Saturday, March 12, 2022

ಶ್ರೀ ಕ್ಷೇತ್ರ ಭದ್ರಗಿರಿಯಲ್ಲಿ ಪಂಗುಣಿ-ಉತ್ತಿರ ತೀರ್ಥ ಕಾವಡಿ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಭದ್ರಾವತಿ ಸಮೀಪದ ಎಂ.ಸಿ ಹಳ್ಳಿ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಪಂಗುಣಿ-ಉತ್ತಿರ ತೀರ್ಥ ಕಾವಡಿ ಜಾತ್ರಾ ಮಹೋತ್ಸವ ಮಾ.೧೮ರ ವರೆಗೆ ಹಮ್ಮಿಕೊಳ್ಳಲಾಗಿದ್ದು, ಶನಿವಾರ ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಯಿತು.
    ಭದ್ರಾವತಿ, ಮಾ. ೧೨: ಇಲ್ಲಿಗೆ  ಸಮೀಪದ ಎಂ.ಸಿ ಹಳ್ಳಿ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಪಂಗುಣಿ-ಉತ್ತಿರ ತೀರ್ಥ ಕಾವಡಿ ಜಾತ್ರಾ ಮಹೋತ್ಸವ ಮಾ.೧೮ರ ವರೆಗೆ ಹಮ್ಮಿಕೊಳ್ಳಲಾಗಿದ್ದು, ಶನಿವಾರ ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಯಿತು.
    ಶ್ರೀ ಕ್ಷೇತ್ರದ ಶ್ರೀ ಮುರುಗೇಶ್ ಸ್ವಾಮೀಜಿ ನೇತೃತ್ವದಲ್ಲಿ ಹೋಮ-ಹವನ ಸೇರಿದಂತೆ ಧಾರ್ಮಿಕ ಆಚರಣೆಗಳು ಜರುಗಿದವು. ದ್ವಜಾರೋಹಣದ ನಂತರ ಸಿಹಿ ಹಂಚಲಾಯಿತು.
    ಪ್ರಮುಖರಾದ ಎ. ಚಂದ್ರಘೋಷನ್, ಸಂಜಯ್‌ಕುಮಾರ್, ಜೆ. ಮಂಜುನಾಥ್, ಸತ್ಯನಾರಾಯಣ, ಆರ್. ಕರುಣಾಮೂರ್ತಿ, ಕೆ. ಮಂಜುನಾಥ್, ಕುಮಾರ್(ಬಂಕ್), ಅನ್ಬು, ಎ. ವೀರಾಭದ್ರನ್, ಸುಂದರ್‌ಬಾಬು, ಎಂ. ವೇಲು, ಡಾ. ವಿಕ್ರಮ್ ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು.

ದಾಖಲಾತಿಗಳು ಸಮರ್ಪಕವಾಗಿದ್ದಲ್ಲಿ ಮನೆ ಬಾಗಿಲಿಗೆ ದಾಖಲೆ ಪತ್ರಗಳು : ಟಿ.ವಿ ಪ್ರಕಾಶ್

ಭದ್ರಾವತಿ ತಾಲೂಕಿನ ಹಡ್ಲಘಟ್ಟ ಗ್ರಾಮದ ದುರ್ಗಾಂಬ ಸಮುದಾಯ ಭವನದ ಆವರಣದಲ್ಲಿ ಕಂದಾಯ ಇಲಾಖೆ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ 'ನಿಮ್ಮ ದಾಖಲೆ ನಿಮ್ಮ ಹಕ್ಕು ಮನೆ ಬಾಗಿಲಿಗೆ ತಲುಪಿಸುವುದು ನಮ್ಮ ಕರ್ತವ್ಯ' ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸ್ಥಳದಲ್ಲಿಯೇ ವಿವಿಧ ದಾಖಲೆ ಪತ್ರಗಳನ್ನು ವಿತರಿಸಲಾಯಿತು.
