Tuesday, March 15, 2022

ಪಕ್ಷಾಂತರ ಪರ್ವದಿಂದ ಕಂಗೆಡದ ಜೆಡಿಎಸ್ : ನಗರ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆಗೆ ಒತ್ತು


ಭದ್ರಾವತಿ ನ್ಯೂಟೌನ್‌ನಲ್ಲಿರುವ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ನಿವಾಸದಲ್ಲಿ ಕಳೆದ ೨ ದಿನಗಳ ಹಿಂದೆ ಜೆಡಿಎಸ್ ಪಕ್ಷದ ನಗರಸಭೆ ಚುನಾಯಿತ ಪ್ರತಿನಿಧಿಗಳು, ಕಾರ್ಯಕರ್ತರ ಸಭೆ ನಡೆಸಲಾಯಿತು.
    ಭದ್ರಾವತಿ, ಮಾ. ೧೫: ಇತ್ತೀಚೆಗೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದ್ದು, ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯೊಂದಿಗೆ ೨-೩ ದಶಕಗಳಿಂದ ಗುರುತಿಸಿಕೊಂಡಿದ್ದ ಪ್ರಮುಖರು ಒಂದೆಡೆ ಪಕ್ಷ ತೊರೆದಿರುವುದು ಹಿನ್ನಡೆಗೆ ಕಾರಣವಾಗಿದೆ. ಮತ್ತೊಂದೆಡೆ ಮಾಜಿ ಕೇಂದ್ರ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವುದು ಬಿರುಸಿನ ರಾಜಕಾರಣಕ್ಕೆ ಮುನ್ನುಡಿ ಬರೆದಿದೆ.

ಇತ್ತೀಚೆಗೆ ಜೆಡಿಎಸ್ ಪಕ್ಷ ತೊರೆದಿರುವ ಕೆಲವರು ಅಪ್ಪಾಜಿ ವರ್ಚಸ್ಸಿನಲ್ಲಿ ರಾಜಕೀಯ ಮಾಡುತ್ತಿದ್ದರು. ಅವರು ವೈಯಕ್ತಿಕವಾಗಿ ಯಾವುದೇ ವರ್ಚಸ್ಸನ್ನು ಸಂಪಾದಿಸಿಕೊಂಡಿಲ್ಲ. ಈ ಹಿನ್ನಲೆಯಲ್ಲಿ ಪಕ್ಷಕ್ಕೆ ಯಾವುದೇ ನಷ್ಟವಾಗುವುದಿಲ್ಲ. ಶಾರದ ಅಪ್ಪಾಜಿಯವರು ಕ್ರಿಯಾಶೀಲವಾಗಿ ಮುನ್ನಡೆಯುತ್ತಿದ್ದಾರೆ. ಈಗಾಗಲೇ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಕ್ಷೇತ್ರದಲ್ಲಿ ಹಲವು ಮಂದಿ ಮುಂದಿದ್ದಾರೆ. ಆದರೆ ಅವರನ್ನು ಈಗಲೇ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಿಲ್ಲ.  ಚುನಾವಣೆ ಸಮೀಪಿಸುತ್ತಿದ್ದಂತೆ ಸೇರ್ಪಡೆ ಮಾಡಿಕೊಳ್ಳಲಾಗುವುದು. ಇಬ್ರಾಹಿಂ ಸೇರ್ಪಡೆ ಪಕ್ಷಕ್ಕೆ ಲಾಭವೇ ಹೊರತು ನಷ್ಟವಿಲ್ಲ.
                                                                           - ಆರ್. ಕರುಣಾಮೂರ್ತಿ, ಅಧ್ಯಕ್ಷರು, ಜೆಡಿಎಸ್ , ಭದ್ರಾವತಿ.

