Saturday, July 16, 2022

ತಾಲೂಕು ಕುರುಬರ ಸಂಘದ ಚುಕ್ಕಾಣಿ ಹಿಡಿಯಲು ಎರಡು ಬಣಗಳ ನಡುವೆ ತೀವ್ರ ಪೈಪೋಟಿ

ಜು.೧೭ರಂದು ಹಳೇನಗರದ ಶ್ರೀ ಕನಕ ವಿದ್ಯಾಸಂಸ್ಥೆ ಆವರಣದಲ್ಲಿ ಚುನಾವಣೆ

ಭದ್ರಾವತಿ ತಾಲೂಕು ಕುರುಬರ ಚುನಾವಣೆಗೆ ಸ್ಪರ್ಧಿಸಿರುವ ಬಿ.ಎಸ್ ನಾರಾಯಣಪ್ಪ ನೇತೃತ್ವದ ೧೫ ಜನರ ತಂಡ.
ಭದ್ರಾವತಿ, ಜು. ೧೬: ನಗರದಲ್ಲಿ ಇತ್ತೀಚಿನ ಕೆಲವು ವರ್ಷಗಳಿಂದ ತಾಲೂಕು ಕುರುಬರ ಸಂಘ ಹೆಚ್ಚಾಗಿ ಮುಂಚೂಣಿಯಲ್ಲಿ ಕಂಡು ಬರುತ್ತಿದ್ದು,  ಈ ಹಿನ್ನಲೆಯಲ್ಲಿ ಜು.೧೭ರಂದು ನಡೆಯುತ್ತಿರುವ ಸಂಘದ ಚುನಾವಣೆ ಹೆಚ್ಚು ಗಮನ ಸೆಳೆಯುತ್ತಿದೆ.
      ತಾಲೂಕು ಕುರುಬರ ಸಂಘ ಹಳೇನಗರದ ಬಸವೇಶ್ವರ ವೃತ್ತದ ಸಮೀಪ ಅಧಿಕೃತ ಕಛೇರಿ ಹೊಂದಿದ್ದು, ಜೊತೆಗೆ ವಿದ್ಯಾಸಂಸ್ಥೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದೆ.  ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಂಡಿರುವ ಕುರುಬ ಸಮಾಜದ ಪ್ರಮುಖರು ಸಂಘದ ಚುಕ್ಕಾಣಿ ಹಿಡಿದು ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಆದರೂ ಈ ನಡುವೆ ೨-೩ ಬಾರಿ ಸಂಘದ ಚುನಾವಣೆ ಸಂಬಂಧ ನ್ಯಾಯಾಲಯ ಮಧ್ಯ ಪ್ರವೇಶಿಸುವ ಮೂಲಕ ಸಮಸ್ಯೆಯನ್ನು ಇತ್ಯರ್ಥಪಡಿಸಿದೆ. ಇದೀಗ ಸಂಘದ ಚುಕ್ಕಾಣಿ ಹಿಡಿಯಲು ಎರಡು ಬಣಗಳು ತೀವ್ರ ಪೈಪೋಟಿಗೆ ಮುಂದಾಗಿವೆ. ವಿಶೇಷ ಎಂದರೆ ಪ್ರಸ್ತುತ ಅಧ್ಯಕ್ಷರಾಗಿರುವ ಬಿ.ಎಂ ಸಂತೋಷ್ ನೇತೃತ್ವದ ತಂಡ ಪುನಃ ಚುಕ್ಕಾಣಿ ಹಿಡಿಯಲು ಮುಂದಾಗಿದೆ.
      ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಮಾಲಿ ಸಂಘದ ಅಧ್ಯಕ್ಷ, ಬಿಜೆಪಿ ಮುಖಂಡ ಬಿ.ಎಸ್ ನಾರಾಯಣಪ್ಪ ನೇತೃತ್ವದ ತಂಡ ಈ ಬಾರಿ ಚುಕ್ಕಾಣಿ ಹಿಡಿಯಲು ತೀವ್ರ ಪೈಪೋಟಿಗೆ ಮುಂದಾಗಿದೆ. ಒಟ್ಟು ೧೫ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಬಿ.ಎಸ್ ನಾರಾಯಣಪ್ಪ ಬಣದಿಂದ ಸಿ.ಎಚ್ ಅರುಣ್‌ಕುಮಾರ್ ಹೆಗ್ಡೆ, ಎಚ್. ಕನಕೆಗೌಡ, ಕೃಷ್ಣಮೂರ್ತಿ, ಜಿ. ಕೃಷ್ಣಮೂರ್ತಿ(ಅಂಗಡಿ ಕಿಟ್ಟಣ್ಣ), ಜಿ.ಎಂ ಕೋಮಲ, ಸಿ. ಗಂಗಾಧರ, ಬಿ.ಎಸ್ ನಾರಾಯಣಪ್ಪ, ಜೆ. ಮಂಜುನಾಥ್, ಟಿ.ಎಚ್. ರಮೇಶ್, ಬಿ.ಕೆ ಲಕ್ಷ್ಮಣ, ಜಿ. ವೀರಣ್ಣ, ಎಚ್.ಜಿ ವೆಂಕಟೇಶ್, ಶಿವಣ್ಣಗೌಡ, ಎಚ್. ಶ್ರೀನಿವಾಸ್ ಮತ್ತು ಹೇಮಾವತಿ ಶಿವಾನಂದ್ ಸ್ಪರ್ಧಿಸಿದ್ದಾರೆ.
      ಶ್ರೀ ಬೀರಲಿಂಗೇಶ್ವರ ದೇವಸ್ಥಾನ ಮತ್ತು ತಾಲೂಕು ಶ್ರೀ ಕನಕ ಸಮುದಾಯ ಭವನ ನಿರ್ಮಾಣ ಮತ್ತು ಪಿ.ಯು ಕಾಲೇಜು ಮತ್ತು ನರ್ಸಿಂಗ್ ಕಾಲೇಜ್ ಪ್ರಾರಂಭಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವುದಾಗಿ ಈ ಬಣ ಭರವಸೆ ನೀಡುವ ಮೂಲಕ ಮತಯಾಚನೆ ನಡೆಸುತ್ತಿದೆ. ಇದಕ್ಕೆ ಬೆಂಬಲವಾಗಿ ಬ್ಲಾಕ್ ಕಾಂಗ್ರೆಸ್ ಕಾರ್ಮಿಕರ ವಿಭಾಗದ ತಾಲೂಕು ಅಧ್ಯಕ್ಷ ಬಿ. ಅಭಿಲಾಶ್, ಹನುಮಂತಪ್ಪ ಮತ್ತು ನಾಗಭೂಷಣ್ ಪ್ರಚಾರ ಕಾರ್ಯದಲ್ಲಿ ತೊಡಗಿಸಿ ಕೊಂಡಿದ್ದಾರೆ.  ಒಟ್ಟಾರೆ ಈ ಚುನಾವಣೆ ಈ ಬಾರಿ ಹೆಚ್ಚು ಗಮನ ಸೆಳೆಯುತ್ತಿದ್ದು, ಸಂಘದ ಚುಕ್ಕಾಣಿ ಯಾರು ಹಿಡಿಯುತ್ತಾರೆಂಬುದನ್ನು ಕಾದು ನೋಡಬೇಕಾಗಿದೆ.
      ಹಳೇನಗರದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಶ್ರೀ ಕನಕ ವಿದ್ಯಾಸಂಸ್ಥೆ ಆವರಣದಲ್ಲಿ ಜು.೧೭ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೪ ಗಂಟೆ ವರೆಗೆ ಚುನಾವಣೆ ನಡೆಯುತ್ತಿದ್ದು, ನವೀನ್‌ಕುಮಾರ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಮಳೆಯಿಂದ ೬ ಮನೆಗಳು ನೆಲಸಮ, ೧೩೭ ಮನೆಗಳಿಗೆ ಭಾಗಶಃ ಹಾನಿ

