Monday, August 22, 2022

ಡಿಜೆ ಬಳಸಲು ನಮಗೂ ಇಷ್ಟ, ಆದರೆ ಸುಪ್ರೀಂ ಕೋರ್ಟ್ ಆದೇಶ ಪಾಲಿಸುವುದು ನಮ್ಮ ಕರ್ತವ್ಯ

ಎಲ್ಲಾ ಧರ್ಮಗುರು, ಹಿರಿಯರಿಂದ ಯುವಕರ ನಿಯಂತ್ರಣ ಸಾಧ್ಯ-ಶಾಂತಿಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ

ಭದ್ರಾವತಿ ರೋಟರಿ ಕ್ಲಬ್ ಸಭಾಂಗಣದಲ್ಲಿ ಗೌರಿ ಗಣೇಶ ಹಬ್ಬದ ಹಿನ್ನಲೆಯಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಶಾಂತಿಸಭೆ ನೇತೃತ್ವ ವಹಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಮಾತನಾಡಿದರು.
    ಭದ್ರಾವತಿ, ಆ.೨೧: ಡಿಜೆ ಬಳಸಲು ನಮಗೂ ಇಷ್ಟವಿದೆ ಆದರೆ ಸುಪ್ರೀಂ ಕೋರ್ಟ್ ಆದೇಶ ಎಲ್ಲರೂ ಪಾಲಿಸಬೇಕಾಗಿದೆ. ಹಿನ್ನೆಲೆಯಲ್ಲಿ ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಮನವಿ ಮಾಡಿದರು.
    ಅವರು ಸೋಮವಾರ ನಗರದ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಗೌರಿ-ಗಣೇಶ ಹಬ್ಬದ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಂತಿಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ಡಿಜೆ ಅಂದರೆ ಎಲ್ಲರಿಗೂ ಇಷ್ಟ. ನಾನು ಕಾಲೇಜಿನಲ್ಲಿ ವ್ಯಾಸಂಗ ಮಾಡುವ ಅವಧಿಯಲ್ಲಿ ಸಂಭ್ರಮಿಸಿದ್ದೇನೆ. ಆದರೆ ಸುಪ್ರೀಂ ಕೋರ್ಟ್ ಆದೇಶಕ್ಕೆ ನಾವೆಲ್ಲರೂ ತಲೆಬಾಗಬೇಕಾಗಿದೆ. ಈ ಬಾರಿ ಗಣೇಶೋತ್ಸವಕ್ಕೆ ಜಿಲ್ಲಾಡಳಿತ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದರು.


