Wednesday, June 1, 2022

ಸರ್ವ ಧರ್ಮ, ಜನಾಂಗವನ್ನು ಪ್ರೀತಿಸಿ ಅವರೊಂದಿಗೆ ಮುನ್ನಡೆಯುವವನು ನಿಜವಾದ ವೀರಶೈವ

ಶ್ರೀ ಶೈಲ ಪೀಠದ ಡಾ. ಚನ್ನಸಿದ್ದರಾಮ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ

ಭದ್ರಾವತಿ ಸಿದ್ದಾರೂಢನಗರದ ಶ್ರೀ ಶಂಕರಮಠದ ಶ್ರೀ ಭಾರತೀ ತೀರ್ಥ ಸಮುದಾಯ ಭವನದಲ್ಲಿ ಬುಧವಾರ ಶ್ರೀ ಶ್ರೀಶೈಲ ಜಗದ್ಗುರುಗಳವರ ಜನ್ಮ ಸುವರ್ಣ ಮಹೋತ್ಸವ ಮತ್ತು ದ್ವಾದಶ ಪೀಠರೋಹಣದ ಅಂಗವಾಗಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ, ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿ ಮತ್ತು ಡಾ. ಶಿವಕುಮಾರ ಸ್ವಾಮೀಜಿಯವರ ಜನ್ಮದಿನಶತೋತ್ಸವ ಆಚರಣೆ, ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮ ಸಮಾರಂಭ ಮತ್ತು ನಾಗರತ್ನ ಸಿದ್ದಲಿಂಗಯ್ಯನವರ ೬೦ನೇ ವರ್ಷದ ಷಷ್ಠಿ ಪೂರ್ತಿ ಕಾರ್ಯಕ್ರಮ ನಡೆಯಿತು.

