Sunday, June 26, 2022

ಸ್ನೇಹಜೀವಿ ಬಳಗದಿಂದ ನಾಡಪ್ರಭು ಕೆಂಪೇಗೌಡರ ಜಯಂತಿ

ಪೊಲೀಸ್ ಉಮೇಶ್
    ಭದ್ರಾವತಿ, ಜೂ. ೨೬ : ಸ್ನೇಹ ಜೀವಿ ಬಳಗದ ವತಿಯಿಂದ ಪೊಲೀಸ್ ಉಮೇಶ್ ನೇತೃತ್ವದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಜೂ. ೨೭ರಂದು ಬೆಳಿಗ್ಗೆ ೯ ಗಂಟೆಗೆ ನಗರದ ಬಿ.ಎಚ್ ರಸ್ತೆ  ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಟೋ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ.
    ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನದೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಸಿಹಿ ಹಂಚಿಕೆ, ಅನ್ನಸಂತರ್ಪಣೆ ಸಹ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಒಕ್ಕಲಿಗ ಸಮಾಜದ ವಿವಿಧ ಸಂಘಟನೆಗಳ ಪ್ರಮುಖರು, ಸಮಾಜದ ಗಣ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
    ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಪೊಲೀಸ್ ಉಮೇಶ್ ಕೋರಿದ್ದಾರೆ.

ಜೂ.೨೭ರಂದು ನಾಡಪ್ರಭು ಕೆಂಪೇಗೌಡರ ಜಯಂತಿ

    ಭದ್ರಾವತಿ, ಜೂ. ೨೬: ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಹಾಗು ವಿವಿಧ ಸಂಘಟನೆಗಳ ವತಿಯಿಂದ ಜೂ.೨೭ರಂದು ಬೆಳಿಗ್ಗೆ ೧೧ ಗಂಟೆಗೆ ನಾಡಪ್ರಭು ಕೆಂಪೇಗೌಡ ಜಯಂತಿ ಬಸವೇಶ್ವರ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
    ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಬಿ ಅಶೋಕ್‌ನಾಯ್ಕ್ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ ನಾರಾಯಣಗೌಡ, ಗೃಹ ಸಚಿವ ಅರಗ ಜ್ಞಾನೇಂದ್ರ, ಸಂಸದ ಬಿ.ವೈ ರಾಘವೇಂದ್ರ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್.ಎಲ್ ಭೋಜೇಗೌಡ, ಎಸ್. ರುದ್ರೇಗೌಡ, ಭಾರತಿ ಶೆಟ್ಟಿ, ಡಿ.ಎಸ್ ಅರುಣ್, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ತಹಸೀಲ್ದಾರ್ ಆರ್. ಪ್ರದೀಪ್, ಪೊಲೀಸ್ ಉಪಾಧೀಕ್ಷಕ ಜಿತೇಂದ್ರ ಕುಮಾರ್ ದಯಾಮ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್. ರಮೇಶ್, ನಗರಸಭೆ ಪೌರಾಯುಕ್ತ ಮನುಕುಮಾರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
    ಕುವೆಂಪು ವಿಶ್ವ ವಿದ್ಯಾನಿಲಯದ ಪ್ರೊ. ಈ ಚಂದ್ರಶೇಖರ್ ಉಪನ್ಯಾಸ ನೀಡಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಹಸೀಲ್ದಾರ್ ಆರ್. ಪ್ರದೀಪ್ ಕೋರಿದ್ದಾರೆ.  
    ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಮೆರವಣಿಗೆ :
    ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ, ತಾಲೂಕು ಒಕ್ಕಲಿಗರ ಸಂಘ, ಕೆಂಪೇಗೌಡ ಯುವಪಡೆ ಹಾಗು ಇನ್ನಿತರ ಸಂಘಟನೆಗಳ ನೇತೃತ್ವದಲ್ಲಿ ಬೆಳಿಗ್ಗೆ ೯ ಗಂಟೆಗೆ ನಗರದ ಬಿ.ಎಚ್ ರಸ್ತೆ ಅಪ್ಪರ್ ಹುತ್ತಾದಿಂದ ಸಭಾ ವೇದಿಕೆವರೆಗೂ ನಾಡಪ್ರಭು ಕೆಂಪೇಗೌಡರ ಭಾವಚಿತ್ರ ಹಾಗು ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಬೃಹತ್ ಮೆರವಣಿಗೆ ನಡೆಯಲಿದೆ.
    ಒಕ್ಕಲಿಗರ ಸಂಘದಿಂದ ಆಚರಣೆ :
    ತಾಲೂಕು ಒಕ್ಕಲಿಗರ ಸಂಘ ದಿಂದ ಸಂಜೆ ೫.೩೦ಕ್ಕೆ  ಅಪ್ಪರ್ ಹುತ್ತಾದಲ್ಲಿರುವ ಕೆಂಪೇಗೌಡ ಸಮುದಾಯ ಭವನದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ನಡೆಯಲಿದೆ. ಸಂಘದ ಅಧ್ಯಕ್ಷ ಎ.ಟಿ ರವಿ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕಾರ್ಯದರ್ಶಿ ಆರ್. ಪ್ರಕಾಶ್ ಕೋರಿದ್ದಾರೆ.

