Saturday, August 20, 2022

ಪ್ರಮುಖ ರಸ್ತೆಗಳಲ್ಲಿ ಬಿಡಾಡಿ ದನಗಳ ಹಾವಳಿ : ನಗರಸಭೆವತಿಯಿಂದ ಕಾರ್ಯಾಚರಣೆ

೯ ಬಿಡಾಡಿ ದನಗಳು ವಶಕ್ಕೆ ಪಡೆದು ಮಾಲೀಕರಿಗೆ ದಂಡ

ಬಿಡಾಡಿ ದನಗಳ ಹಾವಳಿ ಹೆಚ್ಚಾದ ಹಿನ್ನಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದ್ದು, ಈ ಹಿನ್ನಲೆಯಲ್ಲಿ ಶನಿವಾರ ನಗರಸಭೆ ವತಿಯಿಂದ ಕಾರ್ಯಾಚರಣೆ ನಡೆಸಿ ಬಿಡಾಡಿ ದನಗಳನ್ನು ವಶಕ್ಕೆ ಪಡೆಯಲಾಯಿತು.
    ಭದ್ರಾವತಿ, ಆ. ೨೦: ಬಿಡಾಡಿ ದನಗಳ ಹಾವಳಿ ಹೆಚ್ಚಾದ ಹಿನ್ನಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದ್ದು, ಈ ಹಿನ್ನಲೆಯಲ್ಲಿ ಶನಿವಾರ ನಗರಸಭೆ ವತಿಯಿಂದ ಕಾರ್ಯಾಚರಣೆ ನಡೆಸಿ ಬಿಡಾಡಿ ದನಗಳನ್ನು ವಶಕ್ಕೆ ಪಡೆಯಲಾಯಿತು.
    ರಸ್ತೆಗಳಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾದ ಹಿನ್ನಲೆಯಲ್ಲಿ ಪಾದಚಾರಿ ಹಾಗು ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ನಗರಸಭೆಗೆ ಸಾಕಷ್ಟು ದೂರುಗಳು ಸಲ್ಲಿಕೆಯಾಗಿವೆ. ಈ ನಡುವೆ ನಗರಸಭೆ ಆಡಳಿತ ಬಿಡಾಡಿ ದನಗಳನ್ನು ರಸ್ತೆಗೆ ಬಿಡದಂತೆ ಹಲವು ಬಾರಿ ಮಾಲೀಕರಿಗೆ ಸೂಚಿಸಿದೆ. ಆದರೂ ಸಹ ನಿರ್ಲಕ್ಷ್ಯತನವಹಿಸಿರುವ ಹಿನ್ನಲೆಯಲ್ಲಿ ಬಿ.ಎಚ್ ರಸ್ತೆ, ತಾಲೂಕು ಕಛೇರಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಕಾರ್ಯಾಚರಣೆ ನಡೆಸಿ ಸುಮಾರು ೯ ಬಿಡಾಡಿ ದನಗಳನ್ನು ವಶಕ್ಕೆ ಪಡೆದು ತರೀಕೆರೆ ರಸ್ತೆಯಲ್ಲಿರುವ ನಗರಸಭೆ ನೀರು ಸರಬರಾಜು ಕೇಂದ್ರದ ಆವರಣದಲ್ಲಿರಿಸಲಾಗಿತ್ತು. ಸಂಜೆ ವೇಳೆಗೆ ಸಂಬಂಧಪಟ್ಟ ಮಾಲೀಕರು ದಂಡ ಪಾವತಿಸಿ ಬಿಡಿಸಿಕೊಂಡು ಹೋಗಿದ್ದಾರೆ.
    ಪತ್ರಿಕೆಗೆ ಮಾಹಿತಿ ನೀಡಿದ ಪೌರಾಯುಕ್ತ ಮನುಕುಮಾರ್, ನಗರಸಭೆ ಸಿಬ್ಬಂದಿಗಳು ಬೆಳಿಗ್ಗೆಯಿಂದ ಕಾರ್ಯಾಚರಣೆ ನಡೆಸಿ ಬಿಡಾಡಿ ದನಗಳನ್ನು ವಶಕ್ಕೆ ಪಡೆದಿದ್ದಾರೆ. ಬಿಡಾಡಿ ದನಗಳ ಮಾಲೀಕರು ಎಚ್ಚೆತ್ತುಕೊಳ್ಳಬೇಕು. ಯಾವುದೇ ಕಾರಣಕ್ಕೂ ಬಿಡಾಡಿ ದನಗಳನ್ನು ರಸ್ತೆಗೆ ಬಿಡಬಾರದು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
    