    ಭದ್ರಾವತಿ, ಜೂ. ೧: ಸರ್ವ ಧರ್ಮ, ಜನಾಂಗವನ್ನು ಪ್ರೀತಿಸಿ ಅವರೊಂದಿಗೆ ಮುನ್ನಡೆಯುವವನು ನಿಜವಾದ ವೀರಶೈವನಾಗಿದ್ದು, ಈ ದಾರಿಯಲ್ಲಿ ಸಾಗುವ ಮೂಲಕ ನಮ್ಮ ಬದುಕನ್ನು ಸಾರ್ಥಕಗೊಳಿಸಿಕೊಳ್ಳಬೇಕು ಎಂದು ಶ್ರೀ ಶೈಲ ಪೀಠದ ಡಾ. ಚನ್ನಸಿದ್ದರಾಮ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
    ಶ್ರೀಗಳು ಬುಧವಾರ ಸಿದ್ದಾರೂಢನಗರದ ಶ್ರೀ ಶಂಕರಮಠದ ಶ್ರೀ ಭಾರತೀ ತೀರ್ಥ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಶ್ರೀಶೈಲ ಜಗದ್ಗುರುಗಳವರ ಜನ್ಮ ಸುವರ್ಣ ಮಹೋತ್ಸವ ಮತ್ತು ದ್ವಾದಶ ಪೀಠರೋಹಣದ ಅಂಗವಾಗಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ, ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿ ಮತ್ತು ಡಾ. ಶಿವಕುಮಾರ ಸ್ವಾಮೀಜಿಯವರ ಜನ್ಮದಿನಶತೋತ್ಸವ ಆಚರಣೆ, ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮ ಸಮಾರಂಭ ಮತ್ತು ನಾಗರತ್ನ ಸಿದ್ದಲಿಂಗಯ್ಯನವರ ೬೦ನೇ ವರ್ಷದ ಷಷ್ಠಿ ಪೂರ್ತಿ ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಮಾತನಾಡಿದರು.
    ಸಮಾಜದಿಂದ ಎಲ್ಲವನ್ನು ಪಡೆಯುವ ನಾವು ಸಮಾಜಕ್ಕೆ ನಮ್ಮ ಕೊಡಗೆ ಏನು ಎಂಬುದರ ಬಗ್ಗೆ ಚಿಂತಿಸಬೇಕಾಗಿದೆ. ಪ್ರತಿಯೊಬ್ಬರಲ್ಲೂ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕೆಂಬ ಮನೋಭಾವ ಬೆಳೆಯಬೇಕು. ಇಂತಹ ಮನೋಭಾವ ಹೊಂದಿರುವ ವ್ಯಕ್ತಿಗಳಲ್ಲಿ ಸಿದ್ದಲಿಂಗಯ್ಯನವರು ಸಹ ಒಬ್ಬರಾಗಿದ್ದಾರೆ. ಅವರ ಬದುಕು ಇತರರಿಗೆ ಮಾರ್ಗದರ್ಶನವಾಗಿದೆ ಎಂದರು.
    ಧರ್ಮಗ್ರಂಥಗಳ ಪ್ರಕಾರ ಒಬ್ಬ ಮನುಷ್ಯನಿಗೆ ೧೨೦ ವರ್ಷಗಳ ಆಯಸ್ಸು ಇದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ೬೦ ವರ್ಷ ಬದುಕುವುದೇ ಹೆಚ್ಚು. ಮನಸ್ಸು ಮತ್ತು ದೇಹ ಎರಡರ ಆರೋಗ್ಯ ಕಾಪಾಡಿಕೊಂಡು ಬಂದಲ್ಲಿ ೧೨೦ ವರ್ಷ ಬದುಕಬಹುದಾಗಿದೆ. ಇದಕ್ಕೆ ಉದಾಹರಣೆ ತುಮಕೂರು ಸಿದ್ದಗಂಗ ಮಠದ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರಾಗಿದ್ದಾರೆ. ಅವರ ಬದುಕು ನಮ್ಮೆಲ್ಲರಿಗೂ ಆದರ್ಶವಾಗಿದೆ. ಒಂದೊಂದು ವರ್ಷವೂ ಒಂದೊಂದು ಸಂವತ್ಸರವಾಗಿದೆ. ೬೦ ಸಂವತ್ಸರಗಳನ್ನು ದಾಟಿ ಅರ್ಧ ಆಯಸ್ಸು ಕಳೆದಿರುವವರ ಬದುಕನ್ನು ಅವಲೋಕನ ಮಾಡಿಕೊಳ್ಳುವ ಜೊತೆಗೆ ಮುಂದಿನ ಉಳಿದ ಅರ್ಧ ಆಯಸ್ಸು ಪೂರೈಸಲು ಅಭಿನಂದಿಸುವ ಉದ್ದೇಶದಿಂದ ಷಷ್ಠಿ ಪೂರ್ತಿಯಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಹೆಚ್ಚಾಗಿ ನಡೆಯಬೇಕೆಂದರು.
    ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಉಪನ್ಯಾಸ ನೀಡಿ, ಶರಣರ ಬದುಕು ಒಂದು ರೀತಿ ಆದರ್ಶಪ್ರಾಯವಾಗಿದೆ. ಪ್ರತಿಯೊಂದು ವಿಷಯದಲ್ಲೂ ಶರಣರು ಹೊಂದಿದ್ದ ವಿಚಾರಧಾರೆಗಳು ಸಮಾಜಕ್ಕೆ ಪೂರಕವಾಗಿವೆ. ಮಾನವ ಜನ್ಮಕ್ಕೆ ಜಯವಾಗಲಿ ಎಂಬ ಸಂದೇಶ ಸಾರಿದವರು, ಕಾಯಕದ ಮಹತ್ವ, ದಾಸೋಹದ ಮಹತ್ವ ಹಾಗು ಶಿಕ್ಷಣದ ಮಹತ್ವ ಸಾರಿದವರು ಶರಣರು ಎಂಬುದನ್ನು ಯಾರು ಮರೆಯುವಂತಿಲ್ಲ. ಶರಣರು ಒಂದಲ್ಲ ಒಂದು ರೀತಿಯಲ್ಲಿ ಮಾದರಿಯಾಗಿದ್ದಾರೆ. ಇಂತಹ ಆದರ್ಶತನಗಳನ್ನು ಸಿದ್ದಲಿಂಗಯ್ಯ ಹಾಗು ಕುಟುಂಬ ವರ್ಗದವರು ರೂಢಿಸಿಕೊಂಡು ಬಂದಿದ್ದಾರೆ. ಸಮಾಜದಲ್ಲಿ ಎಲ್ಲರೊಂದಿಗೂ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ ಪ್ರಶಂಸೆ ವ್ಯಕ್ತಪಡಿಸಿದರು.
    ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸಿದ್ದಲಿಂಗಯ್ಯನವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಅವರು ಸಮಾಜದ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದಾರೆ. ತಮ್ಮ ೬೦ ವರ್ಷದ ಸಂಭ್ರಮಾಚರಣೆಯನ್ನು ವೈಯಕ್ತಿಕಗೊಳಿಸದೆ ಹಲವು ಸಾಮಾಜಿಕ ಚಿಂತನೆಗಳೊಂದಿಗೆ ಸಮಾಜ ಮುಖಿಯಾಗಿ ಆಚರಿಸಿಕೊಳ್ಳುತ್ತಿರುವುದು ವಿಶೇಷವಾಗಿದೆ ಎಂದರು.
     ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ರಾಜ್ಯಾಧ್ಯಕ್ಷ ಮನೋಹರ್ ಅಬ್ಬಿಗೆರೆ ಕಾರ್ಯಕ್ರಮ ಉದ್ಘಾಟಿಸಿದರು.
    ರಟ್ಟೆಹಳ್ಳಿ ಕಬ್ಬಿನಕಂತಿ ಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಚಿಕ್ಕಮಗಳೂರು ಶಂಕರದೇವರ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ,  ಹಾಗೂ ಶಿಲಾ ಮಠದ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ವೇದಿಕೆಯಲ್ಲಿದ್ದರು.
    ನಗರಸಭಾಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಹಾಗು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ಅ.ಭಾ.ವೀ.ಮ ತಾಲೂಕು ಅಧ್ಯಕ್ಷೆ ನಂದಿನಿ ಮಲ್ಲಿಕಾರ್ಜುನ, ಶಿವಮೊಗ್ಗ ತಾಲೂಕು ಅಧ್ಯಕ್ಷೆ ರೇಣುಕಾ ನಾಗರಾಜ್, ಕುರುಬ ಸಮಾಜದ ಅಧ್ಯಕ್ಷ ಬಿ.ಎಂ ಸಂತೋಷ್, ವಿ.ಹಿ.ಪ ಕಾರ್ಯಾಧ್ಯಕ್ಷ ಶಿವಮೂರ್ತಿ, ಶಿವಮೊಗ್ಗ ಜಗದ್ಗುರು ಪಂಚಾಚಾರ್ಯ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಟಿ.ವಿ ಈಶ್ವರಯ್ಯ, ಅ.ಭಾ.ವೀ.ಮ ಮಹಿಳಾ ಘಟಕದ ಅಧ್ಯಕ್ಷೆ ರೂಪ ನಾಗರಾಜ್, ಯುವ ಘಟಕದ ಅಧ್ಯಕ್ಷ ಹೆಚ್. ಮಂಜುನಾಥ್, ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಟಿ ರವಿ, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಮಾಜಿ ನಗರಸಭಾ ಸದಸ್ಯ ಜಿ. ಸುರೇಶಯ್ಯ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎಸ್. ಪೂರ್ಣಿಮಾ ಸ್ವಾಗತಿಸಿದರು. ಎಸ್. ವಾಗೀಶ್ ಕಾರ್ಯಕ್ರಮ ನಿರೂಪಿಸಿದರು.