    ಅಪ್ಪಾಜಿ ಅವರೊಂದಿಗೆ ೨-೩ ದಶಕಗಳಿಂದ ಗುರುತಿಸಿಕೊಂಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ನಗರಸಭೆ ಮಾಜಿ ಸದಸ್ಯ ಬದರಿನಾರಾಯಣ, ಮುಸ್ಲಿಂ ಸಮುದಾಯದ ಫೀರ್‌ಷರೀಫ್, ಶಿವಮಾಧು ಸೇರಿದಂತೆ ಇನ್ನಿತರ ಪ್ರಮುಖರು ಪಕ್ಷ ತೊರೆದಿರುವುದು ಪಕ್ಷದಲ್ಲಿ ಸ್ವಲ್ಪ ಮಟ್ಟಿಗೆ ಹಿನ್ನಡೆಯನ್ನುಂಟು ಮಾಡಿದೆ. ಇದು ಈಗಾಗಲೇ ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಅಧಿಕೃತ ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟಿರುವ ಶಾರದ ಅಪ್ಪಾಜಿಗೆ ತಲೆ ನೋವಾಗಿ ಪರಿಣಮಿಸಿದೆ. ಆದರೂ ಸಹ ಯಾವುದನ್ನು ಲೆಕ್ಕಿಸದೆ ಶಾರದ ಅಪ್ಪಾಜಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.
    ಈಗಾಗಲೇ ಶಾರದ ಅಪ್ಪಾಜಿ ಗ್ರಾಮಾಂತರ ಭಾಗದಲ್ಲಿ ಪಕ್ಷ ಸಂಘಟನೆ ಜೊತೆಗೆ ೨-೩ ಬಾರಿ ಮನೆ ಮನೆಗೆ ಭೇಟಿ ನೀಡಿ ಮತದಾರರನ್ನು ಸಂಪರ್ಕಿಸಿದ್ದಾರೆ. ಇದೀಗ ನಗರಸಭೆ ೩೫ ವಾರ್ಡ್‌ಗಳಲ್ಲಿ ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿಸಲು ಮುಂದಾಗಿದ್ದು, ಕಳೆದ ೨ ದಿನಗಳ ಹಿಂದೆ ಪಕ್ಷದ ನಗರಸಭೆ ಚುನಾಯಿತ ಪ್ರತಿನಿಧಿಗಳು, ಕಾರ್ಯಕರ್ತರ ಸಭೆ ನಡೆಸಿದ್ದಾರೆ. ಪಕ್ಷವನ್ನು ತಳಮಟ್ಟದಲ್ಲಿ ಸಂಘಟಿಸಲು ಹೆಚ್ಚಿನ ಗಮನ ನೀಡುವಂತೆ ಮನವಿ ಮಾಡಿದ್ದಾರೆ.
    ಸಿ.ಎಂ ಇಬ್ರಾಹಿಂ ಸೇರ್ಪಡೆ ಯಾವುದೇ ನಷ್ಟವಿಲ್ಲ:
    ಮಾಜಿ ಕೇಂದ್ರ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಜೆಡಿಎಸ್ ಸೇರ್ಪಡೆಗೊಳ್ಳುತ್ತಿರುವುದು. ಸ್ಥಳೀಯವಾಗಿ ಹೆಚ್ಚಿನ ಪರಿಣಾಮವನ್ನುಂಟು ಮಾಡಲಿದ್ದು, ಇವರ ಸೇರ್ಪಡೆ ಪಕ್ಷ ಸಂಘಟನೆಗೆ ಯಾವುದೇ ಹಿನ್ನಡೆಯನ್ನುಂಟು ಮಾಡುವುದಿಲ್ಲ. ಬದಲಿಗೆ ಲಾಭವಾಗಲಿದೆ ಎಂಬುದು ಸ್ಥಳೀಯ ಮುಖಂಡರ ಅಭಿಪ್ರಾಯವಾಗಿದೆ.
    ಸಿ.ಎಂ ಇಬ್ರಾಹಿಂರವರು ರಾಜ್ಯಮಟ್ಟದ ನಾಯಕರಾಗಿದ್ದು, ಈಗಾಗಲೇ ಕ್ಷೇತ್ರದಲ್ಲಿ ಶಾರದ ಅಪ್ಪಾಜಿಯನ್ನು ಅಭ್ಯರ್ಥಿಯಾಗಿ ಘೋಷಿಸಿರುವುದರಿಂದ ಇಬ್ರಾಹಿಂರವರು ಶಾರದ ಅಪ್ಪಾಜಿ ಬೆಂಬಲಿಸುವುದು ಅನಿವಾರ್ಯವಾಗಿದೆ. ಈ ಹಿನ್ನಲೆಯಲ್ಲಿ ಇವರ ಅಭಿಮಾನಿಗಳು, ಹಿತೈಷಿಗಳು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಾರದ ಅಪ್ಪಾಜಿ ಗೆಲುವಿಗಾಗಿ ಶ್ರಮಿಸುತ್ತಾರೆಂಬ ವಿಶ್ವಾಸವನ್ನು ಮುಖಂಡರು ಹೊಂದಿದ್ದಾರೆ.  