    ಪೌರಾಯುಕ್ತ ಮನುಕುಮಾರ್ ಕಾರ್ಯಾಚರಣೆ ನೇತೃತ್ವ ವಹಿಸಿದ್ದರು. ಪರಿಸರ ಅಭಿಯಂತರ ಪ್ರಭಾಕರ್, ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್, ಕಿರಿಯ ಆರೋಗ್ಯ ನಿರೀಕ್ಷಕಿ ಶೃತಿ ಸೇರಿದಂತೆ ಇನ್ನಿತರ ಸಿಬ್ಬಂದಿಗಳು, ಪೌರಕಾರ್ಮಿಕರು ಪಾಲ್ಗೊಂಡಿದ್ದರು.

ಕಾಂಗ್ರೆಸ್ ನಾಯಕರಿಂದ ಅಭಿವೃದ್ಧಿ ಆಡಳಿತ, ಬಿಜೆಪಿ ನಾಯಕರಿಂದ ಭಷ್ಟ್ರ, ಕೋಮುವಾದಿ ಆಡಳಿತ : ಬಿ.ಕೆ ಸಂಗಮೇಶ್ವರ್

ಭದ್ರಾವತಿಯಲ್ಲಿ ಶಾಸಕರ ಗೃಹ ಕಛೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ನಗರ ಮತ್ತು ಗ್ರಾಮಾಂತರ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಪಾಲ್ಗೊಂಡು ಮಾತನಾಡಿದರು. 
    ಭದ್ರಾವತಿ, ಆ. ೨೦: ಕಾಂಗ್ರೆಸ್ ಪಕ್ಷದ ನಾಯಕರು ದೇಶಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದು, ಇಂದಿಗೂ ಮಾದರಿಯಾಗಿ ಉಳಿದುಕೊಂಡಿದ್ದಾರೆ. ಆದರೆ ಇಂದಿನ ಬಿಜೆಪಿ ನಾಯಕರು ಧರ್ಮ ಧರ್ಮಗಳ ನಡುವೆ ವಿಷಬೀಜ ಬಿತ್ತಿ ದೇಶವನ್ನು ಛಿದ್ರ ಛಿದ್ರವಾಗಿಸುವ ಮೂಲಕ ಅಭದ್ರತೆ ಉಂಟು ಮಾಡುತ್ತಿದ್ದಾರೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಆರೋಪಿಸಿದರು.
    ಅವರು ಶನಿವಾರ ಶಾಸಕರ ಗೃಹ ಕಛೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ನಗರ ಮತ್ತು ಗ್ರಾಮಾಂತರ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ದೇಶದ ಆಡಳಿತ ವ್ಯವಸ್ಥೆಯಲ್ಲೂ ಎಲ್ಲರಿಗೂ ಸಮಾನವಾದ ಹಕ್ಕು ನೀಡಬೇಕೆಂಬ ಉದ್ದೇಶದೊಂದಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದವರು ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಎಂಬುದನ್ನು ಯಾರು ಮರೆಯಬಾರದು. ರಾಜೀವ್ ಗಾಂಧಿ ಆಧುನಿಕ ಯುಗಕ್ಕೆ ಮುನ್ನುಡಿ ಬರೆದವರು. ಇಂತಹ ಮಹಾನ್ ನಾಯಕನನ್ನು ಈ ದೇಶದಲ್ಲಿ ಇದುವರೆಗೂ ಕಾಣಲು ಸಾಧ್ಯವಾಗಿಲ್ಲ. ಇಂದಿನ ಬಿಜೆಪಿ ಸರ್ಕಾರ ಭ್ರಷ್ಟಾಚಾರ, ಕೋಮುವಾದಿ ಸರ್ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
        ಮಾಜಿ ಸಚಿವ ಈಶ್ವರಪ್ಪ ಗಡಿಪಾರು ಮಾಡಿ:
    ೭೫ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮಾಚರಣೆ ಸಮಯದಲ್ಲಿ ಬಿಜೆಪಿ ನಾಯಕರು ಕ್ಷೇತ್ರದಲ್ಲಿ ವಿನಾಕಾರಣ ಕೋಮು-ಗಲಭೆ ಉಂಟು ಮಾಡಲು ಯತ್ನಿಸಿದ್ದಾರೆ. ಆದರೆ ಕ್ಷೇತ್ರದ ಜನರು ಯಾವುದಕ್ಕೂ ಕಿವಿಗೊಡದೆ ಶಾಂತಿ ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಕ್ಷೇತ್ರಕ್ಕೆ ಆಗಮಿಸಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ್ದಾರೆ.  ಇವರನ್ನು ತಕ್ಷಣ ಗಡಿಪಾರು ಮಾಡಬೇಕೆಂದು ಆಗ್ರಹಿಸಿದರು.


    ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ ಮಾತನಾಡಿ, ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳಿಗೆ ಧ್ವನಿಯಾದವರು. ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಎಲ್ಲಾ ವರ್ಗದವರು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಬೆಳವಣಿಗೆ ಸಾಧಿಸಲು ಶ್ರಮಿಸಿದ್ದರು. ದೇಶದ ಇಂದಿನ ಬೆಳವಣಿಗೆಗೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಕಾರಣರಾಗಿದ್ದು, ಅವರ ಭವಿಷ್ಯದ ಆಲೋಚನೆಗಳು, ಇದಕ್ಕೆ ಪೂರಕವಾಗಿ ಕೈಗೊಂಡ ಯೋಜನೆಗಳು ಇಂದಿಗೂ ಜೀವಂತವಾಗಿ ಉಳಿದುಕೊಂಡಿವೆ ಎಂದರು.  
    ಹಿಂದುಳಿದ ವರ್ಗಗಳ ವಿಭಾಗದ ತಾಲೂಕು ಅಧ್ಯಕ್ಷ ಬಿ. ಗಂಗಾಧರ್ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಪ್ರಮುಖರಾದ ಮಹಿಳಾ ಘಟಕದ ಅಧ್ಯಕ್ಷೆ ಹೇಮಾವತಿ, ಡಿ.ಟಿ ಶಶಿಕುಮಾರ್, ಶಿವಮಾಧು, ಅಮೀರ್‌ಜಾನ್, ಕೃಷ್ಣಾನಾಯ್ಕ, ಗೌರಪುರ ಶಿವರಾಮ್, ಅಭಿಲಾಷ್, ಗೋಪಿ, ನಾಗರಾಜ್, ಐಸಾಕ್ ಲಿಂಕನ್, ಅಮೋಸ್, ಸತೀಶ್, ಪೀಟರ್, ಶಿವಕುಮಾರ್, ಕಾಂತರಾಜ್, ರೂಪನಾರಾಯಣ್, ಸುಮಿತ್ರಬಾಯಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Friday, August 19, 2022

