Thursday, May 5, 2022

ನಗರಸಭೆ ವ್ಯಾಪ್ತಿಯಲ್ಲಿ ಪುನಃ ಪ್ಲಾಸ್ಟಿಕ್ ವಿರುದ್ಧ ಕಾರ್ಯಾಚರಣೆ : ನಿಷೇಧಿತ ಪ್ಲಾಸ್ಟಿಕ್ ವಶ, ದಂಡ

ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಪುನಃ ಹೆಚ್ಚಾಗಿದ್ದು, ಈ ಹಿನ್ನಲೆಯಲ್ಲಿ ನಗರಸಭೆ ಆಡಳಿತ ಗುರುವಾರ ಅಂಗಡಿ-ಮುಂಗಟ್ಟುಗಳ ಮೇಲೆ ಕಾರ್ಯಾಚರಣೆ ನಡೆಸಿತು.
    ಭದ್ರಾವತಿ, ಮೇ. ೫: ನಗರಸಭೆ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಪುನಃ ಹೆಚ್ಚಾಗಿದ್ದು, ಈ ಹಿನ್ನಲೆಯಲ್ಲಿ ನಗರಸಭೆ ಆಡಳಿತ ಗುರುವಾರ ಅಂಗಡಿ-ಮುಂಗಟ್ಟುಗಳ ಮೇಲೆ ಕಾರ್ಯಾಚರಣೆ ಆರಂಭಿಸಿದೆ.
    ಈಗಾಗಲೇ ನಗರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧಿಸಲಾಗಿದ್ದು, ಈ ನಡುವೆಯೂ ನಿಷೇಧಿಸಲಾಗಿರುವ ಪ್ಲಾಸ್ಟಿಕ್ ಬಳಕೆ ಹೆಚ್ಚಾಗಿ ಕಂಡು ಬರುತ್ತಿದೆ. ಈ ಹಿನ್ನಲೆಯಲ್ಲಿ ಪುನಃ ಜಾಗೃತಗೊಂಡಿರುವ ನಗರಸಭೆ ಆಡಳಿತ ಪೌರಾಯುಕ್ತ ಕೆ. ಪರಮೇಶ್ ನೇತೃತ್ವದಲ್ಲಿ ಕಾರ್ಯಾಚರಣೆಗೆ ಮುಂದಾಗಿದೆ.
    ಹಳೇನಗರದ ಬಸವೇಶ್ವರ ವೃತ್ತದಲ್ಲಿರುವ ತರಕಾರಿ ಮಾರುಕಟ್ಟೆ ಸುತ್ತಮುತ್ತ ಹಾಗು ಮಾಧವಚಾರ್ ವೃತ್ತ, ಸಿ.ಎನ್ ರಸ್ತೆ  ಸೇರಿದಂತೆ ಕೆಲವೆಡೆ ಕಾರ್ಯಾಚರಣೆ ನಡೆಸಲಾಗಿದ್ದು, ನಿಷೇಧಿತ ಪಾಸ್ಟಿಕ್ ಮಾರಾಟದಲ್ಲಿ ತೊಡಗಿದ್ದ ಅಂಗಡಿ-ಮುಂಗಟ್ಟುಗಳಿಗೆ ದಂಡ ವಿಧಿಸಲಾಗಿದೆ. ಮೊದಲ ದಿನ ಸುಮಾರು ೬ ಸಾವಿರ ರು. ದಂಡ ವಸೂಲಾತಿ ಮಾಡಲಾಗಿದ್ದು, ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದೆ.
    ಪೌರಾಯುಕ್ತ ಕೆ. ಪರಮೇಶ್ ಪತ್ರಿಕೆಯೊಂದಿಗೆ ಮಾತನಾಡಿ, ನಿಷೇಧಿಸಲಾಗಿರುವ ಪ್ಲಾಸ್ಟಿಕ್ ಬಳಕೆ ಹೆಚ್ಚಾಗಿರುವ ಹಿನ್ನಲೆಯಲ್ಲಿ ಮೊದಲ ಹಂತದಲ್ಲಿ ಕಾರ್ಯಾಚರಣೆ ನಡೆಸಿ ದಂಡ ವಿಧಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು.
    ಕಾರ್ಯಾಚರಣೆಯಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾದ ಆರ್.ಬಿ ಸತೀಶ್, ಆಶಾಲತಾ, ಕಿರಿಯ ಆರೋಗ್ಯ ನಿರೀಕ್ಷಕಿ ಶೃತಿ, ಹೊಸಮನೆ ಪೊಲೀಸ್ ಠಾಣಾಧಿಕಾರಿ ಸುನೀತ, ನಗರಸಭೆ ಮೇಸ್ತ್ರಿ ಎನ್. ಗೋವಿಂದ, ದಾನಂ, ವೆಂಕಟೇಶ್, ಎನ್. ಮಂಜುನಾಥ್, ಅಭಯ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಭಕ್ತರ ಗಮನ ಸೆಳೆದ ಆಕರ್ಷಕ ಸಿಡಿ ಉತ್ಸವ

