Sunday, March 20, 2022

ಮಾ.೨೧ರಂದು ಸಿದ್ದ ಕಣ್ಣಿನ ಹನಿ ಕಾರ್ಯಕ್ರಮ

ಭದ್ರಾವತಿ, ಮಾ. ೨೦ : ನಗರದ ತರೀಕೆರೆ ರಸ್ತೆಯ ಶ್ರೀ ಶಿವಸುಬ್ರಹ್ಮಣ್ಯ ಸ್ವಾಮಿ ಆಶ್ರಮದ ವತಿಯಿಂದ ತಮಿಳುನಾಡು ದಿಂಡಿಕಲ್‌ನ ವಂಶಪಾರಂಪರೆ ಸಿದ್ದ ವೈದ್ಯರಾದ ಕೆ. ಮುತ್ತುಕೃಷ್ಣನ್ ಅವರಿಂದ ಮಾ.೨೧ರಂದು ಸಿದ್ದ ಕಣ್ಣಿನ ಹನಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
    ಕಾರ್ಯಕ್ರಮ ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧ ಗಂಟೆ ವರೆಗೆ ನಡೆಯಲಿದ್ದು, ಕಣ್ಣಿಗೆ ಹನಿ ಹಾಕುವುದರಿಂದ ಕಣ್ಣಿನಲ್ಲಿ ನೀರು ಬರುತ್ತಿರುವುದು, ಕಣ್ಣು ಉರಿ, ಕಣ್ಣು ಕೆಂಪಗಾಗುವುದು, ಕಣ್ಣಿನಲ್ಲಿ ಪೊರೆ ಬರುವ ಹಂತದಲ್ಲಿರುವವರು ಹಾಗು ದೂರ ದೃಷ್ಠಿ ಮತ್ತು ಸಮೀಪ ದೃಷ್ಠಿ ತೊಂದರೆ ಇರುವವರಿಗೆ ಹಾಗು ಸೂಕ್ಷ್ಮ ಕೆಲಸಗಾರರು, ಚಿನ್ನಬೆಳ್ಳಿ, ಕಂಪ್ಯೂಟರ್, ಟೈಲರಿಂಗ್ ಕೆಲಸಗಾರರಿಗೆ ಹೆಚ್ಚಿನ ಅನುಕೂಲವಾಗಲಿದೆ. ಹೆಚ್ಚಿನ ಮಾಹಿತಿಗೆ ಮೊ: ೯೪೮೦೨೮೩೦೩೦ ಅಥವಾ ೯೪೪೮೨೫೫೫೪೪ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ರಾಜ್ಯದಲ್ಲಿ ಪುನಃ ಸೇವಾದಳ ಸಂಘಟಿಸುವ ಅಗತ್ಯವಿದೆ : ರಾಮಚಂದ್ರಪ್ಪ