ಭದ್ರಾ ನದಿಗೆ ತಡೆಗೋಡೆ ನಿರ್ಮಾಣಕ್ಕೆ ಆಗ್ರಹಿಸಿ ಮಾ.೨೧ರಂದು ಹೋರಾಟ

ಭದ್ರಾವತಿ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದ ೧ನೇ ತಿರುವಿನಿಂದ ಶ್ರೀ ವಿಶ್ವ ಸ್ವರೂಪಿಣಿ ಮಾರಿಯಮ್ಮ ದೇವಸ್ಥಾನದವರೆಗೂ ಭದ್ರಾ ನದಿಗೆ ತಡೆಗೋಡೆ ನಿರ್ಮಿಸುವ ಸಂಬಂಧ ಹೋರಾಟ ರೂಪಿಸಲು ಮಂಗಳವಾರ ಪದ್ಮ ನಿಲಯ ಹೋಟೆಲ್ ಸುನಂದ ಸಭಾಂಗಣದಲ್ಲಿ ಪ್ರಜಾ ರಾಜ್ಯ ದಲಿತ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಪ್ರಮುಖರು ಮಾತನಾಡಿದರು.
    ಭದ್ರಾವತಿ, ಮಾ. ೧೫: ನಗರದ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದ ೧ನೇ ತಿರುವಿನಿಂದ ಶ್ರೀ ವಿಶ್ವ ಸ್ವರೂಪಿಣಿ ಮಾರಿಯಮ್ಮ ದೇವಸ್ಥಾನದವರೆಗೂ ಭದ್ರಾ ನದಿಗೆ ತಡೆಗೋಡೆ ನಿರ್ಮಿಸುವ ಸಂಬಂಧ ಹೋರಾಟ ರೂಪಿಸಲು ಮಂಗಳವಾರ ಪದ್ಮ ನಿಲಯ ಹೋಟೆಲ್ ಸುನಂದ ಸಭಾಂಗಣದಲ್ಲಿ ಪ್ರಜಾ ರಾಜ್ಯ ದಲಿತ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾ.೨೧ರಂದು ಮೊದಲ ಹಂತದಲ್ಲಿ ಹೋರಾಟ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು.
    ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಮುಖರು ಮಾತನಾಡಿ, ಮಳೆಗಾಲದಲ್ಲಿ ಭದ್ರಾ ಜಲಾಶಯದಿಂದ ನದಿಗೆ ನೀರು ಬಿಟ್ಟ ಸಂದರ್ಭದಲ್ಲಿ ದಲಿತರು ಹೆಚ್ಚಾಗಿ ವಾಸಿಸುತ್ತಿರುವ ಮನೆಗಳಿಗೆ ನೀರು ನುಗ್ಗುತ್ತಿದ್ದು, ಇದನ್ನು ಮನಗಂಡು ಈ ಹಿಂದಿನ ಶಾಸಕರಾಗಿದ್ದ ದಿವಂಗತ ಎಂ.ಜೆ ಅಪ್ಪಾಜಿಯವರು ತಡೆಗೋಡೆ ನಿರ್ಮಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಇದರ ಪರಿಣಾಮ ಕರ್ನಾಟಕ ನೀರಾವರಿ ನಿಗಮಕ್ಕೆ ಕಾಮಗಾರಿ ಕೈಗೆತ್ತಿಗೊಳ್ಳಲು ೯.೫ ಕೋ. ರು. ಹಣ ಬಿಡುಗಡೆಯಾಗಿರುತ್ತದೆ. ೧ನೇ ತಿರುವಿನಿಂದ ವಿಶ್ವ ಸ್ವರೂಪಿಣಿ ಮಾರಿಯಮ್ಮ ದೇವಸ್ಥಾನದವರೆಗೂ ತಡೆಗೋಡೆ ನಿರ್ಮಿಸಬೇಕಾಗಿದೆ.  ಆದರೆ ಇದೀಗ ಈ ಕಾಮಗಾರಿಯನ್ನು ದುರುದ್ದೇಶ ಪೂರ್ವಕವಾಗಿ ಬದಲಿಸಲಾಗಿದ್ದು, ದಲಿತರಿಗೆ ಅನ್ಯಾಯವೆಸಗಲಾಗಿದೆ. ಇದಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಕಾರಣಕರ್ತರಾಗಿದ್ದು, ಮೇಲ್ವರ್ಗದವರ ಒತ್ತಾಯಕ್ಕೆ ಮಣಿದು ಕಾಮಗಾರಿ ಬದಲಿಸಿದ್ದಾರೆಂದು ಆರೋಪಿಸಿದರು.
ಕಾಮಗಾರಿಯನ್ನು ೧ನೇ ತಿರುವಿನಿಂದ ಆರಂಭಿಸಬೇಕೆಂದು ಆಗ್ರಹಿಸಿ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹೋರಾಟ ನಡೆಸಲು ತೀರ್ಮಾನಿಸಿ ಮೊದಲ ಹಂತದಲ್ಲಿ ಮಾ.೨೧ರಂದು ನಗರದ ಅಂಡರ್ ಬ್ರಿಡ್ಜ್‌ನಲ್ಲಿ ಪ್ರತಿಭಟನಾ ಹೋರಾಟಕ್ಕೆ ಕರೆ ನೀಡಲಾಯಿತು.
    ಪ್ರಜಾ ರಾಜ್ಯ ದಲಿತ ಸಂಘದ ರಾಜ್ಯಾಧ್ಯಕ್ಷ ಬಿ. ರಮೇಶ್ ಸಭೆ ಅಧ್ಯಕ್ಷತೆ ವಹಿಸಿದ್ದರು.  ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ಸಂಸ್ಥಾಪಕ ಅಧ್ಯಕ್ಷ ಎಸ್.ಕೆ ಸುಧೀಂದ್ರ, ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ನಗರಸಭೆ ಮಾಜಿ ಸದಸ್ಯ ಎಚ್.ಬಿ ರವಿಕುಮಾರ್, ಸ್ಥಳೀಯ ಮುಖಂಡರಾದ ಕುಪ್ಪಸ್ವಾಮಿ, ಗಣೇಶ್, ನ್ಯೂಟೌನ್ ಬಿಪಿಎಲ್ ಸಂಘದ ಜಗದೀಶ್, ರವಿಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Monday, March 14, 2022