    ಭದ್ರಾವತಿ, ಮಾ. ೧೨: ವಿವಿಧ ದಾಖಲೆ ಪತ್ರಗಳಿಗಾಗಿ ಕಂದಾಯ ಇಲಾಖೆಗೆ ಸಲ್ಲಿಸುವ ದಾಖಲಾತಿಗಳು ಸಮರ್ಪಕವಾಗಿದ್ದಲ್ಲಿ ಯಾರು ಸಹ ಯಾವ ಕಛೇರಿಗೂ ಅಲೆದಾಡುವ ಅಗತ್ಯವಿಲ್ಲ. ಇದೀಗ ಮನೆ ಬಾಗಿಲಿಗೆ ದಾಖಲೆ ಪತ್ರಗಳನ್ನು ತಲುಪಿಸಲು ಕಂದಾಯ ಇಲಾಖೆ ಮುಂದಾಗಿದೆ ಎಂದು ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ಹೇಳಿದರು.
    ಅವರು ಶನಿವಾರ ತಾಲೂಕಿನ ಹಡ್ಲಘಟ್ಟ ಗ್ರಾಮದ ದುರ್ಗಾಂಬ ಸಮುದಾಯ ಭವನದ ಆವರಣದಲ್ಲಿ ಕಂದಾಯ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 'ನಿಮ್ಮ ದಾಖಲೆ ನಿಮ್ಮ ಹಕ್ಕು ಮನೆ ಬಾಗಿಲಿಗೆ ತಲುಪಿಸುವುದು ನಮ್ಮ ಕರ್ತವ್ಯ' ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
    ಸರ್ಕಾರ ಜಾರಿಗೆ ತಂದಿರುವ ಈ ಕಾರ್ಯಕ್ರಮವನ್ನು ಗ್ರಾಮದಲ್ಲಿ ಯಶಸ್ವಿಗೊಳಿಸಲು ಕಂದಾಯ ಇಲಾಖೆ ಹೆಚ್ಚಿನ ಗಮನ ಹರಿಸಿದೆ. ನಗರ ಪ್ರದೇಶಗಳ ಸ್ಥಳೀಯ ಸಂಸ್ಥೆಗಳಂತೆ ಗ್ರಾಮ ಮಟ್ಟದಲ್ಲೂ ತ್ವರಿತವಾಗಿ ಕಾರ್ಯಾಚರಣೆ ನಡೆಸಲು ಆಧುನಿಕ ಸೌಲಭ್ಯಗಳನ್ನು ಹೆಚ್ಚಾಗಿ ಸದ್ಭಳಕೆ ಮಾಡಿಕೊಳ್ಳಲಾಗುವುದು. ಕಂದಾಯ ಇಲಾಖೆಯಲ್ಲಿ ಕೆಲವು ನ್ಯೂನ್ಯತೆಗಳಿದ್ದು, ಅವುಗಳನ್ನು ಸರಿಪಡಿಸಿಕೊಂಡು ಪ್ರಾಮಾಣಿಕವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.
    ತಹಸೀಲ್ದಾರ್ ಆರ್. ಪ್ರದೀಪ್ ಮಾತನಾಡಿ, ಕಂದಾಯ ಇಲಾಖೆ ಮಧ್ಯವರ್ತಿಗಳ ಹಾವಳಿ ಇಲ್ಲದೆ ಎಲ್ಲಾ ಸೌಲಭ್ಯಗಳನ್ನು ನೇರವಾಗಿ ಜನರಿಗೆ ತಲುಪಿಸಲು ಪಾರದರ್ಶಕ ಮತ್ತು ಪ್ರಾಮಾಣಿಕ ಆಡಳಿತಕ್ಕೆ ಹೆಚ್ಚಿನ ಒತ್ತು ನೀಡಿದೆ. ಅಲ್ಲದೆ ಸಾಮಾಜಿಕ ಬದ್ಧತೆಯೊಂದಿಗೆ ಅಸಹಾಯಕರು, ಬಡವರು ಮತ್ತು ಸೌಲಭ್ಯಗಳಿಂದ ವಂಚಿತರಾಗಿರುವ ಅರ್ಹರನ್ನು ಗುರುತಿಸಿ ಅವರಿಗೆ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಿ ಕೊಡಲಾಗುತ್ತಿದೆ. ಒಟ್ಟಾರೆ ತಾಲೂಕಿನಲ್ಲಿ ಕಂದಾಯ ಇಲಾಖೆ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇಲಾಖೆಗೆ ಎಲ್ಲರ ಸಹಕಾರ ಅಗತ್ಯವಿದೆ ಎಂದರು.
    ಮಾವಿನಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀಧರ ಶೆಟ್ಟರು, ಉಪಾಧ್ಯಕ್ಷೆ ನೇತ್ರಾವತಿ, ಸದಸ್ಯರಾದ ನಿರ್ಮಲ, ಆನಂದಕುಮಾರಿ, ಸುರೇಶ್, ಲೋಕೇಶ್, ಅನಂತ, ಮಾಜಿ ಅಧ್ಯಕ್ಷ ರಂಗಸ್ವಾಮಿ, ಮಾಜಿ ಸದಸ್ಯ ಉಮೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ರಾಣಿ ಷಣ್ಮುಖಂ, ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ಉಪತಹಸೀಲ್ದಾರ್‌ಗಳಾದ ನಾರಾಯಣಗೌಡ, ಅರಸು, ಮಂಜನಾಯ್ಕ, ಕಂದಾಯಾಧಿಕಾರಿ ಪ್ರಶಾಂತ್, ಶಿರಸ್ತೇದಾರ್ ರಾಧಕೃಷ್ಣ ಭಟ್, ಜಗನ್ನಾಥ್ ಸೇರಿದಂತೆ  ಕಂದಾಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಗ್ರಾಮಸ್ಥರಿಗೆ ಸ್ಥಳದಲ್ಲಿಯೇ ವಿವಿಧ ದಾಖಲೆ ಪತ್ರಗಳನ್ನು ನೀಡಲಾಯಿತು.

ವಿಐಎಸ್‌ಎಲ್ ಆಸ್ಪತ್ರೆಯಿಂದ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆಯಡಿ ದೊಡ್ಡೇರಿ, ಬದನೆಹಾಳ್ ಗ್ರಾಮಗಳಲ್ಲಿ ಆರೋಗ್ಯ ಶಿಬಿರ

ಭದ್ರಾವತಿ ಭಾರತೀಯ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಾರ್ಖಾನೆಯ ವಿಐಎಸ್‌ಎಲ್ ಆಸ್ಪತ್ರೆವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆಯಡಿ ತಾಲೂಕಿನ ದೊಡ್ಡೇರಿ ಮತ್ತು ಬದನೆಹಾಳ್ ಗ್ರಾಮಗಳಲ್ಲಿ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು.
    ಭದ್ರಾವತಿ, ಮಾ. ೧೨: ಭಾರತೀಯ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಾರ್ಖಾನೆಯ ವಿಐಎಸ್‌ಎಲ್ ಆಸ್ಪತ್ರೆವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆಯಡಿ ತಾಲೂಕಿನ ದೊಡ್ಡೇರಿ ಮತ್ತು ಬದನೆಹಾಳ್ ಗ್ರಾಮಗಳಲ್ಲಿ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು.
    ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರ, ಮುಖ್ಯ ಮಹಾ ವ್ಯವಸ್ಥಾಪಕ(ಯೋಜನೆಗಳು) ಎ.ಬಿ. ಪವಾಡೆ, ಮುಖ್ಯ ಮಹಾ ವ್ಯವಸ್ಥಾಪಕ (ಕಾರ್ಯಾಚರಣೆ) ಕೆ.ಎಸ್. ಸುರೇಶ್, ಮುಖ್ಯ ವ್ಯವಸ್ಥಾಪಕ (ಸಿಬ್ಬಂದಿ ಮತ್ತು ಆಡಳಿತ) ಪಿ.ಪಿ. ಚಕ್ರಬರ್ತಿ, ಹೆಚ್ಚುವರಿ ಮುಖ್ಯ ವೈದ್ಯಾಧಿಕಾರಿ ಡಾ. ಎಮ್.ವೈ. ಸುರೇಶ್, ಸಹಾಯಕ ವ್ಯವಸ್ಥಾಪಕಿ (ಸಿಬ್ಬಂದಿ ಮತ್ತು ಸಿ.ಎಸ್.ಆರ್) ಕೆ.ಎಸ್. ಶೋಭ, ದೊಡ್ಡೇರಿ ಗ್ರಾಮಪಂಚಾಯತ್ ಅಧ್ಯಕ್ಷ ಆಗಾ ಶರೀಫ್, ಉಪಾಧ್ಯಕ್ಷೆ ಹೇಮಾವತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಶಿಬಿರದಲ್ಲಿ  ವಿಐಎಸ್‌ಎಲ್ ಆಸ್ಪತ್ರೆಯ ಡಾ. ಸುಜೀತ್ ಕುಮಾರ್(ತಜ್ಞವೈಧ್ಯರು), ಡಾ. ಟಿ.ಎನ್. ಸುಷ್ಮಾ (ಸ್ತ್ರೀ ರೋಗ ತಜ್ಞೆ), ಡಾ. ಸುರೇಶ್. ಎಸ್.ಎನ್. (ದಂತ ವೈದ್ಯ) ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳನ್ನೊಳಗೊಂಡ ತಂಡ ತಪಾಸಣೆ ನಡೆಸುವ ಜೊತೆಗೆ ಆರೋಗ್ಯ ಜಾಗೃತಿ ಮೂಡಿಸಿತು.   
    ಪಂಚಾಯತ್ ಆಭಿವೃದ್ಧಿ ಅಧಿಕಾರಿ ಶಿವಶಂಕರ್ ಸ್ವಾಗತಿಸಿದರು. ದೊಡ್ಡೇರಿ ಗ್ರಾಮದಲ್ಲಿ  ೧೦೬ ಮತ್ತು ಬದನೆಹಾಳ್ ಗ್ರಾಮದಲ್ಲಿ ೧೦೦ ಮಂದಿ ಗ್ರಾಮಸ್ಥರು ಶಿಬಿರದ ಪ್ರಯೋಜನ ಪಡೆದುಕೊಂಡರು.

Friday, March 11, 2022

ತಂಬಾಕು ಉತ್ಪನ್ನಗಳ ಮಾರಾಟ : ಅರಳಿಹಳ್ಳಿ ಗ್ರಾಮದಲ್ಲಿ ದಾಳಿ


ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ಶಿವಮೊಗ್ಗ ಜಿಲ್ಲಾ ತಂಬಾಕು ಕೋಶ ವತಿಯಿಂದ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮುಂಗಟ್ಟು ಮೇಲೆ ಕೋಟ್ಪಾ ಕಾಯ್ದೆಯಡಿ ದಾಳಿ ನಡೆಸಿ ದಂಡ ವಿಧಿಸಿರುವ ಘಟನೆ ಶುಕ್ರವಾರ ನಡೆಯಿತು.
    ಭದ್ರಾವತಿ, ಮಾ. ೧೧: ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ಶಿವಮೊಗ್ಗ ಜಿಲ್ಲಾ ತಂಬಾಕು ಕೋಶ ವತಿಯಿಂದ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮುಂಗಟ್ಟು ಮೇಲೆ ಕೋಟ್ಪಾ ಕಾಯ್ದೆಯಡಿ ದಾಳಿ ನಡೆಸಿ ದಂಡ ವಿಧಿಸಿರುವ ಘಟನೆ ಶುಕ್ರವಾರ ನಡೆದಿದೆ.
    ಒಟ್ಟು ೧೫೦೦ ರು. ದಂಡ ವಿಧಿಸಲಾಗಿದ್ದು, ಕಾರ್ಯಾಚರಣೆಯಲ್ಲಿ  ಶಿವಮೊಗ್ಗ ಜಿಲ್ಲಾ ತಂಬಾಕು ಕೋಶದ ಹೇಮಂತ್ ರಾಜ್, ರವಿರಾಜ್, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಆನಂದಮೂರ್ತಿ, ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಹರೀಶ್, ಆಕಾಶ್, ಅಲ್ಲಾವುದ್ದೀನ್ ತಾಜ್ ಹಾಗು ಪೊಲೀಸ್ ಸಿಬ್ಬಂದಿಗಳು ಪಾಲ್ಗೊಂಡಿದ್ದರು.


