Friday, May 20, 2022

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಅವಳಿ-ಜವಳಿ ಸಹೋದರಿಯರ ವಿಶಿಷ್ಟ ಸಾಧನೆ

ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಭದ್ರಾವತಿ ಶಂಕರಘಟ್ಟದ ಅವಳಿ-ಜವಳಿ ಸಹೋದರಿಯರು ಫಲಿತಾಂಶದಲ್ಲೂ ವಿಶಿಷ್ಟತೆ ಕಾಯ್ದುಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ. ಈ ಈ ಸಹೋದರಿಯರನ್ನು ಅಖಿಲ ಕರ್ನಾಟಕ ಎಂವಿಕೆ ಅಭಿಮಾನಿ ಬಳಗದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
    ಭದ್ರಾವತಿ, ಮೇ. ೨೦: ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅವಳಿ-ಜವಳಿ ಸಹೋದರಿಯರು ಫಲಿತಾಂಶದಲ್ಲೂ ವಿಶಿಷ್ಟತೆ ಕಾಯ್ದುಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.
    ನಗರದ ಬಿ.ಎಚ್ ರಸ್ತೆ ಪೂಜ್ಞ ಪ್ರಜ್ಞ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯರಾದ ಜಿ. ನಿತ್ಯ ಮತ್ತು ಜಿ. ನಿಧಿ ಇಬ್ಬರು ಸಹ ೬೨೫ಕ್ಕೆ ೬೧೪ ಅಂಕ ಪಡೆದುಕೊಂಡಿರುವುದು ವಿಶೇಷತೆಯಾಗಿದೆ. ಈ ಇಬ್ಬರು ವಿದ್ಯಾರ್ಥಿನಿಯರು ತಾಲೂಕಿನ ಶಂಕರಘಟ್ಟದ ದಿವಂಗತ ಎಸ್.ಈ ಗಿರೀಶ್‌ಕುಮಾರ್ ಮತ್ತು ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಲತಾ ದಂಪತಿ ಪುತ್ರಿಯರಾಗಿದ್ದು, ಈ ಸಹೋದರಿಯರ ಸಾಧನೆ ಇಡೀ ಗ್ರಾಮದಲ್ಲಿ ಸಂಭ್ರವನ್ನುಂಟು ಮಾಡಿದೆ.
     ಅಖಿಲ ಕರ್ನಾಟಕ ಎಂವಿಕೆ ಅಭಿಮಾನಿ ಬಳಗ ಅಭಿನಂದನೆ :
  ವಿಶಿಷ್ಟ ಸಾಧನೆ ಮೆರೆದಿರುವ ಈ ಸಹೋದರಿಯರನ್ನು ಅಖಿಲ ಕರ್ನಾಟಕ ಎಂವಿಕೆ ಅಭಿಮಾನಿ ಬಳಗದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
    ಬಳಗದ ರಾಜ್ಯಾಧ್ಯಕ್ಷ ಸಿ. ಅನಿಲ್,  ರಾಜ್ಯ ಗೌರವ ಸಲಹೆಗಾರ ತ್ಯಾಗರಾಜ್, ಎಂ. ರಮೇಶ್ ಶಂಕರಘಟ್ಟ, ಶಂಕರ್ ರೈಸ್ ಮಿಲ್ ಮಾಲೀಕ ಎಸ್.ಈ.ನಂದೀಶ್ ಕುಮಾರ್, ಗ್ರಾಮದ ಮುಖಂಡರುಗಳಾದ ಟಿ.ಡಿ ಶಶಿಕುಮಾರ್, ಶ್ರೀಕಾಂತ್, ಮುರುಗನ್, ಮಂಜುನಾಥ್ ಮತ್ತು ಅಪ್ಪು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಎಸ್.ಕೆ ಸೃಜನಾ ೬೨೨ ಅಂಕ

ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಗೆ ಉತ್ತಮ ಫಲಿತಾಂಶ

ಭದ್ರಾವತಿ ನ್ಯೂಟೌನ್ ಶ್ರೀ ಸತ್ಯ ಸಮಗ್ರ ಶಿಕ್ಷಣ ಸಂಸ್ಥೆಯ ಈಶ್ವರಮ್ಮ ಪ್ರೌಢಶಾಲೆ ವಿದ್ಯಾರ್ಥಿನಿ ಎಸ್.ಕೆ ಸೃಜನಾ ೬೨೫ಕ್ಕೆ ೬೨೨ ಅಂಕದೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಈ ವಿದ್ಯಾರ್ಥಿನಿಯನ್ನು ಸನ್ಮಾನಿಸಿ ಅಭಿನಂದಿಸಿದರು.
    ಭದ್ರಾವತಿ, ಮೇ. ೨೦: ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಈಶ್ವರಮ್ಮ ಪ್ರೌಢಶಾಲೆ ಉತ್ತಮ ಫಲಿತಾಂಶ ಪಡೆದುಕೊಂಡಿದ್ದು, ವಿದ್ಯಾರ್ಥಿನಿ ಎಸ್.ಕೆ ಸೃಜನಾ ೬೨೫ಕ್ಕೆ ೬೨೨ ಅಂಕದೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾರೆ.
    ಆಂಗ್ಲ ವಿಭಾಗ ಶೇ.೯೮ರಷ್ಟು ಹಾಗು ಕನ್ನಡ ವಿಭಾಗ ಶೇ.೯೦ರಷ್ಟು ಫಲಿತಾಂಶ ಪಡೆದುಕೊಂಡಿವೆ. ಆಂಗ್ಲ ವಿಭಾಗದಲ್ಲಿ ೯೨ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, ಈ ಪೈಕಿ ೯೦ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕನ್ನಡ ವಿಭಾಗದಲ್ಲಿ ೩೯ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, ಈ ಪೈಕಿ ೩೫ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
    ಆಂಗ್ಲ ವಿಭಾಗದಲ್ಲಿ ೨೯ ಮತ್ತು ಕನ್ನಡ ವಿಭಾಗದಲ್ಲಿ ೫ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದುಕೊಂಡಿದ್ದು, ಆಂಗ್ಲ ವಿಭಾಗದಲ್ಲಿ ೫೫ ಮತ್ತು ಕನ್ನಡ ವಿಭಾಗದಲ್ಲಿ ೨೫ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗು ಆಂಗ್ಲ ವಿಭಾಗದಲ್ಲಿ ೬ ಮತ್ತು ಕನ್ನಡ ವಿಭಾಗದಲ್ಲಿ ೫ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
    ಎಸ್.ಕೆ ಸೃಜನಾ ೬೨೨, ಜೆ. ದರ್ಶನ್ ೬೧೬, ಬಿ.ಇ ರಕ್ಷಿತ ೬೧೪, ಎನ್. ರಕ್ಷಿತ ೬೧೩, ಎನ್. ಕುಶಾಲ್ ೬೧೧, ಎಸ್. ನಾಗಶ್ರೀ ೬೦೮, ಬಿ.ಎಂ ಅಪೂರ್ವ ೬೦೮ ಮತ್ತು ಎಸ್. ಹರ್ಷಿತ ೬೦೫ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾಗಿದ್ದಾರೆ.  
    ಹಿರಿಯೂರು ಗ್ರಾಮದ ನಿವಾಸಿ ಸತೀಶ್ ಕಡ್ಕರ್ ಮತ್ತು ಎಸ್. ಶೃತಿ ದಂಪತಿ ಪುತ್ರಿಯಾಗಿರುವ ಈ ಶಾಲೆಯ ವಿದ್ಯಾರ್ಥಿನಿ ಎಸ್.ಕೆ ಸೃಜನಾ ೬೨೫ಕ್ಕೆ ೬೨೨ ಅಂಕ ಪಡೆದುಕೊಂಡು ಶಾಲೆಗೆ ಕೀರ್ತಿ ತಂದಿದ್ದು, ಉತ್ತಮ ಫಲಿತಾಂಶಕ್ಕೆ ಕಾರಣಕರ್ತರಾಗಿರುವ ಶಿಕ್ಷಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗು ಪೋಷಕರಿಗೆ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಪ್ರಭಾಕರ ಬೀರಯ್ಯ ಕೃತಜ್ಞತೆ ಸಲ್ಲಿಸಿದ್ದು, ಅಲ್ಲದೆ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಅಭಿನಂದನೆ :
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ ಅತಿ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿನಿ ಎಸ್.ಕೆ ಸೃಜನಾ ಅವರನ್ನು ಶಾಲು ಹೊದಿಸಿ, ಹೂವಿನ ಹಾರ ಹಾಕಿ ಸನ್ಮಾನಿಸಿ ಅಭಿನಂದಿಸಿದರು.
    ಈ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಯ ಪರಮೇಶ್ವರಪ್ಪ, ಮೃತ್ಯುಂಜಯ ಕಾನಿಟ್ಕರ್, ಶಾಮರಾಯ ಆಚಾರ್, ಶಿಕ್ಷಣ ಇಲಾಖೆ ಸಂಯೋಜಕ ರವಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮೇ.೨೧ರಂದು ಮಹಾ ರಥೋತ್ಸವ, ಸಮುದಾಯ ಭವನ ಉದ್ಘಾಟನೆ

