Saturday, June 4, 2022

ನಾಲ್ವಡಿ ಕೃಷ್ಣರಾಜ ಒಡೆಯರ್ ಜನಪರ ಕಾಳಜಿ ಇಂದಿನವರಿಗೆ ಅವಶ್ಯಕ



ಭದ್ರಾವತಿ : ರಾಜರ್ಷಿ  ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಕೊಡುಗೆ ಅಪಾರವಾಗಿದ್ದು,   ಅವರು ಹೊಂದಿದ್ದ ಜನಪರ ಕಾಳಜಿ ಇಂದು ಆಡಳಿತ ನಡೆಸುವವರಿಗೆ ಮಾರ್ಗದರ್ಶನವಾಗಿದೆ. ಇವರ ಜನ್ಮದಿನಾಚರಣೆ ನಾಡಿನಾದ್ಯಂತ ಶಾಲಾ-ಕಾಲೇಜುಗಳಲ್ಲಿ ಆಚರಿಸುವಂತಾಗಬೇಕು ಎಂದು ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವೆಂಕಟೇಶ್ ಹೇಳಿದರು.
   ಅವರು ಶನಿವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದೆ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾಡಿದರು.
      ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಚಿಕ್ಕವಯಸ್ಸಿನಲ್ಲಿಯೇ ರಾಜನಾಗುವ ಮೂಲಕ ಎಲ್ಲರಿಗೂ ಮಾದರಿಯಾಗುವಂತಹ ಉತ್ತಮ ಆಡಳಿತ ನೀಡುವಲ್ಲಿ ಯಶಸ್ವಿಯಾಗಿದ್ದರು.  ಅವರ ದೂರದೃಷ್ಟಿಯ ಫಲವಾಗಿ ನಗರದಲ್ಲಿ  ವಿಐಎಸ್ಎಲ್ ಮತ್ತು ಎಂಪಿಎಂ  ಕಾರ್ಖಾನೆಗಳ ಆರಂಭಕ್ಕೆ ಕಾರಣರಾಗುವ ಮೂಲಕ ಲಕ್ಷಾಂತರ ಜನರಿಗೆ ಅನ್ನದಾತರಾಗಿದ್ದರು. ಅಲ್ಲದೆ ನಾಡಿನಾದ್ಯಂತ ಹಲವಾರು ಜನಪರ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಇಂದಿಗೂ ಜನರ ಮನಸ್ಸಿನಲ್ಲಿ ಉಳಿದುಕೊಂಡಿದ್ದಾರೆ. ಇಂತಹ ಮಹಾನ್ ವ್ಯಕ್ತಿಯ ಜನ್ಮದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು.  ಅವರ ಜನ್ಮದಿನಾಚರಣೆ ಮುಂಬರುವ ದಿನ ಶಾಲಾ-ಕಾಲೇಜುಗಳಲ್ಲಿ ನಡೆಯುವ ಮೂಲಕ ಅವರ ಚಿಂತನೆಗಳು ಎಲ್ಲರಿಗೂ ತಲುಪುವಂತಾಗಬೇಕು ಎಂದರು.
     ಪ್ರಗತಿಪರ ಸಂಘಟನೆಗಳ ಪ್ರಮುಖರಾದ ಸುರೇಶ್,  ಬಾಲಕೃಷ್ಣ, ಕೆ ಮಂಜುನಾಥ್, ವಿಶ್ವೇಶ್ವರ ಗಾಯಕ್ವಾಡ್ ಸೇರಿದಂತೆ ಇನ್ನಿತರರು ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಹಲವಾರು ಸಾಮಾಜಿಕ ಬದ್ಧತೆಗಳ ಮೂಲಕ ಮಾದರಿಯಾಗಿದ್ದಾರೆ. ಸರ್ವರನ್ನು ಸಮಾನತೆಯಿಂದ ಕಾಣುವ ಮೂಲಕ ನಾಡಿಗೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಪ್ರಸ್ತುತ ಅವರು ನಗರದಲ್ಲಿ ಆರಂಭಿಸಿದ ಎರಡು ಕಾರ್ಖಾನೆಗಳು ಅವನತಿಯ ದಾರಿ ಹಿಡಿದಿದ್ದು, ಇಂತಹ ಸಂದರ್ಭದಲ್ಲಿ ಅವರಿಗೆ ಗೌರವಿಸುವಂತಹ ಕಾರ್ಯಗಳು ನಡೆಯಬೇಕಾಗಿದೆ. ನಗರದಲ್ಲಿ ಅವರ ಪುತ್ಥಳಿ ಅನಾವರಣಗೊಳ್ಳಬೇಕಾಗಿದೆ. ಅಲ್ಲದೆ ಅವರ ಹೆಸರನ್ನು ಅಜರಾಮರವಾಗಿಸುವ ಕಾರ್ಯಗಳನ್ನು ಕೈಗೊಳ್ಳಬೇಕಾಗಿದೆ.
     ಶಿರಸ್ತೇದಾರ್ ರಾಧಾಕೃಷ್ಣ ಭಟ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಪ್ರಮುಖರಾದ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ ಎನ್ ರಾಜು, ಟಿ.ವಿ ಗೋವಿಂದಸ್ವಾಮಿ, ಚನ್ನಪ್ಪ, ಎಸ್.ಎನ್  ಶಿವಪ್ಪ, ಸಾವಂತ್, ಗಿರಿ ನಾಯ್ಡು, ಎನ್. ಮಂಜುನಾಥ್, ಉಪ ತಹಶೀಲ್ದಾರ್ ಗಳಾದ ಮಂಜನಾಯ್ಕ, ಅರಸು, ನಾರಾಯಣಗೌಡ, ಆಹಾರ ನಿರೀಕ್ಷಕ ಎ.ಟಿ ಬಸವರಾಜು ಹಾಗು ತಾಲೂಕು ಕಚೇರಿ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Friday, June 3, 2022

