Wednesday, July 27, 2022

ನವೀಕರಣಗೊಂಡ ದೇವಾಲಯದ ಪ್ರಾಂಗಣ ಲೋಕಾರ್ಪಣೆ : ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ಭದ್ರಾವತಿ ನ್ಯೂಟೌನ್ ಅಮಲೋದ್ಭವಿ ಮಾತೆ ದೇವಾಲಯದ ನವೀಕರಣಗೊಂಡ ಪ್ರಾಂಗಣವನ್ನು ಶಿವಮೊಗ್ಗ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಡಾ. ಫ್ರಾನ್ಸಿಸ್ ಸೆರಾವೋ ಲೋಕಾರ್ಪಣೆಗೊಳಿಸಿದರು.
    ಭದ್ರಾವತಿ, ಜು. ೨೭ : ನಗರದ ಪ್ರಮುಖ ಕ್ರೈಸ್ತ ದೇವಾಲಯಗಳಲ್ಲಿ ಒಂದಾಗಿರುವ ನ್ಯೂಟೌನ್ ಅಮಲೋದ್ಭವಿ ಮಾತೆ ದೇವಾಲಯದ ನವೀಕರಣಗೊಂಡ ಪ್ರಾಂಗಣವನ್ನು ಶಿವಮೊಗ್ಗ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಡಾ. ಫ್ರಾನ್ಸಿಸ್ ಸೆರಾವೋ ಲೋಕಾರ್ಪಣೆಗೊಳಿಸಿದರು.
    ತನ್ನದೇ ಆದ ವಿಶಿಷ್ಟತೆಯನ್ನು ಕಾಯ್ದುಕೊಂಡು ಬಂದಿರುವ ಅಮಲೋದ್ಭವಿ ಮಾತೆ ದೇವಾಲಯದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿದ್ದು, ಇಂಟರ್‌ಲಾಕ್ ಅಳವಡಿಕೆಯೊಂದಿಗೆ ನವೀಕರಣಗೊಳಿಸುವ ಮೂಲಕ ಪ್ರಾಂಗಣ ಮತ್ತಷ್ಟು ಆಕರ್ಷಕವಾಗಿ ಕಂಗೊಳಿಸುವಂತೆ ಮಾಡಲಾಗಿದೆ. ಲೋಕಾರ್ಪಣೆಗೊಳಿಸಿದ ಡಾ. ಫ್ರಾನ್ಸಿಸ್ ಸೆರಾವೋ ಅವರು ನವೀಕರಣ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.


      ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ :
    ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೬೦೦ಕ್ಕೂ ಹೆಚ್ಚು ಅಂಕ ಪಡೆದ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಕ್ರೈಸ್ತ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
    ವೈಸಿಎಸ್/ಐಸಿವೈಎಂ, ಪೀಠ ಸೇವಕರು ಮತ್ತು ಮಹಿಳಾ ಸಂಘಟನೆಯ ನೂತನ ಪದಾಧಿಕಾರಿಗಳ ಪ್ರಮಾಣ ವಚನ ಸ್ವೀಕಾರ ನಡೆಯಿತು.
    ದೇವಾಲಯದ ಧರ್ಮಗುರು ಫಾದರ್ ಲಾನ್ಸಿ ಡಿಸೋಜ,  ಪಾಲನ ಪರಿಷತ್ ಕಾರ್ಯದರ್ಶಿ ಅಂತೋಣಿ ವಿಲ್ಸನ್, ಡಾನ್ ಬಾಸ್ಕೋ ಕೈಗಾರಿಕಾ ತರಬೇತಿ ಸಂಸ್ಥೆ ನಿರ್ದೇಶಕ ಫಾದರ್ ಆರೋಗ್ಯ ರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tuesday, July 26, 2022

