Sunday, June 19, 2022

ನಗರಸಭೆ ಸದಸ್ಯೆಯಾಗಿ ೧ ವರ್ಷ ಅಧಿಕಾರ ಪೂರೈಸಿದ ಶಶಿಕಲಾ ಬಿ.ಎಸ್ ನಾರಾಯಣಪ್ಪ

ಮನೆ ಮನೆಗಳಿಗೆ ತೆರಳಿ ನರೇಂದ್ರ ಮೋದಿಯವರ ೮ ವರ್ಷದ ಸಾಧನೆ ವಿವರಿಸಿದ ಸದಸ್ಯೆ


ಭದ್ರಾವತಿ ೫ನೇ ವಾರ್ಡಿನ ನಗರಸಭಾ ಸದಸ್ಯೆ ಶಶಿಕಲಾ ಬಿ.ಎಸ್ ನಾರಾಯಣಪ್ಪ ಪ್ರತಿ ಮನೆ ಮನೆಗೆ ತರಳಿ ಪ್ರಧಾನಿ ನರೇಂದ್ರ ಮೋದಿಯವರ ಸಾಧನೆಗಳನ್ನು ತಿಳಿಸಿದರು.
    ಭದ್ರಾವತಿ, ಜೂ. ೧೯ ; ನಗರಸಭೆ ಸದಸ್ಯೆಯಾಗಿ ೧ ವರ್ಷ ಪೂರೈಸಿದ ಹಿನ್ನಲೆಯಲ್ಲಿ ನಗರಸಭೆ ೫ನೇ ವಾರ್ಡಿನ ಸದಸ್ಯೆ ಶಶಿಕಲಾ ಬಿ.ಎಸ್ ನಾರಾಯಣಪ್ಪ ಭಾನುವಾರ ತಮ್ಮ ವಾರ್ಡಿನ ಮನೆ ಮನೆಗಳಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿಯವರ ೮ ವರ್ಷದ ಸಾಧನೆಗಳನ್ನು ತಿಳಿಸುವ ಮೂಲಕ ಜನರ ಆರ್ಶೀವಾದ ಪಡೆದುಕೊಂಡರು.
      ಹಳೇನಗರ ಭಾಗದ ದೊಡ್ಡಕುರುಬರ ಬೀದಿ, ಉಪ್ಪಾರರಬೀದಿ, ಬ್ರಾಹ್ಮಣರಬೀದಿ, ಮರಾಠ ಬೀದಿ, ರಥ ಬೀದಿ ರಸ್ತೆ ಹಾಗೂ ಕೋಟೆ ಏರಿಯಾ ಖಾಜಿಮೊಹಲ್ಲಾ, ಕನಕನಗರ ಸೇರಿದಂತೆ ಇನ್ನಿತರ ಭಾಗಗಳಲ್ಲಿ ಪ್ರತಿ ಮನೆಗೆ ತೆರಳಿದ ಅವರು ವಾರ್ಡಿನ ಸಮಸ್ಯೆಗಳನ್ನು ಆಲಿಸಿ ತಕ್ಷಣ ಪರಿಹರಿಸಿಕೊಡುವುದಾಗಿ ಭರವಸೆ ನೀಡಿದರು. ಮುಂದಿನ ದಿನಗಳಲ್ಲೂ ಬಿಜೆಪಿ ಪಕ್ಷವನ್ನು ಬೆಂಬಲಿಸಿ ನರೇಂದ್ರ ಮೋದಿಯವರಿಗೆ ಶಕ್ತಿ ತುಂಬುವಂತೆ ಮನವಿ ಮಾಡಿದರು.
    ಪಕ್ಷದ ಪ್ರಮುಖರಾದ ನಾರಾಯಣಪ್ಪ, ಕೃಷ್ಣಾನಂದರಾಯ್ಕರ್, ತಾರಾಬಾಯಿ ಶಿವಾಜಿರಾವ್, ವೀಣಾ ಪರಶುರಾಮ್, ಆಯಿಶಾ ಪಾಷಾ, ದಾದು, ಮುನ್ನ, ವಿಶ್ವನಾಥ್‌ರಾವ್, ಹೇಮಾವತಿ, ಭಾರತಿ, ಕೃಷ್ಣಪ್ಪ, ನಾಗರಾಜ್ ಸೇರಿದಂತೆ ಇನ್ನಿತರರಿದ್ದರು.

