Monday, March 28, 2022

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಮೊದಲ ದಿನ ೪೩೭೭ ವಿದ್ಯಾರ್ಥಿಗಳು ಹಾಜರು, ೧೧೬ ವಿದ್ಯಾರ್ಥಿಗಳು ಗೈರು

    

ಭದ್ರಾವತಿ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮೊದಲ ದಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಆಗಮಿಸಿದ್ದ ವಿದ್ಯಾರ್ಥಿಗಳು.
    ಭದ್ರಾವತಿ, ಮಾ. ೨೮: ತಾಲೂಕಿನಲ್ಲಿ ಮೊದಲ ದಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಶಸ್ವಿಯಾಗಿ ನಡೆದಿದ್ದು, ೪೩೭೭ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ತಿಳಿಸಿದರು.
    ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆ ನಡೆದಿದ್ದು, ಒಟ್ಟು ೪೪೯೩ ವಿದ್ಯಾರ್ಥಿಗಳ ಪೈಕಿ ೪೩೭೭ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ೧೧೬ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
    ೪೩೬೨ ವಿದ್ಯಾರ್ಥಿಗಳು ಮೊದಲ ಬಾರಿಗೆ  ಹಾಗು ೧೫ ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆದಿದ್ದು, ವಿಶೇಷ ಕೊಠಡಿಯಲ್ಲಿ ಓರ್ವ ವಿದ್ಯಾರ್ಥಿ ಪರೀಕ್ಷೆಗೆ ಹಾಜರಾಗುವ ಮೂಲಕ ಯಾವುದೇ ಗೊಂದಲಗಳು ಇಲ್ಲದೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಒಟ್ಟು ೧೬ ಪರೀಕ್ಷಾ ಕೇಂದ್ರಗಳ ಪೈಕಿ ಪೂರ್ಣಪ್ರಜಾ ವಿದ್ಯಾಸಂಸ್ಥೆಯಲ್ಲಿ ೧ ಖಾಸಗಿ ಖಾಸಗಿ ಪರೀಕ್ಷಾ ಕೇಂದ್ರ ತೆರೆಯಲಾಗಿದೆ.     ಪರೀಕ್ಷಾ ಕೇಂದ್ರಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರನ್ನೊಳಗೊಂಡ ತಂಡ ಸಹ ಭೇಟಿ ನೀಡಿ ಪರಿಶೀಲನೆ ನಡೆಸಿತು. ಹಿಜಾಬ್ ಸಂಬಂಧ ಸಹ ಯಾವುದೇ ಸಮಸ್ಯೆಗಳು ಕಂಡು ಬಂದಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
    ನಿರ್ಭೀತಿಯಿಂದ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು:
    ಕಳೆದ ೨ ವರ್ಷಗಳಿಂದ ಕೋವಿಡ್-೧೯ರ ಪರಿಣಾಮ ಈ ಹಿಂದೆ ವಿದ್ಯಾರ್ಥಿಗಳು ಸೋಂಕು ಹರಡುವ ಭಯಭೀತಿಯಲ್ಲಿ ಪರೀಕ್ಷೆ ಎದುರಿಸಿದ್ದರು. ಆದರೆ ಈ ಬಾರಿ ಯಾವುದೇ ಭಯವಿಲ್ಲದೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವ ಮೂಲಕ ಗಮನ ಸೆಳೆದರು. ಆದರೂ ಮುನ್ನಚ್ಚರಿಕೆ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಬಳಿ ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಜರಿದ್ದು, ಕೋವಿಡ್ ಕುರಿತು ಜಾಗೃತಿ ಮೂಡಿಸಿದರು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ಸರ್.ಎಂ.ವಿ ಸರ್ಕಾರಿ ಕಾಲೇಜಿನಲ್ಲಿ ಉಚಿತ ರಕ್ತ ಗುಂಪು, ಆರೋಗ್ಯ ತಪಾಸಣೆ ಶಿಬಿರ

