Monday, June 20, 2022

ಬಿಜೆಪಿ ಸರ್ಕಾರದ ದೌರ್ಜನ್ಯ ಮಿತಿಮೀರಿದೆ : ಬಿ.ಕೆ ಸಂಗಮೇಶ್ವರ್

ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಯ(ಇ.ಡಿ ಇಲಾಖೆ)ವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ಭದ್ರಾವತಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಜೂ. ೨೦: ಕೇಂದ್ರ ಹಾಗು ರಾಜ್ಯದಲ್ಲಿ ಬಿಜೆಪಿ ಸರ್ಕಾರದ ದೌರ್ಜನ್ಯ ಮಿತಿಮೀರಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರ ಕಳೆದುಕೊಳ್ಳುವುದು ಖಚಿತ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
    ಅವರು ಸೋಮವಾರ ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಯ(ಇ.ಡಿ ಇಲಾಖೆ)ವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
    ಇದೀಗ ೫-೧೦ ವರ್ಷ ಅಲ್ಪಾವಧಿ ಅಧಿಕಾರದಲ್ಲಿ ಬಿಜೆಪಿ ಪಕ್ಷಕ್ಕೆ ದೇಶ ಹಾಗು ರಾಜ್ಯದಲ್ಲಿ ಮರಳು ಭೂಮಿಯಲ್ಲಿ ನೀರು ಸಿಕ್ಕಿದಂತಾಗಿದೆ. ಇದರಿಂದಾಗಿ ಆಡಳಿತವನ್ನು ಮನದಂತೆ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅಧಿಕಾರ ಕಳೆದುಕೊಳ್ಳುವ ಭಯದಲಿ ಸರ್ಕಾರಿ ಇಲಾಖೆಗಳನ್ನು ದುರುಪಯೋಗಪಡಿಸಿಕೊಂಡು ದೌರ್ಜನ್ಯ ವೆಸಗುತ್ತಿದ್ದಾರೆಂದು ಆರೋಪಿಸಿದರು.
    ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಜನಸಾಮಾನ್ಯರಿಗೆ ಹಲವಾರು ಭರವಸೆಗಳನ್ನು ನೀಡಿದ್ದು, ಆದರೆ ಭರವಸೆಗಳು ಇದುವರೆಗೂ ಈಡೇರಿಲ್ಲ. ಅದರ ಬದಲು ಜನಸಾಮಾನ್ಯರು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುವಂತಾಗಿದೆ. ಇಂತಹ ಸರ್ಕಾರ ಎಂದಿಗೂ ಬೇಡ ಎಂಬ ಮನಸ್ಥಿತಿಗೆ ಜನಸಾಮಾನ್ಯರು ಬಂದು ಬಿಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದರು.
    ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ. ಚಂದ್ರೇಗೌಡ, ಎಚ್.ಎಲ್ ಷಡಾಕ್ಷರಿ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಪ್ರಮುಖರಾದ ಅಲ್ಪ ಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷೆ ಬಲ್ಕೀಶ್‌ಬಾನು, ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಮಾಜಿ ಅಧ್ಯಕ್ಷರಾದ ಬಿ.ಕೆ ಮೋಹನ್, ಬಿ.ಟಿ ನಾಗರಾಜ್,  ಸದಸ್ಯರಾದ ಜಾರ್ಜ್, ಬಿ.ಎಂ ಮಂಜುನಾಥ್, ಸೈಯದ್ ರಿಯಾಜ್, ಕಾಂತರಾಜ್, ಅನುಸುಧಾ ಮೋಹನ್, ಸರ್ವಮಂಗಳ ಭೈರಪ್ಪ ಮುಖಂಡರಾದ ಉದ್ಯಮಿ ಬಿ.ಕೆ ಜಗನ್ನಾಥ್, ಟಿ.ವಿ ಗೋವಿಂದಸ್ವಾಮಿ, ಎಸ್.ಎನ್ ಶಿವಪ್ಪ, ರಾಘವೇಂದ್ರ ಸರಾಟೆ, ಅಭಿಲಾಷ್, ಶಿವರಾಮ್, ಅಮಿರ್‌ಜಾನ್, ಚಂದ್ರಪ್ಪ, ಎಂ. ಶಿವಕುಮಾರ್, ಬಿ. ಗಂಗಾಧರ, ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಮಂಜಳಾ ರಾಮಚಂದ್ರ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಕಾರ್ಯಕರ್ತರು ಪಾಲ್ಗೊಂಡಿದ್ದರು.
    ರಂಗಪ್ಪ ವೃತ್ತದಿಂದ ತಾಲೂಕು ತಾಲೂಕು ಕಚೇರಿ ಮಿನಿವಿಧಾನಸೌಧದ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಮನವಿ ಸಲ್ಲಿಸಲಾಯಿತು.