    ಸಂಭ್ರಮಾಚರಣೆ ಸಂದರ್ಭದಲ್ಲಿ ಊರಿನ ಎಲ್ಲಾ ಧರ್ಮಗುರುಗಳು ಹಾಗು ಹಿರಿಯರು ಜಿಲ್ಲಾಡಳಿತಕ್ಕೆ ಹೆಚ್ಚಿನ ಸಹಕಾರ ನೀಡುತ್ತಿದ್ದಾರೆ. ಶಾಂತಿ-ಸುವ್ಯವಸ್ಥೆ ಕಾಪಾಡುವಲ್ಲಿ, ಯುವಕರನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
    ಸಣ್ಣಪುಟ್ಟ ಸಮಸ್ಯೆಗಳು ಸಹಜ. ಅವುಗಳನ್ನು ಅಲ್ಲಿಯೇ ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ನಮ್ಮ ಜಾಣ್ಮೆ ಪ್ರದರ್ಶಿಸಬೇಕು. ಕೆಲವೊಂದು ಅನಿವಾರ್ಯ ಸಂದರ್ಭದಲ್ಲಿ ಕಠಿಣ ಕ್ರಮಗಳನ್ನು ಅನುಸರಿಸಬೇಕಾಗುತ್ತದೆ. ಇದನ್ನು ಯಾರು ಸಹ ತಪ್ಪಾಗಿ ಅರ್ಥೈಸಿಕೊಳ್ಳಬಾರದು. ಇಂತಹ ಸಂದರ್ಭದಲ್ಲಿ ನಮ್ಮ ಮನಸ್ಸಿಗೂ ತುಂಬಾ ನೋವಾಗುತ್ತದೆ. ಜನರು ಕಠಿಣ ಸಂದರ್ಭದಲ್ಲೂ ಹೆಚ್ಚಿನ ಸಹಕಾರ ನೀಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ನಾನು ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಲ್ಲಿ ಎಲ್ಲರೂ ಶಾಂತಿ-ನೆಮ್ಮದಿಯಿಂದ ಬದುಕುವ ವಾತಾವರಣ ಕಲ್ಪಿಸಿ ಕೊಡುವುದು ನನ್ನ ಆಶಯವಾಗಿದೆ. ಈ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ ಎಲ್ಲರೂ ಹಬ್ಬವನ್ನು ಸಂಭ್ರಮದಿಂದ ಶಾಂತಿ-ಸೌಹಾರ್ದತೆಯಿಂದ ಆಚರಿಸುವಂತೆ ಮನವಿ ಮಾಡಿದರು.  
    ಉಳಿದಂತೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಸಂದರ್ಭದಲ್ಲಿ ಸರ್ಕಾರ ರೂಪಿಸುವ ಮಾರ್ಗದರ್ಶಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರಿಸರಕ್ಕೆ ಧಕ್ಕೆಯಾಗದಂತೆ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದು, ವಿದ್ಯುತ್ ಹಾಗು ಅಗ್ನಿ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸುವುದು. ಸ್ವಚ್ಛತೆ ಕಾಪಾಡುವುದು ಹಾಗು ಮೂರ್ತಿ ವಿಸರ್ಜನೆ ದಿನವನ್ನು ಮೊದಲೇ ತಿಳಿಸುವ ಮೂಲಕ ಸಹಕರಿಸುವಂತೆ ಕೋರಿದರು.
    ೫೦ ವರ್ಷಗಳಿಂದ ಶಾಂತಿಯುತವಾಗಿ ಆಚರಣೆ:
    ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿ ವತಿಯಿಂದ ಕಳೆದ ೫೦ ವರ್ಷಗಳಿಂದ ಹಬ್ಬವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ ಎಂದು ಸಭೆಯಲ್ಲಿ ಸಮಿತಿ ಅಧ್ಯಕ್ಷ, ಹಿರಿಯ ನಗರಸಭಾ ಸದಸ್ಯ ಕೆ. ಕದಿರೇಶ್ ಸ್ಪಷ್ಟಪಡಿಸಿದರು.
    ಕ್ಷೇತ್ರದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಉತ್ತಮ ಬಾಂಧವ್ಯ ಹೊಂದಿದ್ದೇವೆ. ಮುಸ್ಲಿಂ ಸಮುದಾಯದವರಿಂದ ಇದುವರೆಗೂ ಯಾವುದೇ ರೀತಿ ತೊಂದರೆಯಾಗಿಲ್ಲ. ಹಬ್ಬದ ಸಂದರ್ಭದಲ್ಲಿ ವಿನಾಕಾರಣ ಗೊಂದಲ ಹಾಗು ಭಯದ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ. ಕೆಲವು ಕಿಡಿಗೇಡಿಗಳಿಂದ ಸಣ್ಣ-ಪುಟ್ಟ ಗಲಾಟೆಗಳು ನಡೆಯುವುದು ಸಹಜ. ಇದಕ್ಕೆ ಯಾರು ಸಹ ಕಿವಿಗೊಡಬಾರದು ಎಂದು ಮನವಿ ಮಾಡಿದರು.
    ವಿನಾಕಾರಣ ವ್ಯಾಪಾರಸ್ಥರಿಗೆ ತೊಂದರೆ :
    ಪ್ರತಿಯೊಂದು ಘಟನೆ ಸಂದರ್ಭದಲ್ಲೂ ವಿನಾಕಾರಣ ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಬಂದ್ ಮಾಡಿಸುವುದು ಸರಿಯಲ್ಲ. ಇದರಿಂದಾಗಿ ವ್ಯಾಪಾರಸ್ಥರು ಸಂಕಷ್ಟಕ್ಕೆ ಒಳಗಾಗುವಂತಾಗಿದೆ ಎಂದು ಎಂ.ಎಸ್ ಜನಾರ್ಧನ ಅಯ್ಯಂಗಾರ್ ಅಳಲು ವ್ಯಕ್ತಪಡಿಸಿದರು.
    ವ್ಯಾಪಾರ ವಹಿವಾಟು ಇಲ್ಲದೆ ಆರ್ಥಿಕವಾಗಿ ಸಂಕಷ್ಟ ಎದುರಿಸುವಂತಾಗಿದೆ. ವ್ಯಾಪಾರಸ್ಥರಿಂದ ಯಾರಿಗೂ ಯಾವುದೇ ರೀತಿ ತೊಂದರೆಯಾಗುವುದಿಲ್ಲ. ಬಲವಂತವಾಗಿ ಬಂದ್ ಮಾಡಿಸದೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಕಲ್ಪಿಸಿಕೊಡುವಂತೆ ಮನವಿ ಮಾಡಿದರು.
    ಕಿಡಿಗೇಡಿಗಳು ಯಾರೇ ಇರಲಿ ಅವರ ವಿರುದ್ಧ ಕ್ರಮ ಕೈಗೊಳ್ಳಿ :
ಎಲ್ಲಾ ಹಬ್ಬಗಳನ್ನು ಇಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಒಗ್ಗಟ್ಟಾಗಿ ಆಚರಿಸಿಕೊಂಡು ಬರುತ್ತಿದ್ದೇವೆ. ಕೆಲವು ಕಿಡಿಗೇಡಿಗಳಿಂದ ಸಣ್ಣ-ಪುಟ್ಟ ಗಲಾಟೆಗಳು ನಡೆಯುತ್ತಿದ್ದು, ಅಂತಹ ಕಿಡಿಗೇಡಿಗಳು ಯಾರೇ ಇರಲಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮುಸ್ಲಿಂ ಸಮುದಾಯದ ಮುಖಂಡರಾದ ಫೀರ್ ಷರೀಫ್, ಅಮೀರ್‌ಜಾನ್ ಸೇರಿದಂತೆ ಇನ್ನಿತರರು ಆಗ್ರಹಿಸಿದರು.
    ಕ್ಷೇತ್ರದಲ್ಲಿರುವ ಎಲ್ಲರೂ ಎಚ್ಚರವಹಿಸಬೇಕು. ಕಿಡಿಗೇಡಿಗಳು ಕಂಡು ಬಂದಲ್ಲಿ ಅವರನ್ನು ದೂರವಿಡುವ ಕೆಲಸ ಮಾಡಬೇಕು. ಎಲ್ಲರೂ ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಗಮನ ನೀಡಬೇಕೆಂದರು.


