Saturday, June 11, 2022

ಏಕಾಏಕಿ ಬೆಂಕಿ : ನಡುರಸ್ತೆಯಲ್ಲಿಯೇ ಸುಟ್ಟು ಕರಕಲಾದ ವಾಹನ

ಚಲಿಸುತ್ತಿದ್ದ ಓಮ್ನಿ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ನಡು ರಸ್ತೆಯಲ್ಲಿಯೇ ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಶನಿವಾರ ಭದ್ರಾವತಿ ತಾಲೂಕಿನ ಬಿಆರ್‌ಪಿ ಗೋಣಿಬೀಡು ಸಮೀಪ ನಡೆದಿದೆ.
    ಭದ್ರಾವತಿ, ಜೂ. ೧೧: ಚಲಿಸುತ್ತಿದ್ದ ಓಮ್ನಿ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ನಡು ರಸ್ತೆಯಲ್ಲಿಯೇ ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಶನಿವಾರ ತಾಲೂಕಿನ ಬಿಆರ್‌ಪಿ ಗೋಣಿಬೀಡು ಸಮೀಪ ನಡೆದಿದೆ.
    ತರೀಕೆರೆ ಮಾರ್ಗವಾಗಿ ಶಿವಮೊಗ್ಗಕ್ಕೆ ಬರುತ್ತಿದ್ದ ಓಮ್ನಿ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಚಾಲಕ ಮಹಮದ್ ಅರ್ಷದ್ ಓಮ್ನಿ ವಾಹನದಿಂದ ಕೆಳಗೆ ಇಳಿದು ಹೊರ ಬಂದಿದ್ದಾರೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ವಾಹನವನ್ನು ಸಂಪೂರ್ಣವಾಗಿ ವ್ಯಾಪಿಸಿಕೊಂಡಿದ್ದು, ತಕ್ಷಣ ಸ್ಥಳೀಯರು ಅಗ್ನಿ ನಂದಿಸಲು ಮುಂದಾಗಿದ್ದಾರೆ. ಆದರೂ ಅಗ್ನಿ ಮತ್ತಷ್ಟು ವ್ಯಾಪಕಗೊಂಡ ಹಿನ್ನಲೆಯಲ್ಲಿ ತಕ್ಷಣ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
    ಅಗ್ನಿಶಾಮಕ ಠಾಣಾಧಿಕಾರಿ ಎನ್. ವಸಂತಕುಮಾರ್, ಸಿಬ್ಬಂದಿಗಳಾದ ಸುಬ್ರಮಣ್ಯ, ಶ್ರೀನಿವಾಸ್, ವಿನೂತನ್, ಕರಿಯಣ್ಣ ಮತ್ತು ಹರೀಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.



