Thursday, June 9, 2022

ಪ್ರೊ. ಬಿ. ಕೃಷ್ಣಪ್ಪ ಶೋಷಿತರು, ದಲಿತರ ಆಶಾಕಿರಣ : ಸತ್ಯ ಭದ್ರಾವತಿ

ಭದ್ರಾವತಿ ರಂಗಪ್ಪ ವೃತ್ತ ಸಮೀಪದ ಜೈಭೀಮಾ ನಗರದಲ್ಲಿರುವ ಡಿಎಸ್‌ಎಸ್ ಕಛೇರಿಯಲ್ಲಿ ಗುರುವಾರ  ಪ್ರೊ. ಬಿ. ಕೃಷ್ಣಪ್ಪನವರ ೮೪ನೇ ಜನ್ಮದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಜೂ. ೯: ಪ್ರೊ. ಬಿ. ಕೃಷ್ಣಪ್ಪನವರು ಹಲವಾರು ಚಳುವಳಿಗಳನ್ನು ನಡೆಸಿ ಶೋಷಿತರು, ದಲಿತರಿಗೆ ನ್ಯಾಯ ಒದಗಿಸಿಕೊಡುವ ಮೂಲಕ ಆಶಾಕಿರಣವಾಗಿದ್ದರು. ಇವರ ಹೋರಾಟ ಇಂದಿಗೂ ನಮ್ಮೆಲ್ಲರೂ ಸ್ಪೂರ್ತಿದಾಯಕವಾಗಿದೆ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಹೇಳಿದರು.
    ಅವರು ಗುರುವಾರ ನಗರದ ರಂಗಪ್ಪ ವೃತ್ತ ಸಮೀಪದ ಜೈಭೀಮಾ ನಗರದಲ್ಲಿರುವ ಡಿಎಸ್‌ಎಸ್ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರೊ. ಬಿ. ಕೃಷ್ಣಪ್ಪನವರ ೮೪ನೇ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಚಿತ್ರದುರ್ಗ ಜಿಲ್ಲೆಯ ಹರಿಹರದಲ್ಲಿ ಶೋಷಿತ ಕುಟುಂಬದಲ್ಲಿ ೯ ಜೂನ್ ೧೯೩೮ರಲ್ಲಿ ಜನಿಸಿದ ಪ್ರೊ. ಬಿ. ಕೃಷ್ಣಪ್ಪನವರು ಶ್ರಮದ ಬದುಕಿನೊಂದಿಗೆ ಶಿಕ್ಷಣ ಪಡೆದವರು. ಸಮಾಜದಲ್ಲಿನ ಜಾತಿ ವ್ಯವಸ್ಥೆ ವಿರುದ್ಧ ಸಿಡಿದೆದ್ದು ಶೋಷಿತರು, ದಲಿತರ ಮೇಲಿನ ದೌರ್ಜನ್ಯಗಳ ವಿರುದ್ಧ ಚಳುವಳಿಗಳನ್ನು ರೂಪಿಸಿದರು. ಅವರು ನಗರದಲ್ಲಿ ೧೯೭೪ರಲ್ಲಿ ಚಳುವಳಿ ಕಟ್ಟುವ ಮೂಲಕ ಅದನ್ನು ೧೯೭೫ರಲ್ಲಿ ನೋಂದಾಯಿಸಿದರು. ಮೊದಲ ಬಾರಿಗೆ ತಾಲೂಕಿನ ಅರಕೆರೆ ಗ್ರಾಮದಲ್ಲಿ ಪತ್ರೆ ಸಂಗಪ್ಪ ಎಂಬುವರ ಕಗ್ಗೊಲೆ ಖಂಡಿಸಿ ನಡೆಸಿದ ಹೋರಾಟ ಯಶಸ್ವಿಯಾಗುವ ಜೊತೆಗೆ ನ್ಯಾಯ ಲಭಿಸುವಂತಾಯಿತು. ಈ ಹೋರಾಟ ಮುಂದಿನ ಹೋರಾಟಗಳಿಗೆ ಮತ್ತಷ್ಟು ಸ್ಪೂರ್ತಿಯನ್ನು ತಂದು ಕೊಟ್ಟಿತು ಎಂದರು.
    ಕೃಷ್ಣಪ್ಪನವರು ೧೯೭೮ರಲ್ಲಿ ತಾಲೂಕು ಕಛೇರಿ ಮುಂಭಾಗ ಸುಮಾರು ಒಂದೂವರೆ ವರ್ಷ ನಿರಂತರವಾಗಿ ಹೋರಾಟ ನಡೆಸಿದ ಪರಿಣಾಮ ಎಸ್.ಸಿ/ಎಸ್.