ಭದ್ರಾವತಿ ತರೀಕೆರೆ ರಸ್ತೆಯ ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ತಾಲೂಕು ಕಾಂಗ್ರೆಸ್ ಸೇವಾದಳ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಭೆಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸೇವಾದಳ ಅಧ್ಯಕ್ಷ ರಾಮಚಂದ್ರಪ್ಪ ಉದ್ಘಾಟಿಸಿದರು.
    ಭದ್ರಾವತಿ, ಮಾ. ೨೦: ರಾಜ್ಯದಲ್ಲಿ ಪುನಃ ಸೇವಾದಳ ಸಂಘಟಿಸುವ ಅಗತ್ಯವಿದ್ದು, ಈ ಹಿನ್ನಲೆಯಲ್ಲಿ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡಲಾಗುತ್ತಿದೆ. ಸೇವಾದಳದ ತತ್ವ, ಸಿದ್ದಾಂತಗಳಿಗೆ ಬದ್ಧರಾಗಿ ಪ್ರತಿಯೊಬ್ಬರು ಮುನ್ನಡೆಯಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸೇವಾದಳ ಅಧ್ಯಕ್ಷ ರಾಮಚಂದ್ರಪ್ಪ ಹೇಳಿದರು.
    ಅವರು ಭಾನುವಾರ ನಗರದ ತರೀಕೆರೆ ರಸ್ತೆಯ ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ತಾಲೂಕು ಕಾಂಗ್ರೆಸ್ ಸೇವಾದಳ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಭೆ ಉದ್ಘಾಟಿಸಿ ಮಾತನಾಡಿದರು.
    ಪ್ರಸ್ತುತ ರಾಜ್ಯದಲ್ಲಿ ಸೇವಾದಳ ಹೆಚ್ಚು ಸಂಘಟಿತವಾಗಬೇಕಾಗಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸೇವಾದಳದ ಕೊಡುಗೆ ಹೆಚ್ಚಿನದ್ದಾಗಿದ್ದು, ಈ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರೊಂದಿಗೆ ಈಗಾಗಲೇ ಚರ್ಚಿಸಲಾಗಿದೆ. ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ನೀಡುವ ಸ್ಥಾನಮಾನಗಳನ್ನು ಸೇವಾದಳದಲ್ಲಿ ಸೇವೆ ಸಲ್ಲಿಸುತ್ತಿರುವವರಿಗೂ ನೀಡಬೇಕು ಹಾಗು ಈ ಸಂಬಂಧ ಎಲ್ಲಾ ಜಿಲ್ಲೆಗಳಲ್ಲಿರುವ ಸೇವಾದಳ ಸಂಘಟಕರೊಂದಿಗೆ ಚರ್ಚಿಸಬೇಕೆಂದು ಕೋರಲಾಗಿದೆ. ಇದಕ್ಕೆ ಡಿ.ಕೆ ಶಿವಕುಮಾರ್ ಸಹ ಒಪ್ಪಿಗೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಸೇವಾದಳದಲ್ಲಿ ಸೇವೆ ಸಲ್ಲಿಸುತ್ತಿರುವವರು ಇನ್ನೂ ಹೆಚ್ಚಿನ ಕ್ರಿಯಾಶೀಲರಾಗಿ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕೆಂದರು.