Tuesday, May 31, 2022

ವಿಜೃಂಭಣೆಯಿಂದ ಜರುಗಿದ ಶ್ರೀ ಮಾತಂಗಮ್ಮ, ಶ್ರೀ ಪ್ಲೇಗ್ ಮಾರಿಯಮ್ಮ ದೇವಿಯರ ರಾಜಬೀದಿ ಉತ್ಸವ ಮೆರವಣಿಗೆ

ಭದ್ರಾವತಿ ಜನ್ನಾಪುರ ಜಯಶ್ರೀ ಕಲ್ಯಾಣ ಮಂಟಪ ಸಮೀಪದಲ್ಲಿರುವ ಶ್ರೀ ಮಾತಂಗಮ್ಮ ದೇವಿ ಮತ್ತು ಶ್ರೀ ಪ್ಲೇಗ್ ಮಾರಿಯಮ್ಮ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ರಾತ್ರಿ ಅಮ್ಮನವರ ರಾಜಬೀದಿ ಉತ್ಸವ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.
    ಭದ್ರಾವತಿ, ಮೇ. ೩೧: ಜನ್ನಾಪುರ ಜಯಶ್ರೀ ಕಲ್ಯಾಣ ಮಂಟಪ ಸಮೀಪದಲ್ಲಿರುವ ಶ್ರೀ ಮಾತಂಗಮ್ಮ ದೇವಿ ಮತ್ತು ಶ್ರೀ ಪ್ಲೇಗ್ ಮಾರಿಯಮ್ಮ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ರಾತ್ರಿ ಅಮ್ಮನವರ ರಾಜಬೀದಿ ಉತ್ಸವ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.
    ಜಾನಪದ ಕಲಾತಂಡಗಳೊಂದಿಗೆ ಕೆ.ಸಿ ಬ್ಲಾಕ್ ಮುಖ್ಯ ರಸ್ತೆಗಳಲ್ಲಿ ಮತ್ತು ಎನ್‌ಟಿಬಿ ರಸ್ತೆ, ಲಿಂಗಾಯಿತರ ಬೀದಿ, ಕುರುಬರ ಬೀದಿ, ರಾಜಪ್ಪ ಲೇಔಟ್ ಸೇರಿದಂತೆ ವಿವಿಧೆಡೆ ಉತ್ಸವ ಮೆರವಣಿಗೆ ನಡೆಯಿತು. ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಂಡಿರುವ ಮೂಲ ವಿಗ್ರಹಗಳಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಜೂ.೧ರಂದು ಮಧ್ಯಾಹ್ನ ೧೨ ಗಂಟೆಗೆ ತಂಬಿಟ್ಟಿನ ಆರತಿ ತರುವುದು ಹಾಗು ಪಾನಕ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಲಿವೆ.
    ರಾಜಬೀದಿ ಉತ್ಸವದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್, ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ಯುವ ಮುಖಂಡರಾದ ಎಂ.ಎ ಅಜಿತ್, ಬಿ.ಎಸ್ ಗಣೇಶ್, ಗುಣಶೇಖರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಮಾದಿಗ ಸಮಾಜದ ರಾಜ್ಯಾಧ್ಯಕ್ಷ ಎಸ್. ಮಂಜುನಾಥ್ ಸೇರಿದಂತೆ ಸ್ಥಳೀಯ ಮುಖಂಡರು, ಶ್ರೀ ಮಾರಿಕಾಂಬ ಸೇವಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಗಾಯತ್ರಿ ಕ್ರೆಡಿಟ್ ಕೋ ಆಪರೇಟ್ ಸೊಸೈಟಿ ನೂತನ ಅಧ್ಯಕ್ಷರಾಗಿ ಕೆ. ಮಂಜುನಾಥ್ ಅವಿರೋಧ ಆಯ್ಕೆ

ಭದ್ರಾವತಿ ಜನ್ನಾಪುರದ ಗಾಯತ್ರಿ ಕ್ರೆಡಿಟ್ ಕೋ ಆಪರೇಟ್ ಸೊಸೈಟಿ ನೂತನ ಅಧ್ಯಕ್ಷರಾಗಿ ಕೆ. ಮಂಜುನಾಥ್ ಮಂಗಳವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
    ಭದ್ರಾವತಿ, ಮೇ. ೩೧: ಜನ್ನಾಪುರದ ಗಾಯತ್ರಿ ಕ್ರೆಡಿಟ್ ಕೋ ಆಪರೇಟ್ ಸೊಸೈಟಿ ನೂತನ ಅಧ್ಯಕ್ಷರಾಗಿ ಕೆ. ಮಂಜುನಾಥ್ ಮಂಗಳವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
    ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಜೆ.ಎಂ ಆನಂದ್‌ರಾವ್ ರವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಕೆ. ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ಕೆಲವು ತಿಂಗಳ ಹಿಂದೆ ಶ್ರೀಧರ್ ಎಂಬುವರು ಸೊಸೈಟಿ ಕಾರ್ಯ ನಿರ್ವಹಿಸಲು ಜನ್ನಾಪುರ ಜಯಶ್ರೀ ಕಲ್ಯಾಣ ಮಂಟಪ ಸಮೀಪದಲ್ಲಿ ಕಟ್ಟಡ ದಾನ ಮಾಡಿದ್ದು, ನೂತನ ಕಟ್ಟಡದಲ್ಲಿ ಸೊಸೈಟಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ.
    ಎಲ್ಲಾ ನಿರ್ದೇಶಕರು ಒಮ್ಮತದಿಂದ ಕೆ. ಮಂಜುನಾಥ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡವಲ್ಲಿ ಯಶಸ್ವಿಯಾಗಿದ್ದಾರೆ. ಉಪಾಧ್ಯಕ್ಷ ಕೇಶವಮೂರ್ತಿ, ಸಿ.ಕೆ ರಾಮಣ್ಣ,  ಶ್ವೇತಾ, ತಾರಾಮಣಿ, ನೀಲಕಂಠ ಜೊಯ್ಸ್, ಸುಬ್ರಮಣ್ಯ, ರಮಾಕಾಂತ್, ಕಾರ್ಯದರ್ಶಿ ಶಶಿಧರ್, ವಾಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳಿಂದ ದೂರವಿರಿ : ಡಾ. ಎಂ.ವಿ ಅಶೋಕ್