ನೀರು ಮಿತವಾಗಿ ಸದ್ಬಳಕೆ ಮಾಡಿಕೊಂಡಲ್ಲಿ ೨ ಬೆಳೆ ಬೆಳೆಯಲು ಸಾಧ್ಯ

ಭದ್ರೆಗೆ ಬಾಗಿನ ಸಮರ್ಪಣೆ ಕಾರ್ಯಕ್ರಮದಲ್ಲಿ ಎಚ್.ಆರ್ ಬಸವರಾಜಪ್ಪ

ಭದ್ರಾವತಿ ತಾಲೂಕಿನ ಬಿಆರ್‌ಪಿ ಭದ್ರಾ ಜಲಾಶಯದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ರಾಜ್ಯಾಧ್ಯಕ್ಷ ಎಚ್.ಆರ್ ಬಸವರಾಜಪ್ಪ ಸೇರಿದಂತೆ ರೈತರು ಭದ್ರೆಗೆ ಬಾಗಿನ ಸಮರ್ಪಿಸಿದರು. 
    ಭದ್ರಾವತಿ, ಜು. ೨೬: ಭದ್ರಾ ಜಲಾಶಯದ ನೀರು ಮಿತವಾಗಿ ಸಮರ್ಪಕವಾಗಿ ಬಳಕೆ ಮಾಡಿಕೊಂಡಲ್ಲಿ ರೈತರು ವಾರ್ಷಿಕ ೨ ಬೆಳೆಗಳನ್ನು ಬೆಳೆಯಲು ಸಾಧ್ಯ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ರಾಜ್ಯಾಧ್ಯಕ್ಷ ಎಚ್.ಆರ್ ಬಸವರಾಜಪ್ಪ ಹೇಳಿದರು.
    ಅವರು ಮಂಗಳವಾರ ತಾಲೂಕಿನ ಬಿಆರ್‌ಪಿ ಭದ್ರಾ ಜಲಾಶಯದಲ್ಲಿ ಭದ್ರೆಗೆ ಬಾಗಿನ ಸಮರ್ಪಿಸಿ ಮಾತನಾಡಿದರು. ಕೆಲವು ವರ್ಷಗಳಿಂದ ಜಲಾಶಯ ಪೂರ್ಣಪ್ರಮಾಣದಲ್ಲಿ ಭರ್ತಿಯಾಗುತ್ತಿದ್ದು, ಈ ಬಾರಿ ಇನ್ನೂ ಬೇಗನೆ ಪೂರ್ಣಗೊಂಡಿದೆ. ರೈತರು ಕಳೆದ ಬಾರಿ ೨ ಬೆಳೆಗಳನ್ನು ಬೆಳೆದಿದ್ದರು. ಈ ಬಾರಿ ಸಹ ನೀರನ್ನು ಮಿತವಾಗಿ ಬಳಸಿಕೊಂಡಲ್ಲಿ ೨ ಬೆಳೆಗಳನ್ನು ಬೆಳೆಯಲು ಸಾಧ್ಯ ಎಂದರು.
    ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಗೊಳಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದ್ದು, ಇದಕ್ಕೆ ಯಾವುದೇ ವಿರೋಧವಿಲ್ಲ. ಆದರೆ ಇನ್ನೂ ಮುಖ್ಯ ಕಾಲುವೆಗಳ ಆಧುನೀಕರಣ ಪೂರ್ಣಗೊಂಡಿಲ್ಲ.  ಉಪಕಾಲುವೆಗಳನ್ನು ನಿರ್ಮಾಣ ಮಾಡಿಲ್ಲ. ಇದರಿಂದಾಗಿ ನೀರು ವ್ಯರ್ಥವಾಗುತ್ತಿದೆ. ಈ ಹಿನ್ನಲೆಯಲ್ಲಿ ಸರ್ಕಾರ ತಕ್ಷಣ ಗಮನ ಹರಿಸಿ ಹೊಸದಾಗಿ ಕ್ರಿಯಾಯೋಜನೆ ರೂಪುರೇಷೆ ಸಿದ್ದಗೊಳಿಸಬೇಕೆಂದು ಆಗ್ರಹಿಸಿದರು.
    ಪ್ರಸ್ತುತ ನೀರು ವ್ಯರ್ಥವಾಗುತ್ತಿರುವ ಹಿನ್ನಲೆಯಲ್ಲಿ ಜಲಾಶಯದ ಅಚ್ಚುಕಟ್ಟು ವ್ಯಾಪ್ತಿಯಲ್ಲಿನ ರೈತರು ಸಂಕಷ್ಟ ಎದುರಿಸುವಂತಾಗುತ್ತಿದೆ. ಈ ಹಿನ್ನಲೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ೧೨.೫ ಟಿ.ಎಂ.ಸಿ ನೀರನ್ನು ತುಂಗಾ ನದಿ ಜಲಾಶಯದಿಂದಿ ಬಳಸಿಕೊಳ್ಳಲು ಹೊಸದಾಗಿ ಕ್ರಿಯಾಯೋಜನೆ ಸಿದ್ದಪಡಿಸಬೇಕೆಂದು ಒತ್ತಾಯಿಸಿದರು.
    ಚಂದ್ರಪ್ಪ, ಈಶಣ್ಣ, ಇ.ಬಿ ಜಗದೀಶ್, ಎಸ್. ಶಿವಮೂರ್ತಿ, ರಾಘವೇಂದ್ರ, ಎಂ. ಮಹೇಶ್ವರಪ್ಪ, ನಾಗರಾಜ್, ಸಿ. ಚಂದ್ರಪ್ಪ ಮತ್ತು ಪಂಚಾಕ್ಷರಿ ಸೇರಿದಂತೆ ಇನ್ನಿತರ ರೈತ ಮುಖಂಡರು, ರೈತರು ಸೇರಿದಂತೆ ವಿವಿದ ಸಂಘ-ಸಂಸ್ಥೆಗಳ ಪ್ರಮುಖರು, ಮಹಿಳೆಯರು, ಮಕ್ಕಳು ಪಾಲ್ಗೊಂಡಿದ್ದರು.


