Tuesday, May 24, 2022

ಬಸವೇಶ್ವರ ವೃತ್ತದಲ್ಲಿ ನಂದಿ ವಿಗ್ರಹ ಲೋಕಾರ್ಪಣೆ

ಭದ್ರಾವತಿ ನಗರಸಭೆ ವತಿಯಿಂದ ಹಳೇನಗರದ ಬಸವೇಶ್ವರ ವೃತ್ತದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ನಂದಿ ವಿಗ್ರಹವನ್ನು ಮಂಗಳವಾರ ತುಮಕೂರು ಸಿದ್ದಗಂಗಾಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಲೋಕಾರ್ಪಣೆಗೊಳಿಸಿದರು.
    ಭದ್ರಾವತಿ, ಮೇ. ೨೪: ನಗರಸಭೆ ವತಿಯಿಂದ ಕೆಆರ್‌ಐಡಿಎಲ್ ಅನುದಾನದಲ್ಲಿ ಹಳೇನಗರದ ಬಸವೇಶ್ವರ ವೃತ್ತದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ನಂದಿ ವಿಗ್ರಹವನ್ನು ಮಂಗಳವಾರ ತುಮಕೂರು ಸಿದ್ದಗಂಗಾಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಲೋಕಾರ್ಪಣೆಗೊಳಿಸಿದರು.
    ಲೋಕಾರ್ಪಣೆ ಅಂಗವಾಗಿ ಕಂಚಿನಬಾಗಿಲು ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ಪವನ್‌ಕುಮಾರ್ ಉಡುಪ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಆಚರಣೆಗಳು ಜರುಗಿದವು. ಮಹಿಳಾ ಕಲಾವಿದರ ಡೊಳ್ಳು ಕುಣಿತ ಗಮನ ಸೆಳೆಯಿತು. ಕಾರ್ಯಕ್ರಮಕ್ಕೂ ಮೊದಲು ಶ್ರೀಗಳನ್ನು ನಾದಸ್ವರ, ಕುಂಭ ಕಲಶಗಳೊಂದಿಗೆ ಬರಮಾಡಿಕೊಳ್ಳಲಾಯಿತು.
    ಪ್ರತಿಮೆ ವಿಶೇಷತೆ:
    ಒಟ್ಟು ೨೨ ಲಕ್ಷ ರು. ವೆಚ್ಚದಲ್ಲಿ ನಂದಿ ಪ್ರತಿಮೆ ಹಾಗು ಮೇಲ್ಛಾವಣಿ ಕಾಮಗಾರಿ ಕೈಗೊಳ್ಳಲಾಗಿದೆ.  ಪ್ರತಿಮೆ ೧೩.೫ ಅಡಿ ಎತ್ತರ ಹಾಗು ೨೪ ಅಡಿ ಉದ್ದ ವಿಸ್ತ್ರೀರ್ಣಹೊಂದಿದ್ದು, ಸೀಮೆಂಟ್ ಬಳಸಿ ಆಕರ್ಷಕವಾಗಿ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಕಾಗದನಗರದ ನಿವಾಸಿಗಳಾದ, ಶಿಲ್ಪಿಗಳಾದ ಎಸ್.ಬಿ ಬಾಲಾಜಿ ಮತ್ತು ವಿಷ್ಣುಕುಮಾರ್‌ರವರು ಈ ಪ್ರತಿಮೆ ನಿರ್ಮಿಸಿದ್ದಾರೆ.  
    ಸಂಸದ ಬಿ.ವೈ ರಾಘವೇಂದ್ರ, ಶಾಸಕ ಬಿ.ಕೆ ಸಂಗಮೇಶ್ವರ್, ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಮನುಕುಮಾರ್ ಹಾಗು ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಶಿಲ್ಪಿ ಹಾಗು ಗುತ್ತಿಗೆದಾರ ಎಸ್.ಬಿ ಬಾಲಾಜಿ, ವಿಷ್ಣುಕುಮಾರ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಉಪಸ್ಥಿತರಿದ್ದರು.

