ಸೋಮವಾರ, ಏಪ್ರಿಲ್ 18, 2022

ಜನ್ನಾಪುರ ಕೆರೆ ಸೆರ್ವೆ ನಡೆಸಿ, ಹೂಳು ತೆಗೆದು ಅಭಿವೃದ್ಧಿಗೊಳಿಸಲು ತೀರ್ಮಾನ

ನಗರಸಭೆ ಸಭಾಂಗಣದಲ್ಲಿ ತಹಸೀಲ್ದಾರ್ ನೇತೃತ್ವದಲ್ಲಿ ನಡೆದ ಸಭೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಸರ್ವೆ ನಂ.೭೦ರ ೪೫ ಎಕರೆ ೨೦ ಗುಂಟೆ ಸರ್ಕಾರಿ ಕೆರೆ ಅನಧಿಕೃತ ಒತ್ತುವರಿ ತೆರವು ಕಾರ್ಯಾಚರಣೆ ಹಾಗು ಹೂಳು ತೆಗೆದು ಸ್ವಚ್ಛಗೊಳಿಸುವ ಸಂಬಂಧ ಸೋಮವಾರ ತಹಸಿಲ್ದಾರ್ ಆರ್. ಪ್ರದೀಪ್ ನೇತೃತ್ವದಲ್ಲಿ ನಗರಸಭೆ ಸಭಾಂಗಣದಲ್ಲಿ ಸಭೆ ನಡೆಯಿತು.
    ಭದ್ರಾವತಿ : ನಗರಸಭೆ ವ್ಯಾಪ್ತಿಯ ಜನ್ನಾಪುರ ಸರ್ವೆ ನಂ.೭೦ರ ೪೫ ಎಕರೆ ೨೦ ಗುಂಟೆ ಸರ್ಕಾರಿ ಕೆರೆ ಅನಧಿಕೃತ ಒತ್ತುವರಿ ತೆರವು ಕಾರ್ಯಾಚರಣೆ ಹಾಗು ಹೂಳು ತೆಗೆದು ಸ್ವಚ್ಛಗೊಳಿಸುವ ಸಂಬಂಧ ಸೋಮವಾರ ತಹಸಿಲ್ದಾರ್ ಆರ್. ಪ್ರದೀಪ್ ನೇತೃತ್ವದಲ್ಲಿ ನಗರಸಭೆ ಸಭಾಂಗಣದಲ್ಲಿ ಸಭೆ ನಡೆಯಿತು.
    ಸಭೆಯಲ್ಲಿ ಪಾಲ್ಗೊಂಡಿದ್ದ ಸಿದ್ದಾಪುರ-ಜನ್ನಾಪುರ ಕೆರೆ ಸಂರಕ್ಷಣಾ ಸಮಿತಿ ಪದಾಧಿಕಾರಿಗಳು ಮಾತನಾಡಿ, ಕೆರೆ ಒತ್ತುವರಿ ತೆರವು ಹಾಗು ಅಭಿವೃದ್ಧಿಗೊಳಿಸುವ ಸಂಬಂಧ ಈಗಾಗಲೇ ಹೋರಾಟ ನಡೆಸಿ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಲಾಗಿದೆ. ತಾಲೂಕು ಆಡಳಿತ ಕೈಗೊಂಡಿರುವ ಕ್ರಮದ ಬಗ್ಗೆ ಸ್ಪಷ್ಟನೆ ನೀಡಬೇಕಾಗಿದೆ ಎಂದರು.
    ಇದಕ್ಕೆ ಪ್ರತಿಕ್ರಿಯಿಸಿದ ತಹಸೀಲ್ದಾರ್ ಆರ್. ಪ್ರದೀಪ್, ಕೆರೆಯ ಒಟ್ಟು ವಿಸ್ತೀರ್ಣದಲ್ಲಿ ಜಿಲ್ಲಾಧಿಕಾರಿಗಳು ತಮ್ಮ ವಿಶೇಷ ಅಧಿಕಾರ ಬಳಸಿಕೊಂಡು ಕಾನೂನಿನ ಪ್ರಕಾರ ೪ ಎಕರೆ ೩೬ ಗುಂಟೆ ಜಮೀನು ಹಾಗು ೦೪ ಗುಂಟೆ ಖರಾಬು ಸೇರಿ ಒಟ್ಟು ೫ ಎಕರೆ ಕೆರೆಯಿಂದ ಬೇರ್ಪಡಿಸಿದ್ದಾರೆ. ಗ್ರಾಮ ನಕಾಶೆ ಪ್ರಕಾರ ಪ್ರಸ್ತುತ ಕೆರೆಯ ವಿಸ್ತ್ರೀರ್ಣ ೪೫ ಎಕರೆ ೨೦ ಗುಂಟೆಯಾಗಿದೆ. ಈ ಹಿನ್ನಲೆಯಲ್ಲಿ ನಿಗದಿಯಾಗಿರುವ ವಿಸ್ತೀರ್ಣದಂತೆ ಸರ್ವೆ ನಡೆಸಿ ಬೌಂಡರಿ ಗುರುತಿಸಿ ಅಭಿವೃದ್ಧಿಗೊಳಿಸಲು ಶಿವಮೊಗ್ಗ-ಭದ್ರಾವತಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲಾಗಿದೆ ಎಂದರು.
    ಕೆರೆ ಸಮೀಪದ ರೈತರು ಹಾಗು ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಮಾತನಾಡಿ, ಮಲಮೂತ್ರ, ಕೊಳಚೆ  ನೀರು ಹಾಗು ಇನ್ನಿತರ ತ್ಯಾಜ್ಯಗಳಿಂದ  ಕೆರೆ ಸಂಪೂರ್ಣವಾಗಿ ಕಲ್ಮಶಗೊಂಡಿದೆ. ದುರ್ವಾಸನೆ ಬೀರುತ್ತಿದ್ದು, ರೋಗರುಜಿನಗಳು ಹರಡುತ್ತಿವೆ. ಅಲ್ಲದೆ ಸಮೀಪದ ರೈತರಲ್ಲಿ ನೀರಿನಿಂದ ದುಷ್ಪರಿಣಾ ಉಂಟಾಗುತ್ತಿದೆ. ಈ ಹಿನ್ನಲೆಯಲ್ಲಿ ಹೂಳು ತೆಗೆದು ನೀರು ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಮೊದಲು ಕೆರೆಯ ಸಮೀಪದಲ್ಲಿನ ನಿವಾಸಿಗಳು, ರೈತರ ವಾಸ್ತವ ಸ್ಥಿತಿಗಳನ್ನು ಅರಿತುಕೊಳ್ಳಿ. ಕೆರೆಯ ಸಂಪೂರ್ಣ ಸರ್ವೆ ನಡೆಸಿ ನೂರಾರು ವರ್ಷಗಳಿಂದ ಮಲಮೂತ್ರಗಳಿಂದ ತುಂಬಿಕೊಂಡಿರುವ ಹೂಳು ತೆಗೆಯಲು ಹಾಗು ಒತ್ತುವರಿ ಕಾರ್ಯಾಚರಣೆ ನಡೆಸಲು ಕ್ರಮ ಕೈಗೊಳ್ಳಿ. ಕೆರೆಯ ನೀರು ಶುದ್ಧೀಕರಣಗೊಳಿಸಿ, ದುವಾರ್ಸನೆ, ರೋಗರುಜಿನಗಳಿಂದ ಮುಕ್ತಿಗೊಳಿಸಿ  ಆ ನಂತರ ದೋಣಿ ವಿಹಾರ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಿ.
                                                               - ಬಾಲಕೃಷ್ಣ, ಅಧ್ಯಕ್ಷ, ಸಾರ್ವಜನಿಕ ಕುರಿತುಕೊರತೆ ಹೋರಾಟ ಸಮಿತಿ.

