Monday, April 18, 2022

ವಿಜೃಂಭಣೆಯಿಂದ ಜರುಗಿದ ಶ್ರೀ ಸುಶಮೀಂದ್ರತೀರ್ಥರ ಆರಾಧನಾ ಮಹೋತ್ಸ

ಭದ್ರಾವತಿ ನಂಜನಗೂಡು ಶ್ರೀರಾಘವೇಂದ್ರಸ್ವಾಮಿಗಳ ಮಠದಲ್ಲಿ ಸೋಮವಾರ ಶ್ರೀ ಸುಶಮೀಂದ್ರತೀರ್ಥರ ಆರಾಧನಾ ಮಹೋತ್ಸವ ಸೋಮವಾರ ನಡೆಯಿತು.
    ಭದ್ರಾವತಿ, ಏ. ೧೮: ನಗರದ ನಂಜನಗೂಡು ಶ್ರೀರಾಘವೇಂದ್ರಸ್ವಾಮಿಗಳ ಮಠದಲ್ಲಿ ಸೋಮವಾರ ಶ್ರೀ ಸುಶಮೀಂದ್ರತೀರ್ಥರ ಆರಾಧನಾ ಮಹೋತ್ಸವ ಸೋಮವಾರ ನಡೆಯಿತು.
    ಪಂಚಾಮೃತ ಅಭಿಷೇಕದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಪಂಡಿತ್ ಭೀಮಾಚಾರ್‌ರವರು ಶ್ರೀ ಸುಶಮೀಂದ್ರತೀರ್ಥರು ಹಾಗೂ ಶ್ರೀ ರಾಘವೇಂದ್ರ ಸ್ವಾಮಿಗಳ ಪ್ರವಚನ ನಡೆಸಿಕೊಟ್ಟರು.
    ನಂತರ ಶ್ರೀಮಠದ ಪ್ರಾಕಾರದಲ್ಲಿ ಶ್ರೀ ಸುಶಮೀಂದ್ರ ತೀರ್ಥರ ಭಾವಚಿತ್ರದೊಂದಿಗೆ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ಅಷ್ಟಾವಧಾನ, ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದ ವಿನಿಯೋಗ ನಡೆಯಿತು.
    ಶ್ರೀಮಠದ ಶೇಷಗಿರಿ ಆಚಾರ್ ಮತ್ತು ಗೋಪಾಲಚಾರ್, ಶ್ರೀನಿವಾಸಚಾರ್, ಪ್ರಧಾನ ಅರ್ಚಕ ಜಗನ್ನಾಥಚಾರ್, ವೆಂಕಟೇಶ, ಜಯತೀರ್ಥ, ರಮಾಕಾಂತ್, ವೆಂಕಟೇಶ್, ರಾಘವೇಂದ್ರ, ವಾಸುದೇವಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿಜೃಂಭಣೆಯಿಂದ ಜರುಗಿದ ದೇವರಹಳ್ಳಿ ಶ್ರೀ ರಂಗನಾಥಸ್ವಾಮಿ ರಥೋತ್ಸವ

ಭದ್ರಾವತಿ ತಾಲೂಕಿನ ದೇವರಹಳ್ಳಿ ಗ್ರಾಮದ ಶ್ರೀ ರಂಗನಾಥಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
    ಭದ್ರಾವತಿ, ಏ. ೧೮: ತಾಲೂಕಿನ ದೇವರಹಳ್ಳಿ ಗ್ರಾಮದ ಶ್ರೀ ರಂಗನಾಥಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
    ರಥೋತ್ಸವ ಅಂಗವಾಗಿ ಶ್ರೀ ರಂಗನಾಥಸ್ವಾಮಿಗೆ ವಿಶೇಷ ವಿಶೇಷ ಪೂಜೆ, ಅಲಂಕಾರ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಅಚರಣೆಗಳು ಜರುಗಿದವು. ದೇವರಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಭಕ್ತರು ಪಾಲ್ಗೊಂಡಿದ್ದರು. ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಥೋತ್ಸವ ಏ.೧೯ರವರೆಗೆ ನಡೆಯಲಿದೆ.

ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಧರಣಿ ಸತ್ಯಾಗ್ರಹ

ಮದ್ಯದಂಗಡಿಗಳ ಸ್ಥಳಾಂತರ, ದೇವಸ್ಥಾನಕ್ಕೆ ರಸ್ತೆ ಹಾಗೂ ಅಪಘಾತ ನಿಯಂತ್ರಿಸಲು ರಸ್ತೆಗೆ ಹಂಪ್ಸ್ ಅಳವಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಭದ್ರಾವತಿ ತಾಲೂಕು ಕಚೇರಿ ಮುಂಭಾಗ ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಯಿತು.
    ಭದ್ರಾವತಿ, ಏ. ೧೮:  ಮದ್ಯದಂಗಡಿಗಳ ಸ್ಥಳಾಂತರ, ದೇವಸ್ಥಾನಕ್ಕೆ ರಸ್ತೆ ಹಾಗೂ ಅಪಘಾತ ನಿಯಂತ್ರಿಸಲು ರಸ್ತೆಗೆ ಹಂಪ್ಸ್ ಅಳವಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ತಾಲೂಕು ಕಚೇರಿ ಮುಂಭಾಗ ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಯಿತು.
   ನಗರದ ಜನ್ನಾಪುರ ವಾಣಿಜ್ಯ ರಸ್ತೆಯಲ್ಲಿ ಇತ್ತೀಚೆಗೆ ಮದ್ಯದಂಗಡಿಯೊಂದರಲ್ಲಿ ಗಲಾಟೆ ನಡೆದು ಈ ಭಾಗದಲ್ಲಿ ಅಶಾಂತಿ ವಾತಾವರಣ ನಿರ್ಮಾಣಗೊಂಡಿತ್ತು. ಅಲ್ಲದೆ ಘಟನೆಗೆ ಕಾರಣರಾದವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಇದೇ ರೀತಿ ಡೈರಿ ವೃತ್ತದಲ್ಲಿರುವ  ಮದ್ಯದಂಗಡಿಯಲ್ಲೂ ಆಗಾಗ ಗಲಾಟೆಗಳು ನಡೆದು ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಎರಡು ಮದ್ಯದಂಗಡಿಗಳನ್ನು ಬೇರೆಡೆ ಸ್ಥಳಾಂತರಿಸುವಂತೆ ಒತ್ತಾಯಿಸಿ ಸಂಬಂಧಪಟ್ಟ ಇಲಾಖೆಗೆ ಮನವಿ ಮಾಡಿದ್ದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಯಿತು.
    ತಾಲೂಕಿನ ಎಲ್ಲಾ ಸಿಎಲ್ ೨ ಮದ್ಯದಂಗಡಿಗಳಲ್ಲಿ ಹಾಗೂ ಜನ್ನಾಪುರ ನೋಟಿಫೈಡ್ ರಸ್ತೆಯಲ್ಲಿರುವ ಎಂಎಸ್‌ಐಎಲ್ ಮದ್ಯದಂಗಡಿಯಲ್ಲಿ ಎಂಆರ್‌ಪಿ ದರ ಬದಲು ಹೆಚ್ಚುವರಿ ಹಣ ಪಡೆಯಲಾಗುತ್ತಿದೆ. ಅಬಕಾರಿ ನಿಯಮದ ವಿರುದ್ಧವಾಗಿ  ಮದ್ಯದಂಗಡಿಗಳ ಬಳಿ ಮದ್ಯಸೇವನೆಗೆ ಪ್ರತ್ಯೇಕವಾಗಿ ವ್ಯವಸ್ಥೆ ಕಲ್ಪಿಸಿಕೊಡಲಾಗುತ್ತಿದೆ. ಈ ಸಂಬಂಧ ಸಹ ಹಲವಾರು ಬಾರಿ ಮನವಿ ಸಲ್ಲಿಸಿ ಒತ್ತಾಯಿಸಲಾಗಿದೆ.  ಆದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ ವಹಿಸಲಾಗಿದೆ ಎಂದು ದೂರವಾಯಿತು.
    ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸುಮಾರು ೧೫೦ ವರ್ಷಗಳಿಗೂ ಹಳೇಯದಾದ ಇತಿಹಾಸ ಪ್ರಸಿದ್ದ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ರಸ್ತೆ ನಿರ್ಮಿಸಿಕೊಡುವಂತೆ ಸಂಬಂಧಪಟ್ಟ ಇಲಾಖೆಗೆ ಕಳೆದ ಒಂದು ವರ್ಷದಿಂದ ಹಲವಾರು ಬಾರಿ ಮನವಿ ಮಾಡಲಾಗಿದೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಲಾಯಿತು.
    ನಗರದ ಹುಡ್ಕೋ ಕಾಲೋನಿ ಪ್ರೊ. ಬಿ. ಕೃಷ್ಣಪ್ಪ ವೃತ್ತದಿಂದ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್‌ವರೆಗೆ ರಸ್ತೆ ಅಗಲೀಕರಣ ನಡೆದು ಹೊಸ ರಸ್ತೆ ನಿರ್ಮಾಣ ಮಾಡಲಾಗಿದೆ. ಪ್ರಸ್ತುತ ಈ ರಸ್ತೆಯಲ್ಲಿ ವಾಹನಗಳ ದಟ್ಟಣೆ ಅಧಿಕವಾಗಿದ್ದು, ಲಾರಿ, ಬಸ್ಸು ಸೇರಿದಂತೆ ಬಾರಿ ವಾಹನಗಳು ಸಂಚರಿಸುತ್ತಿವೆ. ಇದರಿಂದಾಗಿ ಮಹಿಳೆಯರು, ಮಕ್ಕಳು, ವಯೋವೃದ್ಧರು ರಸ್ತೆ ದಾಟಲು ತೊಂದರೆಯಾಗುತ್ತಿದ್ದು, ಅಪಘಾತಗಳು ಹೆಚ್ಚಾಗುವ ಸಾಧ್ಯ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ರಸ್ತೆಗಳಲ್ಲಿ ಹಂಪ್ಸ್‌ಗಳನ್ನು ಅಳವಡಿಸಲು ಸಂಬಂಧಪಟ್ಟ ಇಲಾಖೆಗೆ ಮನವಿ ಮಾಡಲಾಗಿದೆ. ಆದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಲಾಯಿತು.
    ತಕ್ಷಣ ಈ ಎಲ್ಲಾ ಸಮಸ್ಯೆಗಳಿಗೆ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ನ್ಯಾಯ ಸಿಗುವವರೆಗೂ ಧರಣಿ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಸಲಾಯಿತು.
    ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಕೆ.ವಿ ಧನಂಜಯ, ಹಿರಿಯ ಮುಖಂಡ ಸುರೇಂದ್ರಪ್ಪ, ಯುವ ಮುಖಂಡ ಅರುಣ್‌ಕುಮಾರ್, ತಿಮ್ಮೇಗೌಡ, ಚಂದ್ರಣ್ಣ ಸೇರಿದಂತೆ ಇನ್ನಿತರರು ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.