ಶ್ರೀ ಗುರುಸಿದ್ಧ ಶಿವಾಚಾರ್ಯರ ದಾಸೋಹ ಭವನಕ್ಕೆ ಭೂಮಿ ಪೂಜೆ

ಭದ್ರಾವತಿ ತಾಲೂಕಿನ ಬಿಳಿಕಿ ಹಿರೇಮಠದಲ್ಲಿ ಲಿಂಗೈಕ್ಯ ಶ್ರೀ ಗುರುಸಿದ್ಧ ಶಿವಾಚಾರ್ಯರ ದಾಸೋಹ ಭವನಕ್ಕೆ ಮಂಗಳವಾರ ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಭೂಮಿ ಪೂಜೆ ನೆರವೇರಿಸಿದರು.
    ಭದ್ರಾವತಿ, ಮೇ. ೨೪:  ತಾಲೂಕಿನ ಬಿಳಿಕಿ ಹಿರೇಮಠದಲ್ಲಿ ಲಿಂಗೈಕ್ಯ ಶ್ರೀ ಗುರುಸಿದ್ಧ ಶಿವಾಚಾರ್ಯರ ದಾಸೋಹ ಭವನಕ್ಕೆ ಮಂಗಳವಾರ ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಭೂಮಿ ಪೂಜೆ ನೆರವೇರಿಸಿದರು.
    ಬಾಳೆಹೊನ್ನೂರು ಮಠ ಯಡಿಯೂರು ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮೀಜಿ, ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ತಾವರೆಕೆರೆ ಶಿಲಾಮಠದ ಡಾ. ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಹಾಗು ಬೆಟ್ಟಳ್ಳಿ ಮಠದ ಶ್ರೀಗಳು ಉಪಸ್ಥಿತರಿದ್ದರು.
    ಶಾಸಕ ಬಿ.ಕೆ ಸಂಗಮೇಶ್ವರ್, ಮಠದ ಗೌರವಾಧ್ಯಕ್ಷ ಟಿ.ವಿ ಈಶ್ವರಯ್ಯ, ಚಿದಾನಂದ ಸ್ವಾಮಿ, ಸಿದ್ದಲಿಂಗಯ್ಯ, ವಾಗೀಶ್, ಮಂಜುನಾಥ್, ಲೋಕೇಶ್ ರಾವ್, ಲಂಬೋದರ, ಅರ್ಜುನ್ ರಾವ್, ಶೈಲೇಶ್ ಕೋಠಿ, ದೂದಾ ನಾಯ್ಕ, ವಸಂತಕುಮಾರ್ ಹಾಗು ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ಪದಾಧಿಕಾರಿಗಳು ಹಾಗೂ ಶ್ರೀಮಠದ ಭಕ್ತರು, ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಶ್ರೀ ಶಿವಕುಮಾರ ಸ್ವಾಮೀಜಿ ಸೇವೆ, ತ್ಯಾಗಗಳ ಪ್ರತಿರೂಪ : ಸಿದ್ದಲಿಂಗ ಸ್ವಾಮೀಜಿ