ಟಿ ಭೂ ಪರಭಾರೆ ನಿಷೇಧ ಕಾಯ್ದೆ(ಪಿಟಿಸಿಎಲ್ ಕಾಯ್ದೆ) ಜಾರಿಗೆ ಬರುವ ಮೂಲಕ ಈ ಕಾಯ್ದೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಅನುಷ್ಠಾನ ಗೊಳ್ಳುವಂತಾಯಿತು. ಇದು ಕೃಷ್ಣಪ್ಪನವರ ಹೋರಾಟಕ್ಕೆ ಲಭಿಸಿದ ಬಹುದೊಡ್ಡ ಗೆಲುವು. ನಂತರದ ದಿನಗಳಲ್ಲಿ ಅವರು ರಾಜ್ಯಾದಾದ್ಯಂತ ಹಲವಾರು ಹೋರಾಟಗಳನ್ನು ನಡೆಸಿದ್ದು, ಈ ಪೈಕಿ ಭೂಸ ಚಳುವಳಿ, ಬೆಂಡಿಗೇರಿ ಮಲ ತಿನ್ನಿಸಿದ ಪ್ರಕರಣದ ವಿರುದ್ಧ ನಡೆಸಿದ ಹೋರಾಟ, ಶೋಷಿತ ಸಮುದಾಯದ ಹೆಣ್ಣು ಮಕ್ಕಳನ್ನು ಬೆತ್ತಲೆಗೊಳಿಸಿ ಮೆರವಣಿಗೆ ನಡೆಸುವ ಚಂದ್ರಗುತ್ತಿಯ ಬೆತ್ತಲೆ ಸೇವೆಯ ವಿರುದ್ಧ ನಡೆಸಿದ ಹೋರಾಟ ಪ್ರಮುಖವಾಗಿವೆ ಎಂದರು.
ಕೃಷ್ಣಪ್ಪನವರು ಕೇವಲ ಹೋರಾಟಕ್ಕೆ ಸೀಮಿತವಾಗಿರದೆ ರಾಜಕೀಯವಾಗಿ ಸಹ ಅಸ್ತಿತ್ವ ಕಂಡು ಕೊಳ್ಳುವ ನಿಟ್ಟಿನಲ್ಲಿ ಮುಂದಾಗಿದ್ದರು. ಈ ನಿಟ್ಟಿನಲ್ಲೂ ಅವರು ನಡೆಸಿದ ಪ್ರಯತ್ನ ಸ್ವಲ್ಪಮಟ್ಟಿಗೆ ಯಶಸ್ವಿಯಾಯಿತು. ೧೯೯೨-೯೩ರ ಅವಧಿಯಲ್ಲಿ ರಾಜ್ಯದಲ್ಲಿ ಬಿಎಸ್‌ಪಿ ಪಕ್ಷವನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹೋರಾಟದಲ್ಲಿಯೇ ತಮ್ಮ ಬದುಕನ್ನು ಕೊನೆಕೊಳಿಸಿದರು. ಕೃಷ್ಣಪ್ಪನವರು ಚಳುವಳಿಯನ್ನು ಆರಂಭಿಸಿದ ಸ್ಥಳದಲ್ಲಿಯೇ ಅವರ ಜನ್ಮದಿನ ಆಚರಿಸುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಅವರ ಹೋರಾಟಗಳು, ಆದರ್ಶತನಗಳು ನಮ್ಮೆಲ್ಲರಿಗೂ ಸ್ಪೂರ್ತಿದಾಯಕವಾಗಿವೆ ಎಂದರು.
    ಜಿಲ್ಲಾ ಸಂಚಾಲಕ ಚಿನ್ನಯ್ಯ ಮಾತನಾಡಿ, ಪ್ರೊ. ಬಿ. ಕೃಷ್ಣಪ್ಪನವರು ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಆಶಯದಂತೆ ಶಿಕ್ಷಣ, ಹೋರಾಟ ಮತ್ತು ಸಂಘಟನೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಶೋಷಿತರು, ದಲಿತರರ ಪರವಾದ ಧ್ವನಿಯಾಗಿದ್ದರು. ಇವರ ದಾರಿಯಲ್ಲಿ ನಾವೆಲ್ಲರೂ ಸಾಗುವಂತಾಗಬೇಕಾಗಿದೆ ಎಂದರು.
    ತಾಲೂಕು ಸಂಚಾಲಕ ಕೆ. ರಂಗನಾಥ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಂಘಟನಾ ಸಂಚಾಲಕ ಈಶ್ವರಪ್ಪ, ಜಿಲ್ಲಾ ಸಮಿತಿ ಸದಸ್ಯ ವಿ. ವಿನೋದ್, ರಾಜ್ಯ ಸಂಘಟನಾ ಸಂಚಾಲಕಿ ಶಾಂತಿ, ಏಳುಮಲೈ, ಶ್ರೀಧರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Wednesday, June 8, 2022