ಗಾಣಿಗ ಸಮಾಜ ಸಂಘಟಿತವಾಗಲಿ : ಬಿ.ಕೆ ಮೋಹನ್

ಭದ್ರಾವತಿ ಹಳೇನಗರದ ನಗರದ ವೀರಶೈವ ಸಭಾ ಭವನದಲ್ಲಿ ಭಾನುವಾರ ತಾಲೂಕು ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಸಭೆ ನಡೆಯಿತು.
    ಭದ್ರಾವತಿ, ಜೂ. ೧೯: ಕ್ಷೇತ್ರದಲ್ಲಿ ಅಲ್ಪ ಪ್ರಮಾಣದಲ್ಲಿರುವ ಗಾಣಿಗ ಸಮುದಾಯದವರು ಹೆಚ್ಚು ಸಂಘಟಿತವಾಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಶಕ್ತಿ ಮೀರಿ ಶ್ರಮಿಸಬೇಕೆಂದು ತಾಲೂಕು ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ನೂತನ ಗೌರವಾಧ್ಯಕ್ಷ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಹೇಳಿದರು.
    ಅವರು ಭಾನುವಾರ ಹಳೇನಗರದ ನಗರದ ವೀರಶೈವ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
    ಮೊದಲು ನಮ್ಮ ಸಮುದಾಯ ಬೆಳವಣಿಗೆ ಹೊಂದಬೇಕು. ಈ ನಿಟ್ಟಿನಲ್ಲಿ ಚಿಂತಿಸಿ ಸಂಘಟಿಸುವವರ ಅಗತ್ಯವಿದೆ. ಸಮುದಾಯದಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ನಾವು ಸಮಾಜದ ಇತರೆ ಸಮುದಾಯಗಳೊಂದಿಗೆ ಸಮಾನವಾಗಿ ಗುರುತಿಸಿಕೊಳ್ಳುವಂತಾಗಬೇಕೆಂದರು.
    ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಿ. ವಿಜಯ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಬಿ.ಕೆ ಜಗನ್ನಾಥ್, ಸಂಘದ ಜಿಲ್ಲಾ ಪ್ರಮುಖರಾದ ಮಾಜಿ ಅಧ್ಯಕ್ಷರಾದ ಎಸ್.ಎಸ್ ರುದ್ರಮುನಿ ಸಜ್ಜನ್, ಕೆ.ವಿ ಸಜ್ಜನ್ ಶೆಟ್ಟರ್, ಮಾಜಿ ಪ್ರಧಾನ ಕಾರ್ಯದರ್ಶಿ ಎ. ಅಶೋಕ್, ಜಿಲ್ಲಾ ಉಪಧ್ಯಕ್ಷ ಎನ್.ಬಿ ರಾಜಶೇಖರ್, ಕಾರ್ಯದರ್ಶಿ ಎಂ.ಆರ್ ಕಿರಣ್‌ಕುಮಾರ್, ಖಜಾಂಚಿ ಎ.ಎಸ್ ರವಿ, ನಿರ್ದೇಶಕರಾದ ಕೆ.ಪಿ ರವೀಶ್, ಸಿ.ಎಸ್ ಚನ್ನಬಸವರಾಜ್, ರೇಖಾ ರಾಜ್‌ಶೇಖರ್, ಚನ್ನವೀರೇಶ್, ಸುಜಾತ, ಬಸವರಾಜ್ ಹೊಸಮನಿ, ಮಹೇಶ್‌ಕುಮಾರ್, ಸಿ.ಎಂ ಬಸವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ವಾಗೀಶ್ ಕೋಠಿ ನಿರೂಪಿಸಿದರು.
    ನೂತನ ಪದಾಧಿಕಾರಿಗಳು :
    ತಾಲೂಕು ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ನೂತನ ಗೌರವಾಧ್ಯಕ್ಷರಾಗಿ ಬಿ.ಕೆ ಮೋಹನ್, ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಟಿ.ಎಸ್ ಆನಂದಕುಮಾರ್, ಉಪಾಧ್ಯಕ್ಷರಾಗಿ ಎಂ. ಮಹಾದೇವಪ್ಪ, ಜೆ. ನಂದೀಶ್, ಕಾರ್ಯದರ್ಶಿಯಾಗಿ ಶಿವಾನಂದ, ನಿರ್ದೇಶಕರಾಗಿ ನಾಗರಾಜ, ಪ್ರದೀಪ್, ಜಿ.ಕೆ ವೀರೇಶ್, ಜಿ.ಪಿ ಚನ್ನೇಶ್ ಹಾಗು ಮಹಿಳಾ ನಿರ್ದೇಶಕರಾಗಿ ರೇಣುಕ ರುದ್ರೇಶ್ ಆಯ್ಕೆಯಾದರು.