ಜನ್ನಾಪುರ ಕೆರೆ ಸೆರ್ವೆ ನಡೆಸಿ, ಹೂಳು ತೆಗೆದು ಅಭಿವೃದ್ಧಿಗೊಳಿಸಲು ತೀರ್ಮಾನ

ನಗರಸಭೆ ಸಭಾಂಗಣದಲ್ಲಿ ತಹಸೀಲ್ದಾರ್ ನೇತೃತ್ವದಲ್ಲಿ ನಡೆದ ಸಭೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಸರ್ವೆ ನಂ.೭೦ರ ೪೫ ಎಕರೆ ೨೦ ಗುಂಟೆ ಸರ್ಕಾರಿ ಕೆರೆ ಅನಧಿಕೃತ ಒತ್ತುವರಿ ತೆರವು ಕಾರ್ಯಾಚರಣೆ ಹಾಗು ಹೂಳು ತೆಗೆದು ಸ್ವಚ್ಛಗೊಳಿಸುವ ಸಂಬಂಧ ಸೋಮವಾರ ತಹಸಿಲ್ದಾರ್ ಆರ್. ಪ್ರದೀಪ್ ನೇತೃತ್ವದಲ್ಲಿ ನಗರಸಭೆ ಸಭಾಂಗಣದಲ್ಲಿ ಸಭೆ ನಡೆಯಿತು.
    ಭದ್ರಾವತಿ : ನಗರಸಭೆ ವ್ಯಾಪ್ತಿಯ ಜನ್ನಾಪುರ ಸರ್ವೆ ನಂ.೭೦ರ ೪೫ ಎಕರೆ ೨೦ ಗುಂಟೆ ಸರ್ಕಾರಿ ಕೆರೆ ಅನಧಿಕೃತ ಒತ್ತುವರಿ ತೆರವು ಕಾರ್ಯಾಚರಣೆ ಹಾಗು ಹೂಳು ತೆಗೆದು ಸ್ವಚ್ಛಗೊಳಿಸುವ ಸಂಬಂಧ ಸೋಮವಾರ ತಹಸಿಲ್ದಾರ್ ಆರ್. ಪ್ರದೀಪ್ ನೇತೃತ್ವದಲ್ಲಿ ನಗರಸಭೆ ಸಭಾಂಗಣದಲ್ಲಿ ಸಭೆ ನಡೆಯಿತು.
    ಸಭೆಯಲ್ಲಿ ಪಾಲ್ಗೊಂಡಿದ್ದ ಸಿದ್ದಾಪುರ-ಜನ್ನಾಪುರ ಕೆರೆ ಸಂರಕ್ಷಣಾ ಸಮಿತಿ ಪದಾಧಿಕಾರಿಗಳು ಮಾತನಾಡಿ, ಕೆರೆ ಒತ್ತುವರಿ ತೆರವು ಹಾಗು ಅಭಿವೃದ್ಧಿಗೊಳಿಸುವ ಸಂಬಂಧ ಈಗಾಗಲೇ ಹೋರಾಟ ನಡೆಸಿ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಲಾಗಿದೆ. ತಾಲೂಕು ಆಡಳಿತ ಕೈಗೊಂಡಿರುವ ಕ್ರಮದ ಬಗ್ಗೆ ಸ್ಪಷ್ಟನೆ ನೀಡಬೇಕಾಗಿದೆ ಎಂದರು.
    ಇದಕ್ಕೆ ಪ್ರತಿಕ್ರಿಯಿಸಿದ ತಹಸೀಲ್ದಾರ್ ಆರ್. ಪ್ರದೀಪ್, ಕೆರೆಯ ಒಟ್ಟು ವಿಸ್ತೀರ್ಣದಲ್ಲಿ ಜಿಲ್ಲಾಧಿಕಾರಿಗಳು ತಮ್ಮ ವಿಶೇಷ ಅಧಿಕಾರ ಬಳಸಿಕೊಂಡು ಕಾನೂನಿನ ಪ್ರಕಾರ ೪ ಎಕರೆ ೩೬ ಗುಂಟೆ ಜಮೀನು ಹಾಗು ೦೪ ಗುಂಟೆ ಖರಾಬು ಸೇರಿ ಒಟ್ಟು ೫ ಎಕರೆ ಕೆರೆಯಿಂದ ಬೇರ್ಪಡಿಸಿದ್ದಾರೆ. ಗ್ರಾಮ ನಕಾಶೆ ಪ್ರಕಾರ ಪ್ರಸ್ತುತ ಕೆರೆಯ ವಿಸ್ತ್ರೀರ್ಣ ೪೫ ಎಕರೆ ೨೦ ಗುಂಟೆಯಾಗಿದೆ. ಈ ಹಿನ್ನಲೆಯಲ್ಲಿ ನಿಗದಿಯಾಗಿರುವ ವಿಸ್ತೀರ್ಣದಂತೆ ಸರ್ವೆ ನಡೆಸಿ ಬೌಂಡರಿ ಗುರುತಿಸಿ ಅಭಿವೃದ್ಧಿಗೊಳಿಸಲು ಶಿವಮೊಗ್ಗ-ಭದ್ರಾವತಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲಾಗಿದೆ ಎಂದರು.
    ಕೆರೆ ಸಮೀಪದ ರೈತರು ಹಾಗು ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಮಾತನಾಡಿ, ಮಲಮೂತ್ರ, ಕೊಳಚೆ  ನೀರು ಹಾಗು ಇನ್ನಿತರ ತ್ಯಾಜ್ಯಗಳಿಂದ  ಕೆರೆ ಸಂಪೂರ್ಣವಾಗಿ ಕಲ್ಮಶಗೊಂಡಿದೆ. ದುರ್ವಾಸನೆ ಬೀರುತ್ತಿದ್ದು, ರೋಗರುಜಿನಗಳು ಹರಡುತ್ತಿವೆ. ಅಲ್ಲದೆ ಸಮೀಪದ ರೈತರಲ್ಲಿ ನೀರಿನಿಂದ ದುಷ್ಪರಿಣಾ ಉಂಟಾಗುತ್ತಿದೆ. ಈ ಹಿನ್ನಲೆಯಲ್ಲಿ ಹೂಳು ತೆಗೆದು ನೀರು ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಮೊದಲು ಕೆರೆಯ ಸಮೀಪದಲ್ಲಿನ ನಿವಾಸಿಗಳು, ರೈತರ ವಾಸ್ತವ ಸ್ಥಿತಿಗಳನ್ನು ಅರಿತುಕೊಳ್ಳಿ. ಕೆರೆಯ ಸಂಪೂರ್ಣ ಸರ್ವೆ ನಡೆಸಿ ನೂರಾರು ವರ್ಷಗಳಿಂದ ಮಲಮೂತ್ರಗಳಿಂದ ತುಂಬಿಕೊಂಡಿರುವ ಹೂಳು ತೆಗೆಯಲು ಹಾಗು ಒತ್ತುವರಿ ಕಾರ್ಯಾಚರಣೆ ನಡೆಸಲು ಕ್ರಮ ಕೈಗೊಳ್ಳಿ. ಕೆರೆಯ ನೀರು ಶುದ್ಧೀಕರಣಗೊಳಿಸಿ, ದುವಾರ್ಸನೆ, ರೋಗರುಜಿನಗಳಿಂದ ಮುಕ್ತಿಗೊಳಿಸಿ  ಆ ನಂತರ ದೋಣಿ ವಿಹಾರ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಿ.
                                                               - ಬಾಲಕೃಷ್ಣ, ಅಧ್ಯಕ್ಷ, ಸಾರ್ವಜನಿಕ ಕುರಿತುಕೊರತೆ ಹೋರಾಟ ಸಮಿತಿ.

