Thursday, July 14, 2022

ಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ

 


ಭದ್ರಾವತಿ, ಜು.14: ತಾಲೂಕಿನ ಜೀವನದಿ ಭದ್ರಾ ನದಿ ಜಲಾಶಯ 41ನೇ ಬಾರಿಗೆ ಪೂರ್ಣಗೊಂಡಿದ್ದು, ಗುರುವಾರ ಮಧ್ಯಾಹ್ನ 12 ಗಂಟೆಗೆ ಜಲಾಶಯದಿಂದ ನೀರು ನದಿಗೆ ಬಿಡಲಾಯಿತು.

       4 ಕ್ರಸ್ಟ್ ಗೇಟ್ ಗಳ ಮೂಲಕ ನದಿಗೆ ನೀರು ಬಿಡಲಾಯಿತು. ಜಲಾಶಯದಿಂದ ಹಾಲ್ನೊರೆಯಂತೆ ನೀರು ಧುಮುಕುವ ದೃಶ್ಯ ಕಣ್ತುಂಬಿಕೊಳ್ಳಲು ತಾಲೂಕಿನ ವಿವಿಧತೆಗಳಿಂದ ಜನರು ಆಗಮಿಸಿದ್ದರು. ಕೆಲವರು ವಿಡಿಯೋ ಚಿತ್ರೀಕರಣ ಮಾಡಿಕೊಂಡರು, ಇನ್ನೂ ಕೆಲವರು ಸೆಲ್ಫಿ ತೆಗೆದುಕೊಳ್ಳುವ ಮೂಲಕ ಸಂಭ್ರಮಿಸಿದರು.


Wednesday, July 13, 2022

ಭದ್ರಾ ಜಲಾಶಯದಿಂದ ಬೆಳಗ್ಗೆ 11 ಗಂಟೆಯೊಳಗೆ ನೀರು ಬಿಡುಗಡೆ

ಭದ್ರಾವತಿ, ಜು.14: ತಾಲೂಕಿನ ಜೀವನದಿ ಭದ್ರಾ ನದಿ ಜಲಾಶಯ 41ನೇ ಬಾರಿಗೆ ಪೂರ್ಣಗೊಂಡಿದ್ದು, ಗುರುವಾರ ಬೆಳಿಗ್ಗೆ 11 ಗಂಟೆಯೊಳಗೆ ಜಲಾಶಯದಿಂದ ನೀರು ನದಿಗೆ ಬಿಡುಗಡೆಯಾಗಲಿದೆ.
       ಜಲಾಶಯದ ಗರಿಷ್ಠ ಮಟ್ಟ 186 ಅಡಿಯಾಗಿದ್ದು, ಗುರುವಾರ ಬೆಳಗ್ಗೆ 6 ಗಂಟೆ ಮಾಹಿತಿಯಂತೆ 183.2 ಅಡಿ ತಲುಪಿದೆ. ಈ ಹಿನ್ನೆಲೆಯಲ್ಲಿ 4 ಕ್ರಸ್ಟ್ ಗೇಟ್ ಗಳ ಮೂಲಕ ನದಿಗೆ ನೀರು ಬಿಡಲಾಗುವುದು. ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾಗೂ ಜಾನುವಾರುಗಳನ್ನು ನದಿ ತೀರದ ಪ್ರದೇಶಗಳಿಗೆ ಬಿಡದಂತೆ ಮತ್ತು ಸಾರ್ವಜನಿಕರು ತಿರುಗಾಡದಂತೆ ಮುನ್ನೆಚ್ಚರಿಕೆ ವಹಿಸುವಂತೆ ತಹಸೀಲ್ದಾರ್  ಆರ್ ಪ್ರದೀಪ್ ತಿಳಿಸಿದ್ದಾರೆ. 
     ಮಲೆನಾಡಿನ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಭದ್ರಾ ಜಲಾಶಯ 1962ರಲ್ಲಿ ನಿರ್ಮಾಣಗೊಂಡಿದ್ದು, ಇರುವವರೆಗೆ 41 ಬಾರಿ ಪೂರ್ಣಗೊಂಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಬಳ್ಳಾರಿ ಮತ್ತು ಗದಗ ಸೇರಿದಂತೆ ಒಟ್ಟು 8 ಜಿಲ್ಲೆಗಳಿಗೆ ನೀರಾವರಿ ಸೌಲಭ್ಯಗಳನ್ನು ಹೊಂದಿದೆ. ಬೃಹತ್ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪ್ರಗತಿಯಲ್ಲಿದೆ. ಭದ್ರ ನದಿ ರೈತರು, ಕಾರ್ಮಿಕರ ಜೀವನದಿಯಾಗಿದೆ. ಜಲಾಶಯ ಪೂರ್ಣ ಪ್ರಮಾಣದಲ್ಲಿ ಭರ್ತಿಯಾದಾಗ  ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಪ್ರವಾಸಿಗರು ಆಗಮಿಸಿ ಇದರ ಸೌಂದರ್ಯ ಕಣ್ತುಂಬಿ ಕೊಳ್ಳುತ್ತಿದ್ದಾರೆ.