ಭದ್ರಾವತಿ ತಾಲೂಕು ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಟಿ.ಎಸ್ ಆನಂದಕುಮಾರ್ ಭಾನುವಾರ ನಡೆದ ಸಭೆಯಲ್ಲಿ ಆಯ್ಕೆಯಾದರು.

Saturday, June 18, 2022

ಪಿಯುಸಿ ಪರೀಕ್ಷೆಯಲ್ಲಿ ವಿವಿಧ ಕಾಲೇಜುಗಳಿಗೆ ಉತ್ತಮ ಫಲಿತಾಂಶ

ಭದ್ರಾವತಿ ಹಳೇನಗರದ ಸಂಚಿ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಎಸ್.ಆರ್ ಸುಷ್ಮ ವಾಣಿಜ್ಯ ವಿಭಾಗದಲ್ಲಿ ೫೭೬ ಅಂಕ ಪಡೆದುಕೊಂಡಿದ್ದಾರೆ.
    ಭದ್ರಾವತಿ, ಜೂ. ೧೮: ನಗರದ ವಿವಿಧ ಪದವಿ ಪೂರ್ವ ಕಾಲೇಜುಗಳು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದುಕೊಂಡಿವೆ.


ಭದ್ರಾವತಿ ಹಳೇನಗರದ ಸಂಚಿ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ  ವಿಜ್ಞಾನ ವಿಭಾಗದಲ್ಲಿ ಸಿಂಧೂಶ್ರೀ ೫೬೬ ಅಂಕ ಪಡೆದುಕೊಂಡಿದ್ದಾರೆ.
    ಹಳೇನಗರದ ಸಂಚಿ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು ೨೭೬ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ ೧೬೪ ವಿದ್ಯಾರ್ಥಿಗಳು ಉತ್ತೀರ್ಣ ಹೊಂದಿದ್ದಾರೆ. ಒಟ್ಟು ೭೨ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗು ೧೯ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 


ಭದ್ರಾವತಿ ನ್ಯೂಟೌನ್ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಎಸ್‌ಎವಿ ಕಾಂಪೋಸಿಟ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿ ಶ್ರೀಲಕ್ಷ್ಮೀ ಎಸ್. ಶೇಖರ್-೫೯೦ ಅಂಕ ಪಡೆದುಕೊಂಡಿದ್ದಾರೆ.
    ವಿದ್ಯಾರ್ಥಿಗಳಾದ ಎಸ್.ಆರ್ ಸುಷ್ಮ ವಾಣಿಜ್ಯ ವಿಭಾಗದಲ್ಲಿ ೫೭೬, ವಿಜ್ಞಾನ ವಿಭಾಗದಲ್ಲಿ ಸಿಂಧೂಶ್ರೀ ೫೬೬ ಮತ್ತು ಸುರಭಿ ೫೬೪ ಅತಿ ಹೆಚ್ಚು ಅಂಕಗಳನ್ನು ಪಡೆದುಕೊಂಡಿದ್ದಾರೆ. ಒಟ್ಟು ಶೇ.೬೦ರಷ್ಟು ಫಲಿತಾಂಶ ಪಡೆದುಕೊಂಡಿದೆ ಎಂದು ಕಾಲೇಜಿನ ಪ್ರಾಚಾರ್ಯ ಸಿದ್ದಲಿಂಗಮೂರ್ತಿ ತಿಳಿಸದ್ದಾರೆ.


ಭದ್ರಾವತಿ ನ್ಯೂಟೌನ್ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಎಸ್‌ಎವಿ ಕಾಂಪೋಸಿಟ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿ ಎಂ.ಡಿ ಟಿ. ಫೈಸಲ್-೫೮೪ ಅಂಕ ಪಡೆದುಕೊಂಡಿದ್ದಾರೆ.
    ನಗರದ ನ್ಯೂಟೌನ್ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಎಸ್‌ಎವಿ ಕಾಂಪೋಸಿಟ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಾದ ಶ್ರೀಲಕ್ಷ್ಮೀ ಎಸ್. ಶೇಖರ್-೫೯೦, ಎಂ.ಡಿ ಟಿ. ಫೈಸಲ್-೫೮೪, ಎಸ್. ವೀರೇಶ್-೫೮೨, ಬಿ.ಎನ್ ವರ್ಷ-೫೮೧, ಎಸ್.ಎಲ್ ದೃತಿ-೫೮೦, ಟಿ. ಚೇತನ-೫೭೭, ಎಚ್.ಆರ್ ಗಿರೀಶ್-೫೭೬, ಆರ್. ನಿಸರ್ಗ-೫೭೬, ಡಿ.ಆರ್ ಮೇಘನ-೫೭೩ ಮತ್ತು ಜಿ. ಪೂರ್ಣಿಮಾ-೫೭೧ ಅತಿ ಹೆಚ್ಚು ಅಂಕಗಳನ್ನು ಪಡೆದುಕೊಂಡಿದ್ದಾರೆ. ಒಟ್ಟಾರೆ ಕಾಲೇಜಿಗೆ ಈ ಬಾರಿ ಉತ್ತಮ ಫಲಿತಾಂಶ ಲಭಿಸಿದೆ ಎಂದು ಪ್ರಾಂಶುಪಾಲರಾದ ಡಾ. ಹರಿಣಾಕ್ಷಿ ತಿಳಿಸಿದ್ದಾರೆ.


