Friday, August 12, 2022

ಶ್ರೀ ಶನೈಶ್ವರಸ್ವಾಮಿಯ ಉತ್ಸವ ಮೂರ್ತಿ ಚರಪ್ರತಿಷ್ಠಾಪನಾ ಮಹೋತ್ಸವ

ಭದ್ರಾವತಿ ಹಳೇನಗರದ ಭೂತನಗುಡಿ ಶ್ರೀ ಶನೈಶ್ವರ, ಶ್ರೀ ಗಣಪತಿ, ಶ್ರೀ ಕೆಂಚಮ್ಮ ಮತ್ತು ಶ್ರೀ ಭೂತಪ್ಪನವರ ದೇವಸ್ಥಾನದಲ್ಲಿ ಶುಕ್ರವಾರ ಶ್ರೀ ಶನೈಶ್ವರಸ್ವಾಮಿಯ ಉತ್ಸವ ಮೂರ್ತಿ ಚರಪ್ರತಿಷ್ಠಾಪನಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
    ಭದ್ರಾವತಿ, ಆ. ೧೨: ಹಳೇನಗರದ ಭೂತನಗುಡಿ ಶ್ರೀ ಶನೈಶ್ವರ, ಶ್ರೀ ಗಣಪತಿ, ಶ್ರೀ ಕೆಂಚಮ್ಮ ಮತ್ತು ಶ್ರೀ ಭೂತಪ್ಪನವರ ದೇವಸ್ಥಾನದಲ್ಲಿ ಶುಕ್ರವಾರ ಶ್ರೀ ಶನೈಶ್ವರಸ್ವಾಮಿಯ ಉತ್ಸವ ಮೂರ್ತಿ ಚರಪ್ರತಿಷ್ಠಾಪನಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
    ಮಹೋತ್ಸವದ ಅಂಗವಾಗಿ ವಿಶೇಷ ಅಲಂಕಾರ, ಹೋಮ-ಹವನ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
    ದೇವಸ್ಥಾನದ ಅರ್ಚಕರು,  ಸೇವಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿಣಿ ಸಮಿತಿ ಸದಸ್ಯರು, ಸೇವಾಕರ್ತರು, ಭಕ್ತಾಧಿಗಳು ಪಾಲ್ಗೊಂಡಿದ್ದರು.

೭೫ನೇ ಸ್ವಾತಂತ್ರ್ಯೋತ್ಸವ ನೆನಪಿಗೆ ಹಿರಿಯ ಸದಸ್ಯರಿಗೆ ಗೌರವಾರ್ಪಣೆ, ನೌಕರರ ವರ್ಗಕ್ಕೆ ಸನ್ಮಾನ, ಪ್ರತಿಭಾ ಪುರಸ್ಕಾರ