ಅಂತರಾಷ್ಟ್ರೀಯ ಯೋಗ ದಿನಾಚರಣೆ : ಜಾಗೃತಿ ಜಾಥಾ

ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಸೋಮವಾರ ಭದ್ರಾವತಿ ಯೋಗ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಜೂ. ೨೦ : ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಸೋಮವಾರ ಯೋಗ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಹಳೇನಗರದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಆವರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಚಾಲನೆ ನೀಡಿದರು. ಜಾಥಾ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿತು.
     ನಗರಸಭೆ ಪೌರಾಯುಕ್ತ ಮನುಕುಮಾರ್, ಆಯುಷ್ ಇಲಾಖೆ ವೈದ್ಯರಾದ ಡಾ. ರವಿಶಂಕರ್, ಡಾ. ದಿವ್ಯಜ್ಯೋತಿ, ಡಾ. ಸುರೇಂದ್ರ, ಡಾ.ನರಸಿಂಹಮೂರ್ತಿ, ಡಾ. ವಿಜಯವಾಣಿ, ಡಾ. ವಿಜಯಲಕ್ಷ್ಮಿ, ಡಾ. ನಿರುಪಮಾ, ಯೋಗ ಸಂಯೋಜಕ ಮಹೇಂದ್ರ, ಗ್ರೇಡ್- ೨ ತಹಶೀಲ್ದಾರ್ ಪದ್ಮನಾಭ ಭಟ್, ದೈಹಿಕ ಶಿಕ್ಷಕರ ಮೇಲ್ವಿಚಾರಣಾಧಿಕಾರಿ ಪ್ರಭು, ಪತಂಜಲಿ ಯೋಗ ಸಮಿತಿಯ ಅನ್ನಪೂರ್ಣ ಸತೀಶ್, ಡಾ.ವೀಣಾ ಭಟ್, ಹಾ. ರಾಮಪ್ಪ, ಚನ್ನಪ್ಪ, ಜಂಗಮಪ್ಪ, ಎ.ಜಿನನಾಗರಾಜ್, ಮಲ್ಲಿಕಾರ್ಜುನ. ಸತ್ಯಣ್ಣ, ಸುಭಾಷ್, ಕೃಷ್ಣಮೂರ್ತಿ, ಗೌರಮ್ಮ, ಜಾನಕಮ್ಮ, ವಾಣಿಶ್ರೀ, ಕವಿತಾ, ಶ್ಯಾಮಲಾ ಹಾಗು ನಗರಸಭೆ, ಆಯುಷ್ ಇಲಾಖೆ, ತಾಲೂಕು ಕಚೇರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ :
    ಹಳೇನಗರದ ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಜೂ.೨೧ರಂದು ಬೆಳಿಗ್ಗೆ ೮ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
    ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯ ಹಾಗೂ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ರಾಷ್ಟ್ರೀಯ ಮತ್ತು ರಾಜ್ಯ ಪುರಾತತ್ವ ಸಂಗ್ರಹಾಲಯ ಮತ್ತು ಪಾರಂಪರಿಕ ಇಲಾಖೆ ಸಹಯೋಗದೊಂದಿಗೆ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದ್ದು, ಯಶಸ್ವಿಗೊಳಿಸುವಂತೆ ತಹಸೀಲ್ದಾರ್ ಆರ್. ಪ್ರದೀಪ್ ಕೋರಿದ್ದಾರೆ.

