Saturday, May 28, 2022

ಮೇ.೨೯ರಂದು ೩೮ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ಭದ್ರಾವತಿ, ಮೇ. ೨೮: ವಿಶ್ವಹಿಂದು ಪರಿಷತ್ ವತಿಯಿಂದ ಪ್ರತಿವರ್ಷದಂತೆ ಈ ಬಾರಿ ಸಹ ೩೮ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಹಾಗೂ ಧರ್ಮಶ್ರೀ ಸಭಾಭವನ ಮಹಡಿಗಳ ಉದ್ಘಾಟನಾ ಸಮಾರಂಭ ಮೇ.೨೯ ಬೆಳಗ್ಗೆ ೧೧ಗಂಟೆಗೆ ನಡೆಯಲಿದೆ.
ಶಿವಮೊಗ್ಗ ಬಸವಕೇಂದ್ರದ ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಸಂಸದ ಬಿ.ವೈ ರಾಘವೇಂದ್ರ ಸಮಾರಂಭ ಉದ್ಘಾಟಿಸುವರು. ವಿಶ್ವಹಿಂದೂ ಪರಿಷತ್ ತಾಲೂಕು ಅಧ್ಯಕ್ಷ ವೆಂಕಟರಮಣ ಶೇಟ್ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಶಾಸಕ ಬಿ.ಕೆ ಸಂಗಮೇಶ್ವರ್, ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್. ರುದ್ರೇಗೌಡ, ಡಿ.ಎಸ್ ಅರುಣ್, ವಿಶ್ವ ಹಿಂದು ಪರಿಷತ್ ಕ್ಷೇತ್ರಿಯ ಕಾರ್ಯದರ್ಶಿ ಕೇಶವ ಹೆಗ್ಡೆ, ಪ್ರಾಂತ್ಯ ಉಪಾಧ್ಯಕ್ಷ ಹಾ ರಾಮಪ್ಪ, ಜಿಲ್ಲಾಧ್ಯಕ್ಷ  ವಾಸುದೇವ ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಎಸ್. ಮುತ್ತುರಾಮಲಿಂಗಮ್, ಮಾತೃ ಮಂಡಳಿ ಅಧ್ಯಕ್ಷೆ ಯಶೋಧ ವೀರಭದ್ರಪ್ಪ, ಧರ್ಮಶ್ರೀ ಸಭಾ ಭವನ ಕಟ್ಟಡ ಸಮಿತಿ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ, ನಗರಸಭಾ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಪೌರಾಯುಕ್ತ ಮನುಕುಮಾರ್, ಸದಸ್ಯ ಆರ್. ಶ್ರೇಯಸ್, ದಾನಿ ವೇದಾವತಿ ಶಿವಮೂತಿ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ, ಆರ್. ಪೂರ್ವಚಾರ್, ವೈದ್ಯ ಡಾ. ನರೇಂದ್ರ ಭಟ್, ಡಿ.ಆರ್ ಶಿವಕುಮಾರ್, ವೈ.ಎಸ್ ರಾಮಮೂರ್ತಿ, ಮಂಜುನಾಥ ಪವಾರ್, ಎನ್. ಎಸ್ ಮಹೇಶ್ವರಪ್ಪ ಮತ್ತು ಡಾ. ಬಿ.ಜಿ ಧನಂಜಯ  ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಹಾಗು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕನ್ನಡ ಭಾಷೆಯಲ್ಲಿ ೧೨೫/೧೨೫ ಅಂಕ  ಪಡೆದಿರುವ ತಾಲೂಕಿನ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪರುಸ್ಕಾರ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.