    ಭದ್ರಾವತಿಯಲ್ಲಿ ಆಯೋಜಿಸಲಾಗಿದ್ದ ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ೧೧೫ನೇ ಜನ್ಮದಿನೋತ್ಸವ  ಸಮಾರಂಭವನ್ನು ಮಂಗಳವಾರ ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಿದರು.
    ಭದ್ರಾವತಿ, ಮೇ. ೨೪: ಶ್ರೀ ಶಿವಕುಮಾರ ಸ್ವಾಮೀಜಿಯವರು ಸೇವೆ ಮತ್ತು ತ್ಯಾಗಗಳ ಪ್ರತಿರೂಪವಾಗಿದ್ದು, ಇವರಿಗೆ ಯಾರನ್ನು ಸಹ ಹೋಲಿಕೆ ಮಾಡಲು ಸಾಧ್ಯವಿಲ್ಲ ಎಂದು ತುಮಕೂರು ಶ್ರೀ ಸಿದ್ದಗಂಗಾಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದರು.
    ಹಳೇನಗರದ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ತಾಲೂಕು ವೀರಶೈವ ಲಿಂಗಾಯತ ಸಮಾಜ ಹೆಸರಿನಲ್ಲಿ ಲಿಂಗಾಯತ ಸಮಾಜದ ಎಲ್ಲಾ ಸಂಘಟನೆಗಳು ಒಗ್ಗೂಡಿ ಹಮ್ಮಿಕೊಂಡಿದ್ದ ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ೧೧೫ನೇ ಜನ್ಮದಿನೋತ್ಸವ  ಸಮಾರಂಭದ ದಿವ್ಯ ಸಾನಿಧ್ಯವಹಿಸಿ ಮಾತನಾಡಿದರು.
    ಶ್ರೀಗಳ ಸೇವೆ ಹಾಗು ತ್ಯಾಗದ ಮನೋಭಾವ ಬೇರೆ ಯಾರಲ್ಲೂ ಸಹ ಕಾಣಲು ಸಾಧ್ಯವಿಲ್ಲ.  ಸರ್ವ ಜನಾಂಗವನ್ನು ಪ್ರೀತಿಸಿ ಶಿಕ್ಷಣ ನೀಡುವ ಶ್ರೀಗಳ ಕಾರ್ಯ ಸ್ವಾಮಿ ವಿವೇಕಾನಂದರು, ಮಹಾತ್ಮಗಾಂಧಿಜೀ ಹಾಗು ಅಂಬೇಡ್ಕರ್‌ರವರು ಶಿಕ್ಷಣಕ್ಕೆ ನೀಡುತ್ತಿದ್ದ ಮಹತ್ವ ಹಾಗು ಆಶಯಗಳಿಗೆ ಅನುಗುಣವಾಗಿವೆ.  ಗುಣಮಟ್ಟದ ಮೌಲ್ಯಯುತವಾದ, ಸಂಸ್ಕಾರಯುತವಾದ ಶಿಕ್ಷಣ ನೀಡುವುದು ಇಂದಿನ ಅಗತ್ಯವಾಗಿದೆ. ಇದನ್ನು ಶ್ರೀಗಳು ತೋರಿಸಿಕೊಟ್ಟಿದ್ದು, ಶ್ರೀ ಮಠದಲ್ಲಿ ಶಿಕ್ಷಣ ಪಡೆದ ಸಾವಿರಾರು ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಅಲ್ಲದೆ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ. ಶ್ರೀಮಠದಲ್ಲಿನ ಸೇವಾ ಕಾರ್ಯಗಳಿಂದ ಸ್ಪೂರ್ತಿಗೊಂಡು ವಿವಿಧ ಸೇವೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಬದಕನ್ನು ಸಾರ್ಥಕಗೊಳಿಸಿಕೊಳ್ಳುವ ದಾರಿಯಲ್ಲಿ ಸಾಗುತ್ತಿದ್ದಾರೆ. ಅಲ್ಲದೆ ದಿವಂಗತ ಪುನೀತ್‌ರಾಜ್‌ಕುಮಾರ್ ಸೇರಿದಂತೆ ಅನೇಕರಿಗೆ ಶ್ರೀ ಮಠದ ಸೇವಾ ಕಾರ್ಯಗಳು ಪ್ರೇರಣೆಯನ್ನುಂಟುಮಾಡಿವೆ ಎಂದರು.
      ತ್ರಿವಿಧ ದಾಸೋಹದ ಮೂಲಕ ಬದುಕಿನುದ್ದಕ್ಕೂ ಸಾಧನೆಗಳ ದಾರಿಯಲ್ಲಿ ಸಾಗಿ ಬಂದಿರುವ ಶ್ರೀಗಳಿಗೆ ಸರಿಸಮಾನವಾಗಿ ಯಾರನ್ನು ಸಹ ಕಾಣಲು ಸಾಧ್ಯವಿಲ್ಲ.  ಭೂಮಿಗೆ ಭೂಮಿ, ಸೂರ್ಯನಿಗೆ ಸೂರ್ಯ, ಆಕಾಶಕ್ಕೆ ಆಕಾಶ, ಸಮುದ್ರಕ್ಕೆ ಸಮುದ್ರ ಹೋಲಿಕೆ ಮಾಡಿದಂತೆ ಶ್ರೀಗಳನ್ನು ಹೋಲಿಕೆ ಮಾಡಬಹುದು ಹೊರತು ಬೇರೆ ಯಾರನ್ನು ಸಹ ಹೋಲಿಕೆ ಮಾಡಲು ಸಾಧ್ಯವಿಲ್ಲ. ಶ್ರೀಗಳ ಬದುಕು ನಮ್ಮೆಲ್ಲರಿಗೂ ಆದರ್ಶಪ್ರಾಯವಾಗಿದೆ. ಪ್ರತಿಯೊಬ್ಬರು ತಮ್ಮ ಬದುಕಿನ ವ್ಯಾಪ್ತಿಯನ್ನು ಅರಿತು ಕಾಯಕವನ್ನು ಗೌರವಿಸುವ ಮೂಲಕ ಸಮಾಜದಲ್ಲಿ ಬದುಕು ರೂಪಿಸಿಕೊಳ್ಳಬೇಕೆಂದರು.
    ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಂಸದ ಬಿ.ವೈ ರಾಘವೇಂದ್ರ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಶ್ರೀ ಮಠದ ಕುರಿತು ಹೇಳಿರುವ ಮಾತುಗಳು ಇಂದಿಗೂ ಸತ್ಯವಾಗಿವೆ. ಉತ್ತರದಲ್ಲಿ ಗಂಗೆ, ದಕ್ಷಿಣದಲ್ಲಿ ಸಿದ್ದಗಂಗಾ ನಮ್ಮ ದೇಶದ ಆಸ್ತಿಗಳಾಗಿವೆ. ಶ್ರೀಗಳ ಹೆಸರೇ ನಮ್ಮಲ್ಲಿ ಒಂದು ವಿಶಿಷ್ಟ ಭಕ್ತಿಯ ಭಾವನೆಯನ್ನು ಅರಳಿಸುತ್ತದೆ. ಭಕ್ತಿ, ಸೇವೆ, ನಾನಾ ಪ್ರಕಾರಗಳ ದಾಸೋಹದ ಮೂಲಕ ನಮ್ಮ ಬದುಕನ್ನು ಪರಿಪೂರ್ಣವಾಗಿಸಲು, ಸಾರ್ಥಕಗೊಳಿಸಿಕೊಳ್ಳಲು ಅದು ಪ್ರೇರೇಪಿಸುತ್ತದೆ. ಇಂತಹ ಶ್ರೀಗಳ ಜೊತೆಗಿನ ಒಡನಾಟದ ನೆನಪೇ ಸಾಕು, ನಾವೆಷ್ಟು ಅದೃಷ್ಟಶಾಲಿಗಳು ಎಂದರು.
ಕೋವಿಡ್ ಸಂದರ್ಭದಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಬಡ ಜನರಿಗೆ ಉಚಿತವಾಗಿ ಆಹಾರ ಧ್ಯಾನಗಳನ್ನು ವಿತರಿಸಲು ಶ್ರೀ ಮಠದ ದಾಸೋಹ ಪರಿಕಲ್ಪನೆಯೇ ಪ್ರೇರಣೆಯಾಗಿದೆ. ಈ ನಾಡಿನಲ್ಲಿ ಹಸಿವಿಗೆ ಜಾಗವಿಲ್ಲ. ಇಂತಹ ಆದರ್ಶವನ್ನು ಸರ್ಕಾರ ಅನುಸರಿಸುತ್ತಿರವುದು ಈ ಮಠದ ಹೆಗ್ಗಳಿಕೆಯಾಗಿದೆ ಎಂದರು.
    ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಗೌರವ ಸಲಹೆಗಾರರಾದ ನಾಡೋಜ ಡಾ. ಗೊ.ರು. ಚನ್ನಬಸಪ್ಪ ಮಾತನಾಡಿ, ಶ್ರೀಗಳೊಂದಿಗಿನ ಸಂಬಂಧ ಹಾಗು ಮಠದ ಕಾರ್ಯ ವೈಖರಿಗಳ ಕುರಿತು ವಿವರಿಸಿದರು.
    ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಬಿ.ಕೆ ಸಂಗಮೇಶ್ವರ್, ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ,  ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  ವೀರಶೈವ ಲಿಂಗಾಯತ ಸಮಾಜದ ವಿವಿಧ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಸಮಾಜದ ಸಾವಿರಾರು ಮಂದಿ ಪಾಲ್ಗೊಂಡಿದ್ದರು.
    ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ ಸ್ವಾಗತಿಸಿದರು. ಅಡವೀಶಯ್ಯ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ. ಬಿ.ಜಿ ಧನಂಜಯ ನಿರೂಪಿಸಿದರು.