ಅಪ್ಪಾಜಿಯವರ ದಾರಿಯಲ್ಲಿ ಸಾಗಲು ನನಗೂ ಅವಕಾಶ ಸಹಕಾರ ನೀಡಿ : ಶಾರದ ಅಪ್ಪಾಜಿ

ಅಪ್ಪಾಜಿಯವರ ಜನ್ಮದಿನ ಅಂಗವಾಗಿ ಸೋಮವಾರ ಭದ್ರಾವತಿ ಜನ್ನಾಪುರ ರಾಜಪ್ಪ ಲೇಔಟ್‌ನಲ್ಲಿ ಜೆಡಿಎಸ್ ಪಕ್ಷದ ಮುಖಂಡರಾದ ರಾಧಾ ಪ್ರಭಾಕರ್ ನೇತೃತ್ವದಲ್ಲಿ ಅಪ್ಪಾಜಿ ಅಭಿಮಾನಿಗಳ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಬಡ ಮಹಿಳೆಯರಿಗೆ ಸೀರೆ ವಿತರಣೆ ಕಾರ್ಯಕ್ರಮವನ್ನು ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ ಉದ್ಘಾಟಿಸಿದರು.
    ಭದ್ರಾವತಿ, ಜೂ. ೨೦: ಕ್ಷೇತ್ರದ ಜನರ ಮೇಲೆ ದಿವಂಗತ ಎಂ.ಜೆ ಅಪ್ಪಾಜಿ ಅವರ ಆಶೀರ್ವಾದವಿದ್ದು, ಅವರ ದಾರಿಯಲ್ಲಿ ನಾನು ಸಹ ಸಾಗಲು ನಿಮ್ಮೆಲ್ಲರ ಸಹಕಾರವಿದೆ ಎಂದು ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ ಹೇಳಿದರು.
    ಅವರು ಸೋಮವಾರ ಅಪ್ಪಾಜಿಯವರ ಜನ್ಮದಿನ ಅಂಗವಾಗಿ ಜನ್ನಾಪುರ ರಾಜಪ್ಪ ಲೇಔಟ್‌ನಲ್ಲಿ ಜೆಡಿಎಸ್ ಪಕ್ಷದ ಮುಖಂಡರಾದ ರಾಧಾ ಪ್ರಭಾಕರ್ ನೇತೃತ್ವದಲ್ಲಿ ಅಪ್ಪಾಜಿ ಅಭಿಮಾನಿಗಳ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಬಡ ಮಹಿಳೆಯರಿಗೆ ಸೀರೆ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಪ್ಪಾಜಿಯವರ ಜನ್ಮದಿನದಂದು ಶಾಲಾ ಮಕ್ಕಳಿಗೆ ನೀಡಲಾಗುತ್ತಿರುವ ನೋಟ್ ಪುಸ್ತಕ ಸದ್ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.
    ಜೆಡಿಎಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ಮಧುಕುಮಾರ್, ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ನಗರಸಭಾ ಸದಸ್ಯರಾದ ನಾಗರತ್ನ, ರೂಪಾವತಿ, ಮುಖಂಡರಾದ ಗುಣಶೇಖರ್, ಡಿ.ಟಿ ಶ್ರೀಧರ್, ವಿಶಾಲಾಕ್ಷಿ, ಭಾಗ್ಯಮ್ಮ, ಡಿಎಸ್‌ಎಸ್ ಮುಖಂಡ ಜಿಂಕ್‌ಲೈನ್ ಮಣಿ ಹಾಗು ಅಪ್ಪಾಜಿ ಅಭಿಮಾನಿಗಳಾದ  ಆಟೋ ಅಪಲ, ಆಟೋ ಮೋಹನ್, ಕೃಷ್ಣಮೂರ್ತಿ, ಶಿವಕುಮಾರ್, ಪ್ರದೀಪ್(ಪುಟಾಣಿ), ಶಂಕರೇಗೌಡ, ಹಾಲಪ್ಪ, ಪುಟ್ಟ, ಕಿರಣ್, ಆಶಾರಾಜು, ಹೋಟೆಲ್ ವಿನೋದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಸಹ್ಯಾದ್ರಿ ಕನ್ನಡ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಸುಮಾರು ೩೦೦ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ಹಾಗು ೧೦೦ಕ್ಕೂ ಮಹಿಳೆಯರಿಗೆ ಸೀರೆಗಳನ್ನು ವಿತರಿಸಲಾಯಿತು.
    ಇದಕ್ಕೂ ಮೊದಲು ಶಾಲಾ ಮಕ್ಕಳು ಜನ್ನಾಪುರ ಮುಖ್ಯ ರಸ್ತೆಯಲ್ಲಿ ಕ್ಯಾಂಡಲ್ ಹಿಡಿದು ಮೆರವಣಿಗೆ ನಡೆಸಿದರು. ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು.
    ಕಿತ್ತೂರು ರಾಣಿ ಚನ್ನಮ್ಮ ಬಡಾವಣೆ, ರಾಜಪ್ಪ ಬಡಾವಣೆ, ಹಾಲಪ್ಪ ಶೆಡ್, ವೇಲೂರು ಶೆಡ್ ಸೇರಿದಂತೆ ಸುತ್ತಮುತ್ತಲಿನ ನಿವಾಸಿಗಳು, ಅಪ್ಪಾಜಿ ಅಭಿಮಾನಿಗಳು, ಶಾಲೆಯ ಶಿಕ್ಷಕರು, ಮಕ್ಕಳು ಭಾಗವಹಿಸಿದ್ದರು.