ಭದ್ರಾವತಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಜಿ. ಸುರೇಶಯ್ಯ ಮಾತನಾಡಿದರು.
    ಭದ್ರಾವತಿ, ಆ. ೧೨: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ವತಿಯಿಂದ ಆ.೧೪ರ ಭಾನುವಾರ ಬೆಳಿಗ್ಗೆ ೧೦.೩೦ಕ್ಕೆ ಹಳೇನಗರದ ವೀರಶೈವ ಸಭಾಭವನದಲ್ಲಿ ಪ್ರತಿಭಾ ಪುರಸ್ಕಾರ, ಉಡಿ ತುಂಬುವ ಕಾರ್ಯಕ್ರಮ ಮತ್ತು ೭೫ನೇ ಸ್ವಾತಂತ್ರ್ಯೋತ್ಸವದ ಸವಿನೆನಪಿಗೆ ಮಹಾಸಭಾದ ಹಿರಿಯ ಸದಸ್ಯರಿಗೆ ಗೌರವಾರ್ಪಣೆ ಹಾಗು ಸಮಾಜದ ನೌಕರರ ವರ್ಗಕ್ಕೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾ ತಾಲೂಕು ಅಧ್ಯಕ್ಷ ಜಿ. ಸುರೇಶಯ್ಯ ಹೇಳಿದರು.
    ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಹಾಸಭಾ ಗೌರವಾಧ್ಯಕ್ಷರಾದ ಹಿರೇಮಠ ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಾನೂನು ಮತ್ತು ಸಂಸದೀಯ ವ್ಯವಹಾರ, ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ ಮಾಧುಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು.
    ಸಂಸದ ಬಿ.ವೈ ರಾಘವೇಂದ್ರ, ಶಾಸಕ ಬಿ.ಕೆ ಸಂಗಮೇಶ್ವರ್, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್. ರುದ್ರೇಗೌಡ, ಮಹಾಸಭಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ನಟರಾಜ್ ಸಾಗರನಹಳ್ಳಿ, ಜಿಲ್ಲಾಧ್ಯಕ್ಷ ರುದ್ರಮುನಿ ಎಸ್ ಸಜ್ಜನ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಕರ್ನಾಟಕ ರಾಜ್ಯ ಒಳಚರಂಡಿ ಹಾಗು ನೀರು ಸರಬರಾಜು ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶರಣಯ್ಯ, ಜಿಲ್ಲಾ ಖಜಾನೆ ಉಪನಿರ್ದೇಶಕಿ ಎಚ್.ಎಸ್ ಸಾವಿತ್ರಿ, ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಿ. ಸಿದ್ದಬಸಪ್ಪ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಹಟ್ಟಿ ಚಿನ್ನದ ಗಣಿ ನಿರ್ದೇಶಕ ಎಸ್. ಹಾಲೇಶ್ ಕೂಡ್ಲಿಗೆರೆ ಮತ್ತು ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷ ಎಸ್. ವಿರುಪಾಕ್ಷಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
    ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಉಪನ್ಯಾಸ ನಡೆಸಿಕೊಡಲಿದ್ದು, ಜಿ. ಸುರೇಶಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
    ಪತ್ರಿಕಾಗೋಷ್ಠಿಯಲ್ಲಿ ಮಹಾಸಭಾ ತಾಲೂಕು ಉಪಾಧ್ಯಕ್ಷ ವಾಗೀಶ್, ಪ್ರಧಾನ ಕಾರ್ಯದರ್ಶಿ ಕೆ.ಎಸ್ ರೇವಪ್ಪ, ಖಜಾಂಚಿ ಜಿ.ಎಂ ಮೂರ್ತಿ, ನಿರ್ದೇಶಕಿಯರಾದ ಆರ್.ಎಸ್ ಶೋಭಾ, ಸೌಭಾಗ್ಯಮ್ಮ, ಮಹಿಳಾ ಘಟಕದ ಅಧ್ಯಕ್ಷೆ ರೂಪ ನಾಗರಾಜ್, ಕವಿತಾ ಸುರೇಶ್, ಯುವ ಘಟಕದ ಅಧ್ಯಕ್ಷ ಎಚ್. ಮಂಜುನಾಥ್, ಆನಂದ, ಬಿ.ಎಂ ರಮೇಶ್  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮಹಾಪುರುಷರ ಆದರ್ಶತನಗಳನ್ನು ಮೈಗೂಡಿಸಿಕೊಳ್ಳಿ

 


ಭದ್ರಾವತಿ, ಆ. ೧೨: ಮಹಾಪುರುಷರ ಜಯಂತಿಗಳ ಆಚರಣೆಗಳಿಗೆ ನೀಡುವಷ್ಟು ಮಹತ್ವವನ್ನು ಅವರ ಆದರ್ಶತನಗಳನ್ನು ಅಳವಡಿಸಿಕೊಳ್ಳುವ ಕಡೆಗೂ ನೀಡಬೇಕೆಂದು ಸಾಹಿತಿ, ಚಿಂತಕ ರಾಜೇಂದ್ರ ಬುರುಡಿಕಟ್ಟಿ ಹೇಳಿದರು.

