Friday, August 19, 2022

ತಾಲೂಕು ಆಡಳಿತದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ

ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ತಾಲೂಕು ಕಛೇರಿ ಸಭಾಂಗಣದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು.
    ಭದ್ರಾವತಿ, ಆ. ೧೯: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ತಾಲೂಕು ಕಛೇರಿ ಸಭಾಂಗಣದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು.
    ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಭಗವಾನ್ ಶ್ರೀ ಕೃಷ್ಣನಿಗೆ ಪೂಜೆ ಸಲ್ಲಿಸುವ ಮೂಲಕ ಪುಷ್ಪಾರ್ಚನೆ ನೆರವೇರಿಸಲಾಯಿತು.  ತಹಸೀಲ್ದಾರ್ ಆರ್. ಪ್ರದೀಪ್, ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಸದಸ್ಯರಾದ ಬಿ.ಕೆ ಮೋಹನ್, ರಿಯಾಜ್ ಅಹಮದ್, ಕಂದಾಯಾಧಿಕಾರಿ ರಾಜ್‌ಕುಮಾರ್, ಬಿಜೆಪಿ ಮುಖಂಡ ಟಿ. ವೆಂಕಟೇಶ್, ಗೊಲ್ಲ ಯಾದವ ಸಮಾಜದ ಹಿರಿಯರಾದ ಗೋವಿಂದಪ್ಪ, ಸಮಾಜದ ಅಧ್ಯಕ್ಷ ವೆಂಕಟೇಶ್ ಹಾಗು ಪದಾಧಿಕಾರಿಗಳು, ನಿರ್ದೇಶಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಗೋವಿಂದಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. ತಳ್ಳಿಕಟ್ಟೆ ಪ್ರಕಾಶ್ ಸ್ವಾಗತಿಸಿದರು. ಸರ್ಕಾರಿ ಐಟಿಐ ತರಬೇತಿದಾರ ಪುಟ್ಟಲಿಂಗ ಮೂರ್ತಿ ಮತ್ತು ಎಂ. ರಮೆಶ್ ನಿರೂಪಿಸಿದರು. ನ್ಯಾಯವಾದಿ ಟಿ.ಎಸ್ ರಾಜು ವಂದಿಸಿದರು.

ಶ್ರೀ ಸಂತ ಸೇವಾಲಾಲ್ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್ ಶಿಬಿರಕ್ಕೆ ಅವಕಾಶ ನೀಡುವುದಿಲ್ಲ : ಪಿ. ಕೃಷ್ಣಾನಾಯ್ಕ

