Friday, June 24, 2022

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ : ಸಿ.ಎಸ್ ಷಡಾಕ್ಷರಿ

ಭದ್ರಾವತಿ ಸೈಂಟ್ ಚಾರ್ಲ್ಸ್ ಕನ್ನಡ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗು ಪದನಿಮಿತ್ತ ಬ್ಲಾಕ್ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ಮತ್ತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘ ತಾಲೂಕು ಶಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗುರುಸ್ಪಂದನ ಕಾರ್ಯಕ್ರಮವನ್ನು  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಉದ್ಘಾಟಿಸಿದರು.
    ಭದ್ರಾವತಿ, ಜೂ. ೨೪ : ಶಿಕ್ಷಕ ವೃತ್ತಿಯಲ್ಲಿ ತೊಡಗಿರುವವರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಹೇಳಿದರು.
    ಅವರು ಶುಕ್ರವಾರ ನಗರ ಸೈಂಟ್ ಚಾರ್ಲ್ಸ್ ಕನ್ನಡ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗು ಪದನಿಮಿತ್ತ ಬ್ಲಾಕ್ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ಮತ್ತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘ ತಾಲೂಕು ಶಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗುರುಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಈಗಾಗಲೇ ಶಿಕ್ಷಕರ ಬಹುತೇಕ ಬೇಡಿಕೆಗಳು ಈಡೇರಿಸಿ ಕೊಡುವಲ್ಲಿ ಸಂಘ ಯಶಸ್ವಿಯಾಗಿದ್ದು, ಶಿಕ್ಷಕರ ಬಹುತೇಕ ಕೆಲಸಗಳು ಆನ್‌ಲೈನ್ ವ್ಯವಸ್ಥೆಯಲ್ಲಿ ನಡೆಯುತ್ತಿದೆ. ವೇತನ ಸಂಬಂಧ ಉಂಟಾಗಿದ್ದ ಸಮಸ್ಯೆ ಸಹ ಬಗೆ ಹರಿದಿದ್ದು, ಶಿಕ್ಷಕರ ಮೊಬೈಲ್‌ಗಳಿಗೆ ಮಾಹಿತಿ ಬರುವಂತಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಬೇಡಿಕೆಗಳನ್ನು ಈಡೇರಿಸಿಕೊಡುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಲಾಗುವುದು ಎಂದರು.
    ಶಿಕ್ಷಕರ ಬಹುದಿನಗಳ ಬೇಡಿಕೆಯಂತೆ ನೂತನ ಗುರುಭವನ ನಿರ್ಮಾಣಕ್ಕೆ ಈಗಾಗಲೇ ೨ ಕೋ. ರು. ಅನುದಾನ ಬಿಡುಗಡೆಯಾಗಿದ್ದು, ಭವನದ ಕಾಮಗಾರಿ ಶೀಘ್ರದಲ್ಲಿಯೇ ಆರಂಭಗೊಳ್ಳಲಿದೆ ಎಂದರು.
    ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಟಿ. ಪೃಥ್ವಿರಾಜ್ ಮಾತನಾಡಿ, ರಾಜ್ಯಾಧ್ಯಕ್ಷರಾದ ಸಿ.ಎಸ್ ಷಡಾಕ್ಷರಿಯವರು ಶಿಕ್ಷಕರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುತ್ತಿದ್ದಾರೆ. ಇದರಿಂದಾಗಿ ಹಲವಾರು ಬೇಡಿಕೆಗಳು ಈಡೇರುವಂತಾಗಿದೆ. ಪ್ರಸ್ತುತ ನೂತನ ಪಿಂಚಣಿ ವ್ಯವಸ್ಥೆಯನ್ನು ಬದಲಿಸಿ ಹಳೇ ವ್ಯವಸ್ಥೆಯನ್ನೇ ಮುಂದುವರೆಸುವಂತೆ ಸರ್ಕಾರಕ್ಕೆ ಒತ್ತಾಯಿಸುವಂತೆ ಮನವಿ ಮಾಡಿದರು.
    ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ಸಿ.ಆರ್ ಪರಮೇಶ್ವರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಆರ್. ಮೋಹನ್‌ಕುಮಾರ್, ಸಹ ಕಾರ್ಯದರ್ಶಿ ಸುಮತಿ, ತಾಲೂಕು ಶಾಖೆ ಅಧ್ಯಕ್ಷ ಬಿ. ಸಿದ್ದಬಸಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಡಿ.ಬಿ ರುದ್ರಪ್ಪ, ಪ್ರಧಾನ ಕಾರ್ಯದರ್ಶಿ ಶ್ರೀಧರಗೌಡ, ಸುಮತಿ, ಚಿತ್ರ, ಬಸವಂತರಾವ್ ದಾಳೆ, ಯು. ಮಹಾದೇವಪ್ಪ, ರೇವಣಪ್ಪ, ರಾಜು, ಮಲ್ಲಿಕಾರ್ಜುನ್, ಆನಂದ್, ಮಾಯಮ್ಮ, ಜ್ಯೋತಿ, ಎ. ತಿಪ್ಪೇಸ್ವಾಮಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನವೀದ್ ಅಹಮದ್, ಶಿಕ್ಷಣ ಸಂಯೋಜಕ ರವಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ತಾಲೂಕಿನ ಪ್ರಾಥಮಿಕ ಶಾಲೆಗಳ ಶಿಕ್ಷಕರು ಹಾಗು ಶಿಕ್ಷಣ ಇಲಾಖೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಎಸ್.ಕೆ ಮೋಹನ್ ಸ್ವಾಗತಿಸಿದರು.