೪೧ ಯೂನಿಟ್ ರಕ್ತ ಸಂಗ್ರಹ, ೩೦೦ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ

ಭದ್ರಾವತಿ ನ್ಯೂಟೌನ್ ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು, ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಘಟಕ-೧ ಮತ್ತು ೨, ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ರಕ್ತನಿಧಿ ವಿಭಾಗ ಸಹಯೋಗದೊಂದಿಗೆ ಸೋಮವಾರ ಹಮ್ಮಿಕೊಳ್ಳಲಾಗಿದ್ದ ರಕ್ತದಾನ, ಉಚಿತ ರಕ್ತ ಗುಂಪು ತಪಾಸಣೆ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಜಿ ಉಮಾಶಂಕರ್ ಉದ್ಘಾಟಿಸಿದರು.
    ಭದ್ರಾವತಿ, ಮಾ. ೨೮: ನ್ಯೂಟೌನ್ ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು, ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಘಟಕ-೧ ಮತ್ತು ೨, ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ರಕ್ತನಿಧಿ ವಿಭಾಗ ಸಹಯೋಗದೊಂದಿಗೆ ಸೋಮವಾರ ರಕ್ತದಾನ, ಉಚಿತ ರಕ್ತ ಗುಂಪು ತಪಾಸಣೆ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
    ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಜಿ ಉಮಾಶಂಕರ್ ಶಿಬಿರ ಉದ್ಘಾಟಿಸಿದರು. ಪ್ರಾಧ್ಯಾಪಕರಾದ ಡಾ. ಟಿ. ಮಂಜುನಾಥ್, ಡಾ. ಎಸ್. ಧನಂಜಯ, ಎನ್‌ಸಿಸಿ ಸಂಚಾಲಕ ಡಾ. ಸಕ್ರಿನಾಯ್ಕ್, ಯುವ ರೆಡ್ ಕ್ರಾಸ್ ಘಟಕದ ಸಂಚಾಲಕ ಪ್ರೊ. ಆರ್. ವೆಂಕಟೇಶ್, ರಾಷ್ಟ್ರೀಯ ಸೇವಾ ಯೋಜನೆ ಘಟಕ-೧ರ ಕಾರ್ಯಕ್ರಮಾಧಿಕಾರಿ ಡಾ. ಆರ್. ಸೀಮಾ, ಘಟಕ-೨ರ ಕಾರ್ಯಕ್ರಮಮಾಧಿಕಾರಿ ಪ್ರೊ. ಬಿ. ಗುರುಪ್ರಸಾದ್, ರೋವರ್‍ಸ್ ಲೀಡರ್ ಪ್ರೊ. ಎಸ್. ವರದರಾಜು, ಸುಬ್ಬಯ್ಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ವೈದ್ಯರಾದ ಡಾ. ವಿನೂತ, ಡಾ. ಸುಮಾ, ಡಾ. ನಳಿನಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಶಿಬಿರದಲ್ಲಿ ಸುಮಾರು ೪೧ ಯೂನಿಟ್ ರಕ್ತ ಸಂಗ್ರಹಿಸಲಾಗಿದ್ದು, ಸುಮಾರು ೩೦೦ ವಿದ್ಯಾರ್ಥಿಗಳು ಆರೋಗ್ಯ ತಪಾಸಣೆಯ ಸದುಪಯೋಗ ಪಡೆದುಕೊಂಡರು.

ನಗರಸಭೆ ನಿವೃತ್ತ ಆರೋಗ್ಯ ನಿರೀಕ್ಷಕ ರೇವಣ್ಣ ನಿಧನ

ಎಚ್. ರೇವಣ್ಣ
    ಭದ್ರಾವತಿ, ಮಾ. ೨೮: ನಗರಸಭೆ ನಿವೃತ್ತ ಆರೋಗ್ಯ ನಿರೀಕ್ಷಕ, ಕೇಶವಪುರ ಬಡಾವಣೆ ನಿವಾಸಿ ಎಚ್. ರೇವಣ್ಣ(೬೩) ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು.
    ಪತ್ನಿ, ಇಬ್ಬರು ಗಂಡು, ಓರ್ವ ಹೆಣ್ಣು ಮಕ್ಕಳನ್ನು ಹೊಂದಿದ್ದರು. ರೇವಣ್ಣನವರು ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದು ಮಾದರಿಯಾಗಿದ್ದಾರೆ. ಇವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್, ಚಿಕ್ಕಮಗಳೂರು ಯೋಜನಾ ನಿರ್ದೇಶಕ ಮನೋಹರ್, ನಗರಸಭೆ ಪೌರಾಯುಕ್ತ ಕೆ. ಪರಮೇಶ್ ಹಾಗು ಸಿಬ್ಬಂದಿ ವರ್ಗದವರು ಮತ್ತು ಪೌರಕಾರ್ಮಿಕರು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.