        ಇದಕ್ಕೆ ಪ್ರತಿಕ್ರಿಯಿಸಿದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು, ಕೆರೆ ಅಭಿವೃದ್ಧಿಗೊಳಿಸುವ ಸಂಬಂಧ ೨೦೧೬ರಲ್ಲಿ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಇಲಾಖೆಗೆ ನಿರಾಪೇಕ್ಷಣಾ ಪತ್ರ ಬರೆದು ಕೈಗೊಳ್ಳಬೇಕಾಗಿರುವ ಕಾರ್ಯಸೂಚಿಗಳ ಬಗ್ಗೆ ತಿಳಿಸಿದ್ದರು. ಇದರಿಂದಾಗಿ ಕಾಮಗಾರಿ ಡಿಪಿಆರ್ ಸಿದ್ದಪಡಿಸುವಾಗ ಹೂಳು ತೆಗೆಯುವ ಪ್ರಸ್ತಾಪ ಸೇರ್ಪಡೆಯಾಗಿಲ್ಲ ಎಂದು ಸ್ಪಷ್ಟಪಡಿಸಿ ಆದರೂ ಬೇಡಿಕೆಯಂತೆ ಲಭ್ಯವಾಗುವ ಅನುದಾನ ಬಳಸಿಕೊಂಡು ಸಾಧ್ಯವಾದಷ್ಟು ಹೂಳು ತೆಗೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕೆರೆ ಸಂಪೂರ್ಣವಾಗಿ ಕಲ್ಮಶಗೊಂಡಿದ್ದರೂ ಮೀನು ಸಾಕಾಣಿಕೆಗೆ ಅವಕಾಶ ನೀಡಲಾಗಿದ್ದು, ಕೆರೆಯ ಮೀನುಗಳನ್ನು ತಿಂದವರು ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ತಕ್ಷಣ ಮೀನು ಸಾಕಾಣಿಕೆಗೆ ತಡೆ ನೀಡಬೇಕು. ಜೊತೆಗೆ ಕೆರೆಯಲ್ಲಿರುವ ಹೂಳು ತೆಗೆಯಲು ನಗರಸಭೆ ಹಿರಿಯ ಮಾಜಿ ಸದಸ್ಯ ಬಾಲಕೃಷ್ಣ ನೇತೃತ್ವದಲ್ಲಿ ಕೆರೆ ಸಮೀಪದಲ್ಲಿರುವ ರೈತರ ಸಮಿತಿ ರಚನೆ ಮಾಡಬೇಕು.
                                                                 - ಆರ್. ವೇಣುಗೋಪಾಲ್, ಮಾಜಿ ಅಧ್ಯಕ್ಷ, ಸ್ಥಾಯಿ ಸಮಿತಿ, ನಗರಸಭೆ.