ಲಯನ್ಸ್ ಕ್ಲಬ್ ನೂತನ ಅಧ್ಯಕ್ಷ ಎ.ಎನ್ ಕಾರ್ತಿಕ್ : ಜೂ.೨೫ರಂದು ಪದಗ್ರಹಣ

ಭದ್ರಾವತಿ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷ ಎ.ಎನ್ ಕಾರ್ತಿಕ್
    ಭದ್ರಾವತಿ, ಜೂ. ೨೪ : ನಗರದ ಲಯನ್ಸ್ ಕ್ಲಬ್ ಪ್ರಸ್ತಕ ಸಾಲಿನ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಎ.ಎನ್ ಕಾರ್ತಿಕ್ ಆಯ್ಕೆಯಾಗಿದ್ದು, ಜೂ.೨೫ರಂದು ಸಂಜೆ ೭ ಗಂಟೆಗೆ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪದಗ್ರಹಣ ಸ್ವೀಕರಿಸಲಿದ್ದಾರೆ.
    ಎ.ಎನ್ ಕಾರ್ತಿಕ್ ಹಿರಿಯ ನ್ಯಾಯವಾದಿ ದಿವಂಗತ ಎ.ಬಿ ನಂಜಪ್ಪ ಹಾಗು ಲೋಹಿತಾ ದಂಪತಿ ಪುತ್ರರಾಗಿದ್ದು, ಈ ಹಿಂದೆ ಕ್ಲಬ್ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೆ ಪ್ರಸ್ತುತ ತಾಲೂಕು ಒಕ್ಕಲಿಗರ ಸಂಘದ ಖಜಾಂಚಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
    ಉಳಿದಂತೆ ದೈವಜ್ಞ ಬ್ರಾಹ್ಮಣ ಸಂಘದ ಎಂ. ನಾಗರಾಜ ಶೇಟ್ ಕಾರ್ಯದರ್ಶಿಯಾಗಿ ಹಾಗು ಜಿ.ಪಿ ದರ್ಶನ್ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ.
    ಲಯನ್ಸ್ ಕ್ಲಬ್ ೨ನೇ ಜಿಲ್ಲಾ ಉಪ ಗೌರ್ವನರ್ ಮಹಮದ್ ಹನೀಫ್ ಪದಗ್ರಹಣ ಬೋಧಿಸಲಿದ್ದು, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಉಪಸ್ಥಿತರಿರುವರು.

ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ತಾಲೂಕು ಅಧ್ಯಕ್ಷರಾಗಿ ಜಿ. ಸುರೇಶಯ್ಯ

ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಭದ್ರಾವತಿ ತಾಲೂಕು ಅಧ್ಯಕ್ಷರಾಗಿ ನಗರಸಭೆ ಮಾಜಿ ಸದಸ್ಯ ಜಿ. ಸುರೇಶಯ್ಯ ಆಯ್ಕೆಯಾಗಿದ್ದು, ಈ ಸಂಬಂಧ ಹಮ್ಮಿಕೊಳ್ಳಲಾಗಿದ್ದ ಅಧಿಕಾರ ಸ್ವೀಕರ ಸಮಾರಂಭವನ್ನು ಬಿಳಿಕಿ ಹಿರೇಮಠದ ಪೀಠಾಧ್ಯಕ್ಷರು ಹಾಗು ಮಹಾಸಭಾ ಗೌರವಾಧ್ಯಕ್ಷರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ಉದ್ಘಾಟಿಸಿದರು.
    ಭದ್ರಾವತಿ, ಜೂ. ೨೪: ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ತಾಲೂಕು ಅಧ್ಯಕ್ಷರಾಗಿ ನಗರಸಭೆ ಮಾಜಿ ಸದಸ್ಯ ಜಿ. ಸುರೇಶಯ್ಯ ಆಯ್ಕೆಯಾಗಿದ್ದು, ಬಿಳಿಕಿ ಹಿರೇಮಠದ ಪೀಠಾಧ್ಯಕ್ಷರು ಹಾಗು ಮಹಾಸಭಾ ಗೌರವಾಧ್ಯಕ್ಷರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು.
    ಜಿಲ್ಲಾಧ್ಯಕ್ಷ ರುದ್ರಮನಿ ಸಜ್ಜನ್, ನಿಕಟಪೂರ್ವ ತಾಲೂಕು ಅಧ್ಯಕ್ಷೆ ನಂದಿನಿ ಮಲ್ಲಿಕಾರ್ಜುನ್, ಚುನಾವಣಾಧಿಕಾರಿ ಭುವನೇಶ್ವರ್, ತಾಲೂಕು ಘಟಕದ ಖಜಾಂಚಿ ಮೂರ್ತಿ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ತಾಲೂಕು ಘಟಕದ ಪದಾಧಿಕಾರಿಗಳು, ಮಹಿಳಾ ಘಟಕ ಹಾಗೂ ಯುವ ಘಟಕದ ಪದಾಧಿಕಾರಿಗಳು, ಸಮಾಜದ ಹಿರಿಯರು, ಹಿತೈಷಿಗಳು ಪಾಲ್ಗೊಂಡು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.
    ಪ್ರಧಾನ ಕಾರ್ಯದರ್ಶಿ ರವಿ ಕಾರ್ಯಕ್ರಮ ನಿರೂಪಿಸಿದರು. ಜನ್ನಾಪುರ ಜಗದೀಶ್ ಪ್ರಾಸ್ತವಿಕ ನುಡಿಗಳನ್ನಾಡಿದರು. ಕೂಡ್ಲಿಗೆರೆ ರುದ್ರೇಶ್ ವಂದಿಸಿದರು. ಅಥ್ಲೆಟಿಕ್ ಕ್ರೀಡಾಪಟು ಪರಮೇಶ್ವರ್ ಅವರನ್ನು ಸನ್ಮಾನಿಸಲಾಯಿತು.