ಭದ್ರಾವತಿ ಹಳೆನಗರದ ಶ್ರೀ ಹಳದಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಜಾತ್ರಾ ಮಹೋತ್ಸವ ಊರ ಹಬ್ಬದ ಅಂಗವಾಗಿ ಗುರುವಾರ ಬೆಳಗ್ಗೆ ಮಹಾ ಸಿಡಿ ಉತ್ಸವ ಅದ್ಧೂರಿಯಾಗಿ ಜರುಗಿತು.
    ಭದ್ರಾವತಿ, ಮೇ. ೫ : ಹಳೆನಗರದ ಶ್ರೀ ಹಳದಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಜಾತ್ರಾ ಮಹೋತ್ಸವ ಊರ ಹಬ್ಬದ ಅಂಗವಾಗಿ ಗುರುವಾರ ಬೆಳಗ್ಗೆ ಮಹಾ ಸಿಡಿ ಉತ್ಸವ ಅದ್ಧೂರಿಯಾಗಿ ಜರುಗಿತು.
    ಜೆಡಿಎಸ್ ಮುಖಂಡರಾದ ಶಾರದಾ ಅಪ್ಪಾಜಿ ಉತ್ಸವ ಮೆರವಣಿಗೆಯೊಂದಿಗೆ ಆಗಮಿಸಿದ ಶ್ರೀ ಹಳದಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮಹಾ ಸಿಡಿ ಉತ್ಸವಕ್ಕೆ ಚಾಲನೆ ನೀಡಿದರು.
    ಅಂಬೇಡ್ಕರ್ ನಗರದ ನಿವಾಸಿ ಲಿಂಗಪ್ಪ ಸಿಡಿ ಆಡುವ ಮೂಲಕ ಈ ಬಾರಿ ಗಮನ ಸೆಳೆದರು. ಪ್ರತಿ ೨ ವರ್ಷಕ್ಕೊಮ್ಮೆ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಸಿಡಿ ಉತ್ಸವ ಆಕರ್ಷಕ ಸಾಂಪ್ರದಾಯಕ ಆಚರಣೆಯಾಗಿದೆ. ಮಕ್ಕಳ ತೊಟ್ಟಿಲು ಸೇವೆ ಸಿಡಿ ಉತ್ಸವದಲ್ಲಿ ಮತ್ತೊಂದು ಆಕರ್ಷಣೆಯಾಗಿದೆ.
    ಸಿಡಿ ಉತ್ಸವ ವೀಕ್ಷಣೆಗೆ ನಗರದ ವಿವಿಧೆಡೆಗಳಿಂದ ಭಕ್ತಾಧಿಗಳು ಆಗಮಿಸಿದ್ದರು. ಗಣ್ಯರು, ದೇವಸ್ಥಾನ ಸಮಿತಿ ಪದಾಧಿಕಾರಿಗಳು, ಸೇವಾಕರ್ತರು  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಶ್ರೀ ಪಿಳ್ಳಂಗಿ ಮಾರಿಯಮ್ಮ ಸೇವಾ ಸಮಿತಿ ವತಿಯಿಂದ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.