ಅವರು ಶುಕ್ರವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿವಶರಣ ನುಲಿಯ ಚಂದಯ್ಯನವರ ೯೧೫ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ನಾವುಗಳು ಮಹಾಪುರುಷರ ಜಯಂತಿ ಆಚರಣೆಯನ್ನು ಬಹಳ ವಿಜೃಂಭಣೆಯಿಂದ, ಸಡಗರ, ಸಂಭ್ರಮದಿಂದ ಆಚರಿಸುತ್ತೇವೆ. ಆಚರಣೆಯ ಎಲ್ಲಾ ವಿಧಾನಗಳನ್ನು ಪಾಲನೆ ಮಾಡುತ್ತೇವೆ. ಆದರೆ ಅವರ ಆದರ್ಶತನಗಳನ್ನು ನಾವುಗಳು ಮೈಗೂಡಿಸಿಕೊಳ್ಳುತ್ತಿಲ್ಲ. ಇದರಿಂದಾಗಿ ಮಹಾಪುರಷರ ಜಯಂತಿ ಕೇವಲ ಆಚರಣೆಗಳಿಗೆ ಮಾತ್ರ ಸೀಮಿತವಾಗುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದರು.

೧೨ನೇ ಶತಮಾನ ಒಂದು ಕ್ರಾಂತಿ ಯುಗವಾಗಿದ್ದು, ಜಗಜ್ಯೋತಿ ಬಸವಣ್ಣನವರು ಕೈಗೊಂಡ ನಿರ್ಧಾರಗಳು ಕ್ರಾಂತಿಕಾರಕ ಬದಲಾವಣೆಗಳನ್ನು ಉಂಟು ಮಾಡಿದವು. ಲಿಂಗಾಯತ ಎಂಬುದು ಒಂದು ಧರ್ಮವಲ್ಲ, ಜಾತಿಯಲ್ಲ ಬದಲಾಗಿ ಕಾಯಕ ಸಮಾಜವಾಗಿದೆ. ೧೨ನೇ ಶತಮಾನ ಸಮಾಜದಲ್ಲಿ ಎಲ್ಲರೂ ಸಮಾನರು, ಯಾವುದೇ ಬೇಧಭಾವವಿಲ್ಲ ಎಂಬುದನ್ನು ತೋರಿಸಿಕೊಟ್ಟಿದೆ. ನುಲಿಯ ಚಂದಯ್ಯನವರು ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ. ಅವರ ಚಿಂತನೆಗಳು, ಆದರ್ಶಗಳು ಇಂದಿನ ಸಮಾಜಕ್ಕೆ ಅವಶ್ಯಕವಾಗಿವೆ ಎಂದರು.

ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಿದ್ದರು. ತಹಸೀಲ್ದಾರ್ ಆರ್. ಪ್ರದೀಪ್, ನಗರಸಭಾ ಸದಸ್ಯ ಬಿ.ಕೆ ಮೋಹನ್, ಮಾಜಿ ಸದಸ್ಯ ಶಿವರಾಜ್, ರಮೇಶ್, ಬಗರ್ ಹುಕುಂ ಸಮಿತಿ ಅಧ್ಯಕ್ಷ ನಾಗೇಶ್, ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಬಿ.ಎಸ್ ಗಣೇಶ್, ನಾಗೇಶ್, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಆಶಾಲತಾ, ಹಿರಿಯ ಆರೋಗ್ಯ ಸಹಾಯಕ ಆನಂದಮೂರ್ತಿ ಹಾಗು ಕೊರಚ-ಕೊರಮ ಸಮಾಜದ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಗರಸಭೆ ಸಮುದಾಯ ಸಂಘಟಕ ಈಶ್ವರಪ್ಪ ಸ್ವಾಗತಿಸಿದರು. ನಿವೃತ್ತ ಮುಖ್ಯ ಶಿಕ್ಷಕ ಸಿ. ಜಯಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕನಕ ವಿದ್ಯಾಸಂಸ್ಥೆಯ ಆರ್. ಸಂಜನ, ಎಸ್. ನಂದಿತ ಮತ್ತು ಪುಷ್ಪ ತಂಡದವರು ಪ್ರಾರ್ಥಿಸಿದರು.