ಅಪ್ಪಾಜಿಯವರ ಜನ್ಮದಿನ ಅಂಗವಾಗಿ ಸೋಮವಾರ ಜನ್ನಾಪುರ ರಾಜಪ್ಪ ಲೇಔಟ್‌ನಲ್ಲಿ ಜೆಡಿಎಸ್ ಪಕ್ಷದ ಮುಖಂಡರಾದ ರಾಧಾ ಪ್ರಭಾಕರ್ ನೇತೃತ್ವದಲ್ಲಿ ಅಪ್ಪಾಜಿ ಅಭಿಮಾನಿಗಳ ವತಿಯಿಂದ  ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಬಡ ಮಹಿಳೆಯರಿಗೆ ಸೀರೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Sunday, June 19, 2022

ಕಾಯ್ದೆ ಜಾರಿ ಬಳಿಕವೂ ಹೆಚ್ಚುತ್ತಿದೆ ಗೋ ಹತ್ಯೆ

ವಿವಿಧೆಡೆ ಕಾರ್ಯಾಚರಣೆ ಗೋ ಮಾಂಸ ವಶ, ಗೋವುಗಳ ರಕ್ಷಣೆ


ಭದ್ರಾವತಿ ಹಳೇನಗರ ಪೊಲೀಸರು ನಗರಸಭೆ ವ್ಯಾಪ್ತಿಯ ಅನ್ವರ್ ಕಾಲೋನಿಯಲ್ಲಿ ಗೋ ಮಾಂಸ ಮರಾಟ ಮಾಡುತ್ತಿದ್ದ ಸ್ಥಳಗಳ ಮೇಲೆ ದಾಳಿ ನಡೆಸಿ ಹತ್ಯೆ ಮಾಡುವ ಉದ್ದೇಶಕ್ಕಾಗಿ ಅಕ್ರಮವಾಗಿ ಕೂಡಿ ಹಾಕಲಾಗಿದ್ದ ಗೋವುಗಳನ್ನು ರಕ್ಷಣೆ ಮಾಡಿರುವುದು.
    ಭದ್ರಾವತಿ, ಜೂ. ೧೯: ರಾಜ್ಯದಲ್ಲಿ ಗೋ ಹತ್ಯೆ ನಿಷೇಧಿಸಲಾಗಿದ್ದರೂ ಸಹ ಅಕ್ರಮವಾಗಿ ಗೋ ಹತ್ಯೆ ನಡೆಯುತ್ತಿದ್ದು, ಕಾಯ್ದೆ ಜಾರಿಗೊಂಡ ನಂತರವೂ ಸಹ ಅದರಲ್ಲೂ ಕ್ಷೇತ್ರದಲ್ಲಿ ಗೋ ಹತ್ಯೆ ವ್ಯಾಪಕವಾಗಿ ನಡೆಯುತ್ತಿರುವುದು ಇತ್ತೀಚಿನ ಕೆಲವು ಪ್ರಕರಣಗಳಿಂದ ಬಯಲಾಗುತ್ತಿದೆ.
    ಕೆಲವು ದಿನಗಳ ಹಿಂದೆ ಕೊಪ್ಪ ಪೊಲೀಸರು ಅಕ್ರಮವಾಗಿ ಗೋ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಸುಮಾರು ೪೫ ಕೆ.