Sunday, March 27, 2022

ಶ್ರೀ ಕೈವಾರ ಸದ್ಗುರು ಶ್ರೀ ಯೋಗಿನಾರೇಯಣ ತಾತಯ್ಯನವರ ೨೯೬ನೇ ಜಯಂತ್ಯೋತ್ಸವ

ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಭಾನುವಾರ ಮೊದಲ ಬಾರಿಗೆ ಶ್ರೀ ಕೈವಾರ ಸದ್ಗುರು ಶ್ರೀ ಯೋಗಿನಾರೇಯಣ ತಾತಯ್ಯನವರ ೨೯೬ನೇ ಜಯಂತ್ಯೋತ್ಸವ ಆಚರಿಸಲಾಯಿತು.

    ಭದ್ರಾವತಿ, ಮಾ. ೨೭: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಭಾನುವಾರ ಮೊದಲ ಬಾರಿಗೆ ಶ್ರೀ ಕೈವಾರ ಸದ್ಗುರು ಶ್ರೀ ಯೋಗಿನಾರೇಯಣ ತಾತಯ್ಯನವರ ೨೯೬ನೇ ಜಯಂತ್ಯೋತ್ಸವ ಆಚರಿಸಲಾಯಿತು.
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಆರ್. ಪ್ರದೀಪ್ ಮಾತನಾಡಿ, ಶ್ರೀ ಯೋಗಿನಾರೇಯಣ ತಾತಯ್ಯನವರ ಸಂದೇಶಗಳು ಇಂದಿನ ಸಮಾಜಕ್ಕೆ ಪ್ರಸ್ತುತವಾಗಿವೆ ಎಂದರು.
    ಬಲಿಜ ಸಮಾಜದ ಗೌರವಾಧ್ಯಕ್ಷ ಸುಬ್ರಮಣಿ, ಅಧ್ಯಕ್ಷ ಸಂಜೀವ ಮೂರ್ತಿ, ಮಹಿಳಾ ಘಟಕದ ಅಧ್ಯಕ್ಷೆ ಶಾಂತಮ್ಮ ಕುಮಾರಸ್ವಾಮಿ, ವೈ.ಎಸ್ ರಾಮಮೂರ್ತಿ,  ಹಿಂದುಳಿದ ವರ್ಗಗಳ ತಾಲೂಕು ಗ್ರಾಮಾಂತರ ಉಪಾಧ್ಯಕ್ಷ ಟಿ.ಡಿ ಶಶಿಕುಮಾರ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗಂಗಾಧರ್, ಸತೀಶ್, ಶಿವಕುಮಾರ್ ಮತ್ತು ತಾಲೂಕು ಕಛೇರಿ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಭೂಮಿಕಾ ವೇದಿಕೆಯಿಂದ ವಿನೂತನ ಕಾರ್ಯಕ್ರಮ : ಜಾದೂ ಮೂಲಕ ವಿಸ್ಮಯಗೊಳಿಸಿದ ಎಂ.ಡಿ ಕೌಶಿಕ್

ಭದ್ರಾವತಿಯಲ್ಲಿ ಭೂಮಿಕಾ ವೇದಿಕೆ ವತಿಯಿಂದ ತರೀಕೆರೆ ರಸ್ತೆಯಲ್ಲಿರುವ ನಯನ ಆಸ್ಪತ್ರೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿನೂತನ ಕಾರ್ಯಕ್ರಮದಲ್ಲಿ ಚಲನಚಿತ್ರ ನಟ, ನಿರ್ದೇಶಕ, ಜಾದು ಮಾಂತ್ರಿಕ ಎಂ.ಡಿ ಕೌಶಿಕ್ ವಿಭಿನ್ನ ರೀತಿಯ ಜಾದು ಮೂಲಕ ಎಲ್ಲರನ್ನು ವಿಸ್ಮಯಗೊಳಿಸಿದರು.  
    ಭದ್ರಾವತಿ, ಮಾ. ೨೭: ನಾಡು-ನುಡಿ ಬಿಂಬಿಸುವ ನಗರದ ಭೂಮಿಕಾ ವೇದಿಕೆ ವತಿಯಿಂದ ಭಾನುವಾರ ಜೀವನವೆಂಬ ಮಾಂತ್ರಿಕತೆಯಲ್ಲಿ ಹಾಸ್ಯ/ಅಪಹಾಸ್ಯ ಎಂಬ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿತ್ತು.
    ಭೂಮಿಕಾ ವೇದಿಕೆ ಅಧ್ಯಕ್ಷ ಡಾ. ಕೃಷ್ಣ ಎಸ್. ಭಟ್ ಮಾತನಾಡಿ, ಕಳೆದ ೨ ವರ್ಷಗಳಿಂದ ಕೋವಿಡ್-೧೯ರ ಪರಿಣಾಮ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಲು ಸಾಧ್ಯವಾಗಲಿಲ್ಲ. ಕಳೆದ ೩-೪ ತಿಂಗಳಿನಿಂದ ವೇದಿಕೆ ವತಿಯಿಂದ ಪುನಃ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಇದೀಗ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.
    ಚಲನಚಿತ್ರ ನಟ, ನಿರ್ದೇಶಕ, ಜಾದು ಮಾಂತ್ರಿಕ ಎಂ.ಡಿ ಕೌಶಿಕ್ ವಿಭಿನ್ನ ರೀತಿಯ ಜಾದು ಮೂಲಕ ಎಲ್ಲರನ್ನು ವಿಸ್ಮಯಗೊಳಿಸಿದರು.  ವೇದಿಕೆ ಪ್ರಧಾನ ಕಾರ್ಯದರ್ಶಿ ಅಪರಂಜಿ ಶಿವರಾಜ್ ಉಪಸ್ಥಿತರಿದ್ದರು. ನಾಗರಾಜ್ ಸ್ವಾಗಸಿದರು. ಶಾರದ ಶ್ರೀನಿವಾಸ್ ನಿರೂಪಿಸಿದರು.

