Thursday, May 12, 2022

ಉಡುಪಿ ಮದಗ ಅತ್ರಾಡಿ ಜೋಡಿ ಕೊಲೆ ಪ್ರಕರಣ : ಓರ್ವನ ಬಂಧನ

ಉಡುಪಿ ಮದಗ ಅತ್ರಾಡಿಯಲ್ಲಿ ಕೊಲೆಯಾಗಿರುವ ಚೆಲುವಿ ಹಾಗು ಈಕೆಯ ಮಗಳು ಪ್ರಿಯಾ.
    ಭದ್ರಾವತಿ, ಮೇ. ೧೨: ತಾಯಿ-ಮಗಳು ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಹಿರಿಯಡ್ಕ ಪೊಲೀಸರು ಇಲ್ಲಿನ ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆ ವ್ಯಕ್ತಿಯೋರ್ವನನ್ನು ಬಂಧಿಸಿರುವುದು ತಿಳಿದು ಬಂದಿದೆ.
    ಉಡುಪಿ ತಾಲೂಕಿನ ಮದಗ ಅತ್ರಾಡಿ ಗ್ರಾಮದಲ್ಲಿ ಚೆಲುವಿ ಎಂಬ ಗೃಹಿಣಿ ಹಾಗು ಈಕೆಯ ೧೦ ವರ್ಷದ ಮಗಳು ಪ್ರಿಯಾಳನ್ನು ಕೊಲೆ ಮಾಡಿರುವ ಘಟನೆ ನಡೆದಿದ್ದು,  ಈ ಸಂಬಂಧ ದೇವಿ ಎಂಬುವರು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
    ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಕೈಗೊಂಡು ಪ್ರಕರಣ ಭೇದಿಸಿದ್ದು, ಕೊಲೆಯಾದ ಚೆಲುವಿಯ ಸಂಬಂಧಿ ಬೊಮ್ಮನಕಟ್ಟೆ ನಿವಾಸಿ ಹರೀಶ್ ಅಲಿಯಾಸ್ ಗಣೇಶ್ ಎಂಬಾತನನ್ನು ಬಂದಿಸಿ ಕರೆದೊಯ್ದಿದ್ದಾರೆ ಎನ್ನಲಾಗಿದೆ.
    ಘಟನೆ ವಿವರ:
    ಚೆಲುವಿ ಸುಮಾರು ೧೫ ವರ್ಷದ ಹಿಂದೆ ಸುಬ್ರಮಣ್ಯ ಎಂಬಾತನೊಂದಿಗೆ ಮದುವೆಯಾಗಿದ್ದು, ಈ ಸಂದರ್ಭದಲ್ಲಿ ಚೆಲುವಿ ಮಣಿಪಾಲದ ಎಣ್ಣೆ ಪ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದಾಗ ರಶೀದ್ ಎಂ ವ್ಯಕ್ತಿ ಪರಿಚಯವಾಗಿದೆ. ನಂತರದ ದಿನಗಳಲ್ಲಿ ಚೆಲುವಿ ಗಂಡನನ್ನು ಬಿಟ್ಟು ರಶೀದ್‌ನೊಂದಿಗೆ ಮುಂಬೈಗೆ ತೆರಳಿದ್ದು, ಅಲ್ಲಿ ಸುಮಾರು ೨ ವರ್ಷವಿದ್ದು, ಪುನಃ ಹಿಂದಿರುಗಿ ಕಾರ್ಕಳದಲ್ಲಿ ರಶೀದ್‌ನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಈ ವೇಳೆ ಈಕೆಗೆ ಪ್ರೀತಿಮ್ ಮತ್ತು ಪ್ರಿಯಾ ಎಂಬ ಇಬ್ಬರು ಮಕ್ಕಳು ಜನಿಸಿದ್ದಾರೆ. ನಂತರದ ದಿನಗಳಲ್ಲಿ ಚೆಲುವಿ ರಶೀದ್‌ನನ್ನು ಸಹ ಬಿಟ್ಟು ತನ್ನ ತಾಯಿ ಮನೆ ಮದಗ ಅತ್ರಾಡಿ ಗ್ರಾಮಕ್ಕೆ ಬಂದು ನೆಲೆಸಿದ್ದು, ಈ ನಡುವೆ ಸಂಬಂಧಿ ಹರೀಶ್ ಈಕೆಯ ಮನೆಗೆ ಬಂದು ಹೋಗುತ್ತಿದ್ದು, ಮದುವೆಯಾಗುವಂತೆ ಪೀಡಿಸುತ್ತಿದ್ದನು ಎನ್ನಲಾಗಿದೆ. ಈ ನಡುವೆ ಇಬ್ಬರ ನಡುವೆ ಜಗಳ ಉಂಟಾಗಿ ತಾಯಿ ಮತ್ತು ಮಗಳ ಕೊಲೆಗೆ ಕಾರಣವಾಗಿದೆ ಎನ್ನಲಾಗಿದೆ.