ಶಿವಮೊಗ್ಗ ನಂದನ ಎಜ್ಯುಕೇಷನ್ ಟ್ರಸ್ಟ್‌ನ ಆಚಾರ್ಯ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಸ್.ಡಿ ನಂದಿತಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ೫೮೩ ಅಂಕ ಪಡೆದುಕೊಂಡಿದ್ದಾರೆ.
      ಎಸ್.ಡಿ ನಂದಿತಾಗೆ ೫೮೩ ಅಂಕ:
    ಶಿವಮೊಗ್ಗ ನಂದನ ಎಜ್ಯುಕೇಷನ್ ಟ್ರಸ್ಟ್‌ನ ಆಚಾರ್ಯ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಸ್.ಡಿ ನಂದಿತಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ೫೮೩ ಅಂಕ ಪಡೆದುಕೊಂಡಿದ್ದಾರೆ. ಈಕೆ ನಗರದ ಜನ್ನಾಪುರ ನಿವಾಸಿಗಳಾದ ಶ್ಯಾಮಲ ಮತ್ತು ಧನರಾಜ್ ದಂಪತಿ ಪುತ್ರಿಯಾಗಿದ್ದಾರೆ.


ಮೂಡಬಿದ್ರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಎಚ್.ಎನ್ ಲಿಖಿತ್ ಪಟೇಲ್ ೫೬೮ ಅಂಕದೊಂದಿಗೆ ಶೇ.೯೫ ಫಲಿತಾಂಶ ಪಡೆದುಕೊಂಡಿದ್ದಾರೆ.
    ಎಚ್.ಎನ್ ಲಿಖಿತ್ ಪಟೇಲ್‌ಗೆ ೫೬೮ ಅಂಕ :
    ಮೂಡಬಿದ್ರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಎಚ್.ಎನ್ ಲಿಖಿತ್ ಪಟೇಲ್ ೫೬೮ ಅಂಕದೊಂದಿಗೆ ಶೇ.೯೫ ಫಲಿತಾಂಶ ಪಡೆದುಕೊಂಡಿದ್ದಾರೆ. ಲಿಖಿತ್ ಪಟೇಲ್ ನಗರದ ನಿವಾಸಿ ಲಯನ್ಸ್ ಪ್ರಾಂತೀಯ ಅಧ್ಯಕ್ಷ ಹೆಬ್ಬಂಡಿ ನಾಗರಾಜ್‌ರವರ ಪುತ್ರರಾಗಿದ್ದಾರೆ.