ಭದ್ರಾವತಿ ನ್ಯೂಟೌನ್ ವಿಐಎಸ್‌ಎಸ್‌ಜೆ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ತಾಲೂಕು ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ತಂಬಾಕು ರಹಿತ ದಿನಾಚರಣೆ ಮತ್ತು ವಿಶ್ವ ಋತು ಚಕ್ರ ನೈರ್ಮಲ್ಯ ದಿನಾಚರಣೆ ಕಾರ್ಯಕ್ರಮವನ್ನು ತಾಲೂಕು ಕಾನೂನು ಸೇವಾ ಸಮಿತಿ ಕಾರ್ಯದರ್ಶಿ, ನ್ಯಾಯಧೀಶ ಆರ್. ಯತೀಶ್ ಉದ್ಘಾಟಿಸಿದರು.
    ಭದ್ರಾವತಿ, ಮೇ. ೩೧: ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳಿಂದ ದೂರವಿರುವ ಮೂಲಕ ಎಚ್ಚರವಹಿಸಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್ ಹೇಳಿದರು.
    ಅವರು ಮಂಗಳವಾರ ನಗರದ ನ್ಯೂಟೌನ್ ವಿಐಎಸ್‌ಎಸ್‌ಜೆ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ತಾಲೂಕು ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ತಂಬಾಕು ರಹಿತ ದಿನಾಚರಣೆ ಮತ್ತು ವಿಶ್ವ ಋತು ಚಕ್ರ ನೈರ್ಮಲ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಪ್ರಸ್ತುತ ತಂಬಾಕು ಪದಾರ್ಥಗಳ ವ್ಯಸನ್ಯಕ್ಕೆ ಬಲಿಯಾಗುತ್ತಿರುವವರ ಪ್ರಮಾಣ ಏರಿಕೆಯಾಗುತ್ತಿದ್ದು, ಈ ಕುರಿತು ಸಮಗ್ರ ಮಾಹಿತಿ ನೀಡುವ ಮೂಲಕ  ಹೆಚ್ಚಿನ ಜಾಗೃತಿ ವಹಿಸುವುದು ಅಗತ್ಯವಾಗಿದೆ ಎಂದರು.
    ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಡಿಜಿಓ ಡಾ. ವರ್ಷ ಋತು ಚಕ್ರ ನೈರ್ಮಲ್ಯ ಕುರಿತು ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದರು. 
    ತಾಲೂಕು ಕಾನೂನು ಸೇವಾ ಸಮಿತಿ ಕಾರ್ಯದರ್ಶಿ, ನ್ಯಾಯಧೀಶ ಆರ್. ಯತೀಶ್ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಶಿಕ್ಷಣ ಆರೋಗ್ಯಾಧಿಕಾರಿ ಕೆ. ಸುಶೀಲಬಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು.
    ಸಹಾಯಕ ಸರ್ಕಾರಿ ಅಭಿಯೋಜಕ ಎಂ.ಜಿ ತ್ಯಾಗರಾಜ್, ತಾಲೂಕು ವಕೀಲರ ಸಂಘದ ಉಪಾಧ್ಯಕ್ಷ ಡಿ.ಎಂ ವಿಶ್ವನಾಥ್, ಪ್ರಾಂಶುಪಾಲ ಟಿ.ಎಲ್ ಮಹಾಲಿಂಗಪ್ಪ ಅಧ್ಯಕ್ಷತೆ ವಹಿಸಿದ್ದರು.
    ಡಾ. ತಮ್ಮಣ್ಣ ಸ್ವಾಗತಿಸಿದರು. ಹಿರಿಯ ಆರೋಗ್ಯ ಸಹಾಯಕ ಆನಂದಮೂರ್ತಿ, ವಸಂತ ಹಾಗು ಪಾಲಿಟೆಕ್ನಿಕ್ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.



ಭದ್ರಾವತಿ ನ್ಯೂಟೌನ್ ವಿಐಎಸ್‌ಎಸ್‌ಜೆ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ತಾಲೂಕು ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ತಂಬಾಕು ರಹಿತ ದಿನಾಚರಣೆ ಮತ್ತು ವಿಶ್ವ ಋತು ಚಕ್ರ ನೈರ್ಮಲ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್ ಪಾಲ್ಗೊಂಡು ಮಾತನಾಡಿದರು.

Monday, May 30, 2022

ಸಾವರ್ಕರ್ ಹೆಸರನ್ನು ಬಿಟ್ಟರೇ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿ ಅಪೂರ್ಣ : ಪ್ರವೀಣ್