ಯಾವುದೇ ಕ್ಷಣದಲ್ಲಿ ಭದ್ರಾ ನದಿಗೆ ನೀರು


ಭದ್ರಾವತಿ, ಜು. ೧೩: ಭದ್ರಾ ಜಲಾಶಯ ಸುತ್ತಮುತ್ತಲಿನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜಲಾಶಯದಿಂದ ಯಾ
ವುದೇ ಕ್ಷಣದಲ್ಲಿ ನೀರನ್ನು ನದಿಗೆ ಬಿಡುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಉಂಟಾಗಬಹುದಾದ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಅಗತ್ಯವಿರುವ ತುರ್ತು ಕ್ರಮಗಳನ್ನು ಕೈಗೊಳ್ಳಬೇಕೆಂದು ನೂತನ ಉಪವಿಭಾಗಾಧಿಕಾರಿ ಎಸ್.ಬಿ ದೊಡ್ಡಗೌಡರ್ ಹೇಳಿದರು.
ಅವರು ಬುಧವಾರ ಸಂಜೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ, ಭದ್ರಾ ಜಲಾಶಯದಿಂದ ನೀರು ಹೊರಬಿಡುವ ಹಿನ್ನಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗುವ ಸ್ಥಳಗಳಲ್ಲಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ಜೀವಹಾನಿ ಸಂಭವಿಸದಂತೆ ಎಚ್ಚರವಹಿಸಬೇಕು. ಪ್ರವಾಹದಿಂದ ಉಂಟಾಗುವ ಹೆಚ್ಚಿನ ಹಾನಿಯನ್ನು ತಪ್ಪಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕು. ಸಂತ್ರಸ್ಥರಿಗೆ ಸರ್ಕಾರದಿಂದ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ತ್ವರಿತ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೆ ನಿರ್ಲಕ್ಷ್ಯತನ ವಹಿಸಬಾರದು.
ಕಾಳಜಿ ಕೇಂದ್ರ ತೆರೆದು ತಗ್ಗು ಪ್ರದೇಶದಲ್ಲಿನ ನಿವಾಸಿಗಳನ್ನು ತಕ್ಷಣ ಸ್ಥಳಾಂತರಿಸಬೇಕು. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಸಹಕಾರ ಪಡೆದುಕೊಳ್ಳಬೇಕು. ಸಂತ್ರಸ್ಥರಿಗೆ ಊಟದ ವ್ಯವಸ್ಥೆ, ಆರೋಗ್ಯ ಇಲಾಖೆಯಿಂದ ಆರೋಗ್ಯ ತಪಾಸಣೆ ನಡೆಸಬೇಕು. ನಗರಸಭೆ ವ್ಯಾಪ್ತಿಯಲ್ಲಿ ನರಗಸಭೆ ಆಡಳಿತ ಹೆಚ್ಚಿನ ನಿಗಾ ವಹಿಸಬೇಕೆಂದರು. ಇದೆ ರೀತಿ ಅಗ್ನಿಶಾಮಕ ಇಲಾಖೆ ತುರ್ತು ಸೇವೆ ಒದಗಿಸಲು ಸಿದ್ದವಿರುವಂತೆ ಸೂಚಿಸಿದರು.