ಉತ್ತಮ ಪರಿಸರಕ್ಕೆ ಪ್ರತಿಯೊಬ್ಬರು ಸಸಿ ನೆಡುವುದು ಅವಶ್ಯಕ : ಶಫಿ ಉಲ್ಲಾ

ಭದ್ರಾವತಿ ತಾಲೂಕಿನ ಅರಬಿಳಿಚಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವನಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಜೂ. ೧೮: ಉತ್ತಮ ಪರಿಸರಕ್ಕೆ ಪ್ರತಿಯೊಬ್ಬರು ಸಸಿಗಳನ್ನು ನೆಡುವ ಮೂಲಕ ಅವುಗಳನ್ನು ಪೋಷಿಸಿ ಬೆಳೆಸಬೇಕೆಂದು ತಾಲೂಕಿನ ಕೂಡ್ಲಿಗೆರೆ ಉಪ ವಲಯ ಅರಣ್ಯಾಧಿಕಾರಿ ಶಫಿ ಉಲ್ಲಾ ಹೇಳಿದರು.
    ಅವರು ತಾಲೂಕಿನ ಅರಬಿಳಿಚಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಮತ್ತು ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಪ್ರತಿಯೊಬ್ಬ ಮನುಷ್ಯನಿಗೂ ಪ್ರಾಣ ವಾಯು ಆಮ್ಲಜನಕ ಅತಿ ಅವಶ್ಯಕವಾಗಿದ್ದು, ಶುದ್ಧ ಆಮ್ಲಜನಿಕ ಪಡೆಯಲು ಸಸಿಗಳನ್ನು ಹೆಚ್ಚು ಹೆಚ್ಚಾಗಿ ನೆಡುವುದು ಅವಶ್ಯಕವಾಗಿದೆ ಎಂದರು.
    ಶಾಲೆಯ ಮುಖ್ಯ ಶಿಕ್ಷಕಿ ಶಕುಂತಲ, ಎಸ್‌ಡಿಎಂಸಿ ಅಧ್ಯಕ್ಷ ಆರ್. ವೀರಾಚಾರಿ ಹಾಗು ಮೇಲುಸ್ತುವಾರಿ ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಅರಣ್ಯ ಇಲಾಖೆ ಸಿಬ್ಬಂದಿಗಳು, ಶಾಲೆಯ ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



ಶಿಕ್ಷಣ ಸಮಾಜದ ಎಲ್ಲರನ್ನು ಒಳಗೊಂಡಿದೆ : ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ

 ಭದ್ರಾವತಿ ವಿದ್ಯಾಮಂದಿರ ಕಲ್ಪವೃಕ್ಷ ಸೇವಾ ಟ್ರಸ್ಟ್ ವತಿಯಿಂದ ಲಯನ್ಸ್ ಕ್ಲಬ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಮತ್ತು ಮಕ್ಕಳ ದಂತ ತಪಸಣಾ ಶಿಬಿರ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಉಚಿತ ನೋಟ್  ಪುಸ್ತಕ ಮತ್ತು ಲೇಖನ ಸಾಮಗ್ರಿ ವಿತರಿಸಿದರು.