Thursday, August 11, 2022

ಮಕ್ಕಳು ಜಂತುಹುಳು ಬಾಧೆ ಬಗ್ಗೆ ಹೆಚ್ಚಿನ ಗಮನ ನೀಡಿ : ಡಾ. ಎಂ.ವಿ ಅಶೋಕ್

ಭದ್ರಾವತಿ ತರೀಕೆರೆ ರಸ್ತೆಯ ಮಹಾತ್ಮಗಾಂಧಿ ವೃತ್ತದ ಸಮೀಪದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ರಾಷ್ಟ್ರೀಯ ಜಂತುಹುಳ ನಿವಾರಣೆ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಜು. ೧೧:  ಮಕ್ಕಳ ಆರೋಗ್ಯದ ಬಗ್ಗೆ ಸಹ ಹೆಚ್ಚಿನ ಕಾಳಜಿವಹಿಸಲಾಗಿದ್ದು, ಜಂತುಹುಳು ಬಾಧೆಯಿಂದ ಮಕ್ಕಳನ್ನು ರಕ್ಷಿಸುವ ಉದ್ದೇಶದಿಂದ ಜಂತುಹುಳು ನಿವಾರಣಾ ಮಾತ್ರೆಗಳನ್ನು ನೀಡಲಾಗುತ್ತಿದೆ. ಕಡ್ಡಾಯವಾಗಿ ಮಕ್ಕಳು ಪ್ರತಿ ೬ ತಿಂಗಳಿಗೆ ಒಂದು ಮಾತ್ರೆ ತೆಗೆದುಕೊಳ್ಳಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್ ಹೇಳಿದರು.
    ಅವರು ನಗರದ ತರೀಕೆರೆ ರಸ್ತೆಯ ಮಹಾತ್ಮಗಾಂಧಿ ವೃತ್ತದ ಸಮೀಪದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಜಂತುಹುಳ ನಿವಾರಣೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಜಂತುಹುಳು ಬಾಧೆಯಿಂದಾಗಿ ಬಹಳಷ್ಟು ಮಕ್ಕಳು ಅಪೌಷ್ಠಿಕತೆ ಹಾಗು ರಕ್ತಹೀನತೆಯಿಂದ ಬಳಲುತ್ತಿದ್ದು, ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿವಹಿಸಿರುವ ಸರ್ಕಾರ ಜಂತುಹುಳು ನಿವಾರಣಾ ಮಾತ್ರೆಗಳನ್ನು ಉಚಿತವಾಗಿ ನೀಡುತ್ತಿದೆ ಎಂದರು.
    ಜಂತುಹುಳು ಬಾಧೆ ತಡೆಗಟ್ಟಲು ಮಕ್ಕಳು ತಮ್ಮ ಸುತ್ತಮುತ್ತಲ ಪರಿಸರದಲ್ಲಿ ನೈರ್ಮಲ್ಯ ಕಾಪಾಡಿಕೊಳ್ಳುವ ಮೂಲಕ ಸ್ವಚ್ಛತೆಗೆ ಗಮನ ನೀಡಬೇಕು. ಜೊತೆಗೆ ಶುದ್ಧ ಆಹಾರ ಸೇವನೆ ಮಾಡಬೇಕೆಂದರು.
    ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಶ್, ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ಪಂಚಾಕ್ಷರಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನಟರಾಜ್, ನೆಹರು ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಚ್ಯುತ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಾ ಬಾಯಿ ಸೇರಿದಂತೆ ಇನ್ನಿತರರು ಜಂತು ಬಾಧೆ ಹಾಗು ನಿರ್ಮೂಲನೆಗೆ ಅನುಸರಿಸಬೇಕಾದ ಕ್ರಮ ಕುರಿತು ವಿತರಿಸಿದರು.
    ಟಿಎಲ್‌ಎಚ್‌ವಿ ಪ್ರೇಮಕುಮಾರಿ, ಆಶಾ ಮೆಂಟರ್ ಬಿ.ಎಂ ವಸಂತ, ಐಸಿಡಿಎಸ್ ಶಾರದ, ದೈಹಿಕ ಶಿಕ್ಷಕಿ ಜಿ.ಕೆ ದಿವ್ಯ, ಸಹ ಶಿಕ್ಷಕರಾದ ಚಂದ್ರನಾಯ್ಕ, ಡಿ.ಎ ಅಶ್ವಥ್, ಎನ್. ಮಮತ, ಎಚ್.ಜಿ ಗೀತಾ, ಸಲ್ಮಾ, ಜಿ.ಡಿ ತಿಮ್ಮಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಶಿಕ್ಷಕ ಎಂ.ಆರ್ ರವೀಂದ್ರ ಸ್ವಾಗತಿಸಿದರು. ಕವಿತಾ ವಂದಿಸಿದರು.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನಾ ಧರಣಿ ಸತ್ಯಾಗ್ರಹ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭದ್ರಾವತಿಯಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ತಾಲೂಕು ಕಛೇರಿ ಪೊರಕೆ ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
    ಭದ್ರಾವತಿ, ಆ. ೧೧: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸಲಾಯಿತು.
    ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಿಂಭಾಗದಲ್ಲಿರುವ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಭವನ ಅವ್ಯವಸ್ಥೆಗಳ ಆಗರವಾಗಿದ್ದು, ತಕ್ಷಣ ಕ್ರಮ ಕೈಗೊಳ್ಳುವುದು. ಬಗರ್ ಹುಕುಂ, ನಿವೇಶನ ರಹಿತರ ಹಾಗು ಸ್ಮಶಾನ ರಹಿತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಲಾಯಿತು.
    ಇದಕ್ಕೂ ಮೊದಲು ಅಂಬೇಡ್ಕರ್ ಭವನದಿಂದ ತಾಲೂಕು ಕಛೇರಿವರೆಗೂ ಪೊರಕೆ ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಸಮಿತಿ ಅಧ್ಯಕ್ಷ ಬಿ.ಎನ್ ರಾಜು ನೇತೃತ್ವ ವಹಿಸಿದ್ದರು.