ಉದ್ಯಮಿ, ಸಮಾಜ ಸೇವಕ ಆನಂದ್ ಎಎಪಿ ಪಕ್ಷಕ್ಕೆ ಸೇರ್ಪಡೆ

ಭದ್ರಾವತಿ ನಗರದ ಉದ್ಯಮಿ, ಸಮಾಜ ಸೇವಕ ಮಾರುತಿ ಮೆಡಿಕಲ್ ಆನಂದ್‌ರವರು ಆಮ್ ಆದ್ಮಿ ಪಾರ್ಟಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
    ಭದ್ರಾವತಿ, ಮೇ. ೧೨: ನಗರದ ಉದ್ಯಮಿ, ಸಮಾಜ ಸೇವಕ ಮಾರುತಿ ಮೆಡಿಕಲ್ ಆನಂದ್‌ರವರು ಆಮ್ ಆದ್ಮಿ ಪಾರ್ಟಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
    ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ, ರಾಜ್ಯ ಕಾರ್ಯದರ್ಶಿ ದರ್ಶನ್ ಜೈನ್ ಹಾಗು ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ಸಮ್ಮುಖದಲ್ಲಿ ಆನಂದ್ ಎಎಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
    ಆನಂದ್‌ರವರು ಈ ಹಿಂದೆ ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದು, ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದರು. ಆದರೆ ಸ್ಪರ್ಧೆಗೆ ಅವಕಾಶ ನೀಡದ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಇದೀಗ ಎಎಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಕ್ಷೇತ್ರದಲ್ಲಿ ಪಕ್ಷವನ್ನು ಬಲಪಡಿಸಲು ಮುಂದಾಗಿದ್ದಾರೆ.
    ಕಳೆದ ಸುಮಾರು ೨ ವರ್ಷಗಳ ಹಿಂದೆ ಕೊರೋನಾ ಲಾಕ್‌ಡೌನ್ ಸಂದರ್ಭದಲ್ಲಿ ತಾಲೂಕಿನ ಸುಮಾರು ೧೦ ಸಾವಿರ ಕಡು ಬಡವರಿಗೆ ಉಚಿತವಾಗಿ ದಿನಸಿ ಸಾಮಾಗ್ರಿಗಳನ್ನು ವಿತರಿಸಿದ್ದರು.  
    ಪಕ್ಷದ ಸೇರ್ಪಡೆ ಕಾರ್ಯಕ್ರಮದಲ್ಲಿ ಪ್ರಮುಖರಾದ ಡಿ.ಎಂ ಚಂದ್ರಪ್ಪ, ಪರಮೇಶ್ವರಚಾರ್, ಎ. ಮಸ್ತಾನ್, ಜೋಸೆಫ್, ರಮೇಶ್, ರೇಷ್ಮಬಾನು, ಜಾವಿದ್, ಎನ್.ಪಿ ಜೋಸೆಫ್  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ದಿಂಡಿ ಉತ್ಸವ : ಮೇ.೧೩ರಂದು ರಾಜಬೀದಿ ಉತ್ಸವ