Monday, May 23, 2022

೪ನೇ ನ್ಯಾಷನಲ್ ಮಾಸ್ಟರ್ ಗೇಮ್ಸ್ ಪಂದ್ಯಾವಳಿಯಲ್ಲಿ ಬಿ. ನಂಜೇಗೌಡರಿಗೆ ಕಂಚಿನ ಪದಕ


೪ನೇ ನ್ಯಾಷನಲ್ ಮಾಸ್ಟರ್ ಗೇಮ್ಸ್ ಪಂದ್ಯಾವಳಿಯಲ್ಲಿ ಭದ್ರಾವತಿಯ ಹಿರಿಯ ಕ್ರೀಡಾಪಟು ಬಿ. ನಂಜೇಗೌಡರವರು ಭಾಗವಹಿಸಿ ತೃತೀಯ ಬಹುಮಾನ ಕಂಚಿನ ಪದಕ ಪಡೆದುಕೊಂಡಿದ್ದಾರೆ.
    ಭದ್ರಾವತಿ, ಮೇ. ೨೩: ಮಾಸ್ಟರ್ ಗೇಮ್ಸ್ ಫೆಡರೇಷನ್(ಇಂಡಿಯಾ) ವತಿಯಿಂದ ಕೇರಳದ ತಿರುವನಂತಪುರಂನಲ್ಲಿ ಆಯೋಜಿಸಲಾಗಿದ್ದ ೪ನೇ ನ್ಯಾಷನಲ್ ಮಾಸ್ಟರ್ ಗೇಮ್ಸ್ ಪಂದ್ಯಾವಳಿಯಲ್ಲಿ ನಗರದ ಹಿರಿಯ ಕ್ರೀಡಾಪಟು ಬಿ. ನಂಜೇಗೌಡರವರು ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.
    ೭೦ ವರ್ಷ ಮೇಲ್ಪಟ್ಟವರ ವಯೋಮಾನದ ವಿಭಾಗದಲ್ಲಿ ರಾಜ್ಯದಿಂದ ಪ್ರತಿನಿಧಿಸಿ ೩೦೦ ಮೀಟರ್ ಹರ್ಡಲ್ಸ್‌ನಲ್ಲಿ ತೃತೀಯ ಬಹುಮಾನದೊಂದಿಗೆ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.
    ನಂಜೇಗೌಡರವರು ಮಾರ್ಚ್‌ನಲ್ಲಿ ಉಡುಪಿಯಲ್ಲಿ ನಡೆದ ೩ನೇ ನ್ಯಾಷನಲ್ ಮಾಸ್ಟರ್ ಗೇಮ್ಸ್ ಪಂದ್ಯಾವಳಿಯಲ್ಲಿ ೨ ಚಿನ್ನ ಹಾಗು ೧ ಬೆಳ್ಳಿ ಪದಕ ಪಡೆದುಕೊಂಡಿದ್ದರು.
    ಪೊಲೀಸ್ ಇಲಾಖೆಯಲ್ಲಿ ಸಬ್‌ಇನ್ಸ್‌ಪೆಕ್ಟರ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿರುವ ೭೫ರ ವಯೋಮಾನದ ನಂಜೇಗೌಡರವರು ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದು, ರಾಷ್ಟ್ರೀಯ, ಅಂತರಾಷ್ಟ್ರೀಯ, ರಾಜ್ಯ ಹಾಗು ಜಿಲ್ಲಾಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಇದುವರೆಗೂ ಸುಮಾರು ೩೧ಕ್ಕೂ ಹೆಚ್ಚು ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ ಯುವ ಕ್ರೀಡಾಪಟುಗಳಿಗೆ ಮಾದರಿಯಾಗಿದ್ದಾರೆ. ಇವರ ಸಾಧನೆಗೆ ನಗರದ ಗಣ್ಯರು, ಕ್ರೀಡಾಭಿಮಾನಿಗಳು ಅಭಿನಂದಿಸಿದ್ದಾರೆ.