ಬ್ರಹ್ಮಾಕುಮಾರಿಸ್ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ


ಭದ್ರಾವತಿ ನ್ಯೂಟೌನ್ ಬ್ರಹ್ಮಾಕುಮಾರಿಸ್ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ವಿಜೃಂಭಣೆಯಿಂದ ಜರುಗಿತು. 
    ಭದ್ರಾವತಿ, ಜ. ೧೯: ನ್ಯೂಟೌನ್ ಬ್ರಹ್ಮಾಕುಮಾರಿಸ್ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ವಿಜೃಂಭಣೆಯಿಂದ ಜರುಗಿತು.
    ಶ್ರೀ ಕೃಷ್ಣ ಜನ್ಮಾಷ್ಠಮಿ ಸಂದೇಶ ನೀಡಿದ ವಿಶ್ವ ವಿದ್ಯಾಲಯದ ಸಂಚಾಲಕರಾದ ಬ್ರಹ್ಮಾ ಕುಮಾರಿ ಮಾಲಾ ಅಕ್ಕ, ಭಗವಾನ್ ಶ್ರೀಕೃಷ್ಣನ ಶ್ರೇಷ್ಠತೆಗೆ ಕಾರಣಗಳನ್ನು ವಿವರಿಸಿ ಸಣ್ಣ ಕಥೆಯ ಮೂಲಕ ಕೊಳಲು ಹೇಗೆ ಶ್ರೀ ಕೃಷ್ಣನ ಜೊತೆ ಸದಾ ಇರುತ್ತದೆಯೋ ಹಾಗೆ ನಾವು ಸಹ ಪರಮಾತ್ಮನೊಂದಿಗೆ ಸದಾ ಇರಬೇಕೆಂಬ ನೀತಿಯನ್ನು ತಿಳಿಸಿಕೊಟ್ಟರು.
    ನಗರದ ಪ್ರಧಾನ ಅಂಚೆ ಕಛೇರಿ ಪೋಸ್ಟ್ ಮಾಸ್ಟರ್ ಆಶಾ ಜೆ. ಪ್ರಭು, ಅಂಚೆ ನೌಕರ ನಿತ್ಯಾನಂದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ರಾಧೆ ಮತ್ತು ಶ್ರೀ ಕೃಷ್ಣನ ವೇಷಭೂಷಣದೊಂದಿಗೆ ಮಕ್ಕಳು ಕಣ್ಮನ ಸೆಳೆದರು. ವಿಶ್ವ ವಿದ್ಯಾಲಯದ ಸೇವಾಕರ್ತರು, ಭಕ್ತರು ಪಾಲ್ಗೊಂಡಿದ್ದರು. ಮಹಾಭೋಜನ ವ್ಯವಸ್ಥೆ ಏರ್ಪಡಿಸಲಾಗಿತ್ತು.  

ಸ್ಕಾಟ್‌ಲ್ಯಾಂಡ್‌ನಲ್ಲಿ ಜನಿಸಿದ ಹೆಣ್ಣು ಮಗುವಿಗೆ ಹಿಂದೂ ಸಂಪ್ರದಾಯದಂತೆ ನಾಮಕರಣ

ಸ್ಕಾಟ್‌ಲ್ಯಾಂಡ್‌ನಲ್ಲಿ ವಾಸವಿರುವ ಎಚ್.ಆರ್ ಶ್ರೀಕಾಂತ್ ಮತ್ತು ಶ್ರೀದೇವಿ ದಂಪತಿಗೆ ಜನಿಸಿರುವ ಹೆಣ್ಣು ಮಗು ಸ್ಕಾಟ್‌ಲ್ಯಾಂಡ್ ಪ್ರಜೆ ಸ್ಪಟಿಕ ಶ್ರೀಕಾಂತ್.
    ಭದ್ರಾವತಿ, ಆ. ೧೯: ಸ್ಕಾಟ್‌ಲ್ಯಾಂಡ್‌ನಲ್ಲಿ ಜನಿಸಿದ ಹೆಣ್ಣು ಮಗುವಿನ ನಾಮಕರಣ ತುಂಗಾ ನದಿ ತೀರದಲ್ಲಿ ಹಿಂದೂ ಸಂಪ್ರದಾಯದಂತೆ ನೆರವೇರಿತು.
    ನಗರದ ಎಂಪಿಎಂ ಕಾರ್ಖಾನೆಯ ನಿವೃತ್ತ ಕಾರ್ಮಿಕ ಡಿ. ರುದ್ರಯ್ಯನವರ ಪುತ್ರ ಎಚ್.ಆರ್ ಶ್ರೀಕಾಂತ್ ಮತ್ತು ಕೇಶವಪುರ ಬಡಾವಣೆ(ಗಾಂಧಿನಗರ) ನಿವಾಸಿ ನಾಗರಾಜ್‌ರವರ ಪುತ್ರಿ ಶ್ರೀದೇವಿ  ಸ್ಕಾಟ್‌ಲ್ಯಾಂಡ್ ಎಡಿನ್‌ಬರ್ಗ್‌ನಲ್ಲಿ ವಾಸವಿದ್ದು, ಈ ದಂಪತಿಗೆ ಫೆ.೫ರಂದು ಹೆಣ್ಣು ಮಗು ಜನಸಿದೆ.
    ಕಳೆದ ವಾರ ಮಗುವಿನೊಂದಿಗೆ ತಾಯ್ನಾಡಿಗೆ ಆಗಮಿಸಿದ ದಂಪತಿ ಕುಟುಂಬ ಸದಸ್ಯರು, ಬಂಧು-ಬಳಗದವರೊಂದಿಗೆ ಶಿವಮೊಗ್ಗ ಗಾಜನೂರು ತುಂಗಾ ಜಲಾಶಯ ಸಮೀಪದಲ್ಲಿರುವ ತುಂತುರು ಫಾರಂ ಹೌಸ್‌ನಲ್ಲಿ ಹಿಂದೂ ಸಂಪ್ರದಾಯದಂತೆ ನಾಮಕರಣ ನೆರವೇರಿಸುವ ಮೂಲಕ ಮಗುವಿಗೆ ಸ್ಪಟಿಕ ಶ್ರೀಕಾಂತ್ ಎಂದು ಹೆಸರಿಡುವ ಮೂಲಕ ಸಂಭ್ರಮಿಸಿದರು.