ಜಿ ಗೋ ಮಾಂಸ ವಶಪಡಿಸಿಕೊಂಡಿದ್ದಾರೆ. ಬಂಧಿತರು ಕ್ಷೇತ್ರದ ನಿವಾಸಿಗಳಾಗಿದ್ದು, ಕಳೆದ ಸುಮಾರು ೨ ವರ್ಷಗಳಿಂದ ನಿರಂತರವಾಗಿ ಗೋ ಮಾಂಸ ಮಾರಾಟದಲ್ಲಿ ತೊಡಗಿರುವುದು ತಿಳಿದು ಬಂದಿದೆ. ಅಲ್ಲದೆ ಗೋ ಮಾಂಸ ಸಾಗಟಕ್ಕೆ ದ್ವಿಚಕ್ರ ವಾಹನ ಬಳಕೆ ಮಾಡುತ್ತಿರುವುದು ಈ ಪ್ರಕರಣದಿಂದ ಬಯಲಾಗಿದೆ.
    ಶನಿವಾರ ತಾಲೂಕಿನ ಲಕ್ಷ್ಮೀಪುರದ ಬಳಿ ರೈಲ್ವೆ ಟ್ರಾಕ್ ಹತ್ತಿರ ಇಬ್ಬರು ವ್ಯಕ್ತಿಗಳು ಬಕ್ರೀದ್ ಹಬ್ಬಕ್ಕಾಗಿ ಬಲಿ ಕೊಡಲು ಹೋರಿ ಎತ್ತನ್ನು ಎಳೆದುಕೊಂಡು ಹೋಗುತ್ತಿದ್ದಾಗ ನ್ಯೂಟೌನ್ ಪೊಲೀಸರ ಕೈಗೆ ಸಿಕ್ಕಿ ಓರ್ವ ಬಿದ್ದಿದ್ದಾನೆ.
ಪೊಲೀಸರ ವಿಚಾರಣೆ ವೇಳೆ ಸತ್ಯಾಂಶ ಹೊರಬಿದ್ದಿದ್ದು, ಈ ಪ್ರಕರಣದ ಮತ್ತೊಬ್ಬ ವ್ಯಕ್ತಿ ಪರಾರಿಯಾಗಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
    ಭಾನುವಾರ ಬೆಳಿಗ್ಗೆ ನಗರಸಭೆ ವ್ಯಾಪ್ತಿಯ ಅನ್ವರ್ ಕಾಲೋನಿಯಲ್ಲಿ ಪೊಲೀಸರು ಅಕ್ರಮವಾಗಿ ಗೋ ಮಾಂಸ ಮಾರಾಟ ಮಾಡಲಾಗುತ್ತಿದ್ದ ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಸುಮಾರು ೫೦ ಕೆ.ಜಿ ಗೋ ಮಾಂಸ ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಹತ್ಯೆ  ಮಾಡುವ ಉದ್ದೇಶಕ್ಕಾಗಿ ಕೂಡಿ ಹಾಕಲಾಗಿದ್ದ ಸುಮಾರು ೨೯ ಗೋವುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಭದ್ರಾವತಿ ಹಳೇನಗರ ಪೊಲೀಸರು ನಗರಸಭೆ ವ್ಯಾಪ್ತಿಯ ಅನ್ವರ್ ಕಾಲೋನಿಯಲ್ಲಿ ಗೋ ಮಾಂಸ ಮರಾಟ ಮಾಡುತ್ತಿದ್ದ ಸ್ಥಳಗಳ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಂಡು ಬಂದ ದೃಶ್ಯ.