ಪ್ರಚೋದನಾಕಾರಿ ಹೇಳಿಕೆ ಮುತಾಲಿಕ್ ವಿರುದ್ಧ ದೂರು

ಪ್ರಚೋದನಾಕಾರಿ ಹೇಳಿಕೆ ನೀಡಿರುವ ಶ್ರೀ ರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಸಿ.ಎಂ ಖಾದರ್ ನೇತೃತ್ವದಲ್ಲಿ ಬುಧವಾರ ಭದ್ರಾವತಿಯಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು. 
    ಭದ್ರಾವತಿ, ಜೂ. ೮: ಪ್ರಚೋದನಾಕಾರಿ ಹೇಳಿಕೆ ನೀಡಿರುವ ಶ್ರೀ ರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಸಿ.ಎಂ ಖಾದರ್ ನೇತೃತ್ವದಲ್ಲಿ ಬುಧವಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು.
    ಅಜಾನ್ ಧ್ವನಿವರ್ಧಕ ತಡೆಯೊಡ್ಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಮೋದ್ ಮುತಾಲಿಕ್‌ರವರು ನೀಡಿರುವ ಪ್ರಚೋದನಾಕಾರಿ ಹೇಳಿಕೆಯಿಂದ ಸಮಾಜದಲ್ಲಿ ಆಶಾಂತಿ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.
    ನಗರ ಪೊಲೀಸ್ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ಅವರಿಗೆ  ದೂರು ಸಲ್ಲಿಸಲಾಯಿತು.  ರಾಜ್ಯ ಯುವ ಕಾಂಗ್ರೆಸ್ ಸಮಿತಿ ವಕ್ತಾರ ಆಮೋಸ್ ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಫ್ತಾಬ್ ಅಹಮದ್, ಉಪಾಧ್ಯಕ್ಷ ತಬ್ರೇಜ್‌ಖಾನ್, ಮುಖಂಡರಾದ ಸಯ್ಯದ್ ಮುಬಾರಕ್, ಫೈಜಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

೩ನೇ ಓಪನ್ ನ್ಯಾಷನಲ್ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಬಿಜಿಎಸ್ ಶಾಲೆಗೆ ಹಲವು ಬಹುಮಾನ