ವಿವಿಧ ಬೇಡಿಕೆಗಳ ಕುರಿತು ಮೇ.೩೦ರ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಿ

ಪೌರಾಯುಕ್ತ ಎಚ್.ಎಂ ಮನುಕುಮಾರ್‌ಗೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ಮನವಿ


ಭದ್ರಾವತಿ ನಗರಸಭೆ ವ್ಯಾಪ್ತಿಯ ವಿವಿಧ ಬೇಡಿಕೆಗಳ ಕುರಿತು ಮೇ.೩೦ರಂದು ನಡೆಯಲಿರುವ ಸಾಮಾನ್ಯಸಭೆಯಲ್ಲಿ ಪ್ರಸ್ತಾಪಿಸುವ ಮೂಲಕ ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಹಾಗು ಸುವರ್ಣ ಮಹಿಳಾ ವೇದಿಕೆ ವತಿಯಿಂದ ನಗರಸಭೆ ಪೌರಾಯುಕ್ತ ಎಚ್.ಎಂ ಮನುಕುಮಾರ್‌ಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಮೇ. ೨೩: ನಗರಸಭೆ ವ್ಯಾಪ್ತಿಯ ವಿವಿಧ ಬೇಡಿಕೆಗಳ ಕುರಿತು ಮೇ.೩೦ರಂದು ನಡೆಯಲಿರುವ ಸಾಮಾನ್ಯಸಭೆಯಲ್ಲಿ ಪ್ರಸ್ತಾಪಿಸುವ ಮೂಲಕ ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಹಾಗು ಸುವರ್ಣ ಮಹಿಳಾ ವೇದಿಕೆ ವತಿಯಿಂದ ನಗರಸಭೆ ಪೌರಾಯುಕ್ತ ಎಚ್.ಎಂ ಮನುಕುಮಾರ್‌ಗೆ ಮನವಿ ಸಲ್ಲಿಸಲಾಯಿತು.
    ಜನ್ನಾಪುರ ಸರ್ವೆ ನಂ.೭೦ರ ಸುಮಾರು ೪೫ ಎಕರೆ ೨೦ ಗುಂಟೆ ವಿಸ್ತೀರ್ಣವುಳ್ಳ ಕೆರೆಗೆ ಸಮೀಪದ ಜನ ವಸತಿ ಪ್ರದೇಶಗಳಿಂದ ಕಲ್ಮಶಗೊಂಡ ನೀರು ಬಂದು ಸೇರುತ್ತಿದ್ದು, ಇದನ್ನು ತಡೆಯಲು ಸುಮಾರು ೩ ಕೋ. ರು. ವೆಚ್ಚದಲ್ಲಿ ರಾಜಕಾಲುವೆ ನಿರ್ಮಾಣ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿಕೊಡುವ ಕುರಿತು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದು.
    ಕೇಂದ್ರ ಸರ್ಕಾರದ ಕ್ಯಾಚ್ ದ ರೈನ್ (ಮಳೆ ನೀರು ಹಿಡಿಯಿರಿ) ಯೋಜನೆಗೆ ಹಿಂಬುಕೊಡಲು ನಗರಸಭೆ ವ್ಯಾಪ್ತಿಯಲ್ಲಿರುವ ಸುಮಾರು ೭೦ ಕೆರೆಗಳ ಬೌಂಡರಿ ನಿಗದಿಪಡಿಸಿ ಬಸಿ ಕಾಲುವೆ (ಟ್ರಂಚ್) ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಗರಸಭೆಗೆ ೫ ಕೋ. ರು. ವಿಶೇಷ ಅನುದಾನ ಬಿಡುಗಡೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಕುರಿತು ಚರ್ಚಿಸುವುದು.
    ನಟ, ಸಮಾಜ ಸೇವಕ, ಕರ್ನಾಟಕ ರತ್ನ, ಡಾ. ಪುನೀತ್ ರಾಜ್‌ಕುಮಾರ್ ಅವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ವಾರ್ಡ್ ನಂ.೧೫ರ ಸುಮಾರು ೮೦೦ ವರ್ಷಗಳ ಇತಿಹಾಸವಿರುವ ೫೦ ಎಕರೆ ೨೦ ಗುಂಟೆ ವಿಸ್ತೀರ್ಣವುಳ್ಳ ಹೊಸಮನೆ ಸರ್ಕಾರಿ ಹಿರೇಕೆರೆಗೆ ಅವರ ಹೆಸರನ್ನು ನಾಮಕರಣಗೊಳಿಸಿ ಆಕರ್ಷಕ ಪ್ರವಾಸಿ ತಾಣವನ್ನಾಗಿಸುವ ಸಂಬಂಧ ಹಾಗು ಜನ್ನಾಪುರ ಸರ್ವೆ ನಂ.೭೦ರ ಸುಮಾರು ೪೫ ಎಕರೆ ೨೦ ಗುಂಟೆ ವಿಸ್ತೀರ್ಣವುಳ್ಳ ಕೆರೆಗೆ ನಗರದ ಅನ್ನದಾತ, ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಅವರ ಹೆಸರನ್ನು ನಾಮಕರಣಗೊಳಿಸುವ ಸಂಬಂಧ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದು ಸೇರಿದಂತೆ ಇತ್ಯಾದಿ ಬೇಡಿಕೆಗಳ ಕುರಿತು ಸಾಮಾನ್ಯ ಸಭೆಯಲ್ಲಿ ಚರ್ಚಿಸುವಂತೆ ಮನವಿ ಮಾಡಲಾಗಿದೆ.
    ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಹಾಗು ಸುವರ್ಣ ಮಹಿಳಾ ವೇದಿಕೆ ಛೇರ್‍ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ಮನವಿ ಸಲ್ಲಿಸಿದರು. ಕಂದಾಯಾಧಿಕಾರಿ ರಾಜ್‌ಕುಮಾರ್ ಉಪಸ್ಥಿತರಿದ್ದರು.