    ಜಿಲ್ಲೆಯಲ್ಲಿರುವ ಪ್ರಮುಖ ರಾಜಕಾರಣಿಗಳ ಸಭೆ ನಡೆಸಿ :
    ಜಿಲ್ಲೆಯಲ್ಲಿರುವ ಕೆಲವು ರಾಜಕಾರಣಿಗಳು ಘಟನೆಗಳನ್ನು ದುರ್ಬಳಕೆ ಮಾಡಿಕೊಂಡು ವಿನಾಕಾರಣ ಹೇಳಿಕೆ ನೀಡುವ ಮೂಲಕ ಜನರನ್ನು ಪ್ರಚೋದನೆಗೊಳಿಸುತ್ತಿದ್ದಾರೆಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಆರೋಪಿಸಿದರು.
    ಘಟನೆಯನ್ನು ನೋಡದಿದ್ದರೂ, ಘಟನಾ ಸ್ಥಳದಲ್ಲಿ ಇರದಿದ್ದರೂ ಸಹ ಬೇಕಾಬಿಟ್ಟಿಯಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದರಿಂದಾಗಿ ಗಲಭೆಗಳು ಹೆಚ್ಚಾಗುತ್ತಿವೆ. ರಾಜಕೀಯ ಲಾಭಕ್ಕಾಗಿ ಜನರ ಬದುಕನ್ನು ಸಂಕಷ್ಟಕ್ಕೆ ತಳ್ಳುವುದು ಸರಿಯಲ್ಲ. ಸಂವಿಧಾನದ ಚೌಕಟ್ಟಿನಲ್ಲಿ ಎಲ್ಲರೂ ಬದ್ಧತೆಯಿಂದ ನಡೆದುಕೊಳ್ಳಬೇಕಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿರುವ ಪ್ರಮುಖ ರಾಜಕಾರಣಿಗಳ ಸಭೆ ನಡೆಸಿ ಅವರಿಗೆ ಶಾಂತಿ ಸೌಹಾರ್ದತೆ ಕಾಪಾಡಲು ಮನವರಿಕೆ ಮಾಡಿಕೊಡಬೇಕೆಂದು ಕೋರಿದರು.
    ಸಭೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಡಾ. ಬಿ.ಎಂ ಲಕ್ಷ್ಮೀಪ್ರಸಾದ್, ಹೆಚ್ಚುವರಿ ರಕ್ಷಣಾಧಿಕಾರಿ ವಿಕ್ರಮ್ ಅಮಟೆ, ಪೊಲೀಸ್ ಉಪಾಧೀಕ್ಷಕ, ಐಪಿಎಸ್ ಅಧಿಕಾರಿ ಜಿತೇಂದ್ರಕುಮಾರ್ ದಯಾಮ, ಉಪವಿಭಾಗಾಧಿಕಾರಿ ದೊಡ್ಡೇಗೌಡರ್, ತಹಸೀಲ್ದಾರ್ ಆರ್. ಪ್ರದೀಪ್, ಪೌರಾಯುಕ್ತ ಮನುಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ವಿವಿಧ ಧರ್ಮಗಳ ಪ್ರಮುಖರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳ ಪ್ರಮುಖರು, ಪೊಲೀಸ್ ವೃತ್ತ ನಿರೀಕ್ಷಕರು, ವಿವಿಧ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು,  ನಗರಸಭೆ, ಮೆಸ್ಕಾಂ, ಅರಣ್ಯ ಹಾಗು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮತ್ತು  ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Sunday, August 21, 2022