ಮುಂದುವರೆದ ಭದ್ರಾ ನದಿ ಪ್ರವಾಹ : ಆತಂಕದಲ್ಲಿ ತಗ್ಗು ಪ್ರದೇಶದ ನಿವಾಸಿಗಳು

ಭದ್ರಾವತಿ ತಾಲೂಕಿನ ಆನವೇರಿ ವ್ಯಾಪ್ತಿಯಲ್ಲಿ ಮಳೆಯಿಂದ ಮನೆಗಳು ಹಾನಿಗೊಳಗಾಗಿರುವುದು.
ಭದ್ರಾವತಿ, ಜು. ೧೬ : ಕಳೆದ ಕೆಲವು ದಿನಗಳಿಂದ ತಾಲೂಕಿನಾದ್ಯಂತ ಮಳೆಯಾಗುತ್ತಿದ್ದು, ಇದುವೆರೆಗೂ ಒಟ್ಟು ೬ ಮನೆಗಳು ಸಂಪೂರ್ಣವಾಗಿ ನೆಲಸಮಗೊಂಡಿವೆ. ೧೩೭ ಮನೆಗಳು ಭಾಗಶಃ ಹಾನಿಯಾಗಿದ್ದು, ಯಾವುದೇ ಜೀವ ಹಾನಿ ಸಂಭವಿಸಿಲ್ಲ.
      ಈ ಕುರಿತು ತಹಸೀಲ್ದಾರ್ ಆರ್. ಪ್ರದೀಪ್ ಮಾಹಿತಿ ನೀಡಿದ್ದು, ಮಳೆಯಿಂದ ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ೨ ಮತ್ತು ಹೊಳೆಹೊನ್ನೂರು ಭಾಗದಲ್ಲಿ ೪ ಮನೆಗಳು ಸಂಪೂರ್ಣವಾಗಿ ಹಾನಿಯಾಗಿವೆ. ಉಳಿದಂತೆ ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ೪೫, ಕೂಡ್ಲಿಗೆರೆ ೨೦, ಹೊಳೆಹೊನ್ನೂರು ೨೪, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಆನವೇರಿಯಲ್ಲಿ ೧೬ ಮತ್ತು ಕಲ್ಲಿಹಾಳ್‌ನಲ್ಲಿ ೩೨ ಮನೆಗಳು ಭಾಗಶಃ ಹಾನಿಯಾಗಿವೆ.
      ತಾಲೂಕಿನಲ್ಲಿ ಒಟ್ಟು ೪ ಕಾಳಜಿ ಕೇಂದ್ರ :
       ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ ಬಿಟ್ಟಿರುವ ಹಿನ್ನಲೆಯಲ್ಲಿ ಕಳೆದ ೨ ದಿನಗಳಿಂದ ನಗರಸಭೆ ವ್ಯಾಪ್ತಿ ಹಾಗು ಗ್ರಾಮಾಂತರ ಭಾಗದ ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿದ್ದು, ಪ್ರವಾಹ ಪೀಡಿತ ಸಂತ್ರಸ್ಥರನ್ನು ಸುರಕ್ಷಿತ ಸ್ಥಳಗಳಿಗೆ, ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಈ ಸಂಬಂಧ ತಂಡಗಳನ್ನು ರಚನೆ ಮಾಡಲಾಗಿದೆ.
      ನಗರಸಭೆ ವಾರ್ಡ್ ನಂ.೨ರ ವ್ಯಾಪ್ತಿಯ ಕವಲಗುಂದಿ ತಗ್ಗು ಪ್ರದೇಶದ ೪೦ ಕುಟುಂಬದ ಒಟ್ಟು ೧೮೪ ಮಂದಿಯನ್ನು ಅಪ್ಪರ್‌ಹುತ್ತಾದಲ್ಲಿರುವ ಒಕ್ಕಲಿಗರ ಸಮುದಾಯ ಭವನದಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೆ,  ಎಕಿನ್ಷಾ ಕಾಲೋನಿ ಮತ್ತು ಗುಂಡೂರಾವ್ ಶೆಡ್ ತಗ್ಗು ಪ್ರದೇಶದ ೫೦ ಕುಟುಂಬಗಳ ಒಟ್ಟು ೧೨೦ ಮಂದಿಯನ್ನು ನಗರಸಭೆ ಸಮೀಪದ ತರೀಕೆರೆ ರಸ್ತೆಯಲ್ಲಿರುವ ವಳ್ಳುವರ್ ಕಲ್ಯಾಣ ಮಂಟದಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೆ, ಹೊಳೆಹೊನ್ನೂರು ಭಾಗದ ತಗ್ಗು ಪ್ರದೇಶದ ೨೫ ಕುಟುಂಬಗಳ ಒಟ್ಟು ೧೧೦ ಮಂದಿಯನ್ನು ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೆ ಹಾಗು ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಸಮೀಪದ ನಗರಸಭೆ ವಾರ್ಡ್ ನಂ.೩ರ ಅಂಬೇಡ್ಕರ್ ನಗರದ ತಗ್ಗು ಪ್ರದೇಶದ ೬೦ ಕುಟುಂಬಗಳ ಒಟ್ಟು ೨೩೦ ಮಂದಿಯನ್ನು ಹಾಲಪ್ಪ ವೃತ್ತದ ಸಮೀಪದಲ್ಲಿರುವ ಭದ್ರ ಪ್ರೌಢಶಾಲೆಯಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಕಾಳಜಿ ಕೇಂದ್ರಗಳಲ್ಲಿ ಒಟ್ಟು ೧೭೫ ಕುಟುಂಬಗಳ ೬೪೪ ಮಂದಿ ಆಶ್ರಯ ಪಡೆದುಕೊಂಡಿದ್ದಾರೆ.


ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ ಬಿಟ್ಟಿರುವ ಹಿನ್ನಲೆಯಲ್ಲಿ ನಗರದ ಹೃದಯ ಭಾಗದಲ್ಲಿ ಪ್ರವಾಹ ಉಂಟಾಗಿದ್ದು, ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.  