ಭದ್ರಾವತಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಂಜಾರ ಯುವಕರ ಸಂಘದ ಅಧ್ಯಕ್ಷ ಪಿ. ಕೃಷ್ಣನಾಯ್ಕ ಹಾಗು ಬಂಜಾರ ಸಮಾಜದ ಪ್ರಮುಖರು ಮಾತನಾಡಿದರು.
    ಭದ್ರಾವತಿ, ಆ. ೧೯: ಶ್ರೀ ಸಂತ ಸೇವಾಲಾಲ್ ಜನ್ಮಸ್ಥಳ ಮಹಾಮಠ, ಬಂಜಾರ ಸಮಾಜದ ಪುಣ್ಯ ಕ್ಷೇತ್ರವಾದ ದಾವಣಗೆರೆ ಹೊನ್ನಾಳಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಉದ್ಯೋಗಿ ಪ್ರಾಥಮಿಕ ಶಿಕ್ಷಾ ವರ್ಗ(ಆರ್‌ಎಸ್‌ಎಸ್ ಶಿಬಿರ) ಯಾವುದೇ ಕಾರಣಕ್ಕೂ ನಡೆಯಲು ಅವಕಾಶ ನೀಡುವುದಿಲ್ಲ ಎಂದು ಬಂಜಾರ ಯುವಕರ ಸಂಘದ ಅಧ್ಯಕ್ಷ ಪಿ. ಕೃಷ್ಣಾನಾಯ್ಕ ಹೇಳಿದರು.
    ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶ್ರೀ ಸಂತ ಸೇವಾಲಾಲ್ ಜನ್ಮಸ್ಥಳ ತನ್ನದೇ ಆದ ಪರಂಪರೆ, ಧಾರ್ಮಿಕ ಸಂಸ್ಕೃತಿಯನ್ನು ಹೊಂದಿದೆ. ಇಂತಹ ಸ್ಥಳದಲ್ಲಿ ಧಾರ್ಮಿಕ ಸಂಸ್ಕೃತಿಗೆ ಧಕ್ಕೆ ತರುವಂತಹ ಬೇರೆ ಯಾವುದೇ ರೀತಿಯ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ಪುಣ್ಯ ಸ್ಥಳದ ಅಭಿವೃದ್ಧಿ ಹಾಗು ಬಂಜಾರ ಸಮಾಜದವರ ಏಳಿಗೆಗೆ ಪೂರಕವಾದ ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಬೇಕು. ಆದರೆ ಬಂಜಾರ ಸಮಾಜದವರ ಗಮನಕ್ಕೆ ಬಾರದಂತೆ ಸೆ.೧೧ ರಿಂದ ೧೯ರ ವರೆಗೆ ಉದ್ಯೋಗಿ ಪ್ರಾಥಮಿಕ ಶಿಕ್ಷಾ ವರ್ಗ ನಡೆಯುತ್ತಿರುವ ಬಗ್ಗೆ ಈಗಾಗಲೇ ಕರಪತ್ರಗಳನ್ನು ಹಂಚಲಾಗಿದೆ. ಈ ಮೂಲಕ ಬಂಜಾರ ಸಮಾಜದ ಧಾರ್ಮಿಕ ಸಂಸ್ಕೃತಿ ಮೇಲೆ ದಾಳಿ ನಡೆಲು ಪ್ರಯತ್ನಿಸಲಾಗುತ್ತಿದೆ. ಇದಕ್ಕೆ ಕುಡಚಿ ಕ್ಷೇತ್ರದ ಶಾಸಕರು, ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಿ. ರಾಜೀವ್ ಕಾರಣ ಎಂಬ ಆರೋಪ ಕೇಳಿಬರುತ್ತಿವೆ. ಪಿ. ರಾಜೀವ್ ಅವರಿಗೆ ಅನುಮತಿ ನೀಡಲು ಯಾವುದೇ ಅಧಿಕಾರವಿಲ್ಲ. ಒಂದು ವೇಳೆ ಶಿಕ್ಷಾ ವರ್ಗ ನಡೆಯಬೇಕಾದರೆ ಮಹಾಮಠದ ಟ್ರಸ್ಟ್ ಅನುಮತಿ ಕಡ್ಡಾಯವಾಗಿದೆ ಎಂದರು.


    ಈ ವಿಚಾರಕ್ಕೆ ಸಂಬಂಧಿಸಿದಂತೆ ಆ.೨೧ರಂದು ಮಹಾಮಠದಲ್ಲಿ ಬೃಹತ್ ಬಾಯ್ ಘಡ್ ಅಂದೋಲನ ನಡೆಯಲಿದ್ದು, ಈ ಅಂದೋಲನದಲ್ಲಿ ರಾಜ್ಯದ ವಿವಿಧೆಡೆಗಳಿಂದ ಬಂಜಾರ ಸಮಾಜದವರು ಪಾಲ್ಗೊಳ್ಳಲಿದ್ದಾರೆ. ಅಂದೋಲನದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಒಂದು ವೇಳೆ ಇದಕ್ಕೆ ವಿರೋಧ ವ್ಯಕ್ತವಾದಲ್ಲಿ ಮುಂದಿನ ಹೋರಾಟ ನಡೆಸಲಾಗುವುದು ಎಂದರು.
    ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಪ್ರೇಮ್‌ಕುಮಾರ್, ಶಂಕರ್‌ನಾಯ್ಕ, ಚಂದ್ರು, ವೀರೇಶ್, ನಾಗನಾಯ್ಕ, ಸುಮಾಬಾಯಿ, ಸೋಮಿಬಾಯಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Thursday, August 18, 2022