ಡಿಚ್ಚಿ ಮುಬಾರಕ್ ವಿರುದ್ಧ ಗಾಂಜಾ ಸೇವನೆ ಪ್ರಕರಣ ದಾಖಲು

ಡಿಚ್ಚಿ ಮುಬಾರಕ್
    ಭದ್ರಾವತಿ, ಆ. ೨೧ : ಇತ್ತಿಚೆಗೆ ನೆಹರು ನಗರದಲ್ಲಿ ವೈಯಕ್ತಿಕ ಕಾರಣಕ್ಕೆ ನಡೆದಿದ್ದ ಗಲಾಟೆ ಪ್ರಕರಣದ ಪ್ರಮುಖ ಆರೋಪಿ ಡಿಚ್ಚಿ ಮುಬಾರಕ್ ವಿರುದ್ಧ ಗಾಂಜಾ ಸೇವನೆ ಪ್ರಕರಣ ದಾಖಲಾಗಿದೆ.
    ನೆಹರೂ ನಗರದ ರಾಜೇಶ್ವರಿ ದೇವಾಲಯದ ಬಳಿ ನಡೆದುಕೊಂಡು ಹೋಗುತ್ತಿದ್ದ ಸುನಿಲ್ ಮೇಲೆ ಮುಬಾರಕ್ ವೈಯಕ್ತಿಕ ಕಾರಣಕ್ಕೆ ಹಲ್ಲೆ ನಡೆಸಿದ್ದನು.  ಈ ಸಂಬಂಧ ಪೊಲೀಸರು ಮುಬಾರಕ್‌ನನ್ನು ಬಂಧಿಸಿದ್ದರು.
    ವಿಚಾರಣೆ ಸಂದರ್ಭದಲ್ಲಿ ಗಾಂಜಾ ಸೇವನೆ ಅನುಮಾನದಲ್ಲಿ ಪೊಲೀಸರು ಮುಬಾರಕ್‌ನನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಿದ್ದರು. ತಪಾಸಣಾ ವರದಿಯಲ್ಲಿ ಮುಬಾರಕ್ ಗಾಂಜಾ ಸೇವಿಸಿರುವುದು ದೃಢಪಟ್ಟಿರುವ ಹಿನ್ನಲೆಯಲ್ಲಿ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಅದ್ದೂರಿಯಾಗಿ ಜರುಗಿದ ಓಂ ಶಕ್ತಿ ಉತ್ಸವ ಮೆರವಣಿಗೆ

ಭದ್ರಾವತಿ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಸಮೀಪದ ಅಂಬೇಡ್ಕರ್ ನಗರದಲ್ಲಿರುವ ಓಂ ಶಕ್ತಿ ದೇವಸ್ಥಾನದಲ್ಲಿ ಭಾನುವಾರ ಉತ್ಸವ ಮೆರವಣಿಗೆ ನಡೆಯಿತು.
    ಭದ್ರಾವತಿ, ಆ. ೨೧: ನಗರದ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಸಮೀಪದ ಅಂಬೇಡ್ಕರ್ ನಗರದಲ್ಲಿರುವ ಓಂ ಶಕ್ತಿ ದೇವಸ್ಥಾನದಲ್ಲಿ ಭಾನುವಾರ ಉತ್ಸವ ಮೆರವಣಿಗೆ ನಡೆಯಿತು.
    ಬಿ.ಎಚ್ ರಸ್ತೆಯಲ್ಲಿ ಓಂ ಶಕ್ತಿ ಉತ್ಸವ ಮೂರ್ತಿಯೊಂದಿಗೆ ಕಲಾ ತಂಡಗಳು ಹಾಗು ಹರಕೆಯೊತ್ತ ಭಕ್ತರು ಕೆಂಡ ತುಂಬಿದ ಮಡಕೆಯೊಂದಿಗೆ ಸಾಗಿದರು. ಕೊನೆಯಲ್ಲಿ ಕೆಂಡಾರ್ಪಣೆಯೊಂದಿಗೆ ಅಂತ್ಯಗೊಳಿಸಲಾಯಿತು.


    ಓಂ ಶಕ್ತಿ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಆಚರಣೆಗಳು ಜರುಗಿದವು. ನಗರದ ವಿವಿಧೆಡೆಗಳಿಂದ ಭಕ್ತರು ಆಗಮಿಸಿದ್ದರು. ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಜರುಗಿದವು.  