    ಸಭೆಯಲ್ಲಿ ಪುನಃ ಕೆರೆ ಒಟ್ಟು ವಿಸ್ತೀರ್ಣದ ಸರ್ವೆ ನಡೆಸುವಂತೆ ಆಗ್ರಹ ಕೇಳಿ ಬಂದ ಹಿನ್ನಲೆಯಲ್ಲಿ ತಾಲೂಕು ಆಡಳಿತ, ನೀರಾವರಿ ಇಲಾಖೆ ಹಾಗು ನಗರಸಭೆ ವತಿಯಿಂದ ಜಂಟಿಯಾಗಿ ಪ್ರಸ್ತುತ ನಿಗದಿಯಾಗಿರುವ ೪೫ ಎಕರೆ, ೨೦ ಗುಂಟೆ ಕೆರೆ ಸರ್ವೆ ಕಾರ್ಯ ನಡೆಸಲು ತೀರ್ಮಾನಿಸಲಾಯಿತು. ಉಳಿದಂತೆ ನಗರಸಭೆ ವತಿಯಿಂದ ಕೆರೆ ಸಮೀಪ ರಾಜಕಾಲುವೆ ನಿರ್ಮಿಸಿ ಕೆರೆಗೆ ಮಲಮೂತ್ರ, ಕೊಳಚೆ ನೀರು ಹಾಗು ಇನ್ನಿತರ ತ್ಯಾಜ್ಯ ಸೇರ್ಪಡೆಗೊಳ್ಳದಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಲಾಯಿತು.
    ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಕೆ. ಪರಮೇಶ್, ಇಂಜಿನಿಯರ್ ರಂಗಾರಾಜಪುರೆ, ಕಂದಾಯಾಧಿಕಾರಿ ರಾಜ್‌ಕುಮಾರ್, ನೀರಾ ಇಲಾಖೆ ಬಿಆರ್‌ಎಲ್‌ಬಿಸಿ ಹಾಗು ಸೂಡಾ ಅಧಿಕಾರಿಗಳು ಉಪಸ್ಥಿತರಿದ್ದರು.
    ಸಿದ್ದಾಪುರ-ಜನ್ನಾಪುರ ಕೆರೆ ಸಂರಕ್ಷಣಾ ಸಮಿತಿ ಪ್ರಮುಖರಾದ ಬಾಲಕೃಷ್ಣ, ಸುರೇಶ್, ಜಿ. ರಾಜು, ಎನ್. ರಾಮಕೃಷ್ಣ, ಕೆ. ಮಂಜುನಾಥ್, ಚನ್ನಪ್ಪ, ಎಸ್. ಮಂಜುನಾಥ್, ನಗರಸಭಾ ಸದಸ್ಯರಾದ ಆರ್. ಮೋಹನ್‌ಕುಮಾರ್, ಕಾಂತರಾಜ್, ಜಾರ್ಜ್, ರಿಯಾಜ್ ಅಹಮದ್, ಬಿ.ಟಿ ನಾಗರಾಜ್, ಲತಾ ಚಂದ್ರಶೇಖರ್ ಹಾಗು ವಿರೋಧ ಪಕ್ಷದ ನಾಯಕ ಬಸವರಾಜ ಬಿ. ಆನೇಕೊಪ್ಪ ಸೂಡಾ ಸದಸ್ಯೆ  ಹೇಮಾವತಿ ವಿಶ್ವನಾಥ್ ಹಾಗು ನಗರಸಭೆ, ತಾಲೂಕು ಕಛೇರಿ, ನೀರಾವರಿ ಇಲಾಖೆ ಅಧಿಕಾರಿಗಳು ಮತ್ತು ಇನ್ನಿತರ ಸಂಘಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.