Friday, June 10, 2022

ರಾಜ್ಯದಲ್ಲಿ ಬಿಎಸ್‌ಪಿ ಪಕ್ಷ ಸಂಘಟಿಸಲು ದಲಿತರೆಲ್ಲರೂ ಒಗ್ಗೂಡಿ : ರಹಮತ್ ಉಲ್ಲಾ ಖಾನ್

ಭದ್ರಾವತಿಯಲ್ಲಿ ಶುಕ್ರವಾರ ಬಹುಜನ ಸಮಾಜ ಪಕ್ಷದ ವತಿಯಿಂದ ಪ್ರೊ. ಬಿ. ಕೃಷ್ಣಪ್ಪನವರ ೮೫ನೇ ಜನ್ಮದಿನ ಸರಳವಾಗಿ ಆಚರಿಸಲಾಯಿತು. 
    ಭದ್ರಾವತಿ, ಜೂ. ೧೦: ಬಹುಜನ ಸಮಾಜ ಪಕ್ಷ ದಲಿತರ ಪಕ್ಷವಾಗಿದ್ದು, ಎಲ್ಲಾ ದಲಿತರು ಪಕ್ಷ ಸಂಘಟನೆಗೆ ಕೈಜೋಡಿಸುವ ಮೂಲಕ ಪ್ರೊ. ಬಿ. ಕೃಷ್ಣಪ್ಪನವರ ಕನಸನ್ನು ನನಸಾಗಿಸಬೇಕೆಂದು ಪಕ್ಷದ ತಾಲೂಕು ಅಧ್ಯಕ್ಷ ರಹಮತ್ ಉಲ್ಲಾ ಖಾನ್(ಸರ್ದಾರ್) ಹೇಳಿದರು.
    ಪಕ್ಷದ ವತಿಯಿಂದ ಶುಕ್ರವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರೊ. ಬಿ ಕೃಷ್ಣಪ್ಪನವರ ೮೫ನೇ ಜನ್ಮದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ ಪಕ್ಷವನ್ನು ಮೊದಲು ಸಂಘಟಿಸಿದವರು ಕೃಷ್ಣಪ್ಪನವರಾಗಿದ್ದು, ಆದರೆ ಅವರು ಕಂಡ ಕನಸು ನನಸು ಮಾಡಲು ಸಾಧ್ಯವಾಗಲಿಲ್ಲ. ರಾಜ್ಯದಲ್ಲಿರುವ ದಲಿತರೆಲ್ಲರೂ ಒಗ್ಗಟ್ಟಾಗಿ ಪಕ್ಷವನ್ನು ಸಂಘಟಿಸುವ ಮೂಲಕ ಕೃಷ್ಣಪ್ಪನವರ ಕನಸು ನನಸಾಗಿಸಬೇಕು. ಈ ನಿಟ್ಟಿನಲ್ಲಿ ತಾಲೂಕಿನಾದ್ಯಂತ ಪಕ್ಷ ಸಂಘಟಿತವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.
       ತಾಲೂಕು ಸಂಯೋಜಕ ಎಂ. ರಾಜೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿ, ಶೋಷಿತರ, ದಲಿತರ ಆಶಾಕಿರಣ ಪ್ರೊ. ಬಿ. ಕೃಷ್ಣಪ್ಪನವರ ಜನ್ಮದಿನಾಚರಣೆಯನ್ನು ಪಕ್ಷದ ವತಿಯಿಂದ ಸರಳವಾಗಿ ಆಚರಿಸಲಾಗುತ್ತಿದೆ. ಇಂದು ನಾವೆಲ್ಲರೂ ಅವರ ದಾರಿಯಲ್ಲಿ ಸಾಗಬೇಕಾಗಿದೆ ಎಂದರು.
    ಪಕ್ಷದ ಕಾರ್ಯದರ್ಶಿ  ಪಿ. ಮೂರ್ತಿ ಮಾತನಾಡಿ, ಪ್ರೊ. ಬಿ. ಕೃಷ್ಣಪ್ಪನವರು ದಲಿತರು ಹೋರಾಟಕ್ಕೆ ಮಾತ್ರ ಸೀಮಿತವಾಗಿರದೆ ಯಾರ ಗುಲಾಮಗಿರಿಗೂ ಒಳಗಾಗದೆ ರಾಜಕೀಯವಾಗಿ ಸಹ ಮುಂದುವರೆಯಬೇಕೆಂಬ ಉದ್ದೇಶದೊಂದಿಗೆ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವ ಕಾರ್ಯ ಕೈಗೊಂಡರು. ದೇಶದಲ್ಲಿ ಪ್ರತಿಯೊಬ್ಬರಿಗೂ ಪ್ರತಿಯೊಂದು ಹಕ್ಕು ಸಂವಿಧಾನದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಕಲ್ಪಿಸಿಕೊಟ್ಟಿದ್ದಾರೆ. ಇದನ್ನು ಅರಿತು ದಲಿತರು ಸಹ ರಾಜಕೀಯವಾಗಿ ಅಧಿಕಾರ ಹೊಂದಲು ಶಕ್ತಿ ಮೀರಿ ಶ್ರಮಿಸಬೇಕೆಂದರು.
 .ಉಪಾಧ್ಯಕ್ಷರಾದ ಚಂದ್ರು ಹಾಗೂ ಶೋಭಾ ಮೂರ್ತಿ ಉಪಸ್ಥಿತರಿದ್ದರು.  ಸಿಹಿ ಹಂಚುವ ಮೂಲಕ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