ಈಶ್ವರಪ್ಪ ಮುಂಬರುವ ಚುನಾವಣೆಯಲ್ಲಿ ಟಿಕೆಟ್ ಸಿಗುವುದಿಲ್ಲ ಎಂಬ ಭ್ರಮೆಯಲ್ಲಿ ಬೇಕಾಬಿಟ್ಟಿ ಹೇಳಿಕೆ

ವೈಯಕ್ತಿಕ ಗಲಾಟೆ ಕೋಮು ಗಲಭೆಯಾಗಿ ಬಿಂಬಿಸಲು ಯತ್ನ : ಕಾಂಗ್ರೆಸ್ ಮುಖಂಡರ ಆರೋಪ 

ಭದ್ರಾವತಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರು ಮಾತನಾಡಿದರು. 
    ಭದ್ರಾವತಿ, ಆ. ೧೮ : ಹಿರಿಯ ರಾಜಕಾರಣಿ, ಮಾಜಿ ಉಪಮುಖ್ಯಮಂತ್ರಿಯಾಗಿರುವ ಕೆ.ಎಸ್ ಈಶ್ವರಪ್ಪನವರಿಗೆ ಮುಂಬರುವ ಚುನಾವಣೆಯಲ್ಲಿ ಟಿಕೆಟ್ ಸಿಗುವುದಿಲ್ಲ ಎಂಬ ಭ್ರಮೆಯಲ್ಲಿ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಕ್ಷೇತ್ರದಲ್ಲಿ ಇಬ್ಬರ ನಡುವೆ ವೈಯಕ್ತಿಕವಾಗಿ ನಡೆದಿರುವ ಗಲಾಟೆಯನ್ನು ಕೋಮು ಗಲಭೆಯಾಗಿ ಬಿಂಬಿಸಲು ಯತ್ನಿಸಿರುವುದು ಅವರಿಗೆ ಶೋಭೆ ತರುವುದಲ್ಲ ಎಂದು ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. 
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಮುಖರು, ಕ್ಷೇತ್ರದಲ್ಲಿ ಎಲ್ಲರೂ ಶಾಂತಿ ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಕಳೆದ ೩ ದಿನಗಳ ಹಿಂದೆ ಇಬ್ಬರು ವೈಯಕ್ತಿಕವಾಗಿ ಗಲಾಟೆ ಮಾಡಿಕೊಂಡಿದ್ದು, ಇದನ್ನು ಹಿಂದೂ ಮುಸ್ಲಿಂ ಗಲಾಟೆಯಾಗಿ ಬಿಂಬಿಸಲು ಮುಂದಾಗಿರುವುದು ವಿಷಾದನೀಯ ಬೆಳವಣಿಗೆಯಾಗಿದೆ ಎಂದರು. 
ಪೊಲೀಸರು ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಎಲ್ಲಾ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿ ವಿಚಾರಗಳ ಕಡೆ ಗಮನ ಹರಿಸದ ಈಶ್ವರಪ್ಪನವರು ಈ ಗಲಾಟೆ ವಿಚಾರದಲ್ಲಿ ಹೆಚ್ಚಿನ ಆಸಕ್ತಿ ತೋರಿಸಿರುವುದು ವಿಪರ್ಯಾಸದ ಸಂಗತಿಯಾಗಿದೆ. ಅಲ್ಲದೆ ಬಾಯಿಗೆ ಬಂದಂತೆ ಹೇಳಿಕೆಗಳನ್ನು ನೀಡುವ ಮೂಲಕ ಕ್ಷೇತ್ರದ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದಾರೆಂದು ಆರೋಪಿಸಿದರು. 
ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳನ್ನು ಇದುವರೆಗೂ ಅಭಿವೃದ್ಧಿ ಪಡಿಸಲು ಸಾಧ್ಯವಾಗಿಲ್ಲ. ಅಲ್ಲದೆ ಕ್ಷೇತ್ರದಲ್ಲಿ ಹಲವಾರು ಸಮಸ್ಯೆಗಳಿದ್ದು, ಈ ಬಗ್ಗೆ ಮೊದಲು ಗಮನ ಹರಿಸಲಿ ಎಂದು ಸಲಹೆ ವ್ಯಕ್ತಪಡಿಸಿದರು. 
ಈಶ್ವರಪ್ಪನವರ ಹೇಳಿಕೆಯಿಂದ ಸಿದ್ದರಾಮಯ್ಯನವರ ಮೇಲೆ ಮೊಟ್ಟೆ ಎಸೆತ : 
ಸಿದ್ದರಾಮಯ್ಯನವರ ಹೇಳಿಕೆಯನ್ನು ಈಶ್ವರಪ್ಪನವರು ತಿರುಚಿದ್ದಾರೆ. ಯಾವುದೇ ಸೂಕ್ಷ್ಮ ಪ್ರದೇಶದಲ್ಲಿ ಫ್ಲೆಕ್ಸ್‌ಗಳನ್ನು ಅಳವಡಿಸಲು ಅನುಮತಿ ನೀಡುವಾಗ ಎಚ್ಚರ ವಹಿಸಬೇಕು ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ಇದರಲ್ಲಿ ಬೇರೆ ಯಾವುದೇ ಅರ್ಥವಿಲ್ಲ. ಆದರೆ ಈಶ್ವರಪ್ಪನವರು ಮುಸ್ಲಿಂರಿಗೆ ಬೇರೆ ಜಾಗ, ಹಿಂದೂಗಳಿಗೆ ಬೇರೆ ಜಾಗ ಎಂದು ಹೇಳಿಕೆ ನೀಡುತ್ತಿದ್ದಾರೆ. ಈಶ್ವರಪ್ಪನವರ ಇಂತಹ ಹೇಳಿಕೆಯಿಂದಾಗಿ ಸಿದ್ದರಾಮಯ್ಯನವರ ಮೇಲೆ ಮೊಟ್ಟೆ ಎಸೆತ ಘಟನೆ ನಡೆದಿದೆ ಎಂದು ದೂರಿದರು. 
ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಮುಖಂಡರಾದ ಟಿ.ವಿ ಗೋವಿಂದಸ್ವಾಮಿ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ನಗರಸಭಾ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಮನೆಗಳ್ಳತನ ಓರ್ವನ ಸೆರೆ : ನಗದು, ಚಿನ್ನಾಭರಣ ವಶ