ಭದ್ರಾವತಿ ತಾಲೂಕಿನ ಕಾರೇಹಳ್ಳಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಕೇಂದ್ರಿಯ ವಿದ್ಯಾಲಯ(ಬಿಜಿಎಸ್ ಶಾಲೆ)ದ ವಿದ್ಯಾರ್ಥಿಗಳು ಪಾಂಡಿಚೆರಿಯಲ್ಲಿ ನಡೆದ ೩ನೇ ಓಪನ್ ನ್ಯಾಷನಲ್ ಚಾಂಪಿಯನ್‌ಶಿಪ್ ಪಂದ್ಯಾವಳಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದು, ಬುಧವಾರ ನಗರಕ್ಕೆ ಆಗಮಿಸಿದ ವಿದ್ಯಾರ್ಥಿಗಳನ್ನು ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ವಿಐಎಸ್‌ಎಲ್ ಕಾರ್ಮಿಕ ಸಂಘದ ಉಪಾಧ್ಯಕ್ಷ ಕುಮಾರ್ ಎಎಲ್‌ಡಬ್ಲ್ಯೂರವರು ಹೂವಿನ ಹಾರ ಹಾಕುವ ಮೂಲಕ ಅಭಿನಂದಿಸಿ ಸಿಹಿ ಹಂಚಿದರು.
    ಭದ್ರಾವತಿ, ಜೂ. ೮: ತಾಲೂಕಿನ ಕಾರೇಹಳ್ಳಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಕೇಂದ್ರಿಯ ವಿದ್ಯಾಲಯ(ಬಿಜಿಎಸ್ ಶಾಲೆ)ದ ವಿದ್ಯಾರ್ಥಿಗಳು ಪಾಂಡಿಚೆರಿಯಲ್ಲಿ ನಡೆದ ೩ನೇ ಓಪನ್ ನ್ಯಾಷನಲ್ ಚಾಂಪಿಯನ್‌ಶಿಪ್ ಪಂದ್ಯಾವಳಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
    ಯೂತ್ ಸ್ಪೋರ್ಟ್ಸ್ ಅಂಡ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ಆಯೋಜಿಸಲಾಗಿದ್ದ ಪಂದ್ಯಾವಳಿಯಲ್ಲಿ ಕೆ. ಸಮಥ ಶಾಟ್‌ಪುಟ್‌ನಲ್ಲಿ ಪ್ರಥಮ, ಡಿ. ರುಷಿಕ ಯೋಗಾಸನ ಪ್ರಥಮ, ಸಮರ್ಥ್ ಚಕ್ರವರ್ತಿ ೧೦೦ ಮೀಟರ್ ಓಟದಲ್ಲಿ ಪ್ರಥಮ, ಜಸ್ವಂತ್ ರೆಡ್ಡಿ ಮತ್ತು ಶರಥ್ವಿ ಭಾಗ್ಸಲೆ ೨೦೦ ಮೀಟರ್ ಓಟದಲ್ಲಿ ಪ್ರಥಮ, ಮಹಮದ್ ರಯಾನ್ ೪೦೦ ಮೀಟರ್ ಓಟದಲ್ಲಿ ಪ್ರಥಮ, ಸಮರ್ಥ್ ಪುರಾಣಿಕ್ ಮತ್ತು ಜಿ. ಚಿನ್ಮಯ ಪ್ರಸಾದ್ ಚದುರಂಗದಲ್ಲಿ ಪ್ರಥಮ ಹಾಗು ಬಿ.ಎಂ ವೇದಾಂತ್ ಡಿಸ್ಕ್ ಥ್ರೋನಲ್ಲಿ ಪ್ರಥಮ ಸ್ಥಾನ ವೈಯಕ್ತಿಕ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ. ಉಳಿದಂತೆ ಎಲ್. ಪ್ರಿನ್ಸ್, ಬಿ.ಜಿ ಸಿದ್ದಾರ್ಥ್, ಎಂ. ಚೇತನ್, ಎಸ್. ಪ್ರೀತಮ್ ಅವರನ್ನೊಳಗೊಂಡ ಖೋ ಖೋ ತಂಡ ಪ್ರಥಮ ಸ್ಥಾನದೊಂದಿಗೆ ಬಹುಮಾನ ತನ್ನದಾಗಿಸಿಕೊಂಡಿದೆ.  
    ಬುಧವಾರ ನಗರಕ್ಕೆ ಆಗಮಿಸಿದ ವಿದ್ಯಾರ್ಥಿಗಳನ್ನು ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ವಿಐಎಸ್‌ಎಲ್ ಕಾರ್ಮಿಕ ಸಂಘದ ಉಪಾಧ್ಯಕ್ಷ ಕುಮಾರ್ ಎಎಲ್‌ಡಬ್ಲ್ಯೂರವರು ಹೂವಿನ ಹಾರ ಹಾಕುವ ಮೂಲಕ ಅಭಿನಂದಿಸಿ ಸಿಹಿ ಹಂಚಿದರು. ವಿದ್ಯಾರ್ಥಿಗಳೊಂದಿಗೆ ತರಬೇತಿದಾರ ಹಾಗು ಪೋಷಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  ವಿದ್ಯಾರ್ಥಿಗಳಿಗೆ ಕೇಂದ್ರಿಯ ವಿದ್ಯಾಲಯದ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು, ವಿವಿಧ ಸಂಘ-ಸಂಸ್ಥೆಗಳು ಹಾಗು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.


ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಜಿ.ಆರ್ ನಾಗರಾಜ್ ಗೌಡ್ರು ಅವಿರೋಧ ಆಯ್ಕೆ

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಕೋಡಿಹಳ್ಳಿ ಗ್ರಾಮದ ಜಿ.ಆರ್. ನಾಗರಾಜ್ ಗೌಡ್ರು ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.
    ಭದ್ರಾವತಿ, ಜೂ. ೮ : ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಕೋಡಿಹಳ್ಳಿ ಗ್ರಾಮದ ಜಿ.ಆರ್. ನಾಗರಾಜ್ ಗೌಡ್ರು ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.
    ಉಪಾಧ್ಯಕ್ಷರಾಗಿದ್ದ ಎಚ್. ಕುಬೇರನಾಯ್ಕರವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜಿ.ಆರ್ ನಾಗರಾಜ್ ಗೌಡ್ರು ಅವಿರೋಧವಾಗಿ ಆಯ್ಕೆಯಾಗಿದ್ದು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಚುನಾವಣಾಧಿಕಾರಿ ಕರ್ತವ್ಯ ನಿರ್ವಹಿಸಿದರು.
    ಕೂಡ್ಲಿಗೆರೆ ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತರು ಅಧಿಕಾರ ಚುಕ್ಕಾಣಿ ಹಿಡಿದಿದ್ದು,  ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನವನ್ನು ಅಧಿಕಾರ ಹಂಚಿಕೆ ಸೂತ್ರದಡಿ ಒಡಂಬಡಿಕೆ ಮಾಡಿಕೊಂಡಿದ್ದು, ಅದರಂತೆ ಕುಬೇರನಾಯ್ಕರವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
    ಪಂಚಾಯಿತಿ ಅಧ್ಯಕ್ಷೆ ಉಮಾದೇವಿ ತಿಪ್ಪೇಶ್, ಮಾಜಿ ಅಧ್ಯಕ್ಷರಾದ ಸಿ. ಮಲಕ್ ವೀರಪ್ಪನ್, ಎಂ. ಜಯಣ್ಣ, ನಿಕಟಪೂರ್ವ ಉಪಾಧ್ಯಕ್ಷ ಕುಬೇರ ನಾಯ್ಕ, ತಾಲೂಕು ಸುಗ್ರಾಮ ಅಧ್ಯಕ್ಷೆ ಗೌರಮ್ಮ ಮಹದೇವ್, ಸದಸ್ಯರಾದ ವಿಶ್ವನಾಥ್, ಸ್ವಾಮಿನಾಥನ್, ಆರ್.ಎನ್ ರುದ್ರೇಶ್, ನೀಲಾಬಾಯಿ, ಪಾರ್ವತಿ ಬಾಯಿ, ಬಿ. ಸಿದ್ದಮ್ಮ, ಭಾಗ್ಯ ಹಾಗು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆರ್. ಅಶೋಕ್, ಕಾರ್ಯದರ್ಶಿ ಸಿ. ಸತೀಶ್ ಗೌಡ ಮತ್ತು ಗ್ರಂಥಾಲಯ ಮೇಲ್ವಿಚಾರಕ ಡಿ. ಮಹೇಶ್ವರನಾಯ್ಕ ಸೇರಿದಂತೆ ಗ್ರಾಮದ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tuesday, June 7, 2022

ವೆಂಕಟೇಶರಿಗೆ ಕರುನಾಡು ಪದ್ಯಶ್ರೀ ಪ್ರಶಸ್ತಿ

ಭದ್ರಾವತಿ ನ್ಯೂಟೌನ್ ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ವೆಂಕಟೇಶ್ ಆವರಿಗೆ ಕರುನಾಡು ಪದ್ಮಶ್ರೀ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿದೆ.
    ಭದ್ರಾವತಿ, ಜೂ. ೭ :  ನಗರದ ನ್ಯೂಟೌನ್ ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ವೆಂಕಟೇಶ್ ಆವರಿಗೆ ಕರುನಾಡು ಪದ್ಮಶ್ರೀ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿದೆ.
    ಶಿವಮೊಗ್ಗ ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ, ಕರ್ನಾಟಕ ಜಾನಪದ ಕಲಾ ಕೇಂದ್ರ ಕಲ್ಲೇನಹಳ್ಳಿ, ಮಲೆನಾಡು ಜಾನಪದ ಅಂಟಿಕೆ ಪಿಂಟಿಕೆ ಕಲಾಕೇಂದ್ರ, ಮಲೆನಾಡು ನಾಟಿ ಗಿಡಮೂಲಿಕೆ ಸಸ್ಯ ಸಂಜೀವಿನಿ ಸಂಘ ಹಾಗು  ಕರ್ನಾಟಕ ರಾಜ್ಯ  ಗ್ರಾಮ ಅರಣ್ಯ ಸಮಿತಿಗಳ ಒಕ್ಕೂಟದ ವತಿಯಿಂದ  ಸ್ವಾತಂತ್ರೋತ್ಸವದ ೭೫ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ  ರಾಜ್ಯಮಟ್ಟದ ಜಾನಪದ ಯುವಜನ ಮೇಳ ಸಮ್ಮೇಳನದಲ್ಲಿ ವೆಂಕಟೇಶ್ ಅವರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
    ಪತಂಜಲಿ ಶ್ರೀ ಕನಕದಾಸರ ಅಧ್ಯಯನ ಕೇಂದ್ರದ ಗೌರವಾಧ್ಯಕ್ಷ ಎಂ. ಈಶ್ವರಪ್ಪ ನವುಲೆ, ಪತಂಜಲಿ ಯೋಗ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ  ಅಧಿಕಾರಿ ಪರಿಸರ ಸಿ. ರಮೇಶ್,  ಪತಂಜಲಿ ಜಾನಪದ  ಕಲಾ ಕೇಂದ್ರದ ಅಧ್ಯಕ್ಷ ಶಿವಾನಂದಪ್ಪ, ಭವಾನಿ ಶಂಕರ್ ರಾವ್, ಪತಂಜಲಿ ಜೆ ನಾಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  ಪ್ರಶಸ್ತಿ ಪುರಸ್ಕೃತ ವೆಂಕಟೇಶ್ ಅವರಿಗೆ ನಗರದ ವಿವಿಧ ಗಣ್ಯರು ಅಭಿನಂದಿಸಿದ್ದಾರೆ.