    ಭದ್ರಾವತಿ, ಮೇ. ೨೦: ತಾಲೂಕು ಕಛೇರಿ ರಸ್ತೆಯಲ್ಲಿರುವ ಕಂಚಿನಬಾಗಿಲು ಕೋಟೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಮಹಾ ರಥೋತ್ಸವ ಹಾಗು ಮಿನಿ ಸಮುದಾಯ ಭವನದ ಉದ್ಘಾಟನೆ ಮೇ.೨೧ರಂದು ನಡೆಯಲಿದೆ.
    ಪ್ರತಿ ವರ್ಷದಂತೆ ಈ ಬಾರಿ ಸಹ ಮಧ್ಯಾಹ್ನ ೧೨ ಗಂಟೆಗೆ ಮಹಾ ರಥೋತ್ಸವ ನಡೆಯಲಿದ್ದು, ರಥೋತ್ಸವ ದೇವಸ್ಥಾನದಿಂದ ಆರಂಭಗೊಂಡು ರಂಗಪ್ಪ ವೃತ್ತ ಹಾಗು ಅಂಬೇಡ್ಕರ್ ವೃತ್ತದವರೆಗೆ ನಡೆಯಲಿದೆ.
    ರಥೋತ್ಸವಕ್ಕೂ ಮೊದಲು ಬೆಳಿಗ್ಗೆ ನವಗ್ರಹ ಹೋಮ, ಅಧಿವಾಸ ಹೋಮ, ರಥ ಶುದ್ಧಿಹೋಮ, ರಥಾಧಿವಾಸ ಹೋಮ, ಶ್ರೀ ಸ್ವಾಮಿಯ ರಥಾರೋಹಣ, ಸಂಜೆ ಅಷ್ಟಾವಧಾನ ಸೇವೆ, ಶಯನೋತ್ಸವ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಲಿವೆ.
    ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಆಂಜನೇಯ ಸ್ವಾಮಿಯ ಮಿನಿ ಸಮುದಾಯ ಭವನ ಬೆಳಿಗ್ಗೆ ೧೦.೩೦ಕ್ಕೆ ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ.
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ತಹಸೀಲ್ದಾರ್ ಆರ್. ಪ್ರದೀಪ್, ನಗರಸಭೆ ಪೌರಾಯುಕ್ತ ಮನುಕುಮಾರ್, ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಸದಸ್ಯರಾದ ಬಿ.ಟಿ ನಾಗರಾಜ್, ಬಿ.ಎಂ ಮಂಜುನಾಥ್, ಆರ್. ಶ್ರೇಯಸ್, ಮಣಿ ಎಎನ್‌ಎಸ್, ದೇವಸ್ಥಾನ ಸೇವಾ ಸಮಿತಿ ಟ್ರಸ್ಟ್ ಅಧ್ಯಕ್ಷ ಕೆ. ನರಸಿಂಹಮೂರ್ತಿ, ವೈದ್ಯ ಡಾ. ಎಚ್.ಡಿ ಅಶ್ವತ್ಥ ನಾರಾಯಣ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.

ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ : ಸರ್ಕಾರಕ್ಕೆ ಮನವಿ

 ನ್ಯಾ.ಎಚ್.ಎನ್ ನಾಗಮೋಹನ್ ದಾಸ್‌ರವರ ಏಕ ಸದಸ್ಯ ಆಯೋಗದ ವರದಿ ಜಾರಿಗೊಳಿಸಿ ಪರಿಶಿಷ್ಟ ಜಾತಿ ಹಾಗು ಪಂಗಡದವರ ಮೀಸಲಾತಿ ಹೆಚ್ಚಿಸುವಂತೆ ಆಗ್ರಹಿಸಿ ಶುಕ್ರವಾರ ಭದ್ರಾವತಿಯಲ್ಲಿ ನಗರ ಮತ್ತು ಗ್ರಾಮಾಂತರ ಸ್ವಾಭಿಮಾನಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾಸಮಿತಿ ವತಿಯಿಂದ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿ ಶಿರಸ್ತೇದಾರ್ ರಾಧಾಕೃಷ್ಣ ಭಟ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಮೇ. ೨೦: ನ್ಯಾ.ಎಚ್.ಎನ್ ನಾಗಮೋಹನ್ ದಾಸ್‌ರವರ ಏಕ ಸದಸ್ಯ ಆಯೋಗದ ವರದಿ ಜಾರಿಗೊಳಿಸಿ ಪರಿಶಿಷ್ಟ ಜಾತಿ ಹಾಗು ಪಂಗಡದವರ ಮೀಸಲಾತಿ ಹೆಚ್ಚಿಸುವಂತೆ ಆಗ್ರಹಿಸಿ ಶುಕ್ರವಾರ ನಗರ ಮತ್ತು ಗ್ರಾಮಾಂತರ ಸ್ವಾಭಿಮಾನಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾಸಮಿತಿ ವತಿಯಿಂದ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
    ಈ ಸಂದರ್ಭದಲ್ಲಿ ಮಾತನಾಡಿದ ಪ್ರಮುಖರು, ರಾಜ್ಯದಲ್ಲಿ ಪರಿಶಿಷ್ಟ ಜಾತಿ ಹಾಗು ಪಂಗಡಗಳ ಜನಸಂಖ್ಯೆಯಲ್ಲಿ ಹೆಚ್ಚಳವಾಗಿದ್ದರೂ ಸಹ ಮೀಸಲಾತಿ ಹೆಚ್ಚಳ ಮಾಡಿಲ್ಲ. ರಾಜ್ಯದಲ್ಲಿ ೧೯೬೧ರ ಜನಗಣತಿಯಲ್ಲಿ ಪರಿಶಿಷ್ಟ ಪಂಗಡದವರ ಜನಸಂಖ್ಯೆ ೧,೯೨,೦೯೫(ಶೇ.೦.೮೧) ಇದ್ದು, ಮುಂದಿನ ೫ ಜನಗಣತಿಯಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ೨೦೧೧ರಲ್ಲಿ ೪೨,೪೮,೯೮೭ ಜನಸಂಖ್ಯೆ ಇದ್ದು, ೧೯೬೧ರ ಜನಗಣತಿಗೆ ಹೋಲಿಕೆ ಮಾಡಿದ್ದಲ್ಲಿ ಶೇ.೨೨.೧೧ರಷ್ಟು  ಹೆಚ್ಚಾಗಿದೆ. ಇದೆ ರೀತಿ ಪರಿಶಿಷ್ಟ ಜಾತಿ ಜನಸಂಖ್ಯೆ ಸಹ ಹೆಚ್ಚಾಗಿದ್ದು, ೨೦೧೧ರ ಜನಗಣತಿಯಂತೆ ರಾಜ್ಯದಲ್ಲಿ ೧,೦೪,೭೪,೯೯೨ ಜನಸಂಖ್ಯೆ ಹೊಂದಿದೆ.  ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡಿಲ್ಲ. ಇದರಿಂದಾಗಿ ಪರಿಶಿಷ್ಟ ಜಾತಿ ಹಾಗು ಪಂಗಡದವರು ಸಾಕಷ್ಟು ಸಮಸ್ಯೆ ಎದುರಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಪ್ರಸ್ತುತ ಪರಿಶಿಷ್ಟ ಜಾತಿಗೆ ಶೇ.೧೫ರಷ್ಟು ಹಾಗು ಪರಿಶಿಷ್ಟ ಪಂಗಡಕ್ಕೆ ಶೇ.೩ರಷ್ಟು ಮೀಸಲಾತಿ ಇದ್ದು, ಮೀಸಲಾತಿ ಹೆಚ್ಚಿಸುವಂತೆ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನಲೆಯಲ್ಲಿ ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರು ೨೦೧೯ರಲ್ಲಿ ಮೀಸಲಾತಿ ಹೆಚ್ಚಿಸುವಂತೆ ಆಗ್ರಹಿಸಿ ರಾಜಧಾನಿ ಬೆಂಗಳೂರಿಗೆ ಪಾದಯಾತ್ರೆ ನಡೆಸಿ ಬೃಹತ್ ಸಮಾವೇಶ ಆಯೋಜಿಸುವ ಮೂಲಕ ಸರ್ಕಾರದ ಗಮನ ಸೆಳೆದಿದ್ದರು. ಸರ್ಕಾರ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎಚ್.