    ಶ್ರೀಕಾಂತ್ ಮತ್ತು ಶ್ರೀದೇವಿ ಇಬ್ಬರು ಇಂಜಿನಿಯರ್ ಆಗಿದ್ದು, ಶ್ರೀಕಾಂತ್ ವಿಪ್ರೋ ಕಂಪನಿ ಉದ್ಯೋಗಿಯಾಗಿ ನೇಮಕಗೊಂಡು ಕಳೆದ ಕೆಲವು ವರ್ಷಗಳಿಂದ ಸ್ಕಾಟ್‌ಲ್ಯಾಂಡ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಗು ವಿದೇಶದಲ್ಲಿ ಜನಿಸಿದರೂ ಸಹ ತಾಯ್ನಾಡಿನ ಅಭಿಮಾನ, ಪ್ರೀತಿ, ಹಿಂದೂ ಸಂಪ್ರದಾಯದಂತೆ ನಾಮಕರಣ ನೆರವೇರಿಸಬೇಕೆಂಬ ದಂಪತಿ ಕನಸು ಒಂದೆಡೆ ನನಸಾಗಿದೆ. ಮತ್ತೊಂದೆಡೆ ಈ ದಂಪತಿ ವಿದೇಶದಲ್ಲಿ ನೆಲೆಸಿರುವ ಭಾರತೀಯರಿಗೆ ಸ್ಪೂರ್ತಿದಾಯಕ ಎಂದರೆ ತಪ್ಪಾಗಲಾರದು.


ಸ್ಕಾಟ್‌ಲ್ಯಾಂಡ್‌ನಲ್ಲಿ ಜನಿಸಿದ ಹೆಣ್ಣು ಮಗುವಿನ ನಾಮಕರಣ ತುಂಗಾ ನದಿ ತೀರದಲ್ಲಿ ಹಿಂದೂ ಸಂಪ್ರದಾಯದಂತೆ ನೆರವೇರಿತು.


ತಾಲೂಕು ಆಡಳಿತದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ

ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ತಾಲೂಕು ಕಛೇರಿ ಸಭಾಂಗಣದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು.
    ಭದ್ರಾವತಿ, ಆ. ೧೯: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ತಾಲೂಕು ಕಛೇರಿ ಸಭಾಂಗಣದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು.
    ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಭಗವಾನ್ ಶ್ರೀ ಕೃಷ್ಣನಿಗೆ ಪೂಜೆ ಸಲ್ಲಿಸುವ ಮೂಲಕ ಪುಷ್ಪಾರ್ಚನೆ ನೆರವೇರಿಸಲಾಯಿತು.  ತಹಸೀಲ್ದಾರ್ ಆರ್. ಪ್ರದೀಪ್, ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಸದಸ್ಯರಾದ ಬಿ.ಕೆ ಮೋಹನ್, ರಿಯಾಜ್ ಅಹಮದ್, ಕಂದಾಯಾಧಿಕಾರಿ ರಾಜ್‌ಕುಮಾರ್, ಬಿಜೆಪಿ ಮುಖಂಡ ಟಿ. ವೆಂಕಟೇಶ್, ಗೊಲ್ಲ ಯಾದವ ಸಮಾಜದ ಹಿರಿಯರಾದ ಗೋವಿಂದಪ್ಪ, ಸಮಾಜದ ಅಧ್ಯಕ್ಷ ವೆಂಕಟೇಶ್ ಹಾಗು ಪದಾಧಿಕಾರಿಗಳು, ನಿರ್ದೇಶಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಗೋವಿಂದಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. ತಳ್ಳಿಕಟ್ಟೆ ಪ್ರಕಾಶ್ ಸ್ವಾಗತಿಸಿದರು. ಸರ್ಕಾರಿ ಐಟಿಐ ತರಬೇತಿದಾರ ಪುಟ್ಟಲಿಂಗ ಮೂರ್ತಿ ಮತ್ತು ಎಂ. ರಮೆಶ್ ನಿರೂಪಿಸಿದರು. ನ್ಯಾಯವಾದಿ ಟಿ.ಎಸ್ ರಾಜು ವಂದಿಸಿದರು.