      ಮುಂದುವರೆದ ಪ್ರವಾಹ :
      ಭದ್ರಾ ಜಲಾಶಯದಲ್ಲಿ ಹೆಚ್ಚುವರಿ ನೀರು ನದಿಗೆ ಬಿಟ್ಟ ಹಿನ್ನಲೆಯಲ್ಲಿ ಗುರುವಾರ ರಾತ್ರಿಯಿಂದ ಉಂಟಾಗಿರುವ ಪ್ರವಾಹ ಶನಿವಾರ ಸಹ ಮುಂದುವರೆದಿದ್ದು, ತಗ್ಗು ಪ್ರದೇಶದಲ್ಲಿನ ನಿವಾಸಿಗಳು ಕಾಳಜಿ ಕೇಂದ್ರಗಳಲ್ಲಿ ೨ನೇ ದಿನ ಕಾಲ ಕಳೆಯುವಂತಾಗಿದೆ.
      ೨ ದಿನಗಳಿಂದ ಪ್ರವಾಹ ಎದುರಾಗಿರುವ ಹಿನ್ನಲೆಯಲ್ಲಿ ಮನೆಗಳು ಕುಸಿಯುವ ಭೀತಿ ಒಂದೆಡೆ ಎದುರಾಗಿದೆ. ಮತ್ತೊಂದೆಡೆ ಜಲಾಶಯದಿಂದ ಇನ್ನೂ ಅಧಿಕ ಪ್ರಮಾಣದ ನೀರನ್ನು ಹೊರ ಬಿಟ್ಟಲ್ಲಿ ಪ್ರವಾಹ ಮತ್ತಷ್ಟು ಏರಿಕೆಯಾಗುವ ಲಕ್ಷಣಗಳು ಕಂಡು ಬರುತ್ತಿವೆ. ನಗರಸಭೆ, ತಾಲೂಕು ಪಂಚಾಯಿತಿ ಮತ್ತು ತಾಲೂಕು ಆಡಳಿತಗಳು ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವಲ್ಲಿ ಯಶಸ್ವಿಯಾಗಿವೆ.
      

ಭದ್ರಾವತಿ ತಾಲೂಕಿನ ಆನವೇರಿ ವ್ಯಾಪ್ತಿಯಲ್ಲಿ ಮಳೆಯಿಂದ ಮನೆಗಳು ಹಾನಿಗೊಳಗಾಗಿರುವುದು.
     

ಸಮಾಜವಾದಿ ಸಿದ್ದಾಂತಗಳು ದೇಶದ ಪ್ರತಿಯೊಬ್ಬರ ಬದುಕು ರೂಪಿಸುವ ಶಕ್ತಿ : ಕಿಮ್ಮನೆ ರತ್ನಾಕರ್

ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಕನ್ನಡ ವಿಭಾಗದ ಸಹಯೋಗದೊಂದಿಗೆ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ವತಿಯಿಂದ ಸಮಾಜವಾದಿ ನೇತಾರ ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ  ಉಪನ್ಯಾಸ ಕಾರ್ಯಕ್ರಮವನ್ನು ಮಾಜಿ ಸಚಿವ ಕಿಮ್ಮನೆ ರತ್ನಾಕರ್  ಉದ್ಘಾಟಿಸಿದರು.
    ಭದ್ರಾವತಿ, ಜು. ೧೬: ಸಮಾಜವಾದಿ ಸಿದ್ದಾಂತಗಳು ಈ ದೇಶದ ಪ್ರತಿಯೊಬ್ಬರ ಬದುಕನ್ನು ರೂಪಿಸುವ ಶಕ್ತಿ ಹೊಂದಿವೆ. ಈ ಹಿನ್ನಲೆಯಲ್ಲಿ ನಮ್ಮೆಲ್ಲರ ಮುಂದೆ ಇಂದಿಗೂ ಶಾಂತವೇರಿ ಗೋಪಾಲಗೌಡರು ಉಳಿದುಕೊಂಡಿದ್ದಾರೆಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.
      ಅವರು ಶನಿವಾರ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಕನ್ನಡ ವಿಭಾಗದ ಸಹಯೋಗದೊಂದಿಗೆ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ವತಿಯಿಂದ ಸಮಾಜವಾದಿ ನೇತಾರ ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ  ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
      ದೇಶದಲ್ಲಿ ರಾಜಕೀಯ ಬೆಳವಣಿಗೆಗಳು ಸಮಾಜವಾದಿ ಸಿದ್ದಾಂತಗಳ ಆಧಾರದ ಮೇಲೆ ರೂಪುಗೊಂಡವು. ಜನರು ಸಹ ಈ ಸಿದ್ದಾಂತಗಳಿಗೆ ಬದ್ಧರಾಗಿದ್ದರು. ಪರಸ್ಪರ ನಡುವೆ ಸಹಕಾರ, ಪ್ರೀತಿ, ಸೌಹಾರ್ದತೆ, ಸಮಾನತೆ ಪರಿಕಲ್ಪನೆ ಮೂಡಿದ್ದವು. ನಂತರದ ದಿನಗಳಲ್ಲಿ ಈ ಸಿದ್ದಾಂತಗಳು ಕಣ್ಮರೆಯಾಗುತ್ತಿದ್ದಂತೆ ಈ ದೇಶದ ಚಿತ್ರಣ ಬದಲಾಗಿದೆ. ಅಸಮಾನತೆ, ಸ್ವಾರ್ಥ, ಜಾತೀಯತೆ, ಧರ್ಮಾಂಧತೆ ಹೆಚ್ಚಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
      ಶಾಂತವೇರಿ ಗೋಪಾಲಗೌಡರು ಇಂದಿಗೂ ನಮ್ಮೆಲ್ಲರ ಮುಂದೆ ಉಳಿದುಕೊಳ್ಳಲು ಈ ಸಿದ್ದಾಂತಗಳು ಕಾರಣವಾಗಿವೆ. ಅನಕ್ಷರಸ್ಥರಿಂದ ಈ ದೇಶ ಹಾಳಾಗುವುದಿಲ್ಲ. ನಮ್ಮ ಹಿಂದಿನ ಸಮಾಜ ಬದುಕಿನ ಮೌಲ್ಯವನ್ನು ಕಟ್ಟಿಕೊಡುವಲ್ಲಿ ಯಶಸ್ವಿಯಾಗಿತ್ತು. ಆದರೆ ಇಂದಿನ ಅಕ್ಷರಸ್ಥರು ಈ ದೇಶಕ್ಕೆ ಕಂಟಕವಾಗುತ್ತಿದ್ದು, ದಾರಿ ತಪ್ಪಿ ಸಾಗುತ್ತಿದ್ದಾರೆ. ನಾವೆಲ್ಲರೂ ಒಳ್ಳೆಯ ಮಾರ್ಗದಲ್ಲಿ ಸಾಗಲು ಸಮಾಜವಾದಿ ಸಿದ್ದಾಂತಗಳು ಅವಶ್ಯಕವಾಗಿವೆ ಎಂದರು.
      ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿ, ಇಂದಿನ ಸಮಾಜಕ್ಕೆ ಶಾಂತವೇರಿ ಗೋಪಾಲಗೌಡರ ಬದುಕು ಹಾಗು ಸಮಾಜವಾದಿ ಸಿದ್ದಾಂತಗಳು ಅವಶ್ಯಕವಾಗಿವೆ. ಈ ಹಿನ್ನಲೆಯಲ್ಲಿ ಪರಿಷತ್ ವತಿಯಿಂದ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ವಿದ್ಯಾರ್ಥಿಗಳು ಶಾಂತವೇರಿ ಗೋಪಾಲಗೌಡರ ಕುರಿತು ಹೆಚ್ಚಿನ ಮಾಹಿತಿ ಹೊಂದಬೇಕೆಂದರು.
      ಕಾಲೇಜಿನ ಪ್ರಾಂಶುಪಾಲ ಡಾ. ಧನಂಜಯ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಬಿ.ಕೆ ಜಗನ್ನಾಥ್, ಹಿರಿಯ ಸಾಹಿತಿ ಜಿ. ಸಂಗಮೇಶ್ವರ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ಕರ್ನಾಟಕ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಕೋಡ್ಲು ಯಜ್ಞಯ್ಯ, ಉಪನ್ಯಾಸಕಿ ಡಾ. ಶೈಲಜಾ ನಿವೃತ್ತ ಮುಖ್ಯ ಶಿಕ್ಷಕ ಸಿ. ಜಯಪ್ಪ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
      ಉಪನ್ಯಾಸಕ ಎನ್. ರವಿ ಕಾರ್ಯಕ್ರಮ ನಿರೂಪಿಸಿದರು. ಪರಿಷತ್ ಕಾರ್ಯದರ್ಶಿ ಎಚ್. ತಿಮ್ಮಪ್ಪ ಸ್ವಾಗತಿಸಿದರು. ಎಂ.ಈ ಜಗದೀಶ್, ಕಾಲೇಜಿನ ಬೋಧಕ ಹಾಗು ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ರೇಣುಕಾಂಬ ಟ್ರಾವೆಲ್ಸ್ ಮಾಲೀಕ ಎಂ.ವಿ ರಮೇಶ್ ನಿಧನ