ಭೋವಿ ಸಮುದಾಯ ಭವನ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ : ಬಿ.ಕೆ ಸಂಗಮೇಶ್ವರ್

ಭದ್ರಾವತಿ ನಗರಸಭೆ ವ್ಯಾಪ್ತಿಯ ಗಾಂಧಿನಗರದ ಕೇಶವಪುರ ಬಡಾವಣೆಯಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಭೋವಿ ಸಮುದಾಯ ಭವನ ನಿರ್ಮಾಣದ ಗುದ್ದಲಿ ಪೂಜೆ ಸಮಾರಂಭವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
    ಭದ್ರಾವತಿ, ಆ. ೨೧ : ತಾಲೂಕಿನಲ್ಲಿ ಭೋವಿ ಸಮಾಜದವರ ಬಹಳ ವರ್ಷಗಳ ಕನಸು ಈಡೇರುತ್ತಿದ್ದು, ಸುಸಜ್ಜಿತವಾದ ಸಮುದಾಯ ಭವನ ನಿರ್ಮಾಣಕ್ಕೆ ಸಮಾಜದ ಎಲ್ಲರೂ ಕೈಜೋಡಿಸಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಮನವಿ ಮಾಡಿದರು.
    ಅವರು ಭಾನುವಾರ ನಗರಸಭೆ ವ್ಯಾಪ್ತಿಯ ಗಾಂಧಿನಗರದ ಕೇಶವಪುರ ಬಡಾವಣೆಯಲ್ಲಿ ಭೋವಿ ಸಮುದಾಯ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
    ಭೋವಿ ಸಮಾಜದವರು ಶ್ರಮ ಜೀವಿಗಳಾಗಿದ್ದು, ಕ್ಷೇತ್ರದಲ್ಲಿ ಸುಮಾರು ೧೦ ರಿಂದ ೧೫ ಸಾವಿರ ಜನಸಂಖ್ಯೆ ಹೊಂದಿದ್ದಾರೆ. ಈ ಸಮಾಜಕ್ಕೆ ಸುಸಜ್ಜಿತವಾದ ಸಮುದಾಯ ಭವನದ ಅವಶ್ಯಕತೆ ಮನಗಂಡು ಜಾಗ ಮಂಜೂರಾತಿ ಮಾಡಿಸಿಕೊಡಲಾಗಿದೆ. ಸಮುದಾಯ ಭವನದ ನಿರ್ಮಾಣಕ್ಕೆ ಸಮಾಜದ ಉಳ್ಳವರು ಹೆಚ್ಚಿನ  ಆರ್ಥಿಕ ನೆರವು ನೀಡುವ ಮೂಲಕ ಸಹಕರಿಸಬೇಕೆಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ಅಧ್ಯಕ್ಷ, ನಗರಸಭೆ ಮಾಜಿ ಅಧ್ಯಕ್ಷ ಬಿ.ಟಿ ನಾಗರಾಜ್,  ಸಮುದಾಯ ಭವನ ನಿರ್ಮಾಣಕ್ಕೆ ಸಮಾಜಕ್ಕೆ ಜಾಗದ ಕೊರತೆ ಇತ್ತು. ಈ ಸಂಬಂಧ ಶಾಸಕರಿಗೆ ಮನವಿ ಮಾಡಿಕೊಂಡ ಪರಿಣಾಮ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಜಾಗವನ್ನು ಮಂಜೂರಾತಿ ಮಾಡಿಸಿಕೊಡುವ ಜೊತೆಗೆ ಆರ್ಥಿಕವಾಗಿ ಹೆಚ್ಚಿನ ನೆರವು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಸಮಾಜದ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
    ಸಮಾಜದ ಜಿಲ್ಲಾಧ್ಯಕ್ಷ ರವಿಕುಮಾರ್, ಭೋವಿ ಸಮಾಜದವರು ಸ್ವಾಭಿಮಾನಿಗಳಾಗಿ ಸಮಾಜದಲ್ಲಿ ಎಲ್ಲರೊಂದಿಗೆ ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಸಮಾಜದ ಎಲ್ಲರೂ ನಮ್ಮ ಸಮುದಾಯ ಭವನ ಅಭಿಮಾನ ಬೆಳೆಸಿಕೊಳ್ಳುವ ಜೊತೆಗೆ ಸಮುದಾಯ ಭವನ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕೆಂದರು.  
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೀರಭದ್ರಪ್ಪ ಪೂಜಾರಿ, ಭೋವಿ ಅಭಿವೃದ್ಧಿ ನಿಗಮದ ಸದಸ್ಯ ಜಿ. ಆನಂದಕುಮಾರ್, ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯ ಧೀರರಾಜ್ ಹೊನ್ನವಿಲೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ. ಪೃಥ್ವಿರಾಜ್, ಕಾರ್ಯದರ್ಶಿ ಎಸ್.ಕೆ ಮೋಹನ್, ಶಿವಬಸಪ್ಪ, ಕೃಷ್ಣಮೂರ್ತಿ, ಚೌಡಪ್ಪ, ರವಿಕಿಶೋರ್, ಬಿ.ಎಸ್ ಗಣೇಶ್, ರವಿರಾಜ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಡಾ. ಧನಂಜಯ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Saturday, August 20, 2022

ಭದ್ರಾವತಿ ಸಿ.ಎನ್ ರಸ್ತೆ ಬಟ್ಟೆ ಅಂಗಡಿಯಲ್ಲಿ ಬೆಂಕಿ ಅವಘಡ

ಭದ್ರಾವತಿ: ನಗರದ ಸಿ.ಎನ್ ರಸ್ತೆಯಲ್ಲಿರುವ ಬಟ್ಟೆ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಹೆಚ್ಚಿನ ಹಾನಿ ಸಂಭವಿಸಿದೆ. 