ಕ್ರಿಕೆಟ್ ಆಟವಾಡುವಾಗ ನಗರಸಭೆ ಹೊರಗುತ್ತಿಗೆ ಪೌರಕಾರ್ಮಿಕ ಸಾವು

ದಿನೇಶ್‌ರಾವ್
    ಭದ್ರಾವತಿ, ಜೂ. ೧೯: ನಗರಸಭೆ ವತಿಯಿಂದ ಭಾನುವಾರ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕ್ರೀಡಾ ಕೂಟದಲ್ಲಿ ಆಟವಾಡುತ್ತಿದ್ದಾಗ ಹೊರ ಗುತ್ತಿಗೆ ಪೌರಕಾರ್ಮಿಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
    ಹಳೇನಗರದ ಭೂತನಗುಡಿ ನಿವಾಸಿ ದಿನೇಶ್‌ರಾವ್(೩೮) ಮೃತಪಟ್ಟಿದ್ದು, ಪತ್ನಿ, ಇಬ್ಬರು ಮಕ್ಕಳನ್ನು ಹೊಂದಿದ್ದರು. ಕಳೆದ ಸುಮಾರು ೪ ವರ್ಷಗಳಿಂದ ನಗರದ ಬೈಪಾಸ್ ರಸ್ತೆ ಆನೇಕೊಪ್ಪದಲ್ಲಿರುವ ನಗರಸಭೆ ಜಲ ಸಂಗ್ರಹಗಾರದಲ್ಲಿ(ಪಂಪ್ ಹೌಸ್) ಹೊರ ಗುತ್ತಿಗೆ ಪೌರಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸಿದ್ದರು.
    ಕ್ರಿಕೆಟ್ ಆಟವಾಡುತ್ತಿದ್ದಾಗ ದಿನೇಶ್‌ರಾವ್ ಏಕಾಏಕಿ ಕುಸಿದು ಕೆಳಗೆ ಬಿದ್ದಿದ್ದು, ತಕ್ಷಣ ಸ್ಥಳದಲ್ಲಿಯೇ ಹಾಜರಿದ್ದ ಆರೋಗ್ಯ ಸಿಬ್ಬದಿ ತಪಾಸಣೆ ನಡೆಸಿದ್ದು ಮೃತಪಟ್ಟಿರುವುದನ್ನು ಖಚಿತ ಪಡಿಸಿದ್ದಾರೆ.  
    ದಿನೇಶ್‌ರಾವ್ ನಿಧನಕ್ಕೆ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪೌರಾಯುಕ್ತರು, ಪೌರಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಪೌರಕಾರ್ಮಿಕರು ಸಂತಾಪ ಸೂಚಿಸಿದ್ದಾರೆ.