ಭಾನುವಾರ, ಏಪ್ರಿಲ್ 17, 2022

ಏ.೧೭ರಂದು ಜನ್ನಾಪುರ ಕೆರೆ ಅಭಿವೃದ್ಧಿಪಡಿಸುವ ಸಂಬಂಧ ಸಭೆ

    ಭದ್ರಾವತಿ, ಏ. ೧೭:  ಕಸಬಾ ಹೋಬಳಿ ಜನ್ನಾಪುರ ಸರ್ವೆ ನಂ.೭೦ರ ೪೫ ಎಕರೆ ೨೦ ಗುಂಟೆ ಸರ್ಕಾರಿ ಕೆರೆ ಅನಧಿಕೃತ ಒತ್ತುವರಿ ತೆರವುಗೊಳಿಸಿ, ಸ್ವಚ್ಛಗೊಳಿಸಿ, ಅಭಿವೃದ್ಧಿಪಡಿಸುವ ಸಂಬಂಧ ಏ.೧೮ರಂದು ಬೆಳಿಗ್ಗೆ ೧೧ ಗಂಟೆಗೆ ನಗರಸಭೆ ಸಭಾಂಗಣದಲ್ಲಿ ಸಭೆ ನಡೆಯಲಿದೆ.
    ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ತಹಸೀಲ್ದಾರ್ ಆರ್. ಪ್ರದೀಪ್, ಉಪಸ್ಥಿತರಿರುವರು. ನಗರಸಭೆ, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ, ನೀರಾವರಿ ಇಲಾಖೆ ಬಿಆರ್‌ಎಲ್‌ಬಿಸಿ ಮತ್ತು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಶಿವಮೊಗ್ಗ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಕಾರುಣ್ಯ ಚಾರಿಟಬಲ್ ಟ್ರಸ್ಟ್ ಪುನರ್ವಸತಿ ಕೇಂದ್ರದ ಸ್ಥಳಾಂತರಗೊಂಡ ಕಟ್ಟಡದ ಉದ್ಘಾಟನೆ

ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಜನ್ಮದಿನಾಚರಣೆ

ಭದ್ರಾವತಿ ನಗರದ ಕಾರುಣ್ಯ ಚಾರಿಟಬಲ್ ಟ್ರಸ್ಟ್ ಪುನರ್ವಸತಿ ಕೇಂದ್ರದ ವತಿಯಿಂದ ಭಾನುವಾರ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್‌ರವರ ಜನ್ಮದಿನಾಚರಣೆ ಹಾಗು ಸ್ಥಳಾಂತರಗೊಂಡ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ನಡೆಯಿತು.
    ಭದ್ರಾವತಿ, ಏ. ೧೭: ನಗರದ ಕಾರುಣ್ಯ ಚಾರಿಟಬಲ್ ಟ್ರಸ್ಟ್ ಪುನರ್ವಸತಿ ಕೇಂದ್ರದ ವತಿಯಿಂದ ಭಾನುವಾರ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್‌ರವರ ಜನ್ಮದಿನಾಚರಣೆ ಹಾಗು ಸ್ಥಳಾಂತರಗೊಂಡ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ನಡೆಯಿತು.
    ಹಲವಾರು ವರ್ಷಗಳಿಂದ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರುಣ್ಯ ಚಾರಿಟಬಲ್ ಟ್ರಸ್ಟ್ ಪುನರ್ವಸತಿ ಕೇಂದ್ರವನ್ನು ಇದೀಗ ನಗರಸಭೆ ವ್ಯಾಪ್ತಿ ಜನ್ನಾಪುರ ಜಯಶ್ರೀ ಕಲ್ಯಾಣ ಮಂಟಪ ಸಮೀಪ  ಸ್ಥಳಾಂತರಗೊಳಿಸಿದೆ. 
    ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಸದಸ್ಯರಾದ ಬಿ.ಕೆ ಮೋಹನ್, ಟಿಪ್ಪುಸುಲ್ತಾನ್, ಜಯಶೀಲಾ, ಮಣಿ, ಅನ್ನಪೂರ್ಣ, ಕಾಂತರಾಜು, ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ, ಚಿನ್ನಯ್ಯ, ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಸುರೇಶ್, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಿ.ಸಿ ಮಾಯಣ್ಣ, ಬಿಎಸ್‌ಪಿ ತಾಲೂಕು ಅಧ್ಯಕ್ಷ ರಹಮತ್‌ಉಲ್ಲಾಖಾನ್, ರಾಜೇಂದ್ರ. ವಕೀಲರ ಸಂಘದ ಅಧ್ಯಕ್ಷ  ಕೆ.ಎನ್ ಶ್ರಿಹರ್ಷ, ವೈದ್ಯ ಡಾ. ನರೇಂದ್ರ, ಮುಖಂಡರಾದ ಸುರೇಶ್ ಸೇರಿಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.


    ಕಾರಣ್ಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಜಿ. ರಾಜು, ಉಪಾಧ್ಯಕ್ಷ ಕೆ. ನಾಗರಾಜ್, ಕಾರ್ಯಧ್ಯಕ್ಷರಾದ ಸುರೇಶ್‌ಕುಮಾರ್, ಟಿ. ಬಾಸ್ಕರ್, ಕಾರ್ಯದರ್ಶಿ ಅಂತೋಣಿ ರಾಜ್, ಖಜಾಂಚಿ ಎನ್. ನಾಗವೇಣಿ, ನಿರ್ದೇಶಕರಾದ ಯಶೋದಮ್ಮ, ಮಂಜುಳಾ, ಕಾರ್ತಿಕ್ ಮತ್ತು ಜೆ. ಕಾಂತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇಬ್ರಾಹಿಂ ಜೆಡಿಎಸ್ ಸೇರ್ಪಡೆ : ಹೆಚ್ಚಾದ ಭಿನ್ನಮತ