ಎಂ.ವಿ ರಮೇಶ್
ಭದ್ರಾವತಿ, ಜು. ೧೬: ನಗರದ ರೇಣುಕಾಂಬ ಟ್ರಾವೆಲ್ಸ್ ಮಾಲೀಕ, ಭೂತನಗುಡಿ ನಿವಾಸಿ ಎಂ.ವಿ ರಮೇಶ್(೬೨) ಶುಕ್ರವಾರ ಸಂಜೆ ನಿಧನ ಹೊಂದಿದರು.
      ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರನ್ನು ಹೊಂದಿದ್ದರು. ಬಿ.ಎಚ್ ರಸ್ತೆ ಖಾಸಗಿ ಬಸ್ ನಿಲ್ದಾಣ ಸಮೀಪದಲ್ಲಿರುವ ರೇಣುಕಾಂಬ ಟ್ರಾವೆಲ್ಸ್ ಮೂಲಕ ಚಿರಪರಿಚಿತರಾಗಿದ್ದರು. ಇವರ ಅಂತ್ಯಕ್ರಿಯೆ ಶನಿವಾರ ಬೆಳಿಗ್ಗೆ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಇವರ ನಿಧನಕ್ಕೆ ನಗರದ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.

Friday, July 15, 2022

ಭದ್ರಾ ನದಿ ತಡೆಗೋಡೆ ನಿರ್ಮಾಣದ ಪ್ರಸ್ತಾವನೆಗೆ ಸ್ಪಂದಿಸದ ಸರ್ಕಾರ : ಕೇವಲ ೮ ಕೋ. ಬಿಡುಗಡೆ

ಭದ್ರಾವತಿಯಲ್ಲಿ ಭದ್ರಾ ನದಿಯಿಂದ ಉಂಟಾಗಿರುವ ಪ್ರವಾಹ ಪೀಡಿತ ಸ್ಥಳಕ್ಕೆ ಶುಕ್ರವಾರ ಶಾಸಕ ಬಿ.ಕೆ ಸಂಗಮೇಶ್ವರ್ ಭೇಟಿ ಪರಿಶೀಲನೆ ನಡೆಸಿ ಸಂತ್ರಸ್ಥರ ಸಂಕಷ್ಟ ಆಲಿಸಿದರು.
    ಭದ್ರಾವತಿ, ಜು. ೧೫: ನಗರದ ಮಧ್ಯ ಭಾಗದಲ್ಲಿ ಹಾದು ಹೋಗಿರುವ ಭದ್ರಾ ನದಿಯಿಂದ ಪ್ರವಾಹ ತಪ್ಪಿಸಲು ತಡೆಗೋಡೆ ನಿರ್ಮಿಸುವಂತೆ ಸರ್ಕಾರಕ್ಕೆ ಹಲವಾರು ಬಾರಿ ಒತ್ತಾಯಿಸಿದ್ದು, ಆದರೆ ಇದುವರೆಗೂ ಪೂರಕವಾಗಿ ಸ್ಪಂದಿಸಿಲ್ಲ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ವಿಷಾದ ವ್ಯಕ್ತಪಡಿಸಿದರು.
      ಅವರು ಶುಕ್ರವಾರ ಭದ್ರಾ ನದಿಯಿಂದ ಉಂಟಾದ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಸಂತ್ರಸ್ಥರ ಸಂಕಷ್ಟಗಳನ್ನು ಆಲಿಸಿ ಮಾತನಾಡಿದರು. ೨ನೇ ಬಾರಿಗೆ ಶಾಸಕನಾಗಿ ಆಯ್ಕೆಯಾದ ಸಂದರ್ಭದಲ್ಲಿಯೇ ಕವಲಗುಂದಿಯಿಂದ ತರೀಕೆರೆ ರಸ್ತೆಯ ಖಬರ್‌ಸ್ತಾನದವರೆಗೆ ತಡೆಗೋಡೆ ನಿರ್ಮಿಸುವಂತೆ ೧೩೮ ಕೋ.ರು. ಪ್ರಸ್ತಾವನೆ ಸಲ್ಲಿಸಿದ್ದೇನೆ. ಆದರೆ ಕೇವಲ ೮ ಕೋ.ರು. ಮಾತ್ರ ಬಿಡುಗಡೆ ಮಾಡಲಾಗಿದೆ. ಈ ಹಣದಲ್ಲಿಯೇ ಇದೀಗ ಎರಡು ಭಾಗಗಳಲ್ಲಿ ಸ್ವಲ್ಪ ಸ್ವಲ್ಪ ತಡೆಗೋಡೆ ನಿರ್ಮಿಸುವಂತೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ತಗ್ಗು ಪ್ರದೇಶಗಳಲ್ಲಿ ತಡೆಗೋಡೆ ನಿರ್ಮಾಣಗೊಳ್ಳಲಿದೆ ಎಂದರು.
      ಪ್ರತಿ ವರ್ಷ ಮುಳುಗಡೆಗೊಳ್ಳುತ್ತಿರುವ ಹೊಸಸೇತುವೆಗೆ ಪರ್ಯಾಯವಾಗಿ ಮತ್ತೊಂದು ಸೇತುವೆ ಮಂಜೂರಾತಿಯಾಗಿದ್ದು, ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದರು.
      ನಗರ ಹಾಗು ಗ್ರಾಮಾಂತರ ಭಾಗಗಳಲ್ಲಿ ಮಳೆಯಿಂದ ಉಂಟಾದ ಹಾನಿಗೆ ಸರ್ಕಾರ ನಿಗದಿಪಡಿಸಿರುವ ಪರಿಹಾರ ಧನವನ್ನು ಸಂತ್ರಸ್ಥರಿಗೆ ತಕ್ಷಣ ನೀಡಬೇಕು. ಈ ನಿಟ್ಟಿನಲ್ಲಿ ತಹಸೀಲ್ದಾರ್‌ರವರು ಹೆಚ್ಚಿನ ಗಮನ ನೀಡಬೇಕು. ಅಲ್ಲದೆ ಮಳೆಯಿಂದ ಉಂಟಾಗುವ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕೆಂದರು.