ಭದ್ರಾವತಿಯಲ್ಲಿ ಸೋಮವಾರ ಸಂಜೆ ತರೀಕೆರೆ ರಸ್ತೆಯ ಮಹಾತ್ಮಗಾಂಧಿ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವೀರ ಸಾವರ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರವೀಣ್ ಪಾಲ್ಗೊಂಡು ಮಾತನಾಡಿದರು.
    ಭದ್ರಾವತಿ, ಮೇ. ೩೦: ದೇಶದ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ವೀರ ಸಾವರ್ಕರ್ ಹೆಸರನ್ನು ಬಿಟ್ಟರೇ ಆ ಪಟ್ಟಿ ಪೂರ್ಣಗೊಳ್ಳುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರವೀಣ್ ಹೇಳಿದರು.
    ಅವರು ಸೋಮವಾರ ಸಂಜೆ ನಗರದ ತರೀಕೆರೆ ರಸ್ತೆಯ ಮಹಾತ್ಮಗಾಂಧಿ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವೀರ ಸಾವರ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಸಾವರ್ಕರ್ ಅವರ ಪಾತ್ರ ಬಹಳ ಮುಖ್ಯವಾಗಿದ್ದು, ಪ್ಲೇಗ್ ಮಾಹಾಮಾರಿ ಕಾಣಿಸಿಕೊಂಡ ಸಂದರ್ಭದಲ್ಲಿ ಬ್ರಿಟಿಷರ ವರ್ತನೆ ವಿರುದ್ದ ಸಿಡಿದೆದ್ದವರನ್ನು ದೇಶ ದ್ರೋಹದ ಆರೋಪದ ಮೇಲೆ ಗಲ್ಲಿಗೇರಿಸಿದ ಘಟನೆ ಸಾವರ್ಕರ್ ಅವರು ಬ್ರಿಟಿಷರ ವಿರುದ್ಧ ಹೋರಾಟ ನಡೆಸಲು ಕಾರಣವಾಯಿತು. ಕ್ರಾಂತಿಕಾರಕ ಹೋರಾಟದ ಮೂಲಕ ಯುವಕರನ್ನು ಸಂಘಟಿಸುವಲ್ಲಿ ಯಶಸ್ವಿಯಾದರು. ದೇಶದ ಹೊರಗು ಸಂಘಟನೆಯನ್ನು ರೂಪಿಸಿ ಆ ಮೂಲಕ ದೇಶದಿಂದ ಬ್ರಿಟಿಷರನ್ನು ತೊಲಗಿಸಲು ನಡೆಸಿದ ಹೋರಾಟ ಮಹತ್ವದ್ದಾಗಿದೆ.  ಸಾವರ್ಕರ್ ಅವರ ದೇಶ ಭಕ್ತಿ, ಹೋರಾಟದ ಗುಣಗಳು ಇಂದಿನ ಪೀಳಿಗೆಯವರಿಗೆ ಅವಶ್ಯಕವಾಗಿವೆ ಎಂದರು.
    ಇದಕ್ಕೂ ಸಾವರ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸೂಚಿಸಲಾಯಿತು. ಹಿಂದೂ ಜಾಗರಣ ವೇದಿಕೆ ಹಾಗು ಹಿಂದೂಪರ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಗಮನಕ್ಕೆ ಬಾರದೆ ವಾರ್ಡ್‌ಗಳಲ್ಲಿ ಕಾಮಗಾರಿ : ಸದಸ್ಯರ ಆಕ್ರೋಶ

ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯಸಭೆ

ಮುಖ್ಯಾಂಶಗಳು :
- ಪಿಡಬ್ಲ್ಯೂಡಿ ಅಧಿಕಾರಿಗಳ ವರ್ತನೆಗೆ ಜೆಡಿಎಸ್ ಸದಸ್ಯರ ಆಕ್ರೋಶ
- ಎಲ್ಲಾ ಕೆರೆಗಳ ಬೌಂಡರಿ ನಿಗದಿಪಡಿಸಿ, ತೆರವು ಕಾರ್ಯಾಚರಣೆ ಕೈಗೊಳ್ಳಿ
- ನಾಮನಿರ್ದೇಶನ ಸದಸ್ಯರು ಕೇವಲ ಸಲಹೆಗಳನ್ನು ನೀಡಿ.
- ಮನೆ, ನೀರಿನ ಕಂದಾಯ ಕಡಿಮೆಗೊಳಿಸಿ.
-ಟೆಂಡರ್ ಸಲ್ಲಿಕೆಯಲ್ಲಿನ ಲೋಪದೋಷ ಸರಿಪಡಿಸಿಕೊಳ್ಳಿ.
- ದೇವಸ್ಥಾನಗಳಿಗೆ ಜಾಗ, ಮೀನು ಮಾರುಕಟ್ಟೆ ನಿರ್ಮಾಣ ಸೇರಿದಂತೆ ೩೩ ಪ್ರಸ್ತಾವನೆಗಳ ಕುರಿತು ಚರ್ಚೆ
    ಭದ್ರಾವತಿ, ಮೇ. ೩೦: ಸದಸ್ಯರ ಗಮನಕ್ಕೆ ಬಾರದೆ ವಾರ್ಡ್‌ಗಳಲ್ಲಿ ಕಾಮಗಾರಿಗಳು ನಡೆಯುತ್ತಿದ್ದು, ಅಲ್ಲದೆ ಗುದ್ದಲಿ ಪೂಜೆ ಕಾರ್ಯಕ್ರಮಗಳಿಗೂ ನಮ್ಮನ್ನು ಆಹ್ವಾನಿಸುತ್ತಿಲ್ಲ ಎಂದು ಜೆಡಿಎಸ್ ನಗರಸಭಾ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
    ಸೋಮವಾರ ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯಸಭೆಯಲ್ಲಿ ಮಾತನಾಡಿದ ಜೆಡಿಎಸ್ ನಗರಸಭಾ ಸದಸ್ಯರಾದ ಬಸವರಾಜ ಬಿ. ಆನೇಕೊಪ್ಪ ಹಾಗು ಸದಸ್ಯೆ ಪಲ್ಲವಿ, ವಾರ್ಡ್‌ಗಳಲ್ಲಿ ಸದಸ್ಯರ ಗಮನಕ್ಕೆ ಬಾರದೆ ಕಾಮಗಾರಿಗಳು ಆರಂಭಗೊಳ್ಳುತ್ತಿವೆ. ವಾರ್ಡ್‌ಗಳಲ್ಲಿ ಜವಾಬ್ದಾರಿ ಹೊಂದಿರುವ ನಮಗೆ ೨ ದಿನಗಳ ನಂತರ ಮಾಹಿತಿ ತಿಳಿಯುತ್ತಿದೆ. ನಮಗಿಂತ ಮೊದಲೇ ಬೇರೆಯವರಿಗೆ ಮಾಹಿತಿ ತಿಳಿದಿರುತ್ತದೆ. ಕನಿಷ್ಠ ಪಕ್ಷ ನಮ್ಮನ್ನು ಗುದ್ದಲಿ ಪೂಜೆ ಕಾರ್ಯಕ್ರಮಕ್ಕೂ ಆಹ್ವಾನಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಇದಕ್ಕೆ ಉತ್ತರಿಸಿದ ಉಪಾಧ್ಯಕ್ಷ ಚನ್ನಪ್ಪ ನಗರಸಭೆ ವತಿಯಿಂದ ನಡೆಯುವ ಕಾಮಗಾರಿಗಳ ಬಗ್ಗೆ ಆಯಾ ವಾರ್ಡ್‌ಗಳ ಸದಸ್ಯರ ಗಮನಕ್ಕೆ ತರಲಾಗುತ್ತಿದೆ. ಬೇರೆ ಇಲಾಖೆಗಳಿಂದ ನಡೆಯುವ ಕಾಮಗಾರಿಗಳ ಬಗ್ಗೆ ನಮಗೆ ಮಾಹಿತಿ ಇಲ್ಲ. ಆ ವಿಚಾರಗಳ ಬಗ್ಗೆ ಆಯಾ ಇಲಾಖೆ ಅಧಿಕಾರಿಗಳನ್ನು ಪ್ರಶ್ನಿಸಿ ಎಂದರು.
    ಈ ಹಿನ್ನಲೆಯಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಜೆಡಿಎಸ್ ಸದಸ್ಯರು ತರಾಟೆಗೆ ತೆಗೆದುಕೊಂಡರು. ಸೂಕ್ತ ಉತ್ತರ ನೀಡುವಂತೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾದರೂ ಈ ನಡುವೆ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಕೆಲ ಸಮಯ ಮಾತಿನ ಚಕಮಕಿ ನಡೆಸಿದರು.
    ಸದಸ್ಯ ಬಿ.ಕೆ ಮೋಹನ್ ಮಾತನಾಡಿ, ನಗರಸಭಾ ಸದಸ್ಯರು, ಶಾಸಕರು ಮತ್ತು ಲೋಕಸಭಾ ಸದಸ್ಯರು ತಮ್ಮ ಅಧಿಕೃತ ಲೆಟರ್‌ಹೆಡ್‌ಗಳಲ್ಲಿ ಸಲ್ಲಿಸುವ ಪ್ರಸ್ತಾವನೆಗಳನ್ನು ಮಾತ್ರ ಪರಿಶೀಲಿಸಿ ಸಾಮಾನ್ಯಸಭೆಗೆ ತರಬೇಕು. ಬೇರೆ ಯಾವುದೇ ಪ್ರಸ್ತಾವನೆಗಳಿಗೆ ಅವಕಾಶ ನೀಡಬಾರದೆಂದು ಒತ್ತಾಯಿಸಿದರು.
    ಸದಸ್ಯ ಕೋಟೇಶ್ವರರಾವ್ ಮಾತನಾಡಿ, ವಾರ್ಡ್ ವ್ಯಾಪ್ತಿಯಲ್ಲಿರುವ ಕೆರೆಗಳ ಬೌಂಡರಿ ನಿಗದಿ ಮಾಡಿ ಒತ್ತುವರಿ ತೆರವು ಕಾರ್ಯಾಚರಣೆನಡೆಸಬೇಕೆಂದು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು ನಗರಸಭೆ ವ್ಯಾಪ್ತಿಯಲ್ಲಿರುವ ಎಲ್ಲಾ ಕೆರೆಗಳು ನಗರಸಭೆಗೆ ಸೇರಿಲ್ಲ. ಆದರೆ ಬೌಂಡರಿ ಮಾತ್ರ ಗುರುತಿಸಲಾಗಿದೆ. ಸಂಪೂರ್ಣವಾಗಿ ನಗರಸಭೆ ಸೇರಿರುವ ಕೆರೆಗಳ ಒತ್ತುವರಿ ಕಾರ್ಯಾಚರಣೆಯನ್ನು ಕೈಗೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು. ಈ ನಡುವೆ ಬಹುತೇಕ ಸದಸ್ಯರು ಮಾತನಾಡಿ, ಮೊದಲು ತಾಲೂಕು ಆಡಳಿತದ ಸಹಕಾರದೊಂದಿಗೆ ನಗರಸಭೆ ವ್ಯಾಪ್ತಿಯಲ್ಲಿರುವ ಎಲ್ಲಾ ಕೆರೆಗಳ ಬೌಂಡರಿ ನಿಗದಿಪಡಿಸುವ ಕಾರ್ಯ ಕೈಗೊಳ್ಳಿ ಆನಂತರ ಸಂಬಂಧಿಸಿದ ಇಲಾಖೆಗಳಿಗೆ ಮಾಹಿತಿ ನೀಡಿ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಳ್ಳಿ. ಈಗಾಗಲೇ ಹಲವು ಕಡೆ ಕೆರೆ ಜಾಗ ಒತ್ತುವರಿಯಾಗಿ ಅಕ್ರಮವಾಗಿ ಕೋಟ್ಯಾಂತರ ರು. ವಹಿವಾಟು ನಡೆಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮೊದಲು ತೆರವು ಕಾರ್ಯಾಚರಣೆ ಕೈಗೊಳ್ಳಿ ನಂತರ ಜಾಗವನ್ನು ನಗರಸಭೆಗೆ ಹಸ್ತಾಂತರಿಸಿಕೊಳ್ಳಿ. ಇದರಿಂದ ಮುಂದಿನ ದಿನಗಳಲ್ಲಿ ನಗರಸಭೆಗೆ ಆದಾಯ ಬರುವ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬಹುದಾಗಿದೆ ಎಂದು ಸಲಹೆ ನೀಡಿದರು.  