Thursday, June 23, 2022

ತಾಲೂಕು ಒಕ್ಕಲಿಗರ ಸಂಘ ಕೆಲವರ ವೈಯಕ್ತಿಕ ಹಿತಾಸಕ್ತಿಗೆ ಸೀಮಿತ : ಅಸಮಾಧಾನ

ಭದ್ರಾವತಿ ತಾಲೂಕಿನ ಒಕ್ಕಲಿಗ ಕುಲಬಾಂಧವರ ಸ್ನೇಹ ಸಮ್ಮಿಲನ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ನಡೆಯಿತು. 

    ಭದ್ರಾವತಿ, ಜೂ. ೨೩:  ಕ್ಷೇತ್ರದಲ್ಲಿ ಒಕ್ಕಲಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಸಹ ಕೆಲವರ ವೈಯಕ್ತಿಕ ಹಿತಾಸಕ್ತಿಯಿಂದಾಗಿ ಇನ್ನೂ ಸಂಘಟಿತರಾಗಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಎಲ್ಲರನ್ನು ಒಗ್ಗೂಡಿಸುವ ಕೆಲಸ ನಡೆಯಬೇಕೆಂದು ಒಕ್ಕಲಿಗ ಸಮುದಾಯದ ಮುಖಂಡರು ಆಗ್ರಹಿಸಿದರು.
    ತಾಲೂಕಿನ ಒಕ್ಕಲಿಗ ಕುಲಬಾಂಧವರ ಸ್ನೇಹ ಸಮ್ಮಿಲನ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಪ್ರಮುಖರಾದ ಆಟೋ ಚಾಲಕರ ಸಂಘದ ಅಧ್ಯಕ್ಷ ಲಕ್ಷ್ಮಣ, ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ, ರಮೇಶ್, ನಾಗರಾಜ್ ದೊಡ್ಡಗೊಪ್ಪೇನಹಳ್ಳಿ ಸೇರಿದಂತೆ ಇನ್ನಿತರರು ಮಾತನಾಡಿ, ಕ್ಷೇತ್ರದಲ್ಲಿ ಒಕ್ಕಲಿಗರು ಸುಮಾರು ೩೫ ಸಾವಿರ ಜನಸಂಖ್ಯೆ ಹೊಂದಿದ್ದರೂ ಸಹ ಇದುವರೆಗೂ ಸರಿಯಾಗಿ ಸಂಘಟಿತರಾಗಲು ಸಾಧ್ಯವಾಗಿಲ್ಲ. ರಾಜ್ಯದೆಲ್ಲೆಡೆ ಒಕ್ಕಲಿಗರು ಪ್ರಬಲರಾಗಿದ್ದು, ರಾಜಕೀಯವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸದೃಢಗೊಂಡಿದ್ದಾರೆ.  ಆದರೆ ಕ್ಷೇತ್ರದಲ್ಲಿ ಮಾತ್ರ ಒಕ್ಕಲಿಗರು ಸಂಘಟಿತರಾಗದ ಹಿನ್ನಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದರು.
    ತಾಲೂಕು ಒಕ್ಕಲಿಗರ ಸಂಘ ಕೆಲವರ ಹಿತಾಸಕ್ತಿಗೆ ಮಾತ್ರ ಸೀಮಿತವಾಗಿದ್ದು, ಕುಲ ಬಾಂಧವರ ಹಿತಾಸಕ್ತಿಯನ್ನು ಕಡೆಗಣಿಸಲಾಗುತ್ತಿದೆ. ಇದುವರೆಗೂ ಒಂದು ಸುಸಜ್ಜಿತವಾದ ಸಮುದಾಯ ಭವನ ಹೊಂದಲು ಸಾಧ್ಯವಾಗಿಲ್ಲ. ಅಲ್ಲದೆ ಕಡು ಬಡವರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಸರ್ಕಾರದ ಅನುದಾನ, ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವಲ್ಲಿ ತಾಲೂಕು ಒಕ್ಕಲಿಗರ ಸಂಘ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ಒಕ್ಕಲಿಗರು ಎಂದರೆ ಸಮಾಜದ ಎಲ್ಲರೊಂದಿಗೂ ಬೆರೆತು ಸಾಗುವವರು ಎಂಬುದನ್ನು ಅರಿತುಕೊಳ್ಳಬೇಕು. ಇತರೆ ಸಮುದಾಯವನ್ನು ತಿರಸ್ಕರಿಸಿ ಮುಂದೆ ಸಾಗುವುದು ಅಸಾಧ್ಯ. ಎಲ್ಲರನ್ನು ಒಗ್ಗೂಡಿಸಿಕೊಂಡು ಮುನ್ನಡೆಯಬೇಕು. ಸರ್ಕಾರದ ಅನುದಾನ, ಸೌಲಭ್ಯಗಳನ್ನು ತಿರಸ್ಕರಿಸುವುದು ಸರಿಯಲ್ಲ. ಒಕ್ಕಲಿಗ ಸಮುದಾಯದಲ್ಲೂ ಕಡು ಹಾಗು ಮಧ್ಯಮ ವರ್ಗದವರಿದ್ದಾರೆ. ಅವರನ್ನು ಸಹ ಅರ್ಥಿಕವಾಗಿ, ಶೈಕ್ಷಣಿಕವಾಗಿ ಎಲ್ಲಾ ರೀತಿಯಿಂದಲೂ ಅಭಿವೃದ್ಧಿಪಡಿಸುವಂತಾಗಬೇಕು. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕುಲಬಾಂಧವರು ಎಚ್ಚೆತ್ತುಕೊಂಡು ಸಂಘಟಿತರಾಗಬೇಕೆಂದರು.
    ಸೋಮಶೇಖರ್ ಸಂಕ್ಲಿಪುರ, ಶಿವಣ್ಣ ಕಲ್ಲಹಳ್ಳಿ, ಸಂದೇಶ್‌ಗೌಡ, ಸುಹಾಸ್ ಗೌಡ, ಮುಳ್ಕೆರೆ ಲೋಕೇಶ್ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು.