ಭದ್ರಾ ನದಿಯಲ್ಲಿ ಪ್ರವಾಹ : ೧೫೦ಕ್ಕೂ ಹೆಚ್ಚು ಮನೆಗಳು ಜಲಾವೃತ

ಭದ್ರಾವತಿ ನಗರಸಭೆ ೨ನೇ ವಾರ್ಡಿನ ಕವಲಗುಂದಿ ಗ್ರಾಮದಲ್ಲಿ ಭದ್ರಾ ನದಿ ಪ್ರವಾಹದಿಂದಾಗಿ ಸುಮಾರು ೩೨ ಮನೆಗಳು ಸಂಪೂರ್ಣವಾಗಿ ಜಲಾವೃತಗೊಂಡಿರುವುದು.
    ಭದ್ರಾವತಿ, ಜು. ೧೫: ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ ಬಿಟ್ಟಿರುವ ಹಿನ್ನಲೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿ ನಗರ ವ್ಯಾಪ್ತಿಯಲ್ಲಿ ಪ್ರವಾಹ ಉಂಟಾಗಿದ್ದು, ನದಿ ತೀರದ ತಗ್ಗು ಪ್ರದೇಶದಲ್ಲಿನ ೧೫೦ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ಪ್ರವಾಹ ನಿಯಂತ್ರಿಸುವಲ್ಲಿ ನಗರಸಭೆ, ತಾಲೂಕು ಪಂಚಾಯಿತಿ ಮತ್ತು ತಾಲೂಕು ಆಡಳಿತಗಳು ಕಾರ್ಯಾಚರಣೆಯಲ್ಲಿ ತೊಡಗಿವೆ.
      ಗುರುವಾರ ಮಧ್ಯಾಹ್ನ ಜಲಾಶಯದಿಂದ ೪ ಕ್ರೆಸ್ಟ್ ಗೇಟ್‌ಗಳ ಮೂಲಕ ನದಿಗೆ ನೀರು ಬಿಡಲಾಗಿತ್ತು. ಸಂಜೆ ೬ ಗಂಟೆ ವೇಳೆಗೆ ಪ್ರವಾಹ ಪರಿಸ್ಥಿತಿ ಕಾಣಿಸಿಕೊಂಡಿದ್ದು, ಹಳೇಸೇತುವೆ ಸಮೀಪದಲ್ಲಿರುವ ಸಂಗಮೇಶ್ವರ ದೇವಸ್ಥಾನ ಸಂಪೂರ್ಣವಾಗಿ ಮುಳುಗಡೆಗೊಂಡಿತು. ರಾತ್ರಿ ೮ ಗಂಟೆ ವೇಳೆಗೆ ಹೊಸಸೇತುವೆ ಸಹ ಮುಳುಗಡೆಗೊಂಡ ಹಿನ್ನಲೆಯಲ್ಲಿ ಸೇತುವೆ ಎರಡು ಬದಿಯಲ್ಲೂ ಬ್ಯಾರಿಗೇಡ್‌ಗಳನ್ನು ಅಳವಡಿಸಿ ಸಂಚಾರ ಸ್ಥಗಿತಗೊಳಿಸಲಾಗಿತ್ತು.


ಭದ್ರಾವತಿ ನಗರಸಭೆ ೩ನೇ ವಾರ್ಡಿನ ಅಂಬೇಡ್ಕರ್ ನಗರದಲ್ಲಿ ಭದ್ರಾ ನದಿ ಪ್ರವಾದಿಂದಾಗಿ ಸಂತ್ರಸ್ಥರಾದವರು ಮಕ್ಕಳುಮರಿಗಳೊಂದಿಗೆ ಕಾಳಜಿ ಕೇಂದ್ರಗಳಿಗೆ ತೆರಳುತ್ತಿರುವುದು.