ಮಹಿಳಾ ಸಮಾಜದಿಂದ ಮಂಜಮ್ಮ ಜೋಗತಿಯವರಿಗೆ ಸನ್ಮಾನ

ಪದ್ಮಶ್ರೀ ಹಾಗು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ, ಕರ್ನಾಟಕ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಅವರನ್ನು ಭದ್ರಾವತಿ ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಜೂ. ೩: ನಗರಕ್ಕೆ ಆಗಮಿಸಿದ ಪದ್ಮಶ್ರೀ ಹಾಗು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ, ಕರ್ನಾಟಕ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಅವರನ್ನು ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
    ಮಂಜಮ್ಮ ಜೋಗತಿಯವರ ಸಾಧನೆಗೆ ಪ್ರಶಂಸೆ ವ್ಯಕ್ತಪಡಿಸಿದ ಮಹಿಳಾ ಸಮಾಜದ ಪ್ರಮುಖರು ಸನ್ಮಾನಿಸಿ ಗೌರವಿಸಿದರು. ಸಮಾಜದ ಪ್ರಧಾನ ಕಾರ್ಯದರ್ಶಿ ಶೋಭಾ ಗಂಗರಾಜ್, ಖಜಾಂಚಿ ಶಾಂತಿ ಶೇಟ್ ಸೇರಿದಂತೆ ಸೇರಿದಂತೆ ಹಿರಿಯ ಸದಸ್ಯರು ಇನ್ನಿತರರು ಉಪಸ್ಥಿತರಿದ್ದರು.

ಭಾರ ಎತ್ತುವ ಸ್ಪರ್ಧೆಯಲ್ಲಿ ಡಾ. ಎಸ್. ವರದರಾಜರಿಗೆ ಚಿನ್ನದ ಪದಕ

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಜರುಗಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾರ ಎತ್ತುವ ಸ್ಪರ್ಧೆಯಲ್ಲಿ ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಎಸ್. ವರದರಾಜ ಅವರು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
    ಭದ್ರಾವತಿ, ಜೂ. ೩;  ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಜರುಗಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾರ ಎತ್ತುವ ಸ್ಪರ್ಧೆಯಲ್ಲಿ ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಎಸ್. ವರದರಾಜ ಅವರು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
    ೮೧ ಕೆ.ಜಿ ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ತಮ್ಮದಾಗಿಸಿಕೊಂಡು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಇವರ ಸಾಧನೆಗೆ ಜಿಲ್ಲಾ ಹಾಗೂ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾಲೇಜಿನ ಪ್ರಾಂಶುಪಾಲರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ಕ್ರೀಡಾಭಿಮಾನಿಗಳು ಅಭಿನಂಧಿಸಿದ್ದಾರೆ.