ಮಳೆಯಿಂದ ಉಂಟಾಗಿರುವ ಸಮಸ್ಯೆಗಳ ಕುರಿತು ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಯಿಂದ ಮಾಹಿತಿ ಪಡೆದುಕೊಂಡರು.
ಸಭೆಯಲ್ಲಿ ಪ್ರೊಬೇಷನರಿ ಉಪವಿಭಾಗಾಧಿಕಾರಿ ಕಾಂತರಾಜ್, ತಹಸೀಲ್ದಾರ್ ಆರ್. ಪ್ರದೀಪ್, ಗ್ರೇಡ್-೧ ತಹಸೀಲ್ದಾರ್ ರಂಗಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್, ಕೃಷಿ ಸಹಾಯಕ ನಿರ್ದೇಶಕ ಶಶಿಧರ್, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕಾಂತರಾಜ್, ನಗರಸಭೆ ಪರಿಸರ ಅಭಿಯಂತರ ಪ್ರಭಾಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.
ಜಲಾಶಯ ಭರ್ತಿಯಾಗಲು ಕ್ಷಣಗಣನೆ : ಮಧ್ಯ ರಾತ್ರಿ ನೀರು ಬಿಡುವ ಸಾಧ್ಯತೆ ?
ಗರಿಷ್ಠ ೧೮೬ ಅಡಿ ಎತ್ತರ ಹೊಂದಿರುವ ಜಲಾಶಯ ಈ ಬಾರಿ ಬಹುತೇಕ ಪೂರ್ಣಗೊಂಡಿದ್ದು, ಬುಧವಾರ ಮಧ್ಯ ರಾತ್ರಿ ನೀರು ಬಿಡುವ ಸಾಧ್ಯತೆ ಹೆಚ್ಚಾಗಿದೆ.
ಬೆಳಿಗ್ಗೆ ೬ ಗಂಟೆ ಮಾಹಿತಿಯಂತೆ ಜಲಾಶಯದ ನೀರಿನ ಮಟ್ಟ ೧೮೦.೨ ಅಡಿಗೆ ಏರಿಕೆಯಾಗಿದೆ. ಭರ್ತಿಗೆ ಕೇವಲ ೬ ಅಡಿ ಮಾತ್ರ ಬಾಕಿ ಉಳಿದಿದ್ದು, ೩೫.೩೨೧ ಕ್ಯೂಸೆಕ್ ಒಳಹರಿವು ಹೊಂದಿದೆ. ಈ ಹಿನ್ನಲೆಯಲ್ಲಿ ಮಧ್ಯ ರಾತ್ರಿ ವೇಳೆಗೆ ಜಲಾಶಯ ಭರ್ತಿಯಾಗಲಿದ್ದು, ನೀರು ಬಿಡುವ ಸಾಧ್ಯತೆ ಹೆಚ್ಚಾಗಿದೆ.
ಕಳೆದ ವರ್ಷ ಕೇವಲ ೧೫೬.೮ ಅಡಿಯಷ್ಟು ನೀರು ಸಂಗ್ರಹವಾಗಿತ್ತು. ಪ್ರಸ್ತುತ ಕಳೆದ ವರ್ಷಕ್ಕಿಂತ ೨೪ ಅಡಿಗೂ ಹೆಚ್ಚಿನ ನೀರು ಸಂಗ್ರಹವಾಗಿದೆ. ಈಗಾಗಲೇ ಕಾಲುವೆಗಳಿಗೆ ೧೦ ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ಹೆಚ್ಚುವರಿ ನೀರನ್ನು ನದಿಗೆ ಬಿಡುವ ಸಾಧ್ಯತೆ ಕಂಡು ಬರುತ್ತಿದೆ. ನದಿಗೆ ನೀರು ಬಿಟ್ಟ ಸಂದರ್ಭದಲ್ಲಿ ಪ್ರತಿವರ್ಷ ನಗರ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗುವುದು ಸಾಮಾನ್ಯವಾಗಿದೆ.