ಶ್ರೀ ಸಂತ ಸೇವಾಲಾಲ್ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್ ಶಿಬಿರಕ್ಕೆ ಅವಕಾಶ ನೀಡುವುದಿಲ್ಲ : ಪಿ. ಕೃಷ್ಣಾನಾಯ್ಕ

ಭದ್ರಾವತಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಂಜಾರ ಯುವಕರ ಸಂಘದ ಅಧ್ಯಕ್ಷ ಪಿ. ಕೃಷ್ಣನಾಯ್ಕ ಹಾಗು ಬಂಜಾರ ಸಮಾಜದ ಪ್ರಮುಖರು ಮಾತನಾಡಿದರು.
    ಭದ್ರಾವತಿ, ಆ. ೧೯: ಶ್ರೀ ಸಂತ ಸೇವಾಲಾಲ್ ಜನ್ಮಸ್ಥಳ ಮಹಾಮಠ, ಬಂಜಾರ ಸಮಾಜದ ಪುಣ್ಯ ಕ್ಷೇತ್ರವಾದ ದಾವಣಗೆರೆ ಹೊನ್ನಾಳಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಉದ್ಯೋಗಿ ಪ್ರಾಥಮಿಕ ಶಿಕ್ಷಾ ವರ್ಗ(ಆರ್‌ಎಸ್‌ಎಸ್ ಶಿಬಿರ) ಯಾವುದೇ ಕಾರಣಕ್ಕೂ ನಡೆಯಲು ಅವಕಾಶ ನೀಡುವುದಿಲ್ಲ ಎಂದು ಬಂಜಾರ ಯುವಕರ ಸಂಘದ ಅಧ್ಯಕ್ಷ ಪಿ. ಕೃಷ್ಣಾನಾಯ್ಕ ಹೇಳಿದರು.
    ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶ್ರೀ ಸಂತ ಸೇವಾಲಾಲ್ ಜನ್ಮಸ್ಥಳ ತನ್ನದೇ ಆದ ಪರಂಪರೆ, ಧಾರ್ಮಿಕ ಸಂಸ್ಕೃತಿಯನ್ನು ಹೊಂದಿದೆ. ಇಂತಹ ಸ್ಥಳದಲ್ಲಿ ಧಾರ್ಮಿಕ ಸಂಸ್ಕೃತಿಗೆ ಧಕ್ಕೆ ತರುವಂತಹ ಬೇರೆ ಯಾವುದೇ ರೀತಿಯ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ಪುಣ್ಯ ಸ್ಥಳದ ಅಭಿವೃದ್ಧಿ ಹಾಗು ಬಂಜಾರ ಸಮಾಜದವರ ಏಳಿಗೆಗೆ ಪೂರಕವಾದ ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಬೇಕು. ಆದರೆ ಬಂಜಾರ ಸಮಾಜದವರ ಗಮನಕ್ಕೆ ಬಾರದಂತೆ ಸೆ.೧೧ ರಿಂದ ೧೯ರ ವರೆಗೆ ಉದ್ಯೋಗಿ ಪ್ರಾಥಮಿಕ ಶಿಕ್ಷಾ ವರ್ಗ ನಡೆಯುತ್ತಿರುವ ಬಗ್ಗೆ ಈಗಾಗಲೇ ಕರಪತ್ರಗಳನ್ನು ಹಂಚಲಾಗಿದೆ. ಈ ಮೂಲಕ ಬಂಜಾರ ಸಮಾಜದ ಧಾರ್ಮಿಕ ಸಂಸ್ಕೃತಿ ಮೇಲೆ ದಾಳಿ ನಡೆಲು ಪ್ರಯತ್ನಿಸಲಾಗುತ್ತಿದೆ. ಇದಕ್ಕೆ ಕುಡಚಿ ಕ್ಷೇತ್ರದ ಶಾಸಕರು, ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಿ. ರಾಜೀವ್ ಕಾರಣ ಎಂಬ ಆರೋಪ ಕೇಳಿಬರುತ್ತಿವೆ. ಪಿ. ರಾಜೀವ್ ಅವರಿಗೆ ಅನುಮತಿ ನೀಡಲು ಯಾವುದೇ ಅಧಿಕಾರವಿಲ್ಲ. ಒಂದು ವೇಳೆ ಶಿಕ್ಷಾ ವರ್ಗ ನಡೆಯಬೇಕಾದರೆ ಮಹಾಮಠದ ಟ್ರಸ್ಟ್ ಅನುಮತಿ ಕಡ್ಡಾಯವಾಗಿದೆ ಎಂದರು.