Saturday, June 25, 2022

ನ್ಯಾಯವಾದಿ ಎ.ಎನ್ ಕಾರ್ತಿಕ್ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕಾರ

ಭದ್ರಾವತಿ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಎ.ಎನ್ ಕಾರ್ತಿಕ್ ಶನಿವಾರ ನಡೆದ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು.
    ಭದ್ರಾವತಿ, ಜೂ. ೨೫: ನಗರದ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಎ.ಎನ್ ಕಾರ್ತಿಕ್ ಶನಿವಾರ ನಡೆದ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು.
    ಲಯನ್ಸ್ ಕ್ಲಬ್ ೨ನೇ ಜಿಲ್ಲಾ ಉಪ ಗೌರ್ವನರ್ ಮಹಮದ್ ಹನೀಫ್ ಪದಗ್ರಹಣ ಬೋಧಿಸಿದರು. ದೈವಜ್ಞ ಬ್ರಾಹ್ಮಣ ಸಂಘದ ಎಂ. ನಾಗರಾಜ ಶೇಟ್ ಕಾರ್ಯದರ್ಶಿಯಾಗಿ ಹಾಗು ಜಿ.ಪಿ ದರ್ಶನ್ ಖಜಾಂಚಿಯಾಗಿ, ಉಳಿದಂತೆ  ಲಿಯೋ ಕ್ಲಬ್ ಅಧ್ಯಕ್ಷರಾಗಿ ನಿಖಿತಾ ಎನ್ ಶೇಟ್, ಕಾರ್ಯದರ್ಶಿಯಾಗಿ ಆರ್. ಶ್ರೇಷ್ಠ ಮತ್ತು ಖಜಾಂಚಿಯಾಗಿ ಮೋನಾಲ್ ಕೆ. ಗೌಡ ಹಾಗು ಇನ್ನಿತರರು ಅಧಿಕಾರ ಸ್ವೀಕರಿಸಿದರು.
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಕ್ಲಬ್ ಪ್ರಮುಖರಾದ ಬಿ. ದಿವಾಕರ ಶೆಟ್ಟಿ, ಹೆಬ್ಬಂಡಿ ನಾಗರಾಜ್, ನಿಕಟಪೂರ್ವ ಪದಾಧಿಕಾರಿಗಳಾದ ಬಿ.ಎಸ್ ಮಹೇಶ್‌ಕುಮಾರ್, ಡಿ. ಶಂಕರಮೂರ್ತಿ, ವಿನೋದ್ ಗಿರಿ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜೂ.೨೮ರ ಉಚಿತ ಬೃಹತ್ ಆರೋಗ್ಯ ಶಿಬಿರ ಯಶಸ್ವಿಗೊಳಿಸಲು ಸಂಸದರ ಸಲಹೆ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಭದ್ರಾವತಿಯಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಜೂ.೨೮ರಂದು ಹಮ್ಮಿಕೊಳ್ಳಲಾಗಿದ್ದು, ಶಿಬಿರ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಶನಿವಾರ ಸಂಸದ ಬಿ.ವೈ ರಾಘವೇಂದ್ರ ಬಿಜೆಪಿ ಪಕ್ಷದ ಮುಖಂಡರು ಹಾಗು ಕಾರ್ಯಕರ್ತರ ಪೂರ್ವಭಾವಿ ಸಭೆ ನಡೆಸಿದರು.