ಮನೆಯ ಬೀಗ ತೆಗೆದು ನಗದು, ಚಿನ್ನಾಭರಣ ಕಳ್ಳತನ ಮಾಡಿದ್ದ ಓರ್ವ ಮನೆಗಳ್ಳನನ್ನು ಭದ್ರಾವತಿ ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿರುವ ಘಟನೆ ಗುರುವಾರ ನಡೆದಿದೆ.
    ಭದ್ರಾವತಿ, ಆ.೧೮: ಮನೆಯ ಬೀಗ ತೆಗೆದು ನಗದು, ಚಿನ್ನಾಭರಣ ಕಳ್ಳತನ ಮಾಡಿದ್ದ ಓರ್ವ ಮನೆಗಳ್ಳನನ್ನು ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿರುವ ಘಟನೆ ಗುರುವಾರ ನಡೆದಿದೆ.
    ಹೊಸಮನೆ ೩ನೇ ತಿರುವಿನ ನಿವಾಸಿ ವಸಂತರಾಜು(೩೭) ಬಂಧಿತನಾಗಿದ್ದು, ಈತನಿಂದ ಒಟ್ಟು ೫,೮೯,೫೦೦ ರು. ಮೌಲ್ಯದ ಒಟ್ಟು ೧೩೧ ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
    ಈತ ಜ.೧೧, ೨೦೨೧ರಂದು ಹಳೇನಗರದ ಭೂತನಗುಡಿಯಲ್ಲಿ ಮನೆಯೊಂದರಲ್ಲಿ ಮನೆಯವರು ಮನೆಗೆ ಬೀಗ ಹಾಕಿ ತುಳಿಸಿ ಕಟ್ಟೆ ಹತ್ತಿರ ಬೀಗದ ಕೈ ಇಟ್ಟು ಹೊರ ಹೋಗಿದ್ದು, ಈ ಸಂದರ್ಭದಲ್ಲಿ ಮನೆಯ ಬೀಗ ತೆಗೆದು ಬೀರುವಿನಲ್ಲಿದ್ದ ನಗದು ಹಾಗು ಚಿನ್ನಾಭರಣ ಮತ್ತು ಮೊಬೈಲ್ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದ ಈ ಸಂಬಂಧ ಪ್ರಕರಣ ದಾಖಲಾಗಿತ್ತು.
    ನಗರ ಪೊಲೀಸ್ ವೃತ್ತ ನಿರೀಕ್ಷಕರು, ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣಾಧಿಕಾರಿ ಹಾಗು ಸಿಬ್ಬಂದಿಗಳನ್ನೊಳಗೊಂಡ ತಂಡ ರಚಿಸಲಾಗಿತ್ತು. ತಂಡ ಈತನನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಈತನ ವಿರುದ್ಧ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಮತ್ತು ಹಳೇನಗರ ಪೊಲೀಸ್ ಠಾಣೆಯಲ್ಲಿ ತಲಾ ಒಂದೊಂದು ಮನೆಗಳ್ಳತನ ಪ್ರಕರಣಗಳು ದಾಖಲಾಗಿವೆ .

ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳಿಗೆ ಹಿಂದಿನ ಶುಲ್ಕ ವಿಧಿಸಿ


ಭದ್ರಾವತಿ ತಾಲೂಕಿನ ಕುವೆಂಪು ವಿಶ್ವವಿದ್ಯಾಲಯ ಬಿಇಡಿ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳಿಗೆ ಪ್ರಸ್ತುತ ಹೆಚ್ಚಿನ ಪರೀಕ್ಷಾ ಶುಲ್ಕ ನಿಗದಿಪಡಿಸಿರುವುದನ್ನು ವಿರೋಧಿಸಿ ಗುರುವಾರ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಮತ್ತು ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಬಿ.ಇಡಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.  
    ಭದ್ರಾವತಿ, ಆ. ೧೮: ತಾಲೂಕಿನ ಕುವೆಂಪು ವಿಶ್ವವಿದ್ಯಾಲಯ ಬಿಇಡಿ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳಿಗೆ ಪ್ರಸ್ತುತ ಹೆಚ್ಚಿನ ಪರೀಕ್ಷಾ ಶುಲ್ಕ ನಿಗದಿಪಡಿಸಿದ್ದು, ಇದರಿಂದ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ಈ ಹಿಂದಿನ ಶುಲ್ಕ ನಿಗದಿಪಡಿಸಬೇಕೆಂದು ಆಗ್ರಹಿಸಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
    ವಿಶ್ವವಿದ್ಯಾಲಯ ವ್ಯಾಪ್ತಿಯ ಪರಿಶಿಷ್ಟ ಜಾತಿ ಪಂಗಡದ ವಿದ್ಯಾರ್ಥಿಗಳಿಗೆ ಏಕಾಏಕಿ ಪರೀಕ್ಷಾ ಶುಲ್ಕ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ. ಬೇರೆ ಬೇರೆ ವಿಶ್ವವಿದ್ಯಾಲಯಗಳಲ್ಲಿ ಸರ್ಕಾರದ ಆದೇಶದಂತೆ ರು. ೨೨೦ ನಿಗದಿಪಡಿಸಲಾಗಿದೆ. ಆದರೆ ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಮಾತ್ರ ಹೆಚ್ಚುವರಿ ಶುಲ್ಕ ಭರಿಸಲು ಕುಲಸಚಿವರು(ಮೌಲ್ಯಮಾಪನ) ವಿಶೇಷ ಸೂಚನೆ ಮೂಲಕ ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ ಬಡ ವಿದ್ಯಾರ್ಥಿಗಳು ತೊಂದರೆ ಎದುರಿಸುವಂತಾಗಿದೆ. ಈಗಾಗಲೇ ಹಲವಾರು ಬಾರಿ ಈ ಸಂಬಂಧ ಮನವಿ ಮಾಡಲಾಗಿದೆ. ಆದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಈಗಾಗಲೇ ಪರೀಕ್ಷಾ ದಿನಾಂಕ ಸಹ ನಿಗದಿಪಡಿಸಲಾಗಿದೆ. ಈ ಹಿನ್ನಲೆಯಲ್ಲಿ ತಕ್ಷಣ ಈ ಹಿಂದಿನ ಪರೀಕ್ಷಾ ಶುಲ್ಕವನ್ನು ಪಾವತಿಸಲು ಆದೇಶ ಹೊರಡಿಸಬೇಕು. ಇಲ್ಲವಾದಲ್ಲಿ ಉಪವಾಸ ಸತ್ಯಾಗ್ರಹ ನಡೆಸಬೇಕಾಗುತ್ತದೆ ಎಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಮತ್ತು ದಲಿತ ವಿದ್ಯಾರ್ಥಿ ಪರಿಷತ್ ಪ್ರಮುಖರು ಎಚ್ಚರಿಸಿದರು.

