ಭದ್ರಾವತಿ ವಿಐಎಸ್ಎಲ್ ಕಾರ್ಖಾನೆ ನೂತನ ಕಾರ್ಯಪಾಲಕ ನಿರ್ದೇಶಕರಾಗಿ ನೇಮಕಗೊಂಡ ಬಿ.ಎಲ್. ಚಂದ್ವಾನಿ ಅವರಿಗೆ ಸುರಜಿತ್ ಮಿಶ್ರ ಅಧಿಕಾರ ಹಸ್ತಾಂತರಿಸಿದರು.
ಭದ್ರಾವತಿ, ಜೂ. ೨೩ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ತನ್ನ ಇತಿಹಾಸದ ವೈಭವನ ಮರಳಿ ಪಡೆಯುವ ನಿಟ್ಟಿನಲ್ಲಿ ಎಲ್ಲರೂ ಶಕ್ತಿ ಮೀರಿ ಶ್ರಮಿಸುವ ಅಗತ್ಯವಿದ್ದು, ಎಲ್ಲರೂ ಸಹಕಾರ ನೀಡುವಂತೆ ಕಾರ್ಖಾನೆ ನೂತನ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಮನವಿ ಮಾಡಿದರು.
ಅವರು ಗುರುವಾರ ಕಾರ್ಖಾನೆಯಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದರು. ಪ್ರಾಯೋಗಿಕ ಮತ್ತು ಸಕಾರಾತ್ಮಕ ದೃಷ್ಠಿಕೋನವನ್ನು ಹೊಂದಿರುವ ಆಶಾವಾದದ ವ್ಯಕ್ತಿಯಾಗಿದ್ದು, ಪ್ರಸ್ತುತ ಕಾರ್ಖಾನೆ ಎದುರಿಸುತ್ತಿರುವ ಸವಾಲನ್ನು ಸಮರ್ಥವಾಗಿ ನಿಭಾಯಿಸುವ ವಿಶ್ವಾಸ ಹೊಂದಿದ್ದೇನೆ. ಕಾರ್ಖಾನೆಯ ಸಾಮರ್ಥ್ಯ, ಅದರ ಬೃಹತ್ ಉತ್ಪನ್ನ ಮಿಶ್ರಣ, ಸಮರ್ಥ ಮಾನವ ಸಂಪನ್ಮೂಲ, ಗುಣಮಟ್ಟದ ಉತ್ಪನ್ನಗಳನ್ನು ಬಳಸಿಕೊಂಡು ಪ್ರಗತಿ ಹೊಂದಬೇಕಾಗಿದೆ. ಲಭ್ಯವಿರುವ ಅವಕಾಶಗಳನ್ನು ಬಳಸಿಕೊಳ್ಳಲು ಮತ್ತು ಕಾರ್ಖಾನೆಯನ್ನು ಅದರ ಹಿಂದಿನ ವೈಭವಕ್ಕೆ ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕಾಗಿದೆ ಎಂದರು.
. ಮುಖ್ಯ ಮಹಾಪ್ರಬಂಧಕರು (ಸ್ಥಾವರ), ಪ್ರಭಾರಿ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರ ಅವರಿಂದ ಅಧಿಕಾರ ಸ್ವೀಕರಿಸಿದರು. ಕಾರ್ಖಾನೆಯ ವಿವಿಧ ವಿಭಾಗಗಳ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.