    ಭದ್ರಾವತಿ, ಮೇ. ೧೨: ಭಾವಸಾರ ಕ್ಷತ್ರೀಯ ಸಮಾಜದ ವತಿಯಿಂದ ನಗರದ ಭೂತನಗುಡಿಯಲ್ಲಿರುವ ಕೃಷ್ಣ ರುಕ್ಮಿಣಿ ದೇವಸ್ಥಾನದಲ್ಲಿ ೩ ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ದಿಂಡಿ ಉತ್ಸವ ಅಂಗವಾಗಿ ಮೇ.೧೩ರಂದು ರಾಜಬೀದಿ ಉತ್ಸವ ನಡೆಯಲಿದೆ.
    ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೧೨.೩೦ರ ವರೆಗೆ ರಾಜಬೀದಿ ಉತ್ಸವ ನಡೆಯಲಿದ್ದು, ಮಧ್ಯಾಹ್ನ ೧ ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ.
    ಉತ್ಸವದ ಅಂಗವಾಗಿ ಮೊದಲ ದಿನ ಪೋತಿ ಸ್ಥಾಪನೆ ನೆರವೇರಿಸಲಾಗಿದ್ದು, ಗುರುವಾರ ಜಾಗರಣೆ ನಡೆಯಿತು. ವಿವಿಧ ಸಂಘ-ಸಂಸ್ಥೆಗಳ, ರಾಜಕೀಯ ಪಕ್ಷಗಳ ಪ್ರಮುಖರು, ಗಣ್ಯರು, ಜನಪ್ರತಿನಿಧಿಗಳು ದಿಂಡಿ ಉತ್ಸವದಲ್ಲಿ ಪಾಲ್ಗೊಂಡು ಭಾವಸಾರ ಕ್ಷತ್ರೀಯ ಸಮಾಜದವರೊಂದಿಗೆ ಸಂಭ್ರಮ ಹಂಚಿಕೊಳ್ಳುತ್ತಿದ್ದು, ಶುಕ್ರವಾರ ನಡೆಯಲಿರುವ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸಮಾಜದ ಅಧ್ಯಕ್ಷ ಡಿ.ಕೆ ರಾಘವೇಂದ್ರರಾವ್ ಕೋರಿದ್ದಾರೆ.

Wednesday, May 11, 2022

೩ ಮಂದಿ ದರೋಡೆಕೋರರ ಬಂಧನ : ಪೇಪರ್‌ಟೌನ್ ಪೊಲೀಸರ ಯಶಸ್ವಿ ಕಾರ್ಯಾಚರಣೆ

ರಾತ್ರಿ ವೇಳೆ ಆಟೋ ಅಡ್ಡಗಟ್ಟಿ ನಗದು ಹಣ ದರೋಡೆ ಮಾಡಿದ್ದ ೩ ಮಂದಿ ದರೋಡೆಕೋರರನ್ನು ಬಂಧಿಸುವಲ್ಲಿ ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆ ಸಿಬ್ಬಂದಿಗಳು ಯಶಸ್ವಿಯಾಗಿರುವುದು.
    ಭದ್ರಾವತಿ, ಮೇ. ೧೧: ರಾತ್ರಿ ವೇಳೆ ಆಟೋ ಅಡ್ಡಗಟ್ಟಿ ನಗದು ಹಣ ದರೋಡೆ ಮಾಡಿದ್ದ ೩ ಮಂದಿ ದರೋಡೆಕೋರರನ್ನು ಬಂಧಿಸುವಲ್ಲಿ ಪೇಪರ್ ಟೌನ್ ಪೊಲೀಸ್ ಠಾಣೆ ಸಿಬ್ಬಂದಿಗಳು ಯಶಸ್ವಿಯಾಗಿರುವ ಘಟನೆ ನಡೆದಿದೆ.
