ಯ ಮಂಗೋಟೆ ರುದ್ರೇಶ್, ಬಿಜೆಪಿ ಮುಖಂಡರಾದ ಎಸ್. ಕುಮಾರ್, ಬಿ.ಕೆ ಶ್ರೀನಾಥ್, ಎಂ. ಪ್ರಭಾಕರ್, ಶಿವಕುಮಾರ್(ಬಂಕ್),  ಉದ್ಯಮಿಗಳಾದ ಎ. ಮಾಧು, ಜಿ. ಸುರೇಶ್‌ಕುಮಾರ್, ಕಣ್ಣಪ್ಪ, ಸುಂದರ್ ಬಾಬು, ಬಿ.ಎಸ್ ಗಣೇಶ್, ವಿವಿಧ ಕಾರ್ಮಿಕ ಸಂಘಟನೆಗಳ ಪ್ರಮುಖರಾದ ರಾಜೇಶ್ವರಿ, ಶಾರದಮ್ಮ, ವಸಂತ, ಎಂ. ಭೂಪಾಲ್, ಕೆ.ಎಸ್ ಸುಬ್ರಹ್ಮಣಿ, ದುಗ್ಗೇಶ್ ತೇಲ್ಕರ್, ಅರುಣ್‌ಕುಮಾರ್, ಚಂದ್ರಶೇಖರ್, ಬಾಬು, ಲಕ್ಷ್ಮಣ, ವಿಶ್ವನಾಥ್, ಸತೀಶ್‌ಗೌಡ, ಚಂದ್ರಕಲಾ, ಸುಂದರ್, ಜಯಂತಿ, ಕೃಷ್ಣಮೂರ್ತಿ, ಸಚಿನ್, ಸಮಿವುಲ್ಲಾ, ಹಫೀಜ್, ಮುರುಗನ್, ಶ್ರೀನಿವಾಸ್, ಸುರೇಶ್, ವಸಂತಿ, ಅರುಣ್, ಸಂಜಯ್‌ಕುಮಾರ್, ಮಣಿಕಂಠ, ಆರ್‍ಮುಗಂ, ತರಕಾರಿ ಮಂಜಣ್ಣ, ಮಂಜು, ಹೇಮಾವತಿ ಮತ್ತು ಪುಷ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಕವಿತಾ ಸುರೇಶ್ ಪ್ರಾರ್ಥಿಸಿದರು. ಕೆ. ಮಂಜುನಾಥ್ ಸ್ವಾಗತಿಸಿದರು. ವಿಜಯ್ ಸಿದ್ದಾರ್ಥ್ ಮತ್ತು ಅಭಿಲಾಷ್ ನಿರೂಪಿಸಿದರು. ಉದ್ಯಮಿ ಎ. ಮಾಧು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

Tuesday, February 22, 2022

ಕುವೆಂಪು ವಿ.ವಿ ಭ್ರಷ್ಟಾಚಾರ ಕುರಿತು ಸಿಂಡಿಕೇಟ್ ಸದಸ್ಯರಿಂದ ರಾಜ್ಯಪಾಲರಿಗೆ ದೂರು

ಕುವೆಂಪು ವಿಶ್ವ ವಿದ್ಯಾನಿಲಯದ ಆಡಳಿತ ಮತ್ತು ಹಣಕಾಸು ಕಾರ್ಯಗಳ ನಿರ್ವಹಣೆ ಹಾಗು ಇನ್ನಿತರ ಭ್ರಷ್ಟಾಚಾರಗಳ ಕುರಿತು ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಂಗಳವಾರ ಸಚಿವ ಕೆ.ಎಸ್ ಈಶ್ವರಪ್ಪ ನೇತೃತ್ವದಲ್ಲಿ ಸಿಂಡಿಕೇಟ್ ಸದಸ್ಯರು ವಿಶ್ವ ವಿದ್ಯಾನಿಲಯದ ಕುಲಾಧಿಪತಿಗಳಾದ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
    ಭದ್ರಾವತಿ, ಫೆ. ೨೨: ಕುವೆಂಪು ವಿಶ್ವ ವಿದ್ಯಾನಿಲಯದ ಆಡಳಿತ ಮತ್ತು ಹಣಕಾಸು ಕಾರ್ಯಗಳ ನಿರ್ವಹಣೆ ಹಾಗು ಇನ್ನಿತರ ಭ್ರಷ್ಟಾಚಾರಗಳ ಕುರಿತು ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಂಗಳವಾರ ಸಚಿವ ಕೆ.ಎಸ್ ಈಶ್ವರಪ್ಪ ನೇತೃತ್ವದಲ್ಲಿ ಸಿಂಡಿಕೇಟ್ ಸದಸ್ಯರು ವಿಶ್ವ ವಿದ್ಯಾನಿಲಯದ ಕುಲಾಧಿಪತಿಗಳಾದ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