ನಗರಸಭೆ ಸದಸ್ಯೆಯಾಗಿ ೧ ವರ್ಷ ಅಧಿಕಾರ ಪೂರೈಸಿದ ಶಶಿಕಲಾ ಬಿ.ಎಸ್ ನಾರಾಯಣಪ್ಪ

ಮನೆ ಮನೆಗಳಿಗೆ ತೆರಳಿ ನರೇಂದ್ರ ಮೋದಿಯವರ ೮ ವರ್ಷದ ಸಾಧನೆ ವಿವರಿಸಿದ ಸದಸ್ಯೆ


ಭದ್ರಾವತಿ ೫ನೇ ವಾರ್ಡಿನ ನಗರಸಭಾ ಸದಸ್ಯೆ ಶಶಿಕಲಾ ಬಿ.ಎಸ್ ನಾರಾಯಣಪ್ಪ ಪ್ರತಿ ಮನೆ ಮನೆಗೆ ತರಳಿ ಪ್ರಧಾನಿ ನರೇಂದ್ರ ಮೋದಿಯವರ ಸಾಧನೆಗಳನ್ನು ತಿಳಿಸಿದರು.
    ಭದ್ರಾವತಿ, ಜೂ. ೧೯ ; ನಗರಸಭೆ ಸದಸ್ಯೆಯಾಗಿ ೧ ವರ್ಷ ಪೂರೈಸಿದ ಹಿನ್ನಲೆಯಲ್ಲಿ ನಗರಸಭೆ ೫ನೇ ವಾರ್ಡಿನ ಸದಸ್ಯೆ ಶಶಿಕಲಾ ಬಿ.ಎಸ್ ನಾರಾಯಣಪ್ಪ ಭಾನುವಾರ ತಮ್ಮ ವಾರ್ಡಿನ ಮನೆ ಮನೆಗಳಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿಯವರ ೮ ವರ್ಷದ ಸಾಧನೆಗಳನ್ನು ತಿಳಿಸುವ ಮೂಲಕ ಜನರ ಆರ್ಶೀವಾದ ಪಡೆದುಕೊಂಡರು.
      ಹಳೇನಗರ ಭಾಗದ ದೊಡ್ಡಕುರುಬರ ಬೀದಿ, ಉಪ್ಪಾರರಬೀದಿ, ಬ್ರಾಹ್ಮಣರಬೀದಿ, ಮರಾಠ ಬೀದಿ, ರಥ ಬೀದಿ ರಸ್ತೆ ಹಾಗೂ ಕೋಟೆ ಏರಿಯಾ ಖಾಜಿಮೊಹಲ್ಲಾ, ಕನಕನಗರ ಸೇರಿದಂತೆ ಇನ್ನಿತರ ಭಾಗಗಳಲ್ಲಿ ಪ್ರತಿ ಮನೆಗೆ ತೆರಳಿದ ಅವರು ವಾರ್ಡಿನ ಸಮಸ್ಯೆಗಳನ್ನು ಆಲಿಸಿ ತಕ್ಷಣ ಪರಿಹರಿಸಿಕೊಡುವುದಾಗಿ ಭರವಸೆ ನೀಡಿದರು. ಮುಂದಿನ ದಿನಗಳಲ್ಲೂ ಬಿಜೆಪಿ ಪಕ್ಷವನ್ನು ಬೆಂಬಲಿಸಿ ನರೇಂದ್ರ ಮೋದಿಯವರಿಗೆ ಶಕ್ತಿ ತುಂಬುವಂತೆ ಮನವಿ ಮಾಡಿದರು.
    ಪಕ್ಷದ ಪ್ರಮುಖರಾದ ನಾರಾಯಣಪ್ಪ, ಕೃಷ್ಣಾನಂದರಾಯ್ಕರ್, ತಾರಾಬಾಯಿ ಶಿವಾಜಿರಾವ್, ವೀಣಾ ಪರಶುರಾಮ್, ಆಯಿಶಾ ಪಾಷಾ, ದಾದು, ಮುನ್ನ, ವಿಶ್ವನಾಥ್‌ರಾವ್, ಹೇಮಾವತಿ, ಭಾರತಿ, ಕೃಷ್ಣಪ್ಪ, ನಾಗರಾಜ್ ಸೇರಿದಂತೆ ಇನ್ನಿತರರಿದ್ದರು.