Friday, May 27, 2022

ಮೇ.೨೯ರಂದು ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ

ಶ್ರೀ ವಿನಾಯಕ ಚಾರಿಟೆಬಲ್ ಟ್ರಸ್ಟ್ ವತಿಯಿಂದ ೧೫೦೦ ನೋಟ್ ಬುಕ್‌ಗಳ ವಿತರಣೆಗೆ ಸಿದ್ದತೆ


ಎ. ಧರ್ಮೇಂದ್ರ  
    ಭದ್ರಾವತಿ, ಮೇ. ೨೭: ಶ್ರೀ ವಿನಾಯಕ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಹಲವಾರು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಟ್ರಾವೆಲ್ಸ್ ಮಾಲೀಕ ಮತ್ತು ಸಿವಿಲ್ ಗುತ್ತಿಗೆದಾರ ಎ. ಧರ್ಮೇಂದ್ರ ಪ್ರತಿವರ್ಷ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ನೋಟ್‌ಬುಕ್ ವಿತರಣೆಯೊಂದಿಗೆ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಗಮನ ಸೆಳೆದಿದ್ದಾರೆ.
    ಕಳೆದ ವರ್ಷ ಅರಳಿಹಳ್ಳಿ ಸರ್ಕಾರಿ ಶಾಲೆಯಲ್ಲಿ ಅರಳಿಹಳ್ಳಿ ಸೇರಿದಂತೆ  ಸುತ್ತಮುತ್ತಲ ಗ್ರಾಮಗಳ ಸರ್ಕಾರಿ ಶಾಲೆಗಳ ಮಕ್ಕಳಿಗೆ ಒಟ್ಟು ಸುಮಾರು ೧೦೦೦ ನೋಟ್ ಬುಕ್‌ಗಳನ್ನು ಉಚಿತವಾಗಿ ವಿತರಣೆ ಮಾಡಿದ್ದರು. ಈ ಬಾರಿ ಸಹ ಒಟ್ಟು ೧೫೦೦ ನೋಟ್ ಬುಕ್‌ಗಳನ್ನು ವಿತರಿಸಲು ಮುಂದಾಗಿದ್ದಾರೆ.

'ನಾವು ವಿದ್ಯಾಭ್ಯಾಸ ಮಾಡುವ ಸಂದರ್ಭದಲ್ಲಿ ತುಂಬಾ ಬಡತನವಿದ್ದು, ನೋಟ್ ಬುಕ್, ಪಠ್ಯ ಪುಸ್ತಕಗಳನ್ನು ಕೊಂಡುಕೊಳ್ಳುವುದು ಅಸಾಧ್ಯವಾಗಿತ್ತು.  ಅಲ್ಲದೆ ಹಲವಾರು ಕಾರಣಗಳಿಂದ ನಾವು ಹೆಚ್ಚಿನ ವಿದ್ಯಾಭ್ಯಾಸ ಪಡೆಯಲು ಸಾಧ್ಯವಾಗಲಿಲ್ಲ. ನಾವು ಅನುಭವಿಸಿದ ಕಷ್ಟ ಈಗಿನ ವಿದ್ಯಾರ್ಥಿಗಳು ಅನುಭವಿಸಬಾರದು. ಪ್ರಸ್ತುತ ಎಲ್ಲಾ ಮಕ್ಕಳು ಹೆಚ್ಚಿನ ವಿದ್ಯಾಭ್ಯಾಸ ಪಡೆಯುವುದು ಅನಿವಾರ್ಯವಾಗಿದೆ. ಇಂತಹ ಸಂದರ್ಭದಲ್ಲಿ ಸ್ವಲ್ಪಮಟ್ಟಿಗಾದರೂ ಸ್ಪಂದಿಸಬೇಕೆಂಬ ಮನೋಭಾವನೆಯೊಂದಿಗೆ ಉಚಿತವಾಗಿ ನೋಟ್ ಬುಕ್‌ಗಳನ್ನು ವಿತರಿಸಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕೋರುತ್ತೇನೆ.
                                                                - ಎ. ಧರ್ಮೇಂದ್ರ, ಅಧ್ಯಕ್ಷರು, ಶ್ರೀವಿನಾಯಕ ಚಾರಿಟೆಬಲ್ ಟ್ರಸ್ಟ್ .