    ಮಾಧವಾಚಾರ್ ವೃತ್ತದ ಸಮೀಪದಲ್ಲಿರುವ ಕೆಎಂಎಸ್ ಸಿಲ್ಕ್ಸ್ ಅಂಡ್ ಸ್ಯಾರಿಸ್ ಬಟ್ಟೆ ಅಂಗಡಿಯಲ್ಲಿ ರಾತ್ರಿ ವೇಳೆ  ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಬಟ್ಟೆ ಅಂಗಡಿಯಲ್ಲಿನ ವಸ್ತುಗಳು ಬಹುತೇಕ ಸುಟ್ಟು ಕರಕಲಾಗಿವೆ. ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಅಂಗಡಿ ಮುಂಗಟ್ಟುಗಳಿಗೆ ಯಾವುದೇ ಹಾನಿ ಸಂಭವಿಸಿಲ್ಲ.   ಕೆಎಂಎಸ್ ಸಿಲ್ಕ್ಸ್ ಬಟ್ಟೆ ಅಂಗಡಿಯಲ್ಲಿ ರಾತ್ರಿ ವೇಳೆ  ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಬಟ್ಟೆ ಅಂಗಡಿಯಲ್ಲಿನ ವಸ್ತುಗಳು ಬಹುತೇಕ ಸುಟ್ಟು ಕರಕಲಾಗಿವೆ. ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಅಂಗಡಿ ಮುಂಗಟ್ಟುಗಳಿಗೆ ಯಾವುದೇ ಹಾನಿ ಸಂಭವಿಸಿಲ್ಲ. 



     ಬೆಂಕಿ ದುರ್ಘಟನೆಗೆ ಇದುವರೆಗೂ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ  ಮೋಹನ್ ಸೇರಿದಂತೆ ಸ್ಥಳೀಯ ಮುಖಂಡರು ಬೇಟೆ ನೀಡಿ ಪರಿಶೀಲನೆ ನಡೆಸಿದರು.
     ಹಳೆಯ ಕಟ್ಟಡ ನವೀಕರಣ:
   ಈ ಬಟ್ಟೆ ಅಂಗಡಿ ಮಲ್ಲಿಕಾರ್ಜುನ ಎಂಬುವರಿಗೆ ಸೇರಿದ್ದಾಗಿದ್ದು, ಇದು ತುಂಬಾ ಹಳೆಯ ಕಟ್ಟಡವಾಗಿದೆ. ಯಾವುದೇ ಅಗ್ನಿ ಸುರಕ್ಷತಾ ವ್ಯವಸ್ಥೆಗಳನ್ನು ಹೊಂದಿಲ್ಲ ಎಂದು ತಿಳಿದು ಬಂದಿದೆ. 
   ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಬೆಂಕಿ ಅವಘಡ :
 ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಬೆಂಕಿ ಅವಘಡಗಳು ಹೆಚ್ಚಾಗುತ್ತಿವೆ. ಅದರಲ್ಲೂ ಕೆಲವು ತಿಂಗಳು ಹಿಂದೆ ಹೊಸ ಸೇತುವೆ ರೆಸ್ತೆಯಲ್ಲಿರುವ ಸಾಮಿಲ್‌ನಲ್ಲಿ ಬೃಹತ್ ಬೆಂಕಿ ಅವಘಡ ಸಂಭವಿಸಿತ್ತು.  ಇದಲ್ಲದೆ ಬ್ಯಾಂಕ್ ಕಟ್ಟಡ, ಚಪ್ಪಲಿ ಅಂಗಡಿಯಲ್ಲೂ ಬೆಂಕಿ ಅವಘಡಗಳು ಸಂಭವಿಸಿದ್ದವು.