Wednesday, May 4, 2022

ಮೇ.೫ರಂದು ಕಸಾಪ ೧೦೮ನೇ ಸಂಸ್ಥಾಪನಾ ದಿನಾಚರಣೆ : ದತ್ತಿ ಕಾರ್ಯಕ್ರಮ

    ಭದ್ರಾವತಿ, ಮೇ. ೪: ಕನ್ನಡಿಗರ ಹೆಮ್ಮೆಯ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ ೧೦೮ನೇ ಸಂಸ್ಥಾಪನಾ ದಿನಾಚರಣೆ ಹಾಗು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ದತ್ತಿ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ಮೇ.೫ರಂದು ಸಂಜೆ ೫ ಗಂಟೆಗೆ ನ್ಯೂಟೌನ್ ಲಯನ್ಸ್ ಕ್ಲಬ್‌ನಲ್ಲಿ ನಡೆಯಲಿದೆ.
    ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಎಸ್‌ಎವಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಸ್. ಹರಿಣಾಕ್ಷಿ ಉಪನ್ಯಾಸ ನೀಡಲಿದ್ದಾರೆ.
    ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಲಿದ್ದು, ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಸಿದ್ದಾರ್ಥ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ, ಕಸಾಪ ಹೊಳೆಹೊನ್ನೂರು ಹೋಬಳಿ ಘಟಕದ ಅಧ್ಯಕ್ಷ ಎಸ್.ಬಿ ಸಿದ್ದಪ್ಪ, ಹಿರಿಯೂರು ಹೋಬಳಿ ಘಟಕದ ಅಧ್ಯಕ್ಷ ಎಚ್.ಬಿ ಸಿದ್ದೋಜಿರಾವ್, ಕರ್ನಾಟಕ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಕೋಡ್ಲು ಯಜ್ಞಯ್ಯ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
    ದತ್ತಿದಾನಿಗಳಾದ ಡಾ. ವಿಜಯದೇವಿ, ಎನ್. ಶ್ರೀನಿವಾಸ್, ಡಾ. ಜಿ.ಎಂ ನಟರಾಜ್, ಜೀವಂದರ್ ಕುಮಾರ್ ಹೋತಪೇಟಿ, ಪ್ರಭಾಕರ ಬೀರಯ್ಯ, ಕರೀಗೌಡ್ರ ನಾಗರಾಜಪ್ಪ ಆರುಂಡಿ ಮತ್ತು ವಾಗೀಶ್ ಕೋಠಿ ಅವರಿಗೆ ಗೌರವ ಸಮರ್ಪಣೆ ನಡೆಯಲಿದೆ.
    ದತ್ತಿ ನಿಧಿ ಕಾರ್ಯಕ್ರಮ:
    ಸಂಜೆ ೫.೩೦ಕ್ಕೆ ನಡೆಯಲಿರುವ ದಿವಂಗತ ಶಿವಲಿಂಗಮ್ಮ ಮತ್ತು ಡಾ. ಜಿ.ಎಂ ಮುರುಗೇಂದ್ರಯ್ಯ ದತ್ತಿ ಕಾರ್ಯಕ್ರಮದಲ್ಲಿ ಸಾಹಿತ್ಯ ಮತ್ತು ಸಾಮಾಜಿಕ ನ್ಯಾಯ ಕುರಿತು ಸಿದ್ದಾರ್ಥ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ ಉಪನ್ಯಾಸ ನೀಡಲಿದ್ದಾರೆ. ಅಂಧರ ಕೇಂದ್ರದ ಕಲಾವಿದರಿಂದ ಸುಗಮ ಸಂಗೀತ ನಡೆಯಲಿದ್ದು, ನಂತರ ಎಸ್. ಮನೋಜ್ ದತ್ತಿ ಕಾರ್ಯಕ್ರಮ ನಡೆಯಲಿದೆ. ಕಸಾಪ ತಾಲೂಕು ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ದತ್ತಿ ದಾನಿಗಳಾದ ಡಾ. ಜಿ.ಎಂ ನಟರಾಜ್, ಎನ್. ಶ್ರೀನಿವಾಸ್ ಉಪಸ್ಥಿತರಿರುವರು.