    ಶ್ರೀ ಹರಿಹರೇಶ್ವರ ಪ್ರೌಢಶಾಲೆ ಹಳೇ ವಿದ್ಯಾರ್ಥಿಗಳ ಸಂಘದ ನೇತೃತ್ವದಲ್ಲಿ ಮೇ.೨೯ರ ಭಾನುವಾರ ಬೆಳಿಗ್ಗೆ ೯.೩೦ಕ್ಕೆ ಶ್ರೀರಾಮನಗರದ ಶ್ರಮಜೀವಿ ಮರಿಸಿದ್ದಯ್ಯ ಕಲ್ಯಾಣ ಮಂಟಪದಲ್ಲಿ ಬಾಬಳ್ಳಿ, ಕಾಗೇಕೋಡಮಗ್ಗಿ, ಜಯನಗರ, ವೀರಾಪುರ, ರಾಮನಗರ, ಕುಮರಿನಾರಾಯಣಪುರ ಮತ್ತು ತಳ್ಳಿಕಟ್ಟೆ ಗ್ರಾಮಗಳ ಸರ್ಕಾರಿ ಶಾಲೆಗಳ ಮಕ್ಕಳಿ ಉಚಿತ ನೋಟ್ ಬುಕ್ ವಿತರಣೆ ನಡೆಯಲಿದೆ.
    ಜಾನಪದ ಆಕಾಡೆಮಿ ಅಧ್ಯಕ್ಷೆ ಪದ್ಮಶ್ರೀ ಮಾತಾ ಬಿ. ಮಂಜಮ್ಮ ಜೋಗತಿ, ತಹಸೀಲ್ದಾರ್ ಆರ್. ಪ್ರದೀಪ್, ಪೊಲೀಸ್ ಉಪಾಧೀಕ್ಷಕ ಜಿತೇಂದ್ರಕುಮಾರ್ ದಯಾಮಾ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಪೊಲೀಸ್ ವೃತ್ತ ನಿರೀಕ್ಷಕ ಎನ್.ಕೆ ಗುರುರಾಜ್, ಶಮಜೀವಿ ಮರಿಸಿದ್ದಯ್ಯ ಕಲ್ಯಾಣ ಮಂಟಪದ  ರಮೇಶ್, ಯು. ಹರೀಶ್‌ರಾವ್, ಸಿ. ಹರಿಬಾಬು, ಸಿ.ಎಸ್ ನಾಗರಾಜ್, ಮಮತ, ರೂಪವತಿ, ಮಂಗಳ ಗೌರಮ್ಮ, ಶಶಿಕುಮಾರ, ಪರಮೇಶ್ವರಪ್ಪ, ಸತ್ಯನಾರಾಯಣ, ಸುರೇಶ್, ಗಂಗಣ್ಣ, ಕಾವೇರಮ್ಮ ಮತ್ತು ಗಣೇಶ್ ಕಲ್ಲೇರಿ, ಆಶಾರಾಣಿ ಧರ್ಮೇಂದ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿರುವವರು.
    ಮಹಾಮಾರಿ ಕೊರೋನಾ ಸಂದರ್ಭದಲ್ಲಿ ಧರ್ಮೇಂದ್ರ ಅವರು ಶ್ರೀ ವಿನಾಯಕ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಉಚಿತ ಆಂಬ್ಯುಲೆನ್ಸ್ ಸೇವೆ ಒದಗಿಸುವ ಮೂಲಕ ಮಾನವೀಯತೆ ಮೆರೆದಿದ್ದರು.

ಶಿಕ್ಷಣ ಎಂದರೆ ಪರಿಪೂರ್ಣವಾಗಿ ಬದುಕಲು ಪೂರಕವಾದ ಜ್ಞಾನದ ಎಲ್ಲಾ ಬಗೆಯ ಕಲಿಕೆ : ಎ.ಕೆ ನಾಗೇಂದ್ರಪ್ಪ