    ವಿಶ್ವ ವಿದ್ಯಾನಿಲಯದಲ್ಲಿ ಕಳೆದ ೨ ವರ್ಷಗಳ ಆಡಳಿತ ಮತ್ತು ಹಣಕಾಸು ಕಾರ್ಯಗಳ ನಿರ್ವಹಣೆಯಲ್ಲಿ ಸಾಕಷ್ಟು ಭ್ರಷ್ಟಾಚಾರಗಳು ನಡೆದಿರುವ ಬಗ್ಗೆ ಆರೋಪಗಳು ಕೇಳಿ ಬರುತ್ತಿವೆ. ಈ ಹಿನ್ನಲೆಯಲ್ಲಿ ದೂರ ಶಿಕ್ಷಣ ಪರಿಷತ್ ಪರೀಕ್ಷೆಗಳನ್ನು ನಡೆಸದೆ ಫಲಿತಾಂಶ ಪ್ರಕಟಿಸಿರುವ ಅಕ್ರಮದ ಬಗ್ಗೆ, ಅಧ್ಯಯನ ಕೇಂದ್ರಗಳಿಂದ ಕೋಟ್ಯಾಂತರ ರು. ಬಾಕಿ ಉಳಿಸಿಕೊಂಡು ವಿಶ್ವ ವಿದ್ಯಾನಿಲಯಕ್ಕೆ ನಷ್ಟ ಉಂಟು ಮಾಡಿರುವ ಅವ್ಯವಹಾರ ಕುರಿತು ಹಾಗು ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಮೇ. ೧೫, ೨೦೧೯ರಂದು(ಜೇಷ್ಠತೆ ಮತ್ತು ಬಡ್ತಿ ಸಂಬಂಧಿತ) ಮತ್ತು ಜ. ೨೧, ೨೦೨೧ರಂದು ಸಮಾಜ ಕಲ್ಯಾಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯ ನಡಾವಳಿಗಳನ್ನು ಹಾಗು ಸಿಂಡಿಕೇಟ್ ನಿರ್ಣಯಗಳನ್ನು ಜಾರಿಯಾಗದಂತೆ ತಡೆದು ಅವುಗಳ ಉಲ್ಲಂಘನೆ ಮಾಡಿರುವ ಬಗ್ಗೆ ಮತ್ತು ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಕುಲಪತಿಗಳ ಅವಧಿಯಲ್ಲಿನ ಆಡಳಿತ ಮತ್ತು ಹಣಕಾಸಿನ ಎಲ್ಲಾ ಕಾರ್ಯ ನಿರ್ವಹಣೆಗಳ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಲಾಗಿದೆ.
    ಜಿ. ಧರ್ಮಪ್ರಸಾದ್, ಬಳ್ಳೇಕೆರೆ ಸಂತೋಷ್, ಎಚ್.ಬಿ ರಮೇಶ್ ಬಾಬು, ಎಚ್. ರಾಮಲಿಂಗಪ್ಪ ಸೇರಿದಂತೆ ಇನ್ನಿತರ ಸಿಂಡಿಕೇಟ್ ಸದಸ್ಯರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿ, ಸಾಧಿಸುವ ಛಲ, ಮುಂದೆ ಬರಬೇಕೆಂಬ ಮನೋಭಾವ ಮುಖ್ಯ : ಸುರಜಿತ್ ಮಿಶ್ರಾ

ಭಾರತೀಯ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಸಿಎಸ್‌ಆರ್ ಅಡಿಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕೆಗೆ ಅಗತ್ಯವಿರುವ ಕಲಿಕಾ ಸಾಮಾಗ್ರಿಗಳನ್ನು  ವಿತರಿಸಲಾಯಿತು.
    ಭದ್ರಾವತಿ, ಫೆ. ೨೨: ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿ, ಜೀವನದಲ್ಲಿ ಮುಂದೆ ಬರಬೇಕೆಂಬ ಮನೋಭಾವ ಮತ್ತು ಸಾಧಿಸುವ ಛಲ ಮುಖ್ಯವಾಗಿದೆ ಎಂದು ಭಾರತೀಯ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರಾ ಹೇಳಿದರು.