ಗಾಲಿ ಕುರ್ಚಿ, ಪ್ರೋಟಿನ್ ಪೌಂಡರ್ ವಿತರಣೆ ಕಾರ್ಯಕ್ರಮ

ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಚಾಲನೆ

ಭದ್ರಾವತಿ, ಜೂ. ೧೦: ಕರ್ನಾಟಕ ಸ್ಟ್ರೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಹಾಗು ಶ್ರಮ ಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ವತಿಯಿಂದ ಶುಕ್ರವಾರ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಗಾಲಿ ಕುರ್ಚಿ ಹಾಗು ಪ್ರೋಟಿನ್ ಪೌಂಡರ್ ಮತ್ತು ಮೊಟ್ಟೆ ವಿತರಣೆ ನಡೆಯಿತು.
ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶಂಕರಪ್ಪ, ಕರ್ನಾಟಕ ಸ್ಟ್ರೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್‌ಬಾಬು, ತಾಲೂಕು ಅಧ್ಯಕ್ಷ ಚಂದ್ರಶೇಖರ್, ಗೌರವಾಧ್ಯಕ್ಷ ಸುರೇಶ್‌ಕುಮಾರ್, ಕಾರ್ಯಾಧ್ಯಕ್ಷ ಅಭಿಲಾಷ್, ಮನೋಹರ್, ಶಿವಣ್ಣಗೌಡ, ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ರಾಜೇಶ್ವರಿ, ತಾಲೂಕು ಅಧ್ಯಕ್ಷೆ ಚಂದ್ರಕಲಾ, ಪುಷ್ಪ, ಕವಿತಾ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ಯುವ ಘಟಕದ ಅಧ್ಯಕ್ಷ ವಿಜಯ್ ಸಾರಥಿ, ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ರಾಮನಾಥ್ ಬರ್ಗೆ, ಪಿ. ಗಣೇಶ್‌ರಾವ್, ವಾಹನ ದುರಸ್ತಿಗಾರರ ಸಂಘದ ಅಧ್ಯಕ್ಷ ಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಓರ್ವ ಫಲಾನುಭವಿಗೆ ಗಾಲಿ ಕುರ್ಚಿ ಹಾಗು ಸುಮಾರು ೫ ಮಂದಿ ಕ್ಷಯಾ ರೋಗ ಪೀಡಿತರಿಗೆ ಸುಮಾರು ೬ ತಿಂಗಳಿಗೆ ಅಗತ್ಯವಿರುವಷ್ಟು ಪ್ರೋಟಿನ್ ಪೌಂಡರ್ ಹಾಗು ಮೊಟ್ಟೆ ಉಚಿತವಾಗಿ ವಿತರಿಸಲಾಯಿತು.


ಭದ್ರಾವತಿಯಲ್ಲಿ ಕರ್ನಾಟಕ ಸ್ಟ್ರೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಹಾಗು ಶ್ರಮ ಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ವತಿಯಿಂದ ಶುಕ್ರವಾರ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಗಾಲಿ ಕುರ್ಚಿ ಹಾಗು ಪ್ರೋಟಿನ್ ಪೌಂಡರ್ ಮತ್ತು ಮೊಟ್ಟೆ ವಿತರಣೆ ನಡೆಯಿತು.