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಬಸ್ ಸೌಲಭ್ಯ ಕಲ್ಪಿಸಿ : ಮನವಿ

ಭದ್ರಾವತಿ ಬಿ.ಎಚ್ ರಸ್ತೆ, ಕಡದಕಟ್ಟೆ ರೈಲ್ವೆ ಗೇಟ್ ಸಮೀಪದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ)ಯ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯ ಕಲ್ಪಿಸಿಕೊಡುವಂತೆ ಆಗ್ರಹಿಸಿ ಜನತಾದಳ (ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ತಹಸೀಲ್ದಾರ್‌ಗೆ ಶುಕ್ರವಾರ ಮನವಿ ಸಲ್ಲಿಸಿದ್ದಾರೆ.
    ಭದ್ರಾವತಿ, ಮೇ. ೩: ನಗರದ ಬಿ.ಎಚ್ ರಸ್ತೆ, ಕಡದಕಟ್ಟೆ ರೈಲ್ವೆ ಗೇಟ್ ಸಮೀಪದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ)ಯ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯ ಕಲ್ಪಿಸಿಕೊಡುವಂತೆ ಆಗ್ರಹಿಸಿ ಜನತಾದಳ (ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ತಹಸೀಲ್ದಾರ್‌ಗೆ ಶುಕ್ರವಾರ ಮನವಿ ಸಲ್ಲಿಸಿದ್ದಾರೆ.
    ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಕಡದಕಟ್ಟೆ ರೈಲ್ವೆ ಗೇಟ್ ಬಳಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನಲೆಯಲ್ಲಿ ಕಳೆದ ೩-೪ ತಿಂಗಳಿನಿಂದ ಈ ಭಾಗದಲ್ಲಿ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಬಸ್‌ಗಳು ಬೇರೆ ಮಾರ್ಗದಲ್ಲಿ ಸಂಚರಿಸುತ್ತಿದ್ದು, ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಬಸ್ ಸೌಲಭ್ಯದಿಂದ ವಂಚಿತರಾಗಿದ್ದಾರೆ.
    ಕಳೆದ ವರ್ಷ ಬಸ್ ಪಾಸ್ ಸೌಲಭ್ಯ ಪಡೆದುಕೊಂಡಿರುವ ವಿದ್ಯಾರ್ಥಿಗಳು ಪ್ರಸ್ತುತ ಸುಮಾರು ೩ ಕಿಲೋ ಮೀಟರ್‌ಗೂ ಹೆಚ್ಚಿನ ದೂರ ಕಾಲ್ನಡಿಗೆಯಲ್ಲಿ ಸಾಗಬೇಕಾಗಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಎಸ್‌ಆರ್‌ಟಿಸಿ ಇಲಾಖೆ ಅಧಿಕಾರಿಗಳು ಮುಖ್ಯಸ್ಥರ ಅಧ್ಯಕ್ಷತೆಯಲ್ಲಿ ಸಭೆ ಕರೆದು ತಕ್ಷಣ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಲಾಗಿದೆ.
    ಮನವಿಯನ್ನು ಶಿರಸ್ತೇದಾರ್ ರಾಧಕೃಷ್ಣ ಭಟ್ ಅವರಿಗೆ ಸಲ್ಲಿಸಲಾಯಿತು. ಕರುನಾಡು ಹಿತರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ವೈ. ಶಶಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಗುರು-ಹಿರಿಯರೊಂದಿಗೆ ಗೌರವ, ಪ್ರೀತಿಯಿಂದ ವರ್ತಿಸಿ : ಮಂಜಮ್ಮ ಜೋಗತಿ