ಭದ್ರಾವತಿಯಲ್ಲಿ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೬೨೫ಕ್ಕೆ ೬೨೫ ಅಂಕ ಪಡೆದುಕೊಂಡು ತಾಲೂಕಿಗೆ ಕೀರ್ತಿ ತಂದಿರುವ ನಗರದ ಬಿ.ಎಚ್ ರಸ್ತೆ ಪೂರ್ಣಪ್ರಜ್ಞ ವಿದ್ಯಾಸಂಸ್ಥೆಯ ಪ್ರತೀಕ್ಷಾ ದಯಾನಂದ ಹಾಗು ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ಪ್ರೇರಣಾ .ಬಿ ಸೇರಿದಂತೆ ೩ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಮೇ. ೨೭: ಶಿಕ್ಷಣ ಎಂದರೆ ಸಮಾಜದಲ್ಲಿ ಪರಿಪೂರ್ಣವಾಗಿ ಬದುಕಲು ಪೂರಕವಾದ ಜ್ಞಾನದ ಎಲ್ಲಾ ಬಗೆಯ ಕಲಿಕೆಯಾಗಿದ್ದು, ಇದು ಹುಟ್ಟಿನಿಂದ ಸಾವಿನವರೆಗೂ ಮುಂದುವರೆಯುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಹೇಳಿದರು.
    ಅವರು ಶುಕ್ರವಾರ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾವಂತ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಮಗುವಿನ ಮೊದಲ ಕಲಿಕೆ ಮನೆಯಿಂದ ಆರಂಭಗೊಳ್ಳುತ್ತದೆ. ತಂದೆ-ತಾಯಿ ಮೊದಲ ಗುರುಗಳಾಗಿದ್ದು, ಈ ಹಿನ್ನಲೆಯಲ್ಲಿ ಮಗುವಿನ ಬೆಳವಣಿಗೆಗೆ ಪೂರಕವಾದ ವಾತಾವರಣ ರೂಪಿಸಿಕೊಡುವುದು ಪೋಷಕರ ಜವಾಬ್ದಾರಿಯಾಗಿದೆ.  ಶಿಕ್ಷಣ ಎಂದರೆ ಕೇವಲ ಪಠ್ಯಪುಸ್ತಕದ ಜ್ಞಾನ ವಲ್ಲ. ಪ್ರತಿಯೊಂದು ಕ್ಷೇತ್ರದಲ್ಲೂ ಕಲಿಕೆಯ ಪ್ರಕ್ರಿಯೆಯಲ್ಲಿ ತೊಡಗುವುದಾಗಿದೆ. ಇದನ್ನು ಸರಿಯಾಗಿ ಅರ್ಥಮಾಡಿಕೊಂಡು ಮುನ್ನಡೆಯಬೇಕೆಂದರು.
    ವೇದಿಕೆ ಗೌರವಾಧ್ಯಕ್ಷೆ ಡಾ. ಆರ್. ಅನುರಾಧ ಪಟೇಲ್ ಮಾತನಾಡಿ, ಪ್ರತಿಯೊಂದಕ್ಕೂ ಜ್ಞಾನ ಬಹಳ ಮುಖ್ಯ.  ಮಹಾತ್ಮಗಾಂಧಿಜೀ ಸೇರಿದಂತೆ ಅನೇಕ ಮಹಾನ್ ಆದರ್ಶ ವ್ಯಕ್ತಿಗಳು ಶಿಕ್ಷಣದ ಮಹತ್ವದ ಬಗ್ಗೆ ತಿಳಿಸಿದ್ದಾರೆ. ಶಿಕ್ಷಣ ಎಂಬುದು ಕೇವಲ ಹೆಚ್ಚಿನ ಅಂಕಗಳನ್ನು ಪಡೆಯುವುದಲ್ಲ ಪರಿಶ್ರಮದ ಮೂಲಕ ಸಮಾಜಕ್ಕೆ ಪೂರಕವಾದ, ಮೌಲ್ಯಯುತ ಜ್ಞಾನವನ್ನು ಪಡೆಯುವುದಾಗಿದೆ. ಯಾವುದೇ ಕ್ಷೇತ್ರದಲ್ಲೂ ಪರಿಶ್ರಮವಿಲ್ಲದೆ ಏನನ್ನು ಸಹ ಸಾಧಿಸಲು ಸಾಧ್ಯವಿಲ್ಲ. ನಮ್ಮ ಸಾಧನೆಯ ಜೊತೆ ಜೊತೆಗೆ ಸೇವೆಯನ್ನು ಸಹ ಒಂದು ಭಾಗವನ್ನಾಗಿಸಿಕೊಳ್ಳಬೇಕೆಂದರು.