ಶ್ರೀರಾಮಾನುಜಾಚಾರ್ಯರ ೧೦೦೫ನೇ ಜಯಂತೋತ್ಸವ : ವಿಜೃಂಭಣೆಯಿಂದ ಜರುಗಿದ ಸಾಮೂಹಿಕ ಉಪನಯನ, ಸಮಾಶ್ರಯಣ

ಭದ್ರಾವತಿ ತಾಲೂಕು ವೈಷ್ಣವ ಪರಿಷತ್ ಹಾಗೂ ಹೊಳೆಹೊನ್ನೂರು ಹೋಬಳಿ ಹಾಗೂ ಸಿದ್ಲಿಪುರದ ಶ್ರೀವೈಷ್ಣವ ಸೇವಾ ಸಮಿತಿ ಸಹಯೋಗದೊಂದಿಗೆ ಜಗದ್ಗುರು ಶ್ರೀ ಭಗವದ್ ಶ್ರೀರಾಮಾನುಜಾಚಾರ್ಯರ ೧೦೦೫ನೇ ಜಯಂತೋತ್ಸವ ಅಂಗವಾಗಿ ಸೋಮವಾರ ಕಾಗದನಗರದ ೭ನೇ ವಾರ್ಡ್‌ನ ಶ್ರೀಕ್ಷೇತ್ರ ನಾಗರಕಟ್ಟೆಯಲ್ಲಿ ಸಾಮೂಹಿಕ ಉಪನಯನ ಮತ್ತು  ಸಮಾಶ್ರಯಣ (ಮುದ್ರಾಧಾರಣೆ) ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು.
    ಭದ್ರಾವತಿ. ಮೇ. ೧೮; ತಾಲೂಕು ವೈಷ್ಣವ ಪರಿಷತ್ ಹಾಗೂ ಹೊಳೆಹೊನ್ನೂರು ಹೋಬಳಿ ಹಾಗೂ ಸಿದ್ಲಿಪುರದ ಶ್ರೀವೈಷ್ಣವ ಸೇವಾ ಸಮಿತಿ ಸಹಯೋಗದೊಂದಿಗೆ ಜಗದ್ಗುರು ಶ್ರೀ ಭಗವದ್ ಶ್ರೀರಾಮಾನುಜಾಚಾರ್ಯರ ೧೦೦೫ನೇ ಜಯಂತೋತ್ಸವ ಅಂಗವಾಗಿ ಸೋಮವಾರ ಕಾಗದನಗರದ ೭ನೇ ವಾರ್ಡ್‌ನ ಶ್ರೀಕ್ಷೇತ್ರ ನಾಗರಕಟ್ಟೆಯಲ್ಲಿ ಸಾಮೂಹಿಕ ಉಪನಯನ ಮತ್ತು  ಸಮಾಶ್ರಯಣ (ಮುದ್ರಾಧಾರಣೆ) ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು.
    ಮೇಲುಕೋಟೆ ಯತೀರಾಜ ಮಠದ ಯಾದಗಿರಿ ಯತೀರಾಜ ನಾರಾಯಣ ಜೀಯರ್ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಸುಮಾರು ೪೦ಕ್ಕೂ ಹೆಚ್ಚು ವಟುಗಳಿಗೆ ಸಮಾಶ್ರಯಣ ನಡೆಯಿತು. ದಾನಿಗಳು, ಸೇವಾಕರ್ತರಾದ ಹೊನ್ನಟ್ಟಿ ಹೊಸೂರಿನ ಉಷಾ ಸತೀಶ್‌ಗೌಡ ದಂಪತಿಯನ್ನು ಶ್ರೀಗಳು ಅಭಿನಂದಿಸಿ ಆಶೀರ್ವದಿಸಿದರು.
    ವೈಷ್ಣವ ಪರಿಷತ್ ಅಧ್ಯಕ್ಷ ದೊಡ್ಡಯ್ಯ, ಶ್ರೀ ಕ್ಷೇತ್ರ ನಾಗರಕಟ್ಟೆ ಪ್ರಧಾನ ಅರ್ಚಕ ರಮೇಶ್ ಭಟ್ ಅರಳೀಮಠ್, ಜಿ.ವಿ ಅಶ್ವತ್ ನಾರಾಯಣ್, ಎಸ್.ಕೆ ಸುರೇಂದ್ರ, ವೆಂಕಟೇಶ್ ಕನಸಿನಕಟ್ಟೆ, ಚಿನ್ಮಯ, ಮಧುಸೂದನ್ ಹಾಗು ಯುವ ಪುರೋಹಿತರನ್ನು ಶ್ರೀಗಳು ಗೌರವಿಸಿದರು.
    ತಾಲೂಕು ಬ್ರಾಹ್ಮಣ ಸಮಾಜದ ಅಧ್ಯಕ್ಷ ಎಂ.ಎಸ್ ಜನಾರ್ಧನ ಅಯ್ಯಂಗಾರ್, ವೈಷ್ಣವ ಸಮಾಜದ ಪ್ರಮುಖರಾದ ಕೃಷ್ಣಸ್ವಾಮಿ, ಅರಹತೊಳಲು ಕೃಷ್ಣಮೂರ್ತಿ, ಕೇಶವಮೂರ್ತಿ, ಕಡದಕಟ್ಟೆ ಮಾದೂರಾವ್, ಹನಗವಾಡಿ ಹನುಮಂತಯ್ಯ, ದೇವರ ಹೊನ್ನಾಳಿ ಗೋಪಾಲಯ್ಯ, ದೇವರಹಳ್ಳಿ ಕೇಶವಯ್ಯ, ಎಸ್.ಪಿ ಅಶ್ವತ್‌ನಾರಾಯಣ್, ಪತ್ರಕರ್ತ ಎಸ್.ಕೆ ಗಜೇಂದ್ರಸ್ವಾಮಿ, ಬಿ. ರಮೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.  