ಶಿವಸಾಯಿ ಕೃಪಾಧಾಮದಲ್ಲಿ ವಿಜೃಂಭಣೆಯಿಂದ ಜರುಗಿದ ಗುರು ಪೂರ್ಣಿಮೆ

ಪ್ರತಿ ವರ್ಷದಂತೆ ಈ ಬಾರಿ ಸಹ ಭದ್ರಾವತಿ ನ್ಯೂಟೌನ್ ಶ್ರೀ ಸತ್ಯಸಾಯಿ ಸೇವಾ ಸಮಿತಿ, ಪ್ರಶಾಂತಿ ಸೇವಾ ಟ್ರಸ್ಟ್ ಹಾಗು ಶಿವಸಾಯಿ ಕೃಪಾಧಾಮ ಟ್ರಸ್ಟ್ ವತಿಯಿಂದ ಗುರು ಪೂರ್ಣಿಮೆ ಹಲವು ಧಾರ್ಮಿಕ ಆಚರಣೆಗಳೊಂದಿಗೆ ವಿಜೃಂಭಣೆಯಿಂದ ಜರುಗಿತು. ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಶಿಕ್ಷಕರ ಪಾದ ಪೂಜೆ ನೆರವೇರಿಸುವ ಮೂಲಕ ಗಮನ ಸೆಳೆದರು.
    ಭದ್ರಾವತಿ, ಜು. ೧೩: ಪ್ರತಿ ವರ್ಷದಂತೆ ಈ ಬಾರಿ ಸಹ ನ್ಯೂಟೌನ್ ಶ್ರೀ ಸತ್ಯಸಾಯಿ ಸೇವಾ ಸಮಿತಿ, ಪ್ರಶಾಂತಿ ಸೇವಾ ಟ್ರಸ್ಟ್ ಹಾಗು ಶಿವಸಾಯಿ ಕೃಪಾಧಾಮ ಟ್ರಸ್ಟ್ ವತಿಯಿಂದ ಗುರು ಪೂರ್ಣಿಮೆ ಹಲವು ಧಾರ್ಮಿಕ ಆಚರಣೆಗಳೊಂದಿಗೆ ವಿಜೃಂಭಣೆಯಿಂದ ಜರುಗಿತು.
      ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಶಿಕ್ಷಕರ ಪಾದ ಪೂಜೆ ನೆರವೇರಿಸುವ ಮೂಲಕ ಗಮನ ಸೆಳೆದರು. ಇದಕ್ಕೂ ಮೊದಲು ಓಂಕಾರ, ಜ್ಯೋತಿರ್ಧ್ಯಾನ, ಸುಪ್ರಭಾತ, ನಗರ ಸಂಕೀರ್ತನೆ, ಮಂಗಳಾರತಿ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
      ಸಂಜೆ ಲಲಿತಸಹಸ್ರ ನಾಮಾರ್ಚನೆ, ವೇದಪಾರಾಯಣ, ಭಜನೆ, ಚಿಂತನ, ನಾದಸ್ವರ ಸೇವೆ, ಮಹಾಮಂಗಳಾರತಿ, ಪಾದುಕ ದರ್ಶನ ಮತ್ತು ಪ್ರಸಾದ ವಿತರಣೆ ಆಚರಣೆಗಳು ಜರುಗಿದವು.
      ಶಿವಸಾಯಿ ಕೃಪಾಧಾಮದಲ್ಲಿ ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಶ್ರೀ ಸತ್ಯನಾರಾಯನ ಪೂಜೆ, ಗುರು ಪಾದುಕಾ ಪೂಜೆ, ಮಂಗಳಾರತಿ ಮತ್ತು ಪ್ರಸಾದ ವಿತರಣೆ, ಪಲ್ಲಕ್ಕಿ ಉತ್ಸವ, ಮಹಾಮಂಗಳಾರತಿ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಮಂಜುನಾಥ್ ಐತಾಳ್ ಅವರ ನೇತೃತ್ವದಲ್ಲಿ ನಡೆದವು.  
      ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಕಾಗದನಗರ, ಸುರಗಿತೋಪು, ನ್ಯೂಟೌನ್, ಆಂಜನೇಯ ಅಗ್ರಹಾರ, ವಿದ್ಯಾಮಂದಿರ, ಗಣೇಶ್‌ಕಾಲೋನಿ, ಹಾಲಪ್ಪಶೆಡ್, ಜನ್ನಾಪುರ ಸೇರಿದಂತೆ ವಿವಿಧೆಡೆಗಳಿಂದ ಭಕ್ತಾಧಿಗಳು ಆಗಮಿಸಿ ಸ್ವಾಮಿಯ ದರ್ಶನ ಪಡೆದರು.
      ಶ್ರೀ ಸತ್ಯಸಾಯಿ ಸೇವಾ ಕ್ಷೇತ್ರದ ಪ್ರಮುಖರಾದ ಡಿ. ಪ್ರಭಾಕರ ಬೀರಯ್ಯ, ಸೌಮ್ಯ ಪ್ರಭಾಕರ ಬೀರಯ್ಯ, ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಪ್ರಾಂಶುಪಾಲ ಮೃತ್ಯುಂಜಯ ಕಾನಿಟ್ಕರ್, ಶ್ಯಾಮರಾಯ ಆಚಾರ್, ಉಪಪ್ರಾಂಶುಪಾಲ ಪ್ರಸನ್ನ, ಪರಮೇಶ್ವರಪ್ಪ ಹಾಗು ಮುಖ್ಯ ಶಿಕ್ಷಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಶಿಕ್ಷಣ ಸಂಸ್ಥೆಯ ಎಲ್ಲಾ ಶಿಕ್ಷಕರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.