        ಇದಕ್ಕೆ ಪ್ರತಿಕ್ರಿಯಿಸಿದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು, ಕೆರೆ ಅಭಿವೃದ್ಧಿಗೊಳಿಸುವ ಸಂಬಂಧ ೨೦೧೬ರಲ್ಲಿ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಇಲಾಖೆಗೆ ನಿರಾಪೇಕ್ಷಣಾ ಪತ್ರ ಬರೆದು ಕೈಗೊಳ್ಳಬೇಕಾಗಿರುವ ಕಾರ್ಯಸೂಚಿಗಳ ಬಗ್ಗೆ ತಿಳಿಸಿದ್ದರು. ಇದರಿಂದಾಗಿ ಕಾಮಗಾರಿ ಡಿಪಿಆರ್ ಸಿದ್ದಪಡಿಸುವಾಗ ಹೂಳು ತೆಗೆಯುವ ಪ್ರಸ್ತಾಪ ಸೇರ್ಪಡೆಯಾಗಿಲ್ಲ ಎಂದು ಸ್ಪಷ್ಟಪಡಿಸಿ ಆದರೂ ಬೇಡಿಕೆಯಂತೆ ಲಭ್ಯವಾಗುವ ಅನುದಾನ ಬಳಸಿಕೊಂಡು ಸಾಧ್ಯವಾದಷ್ಟು ಹೂಳು ತೆಗೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕೆರೆ ಸಂಪೂರ್ಣವಾಗಿ ಕಲ್ಮಶಗೊಂಡಿದ್ದರೂ ಮೀನು ಸಾಕಾಣಿಕೆಗೆ ಅವಕಾಶ ನೀಡಲಾಗಿದ್ದು, ಕೆರೆಯ ಮೀನುಗಳನ್ನು ತಿಂದವರು ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ತಕ್ಷಣ ಮೀನು ಸಾಕಾಣಿಕೆಗೆ ತಡೆ ನೀಡಬೇಕು. ಜೊತೆಗೆ ಕೆರೆಯಲ್ಲಿರುವ ಹೂಳು ತೆಗೆಯಲು ನಗರಸಭೆ ಹಿರಿಯ ಮಾಜಿ ಸದಸ್ಯ ಬಾಲಕೃಷ್ಣ ನೇತೃತ್ವದಲ್ಲಿ ಕೆರೆ ಸಮೀಪದಲ್ಲಿರುವ ರೈತರ ಸಮಿತಿ ರಚನೆ ಮಾಡಬೇಕು.
                                                                 - ಆರ್. ವೇಣುಗೋಪಾಲ್, ಮಾಜಿ ಅಧ್ಯಕ್ಷ, ಸ್ಥಾಯಿ ಸಮಿತಿ, ನಗರಸಭೆ.