ಸಿ.ಎಂ ಇಬ್ರಾಹಿಂ

    * ಅನಂತಕುಮಾರ್
    ಭದ್ರಾವತಿ: ಕೇಂದ್ರ ಮಾಜಿ ಸಚಿವ ಸಿ.ಎಂ ಇಬ್ರಾಹಿಂ ಜನತಾದಳ (ಜಾತ್ಯಾತೀತ) ಪಕ್ಷಕ್ಕೆ ಸೇರ್ಪಡೆಗೊಂಡು ರಾಜ್ಯಾಧ್ಯಕ್ಷರಾಗಿ ಭಾನುವಾರ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಕ್ಷೇತ್ರದಲ್ಲಿ ರಾಜಕೀಯ ಭಿನ್ನಮತ ಮತ್ತಷ್ಟು ಸ್ಪೋಟಗೊಳ್ಳುತ್ತಿದ್ದು, ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ಶಾರದ ಅಪ್ಪಾಜಿಗೆ ಹಿನ್ನಡೆಯಾಗುವುದು ಬಹುತೇಕ ಖಚಿತವಾಗಿದೆ.
    ಈಗಾಗಲೇ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಬಹುತೇಕ ಸ್ಥಳೀಯ ಮುಖಂಡರು ಪಕ್ಷ ತೊರೆದಿದ್ದಾರೆ. ಇನ್ನೂ ಕೆಲವರು ಶಾರದ ಅಪ್ಪಾಜಿಯನ್ನು ಈಗಾಗಲೇ ಅಭ್ಯರ್ಥಿಯನ್ನಾಗಿ ಘೋಷಿಸಿದ್ದರೂ ಸಹ ಸ್ವಯಂ ಘೋಷಿತ ಅಭ್ಯರ್ಥಿಗಳಾಗಿ ಗುರುತಿಸಿಕೊಳ್ಳಲು ತೆರೆಮರೆಯಲ್ಲಿ ಯತ್ನಿಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಇದರಿಂದಾಗಿ ಶಾರದ ಅಪ್ಪಾಜಿಗೆ ಹಿನ್ನಡೆಯಾಗಲಿದೆ ಎಂಬ ಲೆಕ್ಕಾಚಾರಗಳು ನಡೆಯುತ್ತಿವೆ.
    ಅಪ್ಪಾಜಿ ಅಭಿಮಾನಿಗಳು, ಕಾರ್ಯಕರ್ತರಲ್ಲಿ ಅಸಮಾಧಾನ:
    ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಅವರೊಂದಿಗೆ ಬಹಳವರ್ಷಗಳ ಒಡನಾಟ ಹೊಂದಿದ್ದ ಹಾಗು ಆ ಮೂಲಕ ರಾಜಕೀಯದಲ್ಲಿ ನೆಲೆ ಕಂಡುಕೊಂಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ಹಾಗು ಬೆಂಬಲಿಗರು ಇತ್ತೀಚೆಗೆ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವುದು ಅಪ್ಪಾಜಿ ಅಭಿಮಾನಿಗಳು ಹಾಗು ಕಾರ್ಯಕರ್ತರಲ್ಲಿ ಅಸಮಾಧಾನವನ್ನುಂಟು ಮಾಡಿದೆ. ಈ ನಡುವೆ ಈ ಹಿಂದೆ ಅಪ್ಪಾಜಿ ಎದುರು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲು ಅನುಭವಿಸಿ ೩ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದ ಸಿ.ಎಂ ಇಬ್ರಾಹಿಂ ಪಕ್ಷದ ರಾಜ್ಯಾಧ್ಯಕ್ಷರಾಗಿರುವುದು ಮತ್ತಷ್ಟು ಅಸಮಾಧಾನಕ್ಕೆ ಕಾರಣವಾಗಿದೆ.
    ಅಪ್ಪಾಜಿ ವರ್ಚಸ್ಸಿಗೆ ಧಕ್ಕೆ :
    ೩ ಬಾರಿ ಶಾಸಕರಾಗಿದ್ದ ಎಂ.ಜೆ ಅಪ್ಪಾಜಿಯವರು ಕ್ಷೇತ್ರದಲ್ಲಿ ತಮ್ಮದೇ ಆದ ವರ್ಚಸ್ಸನ್ನು, ಅಭಿಮಾನಿ ಹಾಗು ಕಾರ್ಯಕರ್ತರ ಬಳಗವನ್ನು ಹೊಂದಿದ್ದರು. ಸುಮಾರು ೪೦ ರಿಂದ ೫೦ ಸಾವಿರದಷ್ಟು ವರ್ಚಸ್ಸಿನ ಮತಗಳು ಅಪ್ಪಾಜಿ ಪರವಾಗಿದ್ದವು. ಇದೀಗ ಅಪ್ಪಾಜಿ ನಿಧನದಿಂದಾಗಿ ಈ ಮತಗಳ ಮೇಲೆ ಕಣ್ಣಿಟ್ಟಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಅಪ್ಪಾಜಿಯೊಂದಿಗೆ ಗುರುತಿಸಿಕೊಂಡಿರುವ ಪ್ರಮುಖರನ್ನು ಸೆಳೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದು, ಅಪ್ಪಾಜಿಯವರ ಚುನಾವಣಾ ತಂತ್ರಗಾರಿಕೆ ಬೇಧಿಸಲು ಮುಂದಾಗಿರುವುದು ಗುಟ್ಟಾಗಿ ಉಳಿದಿಲ್ಲ. ಈಗಾಗಲೇ ಅಲ್ಪಸಂಖ್ಯಾತ ಸಮುದಾಯದ ಮುಖಂಡ ಫೀರ್ ಷರೀಫ್, ಛಲವಾದಿ ಸಮಾಜದ ಬದರಿನಾರಾಯಣ, ಶಿವರಾಜ್ ಹಾಗು ಶಿವಮಾದು ಸೇರಿದಂತೆ ಇನ್ನಿತರ ಪ್ರಮುಖರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಕಲ್ಪಿಸಿಕೊಡಲಾಗಿದೆ.   ಈ ನಡುವೆ ಅಪ್ಪಾಜಿ ವರ್ಚಸ್ಸಿಗೆ ಧಕ್ಕೆ ತರುವ ಹುನ್ನಾರಗಳು ಸಹ ನಡೆಸಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.  
    ಸಿ.ಎಂ ಇಬ್ರಾಹಿಂ ಹಿಂದೆ ದುಂಬಾಲು ಬಿದ್ದ ನಾಯಕರು:
    ಕಳೆದ ವರ್ಷ ಅಪ್ಪಾಜಿಯವರ ಪ್ರಥಮ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮುಂಬರುವ ವಿಧಾನಸಭಾ ಚುನಾವಣೆಗೆ ಶಾರದ ಅಪ್ಪಾಜಿಯನ್ನು ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಿದ್ದಾರೆ. ಆದರೂ ಸಹ ಪಕ್ಷದಲ್ಲಿನ ಕೆಲ ನಾಯಕರು ಮುಂದಿನ ಚುನಾವಣೆಗೆ ತೆರೆಮರೆಯಲ್ಲಿ ಆಕಾಂಕ್ಷಿಗಳಾಗಿರುವುದು ತಿಳಿದು ಬರುತ್ತಿದ್ದು, ಕಳೆದ ಸುಮಾರು ೧ ವರ್ಷದಿಂದ ಸಿ.ಎಂ ಇಬ್ರಾಹಿಂ ಹಿಂದೆ ದುಂಬಾಲು ಬಿದ್ದು ತಿರುಗುತ್ತಿದ್ದಾರೆ. ಇದರಿಂದಾಗಿ ಒಂದೆಡೆ ಶಾರದ ಅಪ್ಪಾಜಿಗೆ ಇರಿಸುಮುರಿಸು ಉಂಟಾಗುತ್ತಿದೆ. ಮತ್ತೊಂದೆಡೆ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡುತ್ತಿದೆ.  
    ಬಿಜೆಪಿ ಪಕ್ಷಕ್ಕೆ ಶಾರದ ಅಪ್ಪಾಜಿ ಸೆಳೆಯಲು ತೆರೆಮರೆಯಲ್ಲಿ ಕಸರತ್ತು :
ಕ್ಷೇತ್ರದಲ್ಲಿ ಅಪ್ಪಾಜಿಯವರ ವರ್ಚಸ್ಸಿನ ಮತಗಳ ಮೇಲೆ ಬಿಜೆಪಿ ಸಹ ಕಣ್ಣಿಟ್ಟಿದ್ದು, ಮುಂಬರುವ ಚುನಾವಣೆಗೆ ಶಾರದ ಅಪ್ಪಾಜಿಯನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಮಾಡಲು ಪಕ್ಷದ ಸ್ಥಳೀಯ ಮುಖಂಡರ ಮೂಲಕ ಸೆಳೆಯಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿರುವ ವಿಚಾರ ಸಹ ಗುಟ್ಟಾಗಿ ಉಳಿದಿಲ್ಲ. ಈಗಾಗಲೇ ಈ ಸಂಬಂಧ ಪ್ರಾಥಮಿಕ ಹಂತದ ಮಾತುಕತೆಗಳು ನಡೆದಿವೆ ಎನ್ನಲಾಗಿದೆ. ಈ ನಡುವೆ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರತಿ ಬಾರಿ ಹೊರಗಿನವರನ್ನು ಅಭ್ಯರ್ಥಿಯನ್ನಾಗಿ ಮಾಡುತ್ತಿದ್ದು, ಪಕ್ಷದ ನಿಷ್ಠಾವಂತ ಮುಖಂಡರು, ಕಾರ್ಯಕರ್ತರನ್ನು ಕಡೆಗಣಿಸುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.