Sunday, May 22, 2022

ಉಕ್ಕು ಪ್ರಾಧಿಕಾರ ವಿಐಎಸ್‌ಎಲ್‌ಗೆ ಬಂಡವಾಳ ತೊಡಗಿಸುವಂತೆ ಮಾಡಲು ಸಹಕಾರ ನೀಡಿ :

ಕಾರ್ಮಿಕ ಸಂಘದಿಂದ ಸಂಸದರಿಗೆ ಮನವಿ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಪ್ರಸ್ತುತ ಲಾಭದತ್ತ ಸಾಗುತ್ತಿದ್ದು, ಇದೀಗ ಬಂಡವಾಳ ತೊಡಗಿಸುವ ಅಗತ್ಯತೆ ಕಂಡು ಬರುತ್ತಿದೆ. ಈ ಹಿನ್ನಲೆಯಲ್ಲಿ ಸಹಕರಿಸುವಂತೆ ಕಾರ್ಖಾನೆಯ ಕಾರ್ಮಿಕ ಸಂಘ ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಮನವಿ ಮಾಡಿದೆ.
    ಭದ್ರಾವತಿ, ಮೇ. ೨೨: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಪ್ರಸ್ತುತ ಲಾಭದತ್ತ ಸಾಗುತ್ತಿದ್ದು, ಇದೀಗ ಬಂಡವಾಳ ತೊಡಗಿಸುವ ಅಗತ್ಯತೆ ಕಂಡು ಬರುತ್ತಿದೆ. ಈ ಹಿನ್ನಲೆಯಲ್ಲಿ ಸಹಕರಿಸುವಂತೆ ಕಾರ್ಖಾನೆಯ ಕಾರ್ಮಿಕ ಸಂಘ ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಮನವಿ ಮಾಡಿದೆ.
      ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ಮತ್ತು ಪದಾಧಿಕಾರಿಗಳು ಶಿವಮೊಗ್ಗದಲ್ಲಿರುವ ಸಂಸದರ ನಿವಾಸಕ್ಕೆ ತೆರಳಿ ಮನವಿ ಸಲ್ಲಿಸಿದ್ದು, ಮೈಸೂರು ಸಂಸ್ಥಾನ ೧೯೧೮ರಲ್ಲಿ ಆರಂಭಿಸಿದ ಮೈಸೂರು ವುಡ್ ಡಿಸ್ಟಿಲರಿ ವರ್ಕರ್‍ಸ್ ಲಿಮಿಟೆಡ್ ಕಾರ್ಖಾನೆಯನ್ನು ನಂತರದ ದಿನಗಳಲ್ಲಿ ಕರ್ನಾಟಕ ಸರ್ಕಾರ ತನ್ನ ಅಧೀನಕ್ಕೆ ಸೇರ್ಪಡೆ ಮಾಡಿಕೊಂಡು ಮೈಸೂರು ಐರನ್ ಸ್ಟೀಲ್ ಲಿಮಿಟೆಡ್(ಎಂಐಎಸ್‌ಎಲ್) ಎಂಬ ಹೆಸರನ್ನು ನಾಮಕರಣಗೊಳಿಸಿತು. ನಂತರ ೧೯೮೯ರಲ್ಲಿ ಕಾರ್ಖಾನೆಯನ್ನು ಕೇಂದ್ರ ಸರ್ಕಾರದ ಉಕ್ಕು ಪ್ರಾಧಿಕಾರದ ಅಂಗಸಂಸ್ಥೆಯಾಗಿ ಸೇರ್ಪಡೆಗೊಳಿಸಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಎಂಬ ಹೆಸರನ್ನು ನಾಮಕರಣಗೊಳಿಸಲಾಯಿತು.  ೧೯೯೮ರಲ್ಲಿ ಪ್ರಾಧಿಕಾರ ಕಾರ್ಖಾನೆಯನ್ನು ಸಂಪೂರ್ಣವಾಗಿ ತನ್ನ ಅಧೀನಕ್ಕೆ ವಹಿಸಿಕೊಂಡು ಘಟಕವನ್ನಾಗಿಸಿಕೊಂಡಿದೆ. ೨೦೧೬ರಲ್ಲಿ ಎನ್‌ಐಟಿಐ ಆಯೋಗ ಕಾರ್ಖಾನೆಯನ್ನು ಬಂಡವಾಳ ಹಿಂಪಡೆಯುವ ಪ್ರಕ್ರಿಯೆಗೆ ಒಳಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಅದರಂತೆ ಸರ್ಕಾರ ಬಂಡವಾಳ ಹಿಂಪಡೆಯವ ಪ್ರಕ್ರಿಯೆ ಆರಂಭಿಸಿತು. ಆದರೆ ಕಾರ್ಖಾನೆಯನ್ನು ಕೊಂಡುಕೊಳ್ಳಲು ಯಾರು ಸಹ ಮುಂದೆ ಬರಲಿಲ್ಲ. ಸರ್ಕಾರ ಕೈಗೊಂಡ ಕ್ರಮ ವಿಫಲವಾಗಿದೆ ಎಂದು ಸಂಸದರಿಗೆ ಮನವಿಯಲ್ಲಿ ತಿಳಿಸಲಾಗಿದೆ.