    ಪೌರಾಯುಕ್ತ ಮನುಕುಮಾರ್ ಮಾತನಾಡಿ, ಶಿಕ್ಷಣ ಎಂಬುದು ನಮ್ಮ ಜೀವನದ ಒಂದು ಹಂತವಾಗಿದೆ. ನಾವು ಭವಿಷ್ಯದಲ್ಲಿ ಆಯ್ಕೆ ಮಾಡಿಕೊಳ್ಳುವ ಕ್ಷೇತ್ರ ಬಹಳ ಮುಖ್ಯವಾಗಿದೆ. ನಮ್ಮ ಗುರಿ ನಿರಂತರವಾಗಿರಬೇಕು. ಸಂಘಟನೆಗಳಲ್ಲಿ ವಿಶಿಷ್ಟ ಶಕ್ತಿ ಇದ್ದು, ಇದನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಂಡಾಗ ಮಾತ್ರ ಸಂಘಟನೆ ಮತ್ತಷ್ಟು ಬಲಿಷ್ಠಗೊಳ್ಳುತ್ತದೆ ಎಂದರು.
    ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘಟನೆಯಲ್ಲಿ ಮಹಿಳೆಯರು ನಿರಂತರವಾಗಿ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರತಿ ಕಾರ್ಯಕ್ರಮ ಸಹ ಹೊಸ ಉತ್ಸಾಹ ತಂದು ಕೊಡುತ್ತಿವೆ. ವೇದಿಕೆ ಕಾರ್ಯಕ್ರಮಗಳಿಗೆ ಗೌರವಾಧ್ಯಕ್ಷರಾದ ಡಾ. ಅನುರಾಧಪಟೇಲ್‌ರವರು ಹೆಚ್ಚಿನ ಸಹಕಾರ, ಪೋತ್ಸಾಹ ನೀಡುತ್ತಿದ್ದಾರೆ. ಇದೀಗ ಪ್ರತಿಭಾವಂತ ವಿದ್ಯಾರ್ಥಿಗಳನ್ನು ವೇದಿಕೆ ವತಿಯಿಂದ ಸನ್ಮಾನಿಸಿ ಅಭಿನಂದಿಸುವ ಕಾರ್ಯಕ್ರಮ ಆಯೋಜಿಸಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.
    ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೬೨೫ಕ್ಕೆ ೬೨೫ ಅಂಕ ಪಡೆದುಕೊಂಡು ತಾಲೂಕಿಗೆ ಕೀರ್ತಿ ತಂದಿರುವ ನಗರದ ಬಿ.ಎಚ್ ರಸ್ತೆ ಪೂರ್ಣಪ್ರಜ್ಞ ವಿದ್ಯಾಸಂಸ್ಥೆಯ ಪ್ರತೀಕ್ಷಾ ದಯಾನಂದ ಹಾಗು ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ಪ್ರೇರಣಾ .ಬಿ ಅವರಿಗೆ ೫ ಸಾವಿರ ರು. ಪ್ರೋತ್ಸಾಹ ಧನದೊಂದಿಗೆ  ಮತ್ತು  ಸೇಂಟ್ ಚಾರ್ಲ್ಸ್ ವಿದ್ಯಾಸಂಸ್ಥೆಯ ವಿಧಿತಾ ಅವರಿಗೆ ೨ ಸಾವಿರ ರು. ಪ್ರೋತ್ಸಾಹ ಧನದೊಂದಿಗೆ ೩ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಗೌರವಿಸಲಾಯಿತು.
    ವೇದಿಕೆ ಪ್ರಧಾನ ಕಾರ್ಯದರ್ಶಿ ಲತಾ ಪ್ರಭಾಕರ್ ನಿರೂಪಿಸಿದರು. ಉಪಾಧ್ಯಕ್ಷೆ ಪುಷ್ಪ ಕೇಶವಮೂರ್ತಿ, ಕಾರ್ಯದರ್ಶಿ ಶೀಲಾರವಿ ಮತ್ತು ಖಜಾಂಚಿ ಭಾರತಿಕುಮಾರ್ ಸೇರಿದಂತೆ ವೇದಿಕೆ ಸದಸ್ಯರು, ಪ್ರತಿಭಾವಂತ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