    ಅವರು ಕಾರ್ಖಾನೆ ವತಿಯಿಂದ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆ (ಸಿಎಸ್‌ಆರ್) ಅಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕೆಗೆ ಅಗತ್ಯವಿರುವ ಸಾಮಾಗ್ರಿಗಳನ್ನು ಉಚಿತವಾಗಿ ವಿತರಿಸಿ ಮಾತನಾಡಿದರು.
    ಸರ್ಕಾರಿ ಶಾಲೆಗಳಲ್ಲಿ ಓದಿರುವ ಬಹಳಷ್ಟು ವಿದ್ಯಾರ್ಥಿಗಳು ಜೀವನದಲ್ಲಿ ಮುಂದೆ ಬಂದಿದ್ದು, ಪ್ರಪಂಚದಾದ್ಯಂತ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಶಾಲೆಗಳಿಗೆ ಮೂಲ ಸೌಕರ್ಯಗಳಿಗಿಂತ ಕಲಿಕೆಯ ಆಸಕ್ತಿ, ಜೀವನದಲ್ಲಿ ಮುಂದೆ ಬರಬೇಕೆಂಬ ಮನೋಭಾವ ಮತ್ತು ಸಾಧಿಸುವ ಛಲ ಮುಖ್ಯವಾಗಿದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಈ ನಡುವೆ ಸೈಲ್-ವಿಐಎಸ್‌ಎಲ್ ಸಾಮಾಜಿಕವಾಗಿ ಪ್ರಜ್ಞೆಯುಳ್ಳ ಕಾರ್ಪೊರೇಟ್ ಸಂಸ್ಥೆಯಾಗಿ ಸಾಮಾಜಿಕ ಅಭಿವೃದ್ದಿಗೆ ತನ್ನ ಸಾಮಾಜಿಕ ಬದ್ಧತೆಯನ್ನು ಪೂರೈಸಲು ಶ್ರಮಿಸುತ್ತಿದೆ ಎಂದರು.
    ಹುತ್ತಾಕಾಲೋನಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಜಿ.ಸಿ ಗೀತಾಂಜಲಿ ಮಾತನಾಡಿ, ಶಿಕ್ಷಣದಲ್ಲಿ ಬಡತನವಿಲ್ಲ. ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಕಲಿತು ಮುಂದೆ ಬರಬೇಕೆಂಬ ತುಡಿತದಿಂದ ಶ್ರೀಮಂತರಾಗಬೇಕು. ಕಾರ್ಖಾನೆ ವತಿಯಿಂದ ನೀಡಲಾಗಿರುವ ಕಲಿಕಾ ಸಾಮಾಗ್ರಿಗಳನ್ನು ತಮ್ಮ ಜ್ಞಾನ ಮತ್ತು ಶೈಕ್ಷಣಿಕ ಅಡಿಪಾಯ ಹೆಚ್ಚಿಸಿಕೊಳ್ಳಲು ಸದುಪಯೋಗಪಡಿಸಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿ ಸಹ ತಾವು ಆಯ್ಕೆ ಮಾಡಿಕೊಂಡಿರುವ ಯಾವುದೇ ಕ್ಷೇತ್ರದಲ್ಲಿ ಉನ್ನತ ಸ್ಥಾನ ಪಡೆದು ಸರ್.ಎಂ. ವಿಶ್ವೇಶ್ವರಯ್ಯ, ಡಾ. ಬಿ.ಆರ್. ಅಂಬೇಡ್ಕರ್, ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಸೇರಿದಂತೆ ಮಹಾನ್ ನಾಯಕರ ಆದರ್ಶ ಗುಣಗಳನ್ನು ಅಳವಡಿಸಿಕೊಂಡು ಭ್ರಷ್ಟಾಚಾರ ಮುಕ್ತರಾಗಿ ದೇಶದ ಜವಾಬ್ದಾರಿಯುತ ನಾಗರೀಕರಾಗಿ ಬೆಳೆಯಬೇಕೆಂದು ಆಶಿಸಿದರು.
    ಕಾರ್ಖಾನೆಯ ಸಹಾಯಕ ಪ್ರಬಂಧಕಿ (ಸಿಬ್ಬಂದಿ) ಕೆ.ಎಸ್. ಶೋಭಾ ಮಾತನಾಡಿ, ಸಿಎಸ್‌ಆರ್ ಅಡಿಯಲ್ಲಿ ಕೈಗೊಂಡಿರುವ ವಿವಿಧ ಚಟುವಟಿಕೆಗಳು ಮತ್ತು ಪ್ರಸಕ್ತ ಸಾಲಿನಲ್ಲಿ ಶಿಕ್ಷಣ ಮತ್ತು ಸಾರ್ವಜನಿಕ ಆರೋಗ್ಯ ಕ್ಷೇತ್ರಗಳಿಗೆ ಒತ್ತು ನೀಡಲಾಗಿರುವ ಚಟುವಟಿಕೆಗಳ ಕುರಿತು ಸಂಕ್ಷಿಪ್ತವಾಗಿ ತಿಳಿಸಿದರು.
    ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಕಾರ್ಖಾನೆವತಿಯಿಂದ ಸಿಎಸ್‌ಆರ್ ಅಡಿಯಲ್ಲಿ ನಗರದ ಎರಡು ಸರ್ಕಾರಿ ಶಾಲೆಗಳಿಗೆ ಗ್ಲೋಬ್ಸ್, ರೋಲಿಂಗ್ ಬ್ಲ್ಯಾಕ್ ಬೋರ್ಡ್‌ಗಳು ಮತ್ತು ೧೦೯ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್‌ಗಳು, ಬರವಣೆಗೆ ನೋಟ್ ಪುಸ್ತಕಗಳು ಸೇರಿದಂತೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು.  
    ಕಾರ್ಖಾನೆ ವತಿಯಿಂದ ಸಿಎಸ್‌ಆರ್ ಅಡಿಯಲ್ಲಿ ವಿವಿಧ ಸಾಮಾಜಿಕ ಅಭಿವೃದ್ಧಿ ಚಟುವಟಿಕೆಗಳನ್ನು ನಗರ ಹಾಗು ಗ್ರಾಮಾಂತರ ಭಾಗಗಳಲ್ಲಿ ಕೈಗೊಳ್ಳಲಾಗುತ್ತಿದೆ. ಅದರಲ್ಲೂ ಗ್ರಾಮಾಂತರ ಭಾಗದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ. ಗ್ರಾಮಗಳ ಅಭಿವೃದ್ಧಿ ಜೊತೆಗೆ ಶೈಕ್ಷಣಿಕ ಮೂಲಸೌಕರ್ಯಗಳನ್ನು ಸುಧಾರಿಸುವುದಕ್ಕೆ ಅಗತ್ಯವಿರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಬೆಂಬಲವನ್ನು ಒದಗಿಸುವುದಕ್ಕೆ ಒತ್ತು ನೀಡಲಾಗುತ್ತಿದೆ. ಅಲ್ಲದೆ  ಕ್ರೀಡಾ ಚಟುವಟಿಕೆಗಳು ಮತ್ತು ನಗರಾಡಳಿತ ವ್ಯಾಪ್ತಿಯಲ್ಲಿ ಮನರಂಜನಾ ಸೌಲಭ್ಯಗಳನ್ನು ಉತ್ತೇಜಿಸಲು ಕ್ರೀಡಾಂಗಣ, ಜಿಮ್ನಾಷಿಯಂ ಮತ್ತು ಉದ್ಯಾನವನಗಳಂತಹ ವಿವಿಧ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಹೆಚ್ಚಿನ ಗಮನ ನೀಡಲಾಗಿದೆ.  
     ಪ್ರಭಾರ ಮಹಾಪ್ರಬಂಧಕ(ಸಿಬ್ಬಂದಿ ಮತ್ತು ಆಡಳಿತ) ಪಿ.ಪಿ. ಚಕ್ರಬರ್ತಿ,  ಮಹಾಪ್ರಬಂಧಕ(ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್,  ಉಪ ಮಹಾಪ್ರಬಂಧಕಿ(ಸಿಬ್ಬಂದಿ) ವಿ. ಧನಲಕ್ಷ್ಮಿ, ಸಹಾಯಕ ಮಹಾಪ್ರಬಂಧಕ(ನಗರಾಡಳಿತ) ಉಮೇಶ್ ಮಧುಕರ್ ಉಕೆ ಮತ್ತು ಸಹಾಯಕ ಪ್ರಬಂಧಕ(ಹಣಕಾಸು) ಅಮುಲ್ ಸುರೇಖ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ದಿವ್ಯಶ್ರೀ, ದುರ್ಗಾಶ್ರೀ ಮತ್ತು ಆಶಾ ಸುಶ್ರಾವ್ಯ ಪ್ರಾರ್ಥಿಸಿದರು. ಸಹಾಯಕ ಶಿಕ್ಷಕಿಯರಾದ ಹೇಮಾಮಾಲಿನಿ ಸ್ವಾಗತಿಸಿ, ಎಸ್.ವೀಣಾ ವಂದಿಸಿ, ಎಂ. ಸುಮಾ ನಿರೂಪಿಸಿದರು.