ಪಿಕೆಟಿಂಗ್ ಚಳುವಳಿ ಮೂಲಕ ೩ ತಿಂಗಳ ಸೆರೆವಾಸ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ನಾಗಪ್ಪ ಅವರಿಗೆ ಸನ್ಮಾನ

ದೇಶದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಪಿಕೆಟಿಂಗ್ ಚಳುವಳಿ ಮೂಲಕ ೩ ತಿಂಗಳ ಸೆರೆವಾಸ ಅನುಭವಿಸಿದ ಸ್ವಾತಂತ್ರ್ಯ ಹೋರಾಟಗಾರ ಭದ್ರಾವತಿ ಕೇಶವಪುರ ಬಡಾವಣೆ ನಿವಾಸಿ ನಾಗಪ್ಪ ಅವರನ್ನು ತಾಲೂಕು ಆಡಳಿತ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಆ. ೧೧: ದೇಶದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಪಿಕೆಟಿಂಗ್ ಚಳುವಳಿ ಮೂಲಕ ೩ ತಿಂಗಳ ಸೆರೆವಾಸ ಅನುಭವಿಸಿದ ಸ್ವಾತಂತ್ರ್ಯ ಹೋರಾಟಗಾರ ನಾಗಪ್ಪ ಅವರನ್ನು ತಾಲೂಕು ಆಡಳಿತ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
    ದೇಶದ ೭೫ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಹಿನ್ನಲೆಯಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಮಹಾನೀಯರನ್ನು, ದೇಶ ಭಕ್ತರನ್ನು ನೆನಪು ಮಾಡಿಕೊಳ್ಳುವುದು ನಮ್ಮಲ್ಲರ ಕರ್ತವ್ಯವಾಗಿದೆ. ಈ ಹಿನ್ನಲೆಯಲ್ಲಿ ನಗರದ ಕೇಶವಪುರ ಬಡಾವಣೆ ನಿವಾಸಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ನಾಗಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ತಹಸೀಲ್ದಾರ್ ಆರ್. ಪ್ರದೀಪ್, ಕಂದಾಯ ನಿರೀಕ್ಷಕ ಪ್ರಶಾಂತ್, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯೆ ಹೇಮಾವತಿ ವಿಶ್ವನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Wednesday, August 10, 2022