ಅರಳಿಕೊಪ್ಪ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಲತಾ ಗಣೇಶ್ ಅವಿರೋಧ ಆಯ್ಕೆ


ಭದ್ರಾವತಿ ತಾಲೂಕಿನ ಅರಳಿಕೊಪ್ಪ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿ ಲತಾ ಗಣೇಶ್ ಅವಿರೋಧವಾಗಿ ಆಯ್ಕೆಯಾದರು. ಬಿಜೆಪಿ ಪಕ್ಷದ ಪ್ರಮುಖರು, ಕಾರ್ಯಕರ್ತರು ನೂತನ ಉಪಾಧ್ಯಕ್ಷೆಯನ್ನು ಅಭಿನಂಸಿದರು.
    ಭದ್ರಾವತಿ, ಮಾ. ೧೧: ತಾಲೂಕಿನ ಅರಳಿಕೊಪ್ಪ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿ ಲತಾ ಗಣೇಶ್ ಅವಿರೋಧವಾಗಿ ಆಯ್ಕೆಯಾದರು.
    ಸಾಮಾನ್ಯ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನ ಅನಿವಾರ್ಯ ಕಾರಣಗಳಿಂದ ತೆರವಾಗಿದ್ದು, ಈ ಹಿನ್ನಲೆಯಲ್ಲಿ ನಡೆದ ಚುನಾವಣೆಯಲ್ಲಿ ಲತಾ ಗಣೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
    ಬಿಜೆಪಿ ಪಕ್ಷದ ಮುಖಂಡರಾದ ಎಸ್. ಕುಮಾರ್, ಮಂಗೋಟೆ ರುದ್ರೇಶ್, ಗಣೇಶ್‌ರಾವ್, ನಕುಲ್ ಜೆ. ರೇವಣಕರ್, ಗೋಕುಲ್ ಕೃಷ್ಣ, ಚಿಕ್ಕಗೊಪ್ಪೇನಹಳ್ಳಿ ಪ್ರದೀಪ್, ಮಹಾಶಕ್ತಿ ಕೇಂದ್ರದ ಪ್ರಮುಖರು ಹಾಗು ಕಾರ್ಯಕರ್ತರು ನೂತನ ಉಪಾಧ್ಯಕ್ಷೆಯನ್ನು ಅಭಿನಂದಿಸಿದ್ದಾರೆ
    ೨೦೨೦ ಡಿಸೆಂಬರ್ ತಿಂಗಳಿನಲ್ಲಿ ತಾಲೂಕಿನ ಒಟ್ಟು ೩೫ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲಾಗಿತ್ತು. ೨೦೨೧ ಜನವರಿ ತಿಂಗಳಿನಲ್ಲಿ ಜಿಲ್ಲಾಧಿಕಾರಿಗಳು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಹೊರಡಿಸಿ ಆದೇಶ ಹೊರಡಿಸಿದ್ದರು. ಈ ಹಿನ್ನಲೆಯಲ್ಲಿ ಫೆಬ್ರವತಿ ತಿಂಗಳಿನಲ್ಲಿ ಬಹುತೇಕ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲಾಗಿತ್ತು. ಪ್ರಮುಖ ರಾಜಕೀಯ ಪಕ್ಷಗಳು ತೆರೆಮರೆಯಲ್ಲಿ ಒಪ್ಪಂದದಂತೆ ಅಧಿಕಾರ ಹಂಚಿಕೆ ಮಾಡಿಕೊಂಡಿವೆ.