ಜನಮೆಚ್ಚಿದ ಅಧಿಕಾರಿ ಮನೋಹರ್ ಭವಿಷ್ಯದ ರತ್ನ : ಪ್ರೊ. ಡಾ.ವಿ ಸುದೇಶ್

ಭದ್ರಾವತಿ ಸಿದ್ಧರೂಢ ನಗರದ ಶ್ರೀ ಶಂಕರ ಮಠದ ಶ್ರೀ ಭಾರತೀತೀರ್ಥ ಸಮುದಾಯ ಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ರಂಗಕರ್ಮಿ-ಕಿರಿತೆರೆ ಕಲಾವಿದ ಅಪರಂಜಿ ಶಿವರಾಜ್‌ರವರ 'ನಾ ಕಂಡ ಪೌರಾಯುಕ್ತರು' ಅಭಿನಂದನ ಕೃತಿ ಬಿಡುಗಡೆ ಸಮಾರಂಭವನ್ನು ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಉದ್ಘಾಟಿಸಿದರು.
     ಭದ್ರಾವತಿ, ಮಾ. ೨೭: ಸರ್ಕಾರಿ ಹುದ್ದೆಯಲ್ಲಿರುವವರು ಜನರ ಮನಸ್ಸಿನಲ್ಲಿ ಉಳಿದುಕೊಳ್ಳುವುದು ಬಹಳ ವಿರಳ. ಪೌರಾಯುಕ್ತರಾಗಿ ಜನರು ಮೆಚ್ಚುವ ರೀತಿಯಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿರುವ ಮನೋಹರ್‌ರವರು ದೇಶದ ಭವಿಷ್ಯದ ರತ್ನವಾಗಿ ಉಳಿದುಕೊಳ್ಳುವ ವಿಶ್ವಾಸವಿದೆ ಎಂದು ಬೆಂಗಳೂರು ವಿಶ್ವ ವಿದ್ಯಾಲಯದ ಕಾನೂನು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಡಾ. ವಿ ಸುದೇಶ್ ಹೇಳಿದರು.
    ಅವರು ಭಾನುವಾರ ಸಿದ್ಧರೂಢ ನಗರದ ಶ್ರೀ ಶಂಕರ ಮಠದ ಶ್ರೀ ಭಾರತೀತೀರ್ಥ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ರಂಗಕರ್ಮಿ-ಕಿರಿತೆರೆ ಕಲಾವಿದ ಅಪರಂಜಿ ಶಿವರಾಜ್‌ರವರ 'ನಾ ಕಂಡ ಪೌರಾಯುಕ್ತರು' ಅಭಿನಂದನ ಕೃತಿ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
    ಮನೋಹರ್ ಅವರ ವಿದ್ಯಾರ್ಥಿ ಜೀವನವನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ಭದ್ರಾವತಿಯಲ್ಲಿ ಪೌರಾಯುಕ್ತರಾಗಿ ಜನ ಮೆಚ್ಚುವ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿ ಅವರ ಮನಸ್ಸಿನಲ್ಲಿ ಉಳಿದುಕೊಂಡಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.
ಬಹುತೇಕ ಅಧಿಕಾರಿಗಳು ಸರ್ಕಾರಿ ಹುದ್ದೆಯಲ್ಲಿ ವೈಯಕ್ತಿಕ ಲಾಭದ ನಿರೀಕ್ಷೆಯನ್ನು ಹೊಂದಿರುತ್ತಾರೆ. ಆದರೆ ಮನೋಹರ್‌ರವರು ಹುದ್ದೆಯನ್ನು ವೈಯಕ್ತಿಕ ಹಿತಾಸಕ್ತಿಗೆ ಬಳಸಿಕೊಳ್ಳದೆ ಕರ್ತವ್ಯವನ್ನು ಸೇವಾ ಮನೋಭಾವದೊಂದಿಗೆ ನಿರ್ವಹಿಸುತ್ತಿರುವುದು ಅಭಿನಂದನಾರ್ಹವಾಗಿದೆ. ಇವರು ಕೇವಲ ಭದ್ರಾವತಿ ನಗರದ ಜನರಿಗೆ ಮಾತ್ರ ರತ್ನವಾಗಿ ಉಳಿದಿಲ್ಲ ದೇಶದ ರತ್ನವಾಗಿ ಉಳಿದುಕೊಂಡಿದ್ದಾರೆ ಎಂದರು.
    ಚಲನಚಿತ್ರ ನಟಿ, ಮಿಸ್ ಸುಪ್ರ ನ್ಯಾಷನಲ್ ೨೦೧೪ರ ವಿಜೇತೆ ಆಶಾ ಭಟ್ ಮಾತನಾಡಿ, ನಮ್ಮೆಲ್ಲರ ಸಾಧನೆಗೆ ನಮ್ಮೂರಿನ ಕೊಡುಗೆ ಅಪಾರವಾಗಿದೆ. ಇಲ್ಲಿನ ಜನರು ಕಲಾವಿದರು ಸೇರಿದಂತೆ ಎಲ್ಲಾ ಕ್ಷೇತ್ರದವರಿಗೂ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆ. ಉತ್ತಮ ಅಧಿಕಾರಿಯಾಗಿರುವ ಮನೋಹರ್‌ರವರು ನಮ್ಮೂರಿನಲ್ಲಿ ಸೇವೆ ಸಲ್ಲಿಸಿರುವುದು ನಮ್ಮೆಲ್ಲರ ಹೆಮ್ಮೆಯ ವಿಚಾರವಾಗಿದೆ ಎಂದರು.
    ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಿ ಧನಂಜಯ ಮಾತನಾಡಿ, ಪ್ರತಿಯೊಬ್ಬರು ತಮ್ಮ ಬದುಕಿನಲ್ಲಿ ಉತ್ತಮ ಗುಣಗಳನ್ನು ಮೈಗೂಡಿಸಿಕೊಂಡು ಮುನ್ನಡೆದಾಗ ಮಾತ್ರ ಯಾವುದೇ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ. ಆ ಮೂಲಕ ಜನರ ಮನಸ್ಸಿನಲ್ಲಿ ಉಳಿದುಕೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ಮನೋಹರ್ ಸಹ ಒಬ್ಬರಾಗಿದ್ದು, ಸರ್ಕಾರಿ ಅಧಿಕಾರಿಯಾಗಿ ಕರ್ತವ್ಯದಲ್ಲಿ ನಿಷ್ಠೆ ತೋರಿಸುವ ಮೂಲಕ ಎಲ್ಲರ ಮನಸ್ಸಿನಲ್ಲಿ ಉಳಿದುಕೊಂಡಿದ್ದಾರೆ ಎಂದರು.
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಮಾತನಾಡಿ, ಮನೋಹರ್ ಕರ್ತವ್ಯಕ್ಕೆ ಹೆಚ್ಚಿನ ಮಾನ್ಯತೆ ನೀಡಿದವರು. ಕೆಳವರ್ಗದ ಜನರ ನೋವುಗಳನ್ನು ಅರಿತುಕೊಂಡವರು. ಅವರೊಂದಿಗೆ ನಾನು ಸಹ ಒಬ್ಬರು ಎಂಬಂತೆ ಕಾಯಕದಲ್ಲಿ ತೊಡಗಿಸಿಕೊಂಡವರು. ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದವರು. ಇಂತಹ ಅಧಿಕಾರಿಗಳು ಅಪರೂಪ ಎಂದರು.
    ರಂಗಕರ್ಮಿ-ಕಿರಿತೆರೆ ಕಲಾವಿದ ಅಪರಂಜಿ ಶಿವರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, 'ನಾ ಕಂಡ ಪೌರಾಯುಕ್ತರು' ಕೃತಿ ರಚಿಸಲು ಉಂಟಾದ ಪ್ರೇರಣೆಗಳು, ಆಶಯಗಳನ್ನು ವಿವರಿಸಿದರು.
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಚಲನಚಿತ್ರ ನಟ, ನಿರ್ದೇಶಕ, ಜಾದೂ ಮಾಂತ್ರಿಕ ಎಂ.ಡಿ ಕೌಡಿಕ್ ವಿಶಿಷ್ಟವಾಗಿ ಜಾದೂ ಮೂಲಕ ಉದ್ಘಾಟನೆ ನೆರವೇರಿಸಿಕೊಟ್ಟರು.
    ಶಾಶ್ವತಿ ಮಹಿಳಾ ಸಮಾಜದ ಅಧ್ಯಕ್ಷೆ ರೂಪರಾವ್ ಸ್ವಾಗತಿಸಿದರು. ಮಮತಾ ಬಿ. ನವೀನ್ ನಿರೂಪಿಸಿದರು.