 ಭದ್ರಾವತಿ ನ್ಯೂಟೌನ್ .ಶಿವಸಾಯಿ ಕೃಪಾಧಾಮದಲ್ಲಿ ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಶ್ರೀ ಸತ್ಯನಾರಾಯನ ಪೂಜೆ, ಗುರು ಪಾದುಕಾ ಪೂಜೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದರು.


ಸರ್ಕಾರಿ ಶಾಲೆಗೆ ಆಟದ ಮೈದಾನಕ್ಕೆ ಜಾಗ ಕಲ್ಪಿಸಲು ಮನವಿ

ಭದ್ರಾವತಿ ತಾಲೂಕಿನ ಕಲ್ಪನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಆಟದ ಮೈದಾನಕ್ಕೆ ಜಾಗ ಕಲ್ಪಿಸಿಕೊಡುವಂತೆ ಒತ್ತಾಯಿಸಿ ಬುಧವಾರ ಉಪವಿಭಾಗಾಧಿಕಾರಿ ಎಸ್.ಬಿ ದೊಡ್ಡಗೌಡರ್ ಅವರ ಮೂಲಕ ತಾಲೂಕು ಆಡಳಿತಕ್ಕೆ ಜೈ ಸೇವಾಲಾಲ್ ಯುವಕರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಜು. ೧೩: ತಾಲೂಕಿನ ಕಲ್ಪನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಆಟದ ಮೈದಾನಕ್ಕೆ ಜಾಗ ಕಲ್ಪಿಸಿಕೊಡುವಂತೆ ಒತ್ತಾಯಿಸಿ ಬುಧವಾರ ಉಪವಿಭಾಗಾಧಿಕಾರಿ ಎಸ್.ಬಿ ದೊಡ್ಡಗೌಡರ್ ಅವರ ಮೂಲಕ ತಾಲೂಕು ಆಡಳಿತಕ್ಕೆ ಜೈ ಸೇವಾಲಾಲ್ ಯುವಕರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.
      ಶಾಲೆಗೆ ಯಾವುದೇ ಆಟದ ಮೈದಾನ ಇಲ್ಲದ ಕಾರಣ ಮಕ್ಕಳು ತೊಂದರೆ ಅನುಭವಿಸುವಂತಾಗಿದೆ. ಅದರಲ್ಲೂ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಜನರು ಹೆಚ್ಚಾಗಿ ವಾಸಿಸುತ್ತಿದ್ದು, ಆಟದ ಮೈದಾನ ಕಲ್ಪಿಸಿ ಕೊಡುವಂತೆ ಕೋರಲಾಗಿದೆ. ಮನವಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೂ ಸಲ್ಲಿಸಲಾಯಿತು.