    ದೇಶದಲ್ಲಿ ಸೇವಾದಳ ಜಾತಿ, ಮತ, ಭಾಷೆ ಬೇಧಭಾವಗಳಿಲ್ಲದ ತನ್ನದೇ ಆದ ತತ್ವ, ಸಿದ್ದಾಂತಗಳನ್ನು ಒಳಗೊಂಡಿರುವ ಸಂಘಟನೆಯಾಗಿದ್ದು, ಇದಕ್ಕೆ ಪ್ರತಿಯೊಬ್ಬರು ಚಿರಋಣಿಯಾಗಿರಬೇಕು. ಒಳ್ಳೆಯ ನಂಬಿಕೆ, ಅಭಿಪ್ರಾಯಗಳಿಗೆ ಬದ್ಧರಾಗಿ ಕೆಲಸ ಮಾಡಬೇಕು. ಆಗ ಮಾತ್ರ ಯಶಸ್ಸು ನಿರೀಕ್ಷಿಸಲು ಸಾಧ್ಯ. ಅಲ್ಲದೆ ಭವಿಷ್ಯದಲ್ಲಿ ಪ್ರತಿಯೊಬ್ಬರಿಗೂ ಒಳ್ಳೆಯದಾಗಲಿದೆ. ಸೇವಾದಳ ಪುನಃ ಸಂಘಟಿಸುವ ನಿಟ್ಟಿನಲ್ಲಿ ಪ್ರತಿಯೊಂದು ಜಿಲ್ಲೆಗಳಲ್ಲಿ ಶಿಬಿರಗಳನ್ನು ಆಯೋಜಿಸಲಾಗುವುದು. ಈ ಶಿಬಿರಕ್ಕೆ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ನಾಯಕರು ಸಹ ಪಾಲ್ಗೊಳ್ಳಲಿದ್ದಾರೆ. ಸೇವಾದಳ ಬಲಪಡಿಸುವ ನಿಟ್ಟಿನಲ್ಲಿ ತಮ್ಮೊಂದಿಗೆ ಕೈಜೋಡಿಸಲಿದ್ದಾರೆ ಎಂದರು.
    ರಾಜ್ಯ ಮುಖ್ಯ ಸಂಘಟಕಿ ಸ್ಟ್ಯಾನ್ಲಿ ಡಿಸೋಜಾ ಮಾತನಾಡಿ, ತನ್ನದೇ ಆದ ತತ್ವ, ಸಿದ್ದಾಂತಗಳನ್ನು ಹೊಂದಿರುವ ಸೇವಾದಳ ತನ್ನ ಆಶಯಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಶಕ್ತಿ ತುಂಬುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ದೇಶದಲ್ಲಿ ಮಾಜಿ ಪ್ರಧಾನಿ ರಾಜೀವ್‌ಗಾಂಧಿಯವರ ನಿಧನದ ನಂತರ ಸೇವಾದಳಕ್ಕೆ ನೀಡುತ್ತಿರುವ ಮಾನ್ಯತೆ ಸ್ವಲ್ಪಮಟ್ಟಿಗೆ ಕಡಿಯಾಗಿದೆ. ಈ ಹಿನ್ನಲೆಯಲ್ಲಿ ಇದೀಗ ರಾಜ್ಯಾಧ್ಯಕ್ಷರಾಗಿರುವ ರಾಮಚಂದ್ರಪ್ಪನವರು ಸೇವಾದಳ ಹೆಚ್ಚಿನ ರೀತಿಯಲ್ಲಿ ಸಂಘಟಿಸಲು ಮುಂದಾಗಿದ್ದಾರೆ. ಅವರು ಕೈಗೊಂಡಿರುವ ಕಾರ್ಯ ಯಶಸ್ವಿಯಾಗಲು ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದರು.
    ಕೆಪಿಸಿಸಿ ಸೇವಾದಳ ಉಪಾಧ್ಯಕ್ಷ ವಿನಾಯಕಮೂರ್ತಿ, ಜಿಲ್ಲಾಧ್ಯಕ್ಷ ವೈ.ಎಚ್ ನಾಗರಾಜ್ ಮಾತನಾಡಿದರು. ಕೆಪಿಸಿಸಿ ಮುಖ್ಯ ಸಂಘಟನಾ ಕಾರ್ಯದರ್ಶಿ ಸ್ಟ್ಯಾನ್ಲಿ, ಶ್ರೀ ಕ್ಷೇತ್ರ ಭದ್ರಗಿರಿ ದೇವಸ್ಥಾನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂದ್ರಘೋಷನ್, ತಾಲೂಕು ಅಧ್ಯಕ್ಷ ಡಿ. ನರಸಿಂಹಮೂರ್ತಿ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.
    ಪ್ರಮುಖರಾದ ನಾಗೇಶ್, ರವಿನಾಯ್ಕ ಸೇರಿದಂತೆ ಇನ್ನಿತರರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಜೀವ ಸ್ವಾಗತಿಸಿದರು. ಶಶಿಕಲಾ ವಂದಿಸಿದರು.