Saturday, March 26, 2022

ನೆನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಕಾಮಗಾರಿ ತಕ್ಷಣ ಆರಂಭಿಸಿ : ಪೂರ್ವಭಾವಿ ಸಭೆಯಲ್ಲಿ ಒತ್ತಾಯ

ಭದ್ರಾವತಿಯಲ್ಲಿ ತಹಸೀಲ್ದಾರ್ ಕಛೇರಿ ಸಭಾಂಗಣದಲ್ಲಿ ಡಾ. ಬಾಬು ಜಗಜೀವನ್ ರಾಮ್, ಕೈವಾರ ತಾತಯ್ಯ ಹಾಗು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಜನ್ಮ ದಿನಾಚರಣೆ ಅಂಗವಾಗಿ ತಹಸೀಲ್ದಾರ್ ಆರ್. ಪ್ರದೀಪ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
    ಭದ್ರಾವತಿ, ಮಾ. ೨೬: ಹಳೇನಗರದ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಛೇರಿ(ಬಿಆರ್‌ಸಿ) ಸಮೀಪ ನಿರ್ಮಾಣಗೊಳ್ಳುತ್ತಿರುವ ಅಂಬೇಡ್ಕರ್  ಭವನ ಕಾಮಗಾರಿ ತಕ್ಷಣ ಪೂರ್ಣಗೊಳಿಸುವಂತೆ ದಲಿತ ಸಂಘಟನೆಗಳು ತಾಲೂಕು ಆಡಳಿತಕ್ಕೆ ಒತ್ತಾಯಿಸಿವೆ.
    ತಹಸೀಲ್ದಾರ್ ಕಛೇರಿ ಸಭಾಂಗಣದಲ್ಲಿ ಡಾ. ಬಾಬು ಜಗಜೀವನ್ ರಾಮ್, ಕೈವಾರ ತಾತಯ್ಯ ಹಾಗು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಜನ್ಮ ದಿನಾಚರಣೆ ಅಂಗವಾಗಿ ತಹಸೀಲ್ದಾರ್ ಆರ್. ಪ್ರದೀಪ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದ ದಲಿತ ಸಂಘಟನೆಗಳ ಪ್ರಮುಖರು ಮಾತನಾಡಿ, ನೆನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನ ಕಾಮಗಾರಿಗೆ ಅಗತ್ಯವಿರುವ ೧.೫ ಕೋಟಿ ರು. ಹೊಂದಿಸಿಕೊಂಡು ತಕ್ಷಣ ಮುಕ್ತಾಯಗೊಳಿಸುವುದು. ಜೊತೆಗೆ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ನೂತನ ಅಂಬೇಡ್ಕರ್ ಪ್ರತಿಮೆ ತಕ್ಷಣ ಪ್ರತಿಷ್ಠಾಪಿಸಬೇಕೆಂದು ಆಗ್ರಹಿಸಿದರು.
    ಸಭೆಯಲ್ಲಿ ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಕೆ. ಪರಮೇಶ್, ಸದಸ್ಯ ಬಿ.ಕೆ ಮೋಹನ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್, ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತಾ, ದಲಿತ ಸಂಘಟನೆಗಳ ಮುಖಂಡರಾದ ಶಿವಬಸಪ್ಪ, ಕೆ. ರಂಗನಾಥ್, ಈಶ್ವರಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.