      ತಗ್ಗು ಪ್ರದೇಶದಲ್ಲಿನ ೧೫೦ಕ್ಕೂ ಹೆಚ್ಚು ಮನೆಗಳಿಗೆ ನೀರು:
      ರಾತ್ರಿ ೧೦ ಗಂಟೆಯ ನಂತರ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದ್ದು, ಇದರಿಂದಾಗಿ ನಗರಸಭೆ ವ್ಯಾಪ್ತಿಯ ಸುಣ್ಣದಹಳ್ಳಿಯಲ್ಲಿ ಸುಮಾರು ೨, ಗುಂಡೂರಾವ್ ಶೆಡ್‌ನಲ್ಲಿ ಸುಮಾರು ೨೦, ಎಕಿನ್ಸಾ ಕಾಲೋನಿಯಲ್ಲಿ ಸುಮಾರು ೪೦, ಅಂಡರ್ ಬ್ರಿಡ್ಜ್ ಬಳಿ ಅಂಬೇಡ್ಕರ್ ನಗರದಲ್ಲಿ ಸುಮಾರು ೬೦ ಹಾಗು ಕವಲಗುಂದಿ ಎ.ಕೆ ಕಾಲೋನಿಯಲ್ಲಿ ಸುಮಾರು ೩೨ ಮನೆಗಳು ಸೇರಿದಂತೆ ಒಟ್ಟು ೧೫೦ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ರಾತ್ರಿಯೇ ಕಾರ್ಯಾಚರಣೆಗೆ ಮುಂದಾದ ನಗರಸಭೆ, ತಾಲೂಕು ಪಂಚಾಯಿತಿ ಮತ್ತು ತಾಲೂಕು ಆಡಳಿತ ಸಿಬ್ಬಂದಿಗಳು ಪ್ರವಾಹ ಪೀಡಿತ ಸಂತ್ರಸ್ಥರಿಗೆ ಕಾಳಜಿ ಕೇಂದ್ರಗಳಲ್ಲಿ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾದರು.
       ೩ ಕಾಳಜಿ ಕೇಂದ್ರ, ೨೫೦ಕ್ಕೂ ಹೆಚ್ಚು ಮಂದಿ ಆಶ್ರಯ :
      ಸದ್ಯದ ಪರಿಸ್ಥಿತಿಯಲ್ಲಿ ನಗರಸಭೆ ವ್ಯಾಪ್ತಿಯ ತರೀಕೆರೆ ರಸ್ತೆಯಲ್ಲಿರುವ ವಳ್ಳುವರ್ ಕಲ್ಯಾಣ ಮಂಟ, ಹಾಲಪ್ಪ ವೃತ್ತದಲ್ಲಿರುವ ಭದ್ರಾ ಪ್ರೌಢಶಾಲೆ ಮತ್ತು ಅಪ್ಪರ್ ಹುತ್ತಾದಲ್ಲಿರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಒಟ್ಟು ೩ ಕಡೆ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಅಗತ್ಯ ಬಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯಲು ತೀರ್ಮಾನಿಸಲಾಗಿದೆ.
      ವಯೋವೃದ್ಧರು, ಮಹಿಳೆಯರು, ಮಕ್ಕಳು ಸೇರಿದಂತೆ ಸುಮಾರು ೨೫೦ಕ್ಕೂ ಹೆಚ್ಚು ಮಂದಿ ತಾತ್ಕಾಲಿಕ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದುಕೊಂಡಿದ್ದು, ಈ ನಡುವೆ ೩ ಕಾಳಜಿ ಕೇಂದ್ರಗಳಲ್ಲೂ ನವಜಾತ ಶಿಶುಗಳೊಂದಿಗೆ ಬಾಣಂತಿ ಮಹಿಳೆಯರಿದ್ದು, ಅವರ ಪರದಾಟ ಹೇಳತಿಹದು. ಊಟದ ವ್ಯವಸ್ಥೆ ಕಲ್ಪಿಸಲಾಗಿದ್ದು, ಜೊತೆಗೆ ಆರೋಗ್ಯ ಸಿಬ್ಬಂದಿಗಳನ್ನು ನಿಯೋಜನೆಗೊಳಿಸಲಾಗಿದೆ. ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಗುರುವಾರ ರಾತ್ರಿಯೇ ನಗರಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದುಕೊಂಡಿರುವವರ ಸಂಕಷ್ಟಗಳನ್ನು ಆಲಿಸಿದರು.


ಭದ್ರಾ ನದಿ ಪ್ರವಾಹದಿಂದಾಗಿ ಸಂತ್ರಸ್ಥರಾಗಿರುವ ಕವಲಗುಂದಿ ಎ.ಕೆ ಕಾಲೋನಿ ನಿವಾಸಿಗಳು ಅಪ್ಪರ್ ಹುತ್ತಾದಲ್ಲಿರುವ ಒಕ್ಕಲಿಗರ ಸಮುದಾಯ ಭವನದಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವುದು.

      ಶಾಸಕ ಬಿ.ಕೆ ಸಂಗಮೇಶ್ವರ್ ಪರಿಶೀಲನೆ :
      ಶಾಸಕ ಬಿ.ಕೆ ಸಂಗಮೇಶ್ವರ್ ಶುಕ್ರವಾರ ಬೆಳಿಗ್ಗೆ ಪ್ರವಾಹ ಪೀಡಿತ ಪ್ರದೇಶಗಳಾದ ಸುಣ್ಣದಹಳ್ಳಿ, ಗುಂಡೂರಾವ್ ಶೆಡ್, ಎಕಿನ್ಸಾ ಕಾಲೋನಿ, ಅಂಬೇಡ್ಕರ್ ನಗರ ಮತ್ತು ಕಲವಗುಂದಿ ಪ್ರದೇಶಗಳಿಗೆ ಭೇಟಿ ಪರಿಶೀಲನೆ ನಡೆಸಿದರು. ಸಂತ್ರಸ್ಥರ ಸಂಕಷ್ಟಗಳನ್ನು ಆಲಿಸಿ ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು. ಅಲ್ಲದೆ ಸಂತ್ರಸ್ಥರಿಗೆ ಕಾಳಜಿ ಕೇಂದ್ರಗಳಲ್ಲಿ ಅಗತ್ಯವಿರುವ ಮೂಲ ಸೌಲಭ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
      ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಮನುಕುಮಾರ್, ತಹಸೀಲ್ದಾರ್ ಆರ್. ಪ್ರದೀಪ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಸೇರಿದಂತೆ ನಗರಸಭೆ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
      ಶಾಸಕರ ವಿರುದ್ಧ ಸಂತ್ರಸ್ಥರ ಆಕ್ರೋಶ :
      ಶಾಸಕ ಬಿ.ಕೆ ಸಂಗಮೇಶ್ವರ್ ನಗರದ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಪ್ರವಾಹ ಪೀಡಿತ ಅಂಬೇಡ್ಕರ್ ನಗರಕ್ಕೆ ಭೇಟಿ ನೀಡಿದ ಪ್ರದೇಶದಲ್ಲಿ ಅಲ್ಲಿನ ನಿವಾಸಿಗಳು, ಸಂತ್ರಸ್ಥರು ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಭದ್ರಾ ನದಿಗೆ ತಡೆಗೋಡೆ ನಿರ್ಮಿಸುವಂತೆ ಹಲವಾರು ವರ್ಷಗಳಿಂದ ಒತ್ತಾಯಿಸಿಕೊಂಡು ಬರಲಾಗುತ್ತಿದೆ. ಆದರೂ ಸಹ ಇದುವರೆಗೂ ಯಾರು ಗಮನ ಹರಿಸಿಲ್ಲ. ಪ್ರತಿ ವರ್ಷ ಪ್ರವಾಹಕ್ಕೆ ಒಳಗಾಗುವುದು ತಪ್ಪಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಭದ್ರಾ ನದಿ ಪ್ರವಾಹದಿಂದಾಗಿ ಹೊಸ ಸೇತುವೆ ಮುಳುಗಡೆಗೊಂಡಿರುವುದನ್ನು ವೀಕ್ಷಿಸಲು ಆಗಮಿಸಿರುವ ಜನರ ದಂಡು.
      ಮುಳುಗಡೆಗೊಂಡ ಹೊಸ ಸೇತುವೆ ವೀಕ್ಷಿಸಲು ಜನರ ದಂಡು :
      ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪದಲ್ಲಿರುವ ಹೊಸಸೇತುವೆ ಗುರುವಾರ ರಾತ್ರಿಯಿಂದ ಮುಳುಗಡೆಗೊಂಡಿದ್ದು, ಸೇತುವೆಯನ್ನು ವೀಕ್ಷಿಸಲು ನಗರದ ವಿವಿಧೆಡೆಗಳಿಂದ ಜನರ ದಂಡು ಆಗಮಿಸುತ್ತಿದೆ. ಕೆಲವರು ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಳ್ಳುವುದು ಕಂಡು ಬಂದರೇ, ಮತ್ತೆ ಕೆಲವರು ಸೆಲ್ಫಿ ತೆಗೆದುಕೊಳ್ಳುವುದು ಕಂಡು ಬಂದಿತು.
      ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಗಿದ್ದು, ಪ್ರವಾಹ ಕ್ಷಣ ಕ್ಷಣಕ್ಕೆ ಹೆಚ್ಚಾಗುತ್ತಿದೆ. ಇದರಿಂದಾಗಿ ತಗ್ಗು ಪ್ರದೇಶದಲ್ಲಿನ ನಿವಾಸಿಗಳಿಗೆ ಮತ್ತಷ್ಟು ಆತಂಕ ಹೆಚ್ಚಾಗಿದೆ. ಸೇತುವೆ ಎರಡು ಬದಿಯಲ್ಲೂ ಬ್ಯಾರಿಗೇಡ್‌ಗಳನ್ನು ಅಳವಡಿಸಲಾಗಿದೆ.