ಜಾತ್ರಾ ಮಹೋತ್ಸವ : ಬಿಳಿಕಿ ಹಿರೇಮಠದಲ್ಲಿ ಧಾರ್ಮಿಕ ಆಚರಣೆ

ಭದ್ರಾವತಿ ತಾಲೂಕಿನ ನವಲೆ ಬಸವಾಪುರ ಗ್ರಾಮದ ಶ್ರೀ ಕ್ಷೇತ್ರ ಶ್ರೀ ಬಸವಣ್ಣ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ರಾತ್ರಿ ಶ್ರೀ ಬಿಳಿಕಿ ಹಿರೇಮಠದಲ್ಲಿ ಧಾರ್ಮಿಕ ಆಚರಣೆಗಳು ಅದ್ದೂರಿಯಾಗಿ ನೆರವೇರಿದವು.  
    ಭದ್ರಾವತಿ, ಮಾ. ೧೫: ತಾಲೂಕಿನ ನವಲೆ ಬಸವಾಪುರ ಗ್ರಾಮದ ಶ್ರೀ ಕ್ಷೇತ್ರ ಶ್ರೀ ಬಸವಣ್ಣ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ರಾತ್ರಿ ಶ್ರೀ ಬಿಳಿಕಿ ಹಿರೇಮಠದಲ್ಲಿ ಧಾರ್ಮಿಕ ಆಚರಣೆಗಳು ಅದ್ದೂರಿಯಾಗಿ ನೆರವೇರಿದವು.  
    ಶ್ರೀಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಸ್ವಾಮಿಗೆ ವಿಶೇಷ ಅಲಂಕಾರ, ಪೂಜೆ, ಮಹಾಮಂಗಳಾರತಿ, ಉತ್ಸವ ಮೆರವಣಿಗೆ ಸೇರಿದಂತೆ ಇನ್ನಿತರ ಆಚರಣೆಗಳು ಜರುಗಿದವು.
    ತಾವರೆಕೆರೆ ಶಿಲಾಮಠದ ಡಾ. ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿದ್ದರು. ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರು, ಭಕ್ತಾಧಿಗಳು ಪಾಲ್ಗೊಂಡಿದ್ದರು.