      ತಹಸೀಲ್ದಾರ್ ಆರ್. ಪ್ರದೀಪ್, ಸಂಘದ ಅಧ್ಯಕ್ಷ ಪ್ರವೀಣ್‌ನಾಯ್ಕ, ಉಪಾಧ್ಯಕ್ಷ ಗುಂಡಾ, ಪ್ರಧಾನ ಕಾರ್ಯದರ್ಶಿ ಪವನ್‌ಕುಮಾರ್, ಪದಾಧಿಕಾರಿಳಾದ ರಾಕೇಶ್, ರಮೇಶ್, ಕಿರಣ್ ಮತ್ತು ಕುಮಾರ್ ನಾಯ್ಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಭದ್ರಾ ಜಲಾಶಯ ಭರ್ತಿಗೆ 6 ಅಡಿ ಬಾಕಿ

    

ಭದ್ರಾವತಿ, ಜು. ೧೩: ಭದ್ರಾ ಜಲಾಶಯ ಸುತ್ತಮುತ್ತಲಿನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ೩೫ ಸಾವಿರ ಕ್ಯೂಸೆಕ್ ನೀರು ಒಳ ಹರಿವಿದ್ದು, ಇಂದಿನ ನೀರಿನ ಮಟ್ಟ ೧೮೦.೨ ಅಡಿಗೆ ಏರಿಕೆಯಾಗಿದೆ. ಡ್ಯಾಂ ಭರ್ತಿಗೆ ಕೇವಲ ೬ ಅಡಿ ಮಾತ್ರ ಬಾಕಿ ಉಳಿದಿದೆ.
     ಇಂದು (ಜು.೧೩) ೩೫.೩೨೧ ಕ್ಯೂಸೆಕ್ ಒಳಹರಿವಿದ್ದು, ನಿನ್ನೆ ೪೧,೬೪೫ ಕ್ಯೂಸೆಕ್ ಒಳ ಹರಿವಿತ್ತು. ಇಂದು ಬೆಳಗ್ಗೆ ೬ ಗಂಟೆ ವೇಳೆಗೆ ನೀರಿನ ಮಟ್ಟ ೧೮೦.೨ ಅಡಿಗೆ ತಲುಪಿದೆ. ಇದರಿಂದ ಡ್ಯಾಂ ಭರ್ತಿಗೆ ಇನ್ನು ೬ ಅಡಿ ಬಾಕಿ ಉಳಿದಿದೆ. 
     ಕಳೆದ ವರ್ಷ ಈ ದಿನ ಕೇವಲ ೧೫೬.೮ ಅಡಿಯಷ್ಟು ನೀರಿತ್ತು. ಈಗ ಕಳೆದ ವರ್ಷಕ್ಕಿಂತ ೨೪ ಅಡಿಗೂ ಹೆಚ್ಚುವರಿ ನೀರು ಸಂಗ್ರಹವಾಗಿದೆ. ಹೀಗಾಗಿ ಇಂದು ಡ್ಯಾಂ ಕಾಲುವೆಗಳಿಗೆ ೧೦ ಸಾವಿರ ಕ್ಯೂಸೆಕ್ ನೀರು ಬಿಡುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Tuesday, July 12, 2022