    ಈ ನಡುವೆ ನಾಮನಿರ್ದೇಶಿತ ಸದಸ್ಯ ಕರೀಗೌಡ ಕೆಲವು ಪ್ರಸ್ತಾವನೆಗಳ ಬಗ್ಗೆ ಪ್ರಶ್ನಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದರು. ಇದರಿಂದ ಅಸಮಾಧಾನಗೊಂಡ ಸದಸ್ಯ ಬಿ.ಕೆ ಮೋಹನ್, ನಾಮನಿರ್ದೇಶನ ಸದಸ್ಯರು ತಮ್ಮ ಅಧಿಕಾರ ವ್ಯಾಪ್ತಿಯನ್ನು ಅರ್ಥ ಮಾಡಿಕೊಳ್ಳಿ. ನಿಮಗೆ ಕೇವಲ ಸಲಹೆ ನೀಡುವ ಅಧಿಕಾರವಿದ್ದು, ಆಗ್ರಹಿಸುವ ಅಧಿಕಾರವಿಲ್ಲ ಎಂದರು.
    ಹಳೇನಗರದ ಶ್ರೀ ಹಳದಮ್ಮ ದೇವಸ್ಥಾನಕ್ಕೆ ನ್ಯಾಯಾಲಯದ ಮುಂಭಾಗದಲ್ಲಿರುವ ನಗರಸಭೆಗೆ ಸೇರಿದ ದೊಡ್ಡಿ ಜಾಗವನ್ನು ರಿಯಾಯಿತಿ ದರದಲ್ಲಿ ನೀಡುವ ಸಂಬಂಧ ಸಲ್ಲಿಕೆಯಾಗಿದ್ದ ಪ್ರಸ್ತಾವನೆ ಕುರಿತು ಚರ್ಚೆ ನಡೆಸಿದ ಸದಸ್ಯರು ಜಾಗವನ್ನು ಯಾರಿಗೂ ನೀಡುವುದಿಲ್ಲ. ನಗರಸಭೆಯೇ ಜಾಗವನ್ನು ಉಳಿಸಿಕೊಳ್ಳಲಿದೆ ಎಂಬ ನಿರ್ಣಯ ಕೈಗೊಂಡರು.
    ಮೀನು ಮಾರುಕಟ್ಟೆ ನಿರ್ಮಾಣಕ್ಕೆ ಸೂಕ್ತ ಜಾಗ ಕಲ್ಪಿಸಿಕೊಡುವ ಸಂಬಂಧ ಚರ್ಚೆ ನಡೆದು ಕವಲಗುಂದಿ ಭಾಗದಲ್ಲಿ ಈಗಾಗಲೇ ಸ್ಮಶಾನ ಭೂಮಿ ಇರುವ ಹಿನ್ನಲೆಯಲ್ಲಿ ಸ್ಮಶಾನಕ್ಕಾಗಿ ಮಂಜೂರಾತಿಯಾಗಿರುವ ೩ ಎಕರೆ ಹೆಚ್ಚುವರಿ ಜಾಗವನ್ನು ಬಿಟ್ಟುಕೊಡುವ ನಿರ್ಣಯ ಕೈಗೊಳ್ಳಲಾಯಿತು.
    ಮಳಿಗೆಗಳ ಬಾಡಿಗೆಯನ್ನು ಪಾವತಿಸದೆ, ನ್ಯಾಯಾಲಯದಲ್ಲಿ ದಾವೆ ಹೂಡಿರುವ ಸಂತೆ ಮೈದಾನದಲ್ಲಿರುವ ವಾಣಿಜ್ಯ ಮಳಿಗೆಗಳ ಬಾಡಿಗೆದಾರರೊಂದಿಗೆ ಸಂಧಾನ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸಲಹೆ ನೀಡಲಾಯಿತು.
    ಉಳಿದಂತೆ ವಾರ್ಡ್ ನಂ.೨೨ರ ಉಜ್ಜನಿಪುರದ ಎನ್.ಎಚ್ ೨೦೬ರ ಚತುಷ್ಪಥ ರಸ್ತೆಯ ಪಕ್ಕದಲ್ಲಿರುವ ಸರ್ವೇ ನಂ.೧೩ರ ೬.೧೮ ಎಕರೆ ವಿಸ್ತೀರ್ಣದ ಬಿಳಕಟ್ಟೆ ಕೆರೆ ಮತ್ತು ಸರ್ವೇ ನಂ.೧೬ರ ೪.೦೧ ಎಕರೆ ವಿಸ್ತೀರ್ಣದ ಬಳಸಕಟ್ಟೆ ಕೆರೆಗಳನ್ನು ಅಭಿವೃದ್ಧಿಪಡಿಸಿ ದೋಣಿ ವಿಹಾರ ನಿರ್ಮಿಸಿ  ಪ್ರವಾಸಿ ತಾಣವಾಗಿ ಪರಿವರ್ತಿಸುವುದು ಸೇರಿದಂತೆ ಸಲ್ಲಿಕೆಯಾಗಿದ್ದ ಸುಮಾರು ೩೩ ಪ್ರಸ್ತಾವನೆಗಳ ಬಗ್ಗೆ ಚಿರ್ಚಿಸಲಾಯಿತು.
    ಮನೆ ಹಾಗು ನೀರಿನ ಕಂದಾಯ ವಸೂಲಾತಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ ಸದಸ್ಯರು, ಈಗಾಗಲೇ ಶಿವಮೊಗ್ಗದಲ್ಲಿ ಮನೆ ಹಾಗು ನೀರಿನ ಕಂದಾಯ ಕಡಿಮೆ ಮಾಡಲಾಗಿದೆ. ಅದರಂತೆ ಇಲ್ಲೂ ಸಹ ಕಡಿಮೆ ಮಾಡಬೇಕು. ಒಂದೊಂದು ಕಡೆ ಒಂದೊಂದು ರೀತಿಯಾಗಿ ಕಾನೂನು ಮಾಡುವುದು ಬೇಡ. ಈ ಸಂಬಂಧ ಮಾಹಿತಿಯನ್ನು ಸರ್ಕಾರದ ಗಮನಕ್ಕೆ ತಂದು ಕಂದಾಯ ಕಡಿಮೆ ಮಾಡುವಂತೆ ಆಗ್ರಹಿಸಿದರು.
    ಟೆಂಡರ್ ಸಲ್ಲಿಕೆಯಲ್ಲಿನ ಲೋಪದೋಷಗಳ ಕುರಿತು ತೀವ್ರ ಚರ್ಚೆ ನಡೆಯಿತು. ಈ ನಡುವೆ ಸದಸ್ಯ ಟಿಪ್ಪು ಸುಲ್ತಾನ್ ಹಾಗು ಉಪಾಧ್ಯಕ್ಷ ಚನ್ನಪ್ಪ ನಡುವಿನ ವಾಕ್ಸಮರ ಕೆಲ ಸಮಯ ಬಿಗುವಿನ ವಾತಾವರಣಕ್ಕೆ ಸಾಕ್ಷಿಯಾಯಿತು. ಕೆಲವು ಸದಸ್ಯರು ಟೆಂಡರ್ ಸಲ್ಲಿಕೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಿಕೊಳ್ಳುವಂತೆ ಸಲಹೆ ನೀಡಿದರು.
    ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ನೂತನ ಪೌರಾಯುಕ್ತ ಮನುಕುಮಾರ್ ಉಪಸ್ಥಿತರಿದ್ದರು. ಬಹುತೇಕ ನಗರಸಭಾ ಸದಸ್ಯರು, ವಿವಿಧ ವಿಭಾಗಗಳ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.