ನಗರಸಭೆ ಮಾಜಿ ಉಪಾಧ್ಯಕ್ಷೆ ಕೆ.ಬಿ ಶ್ರೀಲಕ್ಷ್ಮಿಗೆ ಪುತ್ರ ವಿಯೋಗ

ಬಿ.ಕೆ ಅನಿಲ್‌ಕುಮಾರ್  
ಭದ್ರಾವತಿ, ಜು. ೨೬ : ನಗರಸಭೆ ಮಾಜಿ ಉಪಾಧ್ಯಕ್ಷೆ ಕೆ.ಬಿ ಶ್ರೀಲಕ್ಷ್ಮಿ ಅವರ ಪುತ್ರ ಬೊಮ್ಮನಕಟ್ಟೆ ನಿವಾಸಿ ಬಿ.ಕೆ ಅನಿಲ್‌ಕುಮಾರ್(೫೧) ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು.
ಎಂಪಿಎಂ ಕಾರ್ಮಿಕ ಮುಖಂಡ, ತಂದೆ ಬಿ.ಎನ್ ಕೃಷ್ಣಮೂರ್ತಿ, ತಾಯಿ ಕೆ.ಬಿ ಶ್ರೀಲಕ್ಷ್ಮಿ, ಪತ್ನಿ, ಇಬ್ಬರು ಪುತ್ರಿಯರು ಇದ್ದರು. ಮೃತರ ನಿಧನಕ್ಕೆ ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸದಸ್ಯ ಬಿ.ಕೆ ಮೋಹನ್, ಮಾಜಿ ಸದಸ್ಯರಾದ ವೆಂಕಟಯ್ಯ, ರಾಜು, ಪುಟ್ಟೇಗೌಡ, ಕುರುಹಿನಶೆಟ್ಟಿ ಸಮಾಜ, ದೇವಾಂಗ ಸಮಾಜ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.


ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ : ನಿಷೇಧಿತ ಪ್ಲಾಸ್ಟಿಕ್ ವಶ

ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು ದಂಡ ವಿಧಿಸಿರುವ ಘಟನೆ ನಡೆದಿದೆ.
    ಭದ್ರಾವತಿ, ಜು. ೨೬: ನಗರಸಭೆ ವ್ಯಾಪ್ತಿಯಲ್ಲಿ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು ದಂಡ ವಿಧಿಸಿರುವ ಘಟನೆ ನಡೆದಿದೆ.
    ಶಿವಮೊಗ್ಗ ಪರಿಸರ ಇಲಾಖೆ ಅಧಿಕಾರಿಗಳೊಂದಿಗೆ ಮಂಗಳವಾರ ನಗರದ ಸಿ.ಎನ್ ರಸ್ತೆ, ಭೂತನಗುಡಿ ವ್ಯಾಪ್ತಿಯಲ್ಲಿ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಲಾಯಿತು.
    ನಗರಸಭೆ ಪರಿಸರ ಅಭಿಯಂತರ ಪ್ರಭಾಕರ್, ಹಿರಿಯ ಆರೋಗ್ಯ ನಿರೀಕ್ಷಕರಾದ ಆರ್.ಬಿ ಸತೀಶ್, ಆಶಾಲತಾ ಸೇರಿದಂತೆ ಇನ್ನಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಸರ್ಕಾರ ಜು.೧ರಿಂದ ರಾಜ್ಯಾದ್ಯಂತ ಪ್ಲಾಸ್ಟಿಕ್ ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದ್ದು, ನಗರಸಭೆ ಅಧಿಕಾರಿಗಳು ಪ್ರತಿದಿನ ದಾಳಿ ಕಾರ್ಯಾಚರಣೆ ಕೈಗೊಳ್ಳುತ್ತಿದ್ದಾರೆ. ಆದರೂ ಸಹ ಪ್ಲಾಸ್ಟಿಕ್ ಬಳಕೆ ಮುಂದುವರೆದಿದೆ.