    ಭದ್ರಾವತಿ, ಜೂ. ೧೮: ಶಿಕ್ಷಣ ಎಂದರೆ ಕೇವಲ ಮಕ್ಕಳು, ಶಿಕ್ಷಕರು ಹಾಗು ಪೋಷಕರ ನಡುವಿನ ಸಂಬಂಧವಲ್ಲ. ಶಿಕ್ಷಣ ಸಮಾಜದ ಎಲ್ಲರನ್ನು ಒಳಗೊಂಡಿದೆ ಎಂಬುದನ್ನು ಕೆಲವು ಸಂಘ-ಸಂಸ್ಥೆಗಳ ಮಾದರಿ ಕಾರ್ಯಗಳಿಂದ ತಿಳಿದು ಬರುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಹೇಳಿದರು.
    ಅವರು ಶನಿವಾರ ವಿದ್ಯಾಮಂದಿರ ಕಲ್ಪವೃಕ್ಷ ಸೇವಾ ಟ್ರಸ್ಟ್ ವತಿಯಿಂದ ಲಯನ್ಸ್ ಕ್ಲಬ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಮತ್ತು ಮಕ್ಕಳ ದಂತ ತಪಸಣಾ ಶಿಬಿರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಮಕ್ಕಳ ಶಿಕ್ಷಣಕ್ಕೆ ನೆರವಾಗಿ ಉಚಿತವಾಗಿ ನೋಟ್  ಪುಸ್ತಕ ಹಾಗು ಲೇಖನ ಸಾಮಗ್ರಿಗಳನ್ನು ವಿತರಿಸುತ್ತಿರುವುದು ಸಮಾಜಕ್ಕೆ ಮಾದರಿ ಕಾರ್ಯವಾಗಿದೆ. ಮಕ್ಕಳು ನೋಟ್ ಪುಸ್ತಕ ಹಾಗು ಲೇಖನ ಸಾಮಗ್ರಿಗಳ ಸದುಪಯೋಗ ಪಡೆದುಕೊಳ್ಳಬೇಕೆಂದರು.
    ಯುವ ಮುಖಂಡ ಗಣೇಶ್ ಮಾತನಾಡಿ, ಟ್ರಸ್ಟ್ ಮೂಲಕ ಸೇವಾ ಕಾರ್ಯದಲ್ಲಿ ತೊಡಗಿಕೊಂಡಿರುವ ಎಲ್ಲರ ಶ್ರಮ ಹೆಚ್ಚಿನದ್ದಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಕಾರ್ಯಗಳು ಇನ್ನೂ ಹೆಚ್ಚಾಗಿ ನಡೆಯುವಂತಾಗಲಿ ಎಂದರು.
    ಸುಬ್ಬಯ್ಯ ಡೆಂಟಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ದಂತ ತಪಾಸಣೆ ನಡೆಸಲಾಯಿತು.
    ಟ್ರಸ್ಟ್ ಅಧ್ಯಕ್ಷ ಲಾಜರ್, ಉಪಾಧ್ಯಕ್ಷ ರಾಮಪ್ಪ ವಿ. ಮುನೇನಕೊಪ್ಪ, ಪ್ರಧಾನ ಕಾರ್ಯದರ್ಶಿ, ನಗರಸಭಾ ಸದಸ್ಯ್ ಕಾಂತರಾಜ್, ಸಹ ಕಾರ್ಯದರ್ಶಿ ಎಚ್.ಪಿ ಶ್ರೀನಿವಾಸ್, ಕೋಶಾಧ್ಯಕ್ಷ ಮಹೇಶ್ವರಪ್ಪ, ನಿರ್ದೇಶಕರಾದ ವಿ.ಎಚ್ ಶಿವಣ್ಣ, ಎಸ್.ಎಚ್ ಹನುಮಂತರಾವ್, ಎಲ್. ಬಸವರಾಜಪ್ಪ, ಡಿ. ಸುಬ್ರಮಣಿ, ನಾಗರಾಜ್, ಆರ್. ಕಾಮಾಕ್ಷಿ, ಎನ್. ರೂಪ, ವಿಲ್ಸನ್ ಬಾಬು ಮತ್ತು ಕೆ. ಆಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Friday, June 17, 2022