ಶನಿವಾರ, ಏಪ್ರಿಲ್ 16, 2022

ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಪ್ರಾಯಶ್ಚಿತ ರೂಪವಾಗಿ ಚಿಕ್ಕರಥೋತ್ಸವ

ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ಧ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ಶನಿವಾರ ಬೆಳಿಗ್ಗೆ ಪ್ರಾಯಶ್ಚಿತ ರೂಪವಾಗಿ ಚಿಕ್ಕ ರಥೋತ್ಸವ ನಡೆಸಲಾಯಿತು.
    ಭದ್ರಾವತಿ, ಏ. ೧೬: ಹಳೇನಗರದ ಪುರಾಣ ಪ್ರಸಿದ್ಧ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ಶನಿವಾರ ಬೆಳಿಗ್ಗೆ ಪ್ರಾಯಶ್ಚಿತ ರೂಪವಾಗಿ ಚಿಕ್ಕ ರಥೋತ್ಸವ ನಡೆಸಲಾಯಿತು.
    ದೇವಾಲಯದಲ್ಲಿ ಪ್ರತಿವರ್ಷ ಮೇ.೧೬ರ ಬೌದ್ಧಪೌರ್ಣಮಿಯಂದು ವಾರ್ಷಿಕ ರಥೋತ್ಸವ ನಡೆಸಿಕೊಂಡು ಬರಲಾಗುತ್ತಿದ್ದು, ಮಹಾಮಾರಿ ಕೊರೋನಾ ಹಿನ್ನಲೆಯಲ್ಲಿ ಕಳೆದ ಸುಮಾರು ೨ ವರ್ಷಗಳಿಂದ ವಾರ್ಷಿಕ ರಥೋತ್ಸವ ನಡೆಸಲು ಸಾಧ್ಯವಾಗದ ಹಿನ್ನಲೆಯಲ್ಲಿ ಪ್ರಾಯಶ್ಚಿತ ರೂಪವಾಗಿ ಚಿಕ್ಕ ರಥೋತ್ಸವ ನಡೆಸಲಾಯಿತು.
    ಬಣ್ಣ ಬಣ್ಣದ ಹೂವುಗಳಿಂದ ಅಲಂಕೃತಗೊಂಡ ರಥದಲ್ಲಿ ಸ್ವಾಮಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ರಥೋತ್ಸವ ನಡೆಸಲಾಯಿತು. ರಥೋತ್ಸವ ಆರಂಭಗೊಳ್ಳುತ್ತಿದ್ದಂತೆ ಭಕ್ತರು ಸ್ವಾಮಿಗೆ ಜಯಘೋಷಗಳನ್ನು ಹಾಕಿದರು.
    ದೇವಾಲಯದ ಪ್ರಧಾನ ಅರ್ಚಕ ವೇ.ಬ್ರ.ರಂಗನಾಥ ಶರ್ಮ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ಜಿ ಮಾರುತಿ ಹಾಗೂ ಸದಸ್ಯರು, ನಾರಾಯಣಾಚಾರ್, ಶ್ರೀನಿವಾಸ, ನರಸಿಂಹಚಾರ್, ಶ್ರೀಕಾಂತ್, ಶ್ರೀಹರಿ, ಶ್ರೀರಾಮ್, ನಿರಂಜನ್, ರವಿಮಾಸ್ಟರ್, ಸತ್ಯನಾರಾಯಣ್, ಮನು, ರಮಾಕಾಂತ, ಅಭಿನಂದನ್, ಶೋಭ, ಪುಷ್ಪ ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು.

ಬಿಪಿಎಲ್ ಸಂಘದಿಂದ ಅಂಬೇಡ್ಕರ್ ಜಯಂತಿ

ಭದ್ರಾವತಿ ನ್ಯೂಟೌನ್ ಭದ್ರಾವತಿ ಪ್ರಜಾ ವಿಮೋಚನೆ ಸಂಘ(ಬಿಪಿಎಲ್)ದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್ ಅಂಬೇಡ್ಕರ್‌ರವರ ೧೩೧ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ವಿಐಎಸ್‌ಎಲ್ ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ಬಸಂತ್ ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಏ. ೧೬: ನಗರದ ನ್ಯೂಟೌನ್ ಭದ್ರಾವತಿ ಪ್ರಜಾ ವಿಮೋಚನೆ ಸಂಘ(ಬಿಪಿಎಲ್)ದ ವತಿಯಿಂದ ಡಾ. ಬಿ.ಆರ್ ಅಂಬೇಡ್ಕರ್‌ರವರ ೧೩೧ನೇ ಜನ್ಮದಿನೋತ್ಸವ ಆಚರಿಸಲಾಯಿತು.
    ನ್ಯೂಟೌನ್ ಪೊಲೀಸ್ ಠಾಣಾಧಿಕಾರಿ  ದೇವರಾಜ್ ಕಾರ್ಯಕ್ರಮ ಉದ್ಘಾಟಿಸಿದರು. ವಿಐಎಸ್‌ಎಲ್ ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ಬಸಂತ್ ಕುಮಾರ್,  ಮುಖಂಡರಾದ ಜಿ ರಾಜು, ರಾಜೇಂದ್ರ  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸಂಘದ ಗೌರವ ಅಧ್ಯಕ್ಷ ಎಸ್.ಕೆ ಸುಧೀಂದ್ರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಅಧ್ಯಕ್ಷ ಜಗದೀಶ ಅಧ್ಯಕ್ಷತೆ ವಹಿಸಿದ್ದರು. ಸಿಹಿ ಹಂಚಿಕೆ ಜೊತೆಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
     ಉಪಾಧ್ಯಕ್ಷರಾದ ವಿಲಿಯಂ, ಸಂಪತ್,  ಜಿ. ಗೋವಿಂದ,  ಪ್ರಧಾನ ಕಾರ್ಯದರ್ಶಿ ಶ್ಯಾಮ್, ಕಾರ್ಯಾಧ್ಯಕ್ಷ ರವಿಕುಮಾರ್, ಖಜಾಂಚಿ ಮುರಳಿಕೃಷ್ಣ, ಕಾರ್ಯದರ್ಶಿ ಸುನಿಲ್ ಕುಮಾರ್, ಲೋಕೇಶ್, ಡಿಎಸ್‌ಎಸ್ ಮುಖಂಡರಾದ ದಾಸ್, ಸಂಘಟನಾ ಕಾರ್ಯದರ್ಶಿ ಪುರುಷೋತ್ತಮ್, ರವೀಂದ್ರಪ್ಪ, ಅಜಂತ್‌ಕುಮಾರ್, ಸದಸ್ಯರುಗಳಾದ ವೆಂಕಟೇಶ್, ಶ್ರೀನಿವಾಸ್, ಶ್ರೀಕಾಂತ್, ಸಂದೀಪ್, ಅನಿಲ್, ಸಂಜೀವರೆಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕ್ರೀಡಾಮನೋಭಾವ ಪ್ರದರ್ಶಿಸಿ ಪಂದ್ಯಾವಳಿ ಯಶಸ್ವಿಗೊಳಿಸಿ