    ಸಭೆಯಲ್ಲಿ ಪುನಃ ಕೆರೆ ಒಟ್ಟು ವಿಸ್ತೀರ್ಣದ ಸರ್ವೆ ನಡೆಸುವಂತೆ ಆಗ್ರಹ ಕೇಳಿ ಬಂದ ಹಿನ್ನಲೆಯಲ್ಲಿ ತಾಲೂಕು ಆಡಳಿತ, ನೀರಾವರಿ ಇಲಾಖೆ ಹಾಗು ನಗರಸಭೆ ವತಿಯಿಂದ ಜಂಟಿಯಾಗಿ ಪ್ರಸ್ತುತ ನಿಗದಿಯಾಗಿರುವ ೪೫ ಎಕರೆ, ೨೦ ಗುಂಟೆ ಕೆರೆ ಸರ್ವೆ ಕಾರ್ಯ ನಡೆಸಲು ತೀರ್ಮಾನಿಸಲಾಯಿತು. ಉಳಿದಂತೆ ನಗರಸಭೆ ವತಿಯಿಂದ ಕೆರೆ ಸಮೀಪ ರಾಜಕಾಲುವೆ ನಿರ್ಮಿಸಿ ಕೆರೆಗೆ ಮಲಮೂತ್ರ, ಕೊಳಚೆ ನೀರು ಹಾಗು ಇನ್ನಿತರ ತ್ಯಾಜ್ಯ ಸೇರ್ಪಡೆಗೊಳ್ಳದಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಲಾಯಿತು.
    ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಕೆ. ಪರಮೇಶ್, ಇಂಜಿನಿಯರ್ ರಂಗಾರಾಜಪುರೆ, ಕಂದಾಯಾಧಿಕಾರಿ ರಾಜ್‌ಕುಮಾರ್, ನೀರಾ ಇಲಾಖೆ ಬಿಆರ್‌ಎಲ್‌ಬಿಸಿ ಹಾಗು ಸೂಡಾ ಅಧಿಕಾರಿಗಳು ಉಪಸ್ಥಿತರಿದ್ದರು.
    ಸಿದ್ದಾಪುರ-ಜನ್ನಾಪುರ ಕೆರೆ ಸಂರಕ್ಷಣಾ ಸಮಿತಿ ಪ್ರಮುಖರಾದ ಬಾಲಕೃಷ್ಣ, ಸುರೇಶ್, ಜಿ. ರಾಜು, ಎನ್. ರಾಮಕೃಷ್ಣ, ಕೆ. ಮಂಜುನಾಥ್, ಚನ್ನಪ್ಪ, ಎಸ್. ಮಂಜುನಾಥ್, ನಗರಸಭಾ ಸದಸ್ಯರಾದ ಆರ್. ಮೋಹನ್‌ಕುಮಾರ್, ಕಾಂತರಾಜ್, ಜಾರ್ಜ್, ರಿಯಾಜ್ ಅಹಮದ್, ಬಿ.ಟಿ ನಾಗರಾಜ್, ಲತಾ ಚಂದ್ರಶೇಖರ್ ಹಾಗು ವಿರೋಧ ಪಕ್ಷದ ನಾಯಕ ಬಸವರಾಜ ಬಿ. ಆನೇಕೊಪ್ಪ ಸೂಡಾ ಸದಸ್ಯೆ  ಹೇಮಾವತಿ ವಿಶ್ವನಾಥ್ ಹಾಗು ನಗರಸಭೆ, ತಾಲೂಕು ಕಛೇರಿ, ನೀರಾವರಿ ಇಲಾಖೆ ಅಧಿಕಾರಿಗಳು ಮತ್ತು ಇನ್ನಿತರ ಸಂಘಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.