Thursday, May 26, 2022

ಶ್ರೀ ಮಾರಿಯಮ್ಮ ದೇವಸ್ಥಾನ ನಿರ್ಮಾಣಕ್ಕೆ ಗುದ್ದಲಿ ಪೂಜೆ


ಭದ್ರಾವತಿ, ಮೇ. 26: ನಗರಸಭೆ ವಾರ್ಡ್ ನಂ.3ರ ಚಾಮೇಗೌಡ ಏರಿಯಾದಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದ ಗೋಪುರ ನಿರ್ಮಾಣಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಗುರುವಾರ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇವಸ್ಥಾನವನ್ನು ಎಲ್ಲರ ಸಹಕಾರದೊಂದಿಗೆ ಸಂಪೂರ್ಣವಾಗಿ ಅಭಿವೃದ್ಧಿಪಡಿಸಲು ಸಿದ್ಧವಿದ್ದು ಅಗತ್ಯವಿರುವ ಅನುದಾನ ನೀಡುವುದಾಗಿ ಭರವಸೆ ನೀಡಿದರು. ಮಾರಿಯಮ್ಮ ದೇವಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು. ವಾರ್ಡ್ ನಗರಸಭಾ ಸದಸ್ಯ ಜಾರ್ಜ್, ಶಿಲ್ಪಿ ಜಯರಾಂ, ಕೃಷ್ಣಮೂರ್ತಿ , ಪುಟ್ಟಸ್ವಾಮಿ,  ಗೋವಿಂದಪ್ಪ , ಶ್ರೀನಿವಾಸ ನಾಯ್ಡು, ಮಹಾದೇವಯ್ಯ, ಮಾಣಿಕ್ಯಂ, ಮಹಾದೇವ, ಉಮೇಶ, ಕೃಷ್ಣ, ತಿಮ್ಮಯ್ಯ, ವೆಂಕಟೇಶ್ ಮತ್ತು ಅರ್ಚಕರಾದ ಷಣ್ಮುಗಂ, ರಾಘು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು .  ದೇವಸ್ಥಾನ ಗೋಪುರವನ್ನು ಸುಮಾರು 5 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ.


ವಿಐಎಸ್‌ಎಲ್ ಕಾರ್ಮಿಕ ಸಂಘದ ಮೊದಲ ಮಹಿಳಾ ಅಧ್ಯಕ್ಷರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಜೆ.ಸಿ ರಾಜಮ್ಮ ನಿಧನ

ಜೆ.ಸಿ ರಾಜಮ್ಮ
    ಭದ್ರಾವತಿ, ಮೇ. ೨೬: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಕಾರ್ಮಿಕ ಸಂಘದ ಮೊದಲ ಮಹಿಳಾ ಅಧ್ಯಕ್ಷರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಜನ್ನಾಪುರ ಕಿತ್ತೂರು ರಾಣಿ ಚನ್ನಮ್ಮ ಬಡಾವಣೆ(ಕೆ.ಸಿ ಬ್ಲಾಕ್) ನಿವಾಸಿ ಜೆ.ಸಿ ರಾಜಮ್ಮ(೮೭) ಗುರುವಾರ ನಿಧನ ಹೊಂದಿದರು.
    ೫ ಜನ ಸಹೋದರಿಯರು ಮತ್ತು ೬ ಜನ ಸಹೋದರರು ಇದ್ದರು. ರಾಜಮ್ಮ ನಗರದ ವಿಐಎಸ್‌ಎಲ್ ಕಾರ್ಖಾನೆ ನಿವೃತ್ತ ಉದ್ಯೋಗಿಯಾಗಿದ್ದು, ಕಾರ್ಮಿಕ ಸಂಘಕ್ಕೆ ಆಯ್ಕೆಯಾಗಿ ಪದಾಧಿಕಾರಿಯಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇವರು ತಮ್ಮ ಅವಧಿಯಲ್ಲಿ ಕಾರ್ಮಿಕರಿಗೆ ಬರಬೇಕಾದ ಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿ ಹೆಚ್ಚಿನ ಶ್ರಮ ವಹಿಸಿದ್ದರು. ಇವರ ಅಂತ್ಯಕ್ರಿಯೆ ಸಂಜೆ ನಗರದ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.
    ಇವರ ನಿಧನಕ್ಕೆ ಕಾರ್ಮಿಕ ಸಂಘದ ಮಾಜಿ ಅಧ್ಯಕ್ಷರಾದ ಎಸ್.ಎನ್ ಬಾಲಕೃಷ್ಣ, ಜೆ.ಎನ್ ಚಂದ್ರಹಾಸ, ಎಸ್. ನರಸಿಂಹಚಾರ್, ಪ್ರಸ್ತುತ ಕಾರ್ಮಿಕ ಸಂಘದ ಅಧ್ಯಕ್ಷರಾಗಿರುವ ಜೆ. ಜಗದೀಶ್ ಹಾಗು ಪದಾಧಿಕಾರಿಗಳು, ನಿವೃತ್ತ ಕಾರ್ಮಿಕರ ಸಂಘದ ಅಧ್ಯಕ್ಷ ರಾಮಲಿಂಗಯ್ಯ, ಪದಾಧಿಕಾರಿಗಳಾದ ಹನುಮಂತರಾವ್, ಶಂಕರ್, ಮಹೇಶಪ್ಪ, ಬಸವರಾಜ್, ಜಯರಾಜ್, ಕೆಂಪಯ್ಯ, ತಾಲೂಕು ಬ್ರಾಹ್ಮಣ ಸಮಾಜದ ಅಧ್ಯಕ್ಷ ಎಂ.ಎಸ್ ಜನಾರ್ಧನ ಅಯ್ಯಂಗಾರ್, ರಮಕಾಂತ್ ಸೇರಿದಂತೆ ಇನ್ನಿತರ ಗಣ್ಯರು ಸಂತಾಪ ಸೂಚಿಸಿದ್ದಾರೆ.