ಭದ್ರಾ ನದಿ ಪ್ರವಾಹದಿಂದಾಗಿ ಹೊಸ ಸೇತುವೆ ಸಂಪೂರ್ಣವಾಗಿ ಮುಳುಗಡೆಗೊಂಡಿರುವ ಹಿನ್ನಲೆಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಈ ಹಿನ್ನಲೆಯಲ್ಲಿ ನಗರದಲ್ಲಿ ವಾಹನ ದಟ್ಟಣೆ ಅಧಿಕವಾಗಿರುವುದು.
      ವಾಹನ ದಟ್ಟಣೆ :
      ಪ್ರವಾಹದಿಂದ ಹೊಸಸೇತುವೆ ಮುಳುಗಡೆಗೊಂಡಿರುವ ಹಿನ್ನಲೆಯಲ್ಲಿ ನಗರದಲ್ಲಿ ವಾಹನ ದಟ್ಟಣೆ ಅಧಿಕವಾಗಿದ್ದು, ಎಲ್ಲಾ ವಾಹನಗಳು ಹಳೇ ಸೇತುವೆ ಮೇಲೆ ಸಂಚರಿಸುವಂತಾಗಿದೆ. ಬಿ.ಎಚ್ ರಸ್ತೆ ಹಾಗು ಸಿ.ಎನ್ ರಸ್ತೆ ಗಳಲ್ಲಿ ವಾಹನ ದಟ್ಟಣೆ ಅಧಿಕವಾಗಿದೆ. ಕಳೆದ ಸುಮಾರು ೪ ವರ್ಷಗಳಿಂದ ಹಳೇ ಸೇತುವೆ ಪಕ್ಕದಲ್ಲಿ ಹೊಸ ಸೇತುವೆ ನಿರ್ಮಾಣಗೊಳ್ಳುತ್ತಿದ್ದು, ಸೇತುವೆ ಕಾಮಗಾರಿ ಶೇ.೮೦ರಷ್ಟು ಮುಕ್ತಾಯಗೊಂಡಿದೆ. ಈ ಸೇತುವೆ ಪೂರ್ಣಗೊಂಡಲ್ಲಿ ಸಂಚಾರ ದಟ್ಟಣೆ ಸ್ವಲ್ಪಮಟ್ಟಿಗೆ ಕಡಿಮೆಯಾಗಲಿದೆ.      

ವಿಐಎಸ್‌ಎಲ್ ಬಂಡವಾಳ ಹಿಂಪಡೆಯುವಿಕೆ ಪ್ರಕ್ರಿಯೆಯಿಂದ ಹೊರಗೆ : ಆಶಾದಾಯಕ ಬೆಳವಣಿಗೆ

 ೩೦೦ ಕೋ. ರು. ಬಂಡವಾಳ ತೊಡಗಿಸಲು ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ಮನವಿ


ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕರ್ಖಾನೆ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ಮತ್ತು ಪದಾಧಿಕಾರಿಗಳು, ನಿರ್ದೇಶಕರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಭದ್ರಾವತಿ, ಜು. ೧೫: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಬಂಡವಾಳ ಹಿಂಪಡೆಯುವಿಕೆ ಪ್ರಕ್ರಿಯೆ ಮೂಲಕ ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದ್ದು, ಇದೀಗ ಕಾರ್ಖಾನೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸುವ ಅಗತ್ಯವಿದೆ. ಪ್ರಸ್ತುತ ಕಾರ್ಖಾನೆಯ ಉತ್ಪಾದನೆಯಲ್ಲಿ ಬೆಳವಣಿಗೆ ಸಾಧಿಸಲು ಉಕ್ಕು ಪ್ರಾಧಿಕಾರ ಕೇವಲ ೩೦೦ ಕೋ.ರು. ಬಂಡವಾಳ ತೊಡಗಿಸಲು ಮುಂದಾಗಬೇಕೆಂದು ಕಾರ್ಖಾನೆಯ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ಮನವಿ ಮಾಡಿದರು.
      ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದೀಗ ಕಾರ್ಖಾನೆ ಆಶಾದಾಯಕ ದಿನಗಳನ್ನು ಎದುರು ನೋಡುವಂತಾಗಿದೆ. ಕೇಂದ್ರ ಸರ್ಕಾರ ೨೦೧೬ರಲ್ಲಿ ಕಾರ್ಖಾನೆಯನ್ನು ಬಂಡವಾಳ ಹಿಂಪಡೆಯುವಿಕೆ ಪ್ರಕ್ರಿಯೆ ಮೂಲಕ ಖಾಸಗೀಕರಣಗೊಳಿಸುವ ಪ್ರಯತ್ನಕ್ಕೆ ಮುಂದಾಯಿತು. ಆದರೆ ಯಾವುದೇ ಖಾಸಗಿ ಮಾಲೀಕರು ಕಾರ್ಖಾನೆಯನ್ನು ಕೊಂಡುಕೊಳ್ಳಲು ಮುಂದೆ ಬರಲಿಲ್ಲ. ಸರ್ಕಾರದ ಪ್ರಯತ್ನ ವಿಫಲವಾಯಿತು. ಇದೀಗ ಕಾರ್ಖಾನೆಯನ್ನು ಬಂಡವಾಳ ಹಿಂಪಡೆಯುವಿಕೆ ಪ್ರಕ್ರಿಯೆಯಿಂದ ಹೊರಗಿಡಲು ಸಂಬಂಧಪಟ್ಟ ಪ್ರಾಧಿಕಾರ ಸೂಚಿಸಿದ್ದು, ಇದು ಕಾರ್ಖಾನೆಯ ಆಶಾದಾಯಕ ಬೆಳೆವಣಿಗೆಯಾಗಿದೆ. ನಮ್ಮೆಲ್ಲರ ಹೋರಾಟ ಯಶಸ್ವಿಯಾದಂತಾಗಿದೆ ಎಂದರು.
      ಪ್ರಸ್ತುತ ಕಾರ್ಖಾನೆಯನ್ನು ಯಾವ ರೀತಿ ಅಭಿವೃದ್ಧಿಪಡಿಸಬೇಕೆಂಬುದರ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಾಗಿದೆ. ಕೇಂದ್ರ ಸರ್ಕಾರ ೨೦೧೬ರಲ್ಲಿ ಬಂಡವಾಳ ಹಿಂಪಡೆಯುವಿಕೆ ಪ್ರಕ್ರಿಯೆ ಮೂಲಕ ಖಾಸಗೀಕರಣಗೊಳಿಸುವ ಪ್ರಯತ್ನಕ್ಕೆ ಮುಂದಾದ ಹಿನ್ನಲೆಯಲ್ಲಿ ಪ್ರತಿ ವರ್ಷ ೧೫೦ ಕೋ. ರು. ನಷ್ಟ ಅನುಭವಿಸುವಂತಾಯಿತು. ನಂತರದ ದಿನಗಳಲ್ಲಿ ಕಾರ್ಖಾನೆಯಲ್ಲಿ ಹೆಚ್ಚಿನ ಶ್ರಮವಹಿಸಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಲಾಭದ ದಾರಿಯಲ್ಲಿ ಸಾಗುತ್ತಿದ್ದು, ನಷ್ಟದ ಪ್ರಮಾಣ ೩೦ ರಿಂದ ೪೫ ಕೋ.ರು. ಗಳಿಗೆ ಕಡಿಮೆಗೊಳಿಸಲಾಗಿದೆ. ನಷ್ಟದಲ್ಲೂ ಲಾಭ ಕಂಡುಕೊಳ್ಳಲಾಗುತ್ತಿದೆ. ಉಕ್ಕು ಪ್ರಾಧಿಕಾರ ೨೦೨೧-೨೨ನೇ ಸಾಲಿನಲ್ಲಿ ೧೨,೦೧೫ ಕೋ. ರು. ಲಾಭ ಗಳಿಸಿದ್ದು, ಮುಂದಿನ ದಿನಗಳಲ್ಲಿ ದೆಶದಲ್ಲಿ ಉಕ್ಕು ವಲಯವನ್ನು ಮತ್ತಷ್ಟು ವಿಸ್ತರಿಸಬೇಕೆಂಬ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಇದಕ್ಕೆ ಪೂರಕವೆಂಬಂತೆ ಉಕ್ಕು ಪ್ರಾಧಿಕಾರ ೧.೫ ಲಕ್ಷ ಕೋಟಿ ಬಂಡವಾಳ ತೊಡಗಿಸಲು ಮುಂದಾಗಿದೆ. ಈ ಬಂಡವಾಳದಲ್ಲಿ ವಿಐಎಸ್‌ಎಲ್ ಕಾರ್ಖಾನೆಗೆ ಕೇವಲ ೩೦೦ ಕೋ.ರು ತೊಡಗಿಸಿದರೆ ಸಾಕು ಕಾರ್ಖಾನೆ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ. ಈಗಾಗಲೇ ಈ ಸಂಬಂಧ ರೂಪುರೇಷೆಗಳನ್ನು ಸಿದ್ದಪಡಿಸಲಾಗಿದೆ. ಈ ಕುರಿತು ಸಂಸದ ಬಿ.ವೈ ರಾಘವೇಂದ್ರ ಅವರೊಂದಿಗೆ ಚರ್ಚಿಸಲಾಗಿದೆ. ರಾಜ್ಯದ ಎಲ್ಲಾ ಸಂಸದರು, ಸಚಿವರು, ಕೇಂದ್ರ ಉಕ್ಕು ಸಚಿವರ ಗಮನಕ್ಕೆ ತರಲಾಗಿದೆ ಎಂದರು.
      ರಾಜ್ಯ ಸರ್ಕಾರ ೨೦೧೯ರಲ್ಲಿ ಕಾರ್ಖಾನೆಗೆ ಬಳ್ಳಾರಿ ಜಿಲ್ಲೆ ರಮಣದುರ್ಗದಲ್ಲಿ ೧೫೦ ಎಕರೆ ಕಬ್ಬಿಣದ ಅದಿರಿನ ಗಣಿ ಮಂಜೂರಾತಿ ಮಾಡಿದ್ದು, ಕೇಂದ್ರ ಸರ್ಕಾರ ಕಾರ್ಖಾನೆಯನ್ನು ಖಾಸಗೀಕರಣಗೊಳಿಸಲು ಪ್ರಯತ್ನಿಸಿದ ಹಿನ್ನಲೆಯಲ್ಲಿ ಗಣಿ ಮಂಜೂರಾತಿ ಪ್ರಕ್ರಿಯೆಯಲ್ಲಿ ಸಮಸ್ಯೆ ಎದುರಾಯಿತು. ಈಗಾಗಲೆ ಈ ಅದಿರು ಗಣಿ ಅಭಿವೃದ್ಧಿಗೆ ೫ ಕೋ.ರು. ಬಂಡವಾಳವನ್ನು ಬಜೆಟ್‌ನಲ್ಲಿ ಮೀಸಲಿಡಲಾಗಿದೆ. ಈ ಅನುದಾನದಲ್ಲಿ ೪ ಕೋ. ರು. ಬಳಸಿಕೊಂಡು ಎಲ್ಲಾ ಇಲಾಖೆಗಳಿಂದ ಅನುಮತಿ ಪಡೆದು ಮುಂದಿನ ಎರಡೂವರೆ ವರ್ಷದಲ್ಲಿ ಅದಿರು ಉತ್ಪಾದನೆ ಕೈಗೊಳ್ಳುವ ನಿಟ್ಟಿನಲ್ಲಿ ಗಮನ ಹರಿಸಬೇಕಾಗಿದೆ. ಅದಿರು ಕಾರ್ಖಾನೆಗೆ ಲಭ್ಯವಾದ ನಂತರ ಅನುಸರಿಸಬೇಕಾದ ಉತ್ಪಾದನಾ ಕ್ರಮಗಳ ಕುರಿತು ಈಗಾಗಲೇ ರೂಪುರೇಷೆ ಸಹ ಸಿದ್ದಪಡಿಸಲಾಗಿದೆ. ಈ ಎಲ್ಲಾ ಪ್ರಕ್ರಿಯೆಗಳು ಕಾರ್ಖಾನೆ ಆಶಾದಾಯಕ ದಿನಗಳನ್ನು ಎದುರು ನೋಡುವ ಬೆಳವಣಿಗೆಯನ್ನು ಉಂಟುಮಾಡಿವೆ ಎಂದು ಸಂತಸ ವ್ಯಕ್ತಪಡಿಸಿದರು.
      ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಯು.ಎ ಬಸಂತ್‌ಕುಮಾರ್, ಕಾರ್ಯದರ್ಶಿ ಕೆ.ಆರ್ ಮನು, ಖಜಾಂಚಿ ಎಸ್. ಮೋಹನ್, ನಿರ್ದೇಶಕರಾದ ಕುಮಾರಸ್ವಾಮಿ, ಯೋಗೇಶ್, ಸುನಿಲ್‌ಕುಮಾರ್, ರಾಜು, ಮಂಜುನಾಥ್, ಮನೋಹರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.