Saturday, March 19, 2022

ಸಂಬುದ್ಧ ಧಮ್ಮಾಂಕುರ ಟ್ರಸ್ಟ್ ವತಿಯಿಂದ ಹುಣ್ಣಿಮೆ ದಿನ

ಭದ್ರಾವತಿಯಲ್ಲಿ ಸಂಬುದ್ಧ ಧಮ್ಮಾಂಕುರ ಟ್ರಸ್ಟ್ ವತಿಯಿಂದ ಹೊಸ ನಂಜಾಪುರದ ನಿವೇಶನದಲ್ಲಿ ಪ್ರತಿ ತಿಂಗಳಿನಂತೆ ಈ ತಿಂಗಳು ಸಹ ಹುಣ್ಣಿಮೆ ದಿನ ಸರಳವಾಗಿ ಆಚರಿಸಲಾಯಿತು.
    ಭದ್ರಾವತಿ, ಮಾ. ೧೯: ಸಂಬುದ್ಧ ಧಮ್ಮಾಂಕುರ ಟ್ರಸ್ಟ್ ವತಿಯಿಂದ ಹೊಸ ನಂಜಾಪುರದ ನಿವೇಶನದಲ್ಲಿ ಪ್ರತಿ ತಿಂಗಳಿನಂತೆ ಈ ತಿಂಗಳು ಸಹ ಹುಣ್ಣಿಮೆ ದಿನ ಸರಳವಾಗಿ ಆಚರಿಸಲಾಯಿತು.
    ಬೌದ್ಧ ಧರ್ಮ ಉಪಾಸಕರಾದ ಪ್ರೊ. ಎಚ್. ರಾಚಪ್ಪ ಉಪನ್ಯಾಸ ನಡೆಸಿಕೊಟ್ಟರು. ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಕಾರ್ಯಪಾಲಕ ಇಂಜಿನಿಯರ್ ರಂಗರಾಜಪುರೆ, ಸಂಬುದ್ಧ ಧಮ್ಮಾಂಕುರ ಟ್ರಸ್ಟ್ ಆಡಳಿತ ಮಂಡಳಿಯ ಪ್ರಮುಖರಾದ ಸುರೇಶ್, ಬದರಿನಾರಾಯಣ, ನಂಜಾಪುರ ಶ್ರೀನಿವಾಸ್, ಎ. ತಿಪ್ಪೇಸ್ವಾಮಿ, ಎಸ್.ಎಸ್ ಭೈರಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಆರಂಭದಲ್ಲಿ ಗೌತಮ ಬುದ್ಧನ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಾಯಿತು.
    ಇತ್ತೀಚೆಗೆ ಸಂಬುದ್ಧ ಧಮ್ಮಾಂಕುರ ಟ್ರಸ್ಟ್ ಅಸ್ತಿತ್ವಕ್ಕೆ ಬಂದಿದ್ದು, ಕ್ರಿಯಾಶೀಲವಾಗಿ ಮುನ್ನಡೆಯುತ್ತಿದೆ. ಟ್ರಸ್ಟ್ ಹೊಸ ನಂಜಾಪುರದಲ್ಲಿ ನಿವೇಶನ ಹೊಂದುವ ಜೊತೆಗೆ ಇದರ ಅಭಿವೃದ್ಧಿಗೆ ಮುಂದಾಗಿದೆ.

ಯುಗಾದಿ ಕವಿಗೋಷ್ಠಿ : ಆಸಕ್ತ ಕವಿಗಳಿಂದ ಕವನ ಆಹ್ವಾನ

    ಭದ್ರಾವತಿ, ಮಾ. ೧೯: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಯುಗಾದಿ ಕವಿಘೋಷ್ಠಿ ಹಮ್ಮಿಕೊಳ್ಳುತ್ತಿದ್ದು, ಆಸಕ್ತ ಕವಿಗಳಿಂದ ಕವನಗಳನ್ನು  ಆಹ್ವಾನಿಸಲಾಗಿದೆ.
    ಉತ್ತಮವಾದ ಯಾವುದೇ ವಿಷಯ ವಸ್ತುವುಳ್ಳ ಕವನಗಳನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಗೆ ಮಾ. ೨೨ರೊಳಗೆ ಕಳುಹಿಸಬಹುದಾಗಿದೆ. ಕೆಲವೇ ಕವಿಗಳಿಗೆ ಮಾತ್ರ ಅವಕಾಶವಿದ್ದು, ಮೊದಲು ಕವನ ಕಳಿಸಿದ ಆಯ್ಕೆ ಯಾದ ಕವಿಗಳಿಗೆ ಮಾತ್ರ ವಾಚಿಸಲು ಅವಕಾಶ ನೀಡಲಾಗುವುದು. ಕಾರ್ಯಕ್ರಮದ ಸಂದರ್ಭದಲ್ಲಿ ಬಂದು ಕೇಳಿದರೆ ಅವಕಾಶ ಇರುವುದಿಲ್ಲ.
    ಹೆಚ್ಚಿನ ವಿವರಗಳಿಗೆ ಪರಿಷತ್ ಅಧ್ಯಕ್ಷರಾದ ಕೋಗಲೂರು ತಿಪ್ಪೇಸ್ವಾಮಿ, ಮೊ: ೯೦೦೮೫೧೫೪೩೨ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪರಿಷತ್ ಕಾರ್ಯದರ್ಶಿಗಳಾದ ಎಚ್. ತಿಮ್ಮಪ್ಪ  ಮತ್ತು ಎಂ.ಈ ಜಗದೀಶ್ ಕೋರಿದ್ದಾರೆ.