ವಿಐಎಸ್‌ಎಲ್ ಇತಿಹಾಸದ ವೈಭವ ಮರಳಿ ಪಡೆಯಲು ಸಹಕರಿಸಿ : ಬಿ.ಎಲ್ ಚಂದ್ವಾನಿ

ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ನೂತನ ಕಾರ್ಯಪಾಲಕ ನಿರ್ದೇಶಕರಾಗಿ ನೇಮಕಗೊಂಡ ಬಿ.ಎಲ್. ಚಂದ್ವಾನಿ ಅವರಿಗೆ ಸುರಜಿತ್ ಮಿಶ್ರ ಅಧಿಕಾರ ಹಸ್ತಾಂತರಿಸಿದರು.
    ಭದ್ರಾವತಿ, ಜೂ. ೨೩ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ತನ್ನ ಇತಿಹಾಸದ ವೈಭವನ ಮರಳಿ ಪಡೆಯುವ ನಿಟ್ಟಿನಲ್ಲಿ ಎಲ್ಲರೂ ಶಕ್ತಿ ಮೀರಿ ಶ್ರಮಿಸುವ ಅಗತ್ಯವಿದ್ದು, ಎಲ್ಲರೂ ಸಹಕಾರ ನೀಡುವಂತೆ ಕಾರ್ಖಾನೆ ನೂತನ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಮನವಿ ಮಾಡಿದರು.
    ಅವರು ಗುರುವಾರ ಕಾರ್ಖಾನೆಯಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದರು. ಪ್ರಾಯೋಗಿಕ ಮತ್ತು ಸಕಾರಾತ್ಮಕ ದೃಷ್ಠಿಕೋನವನ್ನು ಹೊಂದಿರುವ ಆಶಾವಾದದ ವ್ಯಕ್ತಿಯಾಗಿದ್ದು, ಪ್ರಸ್ತುತ ಕಾರ್ಖಾನೆ ಎದುರಿಸುತ್ತಿರುವ ಸವಾಲನ್ನು ಸಮರ್ಥವಾಗಿ ನಿಭಾಯಿಸುವ ವಿಶ್ವಾಸ ಹೊಂದಿದ್ದೇನೆ. ಕಾರ್ಖಾನೆಯ ಸಾಮರ್ಥ್ಯ, ಅದರ ಬೃಹತ್ ಉತ್ಪನ್ನ ಮಿಶ್ರಣ, ಸಮರ್ಥ ಮಾನವ ಸಂಪನ್ಮೂಲ, ಗುಣಮಟ್ಟದ ಉತ್ಪನ್ನಗಳನ್ನು ಬಳಸಿಕೊಂಡು ಪ್ರಗತಿ ಹೊಂದಬೇಕಾಗಿದೆ.  ಲಭ್ಯವಿರುವ ಅವಕಾಶಗಳನ್ನು ಬಳಸಿಕೊಳ್ಳಲು ಮತ್ತು ಕಾರ್ಖಾನೆಯನ್ನು ಅದರ ಹಿಂದಿನ ವೈಭವಕ್ಕೆ ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕಾಗಿದೆ ಎಂದರು.  
. ಮುಖ್ಯ ಮಹಾಪ್ರಬಂಧಕರು (ಸ್ಥಾವರ), ಪ್ರಭಾರಿ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರ  ಅವರಿಂದ ಅಧಿಕಾರ ಸ್ವೀಕರಿಸಿದರು. ಕಾರ್ಖಾನೆಯ ವಿವಿಧ ವಿಭಾಗಗಳ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಿಐಎಸ್‌ಎಲ್ ಕಾರ್ಯಪಾಲಕ ನಿರ್ದೇಶಕರಾಗಿ ಬಿ.ಎಲ್ ಚಂದ್ವಾನಿ


ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ನೂತನ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ 
    ಭದ್ರಾವತಿ, ಜೂ. ೨೩ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕರಾಗಿ ಬಿ.ಎಲ್ ಚಂದ್ವಾನಿ ನೇಮಕಗೊಂಡಿದ್ದಾರೆ.
    ಬಿ.ಎಲ್ ಚಂದ್ವಾನಿಯವರು ಮಾ.೩೦, ೧೯೬೭ರಲ್ಲಿ ಭಿಲಾಯಿ ಸಮೀಪದ ಕುಟೇಲಭತದಲ್ಲಿ ಜನಿಸಿದ್ದು, ಪ್ರಾಥಮಿಕ ಶಿಕ್ಷಣವನ್ನು ಕಮ್ಹಾರಿಯಾದ ಸರ್ಕಾರಿ ಶಾಲೆ ಮತ್ತು ದುರ್ಗಿನ ಸರ್ಕಾರಿ ವಿವಿಧೋದ್ದೇಶ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂರೈಸಿ ೧೯೮೮ರಲ್ಲಿ ಭೋಪಾಲ್ ಮೌಲಾನಾ ಆಜಾದ್ ಕಾಲೇಜ್ ಆಫ್ ಟೆಕ್ನಾಲಜಿಯಲ್ಲಿ ಬಿ.ಇ. (ಮೆಕ್ಯಾನಿಕಲ್) ಪದವಿಪಡೆದುಕೊಂಡಿದ್ದಾರೆ.
    ಚಂದ್ವಾನಿಯವರು ಆರಂಭದಲ್ಲಿ ಭಿಲಾಯ್ ಸ್ಟೀಲ್ ಪ್ಲಾಂಟ್‌ಗೆ ಮ್ಯಾನೇಜ್‌ಮೆಂಟ್ ಟ್ರೈನಿ/ ಗ್ರಾಜ್ಯುಯೇಟ್ ಇಂಜಿನಿಯರ್ ಹುದ್ದೆಗೆ ೧೯೮೯ರಲ್ಲಿ ಸೇರಿದ್ದು, ೨೦೧೮ರಲ್ಲಿ ಮುಖ್ಯ ಜನರಲ್ ಮ್ಯಾನೇಜರ್ ಹುದ್ದೆಗೆ ಮುಂಬಡ್ತಿ ಹೊಂದಿದರು. ಇವರು ಭಿಲಾಯ್ ಸ್ಟೀಲ್ ಪ್ಲಾಂಟ್‌ನಲ್ಲಿ ಕೋಕ್ ಓವನ್, ಸ್ಟೀಲ್ ಮೇಕಿಂಗ್ ಶಾಪ್, ಮೈನ್ಸ್, ಬ್ಲಾಸ್ಟ್ ಫರ್ನೇಸ್‌ನ (ಮೆಕ್ಯಾನಿಕಲ್) ವಿಭಾಗ ಮತ್ತು ಅದಿರು ನಿರ್ವಹಣೆ ಸ್ಥಾವರದಲ್ಲಿ ಕೆಲಸ ಮಾಡಿದ ಹೆಚ್ಚಿನ ಅನುಭವ ಹೊಂದಿದ್ದಾರೆ. ಅಲ್ಲದೆ ೨೦೦೫ರಲ್ಲಿ ಇಂಗ್ಲೆಂಡ್‌ನಲ್ಲಿ ವಿದೇಶಿ ತರಬೇತಿ ಪಡೆದುಕೊಂಡಿದ್ದಾರೆ.