    ಭದ್ರಾವತಿ, ಜೂ. ೨೫ : ಕ್ಷೇತ್ರದಲ್ಲಿರುವ ಅಸಂಘಟಿತ ಹಾಗು ವಲಸೆ ಕಾರ್ಮಿಕರು ಮತ್ತು ಅವರ ಅವಲಂಬಿತ ಕುಟುಂಬ ವರ್ಗದವರ ಆರೋಗ್ಯ ಕಾಳಜಿ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಜೂ.೨೮ರಂದು ಹಮ್ಮಿಕೊಳ್ಳಲಾಗಿದ್ದು, ಶಿಬಿರ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಶನಿವಾರ ಸಂಸದ ಬಿ.ವೈ ರಾಘವೇಂದ್ರ ಬಿಜೆಪಿ ಪಕ್ಷದ ಮುಖಂಡರು ಹಾಗು ಕಾರ್ಯಕರ್ತರ ಪೂರ್ವಭಾವಿ ಸಭೆ ನಡೆಸಿದರು.
    ಕ್ಷೇತ್ರದಲ್ಲಿರುವ ಅಸಂಘಟಿತ ಹಾಗು ವಲಸೆ ಕಾರ್ಮಿಕರು ಮತ್ತು ಅವರ ಅವಲಂಬಿತ ಕುಟುಂಬ ವರ್ಗದವರನ್ನು ಗುರುತಿಸಿ ಉಚಿತ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಶಿವಮೊಗ್ಗ ಮ್ಯಾಕ್ಸ್ ಆಸ್ಪತ್ರೆ ಸಹಯೋಗದೊಂದಿಗೆ ಕಾರ್ಮಿಕರ ಕಲ್ಯಾಣ ಮಂಡಳಿ ಮುಂದಾಗಿದೆ. ಜೂ.೨೮ರಂದು ಬೆಳಿಗ್ಗೆ ೯ ಗಂಟೆಗೆ ಶಿಬಿರ ಆರಂಭಗೊಳ್ಳಲಿದ್ದು, ಎಲ್ಲಾ ರೀತಿಯ ಕಾಯಿಲೆಗಳ ತಪಾಸಣೆ ನಡೆಯಲಿದೆ. ಹೆಚ್ಚಿನ ಚಿಕಿತ್ಸೆಗೂ ಅವಕಾಶ ಕಲ್ಪಿಸಿಕೊಡಲಿದ್ದು, ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.  ಬೃಹತ್ ಶಿಬಿರ ಇದಾಗಿದ್ದು, ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಕಾಳಜಿವಹಿಸಿ ಶಿಬಿರ ಯಶಸ್ವಿಗೊಳಿಸುವಂತೆ ಸಂಸದರು ಸಲಹೆ ನೀಡಿದರು.
    ಸಭೆಯಲ್ಲಿ ಪಕ್ಷದ ಪ್ರಮುಖರಾದ ಎಂ. ಪ್ರಭಾಕರ್, ಬಿ.ಕೆ ಶ್ರೀನಾಥ್, ಎಸ್. ಕುಮಾರ್, ಮಂಗೋಟೆ ರುದ್ರೇಶ್, ಜಿ. ಆನಂದ್‌ಕುಮಾರ್, ಹೇಮಾವತಿ ವಿಶ್ವನಾಥ್, ಕೆ. ಮಂಜುನಾಥ್, ರಾಮಲಿಂಗಯ್ಯ, ಚಂದ್ರಪ್ಪ, ಶಶಿಕಲಾ, ಅನ್ನಪೂರ್ಣ, ಪ್ರಭಾಕರ್, ರವಿಕುಮಾರ್, ಕರಿಗೌಡ, ಕವಿತಾ ರಾವ್, ಬಿ.ಎಸ್ ನಾರಾಯಣಪ್ಪ, ರಾಮನಾಥ್ ಬರ್ಗೆ, ಚನ್ನೇಶ್, ಶೋಭಾ ಪಾಟೀಲ್, ಮಂಜುಳ, ಎಸ್.ಎನ್ ನಾಗಮಣಿ, ಗೋಕುಲ್‌ಕೃಷ್ಣ, ನಕುಲ್, ಧನುಷ್, ಮಲ್ಲೇಶ್, ವಿಜಯ್, ಚಂದ್ರು ದೇವರಹಳ್ಳಿ ಸೇರಿದಂತೆ ಇನ್ನಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