Monday, July 25, 2022

ಜು.೨೬ರಂದು ವಿದ್ಯುತ್ ವ್ಯತ್ಯಯ

    ಭದ್ರಾವತಿ, ಜು. ೨೫: ಮೆಸ್ಕಾಂ ನಗರ ಉಪವಿಭಾಗ ಘಟಕ-೨ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜು.೨೬ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೬.೩೦ರ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
    ಹಳೇನಗರ, ಬಸವೇಶ್ವರ ವೃತ್ತ, ಖಾಜಿ ಮೊಹಲ್ಲಾ, ಭೂತನಗುಡಿ, ನಗರಸಭೆ ಕಛೇರಿ ಸುತ್ತಮುತ್ತಲ ಪ್ರದೇಶ, ಸಿ.ಎನ್ ರಸ್ತೆ, ಗಾಂಧಿನಗರ, ಕೋಡಿಹಳ್ಳಿ, ಮಾಧವಚಾರ್ ವೃತ್ತ, ಸರ್ಕಾರಿ ಅಸ್ಪತ್ರೆ, ಮಾಧವ ನಗರ, ಗೌರಾಪುರ, ಎನ್.ಎಸ್.ಟಿ ರಸ್ತೆ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.

ಸಮಾಜದ ಅಭಿವೃದ್ಧಿಯಲ್ಲಿ ಪತ್ರಕರ್ತರ ಪಾತ್ರ ಪ್ರಮುಖ : ಬಿ.ಕೆ ಸಂಗಮೇಶ್ವರ್

ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಐ.ಕ್ಯೂ.ಎ.ಸಿ ಅಡಿಯಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಶಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆಯಲ್ಲಿ ಹಿರಿಯ ಪತ್ರಕರ್ತ ಶೈಲೇಶ್ ಕೋಠಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಜು. ೨೫: ಸಮಾಜವನ್ನು ಎಚ್ಚರಿಸುವ ಕೆಲಸ ಪತ್ರಕರ್ತರು ಮಾಡುತ್ತಿದ್ದು, ಅಲ್ಲದೆ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
    ಅವರು ಸೋಮವಾರ ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಐ.ಕ್ಯೂ.ಎ.ಸಿ ಅಡಿಯಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಶಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
    ೪ನೇ ಅಂಗವಾಗಿ ಗುರುತಿಸಿಕೊಂಡಿರುವ ಪತ್ರಿಕಾರಂಗ ತನ್ನದೇ ಆದ ಮೌಲ್ಯಗಳನ್ನು ಹೊಂದುವ ಜೊತೆಗೆ ಸಮಾಜದಲ್ಲಿನ ಅಂಕು ಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ಬದ್ದತೆ ಕಾಯ್ದುಕೊಂಡು ಬಂದಿದೆ ಎಂದರು.
    ಸಂಘದ ಜಿಲ್ಲಾಧ್ಯಕ್ಷ ಕೆ.ವಿ ಶಿವಕುಮಾರ್ ಮಾತನಾಡಿ, ದೇಶದಲ್ಲಿ ಮುದ್ರಣ ಮಾದ್ಯಮದ ಕೊಡುಗೆ ಅಪಾರವಾಗಿದೆ. ಪ್ರಸ್ತುತ ದೃಶ್ಯ ಮಾಧ್ಯಮ ಹಾಗು ಸಾಮಾಜಿಕ ಜಾಲತಾಣಗಳ ಪೈಪೋಟಿ ನಡುವೆಯೂ ಮುದ್ರಣ ಮಾದ್ಯಮ ತನ್ನ ತನವನ್ನು ಉಳಿಸಿಕೊಂಡು ಮುನ್ನಡೆಯುತ್ತಿದೆ. ಇಂದಿನ ಯುವ ಪೀಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯವಾಗಿ ಕಾಲ ಕಳೆಯುವ ಬದಲು ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.
    ಕಾಲೇಜಿನ ಪ್ರಾಂಶುಪಾಲ ಡಾ. ಧನಂಜಯ ಅಧ್ಯಕ್ಷತೆ ವಹಿಸಿದ್ದರು. ಸಂಘದ ತಾಲೂಕು ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಹಿರಿಯ ಪತ್ರಕರ್ತ ಶೈಲೇಶ್ ಕೋಠಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಜಿಲ್ಲಾ ಉಪಾಧ್ಯಕ್ಷ ಆರ್.ಎಸ್ ಹಾಲಸ್ವಾಮಿ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ, ಉಪನ್ಯಾಸಕ ಮಹಮದ್ ನಜೀಬ್, ಉದ್ಯಮಿ ಬಿ.ಕೆ ಜಗನ್ನಾಥ್, ಎಸ್.ಎಸ್ ಭೈರಪ್ಪ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಪತ್ರಿಕಾ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸ್ಪರ್ಧೆಯಲ್ಲಿ ಸುಮಾರು ೪೦ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳಾದ ತೋಹಿದ್ ಅಹಮದ್ ಭಾಷಣ, ಐಶ್ವಯ್ಯ ವೀಣಾವಾದನ ಮತ್ತು ಮಂಜುನಾಥ ಕಮಲಕರ್ ನಾಯ್ಕ ಗೀತಾ ಗಾಯನ ನಡೆಸಿಕೊಟ್ಟರು.
    ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕರಾದ ಡಾ. ವರದರಾಜ ಮತ್ತು ಗುರುಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಖಜಾಂಚಿ ಅನಂತಕುಮಾರ್ ವಂದಿಸಿದರು. ಪತ್ರಕರ್ತರು, ಕಾಲೇಜಿನ ಅಧ್ಯಾಪಕ, ಅಧ್ಯಾಪಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಗ್ರಾಮಠಾಣಾ ಜಾಗ ನಿಯಮಬಾಹಿರವಾಗಿ ಖಾಸಗಿ ವ್ಯಕ್ತಿಗಳಿಗೆ ಹಂಚಿಕೆ : ಅಭಿವೃದ್ಧಿ ಅಧಿಕಾರಿ ಕೆ. ಮಧುಸೂಧನ್ ಅಮಾನತ್ತು