ನಮ್ಮಗಳ ನಡುವೆ ವಿಷಬೀಜ ಬಿತ್ತಿ ದ್ವೇಷ ಹರಡುವ ಹುನ್ನಾರ : ಡಿ. ಮಂಜುನಾಥ್


ಭದ್ರಾವತಿ :  ಬಹು ಸಂಸ್ಕೃತಿ ಒಪ್ಪಿಕೊಂಡಿರುವ ನಾವೆಲ್ಲರೂ ಒಂದೇ ಎಂಬ ಭಾವನೆಯೊಂದಿಗೆ    ಬದುಕುತ್ತಿದ್ದು, ನಮ್ಮಗಳ ನಡುವೆ ವಿಷಬೀಜ ಬಿತ್ತಿ ದ್ವೇಷ ಹರಡುವ ಹುನ್ನಾರ ನಡೆಯುತ್ತಿದೆ. ಇದರ ಬಗ್ಗೆ ನಾವುಗಳು ಜಾಗೃತಿಕೊಂಡು ಹೋರಾಟ ನಡೆಸುವ ಅನಿವಾರ್ಯತೆ ನಿರ್ಮಾಣವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಹೇಳಿದರು. ಅವರು ಶುಕ್ರವಾರ ನಗರದ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಲ್ಲಿ ಕುಪ್ಪಳ್ಳಿಯಿಂದ ಬೆಂಗಳೂರು ಸ್ವಾತಂತ್ರ್ಯ ಉದ್ಯಾನವನಕ್ಕೆ  ಜಾಗೃತಿ ಜ್ಯೋತಿ ಪಯಣ  ಕುವೆಂಪು ವಿಶ್ವಮಾನವ ರಥ ಯಾತ್ರೆ ಸ್ವಾಗತ ಕೋರಿ ಮಾತನಾಡಿದರು.  ಇತ್ತೀಚಿನ ದಿನಗಳಲ್ಲಿ ಬಹುಸಂಸ್ಕೃತಿಯ ಬಹುತ್ವಕ್ಕೆ ಧಕ್ಕೆ ತರುವಂತಹ ಕೆಲಸಗಳು ನಡೆಯುತ್ತಿವೆ.  ಸೃಜನಾತ್ಮಕವಾಗಿ ಆಲೋಚಿಸುವವರ ವಿರುದ್ಧ ಷಡ್ಯಂತ್ರಗಳು ನಡೆಯುತ್ತಿವೆ. ಇದಕ್ಕೆ ಪೂರಕವೆಂಬಂತೆ ಇಂದಿನ ಸರ್ಕಾರ ಹಾಗು ಕೆಲವು ಶಕ್ತಿಗಳು  ನಡೆದುಕೊಳ್ಳುತ್ತಿರುವುದು ಖಂಡನೀಯ. ಇದರ ವಿರುದ್ಧ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವ ಅಗತ್ಯತವಿದೆ.  ಇದಕ್ಕೆ ಪೂರಕವೆಂಬಂತೆ ಕುವೆಂಪು ವಿಶ್ವಮಾನವ ರಥ ಯಾತ್ರೆ ನಡೆಯುತ್ತಿದ್ದು, ಇದರ ಹಿಂದಿನ ಆಶಯವನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕೆಂದು ಕರೆ ನೀಡಿದರು. ನಿವೃತ್ತ ಪ್ರಾಂಶುಪಾಲ ಕೃಷ್ಣಮೂರ್ತಿ ಮಾತನಾಡಿ,  ಇಂದಿನ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಕುವೆಂಪು ಅವರ ನಾಡಗೀತೆಯೊಂದಿಗೆ ಬುದ್ಧ, ಬಸವಣ್ಣ, ಮಹಾವೀರ, ಶಂಕರಾಚಾರ್ಯ, ಪೆರಿಯಾರ್, ಗಾಂಧಿ, ಕನಕದಾಸ, ಡಾ. ಬಿ.ಆರ್ ಅಂಬೇಡ್ಕರ್, ನಾರಾಯಣಗುರು ಅವರಿಗೂ ಅವಮಾನಗೊಳಿಸಿದೆ. ಈ ಹಿನ್ನೆಲೆಯಲ್ಲಿ  ಪರಿಷ್ಕೃತಗೊಂಡಿರುವ ಪಠ್ಯ ಪುಸ್ತಕಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.  ನಗರಸಭೆ ಅಧ್ಯಕ್ಷೆ ಗೀತಾ ರಾಜ್ ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸದಸ್ಯರಾದ ಆರ್. ಮೋಹನ್ ಕುಮಾರ್,   ಆರ್. ಶ್ರೇಯಸ್,  ಜಾರ್ಜ್,  ಲತಾ ಚಂದ್ರಶೇಖರ್ ಕಾಂತರಾಜು, ಸಾಹಿತಿ ಚಂದ್ರೇಗೌಡ, ಮುಖಂಡರಾದ ಬಿ.ಎಸ್ ಗಣೇಶ್ , ಅಭಿಲಾಷ್, ಚುಂಚಾದ್ರಿ ಮಹಿಳಾ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ , ತಾಲೂಕು ಒಕ್ಕಲಿಗರ ಮಹಿಳಾ ವೇದಿಕೆ ಅಧ್ಯಕ್ಷೆ  ಅನ್ನಪೂರ್ಣ ಸತೀಶ್, ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಟಿ ರವಿ, ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಅಧ್ಯಕ್ಷ ಕೋಡ್ಲು ಯಜ್ಞಯ್ಯ, ಬಿ.ಎಸ್.ಪಿ  ಪಕ್ಷದ ರಾಜೇಂದ್ರ, ವೆಂಕಟಯ್ಯ ಮಹಾಲಿಂಗಪ್ಪ, ಕಮಲಕರ  ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.  ನಾಡಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಏಕಾಏಕಿ ನೀರು ಸರಬರಾಜು ಸ್ಥಗಿತ : ಸುರಗಿತೋಪಿನಲ್ಲಿ ಕುಡಿಯುವ ನೀರಿನ ಸಮಸ್ಯೆ