    ಉಕ್ಕು ಪ್ರಾಧಿಕಾರದ ಆಡಳಿತ ಮಂಡಳಿ ಸಹಕಾರದೊಂದಿಗೆ ನಂತರದ ದಿನಗಳಲ್ಲಿ ಕಾರ್ಖಾನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು ೨೮೦ ಕಾಯಂ ಹಾಗು ೧೩೪೦ ಗುತ್ತಿಗೆ ಕಾರ್ಮಿಕರು ಹೆಚ್ಚಿನ ಶ್ರಮ ವಹಿಸಿ ಕಡಿಮೆ ಬಂಡವಾಳದಲ್ಲಿ, ಕಡಿಮೆ ಉತ್ಪಾದನೆಯಲ್ಲಿ ಲಾಭಾಂಶ ಕಂಡುಕೊಳ್ಳುತ್ತಿದ್ದು, ವಹಿವಾಟು ಸುಮಾರು ೪೦೦ ಕೋ. ರು.ಗಳಿಗೆ ಹೆಚ್ಚಿಸಲಾಗಿದೆ. ಇದೀಗ ಕಾರ್ಖಾನೆಯಲ್ಲಿ ಉತ್ಪಾದನೆಯಾಗುವ ರೈಲ್ವೆ ಆಕ್ಸ್‌ಲೆಸ್‌ಗಳಿಗೆ ಪ್ರಾಧಿಕಾರದ ಕೇಂದ್ರ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಉತ್ಪಾದನೆ ಹೆಚ್ಚಿಸಲು ಪ್ರಸ್ತುತ ಕನಿಷ್ಠ ೩೦೦ ಕೋ. ರು. ಅಗತ್ಯವಿದೆ. ಉಕ್ಕು ಪ್ರಾಧಿಕಾರ ೨೦೨೦-೨೧ನೇ ಮೊದಲ ತ್ರೈವಾರ್ಷಿಕ ಹಣಕಾಸು ವರ್ಷದಲ್ಲಿ ೯,೫೯೭ ಕೋ.ರು.ಗಳಿಗೂ ಹೆಚ್ಚಿನ ಲಾಭಾಂಶ ಸಾಧಿಸಿದೆ. ಈ ನಡುವೆ ತನ್ನ ಅಧೀನದಲ್ಲಿರುವ ಪ್ರಮುಖ ಕಾರ್ಖಾನೆಗಳಿಗೆ ಒಟ್ಟು ೧.೫ ಲಕ್ಷ ಕೋ. ರು. ಬಂಡವಾಳ ತೊಡಗಿಸಲು ಮುಂದಾಗಿದೆ. ಈ ಹಿನ್ನಲೆಯಲ್ಲಿ ಕಾರ್ಖಾನೆಯನ್ನು ಪ್ರಾಧಿಕಾರದ ಅಧೀನದಲ್ಲಿಯೇ ಮುಂದುವರೆಸಿ ಅಗತ್ಯವಿರುವ ಬಂಡವಾಳ ಪಡೆಯಲು ಹೆಚ್ಚಿನ ಸಹಕಾರ ನೀಡುವಂತೆ ಮನವರಿಕೆ ಮಾಡಲಾಗಿದೆ.
    ಅಲ್ಲದೆ ಕಾರ್ಖಾನೆಗೆ ಸೇರಿದ ಸಾಕಷ್ಟು ಖಾಲಿ ಜಾಗವಿದ್ದು, ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಯೋಜನೆಗಳನ್ನು ರೂಪಿಸಿಕೊಳ್ಳುವಂತೆ ರಾಜ್ಯ ಹಾಗು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವಂತೆ ಕೋರಲಾಗಿದೆ.
ಮನವಿಗೆ ಸ್ಪಂದಿಸಿರುವ ಸಂಸದರು, ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸುವಂತೆ ಪ್ರಾಧಿಕಾರಕ್ಕೆ ಒತ್ತಾಯಿಸುವುದಾಗಿ ಹಾಗು ಖಾಲಿ ಜಾಗ ಸದ್ಬಳಕೆ ಮಾಡಿಕೊಳ್ಳುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಮನವಿ ಮಾಡುವುದಾಗಿ  ಭರವಸೆ ನೀಡಿದ್ದಾರೆ.
    ಉಪಾಧ್ಯಕ್ಷ ಕುಮಾರ್ ಎಎಲ್‌ಡಬ್ಲ್ಯೂ, ಪ್ರಧಾನ ಕಾರ್ಯದರ್ಶಿ ಯು.ಎ ಬಸಂತ್‌ಕುಮಾರ್, ಕಾರ್ಯದರ್ಶಿ ಕೆ.ಆರ್ ಮನು ಮತ್ತು ಎಸ್ ಮೋಹನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.