೨೨ ಗ್ರಾಮಗಳ ಅದಿದೇವತೆ ಶ್ರೀ ಹಳದಮ್ಮ ದೇವಿ ಜಾತ್ರಾ ಮಹೋತ್ಸವಕ್ಕೆ ಅನುದಾನ ನೀಡಿ

ಬಜೆಟ್ ಮಂಡನೆ ಸಭೆಯಲ್ಲಿ ಸದಸ್ಯ ಆರ್. ಶ್ರೇಯಸ್ ಆಗ್ರಹ


ಆರ್. ಶ್ರೇಯಸ್
    ಭದ್ರಾವತಿ, ಮಾ. ೧೧: ಹಳೇನಗರದ ಪುರಾಣ ಪ್ರಸಿದ್ದ ೨೨ ಗ್ರಾಮಗಳ ಅದಿದೇವತೆ ಶ್ರೀ ಹಳದಮ್ಮ ದೇವಿ ಜಾತ್ರಾ ಮಹೋತ್ಸವಕ್ಕೆ ನಗರಸಭೆ ವತಿಯಿಂದ ಅನುದಾನ ಬಿಡುಗಡೆಗೊಳಿಸುವಂತೆ ನಗರಸಭಾ ಸದಸ್ಯ ಆರ್. ಶ್ರೇಯಸ್(ಚಿಟ್ಟೆ) ಶುಕ್ರವಾರ ನಡೆದ ಬಜೆಟ್ ಮಂಡನೆ ಸಭೆಯಲ್ಲಿ ಒತ್ತಾಯಿಸಿದರು.
    ಶಿವಮೊಗ್ಗ ನಗರದಲ್ಲಿ ಪ್ರತಿ ೨ ವರ್ಷಗಳಿಗೆ ಒಮ್ಮೆ ನಡೆಯುವ ಶ್ರೀ ಮಾರಿಕಾಂಬ ಜಾತ್ರೆಗೆ ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಇದೆ ರೀತಿ ಶ್ರೀ ಹಳದಮ್ಮ ದೇವಿ ಜಾತ್ರ ಮಹೋತ್ಸವಕ್ಕೂ ಅನುದಾನ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದರು. ಹಿರಿಯ ಸದಸ್ಯ ಬಿ.ಕೆ ಮೋಹನ್ ಸೇರಿದಂತೆ ಇನ್ನಿತರ ಸದಸ್ಯರು ಸಹ ಧ್ವನಿಗೂಡಿಸಿ ಅನುದಾನ ಬಿಡುಗಡೆಗೊಳಿಸಬೇಕೆಂದರು.
    ಇದಕ್ಕೆ ಪೂರಕ ಸ್ಪಂದಿಸಿದ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್ ಮತ್ತು ಪೌರಾಯುಕ್ತ ಕೆ. ಪರಮೇಶ್ ಈ ಸಂಬಂಧ ಶೀಘ್ರದಲ್ಲಿಯೇ ಸಭೆ ನಡೆಸಿ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಭದ್ರಾವತಿ ನಗರಸಭೆ ರು.೧.೦೩ ಕೋ. ಉಳಿತಾಯ ಬಜೆಟ್

ಭದ್ರಾವತಿ ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಶುಕ್ರವಾರ ಮೊದಲ ಬಾರಿಗೆ ಸುಮಾರು ೧.೦೩ ಕೋ. ಉಳಿತಾಯ ಬಜೆಟ್ ಮಂಡಿಸುವಲ್ಲಿ ಯಶಸ್ವಿಯಾದರು.
    ಭದ್ರಾವತಿ, ಮಾ. ೧೧: ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಮೊದಲ ಬಾರಿಗೆ ಸುಮಾರು ೧.೦೩ ಕೋ. ಉಳಿತಾಯ ಬಜೆಟ್ ಮಂಡಿಸುವಲ್ಲಿ ಯಶಸ್ವಿಯಾದರು.