ಎಸ್ ಸಿ/ಎಸ್ ಟಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ವಿನಾಯಿತಿ ನೀಡಿ : ಪ್ರತಿಭಟನೆ

ಭದ್ರಾವತಿ, ಆ.11: ತಾಲೂಕಿನ ಕುವೆಂಪು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡುವಂತೆ ಆಗ್ರಹಿಸಿ ಗುರುವಾರ ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾ (ಎನ್ಎಸ್ ಯುಐ) ವತಿಯಿಂದ ಪ್ರತಿಭಟನೆ ನಡೆಸಲಾಯಿತು.
      ಬಿಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದ ವಿದ್ಯಾರ್ಥಿಗಳು ಹಾಗೂ ಸಂಘಟನೆಗೆ ಪ್ರಮುಖ ಮಾತನಾಡಿ, ವಿಶ್ವವಿದ್ಯಾಲಯ ಆ. 8ರಂದು ಸುತ್ತೋಲೆ ಹೊರಡಿಸಿ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳು 1720 ರು. ಪರೀಕ್ಷಾ ಶುಲ್ಕ ಪಾವತಿಸಲು ಸೂಚಿಸಿದೆ. ಇದೀಗ ಸಾಮಾನ್ಯ ವರ್ಗದವರ ಪರೀಕ್ಷಾ ಶುಲ್ಕವನ್ನು ಪರಿಶಿಷ್ಟ ಜಾತಿ/ ಪಂಗಡದ ವಿದ್ಯಾರ್ಥಿಗಳು ಪಾವತಿಸುವಂತಾಗಿದೆ. ಬಹುತೇಕ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಕಟ್ಟುವ ಸಾಮರ್ಥ್ಯ ಇರುವುದಿಲ್ಲ ಹಿನ್ನೆಲೆಯಲ್ಲಿ ತಕ್ಷಣ ವಿಶ್ವವಿದ್ಯಾಲಯ ಮಟ್ಟದಲ್ಲಿ ಶುಲ್ಕ ವಿನಾಯಿತಿ  ನೀಡುವಂತೆ ಆಗ್ರಹಿಸಿದರು. 
     ಸಂಘಟನೆ ಅಧ್ಯಕ್ಷ ಮುಸ್ವೀರ್ ಬಾಷಾ, ನಗರ ಸಭಾ ಸದಸ್ಯರಾದ ಕಾಂತರಾಜು, ರಿಯಾಜ್ ಅಹ್ಮದ್, ಬಷೀರ್ ಅಹ್ಮದ್, ಅಮಿರ್ ಜಾನ್, ಜೆಬಿಟಿ ಬಾಬು, ಸಂಘಟನೆ ಉಪಾಧ್ಯಕ್ಷರಾದ ಗಂಗಾಧರ್, ಕೀರ್ತಿ, ಮುರುಗೇಶ್, ಅಭಿಲಾಷ್, ವಿನಯ್, ರಮೇಶ್ ನಾಯ್ಕ,  ಎಸ್. ಎಸ್ ಭೈರಪ್ಪ, ಬಿ ಎಡ್ ಕಾಲೇಜಿನ ವಿದ್ಯಾರ್ಥಿಗಳು, ಸಂಘಟನೆ ಕಾರ್ಯಕರ್ತರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.