ಕಲಿಕಾ ಚೇತರಿಕೆ ಉಪಕ್ರಮದ ತರಬೇತಿ ಸಾರ್ಥಕಗೊಳಿಸಿ : ಮಂಜುನಾಥ್

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಭದ್ರಾವತಿ ನ್ಯೂಟೌನ್ ಸೆಂಟ್ ಚಾರ್ಲ್ಸ್ ಶಾಲೆಯಲ್ಲಿ ಅಯೋಜಿಸಲಾಗಿದ್ದ ಕಲಿಕಾ ಚೇತರಿಕೆ ತರಬೇತಿ ಕಾರ್ಯಾಗಾರ ಸಾರ್ವಜನಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ(ಚಿತ್ರದುರ್ಗ) ಮಂಜುನಾಥ್ ಉದ್ಘಾಟಿಸಿ ಮಾತನಾಡಿದರು.
    ಭದ್ರಾವತಿ, ಮೇ. ೪: ಕೋವಿಡ್-೧೯ ಕರಾಳತೆಯಲ್ಲಿ ಮಕ್ಕಳು ಕಲಿಕೆಯಿಂದ ವಂಚಿತರಾಗಿದ್ದು, ಇದನ್ನು ಸರಿದೊಗಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ  ಕಲಿಕಾಚೇತರಿಕೆ ಉಪಕ್ರಮಗಳನ್ನು ಜಾರಿಗೆ ತಂದಿದೆ. ಶಿಕ್ಷಕರು ತರಬೇತಿ ಮೂಲಕ ಪ್ರತಿ ಮಗುವಿಗೆ ಈ ಉಪಕ್ರಮಗಳನ್ನು ಸಮರ್ಪಕವಾಗಿ ತಲುಪಿಸುವ ಕಾರ್ಯ ಕೈಗೊಳ್ಳಬೇಕಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ(ಚಿತ್ರದುರ್ಗ) ಮಂಜುನಾಥ್ ಹೇಳಿದರು.
    ಅವರು ಬುಧವಾರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನಗರದ ನ್ಯೂಟೌನ್ ಸೆಂಟ್ ಚಾರ್ಲ್ಸ್ ಶಾಲೆಯಲ್ಲಿ ಅಯೋಜಿಸಲಾಗಿದ್ದ ಕಲಿಕಾ ಚೇತರಿಕೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು
    ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಕಾರ್ಯಾಗಾರದಲ್ಲಿ ತಾಲೂಕಿನ ಶಾಲಾ ಶಿಕ್ಷಕರಿಗೆ ಎಲ್ಲಾ ವಿಷಯಗಳ ಕುರಿತು ಒಟ್ಟು ೧೬ ಘಟಕಗಳಲ್ಲಿ ತರಬೇತಿ ನೀಡಲಾಗುತ್ತದೆ. ಶಿಕ್ಷಕರು ಇದರ ಸದುಪಯೋಗಪಡೆದುಕೊಂಡು ಸಾರ್ಥಕಗೊಳಿಸಬೇಕೆಂದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ  ಮಾತನಾಡಿ, ಶಿಕ್ಷಕರು ತರಬೇತಿ ಸದ್ಬಳಕೆ ಮಾಡಿಕೊಂಡು ತಾಲೂಕಿನ ಎಲ್ಲಾ ಶಾಲೆಯ ಪ್ರತಿ ಮಗುವಿನ ಕಲಿಕೆಯ ನಷ್ಟವನ್ನು ಈ ಮೂಲಕ ಸರಿದೊಗಿಸಿ ಎಂದರು.
    ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಗಣೇಶ್, ಟಿಪಿಇಓ ಪ್ರಭು, ಶಿಕ್ಷಣ ಸಂಯೋಜಕರುಗಳಾದ ರವಿಕುಮಾರ್, ಜ್ಯೋತಿ,  ಶ್ಯಾಮಲಾ  ಮತ್ತು ಬಿಆರ್‌ಪಿ ನವೀದ್ ಅಹಮದ್, ಎಂಅರ್‌ಪಿಗಳಾದ ಪಿ.ಕೆ ಸತೀಶ್, ಮಾಯಮ್ಮ, ಮಂಜುನಾಥ್ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪೃಥ್ವಿ ರಾಜ್ ಹಾಗು ಸಂಪನ್ಮೂಲ ವ್ಯಕ್ತಿಗಳು ಸೇರಿದಂತೆ  ಇನ್ನಿತರರು ಉಪಸ್ಥಿತರಿದ್ದರು.  ತಾಲೂಕಿನ ವಿವಿಧ ಶಾಲೆಗಳ ಶಿಕ್ಷಕರು  ಕಾರ್ಯಗಾರದಲ್ಲಿ ಪಾಲ್ಗೊಂಡಿದ್ದರು.