    ಶುಕ್ರವಾರ ನಗರಸಭೆ ಸಭಾಂಗಣದಲ್ಲಿ ನಡೆದ ಆಯ-ವ್ಯಯ ಮಂಡನೆ ಸಭೆಯಲ್ಲಿ ರು. ೨೨.೨೫ ಕೋ. ಆರಂಭಿಕ ಮೊತ್ತದೊಂದಿಗೆ ಈ ಬಾರಿ ರು. ೬೭.೪೩ ಕೋ. ಆದಾಯ ನಿರೀಕ್ಷಿಸಲಾಗಿದ್ದು,  ರು. ೮೯.೬೯ ಕೋ. ಒಟ್ಟು ಆದಾಯವಾಗಿದೆ. ಈ ಪೈಕಿ ರು. ೮೮.೬೬ ಕೋ. ವೆಚ್ಚವಾಗಿದ್ದು, ರು. ೧.೦೩ ಕೋ. ಉಳಿತಾಯವಾಗಿದೆ ಎಂದರು.
    ಈ ಬಾರಿ ಪ್ರಗತಿಯಲ್ಲಿರುವ ಯೋಜನೆಗಳೊಂದಿಗೆ ಹೊಸ ಯೋಜನೆಗಳನ್ನು ಸಹ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಈಗಾಗಲೇ ನಗರಸಭೆ ಕನಕಮಂಟಪ ಮೈದಾನ ಸಮೀಪ ನಗರಸಭೆ ನಿವೇಶನದಲ್ಲಿ ಬಿ ಮತ್ತು ಸಿ ಗ್ರೂಪ್ ಅಧಿಕಾರಿ ನೌಕರರಿಗೆ ಸುಮಾರು ರು.೧.೮೦ ಕೋ. ವೆಚ್ಚದಲ್ಲಿ ವಸತಿ ಗೃಹಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ನಗರದ ಪ್ರಮುಖ ವೃತ್ತಗಳನ್ನು ರು. ೦.೯೨ ಕೋ. ವೆಚ್ಚದಲ್ಲಿ ನವೀನ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಈ ಸಂಬಂಧ ಅನುಮೋದನೆ ಪಡೆಯಲಾಗಿದ್ದು, ಮುಂದಿನ ದಿನಗಳ ಅನುಷ್ಠಾನಗೊಳಿಸಲಾಗುವುದು. ನಗರ ವ್ಯಾಪ್ತಿಯ ಸಂಪೂರ್ಣ ಸ್ವತ್ತುಗಳ ಸಮೀಕ್ಷೆ ನಡೆಸಿ ಸಮಗ್ರವಾಗಿ ಇ-ಆಸ್ತಿ ತಂತ್ರಾಂಶಕ್ಕೆ ಒಳಪಡಿಸಿ ವಾರ್ಡ್‌ವಾರು, ಆಸ್ತಿವಾರು ಪ್ರತ್ಯೇಕ ಕಡತ ನಿರ್ವಹಣೆ ಮಾಡಲಾಗುವುದು. ಮುಂದಿನ ವರ್ಷದೊಳಗೆ ನಗರಸಭೆ ವ್ಯಾಪ್ತಿಯಲ್ಲಿನ ಸಮಗ್ರ ಆಸ್ತಿಯನ್ನು ಡಿಜಿಟಲೀಕರಣಗೊಳಿಸಿ ಇ-ಆಸ್ತಿ ತಂತ್ರಾಂಶದಡಿಯಲ್ಲಿ ನಮೂನೆ-೩ ವಿತರಿಸಲಾಗುವುದು. ಪ್ರಸ್ತುತ ಸಾಲಿನಲ್ಲಿ ಪರಿಷ್ಕೃತ ಆಸ್ತಿ ತೆರಿಗೆಯನ್ನು ನಿಗದಿಪಡಿಸಿ ಆನ್‌ಲೈನ್ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