೫ ಕೋ.ರು ವೆಚ್ಚದ ಕಾರ್ಮಿಕರ ಭವನ ಮಂಜೂರಾತಿ : ಜೂ.೨೮ರಂದು ಗುದ್ದಲಿ ಪೂಜೆ

ಸಂಸದ ಬಿ.ವೈ ರಾಘವೇಂದ್ರ ನೇತೃತ್ವದಲ್ಲಿ ಪೂರ್ವಭಾವಿ ಸಭೆ

೫ ಕೋ.ರು ವೆಚ್ಚದಲ್ಲಿ ಭದ್ರಾವತಿ ಉಜ್ಜನಿಪುರದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾರ್ಮಿಕರ ಭವನದ ಗುದ್ದಲಿ ಪೂಜೆ ಕಾರ್ಯಕ್ರಮದ ಪೂರ್ವಭಾವಿ ಸಭೆ ಶನಿವಾರ ಸಂಸದ ಬಿ.ವೈ ರಾಘವೇಂದ್ರ ನೇತೃತ್ವದಲ್ಲಿ ನಡೆಯಿತು.
    ಭದ್ರಾವತಿ, ಜೂ. ೨೫ : ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನಗರದಲ್ಲಿ ನೂತನ ಕಾರ್ಮಿಕರ ಭವನ ಮಂಜೂರಾತಿಯಾಗಿದ್ದು, ಸುಮಾರು ೫ ಕೋ. ರು. ವೆಚ್ಚದ ಭವನದ ಗುದ್ದಲಿ ಪೂಜೆ ಜೂ.೨೮ರಂದು ನಡೆಯಲಿದೆ. ಈ ಸಂಬಂಧ ಸಂಸದ ಬಿ.ವೈ ರಾಘವೇಂದ್ರ ಶನಿವಾರ ನಗರದ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿದರು.
    ಕ್ಷೇತ್ರದಲ್ಲಿ ಅಸಂಘಟಿತ ಹಾಗು ವಲಸೆ ಕಾರ್ಮಿಕರು ಹೆಚ್ಚಾಗಿದ್ದು, ಅಲ್ಲದೆ ವಲಸೆ ಕಾರ್ಮಿಕರ ಅನುಕೂಲಕ್ಕಾಗಿ ತಾತ್ಕಾಲಿಕ ವಸತಿ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಕಾರ್ಮಿಕರ ಭವನದಲ್ಲಿ ವಸತಿ ಸಮುಚ್ಚಯ ನಿರ್ಮಾಣಗೊಳ್ಳಲಿದೆ. ಎಂಪಿಎಂ ಕಾರ್ಖಾನೆ ಸೇರಿದ ಉಜ್ಜನಿಪುರ ವ್ಯಾಪ್ತಿಯಲ್ಲಿ ೨ ಎಕರೆ ಜಮೀನು ಮಂಜೂರಾತಿ ಮಾಡಲಾಗಿದೆ. ಭವನ ನಿರ್ಮಾಣಕ್ಕೆ ಜೂ.೨೮ರಂದು ಮಧ್ಯಾಹ್ನ ೧ ಗಂಟೆಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಕಾರ್ಯಕ್ರಮದ ಪೂರ್ವಭಾವಿಯಾಗಿ ಸಂಸದರು ವಿವಿಧ ಕಾರ್ಮಿಕ ಸಂಘಟನೆಗಳು, ತಹಸೀಲ್ದಾರ್, ನಗರಸಭೆ ಅಧಿಕಾರಿಗಳು ಮತ್ತು ಕಾರ್ಮಿಕ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
    ತಹಸೀಲ್ದಾರ್ ಆರ್. ಪ್ರದೀಪ್, ಜಿಲ್ಲಾ ಕಾರ್ಮಿಕ ಅಧಿಕಾರಿ, ಕಾರ್ಮಿಕ ನಿರೀಕ್ಷಕರು, ನಗರಸಭೆ ಅಧಿಕಾರಿಗಳು, ಕರ್ನಾಟಕ ಸ್ಟೇಟ್ ಕನಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು, ತಾಲೂಕು ಅಧ್ಯಕ್ಷ ಚಂದ್ರಶೇಖರ್ ಹಾಗು ಪದಾಧಿಕಾರಿಗಳು ಉಪಸ್ಥಿತರಿದ್ದರು.