ರತಿ ಮನ್ಮಥರ ದಹನದೊಂದಿಗೆ ಬಣ್ಣ ಬಣ್ಣದ ರಂಗಿನಾಟಕ್ಕೆ ತೆರೆ

ಭದ್ರಾವತಿ ಹಳೇನಗರದ ವಿವಿಧೆಡೆ ಶನಿವಾರ ಹೋಳಿ ಸಂಭ್ರಮಾಚರಣೆ ನಡೆಸಿ ರತಿ ಮನ್ಮಥರ ದಹನದೊಂದಿಗೆ ಹಬ್ಬಕ್ಕೆ ತೆರೆ ಎಳೆಯಲಾಯಿತು.
    ಭದ್ರಾವತಿ, ಮಾ. ೧೯: ಹಳೇನಗರದ ವಿವಿಧೆಡೆ ಶನಿವಾರ ಹೋಳಿ ಸಂಭ್ರಮಾಚರಣೆ ನಡೆಸಿ ರತಿ ಮನ್ಮಥರ ದಹನದೊಂದಿಗೆ ಹಬ್ಬಕ್ಕೆ ತೆರೆ ಎಳೆಯಲಾಯಿತು.
    ಭೂತನಗುಡಿ ಭಾಗದಲ್ಲಿ ಶುಕ್ರವಾರ ಹೋಳಿ ಹಬ್ಬಕ್ಕೆ ತೆರೆ ಎಳೆಯಲಾಗಿತ್ತು. ಆದರೆ ಹಳೇನಗರ ಭಾಗದ ಕುಂಬಾರರ ಬೀದಿ, ಉಪ್ಪಾರರ ಬೀದಿ ಮತ್ತು ಬ್ರಾಹ್ಮಣ ಬೀದಿಗಳಲ್ಲಿ ಒಂದು ದಿನ ತಡವಾಗಿ ಹಬ್ಬಕ್ಕೆ ತೆರೆಯಲಾಯಿತು.
    ಪ್ರಮುಖ ರಸ್ತೆಗಳಲ್ಲಿ ಬಣ್ಣ ಬಣ್ಣದ ರಂಗಿನಾಟದೊಡನೆ ವಯಸ್ಸಿನ ಬೇಧಭಾವವಿಲ್ಲದೆ ಮಕ್ಕಳು, ಮಹಿಳೆಯರು ಮತ್ತು ಪುರುಷರು ಒಂದೆಡೆ ಸೇರಿ ಸಂಭ್ರಮಿಸಿದರು. ನಂತರ ಧಾರ್ಮಿಕ ಆಚರಣೆಗಳೊಂದಿಗೆ ಪ್ರಮುಖ ರಸ್ತೆಗಳಲ್ಲಿ ರತಿಮನ್ಮಥರ ಮೆರವಣಿಗೆ ನಡೆಸಿ ದಹನದೊಂದಿಗೆ ಹಬ್ಬಕ್ಕೆ ತೆರೆ ಎಳೆಯಲಾಯಿತು. ಈ ಭಾಗದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.