ಉದ್ಯೋಗ ಖಾತ್ರಿ ಯೋಜನೆ : ವಿಕಲಚೇತನರ ನೋಂದಾಣಿ


ಭದ್ರಾವತಿ :  ತಾಲೂಕಿನ ಅರಕೆರೆ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ದುಡಿಯೋಣ ಬಾ ಅಭಿಯಾನದಲ್ಲಿ ಬುಧವಾರ ವಿಶೇಷವಾಗಿ ವಿಲಚೇತನರ  ನೋಂದಾಣಿ ನಡೆಸಲಾಯಿತು.
 ಉದ್ಯೋಗ ಚೀಟಿ ವಿತರಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಡಿ ಶೇಖರಪ್ಪ, ಖಾತ್ರಿ ಯೋಜನೆಯಲ್ಲಿ ವಿಕಲಚೇತನರಿಗೆ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ. ಕೆಲಸದಲ್ಲಿ ಶೇ. 50ರಷ್ಟು ರಿಯಾಯಿತಿ ನೀಡಲಾಗಿದೆ.  ದಿನದ ಕೂಲಿ 309 ರು. ಜೊತೆಗೆ 10 ರು. ಹೆಚ್ಚುವರಿಯಾಗಿ ಸಲಕರಣೆ ವೆಚ್ಚವಾಗಿ ನೀಡಲಾಗುವುದು. ಇದರ ಸದುಪಯೋಗ ಪಡೆದುಕೊಂಡು ವಿಕಲಚೇತನರು ಸಹ ಆರ್ಥಿಕವಾಗಿ ಸದೃಢ ಹೊಂದುವಂತೆ ಮನವಿ ಮಾಡಿದರು.
          ಗ್ರಾಮ ಪಂಚಾಯಿತಿ ಸದಸ್ಯ  ಎಸ್.ಎಲ್ ರವಿಕುಮಾರ್ , ಪಿಡಿಓ ಸುರೇಶ್ ಕುಮಾರ್ , ಎಸ್ ಡಿಎ ಭಾಸ್ಕರ್, ವಿ ಆರ್ ಡಬ್ಲ್ಯೂ ಪರಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು . 