ಎನ್ ನಾಗಮೋಹನ್ ದಾಸ್‌ರವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಿತ್ತು. ಆಯೋಗ ಜುಲೈ, ೨೦೨೦ರಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಆದರೆ ಸರ್ಕಾರ ಆಯೋಗದ ವರದಿಯನ್ನು ಇದುವರೆಗೂ ಜಾರಿಗೊಳಿಸಿರುವುದಿಲ್ಲ. ಇದೀಗ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ಸುಭಾಷ್ ಆಡಿಯವರ ತ್ರಿ ಸದಸ್ಯ ಸಮಿತಿಗೆ ಒಪ್ಪಿಸಿ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
    ಸರ್ಕಾರ ತಕ್ಷಣ ಪರಿಶಿಷ್ಟ ಜಾತಿಯವರಿಗೆ ಶೇ.೧೫ರಿಂದ ಶೇ.೧೭ಕ್ಕೆ ಹಾಗು ಪರಿಶಿಷ್ಟ ಪಂಗಡದವರಿಗೆ ಶೇ.೩ರಿಂದ ೭.೫ಕ್ಕೆ ಮೀಸಲಾತಿ ಹೆಚ್ಚಿಸಬೇಕು. ನ್ಯಾ.ಎಚ್.ಎನ್ ನಾಗಮೋಹನ್ ದಾಸ್‌ರವರ ಏಕ ಸದಸ್ಯ ಆಯೋಗದ ವರದಿ ಜಾರಿಗೊಳಿಸಬೇಕು. ನ್ಯಾ. ಸುಭಾಷ್ ಆಡಿಯವರ ತ್ರಿ ಸದಸ್ಯ ಸಮಿತಿ ರದ್ದುಪಡಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನಾ ಮೆರವಣಿಗೆ ಆರಂಭಕ್ಕೂ ಮೊದಲು ನಗರದ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
    ಶ್ರೀ ಮಹರ್ಷಿ ವಾಲ್ಮೀಕಿ ಸಮಾಜದ ನಗರ ಘಟಕದ ಅಧ್ಯಕ್ಷ ಬಸವರಾಜ ಬಿ ಆನೇಕೊಪ್ಪ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ, ಜಿಲ್ಲಾ ಸಂಚಾಲಕ ಚಿನ್ನಯ್ಯ, ಕೆ. ರಂಗನಾಥ್, ಎಪಿಎಂಸಿ ಮಾಜಿ ನಿರ್ದೇಶಕ ಎಂ.ಎಸ್ ಬಸವರಾಜಪ್ಪ, ಶ್ರೀ ಮಹರ್ಷಿ ವಾಲ್ಮೀಕಿ ಸಮಾಜದ ಗ್ರಾಮಾಂತರ ಅಧ್ಯಕ್ಷ ಎಲ್. ರಂಗಪ್ಪ, ದಲಿತ ನೌಕರರ ಒಕ್ಕೂಟದ ತಾಲೂಕು ಅಧ್ಯಕ್ಷ ಎಸ್.  ಉಮಾ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಬಂಜಾರ ಯುವಕರ ವೇದಿಕೆ ಅಧ್ಯಕ್ಷ ಕೃಷ್ಣನಾಯ್ಕ, ಪ್ರಮುಖರಾದ ಲಕ್ಷ್ಮಣಪ್ಪ, ಶ್ರೀಧರ್, ಶೇಖರಪ್ಪ, ಸುಧಾಮಣಿ, ಶಿವಾನಂದ, ಉಜ್ಜನಿಪುರ ವೆಂಕಟೇಶ್, ವಿವೇಕ್ ಸೇರಿದಂತೆ ಇನ್ನಿತರರು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
    ಮೆರವಣಿಗೆ ನಗರದ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡು ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ, ರಂಗಪ್ಪ ವೃತ್ತ ಮೂಲಕ ತಾಲೂಕು ಕಛೇರಿ ತಲುಪಿತು. ನಂತರ ಶಿರಸ್ತೇದಾರ್ ರಾಧಾಕೃಷ್ಣ ಭಟ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.




ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಏರುಪೇರು : ಎಲೆಕ್ಟ್ರಾನಿಕ್ ಉಪಕರಣಗಳಿಗೆ ಹಾನಿ

ಮಳಿಗೆಗಳ ಮಾಲೀಕರ ಸಂಕಷ್ಟಕ್ಕೆ ಸ್ಪಂದಿಸಿದ ಯುವ ಮುಖಂಡ ಬಿ.ಎಸ್ ಗಣೇಶ್  


ಭದ್ರಾವತಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ವಿದ್ಯುತ್ ಸರಬರಾಜಿನಲ್ಲಿ ಏರುಪೇರು ಉಂಟಾಗುತ್ತಿದ್ದು, ಮಳಿಗೆಗಳ ಮಾಲೀಕರ ಸಮಸ್ಯೆಗೆ ಸ್ಪಂದಿಸಿರುವ ಯುವ ಮುಖಂಡ ಬಿ.ಎಸ್ ಗಣೇಶ್ ನಿಲ್ದಾಣದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು.
    ಭದ್ರಾವತಿ, ಮೇ. ೨೦: ಕರ್ನಾಟಕ ರಸ್ತೆ ಸಾರಿಗೆ ನಿಗಮದ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಏರುಪೇರು ಉಂಟಾಗುತ್ತಿದ್ದು, ಇದರಿಂದಾಗಿ ನಿಲ್ದಾಣದಲ್ಲಿರುವ ಮಳಿಗೆಗಳಲ್ಲಿ ವಿದ್ಯುತ್ ಉಪಕರಣಗಳು ಹಾನಿಗೊಳಗಾಗಿ ನಷ್ಟ ಉಂಟಾಗಿರುವ ಘಟನೆ ನಡೆದಿದೆ.
    ನಿಲ್ದಾಣದಲ್ಲಿ ವಿದ್ಯುತ್ ಅಸಮರ್ಪಕವಾಗಿ ಸಂಪರ್ಕಗೊಂಡಿರುವ ಹಿನ್ನಲೆಯಲ್ಲಿ ಕೆಲವು ದಿನಗಳಿಂದ ಏಕಾಏಕಿ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಪ್ರವಹಿಸುತ್ತಿದೆ. ಇದರಿಂದಾಗಿ ಜೆರಾಕ್ಸ್, ಪ್ರಿಂಟರ್, ಲ್ಯಾಪ್‌ಟಾಪ್, ಫ್ರಿಡ್ಜ್, ಕಂಪ್ಯೂಟರ್, ಮಾನಿಟರ್, ಯು.ಪಿ.ಯು, ಮೊಬೈಲ್ ಚಾರ್ಜರ್ ಸೇರಿದಂತೆ ಇನ್ನಿತರ ಎಲೆಕ್ಟ್ರಾನಿಕ್ ಉಪಕರಣಗಳು ಹಾನಿಗೊಳಗಾಗಿ ಲಕ್ಷ ರು. ನಷ್ಟ ಉಂಟಾಗಿದೆ. ಅಲ್ಲದೆ ವಿದ್ಯುತ್ ಕಟ್ಟಡಕ್ಕೂ ಪ್ರವಹಿಸುತ್ತಿದ್ದು, ಇದರಿಂದಾಗಿ ಮಳಿಗೆಗಳ ಮಾಲೀಕರು ಆತಂಕಕ್ಕೆ ಒಳಗಾಗಿದ್ದಾರೆ.
ಮಳಿಗೆಗಳ ಮಾಲೀಕರ ಸಮಸ್ಯೆಗೆ ಸ್ಪಂದಿಸಿರುವ ಯುವ ಮುಖಂಡ ಬಿ.ಎಸ್ ಗಣೇಶ್ ನಿಲ್ದಾಣದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ.
    ಕೆಎಸ್‌ಆರ್‌ಟಿಸಿ ಅಧಿಕಾರಿಗಳಾದ ಒಡೆಯರ್, ಸುರೇಶ್‌ಬಾಬು, ಶ್ರೀನಿವಾಸ್, ರಾಮಚಂದ್ರ ಮತ್ತು ಫಾರೂಕ್ ಅವರೊಂದಿಗೆ ಸುಮಾರು ೨ ಗಂಟೆಗೂ ಹೆಚ್ಚು ಸಮಯ ಮಾತುಕತೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಳಿಗೆಗಳ ಮಾಲೀಕರು ತಮ್ಮ ಅಳಲನ್ನು ತೋರ್ಪಡಿಸಿಕೊಂಡಿದ್ದಾರೆ. ಬಿಪಿಎಲ್ ಸಂಘದ ಅಧ್ಯಕ್ಷ ಜಗದೀಶ್, ಕಾರ್ಯದರ್ಶಿ ಸುನಿಲ್ ಕುಮಾರ್, ಮೀನುಗಾರರ ಸಂಘದ ಅಧ್ಯಕ್ಷ ಮುರುಗನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮೇ.೨೧ರಂದು ಸರ್ಕಾರಿ ನೌಕರರ ಸಂಘದ ಸರ್ವ ಸದಸ್ಯರ ಸಭೆ, ಮಹಿಳಾ ದಿನಾಚರಣೆ