ಬಿಜೆಪಿಯಿಂದ ದುರ್ಬಳಕೆ : ಪರಿಶಿಷ್ಟ ಜಾತಿಗೆ ಸೇರಿದ ಹನುಮಂತನಾಯ್ಕರಿಗೆ ಅನ್ಯಾಯ

ಹನುಮಂತನಾಯ್ಕ
    ಭದ್ರಾವತಿ, ಮಾ. ೧೯: ಭಾರತೀಯ ಜನತಾ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಜೊತೆಗೆ ಹಂತ ಹಂತವಾಗಿ ಗುರುತಿಸಿಕೊಂಡು ತಾಲೂಕು ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ಹನುಮಂತನಾಯ್ಕ ವಿರುದ್ಧ ಪಕ್ಷದ ಕೆಲವರು ಷಡ್ಯಂತ್ರ ನಡೆಸಿ ಬಲಿಪಶು ಮಾಡಲಾಗಿದೆ ಎಂದು ತಾಲೂಕು ಬಂಜಾರ ಸಮಾಜದ ಪ್ರಮುಖರು ಆರೋಪಿಸಿದ್ದಾರೆ.
    ಮಂಡಲ ಅಧ್ಯಕ್ಷ ಎಂ. ಪ್ರಭಾಕರ ಹಾಗು ಅವರೊಂದಿಗಿನ ಕೆಲವು ವ್ಯಕ್ತಿಗಳು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಹನುಮಂತನಾಯ್ಕ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಅವರನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಉಚ್ಛಾಟನೆಗೊಳಿಸಿರುವುದು ಸರಿಯಲ್ಲ. ಇದನ್ನು ಬಂಜಾರ ಸಮಾಜ ಖಂಡಿಸುತ್ತದೆ.
    ಮಂಡಲ ಅಧ್ಯಕ್ಷ ಎಂ. ಪ್ರಭಾಕರ್‌ರವರು ಪರಿಶಿಷ್ಟ ಜಾತಿಗೆ ಸೇರಿದ ಹನುಮಂತನಾಯ್ಕರವರನ್ನು ದುರ್ಬಳಕೆ ಮಾಡಿಕೊಂಡಿದ್ದು, ಅಲ್ಲದೆ ವಿನಾಕಾರಣ  ಇಲ್ಲಸಲ್ಲದ ಆರೋಪಗಳನ್ನು ಮಾಡಿರುವುದು ವಿಷಾದನೀಯ ಬೆಳವಣಿಗೆಯಾಗಿದೆ. ಪ್ರಭಾಕರ್‌ರವರು ಮಾಡಿರುವ ಆರೋಪಗಳಿಗೆ ನೇರವಾಗಿ ಚರ್ಚಿಸಲು ಸಿದ್ದವಿದ್ದೇವೆ.
    ಪಕ್ಷದ ವರಿಷ್ಠರು ಈ ಸಂಬಂಧ ಗಮನ ಹರಿಸಿ ನ್ಯಾಯ ಒದಗಿಸಿಕೊಡಬೇಕು. ಅಲ್ಲದೆ ಹನುಮಂತನಾಯ್ಕ ಅವರನ್ನು ಪುನಃ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಮುಂದುವರೆಯುವಂತೆ ಕ್ರಮ ಕೈಗೊಳ್ಳಬೇಕೆಂದು ತಾಲೂಕು ಬಂಜಾರ ಯುವಕರ ಸಂಘದ ಅಧ್ಯಕ್ಷ ಕೃಷ್ಣನಾಯ್ಕ ಹಾಗು ಬಂಜಾರ ಸಂಘದ ಅಧ್ಯಕ್ಷ ಪ್ರೇಮ್‌ಕುಮಾರ್ ಆಗ್ರಹಿಸಿದ್ದಾರೆ.