    ತಾಲೂಕಿನ ಕೆಂಚೇನಹಳ್ಳಿ ನಿವಾಸಿಗಳಾದ ಬಸವರಾಜು ಅಲಿಯಾಸ್ ಟಮಟೋ(೨೪), ಪವನ ಅಲಿಯಾಸ್ ಕಣ್ಣು(೨೬) ಹಾಗು ಶಿವಮೊಗ್ಗ ಯರಗನಾಳ್ ಗ್ರಾಮದ ನಿವಾಸಿ ಜೆ. ಭರತ(೨೪) ಬಂಧಿತ ದರೋಡೆಕೋರರಾಗಿದ್ದಾರೆ.
    ದರೋಡೆಕೋರರಿಂದ ೩೭ ಸಾವಿರ ರು. ನಗದು ಹಾಗು ಕೃತ್ಯಕ್ಕೆ ಬಳಸಿದ್ದ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
    ಘಟನೆ ವಿವರ:
    ತರೀಕೆರೆಯ ಗೋಪಾಲ ಕಾಲೋನಿ ನಿವಾಸಿ ಎಚ್.ಎಸ್ ಜಯೇಂದ್ರ ಎಂಬುವರು ತಮ್ಮ ಹೊಸ ಮನೆಯ ಗೃಹ ಪ್ರವೇಶ ಕಾರ್ಯಕ್ಕೆ ಸ್ನೇಹಿತರಿಂದ ೧ ಲಕ್ಷ ರು. ನಗದು ಹಣ ಪಡೆದುಕೊಂಡು ತಮ್ಮ ಊರಿನ ನಿವಾಸಿ ತಮ್ಮಯ್ಯ ಅವರೊಂದಿಗೆ ಮೇ.೯ರಂದು ರಾತ್ರಿ ಸುಮಾರು ೧೧.೩೦ರ ಸಮಯದಲ್ಲಿ ಲಗೇಜ್ ಆಟೋದಲ್ಲಿ ತಾಲೂಕಿನ ಬಾರಂದೂರು ಗ್ರಾಮದ  ಪೆಟ್ರೋಲ್ ಬಂಕ್‌ನಲ್ಲಿ ಡಿಸೇಲ್ ಹಾಕಿಸಿಕೊಂಡು ಊರಿಗೆ ಹಿಂದಿರುವಾಗ ಕೃಷಿ ತರಬೇತಿ ಕೇಂದ್ರದ ಮುಂಭಾಗ ಈ ಮೂವರು ದರೋಡೆಕೋರರು ಅಡ್ಡಗಟ್ಟಿ ಸುಮಾರು ೫೦ ಸಾವಿರ ರು. ನಗದು ಹಣ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
    ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ ಲಕ್ಷ್ಮೀ ಪ್ರಸಾದ್, ಹೆಚ್ಚುವರಿ ರಕ್ಷಣಾಧಿಕಾರಿ ವಿಕ್ರಮ್ ಅಮಟೆ ಹಾಗು ಪೊಲೀಸ್ ಉಪಾಧೀಕ್ಷಕ ಜೀತೆಂದ್ರಕುಮಾರ್ ದಯಾಮಾ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಈ.ಓ ಮಂಜುನಾಥ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.
    ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಶಿಲ್ಪಾ ನಾಯನೇಗಲಿ, ಸಿಬ್ಬಂದಿಗಳಾದ ಆರ್. ರತ್ನಾಕರ್, ಅರುಣ್, ಚಿನ್ನನಾಯ್ಕ, ಕಾಳಾನಾಯ್ಕ, ಹನಮಂತ ಆವಟಿ ಮತ್ತು ರಾಜೇಶ್ ಪಾಲ್ಗೊಂಡಿದ್ದರು.