    ಭದ್ರಾವತಿ, ಮೇ. ೨೦: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಸರ್ವ ಸದಸ್ಯರ ಸಭೆ ಹಾಗು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮೇ.೨೧ರಂದು ಸಂಜೆ ೫.೩೦ಕ್ಕೆ ಹೊಸ ಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಆವರಣದಲ್ಲಿ ನಡೆಯಲಿದೆ.
    ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಸನ್ಮಾನ ಹಾಗು ಬಹುಮಾನ ವಿತರಣೆ ನೆರವೇರಿಸಿಕೊಡಲಿದ್ದಾರೆ. ಸಂಘದ ತಾಲೂಕು ಶಾಖೆ ಅಧ್ಯಕ್ಷ ಬಿ. ಸಿದ್ದಬಸಪ್ಪ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯ ಉಪಾಧ್ಯಕ್ಷ ಆರ್. ಮೋಹನ್‌ಕುಮಾರ್, ಜಿಲ್ಲಾ ಕಾರ್ಯದರ್ಶಿ ಡಿ.ಟಿ ಕೃಷ್ಣಮೂರ್ತಿ, ಸಹಾಯಕ ಪೊಲೀಸ್ ಅಧೀಕ್ಷಕ ಜಿತೇಂದ್ರಕುಮಾರ್ ದಯಾಮಾ, ಪ್ರಸೂತಿ ತಜ್ಞೆ ಡಾ. ವೀಣಾ ಭಟ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.

Thursday, May 19, 2022

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ

ಶಾಲು ಹೊದಿಸಿ, ಹಾರ ಹಾಕಿ ಸಿಹಿ ತಿನಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ


ಭದ್ರಾವತಿ ತಾಲೂಕಿನಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಆಯಾ ವಿದ್ಯಾಸಂಸ್ಥೆಗಳಿಗೆ ಭೇಟಿ ನೀಡಿ ಸನ್ಮಾನಿಸಿ ಅಭಿನಂದಿಸಿದರು.
    ಭದ್ರಾವತಿ, ಮೇ. ೧೯: ತಾಲೂಕಿನಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಆಯಾ ವಿದ್ಯಾಸಂಸ್ಥೆಗಳಿಗೆ ಭೇಟಿ ನೀಡಿ ಸನ್ಮಾನಿಸಿ ಅಭಿನಂದಿಸಿದರು.
    ನಗರದ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಬಿ. ಪ್ರೇರಣಾ ೬೨೫ಕ್ಕೆ ೬೨೫ ಅಂಕಗಳನ್ನು ಪಡೆದುಕೊಂಡಿರುವ ಹಿನ್ನಲೆಯಲ್ಲಿ ವಿದ್ಯಾಸಂಸ್ಥೆಗೆ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ವಿದ್ಯಾರ್ಥಿನಿಗೆ ಶಾಲು ಹೊದಿಸಿ, ಹಾರ ಹಾಕುವ ಮೂಲಕ ಸನ್ಮಾನಿಸಿ ಅಭಿನಂದಿಸಿದರು.
    ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿನಿಯ ಸಾಧನೆಗೆ ಬೆನ್ನೆಲುಬಾಗಿ ನಿಂತಿರುವ ಪೋಷಕರು, ವಿದ್ಯಾ ಸಂಸ್ಥೆಯ ಶಿಕ್ಷಕರು, ಸಿಬ್ಬಂದಿ ವರ್ಗದವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಈ ಬಾರಿ ತುಂಬಾ ಸಂತೋಷದ ವಿಚಾರವೆಂದರೆ ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರು ೬೨೫ಕ್ಕೆ ೬೨೫ ಅಂಕಗಳನ್ನು ಪಡೆದು ಸಾಧನೆ ಮಾಡುವ ಮೂಲಕ ತಾಲೂಕಿಗೆ ಕೀರ್ತಿ ತಂದಿದ್ದಾರೆ. ಅಲ್ಲದೆ ಬಹುತೇಕ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಪಡೆದುಕೊಂಡಿದ್ದಾರೆ. ಅದರಲ್ಲೂ ಅತಿಹೆಚ್ಚು ಅಂಕ ಪಡೆದ ಹೆಚ್ಚಿನವಿದ್ಯಾರ್ಥಿಗಳು ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯಲ್ಲಿರುವುದು ಹೆಮ್ಮೆಯ ವಿಚಾರವಾಗಿದೆ ಈ ಹಿನ್ನಲೆಯಲ್ಲಿ ಸಾಧನೆಗೆ ಸಹಕರಿಸಿದ ಎಲ್ಲರನ್ನು ಅಭಿನಂದಿಸುತ್ತೇನೆ ಎಂದರು.
    ಸಾಧನೆ ಹಿಂದೆ ಕುಟುಂಬ ವರ್ಗದವರ ಪರಿಶ್ರಮ ಹೆಚ್ಚು :
    ಉಪನ್ಯಾಸಕಿ ಶಿಲ್ಪ ಹಾಗು ಬಾಲಕೃಷ್ಣ ದಂಪತಿ ಪುತ್ರಿ, ೬೨೫ಕ್ಕೆ ೬೨೫ ಅಂಕ ಪಡೆದುಕೊಂಡಿರುವ ಪ್ರೇರಣಾ .ಬಿ ಮಾತನಾಡಿ, ನನ್ನ ಸಾಧನೆ ಹಿಂದೆ ತಾಯಿ-ತಂದೆ ಹಾಗು ಕುಟುಂಬ ವರ್ಗದವರ ಪರಿಶ್ರಮ ಹೆಚ್ಚಿನದ್ದಾಗಿದೆ. ವಿದ್ಯಾಸಂಸ್ಥೆ ಸಹ ನನ್ನ ಓದಿಗೆ ಬೆನ್ನೆಲುಬಾಗಿದೆ. ಕಲಿಕೆಯಲ್ಲಿ ಯಾವುದೇ ರೀತಿ ಸಮಸ್ಯೆ ಉಂಟಾದರೂ ಸಹ ಶಿಕ್ಷಕರು ತಕ್ಷಣ ಸ್ಪಂದಿಸುವ ಮೂಲಕ ಬಗೆಹರಿಸುತ್ತಿದ್ದರು. ಹೆಚ್ಚಿನ ಅಂಕ ಪಡೆದಿರುವುದು ನನಗೆ ಹೆಚ್ಚಿನ ಸಂತೋಷವನ್ನುಂಟು ಮಾಡಿದೆ. ಅಲ್ಲದೆ ನನ್ನ ಪೋಷಕರು ಹಾಗು ವಿದ್ಯಾಸಂಸ್ಥೆಯ ಶಿಕ್ಷಕರು, ಸಿಬ್ಬಂದಿ ವರ್ಗದವರು ಸಹ ಸಂತೋಷದಿಂದ ಕಾಣುವಂತಾಗಿರುವುದು ನನಗೆ ಹೆಮ್ಮೆ ಪಡುವಂತಾಗಿದೆ ಎಂದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಇದೆ ಶಿಕ್ಷಣ ಸಂಸ್ಥೆಯಲ್ಲಿ ಹೆಚ್ಚಿನ ಅಂಕ ಪಡೆದಿರುವ ವಿದ್ಯಾರ್ಥಿಗಳಿಗೆ ಸಿಹಿ ತಿನಿಸಿ ಸಂಭ್ರಮ ಹಂಚಿಕೊಂಡರು.
    ವಿದ್ಯಾ ಸಂಸ್ಥೆ ಆಡಳಿತಾಧಿಕಾರಿ ಜಗದೀಶ್, ಪ್ರಾಂಶುಪಾಲರಾದ ಡಾ. ಹರಿಣಾಕ್ಷಿ, ಮುಖ್ಯ ಶಿಕ್ಷಕ ಗಿರೀಶ್, ಶಿಕ್ಷಣ ಸಂಯೋಜಕ ರವಿಕುಮಾರ್ ಹಾಗು ವಿದ್ಯಾಸಂಸ್ಥೆಯ ಶಿಕ್ಷಕರು, ಸಿಬ್ಬಂದಿ ವರ್ಗದವರು, ಪೋಷಕರು ಉಪಸ್ಥಿತರಿದ್ದರು.