೧೦೦ ಲೀಟರ್ ಮಂಡಕ್ಕೆ ಬೆಲೆ ೪೫೦ ರು. ನಿಗದಿ

ಭದ್ರಾವತಿ ಸೀಗೆಬಾಗಿಯಲ್ಲಿ ಗುರವಾರ ಸಹ್ಯಾದ್ರಿ ಮಂಡಕ್ಕಿ ಉತ್ಪಾದನಾ ಹಾಗು ಮಾರಾಟ ಮತ್ತು ವಿವಿಧ ಕೈಗಾರಿಕೆದಾರರ ಸಹಕಾರ ಸಂಘದ ಸಭೆ ನಡೆಯಿತು.
    ಭದ್ರಾವತಿ, ಮೇ. ೨೬: ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನಲೆಯಲ್ಲಿ ೧೦೦ ಲೀಟರ್ ಮಂಡಕ್ಕಿ ಬೆಲೆ ೪೫೦ ರು. ನಿಗದಿಪಡಿಸಲಾಗಿದ್ದು, ಎಲ್ಲರೂ ಸಹಕರಿಸುವಂತೆ ಮಂಡಕ್ಕಿ ಉತ್ಪಾದನಾ ಮಾಲೀಕರು ಮನವಿ ಮಾಡಿದರು.
    ಗುರುವಾರ ನಗರಸಭೆ ವ್ಯಾಪ್ತಿಯ ಸೀಗೆಬಾಗಿಯಲ್ಲಿ ನಡೆದ ಸಹ್ಯಾದ್ರಿ ಮಂಡಕ್ಕಿ ಉತ್ಪಾದನಾ ಹಾಗು  ಮಾರಾಟ ಮತ್ತು ವಿವಿಧ ಕೈಗಾರಿಕೆದಾರರ ಸಹಕಾರ ಸಂಘದ ಸಭೆಯಲ್ಲಿ ಮಾತನಾಡಿದ ಮಂಡಕ್ಕಿ ಉತ್ಪಾದನಾ ಮಾಲೀಕರು,  ಭತ್ತದ ಬೆಲೆ ಏರಿಕೆ, ವಿದ್ಯುತ್ ದರ ಏರಿಕೆ, ಕಾರ್ಮಿಕರ ಕೂಲಿ ಹೆಚ್ಚಳ ಹಾಗು ಕಚ್ಚಾ ವಸ್ತುಗಳ ಬೆಲೆ ಏರಿಕೆಯಿಂದಾಗಿ ಮಂಡಕ್ಕಿ ಉತ್ಪಾದಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅದರಲ್ಲೂ ಮಂಡಕ್ಕಿ ಉದ್ಯಮ ನಂಬಿಕೊಂಡು ಜೀವನ ಸಾಗಿಸುತ್ತಿರುವ ಕೂಲಿ ಕಾರ್ಮಿಕರು ದಿನದ ಬದುಕು ಸಾಗಿಸುವುದು ಕಷ್ಟಕರವಾಗಿದೆ. ಪ್ರಸ್ತುತ ಮಂಡಕ್ಕಿ ದರ ಅತ್ಯಂತ ಕಡಿಮೆ ಇದ್ದು, ಈ ದರದಲ್ಲಿ ಮಂಡಕ್ಕಿ ಉದ್ಯಮ ನಡೆಸುವುದು ಅಸಾಧ್ಯವಾಗಿದೆ. ಮಂಡಕ್ಕಿ ಹೆಚ್ಚಾಗಿ ಬಡವರ್ಗದವರು ಬಳಸುವ ಆಹಾರ ಪದಾರ್ಥವಾಗಿದ್ದು,  ಇಂತಹ ಆಹಾರ ಪದಾರ್ಥದ ಬೆಲೆ ಏರಿಕೆ ಮಾಡುವುದು ಇಂದು ಅನಿವಾರ್ಯವಾಗಿದೆ. ಈಗಾಗಲೇ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಸಹಕಾರ ಸಂಘದವರು ಸಭೆ ನಡೆಸಿ ಮಂಡಕ್ಕಿ ಬೆಲೆ ಏರಿಕೆ ಮಾಡಲು ತೀರ್ಮಾಣ ಕೈಗೊಂಡಿದ್ದಾರೆ.  ೧೦೦ ಲೀಟರ್ ಮಂಡಕ್ಕಿ ದರವನ್ನು ೪೫೦ ರು.ಗಳಿಗೆ ನಿಗದಿ ಪಡಿಸಲಾಗುತ್ತಿದೆ. ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರು.
    ಸಹ್ಯಾದ್ರಿ ಮಂಡಕ್ಕಿ ಉತ್ಪಾದನಾ ಹಾಗು  ಮಾರಾಟ ಮತ್ತು ವಿವಿಧ ಕೈಗಾರಿಕೆದಾರರ ಸಹಕಾರ ಸಂಘದ ಅಧ್ಯಕ್ಷ ಖಾದರ್ ಖಾನ್ ಸಭೆ ಅಧ್ಯಕ್ಷತೆ ವಹಿಸಿದ್ದರು.
    ಪ್ರಮುಖರಾದ ಚಿಕ್ಕಮಗಳೂರಿನ ಪಾಪಣ್ಣ, ತರೀಕೆರೆಯ ಚಾಂದ್ ಪಾಷ, ಬೇಲೂರಿನ ತಜಮ್ಮುಲ್ ಪಾಷ, ಶಿವಮೊಗ್ಗದ ಚಂದ್ರಣ್ಣ, ಹಾಸನದ ಕೃಷ್ಣೇಗೌಡ ಸೇರಿದಂತೆ  
    ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳ ಮಂಡಕ್ಕಿ ಉತ್ಪಾದಕರು ಹಾಗೂ ಮಾರಾಟಗಾರರು ಪಾಲ್ಗೊಂಡಿದ್ದರು.