ಭದ್ರಾವತಿ ನಗರಸಭೆ ಸಾಮಾನ್ಯ ಸಭೆ ಸೋಮವಾರ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.

Sunday, May 29, 2022

ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ

ಭದ್ರಾವತಿಯಲ್ಲಿ ಶ್ರೀ ವಿನಾಯಕ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಶ್ರೀ ಹರಿಹರೇಶ್ವರ ಪ್ರೌಢಶಾಲೆ ಹಳೇ ವಿದ್ಯಾರ್ಥಿಗಳ ಸಂಘದ ನೇತೃತ್ವದಲ್ಲಿ ಭಾನುವಾರ ಶ್ರೀರಾಮನಗರದ ಶ್ರಮಜೀವಿ ಮರಿಸಿದ್ದಯ್ಯ ಕಲ್ಯಾಣ ಮಂಟಪದಲ್ಲಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ನೋಟ್ ಬುಕ್‌ಗಳನ್ನು ಉಚಿತವಾಗಿ ವಿತರಿಸಲಾಯಿತು.
    ಭದ್ರಾವತಿ, ಮೇ. ೨೯: ಶ್ರೀ ವಿನಾಯಕ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಶ್ರೀ ಹರಿಹರೇಶ್ವರ ಪ್ರೌಢಶಾಲೆ ಹಳೇ ವಿದ್ಯಾರ್ಥಿಗಳ ಸಂಘದ ನೇತೃತ್ವದಲ್ಲಿ ಭಾನುವಾರ ಶ್ರೀರಾಮನಗರದ ಶ್ರಮಜೀವಿ ಮರಿಸಿದ್ದಯ್ಯ ಕಲ್ಯಾಣ ಮಂಟಪದಲ್ಲಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ನೋಟ್ ಬುಕ್‌ಗಳನ್ನು ಉಚಿತವಾಗಿ ವಿತರಿಸಲಾಯಿತು.
    ಹಲವಾರು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಟ್ರಾವೆಲ್ಸ್ ಮಾಲೀಕ ಮತ್ತು ಸಿವಿಲ್ ಗುತ್ತಿಗೆದಾರ ಎ. ಧರ್ಮೇಂದ್ರ ಪ್ರತಿವರ್ಷ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ನೋಟ್‌ಬುಕ್‌ಗಳನ್ನು ವಿತರಿಸುತ್ತಿದ್ದು, ಈ ಬಾರಿ ಒಟ್ಟು ೧೫೦೦ ನೋಟ್ ಬುಕ್‌ಗಳನ್ನು ವಿತರಿಸಿದರು.
    ಬಾಬಳ್ಳಿ, ಕಾಗೇಕೋಡಮಗ್ಗಿ, ಜಯನಗರ, ವೀರಾಪುರ, ರಾಮನಗರ, ಕುಮರಿನಾರಾಯಣಪುರ ಮತ್ತು ತಳ್ಳಿಕಟ್ಟೆ ಗ್ರಾಮಗಳ ಸರ್ಕಾರಿ ಶಾಲೆಗಳ ಮಕ್ಕಳಿಗೆ ನೋಟ್ ಬುಕ್‌ಗಳನ್ನು ವಿತರಿಸಲಾಯಿತು.
    ಯು. ಹರೀಶ್‌ರಾವ್, ಸಿ. ಹರಿಬಾಬು, ಸಿ.ಎಸ್ ನಾಗರಾಜ್, ಮಮತ, ರೂಪವತಿ, ಮಂಗಳ ಗೌರಮ್ಮ, ಶಶಿಕುಮಾರ, ಪರಮೇಶ್ವರಪ್ಪ, ಸತ್ಯನಾರಾಯಣ, ಸುರೇಶ್, ಗಂಗಣ್ಣ, ಕಾವೇರಮ್ಮ ಮತ್ತು ಗಣೇಶ್ ಕಲ್ಲೇರಿ, ಆಶಾರಾಣಿ ಧರ್ಮೇಂದ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಶಿವಲಿಂಗೇಗೌಡ ಕಾರ್ಯಕ್ರಮ ನಿರೂಪಿಸಿದರು.