Monday, June 6, 2022

ವಿಕಲಚೇತನ ಮಕ್ಕಳಲ್ಲಿ ವಿಶೇಷ ಶಕ್ತಿ, ಯಾರಿಗೂ ಕಡಿಮೆ ಇಲ್ಲ : ಡಾ. ಟಿ. ನರೇಂದ್ರಭಟ್

ಭದ್ರಾವತಿ, ಜೂ. ೭:  ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನ್ಯೂಟೌನ್ ತರಂಗ ಕಿವುಡು ಮಕ್ಕಳ ಶಾಲೆಯ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದುಕೊಳ್ಳುವ ಮೂಲಕ ವಿಕಲಚೇತನರಲ್ಲೂ ವಿಶೇಷ ಶಕ್ತಿ ಇದ್ದು, ಯಾರಿಗೂ ಕಡಿಮೆ ಇಲ್ಲ ಎಂಬುದನ್ನು ಸಾಧಿಸಿ ತೋರಿಸಿದ್ದಾರೆಂದು ಶಾಲೆಯ ಅಧ್ಯಕ್ಷ ಡಾ. ಟಿ. ನರೇಂದ್ರ ಭಟ್ ಹೇಳಿದರು.
ಅವರು ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿವಭದ್ರ ಟ್ರಸ್ಟ್ ವತಿಯಿಂದ ಆರಂಭಿಸಲಾಗಿರುವ ಈ ಶಾಲೆ ಕಳೆದ ೩ ದಶಕಗಳಿಂದ ತನ್ನದೇ ಆದ ಕೊಡುಗೆಯನ್ನು ನೀಡಿದೆ. ಮಕ್ಕಳು ತಾಯಿಯ ಗರ್ಭದಲ್ಲಿ ಬೆಳವಣಿಗೆ ಹಂತದಲ್ಲಿದ್ದಾಗ ಒಂದು ವೇಳೆ ತಾಯಿ ಅನಾರೋಗ್ಯಕ್ಕೆ ಒಳಗಾಗಿ ಸೂಕ್ತ ಚಿಕಿತ್ಸೆ ಪಡೆಯದಿದ್ದಲ್ಲಿ ಅಥವಾ ಜನನ ಸಂದರ್ಭದಲ್ಲಿ ಉಂಟಾಗುವ ಕೆಲವು ನ್ಯೂನ್ಯತೆಗಳಿಂದಾಗಿ ಅಥವಾ ನಿರ್ಲಕ್ಷ್ಯತನದಿಂದಾಗಿ ವಿಕಲಚೇತನ ಮಕ್ಕಳು ಹುಟ್ಟುವುದು ಸಹಜ. ಇದು ಮಕ್ಕಳ ಶಾಪವಲ್ಲ. ಪೋಷಕರು ಇಂತಹ ಮಕ್ಕಳ ಮೇಲೆ ವಿಶೇಷ ಕಾಳಜಿವಹಿಸಬೇಕು.  ಟ್ರಸ್ಟ್ ಇಂತಹ ಮಕ್ಕಳ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಮುನ್ನಡೆಯುವುದು ವಿಶೇಷವಾಗಿದೆ ಎಂದರು.
ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಒಟ್ಟು ೭ ಮಕ್ಕಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವ ಮೂಲಕ ಶೇ.೧೦೦ರಷ್ಟು ಫಲಿತಾಂಶ ತಂದು ಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮಕ್ಕಳ ಸಾಧನೆಯನ್ನು ಟ್ರಸ್ಟ್ ಅಭಿನಂದಿಸುತ್ತದೆ ಎಂದರು.
ಈ ಶಾಲೆಯ ಹಳೇಯ ವಿದ್ಯಾರ್ಥಿಗಳು ಹಾಗು ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು, ಸಿಬ್ಬಂದಿಗಳು ಶಾಲೆಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಶಾಲೆಯ ಕಟ್ಟಡಕ್ಕೆ ಸುಣ್ಣ ಬಣ್ಣ ಮಾಡಿಸಿರುವುದು ಸಂತಸವನ್ನುಂಟು ಮಾಡಿದೆ.  ಈ ಶಾಲೆಯ ಸಾಧನೆ ಬಗ್ಗೆ ಶ್ರೀ ಆದಿಚುಂಚನಗಿರಿ ಮಠದ ಪೀಠಾಧಿಪತಿಗಳಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಮೆಚ್ಚುಗೆ ವ್ಯಕ್ತಪಡಿಸಿ ಶಾಲೆಯನ್ನು ದತ್ತು ಪಡೆದು ಸಂಪೂರ್ಣವಾಗಿ ಅಭಿವೃಧ್ದಿಪಡಿಸಲು ಮುಂದಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ನಗರದ ಬೈಪಾಸ್ ರಸ್ತೆಯಲ್ಲಿರುವ ಮಠದ ಶಾಲಾ ಆವರಣದಲ್ಲಿ ನೂತನ ಕಟ್ಟಡವನ್ನು ನಿರ್ಮಿಸುವ ಯೋಜನೆಯನ್ನು ಹೊಂದಿದ್ದಾರೆ. ಎಸ್‌ಎಸ್‌ಎಲ್‌ಸಿ ನಂತರ ಮಕ್ಕಳಿಗೆ ಸ್ವಯಂ ಉದ್ಯೋಗ ಆರಂಭಿಸಲು ನೆರವಾಗುವಂತೆ ವೃತ್ತಿಪರ ಶಿಕ್ಷಣ ನೀಡುವ ಉದ್ದೇಶವನ್ನು ಶ್ರೀಗಳು ಹೊಂದಿದ್ದಾರೆ ಎಂದರು.
ಡಾ.ಜಿ.ಎಂ ನಟರಾಜ್ ಮಾತನಾಡಿ, ಯಾವುದೇ ವಿದ್ಯಾ ಸಂಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸಲು ಹಾಗು ಅಭಿವೃದ್ಧಿ ಹೊಂದಲು ಆಡಳಿತ ಮಂಡಳಿ, ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು ಮತ್ತು ಪೋಷಕರ ಸಹಕಾರ ಹೆಚ್ಚಿನದ್ದಾಗಿದೆ ಎಂದರು.
ಶಿವಮೊಗ್ಗ ಮೆಟ್ರೋ ಆಸ್ಪತ್ರೆ ಮುಖ್ಯಸ್ಥರಾದ ಡಾ. ತೇಜಸ್ವಿ, ಡಾ.ವೃಂದಾ ಭಟ್, ಡಾ. ಸೆಲ್ವರಾಜ್, ನಿತ್ಯಾನಂದ ಪೈ, ಅನಂತ ಕೃಷ್ಣ ನಾಯಕ್, ಸುಧಾಕರ್, ಸುಧೀಂದ್ರ, ಯುವರಾಜ್, ಮದಿಆಲಗನ್, ಎಸ್.ಎನ್ ಸುಭಾಷ್, ವೇಲು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ವೀಣಾ ಪ್ರಾರ್ಥಿಸಿ ತಾರಮಣಿ ಸ್ವಾಗತಿಸಿದರು. ಬಸವರಾಜ್ ವಂದಿಸಿದರು.