ಕುಡಿದ ಅಮಲಿನಲ್ಲಿ ಮಿಲ್ಟ್ರಿ ಹೋಟೆಲ್‌ನಲ್ಲಿ ಪುಂಡಾಟ : ಅಡುಗೆ ಸಿಬ್ಬಂದಿ ಮುಖಕ್ಕೆ ಕುದಿಯುವ ಎಣ್ಣೆ ಎರಚಿದ ಪುಂಡರು


    ಭದ್ರಾವತಿ, ಮಾ. ೧೪:  ಮಿಲ್ಟ್ರಿ ಹೋಟಲ್‌ನಲ್ಲಿ ಕುಡಿದ ಅಮಲಿನಲ್ಲಿದ್ದ ಗುಂಪೊಂದು ಪುಂಡಾಟಿಕೆ ನಡೆಸಿ ಹೋಟೆಲ್‌ನಲ್ಲಿ ಅಡುಗೆ ಕೆಲಸ ಮಾಡುವ ಸಿಬ್ಬಂದಿಯೋರ್ವನ ಮುಖದ ಮೇಲೆ ಕುದಿಯುವ ಎಣ್ಣೆ ಎರಚಿರುವ ಘಟನೆ ನಗರದ ಜನ್ನಾಪುರದಲ್ಲಿ ಕೆಲವು ದಿನಗಳ ಹಿಂದೆ ನಡೆದಿದೆ.
    ಜನ್ನಾಪುರದ ವಾಣಿಜ್ಯ ರಸ್ತೆಯಲ್ಲಿರುವ ಗರುಡ ಮಿಲ್ಟ್ರಿ ಹೋಟೆಲ್‌ನಲ್ಲಿ ಈ ಘಟನೆ ನಡೆದಿದ್ದು, ಹೋಟೆಲ್‌ನಲ್ಲಿ ಅಡುಗೆ ಕೆಲಸ ಮಾಡುವ ಮನೋಜ್ ಕುಮಾರ್ ಮುಖ ಸುಟ್ಟು ತೀವ್ರ ಗಾಯಗೊಂಡಿದೆ. ಈತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
    ಹುತ್ತಾ ಕಾಲೋನಿ ಹಾಗು ಜಿಂಕ್‌ಲೈನ್ ನಿವಾಸಿಗಳಾದ ಅಜಯ್, ಯೋಗೇಶ್, ಜಗದೀಶ್ ಮತ್ತು ದೀಪು ಹಾಗು ಇನ್ನಿತರರನ್ನೊಳಗೊಂಡ ಗುಂಪು ಹೋಟೆಲ್ ಮುಂಭಾಗದಲ್ಲಿರುವ ಮದ್ಯದಂಗಡಿಯಲ್ಲಿ ಮದ್ಯಸೇವಿಸಿ ಹೋಟೆಲ್‌ಗೆ ಬಂದು ತಿಂದುಂಡು ನಂತರ ಹೋಟೆಲ್ ಮಾಲೀಕ ಲೋಹಿತ್‌ಕುಮಾರ್ ಬಿಲ್ ಕೇಳಿದಾಗ ಕೊಡದೆ ಪುಂಡಾಟ ನಡೆಸಿದ್ದು, ಅಲ್ಲದೆ ಹೋಟೆಲ್‌ನಲ್ಲಿ ಊಟ ಮಾಡುತ್ತಿದ್ದ ಸುರೇಶ್ ಎಂಬಾತನ ಮೇಲೆ ಹಲ್ಲೆ ನಡೆಸಿದೆ. ಈ ಸಂದರ್ಭದಲ್ಲಿ ಮಾಲೀಕನ ಬೆಂಬಲಕ್ಕೆ ನಿಂತ ಅಡುಗೆ ಸಿಬ್ಬಂದಿ ಮನೋಜ್‌ಕುಮಾರ್ ಮುಖಕ್ಕೆ ಕುದಿಯುವ ಎಣ್ಣೆ ಎರಚಲಾಗಿದೆ. ಜೊತೆಗೆ ಹೋಟಲ್‌ನಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸಗೊಳಿಸಲಾಗಿದೆ ಎನ್ನಲಾಗಿದೆ. ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