ಸಿದ್ದರೂಢನಗರದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀನಿವಾಸ ಕಲ್ಯಾಣೋತ್ಸವ

ಭದ್ರಾವತಿ ಸಿದ್ಧಾರೂಢ ನಗರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸಮೀಪದಲ್ಲಿರುವ ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ಬುಧವಾರ ಶ್ರೀನಿವಾಸ ಕಲ್ಯಾಣೋತ್ಸವ ವಿಜೃಂಭಣೆಯಿಂದ ಜರುಗಿತು.  ಶಾಸಕ ಬಿ.ಕೆ ಸಂಗಮೇಶ್ವರ್ ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾದರು.
    ಭದ್ರಾವತಿ, ಮೇ. ೧೧: ಸಿದ್ಧಾರೂಢ ನಗರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸಮೀಪದಲ್ಲಿರುವ ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ಬುಧವಾರ ಶ್ರೀನಿವಾಸ ಕಲ್ಯಾಣೋತ್ಸವ ವಿಜೃಂಭಣೆಯಿಂದ ಜರುಗಿತು.  
    ಶ್ರೀ ಶ್ರೀನಿವಾಸ ಕಲ್ಯಾಣ ಸಮಿತಿ ಹಾಗೂ ಶ್ರೀ ಸಂಕರ್ಷಣ ಧರ್ಮ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಕಲ್ಯಾಣೋತ್ಸವದ ಅಂಗವಾಗಿ ಬೆಳಿಗ್ಗೆ ಶ್ರೀ ವೆಂಕಟೇಶ್ವರಸ್ವಾಮಿಗೆ ಅಭಿಷೇಕ ಹಾಗೂ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು.
    ದಾವಣಗೆರೆಯ ಪಂಡಿತ ವೆಂಕಟೇಶಾಚಾರ್ಯ ಮಣ್ಣೂರು ಅವರಿಂದ ಶ್ರೀನಿವಾಸ ಸ್ವಾಮಿಯ ಕುರಿತು ಉಪನ್ಯಾಸ ನಡೆಸಿಕೊಟ್ಟರು. ನಂತರ ಸ್ವಾಮಿಯ ಕಲ್ಯಾಣೋತ್ಸವ ನಡೆಯಿತು. ಮಧ್ಯಾಹ್ನ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಜರುಗಿತು.
    ಶಾಸಕ ಬಿ.ಕೆ.ಸಂಗಮೆಶ್ವರ್ ಸೇರಿದಂತೆ ಸಿದ್ದರೂಢನಗರ, ಕನಕನಗರ, ಹಳೇನಗರ  ಸುತ್ತಮುತ್ತಲಿನ ಪ್ರದೇಶಗಳ ಭಕ್ತರು ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾದರು.
    ಪಂಡಿತ ಗೊಪಾಲಾಚಾರ್, ಶ್ರೀನಿವಾಸಾಚಾರ್, ಶೇಷಗಿರಿಆಚಾರ್, ಅರ್ಚಕರಾದ ಜಗನ್ನಾಥ, ವೆಂಕಟೇಶ್, ಸಮಿತಿ ಅಧ್ಯಕ್ಷ ಕಲ್ಲಾಪುರಾಮಚಂದ್ರ, ಜಯತೀರ್ಥ, ರಾಘವೇಂದ್ರ, ವಾಸುದೇವಮೂರ್ತಿ, ರಮಾಕಾಂತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಗರ, ಗ್ರಾಮೀಣ ಭಾಗದಲ್ಲಿ ಆರೋಗ್ಯ ಕೇಂದ್ರಗಳನ್ನು ತೆರೆದು ಬಡ ಜನರ ಆರೋಗ್ಯ ರಕ್ಷಿಸಿ

ಕರ್ನಾಟಕ ಜನತಾದಳ(ಸಂಯುಕ್ತ) ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಮನವಿ


ದೇಶದ ಎಲ್ಲೆಡೆ ಗ್ರಾಮೀಣ ಭಾಗದಲ್ಲಿ ಕನಿಷ್ಠ ಪ್ರತಿ ಎರಡು ಗ್ರಾಮ ಪಂಚಾಯತಿಗೆ ಒಂದರಂತೆ ಪ್ರಾಥಮಿಕ ಆರೋಗ್ಯ ಕ್ಷೇಮ ಕೇಂದ್ರ  ಹಾಗು ನಗರಸಭೆ ವ್ಯಾಪ್ತಿಯಲ್ಲಿ ಕನಿಷ್ಠ ಪ್ರತಿ ಎರಡು ವಾರ್ಡ್‌ಗಳಿಗೆ ಒಂದರಂತೆ ನಗರ ಆರೋಗ್ಯ ಪ್ರಾಥಮಿಕ ಕೇಂದ್ರ ತೆರೆಯುವ ಮೂಲಕ ಬಡ ಜನರ ಆರೋಗ್ಯ ಸುಧಾರಣೆಗೆ ಸರ್ಕಾರ ಹೆಚ್ಚಿನ ಗಮನ ನೀಡಬೇಕೆಂದು ಕರ್ನಾಟಕ ಜನತಾದಳ(ಸಂಯುಕ್ತ) ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
    ಭದ್ರಾವತಿ, ಮೇ. ೧೧: ದೇಶದ ಎಲ್ಲೆಡೆ ಗ್ರಾಮೀಣ ಭಾಗದಲ್ಲಿ ಕನಿಷ್ಠ ಪ್ರತಿ ಎರಡು ಗ್ರಾಮ ಪಂಚಾಯತಿಗೆ ಒಂದರಂತೆ ಪ್ರಾಥಮಿಕ ಆರೋಗ್ಯ ಕ್ಷೇಮ ಕೇಂದ್ರ  ಹಾಗು ನಗರಸಭೆ ವ್ಯಾಪ್ತಿಯಲ್ಲಿ ಕನಿಷ್ಠ ಪ್ರತಿ ಎರಡು ವಾರ್ಡ್‌ಗಳಿಗೆ ಒಂದರಂತೆ ನಗರ ಆರೋಗ್ಯ ಪ್ರಾಥಮಿಕ ಕೇಂದ್ರ ತೆರೆಯುವ ಮೂಲಕ ಬಡ ಜನರ ಆರೋಗ್ಯ ಸುಧಾರಣೆಗೆ ಸರ್ಕಾರ ಹೆಚ್ಚಿನ ಗಮನ ನೀಡಬೇಕೆಂದು ಕರ್ನಾಟಕ ಜನತಾದಳ(ಸಂಯುಕ್ತ) ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
    ಇತ್ತೀಚಿನ ದಿನಗಳಲ್ಲಿ ನಗರ ಹಾಗೂ ಗ್ರಾಮೀಣ ಭಾಗದ ಜನರು  ಹೆಚ್ಚು ಅನಾರೋಗ್ಯಗಳಿಗೆ ತುತ್ತಾಗುತ್ತಿದ್ದು, ಅದರಲ್ಲೂ ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತ, ಕಿಡ್ನಿ ವೈಫಲ್ಯ, ಬಾಯಿ, ಗಂಟಲು ಹಾಗು ಗರ್ಭಕೋಶದ ಕ್ಯಾನ್ಸರ್ ಸೇರಿದಂತೆ ಇನ್ನಿತರ ಮಾರಾಣಾಂತಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರುಗಳ ಕೊರತೆ ಸೇರಿದಂತೆ ಇನ್ನಿತರ ಕಾರಣಗಳಿಂದ ಚಿಕಿತ್ಸೆಯಿಂದ ವಂಚಿತರಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಹಣ ನೀಡಿ ಚಿಕಿತ್ಸೆ ಪಡೆಯಬೇಕಾದ ಅನಿವಾರ್ಯತೆ ಉಂಟಾಗುತ್ತಿದೆ ಎಂದು ಆರೋಪಿಸಿದ್ದಾರೆ.
    ಸರ್ಕಾರ ಗ್ರಾಮೀಣ ಭಾಗದಲ್ಲಿ ಕನಿಷ್ಠ ಪ್ರತಿ ಎರಡು ಗ್ರಾಮ ಪಂಚಾಯತಿಗೆ ಒಂದರಂತೆ ಪ್ರಾಥಮಿಕ ಆರೋಗ್ಯ ಕ್ಷೇಮ ಕೇಂದ್ರ  ಹಾಗು ನಗರಸಭೆ ವ್ಯಾಪ್ತಿಯಲ್ಲಿ ಕನಿಷ್ಠ ಪ್ರತಿ ಎರಡು ವಾರ್ಡ್‌ಗಳಿಗೆ ಒಂದರಂತೆ ನಗರ ಆರೋಗ್ಯ ಪ್ರಾಥಮಿಕ ಕೇಂದ್ರ ತೆರೆಯುವ ಮೂಲಕ ತಜ್ಞ ವೈದ್ಯರು, ಸಿಬ್ಬಂದಿಗಳನ್ನು ನೇಮಕಗೊಳಿಸಿ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಹಾಗು ಹೆಚ್ಚು ಹೆಚ್ಚು ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಆರೋಗ್ಯ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವಂತೆ ಮನವಿ ಮಾಡಿದ್ದಾರೆ.
    ರೈತ ಮುಖಂಡ ಕಾಳಿಂಗನಹಳ್ಳಿ ಶೇಖರ್, ಕರುನಾಡು ಹಿತರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ವೈ. ಶಶಿಕುಮಾರ್, ಹಿರಿಯ ಮುಖಂಡ ನಾಗಾನಾಯ್ಕ, ಸಾಮಾಜಿಕ ಹೋರಾಟಗಾರ ಉಕ್ಕುಂದ ಶಿವಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ತೋಟಗಾರಿಕೆ ಬೆಳಗಳಲ್ಲಿ ಪ್ರಗತಿ ಸಾಧಿಸಿ : ಬಿ.ಕೆ ಸಂಗಮೇಶ್ವರ್