ದೊಡ್ಡೇರಿ ಗ್ರಾಮದಲ್ಲಿ ಚುಂಚಾದ್ರಿ ಮಹಿಳಾ ವೇದಿಕೆಯಿಂದ ಗುರು ಪೂರ್ಣಿಮಾ

ದೊಡ್ಡೇರಿ ಗ್ರಾಮದಲ್ಲಿ ಚುಂಚಾದ್ರಿ ಮಹಿಳಾ ವೇದಿಕೆಯಿಂದ ಗುರು ಪೂರ್ಣಿಮಾ

ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಭದ್ರಾವತಿ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಮಂಗಳವಾರ ಗುರು ಪೂರ್ಣಿಮಾ ಕಾರ್ಯಕ್ರಮ ನಡೆಯಿತು. ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
    ಭದ್ರಾವತಿ, ಜು. ೧೨: ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಮಂಗಳವಾರ ಗುರು ಪೂರ್ಣಿಮಾ ಕಾರ್ಯಕ್ರಮ ನಡೆಯಿತು.
      ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಿದರು.
      ಡಿ. ದೇವರಾಜ ಅರಸು ಸಂಶೋಧನಾ ಸಂಸ್ಥೆ ನಿರ್ದೇಶಕಿ, ವೇದಿಕೆ ಗೌರವಾಧ್ಯಕ್ಷೆ ಡಾ. ಆರ್. ಅನುರಾಧ ಪಟೇಲ್ ಅಧ್ಯಕ್ಷತೆ ವಹಿಸಿ ಗುರು ಪೂರ್ಣಿಮಾ ಮಹತ್ವ ವಿವರಿಸಿದರು.
       ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ಪಾದ ಪೂಜೆ ನೆರವೇರಿತು. ಇದಕ್ಕೂ ಮೊದಲು ಶಿವಲಿಂಗಕ್ಕೆ ವಿಶೇಷ ಪೂಜೆ ಜರುಗಿತು. ಕುಂಚಕಲಾವಿದ ರಾಘವೇಂದ್ರ, ಭಜನಾ ಗುರು ನಾರಾಯಣ ಶೆಟ್ಟರ್, ವೀಣೆ ಶಿಕ್ಷಕ ಸೋಮು ಮತ್ತು ಸಂಗೀತ ಶಿಕ್ಷಕಿ ದಮಯಂತಿ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಗೌರವಿಸಲಾಯಿತು.
      ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ಉಪಾಧ್ಯಕ್ಷೆ ಪುಷ್ಪ ಕೇಶವಮೂರ್ತಿ, ಪ್ರಧಾನ ಕಾರ್ಯದರ್ಶಿ ಲತಾ ಪ್ರಭಾಕರ್, ಕಾರ್ಯದರ್ಶಿ ಶೀಲಾ ರವಿ, ಖಜಾಂಚಿ ಭಾರತಿ ಕುಮಾರ್, ಉದ್ಯಮಿ ಬಿ.ಕೆ ಜಗನ್ನಾಥ್, ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಧನುಷ್ ಬೋಸ್ಲೆ, ಜೆ. ನಂದೀಶ್ ಹಾಗು ವೇದಿಕೆ ನಿರ್ದೇಶಕಿಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.