ಕೆ. ಮಧುಸೂಧನ್
    ಭದ್ರಾವತಿ, ಜು. ೨೫ : ತಾಲೂಕಿನ ಹಿರಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇ ಹಿರಿಯೂರು ಗ್ರಾಮದ ಗ್ರಾಮಠಾಣಾ ಜಾಗವನ್ನು ನಿಯಮಬಾಹಿರವಾಗಿ ಖಾಸಗಿ ವ್ಯಕ್ತಿಗಳಿಗೆ ಹಂಚಿಕೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿವೃದ್ಧಿ ಅಧಿಕಾರಿ ಕೆ. ಮಧುಸೂಧನ್ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್ ವೈಶಾಲಿ ಆದೇಶ ಹೊರಡಿಸಿದ್ದಾರೆ.
    ಪ್ರಸ್ತುತ ತಾಲೂಕಿನ ಸೈದರಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಕೆ. ಮಧುಸೂಧನ್ ಹಿರಿಯೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿದ್ದ ಸಂದರ್ಭದಲ್ಲಿ ಹಳೇ ಹಿರಿಯೂರು ಗ್ರಾಮದ ಗ್ರಾಮ ಠಾಣಾ ಜಾಗವನ್ನು ನಿಯಮಬಾಹಿರವಾಗಿ ಒಟ್ಟು ೧೪ ಜನ ಖಾಸಗಿ ವ್ಯಕ್ತಿಗಳಿಗೆ ಸ್ವತ್ತಿನ ಸೃಜನೆ ಮಾಡಿ ಕೈ ಬರಹದಲ್ಲಿ ನಮೂನೆ ೯ ಮತ್ತು ೧೧ ಎಗಳನ್ನು ವಿತರಿಸಿ, ಖಾತೆಗಳಿಗೆ ಕಂದಾಯ ರಶೀದಿಗಳನ್ನು ನೀಡಿದ್ದರು. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ೧೯೯೩ರ ಪ್ರಕರಣ ೨೦೦೯ ಮತ್ತು ೨೧೦ಗಳನ್ನು ಉಲ್ಲಂಘಿಸಿರುವ ಕುರಿತು ದೂರುಗಳು ಸಲ್ಲಿಕೆಯಾಗಿದ್ದವು. ಅಲ್ಲದೆ ಈ ಸಂಬಂಧ ಕರ್ನಾಟಕ ದಲಿತ ಸಂಘರ್ಷ ಸಮಿತಿ ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿತ್ತು.
    ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್‌ರವರು ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್ ವೈಶಾಲಿ ಅವರಿಗೆ ಪರಿಶೀಲನಾ ವರದಿ ಸಲ್ಲಿಸಿದ್ದರು.