    ಈ ವಿಚಾರಕ್ಕೆ ಸಂಬಂಧಿಸಿದಂತೆ ಆ.೨೧ರಂದು ಮಹಾಮಠದಲ್ಲಿ ಬೃಹತ್ ಬಾಯ್ ಘಡ್ ಅಂದೋಲನ ನಡೆಯಲಿದ್ದು, ಈ ಅಂದೋಲನದಲ್ಲಿ ರಾಜ್ಯದ ವಿವಿಧೆಡೆಗಳಿಂದ ಬಂಜಾರ ಸಮಾಜದವರು ಪಾಲ್ಗೊಳ್ಳಲಿದ್ದಾರೆ. ಅಂದೋಲನದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಒಂದು ವೇಳೆ ಇದಕ್ಕೆ ವಿರೋಧ ವ್ಯಕ್ತವಾದಲ್ಲಿ ಮುಂದಿನ ಹೋರಾಟ ನಡೆಸಲಾಗುವುದು ಎಂದರು.
    ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಪ್ರೇಮ್‌ಕುಮಾರ್, ಶಂಕರ್‌ನಾಯ್ಕ, ಚಂದ್ರು, ವೀರೇಶ್, ನಾಗನಾಯ್ಕ, ಸುಮಾಬಾಯಿ, ಸೋಮಿಬಾಯಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Thursday, August 18, 2022

ಈಶ್ವರಪ್ಪ ಮುಂಬರುವ ಚುನಾವಣೆಯಲ್ಲಿ ಟಿಕೆಟ್ ಸಿಗುವುದಿಲ್ಲ ಎಂಬ ಭ್ರಮೆಯಲ್ಲಿ ಬೇಕಾಬಿಟ್ಟಿ ಹೇಳಿಕೆ