ಕಲಾವಿದ ವೈ.ಕೆ ಹನುಮಂತಯ್ಯರಿಗೆ ರಂಗಭೂಮಿ ದತ್ತಿ ಪ್ರಶಸ್ತಿ


ಭದ್ರಾವತಿ ತಾಲೂಕಿನ ಬಿ.ಆರ್ ಪ್ರಾಜೆಕ್ಟ್ ಪತ್ರ ಸಂಸ್ಕೃತಿ ಸಂಘಟನೆ ಮತ್ತು ರಾಮನಗರ ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಬಿಆರ್‌ಪಿ  ಕೆಪಿಟಿಸಿಎಲ್.ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಹಿರಿಯ ರಂಗಭೂಮಿ ಕಲಾವಿದ ವೈ.ಕೆ ಹನುಮಂತಯ್ಯ ಅವರಿಗೆ ದಿವಂಗತ ದೇಶೀಗೌಡ ಮತ್ತು ನಿಂಗಮ್ಮನವರ ರಂಗಭೂಮಿ ದತ್ತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು
    ಭದ್ರಾವತಿ, ಆ. ೧೮: ತಾಲೂಕಿನ ಬಿ.ಆರ್ ಪ್ರಾಜೆಕ್ಟ್ ಪತ್ರ ಸಂಸ್ಕೃತಿ ಸಂಘಟನೆ ಮತ್ತು ರಾಮನಗರ ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಬಿಆರ್‌ಪಿ  ಕೆಪಿಟಿಸಿಎಲ್.ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ನಿವೃತ್ತ ಇಂಜಿನಿಯರ್, ಸಾಹಿತಿ ಹೊಸಹಳ್ಳಿ ದಾಳೇಗೌಡ ಅವರು ರಚಿಸಿದ ಬಾರಿಸು ಕನ್ನಡ ಡಿಂಡಿಮವ ಮತ್ತು ಇತರೆ ನಾಟಕಗಳು ಕೃತಿ ಲೋಕಾರ್ಪಣೆ, ಪಿಸುಮಾತು ಪುರುಷ ಸಂಚಿಕೆ ಬಿಡುಗಡೆ, ರಂಗಭೂಮಿ ದತ್ತಿ ಪ್ರಶಸ್ತಿ ಪ್ರದಾನ ಹಾಗು ಕಲಾವಿದರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಹಿರಿಯ ರಂಗಭೂಮಿ ಕಲಾವಿದ ವೈ.ಕೆ ಹನುಮಂತಯ್ಯ ಅವರಿಗೆ ದಿವಂಗತ ದೇಶೀಗೌಡ ಮತ್ತು ನಿಂಗಮ್ಮನವರ ರಂಗಭೂಮಿ ದತ್ತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
    ವೈ.ಕೆ ಹನುಮಂತಯ್ಯ ಅವರು ಹಿರಿಯ ರಂಗಭೂಮಿ ಕಲಾವಿದರಾಗಿದ್ದು, ನಗರದ ಹಲವಾರು ರಂಗತಂಡಗಳಲ್ಲಿ ಸೇವೆ ಸಲ್ಲಿಸಿದ್ದು, ಅಲ್ಲದೆ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇವರ ಕಲಾ ಸೇವೆಗೆ ಹಲವಾರು ಪ್ರಶಸ್ತಿಗಳು ಲಭಿಸಿದ್ದು, ವಿವಿಧ ಸಂಘ-ಸಂಸ್ಥೆಗಳು ಸನ್ಮಾನಿಸಿ ಗೌರವಿಸಿವೆ. ಇದೀಗ ದಿವಂಗತ ದೇಶೀಗೌಡ ಮತ್ತು ನಿಂಗಮ್ಮನವರ ರಂಗಭೂಮಿ ದತ್ತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.  
    ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಆಧ್ಯಕ್ಷ ಡಿ. ಮಂಜುನಾಥ ಕಾರ್ಯಕ್ರಮ ಉದ್ಘಾಟಿಸಿದರು. ಹೊಸಹಳ್ಳಿ ದಾಳೇಗೌಡ ಅಧ್ಯಕ್ಷತೆ ವಹಿಸಿದ್ದರು. ವಿಶ್ರಾಂತ ಪ್ರಾಂಶುಪಾಲರಾದ ಡಾ. ಕೂಡ್ಲೂರು ವೆಂಕಟಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು.  ನಾಟಕ ಕೃತಿ ಹಿರಿಯ ಸಾಹಿತಿ ಅಂಬ್ರಯ್ಯಮಠ ಮಾತನಾಡಿದರು.
    ರಾಮನಗರ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಹಾಗು ಬುದ್ಧ ಬಸವ ಗಾಂಧಿ ಟ್ರಸ್ಟ್ ಅಧ್ಯಕ್ಷ ಡಾ. ರಾಮಲಿಂಗೇಶ್ವರ (ಸಿಸಿರಾ), ವಿಜಯ ಕಾಲೇಜು ಉಪ ಪ್ರಾಂಶುಪಾಲರಾದ ಡಾ. ಶಾಂತರಾಜು,  ತಾಲೂಕು ಕಸಾಪ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಭದ್ರಾವತಿ ಘಟನೆಯನ್ನು ಸಮರ್ಥವಾಗಿ ನಿಭಾಯಿಸಿದ ಶಾಸಕ ಬಿ.ಕೆ ಸಂಗಮೇಶ್