ಭದ್ರಾವತಿ ತಾಲೂಕು ಕುರುಬರ ಸಂಘದ ಆಶ್ರಿತದ ಹಳೇನಗರದ ಕನಕ ವಿದ್ಯಾಸಂಸ್ಥೆಗೆ ಶುಕ್ರವಾರ ಭೇಟಿ ನೀಡಿದ ಪದ್ಮಶ್ರೀ ಹಾಗು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ, ಕರ್ನಾಟಕ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಜೂ ೩: ಮಕ್ಕಳು ಗುರು-ಹಿರಿಯರೊಂದಿಗೆ ಗೌರವ, ಪ್ರೀತಿಯಿಂದ ವರ್ತಿಸಬೇಕು ಎಂದು ಪದ್ಮಶ್ರೀ ಹಾಗು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ, ಕರ್ನಾಟಕ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಹೇಳಿದರು.
    ಅವರು ಶುಕ್ರವಾರ ತಾಲೂಕು ಕುರುಬರ ಸಂಘದ ಆಶ್ರಿತದ ಹಳೇನಗರದ ಕನಕ ವಿದ್ಯಾಸಂಸ್ಥೆಗೆ ಭೇಟಿ ಮಕ್ಕಳೊಂದಿಗೆ ಸಂವಾದ ನಡೆಸಿದರು. ಸಮಾಜದಲ್ಲಿ ಎಲ್ಲರನ್ನು ಸಮಾನವಾಗಿ ಕಾಣಬೇಕು. ಎಲ್ಲಾದರೂ ಮಂಗಳ ಮುಖಿಯರು (ತೃತೀಯ ಲಿಂಗಿಗಳು) ಕಂಡಾಗ ಅವರೊಂದಿಗೆ ಪ್ರೀತಿ ಹಂಚಿಕೊಳ್ಳುವ ಜೊತೆಗೆ ಅವರನ್ನು ಎಲ್ಲರಂತೆ ಗೌರವದಿಂದ ಕಾಣಬೇಕು. ವಿದ್ಯಾಭ್ಯಾಸಕ್ಕೆ ಹೆಚ್ಚಿನ ಗಮನ ನೀಡುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಕರೆ ನೀಡಿದರು.
    ಜೋಗತಿ ಹಾಡು ಹಾಗು ಪರಶುರಾಮನ ಜನನದ ಅಭಿನಯದ ಸಂಭಾಷಣೆಯೊಂದಿಗೆ ಮಂಜಮ್ಮ ಜೋಗತಿ ಮಕ್ಕಳ ಮನ ಸೂರೆಗೊಳಿಸಿದರು.
    ಇದಕ್ಕೂ ಮೊದಲು ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಮಂಜಮ್ಮ ಜೋಗತಿಯವರಿಗೆ ಪಾದ ಪೂಜೆ ಮಾಡುವ ಮೂಲಕ ಸ್ವಾಗತ ಕೋರಿದರು.
    ವಿದ್ಯಾ ಸಂಸ್ಥೆ ವತಿಯಿಂದ ಮಂಜಮ್ಮ ಜೋಗತಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಲೆ ಮುಖ್ಯೋಪಾಧ್ಯಾಯರಾದ ಸಿ.ಡಿ ಮಂಜುನಾಥ್, ಜಿ.ಕೆ ಹರೀಶ್ ಸೇರಿದಂತೆ ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಶಿಕ್ಷಕ ಪ್ರಶಾಂತ್ ಸಣ್ಣಕ್ಕಿ ಸ್ವಾಗತಿಸಿ, ವಂದಿಸಿದರು.

Thursday, June 2, 2022

ಅನನ್ಯ ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರಾಭ್ಯಾಸದ ಮೂಲಕ ಅಕ್ಷರ ಜ್ಞಾನಕ್ಕೆ ಮುನ್ನುಡಿ