ಕೂಡ್ಲಿಗೆರೆ ಗ್ರಾಮದಲ್ಲಿ ಹಲವು ವಿಶೇಷತೆಗಳೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ


ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಈ ಬಾರಿ ಹಲವು ವಿಶೇಷತೆಗಳೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. 
    ಭದ್ರಾವತಿ, ಮಾ. ೧೪: ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಈ ಬಾರಿ ಹಲವು ವಿಶೇಷತೆಗಳೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. 
ಮಹಾಮಾರಿ ಕೋವಿಡ್-೧೯ ಸಂಘಷ್ಟದ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ ಅಂಗನವಾಡಿ ಹಾಗು ಆಶಾ ಕಾರ್ಯಕರ್ತೆಯರನ್ನು ಮತ್ತು ಸ್ಥಳೀಯ ಸಂಸ್ಥೆಗಳ ಚುನಾಯಿತ ಮಹಿಳಾ ಪ್ರತಿನಿಧಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. 
  ಕೂಡ್ಲಿಗೆರೆ ಗ್ರಾಮ ಪಂಚಾಯಿತಿ, ತಾಲೂಕು ಸುಗ್ರಾಮ ಚುನಾಯಿತ ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯರ ಒಕ್ಕೂಟ ಹಾಗು ಸ್ವಸಹಾಯ ಮಹಿಳಾ ಸಂಘಗಳ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. 
ಉದ್ಯಮಿ ಬಿ.ಕೆ ಜಗನ್ನಾಥ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ಯುವ ಮುಖಂಡ ಬಿ.ಎಸ್ ಗಣೇಶ್, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯೆ ಹೇಮಾವತಿ ವಿಶ್ವನಾಥ್, ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತಾ, ನಗರಸಭಾ ಸದಸ್ಯೆ ಅನಿತಾ ಮಲ್ಲೇಶ್, ಗ್ರಾಮದ ಮುಖಂಡರಾದ ಎನ್.ಎಚ್ ಮಹೇಶ್, ದಲಿತ ಮುಖಂಡ ಕೃಷ್ಣಮೂರ್ತಿ, ಮಹೇಶ್‌ಗೌಡ್ರು, ದಾನವಾಡಿ ಗುರುಮೂರ್ತಿ, ತಾಲೂಕು ಸುಗ್ರಾಮ ಚುನಾಯಿತಿ ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯರ ಒಕ್ಕೂಟದ ಅಧ್ಯಕ್ಷೆ ಗೌರಮ್ಮ ಎಸ್. ಮಹಾದೇವ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮಾದೇವಿ ತಿಪ್ಪೇಶ್, ಉಪಾಧ್ಯಕ್ಷ ಕುಬೇರ್‌ನಾಯ್ಕ್, ಮಾಜಿ ಅಧ್ಯಕ್ಷೆ ಮಲ್ಲಕ್ ವೀರಪ್ಪನ್, ಸದಸ್ಯರಾದ ವಿಶ್ವನಾಥ್, ಜಯಣ್ಣ, ಆರ್.ಎನ್ ರುದ್ರೇಶ್, ನಾಗರಾಜ ಗೌಡ್ರು, ಸ್ವಾಮಿನಾಥನ್, ಭಾಗ್ಯಮ್ಮ, ನೀಲಾಬಾಯಿ, ಪಾರ್ವತಿ ಬಾಯಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
ಕೂಡ್ಲಿಗೆರೆ, ದಾನವಾಡಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ವಿವಿಧ ಮಹಿಳಾ ಸಂಘಟನೆಗಳ ಪ್ರಮುಖರು, ಗ್ರಾಮಸ್ಥರು, ಅಂಗನವಾಡಿ ಹಾಗು ಆಶಾ ಕಾರ್ಯಕರ್ತೆರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.  


ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಗ್ರಾಮದ ಮುಖಂಡ ಎಸ್. ಮಹಾದೇವ  ಹಾಗು ಗ್ರಾಮ ಪಂಚಾಯಿತಿ ಸದಸ್ಯ ವಿಶ್ವನಾಥ್‌ರನ್ನು  ಸನ್ಮಾನಿಸಿ ಗೌರವಿಸಲಾಯಿತು. 

ಮಾ.೧೫ರಂದು ಹೋರಾಟ ರೂಪಿಸಲು ಪೂರ್ವಭಾವಿ ಸಭೆ

    ಭದ್ರಾವತಿ, ಮಾ. ೧೪: ನಗರದ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದ ೧ನೇ ತಿರುವಿನಿಂದ ಶ್ರೀ ವಿಶ್ವ ಸ್ವರೂಪಿಣಿ ಮಾರಿಯಮ್ಮ ದೇವಸ್ಥಾನದವರೆಗೂ ಭದ್ರಾ ನದಿಗೆ ತಡೆಗೋಡೆ ನಿರ್ಮಿಸುವ ಸಂಬಂಧ ಹೋರಾಟ ರೂಪಿಸಲು ಮಾ.೧೫ರಂದು ಬೆಳಿಗ್ಗೆ ೧೦.೩೦ಕ್ಕೆ ಪದ್ಮ ನಿಲಯ ಹೋಟೆಲ್ ಸುನಂದ ಸಭಾಂಗಣದಲ್ಲಿ ಪ್ರಜಾ ರಾಜ್ಯ ದಲಿತ ಸಂಘದ ವತಿಯಿಂದ ಸಭೆ ಹಮ್ಮಿಕೊಳ್ಳಲಾಗಿದೆ.
    ಮಳೆಗಾಲದಲ್ಲಿ ಭದ್ರಾ ಜಲಾಶಯದಿಂದ ನದಿಗೆ ನೀರು ಬಿಟ್ಟ ಸಂದರ್ಭದಲ್ಲಿ ದಲಿತರು ಹೆಚ್ಚಾಗಿ ವಾಸಿಸುತ್ತಿರುವ ಮನೆಗಳಿಗೆ ನೀರು ನುಗ್ಗುತ್ತಿದ್ದು, ಇದನ್ನು ಮನಗಂಡು ಈ ಹಿಂದಿನ ಶಾಸಕರಾಗಿದ್ದ ದಿವಂಗತ ಎಂ.ಜೆ ಅಪ್ಪಾಜಿಯವರು ತಡೆಗೋಡೆ ನಿರ್ಮಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಇದರ ಪರಿಣಾಮ ಕರ್ನಾಟಕ ನೀರಾವರಿ ನಿಗಮಕ್ಕೆ ಕಾಮಗಾರಿ ಕೈಗೆತ್ತಿಗೊಳ್ಳಲು ೯.೫ ಕೋ. ರು. ಹಣ ಬಿಡುಗಡೆಯಾಗಿರುತ್ತದೆ. ೧ನೇ ತಿರುವಿನಿಂದ ವಿಶ್ವ ಸ್ವರೂಪಿಣಿ ಮಾರಿಯಮ್ಮ ದೇವಸ್ಥಾನದವರೆಗೂ ತಡೆಗೋಡೆ ನಿರ್ಮಿಸಬೇಕಾಗಿತ್ತು. ಆದರೆ ಇದೀಗ ಈ ಕಾಮಗಾರಿಯನ್ನು ದುರುದ್ದೇಶ ಪೂರ್ವಕವಾಗಿ ಬದಲಿಸಲಾಗಿದ್ದು, ದಲಿತರಿಗೆ ಅನ್ಯಾಯವೆಸಗಲಾಗಿದೆ. ಈ ಹಿನ್ನಲೆಯಲ್ಲಿ ಮುಂದಿನ ಹೋರಾಟ ಕುರಿತು ಚರ್ಚಿಸಲು ಸಭೆ ಕರೆಯಲಾಗಿದೆ. ಸ್ಥಳೀಯ ನಿವಾಸಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಸೇರಿದಂತೆ ಇನ್ನಿತರರು ಸಭೆಗೆ ಪಾಲ್ಗೊಳ್ಳುವ ಮೂಲಕ ಯಶಸ್ವಿಗೊಳಿಸುವಂತೆ ಸಂಘದ ರಾಜ್ಯಾಧ್ಯಕ್ಷ ಬಿ. ರಮೇಶ್ ಕೋರಿದ್ದಾರೆ.