Thursday, June 9, 2022

ತಾಲೂಕು ಅಖಿಲ ಕರ್ನಾಟಕ ಬ್ಯೂಟಿಷಿಯನ್ ಅಸೋಸಿಯೇಷನ್ ಅಸ್ತಿತ್ವಕ್ಕೆ

ನೂತನ ಅಧ್ಯಕ್ಷರಾಗಿ ದೇವಿಕಾ ನಾಗರಾಜ್ ನೇಮಕ


ನೂತನವಾಗಿ ಭದ್ರಾವತಿ ತಾಲೂಕು ಅಖಿಲ ಕರ್ನಾಟಕ ಬ್ಯೂಟಿಷಿಯನ್ ಅಸೋಸಿಯೇಷನ್ ಅಸ್ತಿತ್ವಕ್ಕೆ ಬಂದಿದ್ದು, ಶ್ರೀ ಕೆಂಪೇಗೌಡ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷರಾಗಿ ದೇವಿಕಾ ನಾಗರಾಜ್ ನೇಮಕಗೊಂಡಿದ್ದಾರೆ.
    ಭದ್ರಾವತಿ, ಜೂ. ೯: ನೂತನವಾಗಿ ಭದ್ರಾವತಿ ತಾಲೂಕು ಅಖಿಲ ಕರ್ನಾಟಕ ಬ್ಯೂಟಿಷಿಯನ್ ಅಸೋಸಿಯೇಷನ್ ಅಸ್ತಿತ್ವಕ್ಕೆ ಬಂದಿದ್ದು, ಅಧ್ಯಕ್ಷರಾಗಿ ದೇವಿಕಾ ನಾಗರಾಜ್ ನೇಮಕಗೊಂಡಿದ್ದಾರೆ.
    ಅಖಿಲ ಕರ್ನಾಟಕ ಬ್ಯೂಟಿಷಿಯನ್ ಅಸೋಸಿಯೇಷನ್ ರಾಜ್ಯಾಧ್ಯಕ್ಷೆ ನಾಗವೇಣಿಯವರ ಅಧ್ಯಕ್ಷತೆಯಲ್ಲಿ ನಗರದ ಅಪ್ಪರ್‌ಹುತ್ತಾ ಶ್ರೀ ಕೆಂಪೇಗೌಡ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ನೂತನ ಪದಾಧಿಕಾರಿಗಳು ನೇಮಕಗೊಂಡಿದ್ದಾರೆ.
    ಗೌರವಾಧ್ಯಕ್ಷರಾಗಿ ಪದ್ಮಾವತಿ, ಉಪಾಧ್ಯಕ್ಷರಾಗಿ ಆರತಿ ಸಿಂಗ್, ಪ್ರಧಾನ ಕಾರ್ಯದರ್ಶಿಯಾಗಿ ಕವಿತಾ ನವೀನ್, ಸಹಕಾರ್ಯದರ್ಶಿಯಾಗಿ ಸುಮಿತ್ರ ಶ್ರೀನಿವಾಸ್, ಖಜಾಂಚಿಯಾಗಿ ಭಾರತಿ ಹಾಗು ಚೈತನ್ಯ ನವೀನ್ ಮತ್ತು ನಿರ್ದೇಶಕರಾಗಿ ಪ್ರೇಮ ಶ್ರೀನಿವಾಸ್, ವೀಣಾ, ತಬಿತ, ರೋಜಾ, ಪವಿತ್ರ, ಆಶಾ, ಸೋನಿ, ಜಾನ್ಸಿ, ಶ್ರೀಲಕ್ಷ್ಮಿ, ಎಸ್. ರೂಪಾ, ಮಾಧುರಿ ಮತ್ತು ಕಮಲ ನೇಮಕಗೊಂಡಿದ್ದಾರೆ.

ಯೋಗ ಸ್ಪರ್ಧೆಯಲ್ಲಿ ಡಿ. ನಾಗರಾಜ್‌ಗೆ ಚಿನ್ನದ ಪದಕ

೩ನೇ ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಭದ್ರಾವತಿ ವಿವೇಕಾನಂದ ಯೋಗ ಟ್ರಸ್ಟ್‌ನ ಡಿ. ನಾಗರಾಜ್‌ರವರು ಚಿನ್ನದ ಪದಕ ಪಡೆದುಕೊಂಡಿದ್ದಾರೆ. 
    ಭದ್ರಾವತಿ, ಜೂ. ೯: ೩ನೇ ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ನಗರದ ವಿವೇಕಾನಂದ ಯೋಗ ಟ್ರಸ್ಟ್‌ನ ಡಿ. ನಾಗರಾಜ್‌ರವರು ಚಿನ್ನದ ಪದಕ ಪಡೆದುಕೊಂಡಿದ್ದಾರೆ.
    ೮ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಬೆಂಗಳೂರಿನ ಬಸವನಗುಡಿಯ ಬಿ.ಎಂ.ಎಸ್ ಇಂಜನಿಯರಿಂಗ್ ಕಾಲೇಜಿನಲ್ಲಿ ಯೋಗ ಗಂಗೋತ್ರಿ ವತಿಯಿಂದ ಆಯೋಜಿಸಲಾಗಿದ್ದ ಪಂದ್ಯಾವಳಿಯಲ್ಲಿ ೬೦ ವರ್ಷ ಮೇಲ್ಪಟ್ಟವರ ವಿಭಾಗದ ಯೋಗ ಸ್ಪರ್ಧೆಯಲ್ಲಿ ಡಿ. ನಾಗರಾಜ್‌ರವರು ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.
    ಕರ್ನಾಟಕ ಯೋಗ ಸಂಸ್ಥೆ ಕಾರ್ಯದರ್ಶಿ ಡಿ. ಪುಟ್ಟೇಗೌಡ ಹಾಗು ಕ್ರೀಡಾಭಿಮಾನಿಗಳು ನಾಗರಾಜ್‌ರವರನ್ನು ಅಭಿನಂದಿಸಿದ್ದಾರೆ.