Sunday, April 17, 2022

ಏ.೧೭ರಂದು ಜನ್ನಾಪುರ ಕೆರೆ ಅಭಿವೃದ್ಧಿಪಡಿಸುವ ಸಂಬಂಧ ಸಭೆ

    ಭದ್ರಾವತಿ, ಏ. ೧೭:  ಕಸಬಾ ಹೋಬಳಿ ಜನ್ನಾಪುರ ಸರ್ವೆ ನಂ.೭೦ರ ೪೫ ಎಕರೆ ೨೦ ಗುಂಟೆ ಸರ್ಕಾರಿ ಕೆರೆ ಅನಧಿಕೃತ ಒತ್ತುವರಿ ತೆರವುಗೊಳಿಸಿ, ಸ್ವಚ್ಛಗೊಳಿಸಿ, ಅಭಿವೃದ್ಧಿಪಡಿಸುವ ಸಂಬಂಧ ಏ.೧೮ರಂದು ಬೆಳಿಗ್ಗೆ ೧೧ ಗಂಟೆಗೆ ನಗರಸಭೆ ಸಭಾಂಗಣದಲ್ಲಿ ಸಭೆ ನಡೆಯಲಿದೆ.
    ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ತಹಸೀಲ್ದಾರ್ ಆರ್. ಪ್ರದೀಪ್, ಉಪಸ್ಥಿತರಿರುವರು. ನಗರಸಭೆ, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ, ನೀರಾವರಿ ಇಲಾಖೆ ಬಿಆರ್‌ಎಲ್‌ಬಿಸಿ ಮತ್ತು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಶಿವಮೊಗ್ಗ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಕಾರುಣ್ಯ ಚಾರಿಟಬಲ್ ಟ್ರಸ್ಟ್ ಪುನರ್ವಸತಿ ಕೇಂದ್ರದ ಸ್ಥಳಾಂತರಗೊಂಡ ಕಟ್ಟಡದ ಉದ್ಘಾಟನೆ

ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಜನ್ಮದಿನಾಚರಣೆ

ಭದ್ರಾವತಿ ನಗರದ ಕಾರುಣ್ಯ ಚಾರಿಟಬಲ್ ಟ್ರಸ್ಟ್ ಪುನರ್ವಸತಿ ಕೇಂದ್ರದ ವತಿಯಿಂದ ಭಾನುವಾರ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್‌ರವರ ಜನ್ಮದಿನಾಚರಣೆ ಹಾಗು ಸ್ಥಳಾಂತರಗೊಂಡ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ನಡೆಯಿತು.
    ಭದ್ರಾವತಿ, ಏ. ೧೭: ನಗರದ ಕಾರುಣ್ಯ ಚಾರಿಟಬಲ್ ಟ್ರಸ್ಟ್ ಪುನರ್ವಸತಿ ಕೇಂದ್ರದ ವತಿಯಿಂದ ಭಾನುವಾರ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್‌ರವರ ಜನ್ಮದಿನಾಚರಣೆ ಹಾಗು ಸ್ಥಳಾಂತರಗೊಂಡ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ನಡೆಯಿತು.
    ಹಲವಾರು ವರ್ಷಗಳಿಂದ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರುಣ್ಯ ಚಾರಿಟಬಲ್ ಟ್ರಸ್ಟ್ ಪುನರ್ವಸತಿ ಕೇಂದ್ರವನ್ನು ಇದೀಗ ನಗರಸಭೆ ವ್ಯಾಪ್ತಿ ಜನ್ನಾಪುರ ಜಯಶ್ರೀ ಕಲ್ಯಾಣ ಮಂಟಪ ಸಮೀಪ  ಸ್ಥಳಾಂತರಗೊಳಿಸಿದೆ. 
    ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಸದಸ್ಯರಾದ ಬಿ.ಕೆ ಮೋಹನ್, ಟಿಪ್ಪುಸುಲ್ತಾನ್, ಜಯಶೀಲಾ, ಮಣಿ, ಅನ್ನಪೂರ್ಣ, ಕಾಂತರಾಜು, ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ, ಚಿನ್ನಯ್ಯ, ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಸುರೇಶ್, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಿ.ಸಿ ಮಾಯಣ್ಣ, ಬಿಎಸ್‌ಪಿ ತಾಲೂಕು ಅಧ್ಯಕ್ಷ ರಹಮತ್‌ಉಲ್ಲಾಖಾನ್, ರಾಜೇಂದ್ರ. ವಕೀಲರ ಸಂಘದ ಅಧ್ಯಕ್ಷ  ಕೆ.ಎನ್ ಶ್ರಿಹರ್ಷ, ವೈದ್ಯ ಡಾ. ನರೇಂದ್ರ, ಮುಖಂಡರಾದ ಸುರೇಶ್ ಸೇರಿಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.