ಎಂ.ರಮೇಶ್ ಶಂಕರಘಟ್ಟ ಅಭಿಮತ


    ಭದ್ರಾವತಿ ಆ.18: ಇತ್ತೀಚೆಗೆ  ಕ್ಷುಲ್ಲಕ ಕಾರಣಕ್ಕಾಗಿ ನಡೆದ ವೈಯಕ್ತಿಕ ವಿಚಾರವನ್ನು ಇಟ್ಟುಕೊಂಡು ತಾಲ್ಲೂಕಿನಲ್ಲಿ ಶಾಂತಿ ಕದಡಲು ಯತ್ನಿಸಿದವರ ಬಣ್ಣ ಬಯಲು ಮಾಡುವುದರ ಮೂಲಕ  ಘಟನೆಯನ್ನು ಅತ್ಯಂತ ಸಮರ್ಥವಾಗಿ ಶಾಸಕ ಬಿ.ಕೆ ಸಂಗಮೇಶ್  ನಿಭಾಗಯಿಸಿದರು ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವಕ್ತಾರ ಹಾಗೂ ಭದ್ರಾವತಿ ಗ್ರಾಮಾಂತರ ಹಿಂದುಳಿದ ವರ್ಗಗಳ ವಿಭಾಗ ಅಧ್ಯಕ್ಷ ಎಂ.ರಮೇಶ್ ಶಂಕರಘಟ್ಟ ಅಭಿಪ್ರಾಯಪಟ್ಟಿದ್ದಾರೆ.
    ಅವರು  ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿ, ಶಾಸಕರು ಘಟನೆ ನಡೆದ ಆರಂಭದಿಂದಲೂ ಇದೊಂದು ಪರಸ್ಪರ ವೈಯಕ್ತಿಕ ಜಗಳವಾಗಿದ್ದು, ಇದಕ್ಕೂ ಶಿವಮೊಗ್ಗದಲ್ಲಿ ನಡೆದಿರುವ ಘಟನೆಗೂ ಯವುದೇ ಸಂಬಂಧವಿಲ್ಲವೆಂದು ಸಾಕಷ್ಟು ಸಾಕ್ಷಿಗಳೊಂದಿಗೆ ಪ್ರತಿಪಾಧಿಸುತ್ತಲೇ ಬಂದಿದ್ದರೂ, ಕೆಲವು ಕಾಣದ ಕೈಗಳು ಈ ಪ್ರಕರಣದ ದುರ್ಲಾಭ ಪಡೆಯಲು ಘಟನೆಯ ದಿಕ್ಕು ಬದಲಾಯಿಸಲು ಪ್ರಯತ್ನಿಸಿದ್ದವು. ಆದರೂ ಸಹಾ ಕೆಲವು ಮುಖಂಡರುಗಳು ಭದ್ರಾವತಿಗೆ ಪದೇ ಪದೇ ಭೇಟಿ ನೀಡಿ ಶಾಂತಿ ಕದಡಲು ಯತ್ನಿಸಿದ್ದವರ ಕಾರ್ಯವೈಖರಿಯನ್ನು ಉಗ್ರವಾದ ಮಾತುಗಳಲ್ಲಿ ಖಂಡಿಸಿದ್ದರು. .
    ಯಾವಾಗ ಎಡಿಜಿಪಿ ಆಲೋಕ್ ಕುಮಾರ್ ಇವರು ಭದ್ರಾವತಿಯಲ್ಲಿ ನಡೆದ ಘಟನೆಗೂ, ಶಿವಮೊಗ್ಗದ ಘಟನೆಗೂ ಸಂಬಂಧವಿಲ್ಲ. ಕೆಲವರಿಂದ ಆಗಬಹುದಾಗಿದ್ದ ಪಿತೂರಿಗೆ ಪೊಲೀಸರಿಂದ ಕಡಿವಾಣ ಹಾಕಲಾಗಿದೆ ಎಂದು ಹೇಳಿಕೆ ನೀಡಿದರೂ ಆಗ ಶಾಂತಿ ಕದಡಲು ಯತ್ನಿಸಿದವರು ತೆಪ್ಪಗಾದರು ಎಂದು ತಿಳಿಸಿದರು.
    ಶಾಸಕ ಸಂಗಮೇಶ್ವರ ಜನಪ್ರಿಯ ಸಹಿಸಿದ ಕೆಲವು ಪಕ್ಷಗಳು ಇಂತಹ ಘಟನೆಗಳನ್ನು ಬಳಸಿಕೊಂಡು ಅವರ ಹೆಸರಿಗೆ ಕಳಂಕ ತರುವ ಯತ್ನ ಹಲವು ವರ್ಷಗಳಿಂದ ನಡೆಸುತ್ತಲೇ ಬಂದಿದ್ದರೂ ಆ ಪ್ರಯತ್ನದಲ್ಲಿ ವಿಫಲರಾಗುತ್ತಿದ್ದಾರೆ. ಇನ್ನು ಮುಂದಾದರೂ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ರಾಜಕಾರಣಿಗಳು ಇಂತಹ ಹೀನಕೃತ್ಯಕ್ಕೆ ಕೈ ಹಾಕಿ ಕ್ಷೇತ್ರದಲ್ಲಿ ಆಶಾಂತಿಯನ್ನು ಉಂಟುಮಾಡುವುದನ್ನು ಕೈ ಬಿಡಬೇಕೆಂದು ರಮೇಶ್ ಆಗ್ರಹಿಸಿದ್ದಾರೆ.