ದೇವರಾಜ ಅರಸು ನುಡಿದಂತೆ ನಡೆದ ಆದರ್ಶ ಆಡಳಿತಗಾರ : ಆರ್. ಪ್ರದೀಪ್

ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಹಿಂದು ವರ್ಗಗಳ ಇಲಾಖೆ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ಡಿ. ದೇವರಾಜ ಅರಸು ಅವರು ೧೦೭ನೇ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು
    ಭದ್ರಾವತಿ, ಆ. ೨೦ : ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ನುಡಿದಂತೆ ನಡೆದ ಆದರ್ಶ ಆಡಳಿತಗಾರನಾಗಿದ್ದು, ಎಂದಿಗೂ ಆಡಳಿತ ವ್ಯವಸ್ಥೆಗೆ ಮಾದರಿಯಾಗಿದ್ದಾರೆಂದು ತಹಸೀಲ್ದಾರ್ ಆರ್. ಪ್ರದೀಪ್ ಬಣ್ಣಿಸಿದರು.
    ಅವರು ಶನಿವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಹಿಂದು ವರ್ಗಗಳ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಡಿ. ದೇವರಾಜ ಅರಸು ಅವರು ೧೦೭ನೇ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ನಮ್ಮ ಆಡಳಿತ ಇನ್ನೊಬ್ಬರಿಗೆ ಮಾದರಿಯಾಗಬೇಕು. ಹಿಂದುಳಿದ ವರ್ಗಗಳ ಧ್ವನಿಯಾಗಿ ಮಾತ್ರವಲ್ಲದೆ ಸಮಾಜದ ಎಲ್ಲಾ ವರ್ಗದ ಜನರ ಏಳಿಗೆಗಾಗಿ ಶ್ರಮಿಸಿದವರು ಡಿ. ದೇವರಾಜ ಅರಸು. ಇವರು ತಮ್ಮ ಅಧಿಕಾರದ ಅವಧಿಯಲ್ಲಿ ಹಲವಾರು ಮಹತ್ವದ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ಅದರಂತೆ ತಾವು ಸಹ ನಡೆದುಕೊಂಡರು. ಇಂತಹ ಆದರ್ಶ ವ್ಯಕ್ತಿ ಇಂದು ಆಡಳಿತ ನಡೆಸುವವರಿಗೆ ಮಾದರಿಯಾಗಿದ್ದಾರೆ ಎಂದರು.



    ನಗರಸಭೆ ಪೌರಾಯುಕ್ತ ಮನುಕುಮಾರ್ ಮಾತನಾಡಿ, ದೇವರಾಜ ಅರಸು ಅವರ ಕುರಿತು ಹೆಚ್ಚಿಗೆ ತಿಳಿಸಿಕೊಡುವ ಅಗತ್ಯವಿಲ್ಲ. ಅವರ ವಿಚಾರ ಎಲ್ಲರಿಗೂ ತಿಳಿದಿದೆ. ೧೨ನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣನವರು ಮಾಡಿದಂತಹ ಸಾಮಾಜಿಕ ಕ್ರಾಂತಿಯನ್ನು ದೇವರಾಜ ಅರಸು ಅವರು ೪ ದಶಕಗಳ ತಮ್ಮ ರಾಜಕೀಯ ಬದುಕಿನಲ್ಲಿ ಮಾಡಿ ತೋರಿಸಿದ್ದಾರೆ. ಇಂತಹ ವ್ಯಕ್ತಿಯ ಆದರ್ಶತನಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕೆಂದರು.
    ಹಿಂದುಳಿದ ವರ್ಗಗಳ ಸಮಾಜದ ಮುಖಂಡ ಟಿ. ವೆಂಕಟೇಶ್ ಮಾತನಾಡಿ, ದೇವರಾಜ ಅರಸು ಅವರು ಸ್ವಾತಂತ್ರ್ಯ ಪೂರ್ವದಲ್ಲಿ ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರು ಕೈಗೊಂಡ ಅಭಿವೃದ್ಧಿ ಕಾರ್ಯಗಳಿಂದ  ಪ್ರೇರಣೆಗೊಂಡು ಅವುಗಳನ್ನು ತಮ್ಮ ಅಧಿಕಾರದ ಅವಧಿಯಲ್ಲಿ ಅನುಷ್ಠಾನಗೊಳಿಸುವಲ್ಲಿ ಯಶಸ್ವಿಯಾದರು. ಆ ಮೂಲಕ ಎಲ್ಲಾ ವರ್ಗದ ಜನರ ಪ್ರೀತಿಗೆ ಪಾತ್ರರಾದರು ಎಂದರು.
    ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ಹಿಂದುಳಿದ ವರ್ಗಗಳ ಇಲಾಖಾಧಿಕಾರಿ ರಾಜೇಶ್ವರಿ, ಉಪ ತಹಸೀಲ್ದಾರ್ ಮಂಜಾನಾಯ್ಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  ಹಿಂದುಳಿದ ವರ್ಗಗಳ ಇಲಾಖೆಯ ರಮೇಶ್ ಸ್ವಾಗತಿಸಿದರು.