Friday, June 24, 2022

ವಿಇಎಸ್ ವಿದ್ಯಾಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಕೆ. ಶ್ಯಾಮಣ್ಣ ನಿಧನ




ಭದ್ರಾವತಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತರ ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರು ಹಾಗೂ ನಿವೃತ್ತ ದೈಹಿಕ ಶಿಕ್ಷಕರು ಕೆ. ಶ್ಯಾಮಣ್ಣ(82) ಶನಿವಾರ ಬೆಳಗ್ಗೆ ನಿಧನಹೊಂದಿದರು. ಪತ್ನಿ ಓರ್ವ ಪುತ್ರ ಇಬ್ಬರು ಪುತ್ರಿಯರನ್ನು ಹೊಂದಿದ್ದರು. ಕೆಲವು ವರ್ಷಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಶ್ಯಾಮಣ್ಣ ಅವರು ದೈಹಿಕ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ್ದರು. ಕ್ರೀಡಾಕ್ಷೇತ್ರದಲ್ಲಿ ಹಲವು ಸಾಧನೆಗಳನ್ನು ಮಾಡುವ ಮೂಲಕ ಯುವ ಕ್ರೀಡಾಪಟುಗಳಿಗೆ ಮಾರ್ಗದರ್ಶಕರು. ವಿಶ್ವೇಶ್ವರಯ್ಯ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಎರಡು ಬಾರಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ  ಅಧ್ಯಕ್ಷರಾಗಿ, ಪದಾಧಿಕಾರಿಯಾಗಿ ಸೇವೆಸಲ್ಲಿಸಿದ್ದರು. ಅಲ್ಲದೆ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಗೌರವ ಅಧ್ಯಕ್ಷರಾಗಿದ್ದರು. ಇವರ ನಿಧನಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಪ್ಪ  ಹಾಗೂ ಪದಾಧಿಕಾರಿಗಳು, ಮಾಜಿ ಅಧ್ಯಕ್ಷ ಎನ್. ಕೃಷ್ಣಪ್ಪ, ವಿಶ್ವೇಶ್ವರಯ್ಯ ವಿದ್ಯಾಸಂಸ್ಥೆ ಸಂಸ್ಥಾಪಕರಾದ ಡಾ.ಜಿ.ಎಂ ನಟರಾಜ್, ಬಿ ಎಲ್ ರಂಗಸ್ವಾಮಿ,  ಸರ್ಕಾರಿ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು, ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರ ಗಣ್ಯರು, ವಿವಿಧ ಸಂಘ ಸಂಸ್ಥೆಗಳು ಸಂತಾಪ ಸೂಚಿಸಿವೆ.