ವೈಯಕ್ತಿಕ ಗಲಾಟೆ ಕೋಮು ಗಲಭೆಯಾಗಿ ಬಿಂಬಿಸಲು ಯತ್ನ : ಕಾಂಗ್ರೆಸ್ ಮುಖಂಡರ ಆರೋಪ 

ಭದ್ರಾವತಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರು ಮಾತನಾಡಿದರು. 
    ಭದ್ರಾವತಿ, ಆ. ೧೮ : ಹಿರಿಯ ರಾಜಕಾರಣಿ, ಮಾಜಿ ಉಪಮುಖ್ಯಮಂತ್ರಿಯಾಗಿರುವ ಕೆ.ಎಸ್ ಈಶ್ವರಪ್ಪನವರಿಗೆ ಮುಂಬರುವ ಚುನಾವಣೆಯಲ್ಲಿ ಟಿಕೆಟ್ ಸಿಗುವುದಿಲ್ಲ ಎಂಬ ಭ್ರಮೆಯಲ್ಲಿ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಕ್ಷೇತ್ರದಲ್ಲಿ ಇಬ್ಬರ ನಡುವೆ ವೈಯಕ್ತಿಕವಾಗಿ ನಡೆದಿರುವ ಗಲಾಟೆಯನ್ನು ಕೋಮು ಗಲಭೆಯಾಗಿ ಬಿಂಬಿಸಲು ಯತ್ನಿಸಿರುವುದು ಅವರಿಗೆ ಶೋಭೆ ತರುವುದಲ್ಲ ಎಂದು ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. 
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಮುಖರು, ಕ್ಷೇತ್ರದಲ್ಲಿ ಎಲ್ಲರೂ ಶಾಂತಿ ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಕಳೆದ ೩ ದಿನಗಳ ಹಿಂದೆ ಇಬ್ಬರು ವೈಯಕ್ತಿಕವಾಗಿ ಗಲಾಟೆ ಮಾಡಿಕೊಂಡಿದ್ದು, ಇದನ್ನು ಹಿಂದೂ ಮುಸ್ಲಿಂ ಗಲಾಟೆಯಾಗಿ ಬಿಂಬಿಸಲು ಮುಂದಾಗಿರುವುದು ವಿಷಾದನೀಯ ಬೆಳವಣಿಗೆಯಾಗಿದೆ ಎಂದರು. 
ಪೊಲೀಸರು ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಎಲ್ಲಾ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿ ವಿಚಾರಗಳ ಕಡೆ ಗಮನ ಹರಿಸದ ಈಶ್ವರಪ್ಪನವರು ಈ ಗಲಾಟೆ ವಿಚಾರದಲ್ಲಿ ಹೆಚ್ಚಿನ ಆಸಕ್ತಿ ತೋರಿಸಿರುವುದು ವಿಪರ್ಯಾಸದ ಸಂಗತಿಯಾಗಿದೆ. ಅಲ್ಲದೆ ಬಾಯಿಗೆ ಬಂದಂತೆ ಹೇಳಿಕೆಗಳನ್ನು ನೀಡುವ ಮೂಲಕ ಕ್ಷೇತ್ರದ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದಾರೆಂದು ಆರೋಪಿಸಿದರು. 
ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳನ್ನು ಇದುವರೆಗೂ ಅಭಿವೃದ್ಧಿ ಪಡಿಸಲು ಸಾಧ್ಯವಾಗಿಲ್ಲ. ಅಲ್ಲದೆ ಕ್ಷೇತ್ರದಲ್ಲಿ ಹಲವಾರು ಸಮಸ್ಯೆಗಳಿದ್ದು, ಈ ಬಗ್ಗೆ ಮೊದಲು ಗಮನ ಹರಿಸಲಿ ಎಂದು ಸಲಹೆ ವ್ಯಕ್ತಪಡಿಸಿದರು. 
ಈಶ್ವರಪ್ಪನವರ ಹೇಳಿಕೆಯಿಂದ ಸಿದ್ದರಾಮಯ್ಯನವರ ಮೇಲೆ ಮೊಟ್ಟೆ ಎಸೆತ : 
ಸಿದ್ದರಾಮಯ್ಯನವರ ಹೇಳಿಕೆಯನ್ನು ಈಶ್ವರಪ್ಪನವರು ತಿರುಚಿದ್ದಾರೆ. ಯಾವುದೇ ಸೂಕ್ಷ್ಮ ಪ್ರದೇಶದಲ್ಲಿ ಫ್ಲೆಕ್ಸ್‌ಗಳನ್ನು ಅಳವಡಿಸಲು ಅನುಮತಿ ನೀಡುವಾಗ ಎಚ್ಚರ ವಹಿಸಬೇಕು ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ಇದರಲ್ಲಿ ಬೇರೆ ಯಾವುದೇ ಅರ್ಥವಿಲ್ಲ. ಆದರೆ ಈಶ್ವರಪ್ಪನವರು ಮುಸ್ಲಿಂರಿಗೆ ಬೇರೆ ಜಾಗ, ಹಿಂದೂಗಳಿಗೆ ಬೇರೆ ಜಾಗ ಎಂದು ಹೇಳಿಕೆ ನೀಡುತ್ತಿದ್ದಾರೆ. ಈಶ್ವರಪ್ಪನವರ ಇಂತಹ ಹೇಳಿಕೆಯಿಂದಾಗಿ ಸಿದ್ದರಾಮಯ್ಯನವರ ಮೇಲೆ ಮೊಟ್ಟೆ ಎಸೆತ ಘಟನೆ ನಡೆದಿದೆ ಎಂದು ದೂರಿದರು. 
ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಮುಖಂಡರಾದ ಟಿ.ವಿ ಗೋವಿಂದಸ್ವಾಮಿ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ನಗರಸಭಾ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.