    ಕಾರಣ್ಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಜಿ. ರಾಜು, ಉಪಾಧ್ಯಕ್ಷ ಕೆ. ನಾಗರಾಜ್, ಕಾರ್ಯಧ್ಯಕ್ಷರಾದ ಸುರೇಶ್‌ಕುಮಾರ್, ಟಿ. ಬಾಸ್ಕರ್, ಕಾರ್ಯದರ್ಶಿ ಅಂತೋಣಿ ರಾಜ್, ಖಜಾಂಚಿ ಎನ್. ನಾಗವೇಣಿ, ನಿರ್ದೇಶಕರಾದ ಯಶೋದಮ್ಮ, ಮಂಜುಳಾ, ಕಾರ್ತಿಕ್ ಮತ್ತು ಜೆ. ಕಾಂತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇಬ್ರಾಹಿಂ ಜೆಡಿಎಸ್ ಸೇರ್ಪಡೆ : ಹೆಚ್ಚಾದ ಭಿನ್ನಮತ

ಸಿ.ಎಂ ಇಬ್ರಾಹಿಂ

    * ಅನಂತಕುಮಾರ್
    ಭದ್ರಾವತಿ: ಕೇಂದ್ರ ಮಾಜಿ ಸಚಿವ ಸಿ.ಎಂ ಇಬ್ರಾಹಿಂ ಜನತಾದಳ (ಜಾತ್ಯಾತೀತ) ಪಕ್ಷಕ್ಕೆ ಸೇರ್ಪಡೆಗೊಂಡು ರಾಜ್ಯಾಧ್ಯಕ್ಷರಾಗಿ ಭಾನುವಾರ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಕ್ಷೇತ್ರದಲ್ಲಿ ರಾಜಕೀಯ ಭಿನ್ನಮತ ಮತ್ತಷ್ಟು ಸ್ಪೋಟಗೊಳ್ಳುತ್ತಿದ್ದು, ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ಶಾರದ ಅಪ್ಪಾಜಿಗೆ ಹಿನ್ನಡೆಯಾಗುವುದು ಬಹುತೇಕ ಖಚಿತವಾಗಿದೆ.
    ಈಗಾಗಲೇ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಬಹುತೇಕ ಸ್ಥಳೀಯ ಮುಖಂಡರು ಪಕ್ಷ ತೊರೆದಿದ್ದಾರೆ. ಇನ್ನೂ ಕೆಲವರು ಶಾರದ ಅಪ್ಪಾಜಿಯನ್ನು ಈಗಾಗಲೇ ಅಭ್ಯರ್ಥಿಯನ್ನಾಗಿ ಘೋಷಿಸಿದ್ದರೂ ಸಹ ಸ್ವಯಂ ಘೋಷಿತ ಅಭ್ಯರ್ಥಿಗಳಾಗಿ ಗುರುತಿಸಿಕೊಳ್ಳಲು ತೆರೆಮರೆಯಲ್ಲಿ ಯತ್ನಿಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಇದರಿಂದಾಗಿ ಶಾರದ ಅಪ್ಪಾಜಿಗೆ ಹಿನ್ನಡೆಯಾಗಲಿದೆ ಎಂಬ ಲೆಕ್ಕಾಚಾರಗಳು ನಡೆಯುತ್ತಿವೆ.
    ಅಪ್ಪಾಜಿ ಅಭಿಮಾನಿಗಳು, ಕಾರ್ಯಕರ್ತರಲ್ಲಿ ಅಸಮಾಧಾನ:
    ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಅವರೊಂದಿಗೆ ಬಹಳವರ್ಷಗಳ ಒಡನಾಟ ಹೊಂದಿದ್ದ ಹಾಗು ಆ ಮೂಲಕ ರಾಜಕೀಯದಲ್ಲಿ ನೆಲೆ ಕಂಡುಕೊಂಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ಹಾಗು ಬೆಂಬಲಿಗರು ಇತ್ತೀಚೆಗೆ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವುದು ಅಪ್ಪಾಜಿ ಅಭಿಮಾನಿಗಳು ಹಾಗು ಕಾರ್ಯಕರ್ತರಲ್ಲಿ ಅಸಮಾಧಾನವನ್ನುಂಟು ಮಾಡಿದೆ. ಈ ನಡುವೆ ಈ ಹಿಂದೆ ಅಪ್ಪಾಜಿ ಎದುರು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲು ಅನುಭವಿಸಿ ೩ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದ ಸಿ.ಎಂ ಇಬ್ರಾಹಿಂ ಪಕ್ಷದ ರಾಜ್ಯಾಧ್ಯಕ್ಷರಾಗಿರುವುದು ಮತ್ತಷ್ಟು ಅಸಮಾಧಾನಕ್ಕೆ ಕಾರಣವಾಗಿದೆ.
    ಅಪ್ಪಾಜಿ ವರ್ಚಸ್ಸಿಗೆ ಧಕ್ಕೆ :