ಭದ್ರಾವತಿ ಅಪ್ಪರ್ ಹುತ್ತಾದಲ್ಲಿರುವ ಅನನ್ಯ ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರಾಭ್ಯಾಸ ಹಾಗು ಶಾರದ ಪೂಜೆ ಆಚರಣೆಯೊಂದಿಗೆ ಪ್ರಸಕ್ತ  ಸಾಲಿನ ಪೂರ್ವ ಪ್ರಾಥಮಿಕ ಶಾಲಾ  ಪ್ರಾರಂಭೋತ್ಸವಕ್ಕೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು.
    ಭದ್ರಾವತಿ, ಜೂ. ೨: ಹಿಂದೂ ಸಂಸ್ಕೃತಿಯ ಕೆಲವು ಪರಂಪರೆಗಳನ್ನು ಇಂದಿಗೂ ಮೈಗೂಡಿಸಿಕೊಂಡು ಬಂದಿರುವ ಕೆಲವು ಶಿಕ್ಷಣ ಸಂಸ್ಥೆಗಳು ಮಕ್ಕಳಲ್ಲಿ ಅಕ್ಷರ ಜ್ಞಾನಕ್ಕೆ ಮುನ್ನುಡಿ ಬರೆಯಲು ಅಕ್ಷರಾಭ್ಯಾಸ ಸೇರಿದಂತೆ ಇನ್ನಿತರ ಆಚರಣೆಗಳನ್ನು ಕೈಗೊಳ್ಳುತ್ತಿವೆ.
    ನಗರದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಅಪ್ಪರ್ ಹುತ್ತಾದಲ್ಲಿರುವ ಅನನ್ಯ ಶಿಕ್ಷಣ ಸಂಸ್ಥೆ ಪ್ರಸಕ್ತ  ಸಾಲಿನ ಪೂರ್ವ ಪ್ರಾಥಮಿಕ ಶಾಲಾ  ಪ್ರಾರಂಭೋತ್ಸವಕ್ಕೆ ಅದ್ದೂರಿಯಾಗಿ ಚಾಲನೆ ನೀಡುವ ಮೂಲಕ ಗಮನ ಸೆಳೆದಿದೆ.
    ಗುಣಮಟ್ಟದ ಶಿಕ್ಷಣದ ಜೊತೆಗೆ ಮಕ್ಕಳನ್ನು ಆಕರ್ಷಿಸುವುದು ಇಂದು ಸವಾಲಿನ ಕೆಲಸವಾಗಿದ್ದು, ಇಂತಹ ಸವಾಲಿನ ನಡುವೆ ವಿದ್ಯಾಸಂಸ್ಥೆ ಅಕ್ಷರಾಭ್ಯಾಸ ಹಾಗೂ ಶಾರದಾ ಪೂಜೆ ಆಚರಣೆಗಳನ್ನು ಯಶಸ್ವಿಯಾಗಿ ನೆರವೇರಿಸಿದೆ. ಹುತ್ತಾ ಕಾಲೋನಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ  ರಾಘವೇಂದ್ರ ಉಪಾಧ್ಯಾಯರವರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.
    ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ಮುಖ್ಯೋಪಾಧ್ಯಾಯರು, ಶಿಕ್ಷಕರು, ಆಡಳಿತಾಧಿಕಾರಿಗಳು ಹಾಗೂ ಪೋಷಕರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ವಿದ್ಯುತ್ ಕಂಬಕ್ಕೆ ದ್ವಿಚಕ್ರ ವಾಹನ ಡಿಕ್ಕಿ : ಇಬ್ಬರು ವಿದ್ಯಾರ್ಥಿಗಳು ಸಾವು


ಭದ್ರಾವತಿ ತಾಲೂಕಿನ ಹುಣಸೇಕಟ್ಟೆ ಜಂಕ್ಷನ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಕುವೆಂಪು ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿಗಳಾದ ಉತ್ತಮ ಮತ್ತು ಮನೋಜ್.
    ಭದ್ರಾವತಿ, ಜೂ. ೨: ತಾಲೂಕಿನ ಹುಣಸೇಕಟ್ಟೆ ಜಂಕ್ಷನ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
    ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಜಂಕ್ಷನ್ ವೃತ್ತದ ಬಳಿ ದ್ವಿಚಕ್ರ ವಾಹನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಇದರಿಂದ ತೀವ್ರ ಗಾಯಗೊಂಡು ಉತ್ತಮ್ ಹಾಗೂ ಮನೋಜ್ ಇಬ್ಬರು ಮೃತಪಟ್ಟಿದ್ದಾರೆ.
ಎನ್.ಆರ್ ಪುರ (ನರಸಿಂಹರಾಜಪುರ)ದ ಜೈಲ್ ಬಿಲ್ಡಿಂಗ್ ನಿವಾಸಿ ಉತ್ತಮ್ ಕುವೆಂಪು ವಿಶ್ವ ವಿದ್ಯಾನಿಲಯದಲ್ಲಿ ದ್ವಿತೀಯ ವಷದ ಎಂಸಿಎ ಹಾಗೂ ಮಂಡಗದ್ದೆ ಸರ್ಕಲ್ ನಿವಾಸಿ ಮನೋಜ್ ಎಂ.ಕಾಂ ವ್ಯಾಸಂಗ ಮಾಡುತ್ತಿದ್ದು, ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.