Tuesday, May 3, 2022

ಶ್ರೀ ಹಳದಮ್ಮ ದೇವಿ ‘ಊರ ಹಬ್ಬ’ಕ್ಕೆ ಸಂಸದ ಬಿ.ವೈ ರಾಘವೇಂದ್ರ ಚಾಲನೆ

ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ದ ೩೩ ಗ್ರಾಮಗಳ ಅದಿದೇವತೆ ಶ್ರೀ ಹಳದಮ್ಮ ದೇವಿಯ ಜಾತ್ರಾಮಹೋತ್ಸವ 'ಊರ ಹಬ್ಬ'ಕ್ಕೆ ಮಂಗಳವಾರ ರಾತ್ರಿ ಸಂಸದ ಬಿ.ವೈ ರಾಘವೇಂದ್ರ ಚಾಲನೆ ನೀಡಿ ಮಾತನಾಡಿದರು.
    ಭದ್ರಾವತಿ, ಮೇ. ೩: ಹಳೇನಗರದ ಪುರಾಣ ಪ್ರಸಿದ್ದ ೩೩ ಗ್ರಾಮಗಳ ಅದಿದೇವತೆ ಶ್ರೀ ಹಳದಮ್ಮ ದೇವಿಯ ಜಾತ್ರಾಮಹೋತ್ಸವ 'ಊರ ಹಬ್ಬ'ಕ್ಕೆ ಮಂಗಳವಾರ ರಾತ್ರಿ ಸಂಸದ ಬಿ.ವೈ ರಾಘವೇಂದ್ರ ಚಾಲನೆ ನೀಡಿದರು.
    ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶ್ರೀ ಹಳದಮ್ಮ ದೇವಿ ಎಲ್ಲರಿಗೂ ಒಳಿತು ಮಾಡುವಂತೆ ಪ್ರಾರ್ಥಿಸುತ್ತೇನೆ. ದೇವಿ ದರ್ಶನಕ್ಕೆ ಅವಕಾಶ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ದೇವಸ್ಥಾನ ಮತ್ತಷ್ಟು ಅಭಿವೃದ್ಧಿಗೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಸಹಕಾರ ನೀಡುವುದಾಗಿ ಭರವಸೆ ನೀಡಿದರು
    ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಎಸ್. ದತ್ತಾತ್ರಿ, ನಗರಸಭಾ ಸದಸ್ಯರಾದ ಆರ್. ಶ್ರೇಯಸ್, ಶಶಿಕಲಾ, ಅನುಪಮಾ, ದೇವಸ್ಥಾನ ಸಮಿತಿ ಕಾರ್ಯದರ್ಶಿ ಬಿ.ಎಂ ಸಂತೋಷ್, ಪ್ರಮುಖರಾದ ಕೆ. ಮಂಜುನಾಥ್, ಜಿ. ಆನಂದಕುಮಾರ್, ಎಂ. ಪ್ರಭಾಕರ್, ಗಿರೀಶ್, ಬಿ.ಎಸ್ ಗಣೇಶ್, ರಾಜಶೇಖರ್ ಉಪ್ಪಾರ, ಗೋಪಿ, ಬಿ.ಎಸ್ ಬಸವೇಶ್ ಹಾಗು ದೇವಸ್ಥಾನ ಸೇವಾ ಸಮಿತಿ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಜಾತ್ರಾ ಮಹೋತ್ಸವ ೬ ದಿನಗಳ ಕಾಲ ನಡೆಯಲಿದೆ. ಮೊದಲ ದಿನವೇ ಸಾವಿರಾರು ಭಕ್ತಾಧಿಗಳು ಪಾಲ್ಗೊಂಡು ದೇವಿಯ ದರ್ಶನ ಪಡೆದು ಕೃಪೆಗೆ ಪಾತ್ರರಾದರು. ಮಹಿಳೆಯರಿಂದ ಡೊಳ್ಳು ಕುಣಿತ ಸೇರಿದಂತೆ ಇನ್ನಿತರ ಕಲಾತಂಡಗಳು ಪಾಲ್ಗೊಂಡಿದ್ದವು. ಆಕರ್ಷಕ ಸಿಡಿಮದ್ದು ಪ್ರದರ್ಶನ ನಡೆಯಿತು.

ನಗರಸಭೆಯಲ್ಲಿ ಬಸವೇಶ್ವರರ ಜಯಂತ್ಯೋತ್ಸವ

ವಿಶ್ವ ಜ್ಞಾನಿ, ಮಹಾಮಾನವತಾವಾದಿ ಜಗಜ್ಯೋತಿ ಬಸವೇಶ್ವರರ ಜಯಂತೋತ್ಸವ ಮಂಗಳವಾರ ಭದ್ರಾವತಿ ನಗರಸಭೆಯಲ್ಲಿ ಆಚರಿಸಲಾಯಿತು.
    ಭದ್ರಾವತಿ, ಮೇ. ೩: ವಿಶ್ವ ಜ್ಞಾನಿ, ಮಹಾಮಾನವತಾವಾದಿ ಜಗಜ್ಯೋತಿ ಬಸವೇಶ್ವರರ ಜಯಂತೋತ್ಸವ ಮಂಗಳವಾರ ನಗರಸಭೆಯಲ್ಲಿ ಆಚರಿಸಲಾಯಿತು.
    ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್, ಪೌರಾಯುಕ್ತ ಕೆ. ಪರಮೇಶ್, ಹಿರಿಯ ಸದಸ್ಯ ಬಿ.ಕೆ ಮೋಹನ್ ಹಾಗೂ ಅಧಿಕಾರಿ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. ಈಶ್ವರಪ್ಪ ನಿರೂಪಿಸಿ, ರಾಜಕುಮಾರ್ ಸ್ವಾಗತಿಸಿದರು. ನರಸಿಂಹ ಮೂರ್ತಿ ವಂದಿಸಿದರು.