    ೩ ಬಾರಿ ಶಾಸಕರಾಗಿದ್ದ ಎಂ.ಜೆ ಅಪ್ಪಾಜಿಯವರು ಕ್ಷೇತ್ರದಲ್ಲಿ ತಮ್ಮದೇ ಆದ ವರ್ಚಸ್ಸನ್ನು, ಅಭಿಮಾನಿ ಹಾಗು ಕಾರ್ಯಕರ್ತರ ಬಳಗವನ್ನು ಹೊಂದಿದ್ದರು. ಸುಮಾರು ೪೦ ರಿಂದ ೫೦ ಸಾವಿರದಷ್ಟು ವರ್ಚಸ್ಸಿನ ಮತಗಳು ಅಪ್ಪಾಜಿ ಪರವಾಗಿದ್ದವು. ಇದೀಗ ಅಪ್ಪಾಜಿ ನಿಧನದಿಂದಾಗಿ ಈ ಮತಗಳ ಮೇಲೆ ಕಣ್ಣಿಟ್ಟಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಅಪ್ಪಾಜಿಯೊಂದಿಗೆ ಗುರುತಿಸಿಕೊಂಡಿರುವ ಪ್ರಮುಖರನ್ನು ಸೆಳೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದು, ಅಪ್ಪಾಜಿಯವರ ಚುನಾವಣಾ ತಂತ್ರಗಾರಿಕೆ ಬೇಧಿಸಲು ಮುಂದಾಗಿರುವುದು ಗುಟ್ಟಾಗಿ ಉಳಿದಿಲ್ಲ. ಈಗಾಗಲೇ ಅಲ್ಪಸಂಖ್ಯಾತ ಸಮುದಾಯದ ಮುಖಂಡ ಫೀರ್ ಷರೀಫ್, ಛಲವಾದಿ ಸಮಾಜದ ಬದರಿನಾರಾಯಣ, ಶಿವರಾಜ್ ಹಾಗು ಶಿವಮಾದು ಸೇರಿದಂತೆ ಇನ್ನಿತರ ಪ್ರಮುಖರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಕಲ್ಪಿಸಿಕೊಡಲಾಗಿದೆ.   ಈ ನಡುವೆ ಅಪ್ಪಾಜಿ ವರ್ಚಸ್ಸಿಗೆ ಧಕ್ಕೆ ತರುವ ಹುನ್ನಾರಗಳು ಸಹ ನಡೆಸಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.  
    ಸಿ.ಎಂ ಇಬ್ರಾಹಿಂ ಹಿಂದೆ ದುಂಬಾಲು ಬಿದ್ದ ನಾಯಕರು:
    ಕಳೆದ ವರ್ಷ ಅಪ್ಪಾಜಿಯವರ ಪ್ರಥಮ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮುಂಬರುವ ವಿಧಾನಸಭಾ ಚುನಾವಣೆಗೆ ಶಾರದ ಅಪ್ಪಾಜಿಯನ್ನು ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಿದ್ದಾರೆ. ಆದರೂ ಸಹ ಪಕ್ಷದಲ್ಲಿನ ಕೆಲ ನಾಯಕರು ಮುಂದಿನ ಚುನಾವಣೆಗೆ ತೆರೆಮರೆಯಲ್ಲಿ ಆಕಾಂಕ್ಷಿಗಳಾಗಿರುವುದು ತಿಳಿದು ಬರುತ್ತಿದ್ದು, ಕಳೆದ ಸುಮಾರು ೧ ವರ್ಷದಿಂದ ಸಿ.ಎಂ ಇಬ್ರಾಹಿಂ ಹಿಂದೆ ದುಂಬಾಲು ಬಿದ್ದು ತಿರುಗುತ್ತಿದ್ದಾರೆ. ಇದರಿಂದಾಗಿ ಒಂದೆಡೆ ಶಾರದ ಅಪ್ಪಾಜಿಗೆ ಇರಿಸುಮುರಿಸು ಉಂಟಾಗುತ್ತಿದೆ. ಮತ್ತೊಂದೆಡೆ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡುತ್ತಿದೆ.  
    ಬಿಜೆಪಿ ಪಕ್ಷಕ್ಕೆ ಶಾರದ ಅಪ್ಪಾಜಿ ಸೆಳೆಯಲು ತೆರೆಮರೆಯಲ್ಲಿ ಕಸರತ್ತು :
ಕ್ಷೇತ್ರದಲ್ಲಿ ಅಪ್ಪಾಜಿಯವರ ವರ್ಚಸ್ಸಿನ ಮತಗಳ ಮೇಲೆ ಬಿಜೆಪಿ ಸಹ ಕಣ್ಣಿಟ್ಟಿದ್ದು, ಮುಂಬರುವ ಚುನಾವಣೆಗೆ ಶಾರದ ಅಪ್ಪಾಜಿಯನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಮಾಡಲು ಪಕ್ಷದ ಸ್ಥಳೀಯ ಮುಖಂಡರ ಮೂಲಕ ಸೆಳೆಯಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿರುವ ವಿಚಾರ ಸಹ ಗುಟ್ಟಾಗಿ ಉಳಿದಿಲ್ಲ. ಈಗಾಗಲೇ ಈ ಸಂಬಂಧ ಪ್ರಾಥಮಿಕ ಹಂತದ ಮಾತುಕತೆಗಳು ನಡೆದಿವೆ ಎನ್ನಲಾಗಿದೆ. ಈ ನಡುವೆ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರತಿ ಬಾರಿ ಹೊರಗಿನವರನ್ನು ಅಭ್ಯರ್ಥಿಯನ್ನಾಗಿ ಮಾಡುತ್ತಿದ್ದು, ಪಕ್ಷದ ನಿಷ್ಠಾವಂತ ಮುಖಂಡರು, ಕಾರ್ಯಕರ್ತರನ್ನು ಕಡೆಗಣಿಸುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.