ಮಂಡಕ್ಕಿ ಉತ್ಪಾದನೆದಾರರು, ಮಾರಾಟಗಾರರ ಸಭೆ

 ಭದ್ರಾವತಿ, ಮೇ. 26:  ಸೀಗೆಬಾಗಿ ಸಹ್ಯಾದ್ರಿ ಮಂಡಕ್ಕಿ ಉತ್ಪಾದನಾ ಹಾಗು  ಮಾರಾಟ ಮತ್ತು ವಿವಿಧ ಕೈಗಾರಿಕೆದಾರರ ಸಹಕಾರ ಸಂಘದ ಸಭೆ ಗುರುವಾರ ನಡೆಯಿತು. ಸಭೆಯಲ್ಲಿ  ಭತ್ತದ ಬೆಲೆ ಏರಿಕೆ, ವಿದ್ಯುತ್ ದರ ಏರಿಕೆ, ಕಾರ್ಮಿಕರ ಕೂಲಿ ಹೆಚ್ಚಳ ಹಾಗು ಕಚ್ಚಾ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ಇತ್ಯಾದಿ ವಿಷಯಗಳ ಕುರಿತು ಚರ್ಚಿಸಲಾಯಿತು. ಶಿವಮೊಗ್ಗ ಚಿಕ್ಕಮಗಳೂರು ಮತ್ತು ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳ ಮಂಡಕ್ಕಿ ಉತ್ಪಾದಕರು ಹಾಗೂ ಮಾರಾಟಗಾರರು ಪಾಲ್ಗೊಂಡಿದ್ದರು.