    ನಗರಸಭೆ ವ್ಯಾಪ್ತಿಯಲ್ಲಿ ನಿವಾಸಿಗಳಿಗೆ ದಿನದ ೨೪ ಗಂಟೆ ನೀರು ಪೂರೈಸಲು ಅನುವಾಗುವಂತೆ ಎಲ್ಲಾ ವಾರ್ಡ್‌ಗಳಲ್ಲೂ ಮೀಟರ್ ಅಳವಡಿಸಲಾಗುತ್ತಿದ್ದು, ಕೆಪಿಟಿಸಿಎಲ್ ಮಾದರಿಯಲ್ಲಿ ನೀರು ಶುಲ್ಕ ಸಂಗ್ರಹಿಸಲು ತಾಂತ್ರಿಕ ವ್ಯವಸ್ಥೆ ಉನ್ನತೀಕರಿಸಲಾಗುವುದು. ನಗರಸಭೆ ವ್ಯಾಪ್ತಿಯಲ್ಲಿರುವ ಎಲ್ಲಾ ಕೆರೆಗಳನ್ನು ಅಭಿವೃದ್ಧಿಪಡಿಸಿ ಸಾರ್ವಜನಿಕ ಉಪಯೋಗಕ್ಕಾಗಿ ಮೀಸಲಿಡಲು ಸಮೀಕ್ಷಾ ಕಾರ್ಯವನ್ನು ತಾಲೂಕು ಆಡಳಿತದ ಸಹಕಾರದೊಂದಿಗೆ ಕೈಗೊಳ್ಳಲಾಗುವುದು. ಹಸಿ ತ್ಯಾಜ್ಯದಿಂದ ಗೊಬ್ಬರ ಉತ್ಪಾದಿಸಿ ತನ್ನದೇ ಬ್ರ್ಯಾಂಡ್ ಮೂಲಕ ರೈತರಿಗೆ ಸಬ್ಸಿಡಿ ದರದಲ್ಲಿ ಗೊಬ್ಬರ ಪೂರೈಕೆ ಮಾಡಲು ನಿರ್ಧರಿಸಲಾಗಿದ್ದು, ಗೊಬ್ಬರ ತಯಾರಿಸಲು ೮ ಘಟಕಗಳನ್ನು ನಿರ್ಮಿಸಲಾಗುವುದು ಎಂದರು.
    ಹಳೇನಗರ ಭಾಗದಲ್ಲಿ ಬಾಕಿ ಉಳಿದಿರುವ ಒಳಚರಂಡಿ ಕಾಮಗಾರಿ ಯೋಜನೆಯನ್ನು ರು.೨೧ ಕೋ. ಅನುದಾನದಲ್ಲಿ ಪೂರ್ಣಗೊಳಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ನಗರದಲ್ಲಿ ಉತ್ಪತ್ತಿಯಾಗುವ ಒಣಕಸ ಮರುಬಳಕೆಗೆ ಅನುವಾಗುವಂತೆ ಸಂಸ್ಕರಣ ಘಟಕ ನಿರ್ಮಿಸಲಾಗುವುದು. ಭದ್ರಾ ನದಿಗೆ ಕಲುಷಿತ ನೀರು ಸೇರ್ಪಡೆಯಾಗುವುದನ್ನು ತಡೆಯಲು ರು.೧೨ ಕೋ. ವೆಚ್ಚದಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಕರ್ನಾಟಕ ನೀರು ಸರಬರಾಜು ಮತ್ತು ಒಳಮಂಡಳಿ ವತಿಯಿಂದ ನಿರ್ಮಿಸಲಾಗುವುದು. ನಗರದ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ ೧೨ ಅಡಿ ಎತ್ತರದ ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಲಾಗುವುದು ಹಾಗು ಎಲ್ಲಾ ವಾರ್ಡ್‌ಗಳ ಪ್ರಮುಖ ರಸ್ತೆ, ಅಡ್ಡರಸ್ತೆಗಳಿಗೆ ನಾಮಫಲಕ ಅಳವಡಿಸಲಾಗುವುದು ಎಂದರು.
    ಸಭೆಯಲ್ಲಿ ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಕೆ. ಪರಮೇಶ್, ಕಂದಾಯಾಧಿಕಾರಿ ರಾಜ್‌ಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರ ರಂಗರಾಜಪುರೆ, ಲೆಕ್ಕ ಅಧೀಕ್ಷಕ ಗೋವಿಂದರಾಜು ಮತ್ತು ಸಮುದಾಯ ಸಂಘಟನಾ ಅಧಿಕಾರಿ ಸುಹಾಸಿನಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.