ಮಾ.೧೫ರಂದು ವಿದ್ಯುತ್ ವ್ಯತ್ಯಯ

    ಭದ್ರಾವತಿ, ಮಾ. ೧೩: ಮೆಸ್ಕಾಂ ಜೆಪಿಎಸ್ ಕಾಲೋನಿಯಲ್ಲಿರುವ ೧೧೦/೩೩/೧೧ ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಮಾ.೧೫ರ ಮಂಗಳವಾರ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಕೋರಲಾಗಿದೆ.  
    ನ್ಯೂಟೌನ್, ನ್ಯೂಕಾಲೋನಿ, ಬಿ.ಎಚ್ ರಸ್ತೆ, ಐಟಿಐ, ಆಕಾಶವಾಣಿ, ಕಾಗದನಗರ, ಸುರಗಿತೋಪು, ಆನೆಕೊಪ್ಪ, ಉಜ್ಜನಿಪುರ, ಬುಳ್ಳಾಪುರ, ಹುಡ್ಕೋ ಕಾಲೋನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ, ಹಳೇಸಿದ್ದಾಪುರ, ಹೊಸೂರು ತಾಂಡ, ಹುತ್ತಾ ಕಾಲೋನಿ, ಜನ್ನಾಪುರ, ಅಪ್ಪರ್ ಹುತ್ತಾ, ಲೋಯರ್ ಹುತ್ತಾ, ಜಿಂಕ್‌ಲೈನ್, ಸಿರಿಯೂರು, ತರೀಕೆರೆ ರಸ್ತೆ, ಸಾದತ್ ಕಾಲೋನಿ, ನೆಹರು ನಗರ, ಶಿವನಿ ವೃತ್ತ, ಹಿರಿಯೂರು, ಹೊಳೆ ಗಂಗೂರು, ಕಾರೇಹಳ್ಳಿ, ಕಂಬದಾಳ್ ಹೊಸೂರು, ಹೊನ್ನಹಟ್ಟಿ ಹೊಸೂರು, ಕಾಳನಕಟ್ಟೆ, ಹೊಳೆ ನೇರಳೇಕೆರೆ, ಅಂತರಗಂಗೆ, ದೊಣಬಘಟ್ಟ, ಬಾರಂದೂರು, ಕಲ್ಲಹಳ್ಳಿ, ಯರೇಹಳ್ಳಿ, ಮಾವಿನಕೆರೆ, ದೊಡ್ಡೇರಿ, ತಡಸ, ಬಿಳಿಕಿ, ಕೆಂಪೇಗೌಡನಗರ, ಬೊಮ್ಮನಹಳ್ಳಿ, ಕುಂಬಾರ್ ಗುಂಡಿ, ಹಳೇ ಬಾರಂದೂರು, ಹಳ್ಳಿಕೆರೆ, ಅಪ್ಪಾಜಿ ಬಡಾವಣೆ, ಬಸವನಗುಡಿ, ಉಕ್ಕುಂದ, ರತ್ನಾಪುರ, ಕೆಂಚೇನಹಳ್ಳಿ, ಗಂಗೂರು, ಬಿಸಿಲುಮನೆ, ದೇವನರಸೀಪುರ, ಶಿವಪುರ, ಅಡ್ಲಘಟ್ಟ, ಅಂಬುದಹಳ್ಳಿ ಮತ್ತು ಅರಳಿಕೊಪ್ಪ ಸೇರಿದಂತೆ ಇನ್ನಿತರರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಲಿದೆ ಎಂದು ಮೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.