ವಿಜೃಂಭಣೆಯಿಂದ ಜರುಗಿದ ಸುಣ್ಣದಹಳ್ಳಿ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ

ಪ್ರತಿ ವರ್ಷದಂತೆ ಈ ಬಾರಿ ಸಹ ಭದ್ರಾವತಿ ತಾಲೂಕಿನ ಪುರಾಣ ಪ್ರಸಿದ್ದ ಸುಣ್ಣದಹಳ್ಳಿ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ ಶನಿವಾರ ವಿಜೃಂಭಣೆಯಿಂದ ನಡೆಯಿತು.
    ಭದ್ರಾವತಿ, ಮಾ. ೧೯: ಪ್ರತಿ ವರ್ಷದಂತೆ ಈ ಬಾರಿ ಸಹ ತಾಲೂಕಿನ ಪುರಾಣ ಪ್ರಸಿದ್ದ ಸುಣ್ಣದಹಳ್ಳಿ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ ಶನಿವಾರ ವಿಜೃಂಭಣೆಯಿಂದ ನಡೆಯಿತು.
    ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನೆ, ಪಂಚಾಮೃತ ಅಭಿಷೇಕ ಮತ್ತು ಮಹಾಮಂಗಳಾರತಿ, ರಥಶುದ್ಧಿ ಪ್ರಧಾನ ಹೋಮ ಜರುಗಿದವು. ಮಧ್ಯಾಹ್ನ ೧೨.೩೦ಕ್ಕೆ ದೇವಸ್ಥಾನದಿಂದ ಆವರಣದಿಂದ ರಥೋತ್ಸವ ಆರಂಭಗೊಂಡಿತು. ದೇವಸ್ಥಾನದ ಪ್ರಧಾನ ಆರ್ಚಕರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ರಥೋತ್ಸವ ಆರಂಭಗೊಳ್ಳುತ್ತಿದ್ದಂತೆ ಭಕ್ತರು ವೀರಾಂಜನೇಯ ಸ್ವಾಮಿಗೆ ಜೈಕಾರ ಹಾಕಿ ಸಂಭ್ರಮಿಸಿದರು. ವಿವಿಧ ಭಜನಾ ಮಂಡಳಿಗಳಿಂದ ಭಜನೆ ನೆರವೇರಿತು. ಗ್ರಾಮದ ಅಗಸೆ ಬಾಗಿಲಿನವರೆಗೂ ರಥೋತ್ಸವ ನಡೆಯಿತು. ನಂತರ ಅನ್ನ ಸಂಂತರ್ಪಣೆ ಕಾರ್ಯಕ್ರಮಗಳು ನಡೆದವು. ಆರ್ಯವೈಶ್ಯ ಸಮಾಜ ಸೇರಿದಂತೆ ಇನ್ನಿತರ ಸಂಘ-ಸಂಸ್ಥೆಗಳಿಂದ ಭಕ್ತರಿಗೆ ಪಾನಕ, ಮಜ್ಜಿಗೆ, ಪ್ರಸಾದ ಸೇವೆ ವಿತರಣೆ ನಡೆಯಿತು.
    ಸುಣ್ಣದಹಳ್ಳಿ, ಮಾರುತಿ ನಗರ, ಮೊಸರಹಳ್ಳಿ, ತಾಷ್ಕೆಂಟ್‌ನಗರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಹಾಗೂ ನಗರ ಪ್ರದೇಶದ ಸಾವಿರಾರು ಭಕ್ತಾದಿಗಳು, ಗಣ್ಯರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.


ಭದ್ರಾವತಿ ತಾಲೂಕಿನ ಪುರಾಣ ಪ್ರಸಿದ್ದ ಸುಣ್ಣದಹಳ್ಳಿ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವದಲ್ಲಿ ಆರ್ಯವೈಶ್ಯ ಸಮಾಜ ಸೇರಿದಂತೆ ಇನ್ನಿತರ ಸಂಘ-ಸಂಸ್ಥೆಗಳಿಂದ ಭಕ್ತರಿಗೆ ಪಾನಕ, ಮಜ್ಜಿಗೆ, ಪ್ರಸಾದ ಸೇವೆ ವಿತರಣೆ ನಡೆಯಿತು.