ಗಾಣಿಗ ಸಮಾಜ ಸಂಘಟಿತವಾಗಲಿ : ಬಿ.ಕೆ ಮೋಹನ್

ಭದ್ರಾವತಿ ಹಳೇನಗರದ ನಗರದ ವೀರಶೈವ ಸಭಾ ಭವನದಲ್ಲಿ ಭಾನುವಾರ ತಾಲೂಕು ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಸಭೆ ನಡೆಯಿತು.
    ಭದ್ರಾವತಿ, ಜೂ. ೧೯: ಕ್ಷೇತ್ರದಲ್ಲಿ ಅಲ್ಪ ಪ್ರಮಾಣದಲ್ಲಿರುವ ಗಾಣಿಗ ಸಮುದಾಯದವರು ಹೆಚ್ಚು ಸಂಘಟಿತವಾಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಶಕ್ತಿ ಮೀರಿ ಶ್ರಮಿಸಬೇಕೆಂದು ತಾಲೂಕು ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ನೂತನ ಗೌರವಾಧ್ಯಕ್ಷ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಹೇಳಿದರು.
    ಅವರು ಭಾನುವಾರ ಹಳೇನಗರದ ನಗರದ ವೀರಶೈವ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
    ಮೊದಲು ನಮ್ಮ ಸಮುದಾಯ ಬೆಳವಣಿಗೆ ಹೊಂದಬೇಕು. ಈ ನಿಟ್ಟಿನಲ್ಲಿ ಚಿಂತಿಸಿ ಸಂಘಟಿಸುವವರ ಅಗತ್ಯವಿದೆ. ಸಮುದಾಯದಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ನಾವು ಸಮಾಜದ ಇತರೆ ಸಮುದಾಯಗಳೊಂದಿಗೆ ಸಮಾನವಾಗಿ ಗುರುತಿಸಿಕೊಳ್ಳುವಂತಾಗಬೇಕೆಂದರು.
    ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಿ. ವಿಜಯ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಬಿ.ಕೆ ಜಗನ್ನಾಥ್, ಸಂಘದ ಜಿಲ್ಲಾ ಪ್ರಮುಖರಾದ ಮಾಜಿ ಅಧ್ಯಕ್ಷರಾದ ಎಸ್.ಎಸ್ ರುದ್ರಮುನಿ ಸಜ್ಜನ್, ಕೆ.ವಿ ಸಜ್ಜನ್ ಶೆಟ್ಟರ್, ಮಾಜಿ ಪ್ರಧಾನ ಕಾರ್ಯದರ್ಶಿ ಎ. ಅಶೋಕ್, ಜಿಲ್ಲಾ ಉಪಧ್ಯಕ್ಷ ಎನ್.ಬಿ ರಾಜಶೇಖರ್, ಕಾರ್ಯದರ್ಶಿ ಎಂ.ಆರ್ ಕಿರಣ್‌ಕುಮಾರ್, ಖಜಾಂಚಿ ಎ.ಎಸ್ ರವಿ, ನಿರ್ದೇಶಕರಾದ ಕೆ.ಪಿ ರವೀಶ್, ಸಿ.ಎಸ್ ಚನ್ನಬಸವರಾಜ್, ರೇಖಾ ರಾಜ್‌ಶೇಖರ್, ಚನ್ನವೀರೇಶ್, ಸುಜಾತ, ಬಸವರಾಜ್ ಹೊಸಮನಿ, ಮಹೇಶ್‌ಕುಮಾರ್, ಸಿ.ಎಂ ಬಸವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ವಾಗೀಶ್ ಕೋಠಿ ನಿರೂಪಿಸಿದರು.
    ನೂತನ ಪದಾಧಿಕಾರಿಗಳು :
    ತಾಲೂಕು ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ನೂತನ ಗೌರವಾಧ್ಯಕ್ಷರಾಗಿ ಬಿ.ಕೆ ಮೋಹನ್, ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಟಿ.ಎಸ್ ಆನಂದಕುಮಾರ್, ಉಪಾಧ್ಯಕ್ಷರಾಗಿ ಎಂ. ಮಹಾದೇವಪ್ಪ, ಜೆ. ನಂದೀಶ್, ಕಾರ್ಯದರ್ಶಿಯಾಗಿ ಶಿವಾನಂದ, ನಿರ್ದೇಶಕರಾಗಿ ನಾಗರಾಜ, ಪ್ರದೀಪ್, ಜಿ.ಕೆ ವೀರೇಶ್, ಜಿ.ಪಿ ಚನ್ನೇಶ್ ಹಾಗು ಮಹಿಳಾ ನಿರ್ದೇಶಕರಾಗಿ ರೇಣುಕ ರುದ್ರೇಶ್ ಆಯ್ಕೆಯಾದರು.


ಭದ್ರಾವತಿ ತಾಲೂಕು ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಟಿ.ಎಸ್ ಆನಂದಕುಮಾರ್ ಭಾನುವಾರ ನಡೆದ ಸಭೆಯಲ್ಲಿ ಆಯ್ಕೆಯಾದರು.