ಕೋಟ್ಪಾ ಕಾಯ್ದೆಯಡಿ ದಾಳಿ : ೨,೧೦೦ ರು. ದಂಡ ವಸೂಲಾತಿ

ಶಿವಮೊಗ್ಗ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ವತಿಯಿಂದ ಭದ್ರಾವತಿ ನಗರಸಭೆ ವ್ಯಾಪ್ತಿಯ ಉಜ್ಜನಿಪುರ ಹಾಗೂ ಕಾಗದನಗರದಲ್ಲಿ ತಂಬಾಕು ನಿಯಂತ್ರಣ ಕಾನೂನು ಕೋಟ್ಪಾ-೨೦೦೩ ಅಡಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿರುವ ಘಟನೆ ಗುರುವಾರ ನಡೆದಿದೆ.
    ಭದ್ರಾವತಿ, ಜೂ. ೨೩ : ಶಿವಮೊಗ್ಗ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ವತಿಯಿಂದ ನಗರಸಭೆ ವ್ಯಾಪ್ತಿಯ ಉಜ್ಜನಿಪುರ ಹಾಗೂ ಕಾಗದನಗರದಲ್ಲಿ ತಂಬಾಕು ನಿಯಂತ್ರಣ ಕಾನೂನು ಕೋಟ್ಪಾ-೨೦೦೩ ಅಡಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿರುವ ಘಟನೆ ಗುರುವಾರ ನಡೆದಿದೆ.
  ಉಜ್ಜನಿಪುರ ಮತ್ತು ಕಾಗದನಗರದ ಹಲವೆಡೆ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಒಟ್ಟು ೨,೧೦೦ ರೂ  ದಂಡ ವಿಧಿಸಲಾಯಿತು. ಅಲ್ಲದೆ ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು.
    ಕಾರ್ಯಾಚರಣೆಯಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಎಂ.ವಿ ಅಶೋಕ್, ಎಚ್‌ಐಓ ಆನಂದಮೂರ್ತಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಾಬಾಯಿ, ಶಿವಮೊಗ್ಗ ಜಿಲ್ಲಾ  ತಂಬಾಕು ನಿಯಂತ್ರಣ ಕೋಶದ ರವಿರಾಜ್, ಪೇಪರ್ ಟೌನ್  ಪೊಲೀಸ್ ಠಾಣೆ ಸಿಬ್ಬಂದಿ ಮಂಜುನಾಥ್ ಹಾಗೂ ನಗರ ಆರೋಗ್ಯ ಕೇಂದ್ರದ ಮನೋಹರ್, ಚೇತನ್ ಪಾಲ್ಗೊಂಡಿದ್ದರು.