    ಭದ್ರಾವತಿ: ಕ್ರೀಡೆಯಲ್ಲಿ ಸೋಲು ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾಮನೋಭಾವ ತೋರಿಸುವ ಮೂಲಕ ಪಂದ್ಯಾವಳಿ ಯಶಸ್ವಿಗೊಳಿಸುವಂತೆ  ಮೈಕ್ರೋ ಸ್ಮಾಲ್ ಅಂಡ್ ಮೀಡಿಯಂ ಎಂಟರ್ಪ್ರೈಸಸ್-ಪಿ.ಸಿ(ಎಂಎಸ್ಎಂಇ-ಪಿ.ಸಿ) ರಾಜ್ಯ ಘಟಕದ ಅಧ್ಯಕ್ಷ ಎಚ್.ಸಿ ರಮೇಶ್ ಹೇಳಿದರು.
       ಅವರು ಶನಿವಾರ ನಗರದ ವಿಐಎಸ್ಎಲ್ ಕ್ರೀಡಾಂಗಣದಲ್ಲಿ ದೊಣಬಘಟ್ಟ ಸೆವೆನ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಹಮ್ಮಿಕೊಳ್ಳಲಾಗಿರುವ ಎರಡು ದಿನಗಳ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.
     ನಗರದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ಕೊಡುವ ನಿಟ್ಟಿನಲ್ಲಿ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
   ಕರ್ನಾಟಕ ಸ್ಟೇಟ್ ಕನ್ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಧ್ಯಕ್ಷ ಸುಂದರ್ ಬಾಬು ಮಾತನಾಡಿ, ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ಕೊಡುವವರು ಕಡಿಮೆಯಾಗುತ್ತಿರುವ ಇಂದಿನ ದಿನಗಳಲ್ಲಿ  ರಮೇಶ್ ರವರು ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಕ್ರೀಡಾಪಟುಗಳು ಪಂದ್ಯಾವಳಿಯ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಹಿರಿಯ ಅಂತರಾಷ್ಟ್ರೀಯ ಕ್ರೀಡಾಪಟು ಚೆನ್ನಯ್ಯ, ಬೆಂಗಳೂರಿನ ಯುವ ಸಹಕಾರಿ ಧುರೀಣ ಡಿ. ಸುನಿಲ್,  ಮುಖಂಡರಾದ ರವಿಚಂದ್ರನ್,  ಇಮ್ರಾನ್,  ಚಂದ್ರು ದೇವರಹಳ್ಳಿ , ರಮೇಶ್ , ರವಿ, ತೋಪೇಗೌಡ ಮಹಿಳಾ ಪ್ರಮುಖರಾದ ರೇಖಾ, ಅನ್ನಪೂರ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
   ಪೊಲೀಸ್, ಮೆಸ್ಕಾಂ ,ಆರ್ ಎಎಫ್, ರೈಲ್ವೆ ಹಾಗೂ ಪಂಚಾಯತ್ ರಾಜ್ ಇಲಾಖೆಗಳ ತಂಡ ಹಾಗೂ ಶಿಕ್ಷಕರು ಮತ್ತು ವಕೀಲರು ಒಳಗೊಂಡ ಒಟ್ಟು ಎಂಟು ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು, ಶ್ರೀ ಸತ್ಯಸಾಯಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರಾದ ಶಶಿ ಮತ್ತು ಸಂತೋಷ್ ತೀರ್ಪುಗಾರರಾಗಿ ಪಾಲ್ಗೊಂಡಿದ್ದರು.