ನಗರಸಭೆ ಆಸ್ತಿ ಕಬಳಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಿ

ಕರ್ನಾಟಕ ಜನ ಸೈನ್ಯ ವತಿಯಿಂದ ನಗರಸಭೆ ಮುಂಭಾಗ ಪ್ರತಿಭಟನೆ

ಭದ್ರಾವತಿ ನಗರಸಭೆ ಆಸ್ತಿಯನ್ನು ಕಬಳಿಸಲು ಯತ್ನಿಸುತ್ತಿರುವವರ ಹಾಗು ಅಕ್ರಮವಾಗಿ ಕಟ್ಟಡ ನಿರ್ಮಿಸುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸೋಮವಾರ ಕರ್ನಾಟಕ ಜನ ಸೈನ್ಯ ಸಂಘಟನೆ ನೇತೃತ್ವದಲ್ಲಿ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಜೂ. ೬: ನಗರಸಭೆ ಆಸ್ತಿಯನ್ನು ಕಬಳಿಸಲು ಯತ್ನಿಸುತ್ತಿರುವವರ ಹಾಗು ಅಕ್ರಮವಾಗಿ ಕಟ್ಟಡ ನಿರ್ಮಿಸುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸೋಮವಾರ ಕರ್ನಾಟಕ ಜನ ಸೈನ್ಯ ಸಂಘಟನೆ ನೇತೃತ್ವದಲ್ಲಿ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
    ನಗರಸಭೆ ವಾರ್ಡ್ ನಂ.೩೦ರ ವಿಶ್ವೇಶ್ವರಾಯ ಬಡಾವಣೆ (ಕೆಂಪೇಗೌಡ ಲೇಔಟ್)ಯಲ್ಲಿ ಆಶ್ರಯ ಯೋಜನೆ ಮನೆಗಳಿಗೆ ಮೀಸಲಿರುವ ನಗರಸಭೆಗೆ ಸೇರಿದ ಸುಮಾರು ೨ ಎಕರೆ ಜಾಗವಿದ್ದು, ಸ್ಥಳೀಯ ವ್ಯಕ್ತಿಯೊಬ್ಬರು ಈ ಜಾಗವನ್ನು ಕಬಳಿಸಲು ಯತ್ನಿಸುತ್ತಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇದೆ ರೀತಿ ಬಿ.ಎಚ್ ರಸ್ತೆ ವಿಶಾಲ್ ಮಾರ್ಟ್ ಪಕ್ಕದಲ್ಲಿ ನದಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಕಟ್ಟಡ ನಿರ್ಮಿಸಲಾಗುತ್ತಿದ್ದು, ಇವರ ವಿರುದ್ಧ ಸಹ ಕಾನೂನು ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು.
    ಕರ್ನಾಟಕ ಜನ ಸೈನ್ಯ ಜಿಲ್ಲಾಧ್ಯಕ್ಷ ಕೆ. ಮಂಜುನಾಥ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಪ್ರಮುಖರಾದ ಬಿಸಿಯೂಟ ನೌಕರರ ಸಂಘದ ತಾಲೂಕು ಅಧ್ಯಕ್ಷೆ ಹನುಮಮ್ಮ, ಸಾಮಾಜಿಕ ಹೋರಾಟಗಾರ ಶಿವಕುಮಾರ್, ಧನಂಜಯ, ಕಟ್ಟಡ ಕಾರ್ಮಿಕರ ಸಂಘದ ತಾಲೂಕು ಕಾರ್ಯಾಧ್ಯಕ್ಷ ಅಭಿಲಾಷ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.