ಜಯಶೀಲ ಸುರೇಶ್ ನೇತೃತ್ವದಲ್ಲಿ ವಿಐಎಸ್‌ಎಲ್ ಆಡಳಿತ ಮಂಡಳಿಗೆ ಮನವಿ


    ಭದ್ರಾವತಿ ನಗರಸಭೆ ವ್ಯಾಪ್ತಿಯ ವಾರ್ಡ್ ನಂ.೨೦ರ ಸುರಗಿತೋಪಿನಲ್ಲಿ ಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ವಿಐಎಸ್‌ಎಲ್ ಕಾರ್ಖಾನೆ ವತಿಯಿಂದ ಏಕಾಏಕಿ ನೀರು ಸರಬರಾಜು ಸ್ಥಗಿತಗೊಳಿಸಿರುವ ಹಿನ್ನಲೆಯಲ್ಲಿ ಇಲ್ಲಿನ ನಿವಾಸಿಗಳಿಗೆ ತೊಂದರೆಯಾಗಿದೆ. ತಕ್ಷಣ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ವಾರ್ಡ್ ಸದಸ್ಯೆ ಎಸ್. ಜಯಶೀಲ ಸುರೇಶ್ ನೇತೃತ್ವದಲ್ಲಿ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರಾ ಅವರಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಜೂ. ೧೭: ನಗರಸಭೆ ವ್ಯಾಪ್ತಿಯ ವಾರ್ಡ್ ನಂ.೨೦ರ ಸುರಗಿತೋಪಿನಲ್ಲಿ ಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ವಿಐಎಸ್‌ಎಲ್ ಕಾರ್ಖಾನೆ ವತಿಯಿಂದ ಏಕಾಏಕಿ ನೀರು ಸರಬರಾಜು ಸ್ಥಗಿತಗೊಳಿಸಿರುವ ಹಿನ್ನಲೆಯಲ್ಲಿ ಇಲ್ಲಿನ ನಿವಾಸಿಗಳಿಗೆ ತೊಂದರೆಯಾಗಿದೆ. ತಕ್ಷಣ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ವಾರ್ಡ್ ಸದಸ್ಯೆ ಎಸ್. ಜಯಶೀಲ ಸುರೇಶ್ ನೇತೃತ್ವದಲ್ಲಿ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರಾ ಅವರಿಗೆ ಮನವಿ ಸಲ್ಲಿಸಲಾಯಿತು.
    ಕಾರ್ಖಾನೆ ನಿರ್ಮಾಣ ಮಾಡುವ ಸಂದರ್ಭದಲ್ಲಿ ಸುರಗಿತೋಪಿನಲ್ಲಿ ಕಾರ್ಮಿಕರಿಗೆ ಶೆಡ್‌ಗಳನ್ನು ನಿರ್ಮಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿತ್ತು. ಆ ನಂತರ ಇಲ್ಲಿಯೇ ಕಾರ್ಮಿಕರು, ನಿವೃತ್ತ ಕಾರ್ಮಿಕರು ಮತ್ತು ಗುತ್ತಿಗೆ ಕಾರ್ಮಿಕರು ಹಾಗು ಅವರ ಕುಟುಂಬ ವರ್ಗದವರು ನೆಲೆ ನಿಂತಿದ್ದು, ಇಂದಿಗೂ ಇಲ್ಲಿಯೇ ವಾಸಿಸುತ್ತಿದ್ದಾರೆ. ಅಲ್ಲದೆ ಸುಮಾರು ೫೦ ವರ್ಷಗಳಿಂದ ಕಾರ್ಖಾನೆ ವತಿಯಿಂದ ಈ ಭಾಗಕ್ಕೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಇದೀಗ ಏಕಾಏಕಿ ನೀರು ಸರಬರಾಜು ಮಾಡುವುದನ್ನು ಸ್ಥಗಿತಗೊಳಿಸಲಾಗಿದೆ. ನಗರಸಭೆ ವತಿಯಿಂದ ಈ ಭಾಗಕ್ಕೆ ಇನ್ನೂ ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಕೈಗೊಂಡಿಲ್ಲ. ಇದರಿಂದಾಗಿ ಇಲ್ಲಿನ ನಿವಾಸಿಗಳು, ಜಾನುವಾರುಗಳು ಕುಡಿಯುವ ನೀರಿಗಾಗಿ ತೊಂದರೆ ಎದುರಿಸುವಂತಾಗಿದೆ ಎಂದು ಮನವಿಯಲ್ಲಿ ಅಳಲು ತೋರ್ಪಡಿಸಲಾಗಿದೆ.
    ಕಾರ್ಖಾನೆ ವತಿಯಿಂದ ದಿನಕ್ಕೆ ಕನಷ್ಠ ಪಕ್ಷ ಒಂದು ಗಂಟೆಯಾದರೂ ಕುಡಿಯುವ ಸರಬರಾಜು ಮಾಡುವ ಮೂಲಕ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸುವಂತೆ ಮನವಿ ಮಾಡಲಾಗಿದೆ.
    ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ನಗರಸಭಾ ಸದಸ್ಯೆ ಪಲ್ಲವಿ, ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟಿನ್ ಗೌರವಾಧ್ಯಕ್ಷ ರಾಮಕೃಷ್ಣ, ಪ್ರಮುಖರಾದ ಕ್ಲಬ್ ಸುರೇಶ್, ದಿಲೀಪ್, ಉಮೇಶ್ ಸುರಗಿತೋಪು, ನಂಜುಂಡಪ್ಪ, ಡಿ.ಟಿ ಶ್ರೀಧರ್, ಚೆನ್ನಿಗಪ್ಪ, ಲೋಕೇಶ್, ನಿರ್ಮಲಕುಮಾರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.