ಭದ್ರಾವತಿ ತರೀಕೆರೆ ರಸ್ತೆಯಲ್ಲಿರುವ ತೋಟಗಾರಿಕೆ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹನಿ ನೀರಾವರಿ, ರಸಾವರಿ ಹಾಗು ನೀರಿನ ಸಂರಕ್ಷಣೆ ಮತ್ತು ತೋಟಗಾರಿಕೆ ಬೆಳೆಗಳ ಕುರಿತು ಒಂದು ದಿನದ ಕಾರ್ಯಾಗಾರದಲ್ಲಿ ರೈತರಿಗೆ ತರಕಾರಿ ಬೀಜಗಳ ಕಿಟ್ ಹಾಗೂ ಪರಿಕರಗಳನ್ನು ಶಾಸಕ ಬಿ.ಕೆ ಸಂಗಮೇಶ್ವರ್ ವಿತರಿಸಿದರು.
    ಭದ್ರಾವತಿ, ಮೇ. ೧೧: ತೋಟಗಾರಿಕೆ ಬೆಳೆಗಳಿಗೆ ಸರ್ಕಾರದಿಂದ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಂಡು ಹಾಗೂ ಸೂಕ್ತ ತರಬೇತಿಯೊಂದಿಗೆ ರೈತರು ಪ್ರಗತಿ ಸಾಧಿಸಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಕರೆ ನೀಡಿದರು.
    ಅವರು ಬುಧವಾರ ನಗರದ ತರೀಕೆರೆ ರಸ್ತೆಯಲ್ಲಿರುವ ತೋಟಗಾರಿಕೆ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹನಿ ನೀರಾವರಿ, ರಸಾವರಿ ಹಾಗು ನೀರಿನ ಸಂರಕ್ಷಣೆ ಮತ್ತು ತೋಟಗಾರಿಕೆ ಬೆಳೆಗಳ ಕುರಿತು ಒಂದು ದಿನದ ಕಾರ್ಯಾಗಾರದಲ್ಲಿ ರೈತರಿಗೆ ತರಕಾರಿ ಬೀಜಗಳ ಕಿಟ್ ಹಾಗೂ ಪರಿಕರಗಳನ್ನು ವಿತರಿಸಿ ಮಾತನಾಡಿದರು.
    ಅಡಕೆ ಬೆಳೆ ಬೆಳೆಯಲು ಅನುಸರಿಸಬೇಕಾದ ವೈಜ್ಞಾನಿಕ ಕ್ರಮಗಳು, ಕಂಡು ಬರುವ ವಿವಿಧ ಬಗೆಯ ರೋಗಬಾಧೆಗಳು ಹಾಗು ನಿಯಂತ್ರಣಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ದಾವಣಗೆರೆ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಡಾ. ಬಸವನಗೌಡ ಮಾಹಿತಿ ನೀಡಿದರು.
    ತೀರ್ಥಹಳ್ಳಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಟಿ. ಸಿದ್ದಲಿಂಗೇಶ್ವರ, ಹನಿ ನೀರಾವರಿ, ರಸಾವರಿ ಹಾಗು ನೀರಿನ ಸಂರಕ್ಷಣೆ ಕುರಿತು ಮಾಹಿತಿ ನೀಡಿದರು.
    ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಜೆ. ಕಾಂತರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, ಇಲಾಖೆ ವತಿಯಿಂದ ತಾಲೂಕಿನಲ್ಲಿ ತೋಟಗಾರಿಕೆ ಬೆಳೆಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ರೈತರಿಗೆ ಅನುಕೂಲವಾಗುವಂತೆ ತರಕಾರಿ ಬೀಜಗಳನ್ನು ಹಾಗು ಪರಿಕರಗಳಾದ ಲಘು ಪೋಷಕಾಂಶ ಮತ್ತು ನೀರಿನಲ್ಲಿ ಕರಗುವ ಗೊಬ್ಬರಗಳನ್ನು ವಿತರಿಸಲಾಗುತ್ತಿದೆ. ಅಲ್ಲದೆ ಕಾರ್ಯಾಗಾರದ ಮೂಲಕ ಸಂಪನ್ಮೂಲ ವ್ಯಕ್ತಿಗಳಿಂದ ಅಗತ್ಯ ಮಾಹಿತಿಗಳನ್ನು ನೀಡಲಾಗುತ್ತಿದ್ದು, ಇದರ ಸದ್ಬಳಕೆ ಮಾಡಿಕೊಳ್ಳುವಂತೆ ಮನವಿ ಮಾಡಿದರು.  
    ಕೃಷಿ ಸಹಾಯಕ ನಿರ್ದೇಶಕ ಶಶಿಧರ್ ಉಪಸ್ಥಿತರಿದ್ದರು. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಕೆ. ನಂದಿನಿ ನಿರೂಪಿಸಿದರು.