Android ಗಾಗಿ Outlook ಪಡೆಯಿರಿ

ಮಕ್ಕಳು ಮಾದಕ ವ್ಯಸನಕ್ಕೆ ಬಲಿಯಾಗದಂತೆ ಎಚ್ಚರವಹಿಸಿ : ಬಿ.ಜಿ ಧನಂಜಯ

ಭದ್ರಾವತಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಅರಕ್ಷಕ ಇಲಾಖೆ ಸಹಯೋಗದೊಂದಿಗೆ ಶುಕ್ರವಾರ ಆಯೋಜಿಸಲಾಗಿದ್ದ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳಸಾಗಾಣಿಕೆ ವಿರುದ್ದ ಜಾಗೃತಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಅಧ್ಯಕ್ಷತೆವಹಿಸಿ ಮಾತನಾಡಿದರು.
    ಭದ್ರಾವತಿ, ಜೂ. ೨೪; ಮಕ್ಕಳು ದುಶ್ಚಟಗಳಿಗೆ ಬಲಿಯಾಗದಂತೆ ಎಚ್ಚರವಹಿಸುವ ನಿಟ್ಟಿನಲ್ಲಿ ಪೋಷಕರ ಪಾತ್ರ ಪ್ರಮುಖವಾಗಿದೆ ಎಂದು ಹೊಸಮನೆ ಸರ್ಕಾರಿ ಪ್ರಥಮ ದರ್ಜೇ ಕಾಲೇಜು ಪ್ರಾಂಶುಪಾಲ ಡಾ. ಬಿ.ಜಿ.ಧನಂಜಯ ಹೇಳಿದರು.
ಅವರು ಶುಕ್ರವಾರ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಅರಕ್ಷಕ ಇಲಾಖೆ ಸಹಯೋಗದೊಂದಿಗೆ ಶುಕ್ರವಾರ ಆಯೋಜಿಸಲಾಗಿದ್ದ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳಸಾಗಾಣಿಕೆ ವಿರುದ್ದ ಜಾಗೃತಿ ಮಾಸಾಚರಣೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.
    ವ್ಯಸನಮುಕ್ತರಾದ ಯುವ ಜನತೆಯಿಂದ ಮಾತ್ರ ಬಲಿಷ್ಟ ರಾಷ್ಟ್ರ ನಿರ್ಮಾಣ ಸಾಧ್ಯ. ಹಿನ್ನಲೆಯಲ್ಲಿ ಪೋಷಕರು ತಮ್ಮ ಮಕ್ಕಳ ಚಲನವಲನಗಳ ಮೇಲೆ ನಿಗಾವಹಿಸಬೇಕು. ವಿದ್ಯಾರ್ಥಿಗಳು ನೆರೆಹೊರೆಯವರು ಹಾಗೂ ಸಮಾಜದಲ್ಲಿನ ಪ್ರತಿಯೊಬ್ಬರನ್ನೂ ಗೌರವದಿಂದ ಪ್ರೀತಿ, ವಿಶ್ವಾಸದಿಂದ ಕಾಣಬೇಕು. ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಬೇಕು. ಯಾವುದೇ ಕಾರಣಕ್ಕೂ ಮಾದಕ ವ್ಯಸನಕ್ಕೆ ಬಲಿಯಾಗದಂತೆ ಎಚ್ಚರವಹಿಸಬೇಕೆಂದರು.
    ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯ ಅರಕ್ಷಕ ಠಾಣಾಧಿಕಾರಿ  ಶಾಂತಲಾ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಮಾದಕ ವ್ಯಸನಿಗಳ ಸಂಖ್ಯೆ ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಯುವಕರು ದುಶ್ಚಟಗಳಿಂದ ದೂರವಿದ್ದು ಆರೋಗ್ಯ ರಕ್ಷಣೆಯ ಕಡೆಗೆ ಗಮನಹರಿಸಬೇಕು. ಮಾದಕ ವಸ್ತುಗಳ ಸೇವನೆ ಹಾಗೂ ಮಾರಾಟ ಕಾನೂನು ಬಾಹಿರವಾಗಿದ್ದು, ವಿದ್ಯಾರ್ಥಿಗಳು ಇವುಗಳಿಂದು ದೂರವಿರಬೇಕೆಂದರು.
    ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಎನ್. ಕುಮಾರ್ ಮಾತನಾಡಿ, ಇಂದಿನ ಯುವ ಸಮೂಹ ವಿನೋದಕ್ಕಾಗಿ ಕಲಿಯುವ ದುಶ್ಚಟಗಳೇ ಅವರ ಭವಿಷ್ಯವನ್ನು ಬಲಿ ತೆಗೆದುಕೊಳ್ಳುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಉಪನ್ಯಾಸಕರಾದ ಉಮೇಶ್‌ಕುಮಾರ್, ಕೆ.ಬಿ ರೇವಣಸಿದ್ದಪ್ಪ, ಪರಶುರಾಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.