ಫಸ್ಟ್ ಸ್ಟೆಫ್ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವ ಮೂಲಕ ಪರಿಸರ ದಿನ ಆಚರಣೆ

ಭದ್ರಾವತಿ ತಾಲೂಕಿನ ಅರಳಿಹಳ್ಳಿಯಲ್ಲಿರುವ ಶ್ರೀ ಸತ್ಯನಾರಾಯಣ ಎಜ್ಯುಕೇಷನ್ ಟ್ರಸ್ಟ್‌ನ ಫಸ್ಟ್ ಸ್ಟೆಫ್ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು.
    ಭದ್ರಾವತಿ, ಜೂ. ೯: ತಾಲೂಕಿನ ಅರಳಿಹಳ್ಳಿಯಲ್ಲಿರುವ ಶ್ರೀ ಸತ್ಯನಾರಾಯಣ ಎಜ್ಯುಕೇಷನ್ ಟ್ರಸ್ಟ್‌ನ ಫಸ್ಟ್ ಸ್ಟೆಫ್ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು.
    ಈ ಹಿಂದೆ ಹೊಸಮನೆ ಮುಖ್ಯ ರಸ್ತೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಫಸ್ಟ್ ಸ್ಟೆಫ್ ಪೂರ್ವ ಪ್ರಾಥಮಿಕ ಶಾಲೆ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡಿದ್ದು, ಶಾಲಾ ಮುಂಭಾಗದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು.
    ಪ್ರಗತಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರು, ಶ್ರೀ ಸತ್ಯನಾರಾಯಣ ಎಜ್ಯುಕೇಷನ್ ಟ್ರಸ್ಟ್ ಅಧ್ಯಕ್ಷರು, ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗದವರು ಹಾಗು ಮಕ್ಕಳು ಉಪಸ್ಥಿತರಿದ್ದರು.


ವಿಇಎಸ್ ವಿದ್ಯಾಸಂಸ್ಥೆ ಪದನಿಮಿತ್ತ ಅಧ್ಯಕ್ಷರಾಗಿ ಬಿ. ಸಿದ್ದಬಸಪ್ಪ

ಭದ್ರಾವತಿ ಹೊಸಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಪದನಿಮಿತ್ತ ಅಧ್ಯಕ್ಷರಾಗಿ ಆಯ್ಕೆಯಾದ ಬಿ. ಸಿದ್ದಬಸಪ್ಪ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
    ಭದ್ರಾವತಿ, ಜೂ. ೯: ನಗರದ ಹೊಸಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಪದನಿಮಿತ್ತ ಅಧ್ಯಕ್ಷರಾಗಿ ಬಿ. ಸಿದ್ದಬಸಪ್ಪ ಆಯ್ಕೆಯಾಗಿದ್ದಾರೆ.
    ವಿದ್ಯಾಸಂಸ್ಥೆ ಆಡಳಿತ ಮಂಡಳಿಯ ಬೈಲಾ ಸಮಗ್ರ ತಿದ್ದುಪಡಿಯಾದ ಹಿನ್ನಲೆಯಲ್ಲಿ ಗೌರವಾಧ್ಯಕ್ಷರಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ, ಅಧ್ಯಕ್ಷರಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಉಪಾಧ್ಯಕ್ಷರಾಗಿ ಡಿ. ನಾಗರತ್ನ, ಕಾರ್ಯದರ್ಶಿಯಾಗಿ ಡಿ.ಎಸ್ ರಾಜಪ್ಪ ಹಾಗು ಖಜಾಂಚಿಯಾಗಿ ಎಸ್.ಕೆ ಮೋಹನ್ ಮತ್ತು ಕಾರ್ಯಾಧ್ಯಕ್ಷರಾಗಿ ಬಿ.ಎಲ್ ರಂಗಸ್ವಾಮಿ ಆಯ್ಕೆಯಾಗಿದ್ದಾರೆ.
    ಉಳಿದಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆಯ ಚುನಾಯಿತ ನಿರ್ದೇಶಕರು, ವಿದ್ಯಾಸಂಸ್ಥೆಯ ಅಜೀವ ಸದಸ್ಯ/ಕಾಯಂ ಸದಸ್ಯರು ಪದನಿಮಿತ್ತ ನಿರ್ದೇಶಕರುಗಳಾಗಿದ್ದಾರೆ.