ಪ್ರಮುಖ ರಸ್ತೆಗಳಲ್ಲಿ ಬಿಡಾಡಿ ದನಗಳ ಹಾವಳಿ : ನಗರಸಭೆವತಿಯಿಂದ ಕಾರ್ಯಾಚರಣೆ

೯ ಬಿಡಾಡಿ ದನಗಳು ವಶಕ್ಕೆ ಪಡೆದು ಮಾಲೀಕರಿಗೆ ದಂಡ

ಬಿಡಾಡಿ ದನಗಳ ಹಾವಳಿ ಹೆಚ್ಚಾದ ಹಿನ್ನಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದ್ದು, ಈ ಹಿನ್ನಲೆಯಲ್ಲಿ ಶನಿವಾರ ನಗರಸಭೆ ವತಿಯಿಂದ ಕಾರ್ಯಾಚರಣೆ ನಡೆಸಿ ಬಿಡಾಡಿ ದನಗಳನ್ನು ವಶಕ್ಕೆ ಪಡೆಯಲಾಯಿತು.
    ಭದ್ರಾವತಿ, ಆ. ೨೦: ಬಿಡಾಡಿ ದನಗಳ ಹಾವಳಿ ಹೆಚ್ಚಾದ ಹಿನ್ನಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದ್ದು, ಈ ಹಿನ್ನಲೆಯಲ್ಲಿ ಶನಿವಾರ ನಗರಸಭೆ ವತಿಯಿಂದ ಕಾರ್ಯಾಚರಣೆ ನಡೆಸಿ ಬಿಡಾಡಿ ದನಗಳನ್ನು ವಶಕ್ಕೆ ಪಡೆಯಲಾಯಿತು.
    ರಸ್ತೆಗಳಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾದ ಹಿನ್ನಲೆಯಲ್ಲಿ ಪಾದಚಾರಿ ಹಾಗು ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ನಗರಸಭೆಗೆ ಸಾಕಷ್ಟು ದೂರುಗಳು ಸಲ್ಲಿಕೆಯಾಗಿವೆ. ಈ ನಡುವೆ ನಗರಸಭೆ ಆಡಳಿತ ಬಿಡಾಡಿ ದನಗಳನ್ನು ರಸ್ತೆಗೆ ಬಿಡದಂತೆ ಹಲವು ಬಾರಿ ಮಾಲೀಕರಿಗೆ ಸೂಚಿಸಿದೆ. ಆದರೂ ಸಹ ನಿರ್ಲಕ್ಷ್ಯತನವಹಿಸಿರುವ ಹಿನ್ನಲೆಯಲ್ಲಿ ಬಿ.ಎಚ್ ರಸ್ತೆ, ತಾಲೂಕು ಕಛೇರಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಕಾರ್ಯಾಚರಣೆ ನಡೆಸಿ ಸುಮಾರು ೯ ಬಿಡಾಡಿ ದನಗಳನ್ನು ವಶಕ್ಕೆ ಪಡೆದು ತರೀಕೆರೆ ರಸ್ತೆಯಲ್ಲಿರುವ ನಗರಸಭೆ ನೀರು ಸರಬರಾಜು ಕೇಂದ್ರದ ಆವರಣದಲ್ಲಿರಿಸಲಾಗಿತ್ತು. ಸಂಜೆ ವೇಳೆಗೆ ಸಂಬಂಧಪಟ್ಟ ಮಾಲೀಕರು ದಂಡ ಪಾವತಿಸಿ ಬಿಡಿಸಿಕೊಂಡು ಹೋಗಿದ್ದಾರೆ.
    ಪತ್ರಿಕೆಗೆ ಮಾಹಿತಿ ನೀಡಿದ ಪೌರಾಯುಕ್ತ ಮನುಕುಮಾರ್, ನಗರಸಭೆ ಸಿಬ್ಬಂದಿಗಳು ಬೆಳಿಗ್ಗೆಯಿಂದ ಕಾರ್ಯಾಚರಣೆ ನಡೆಸಿ ಬಿಡಾಡಿ ದನಗಳನ್ನು ವಶಕ್ಕೆ ಪಡೆದಿದ್ದಾರೆ. ಬಿಡಾಡಿ ದನಗಳ ಮಾಲೀಕರು ಎಚ್ಚೆತ್ತುಕೊಳ್ಳಬೇಕು. ಯಾವುದೇ ಕಾರಣಕ್ಕೂ ಬಿಡಾಡಿ ದನಗಳನ್ನು ರಸ್ತೆಗೆ ಬಿಡಬಾರದು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
    

    ಪೌರಾಯುಕ್ತ ಮನುಕುಮಾರ್ ಕಾರ್ಯಾಚರಣೆ ನೇತೃತ್ವ ವಹಿಸಿದ್ದರು. ಪರಿಸರ ಅಭಿಯಂತರ ಪ್ರಭಾಕರ್, ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್, ಕಿರಿಯ ಆರೋಗ್ಯ ನಿರೀಕ್ಷಕಿ ಶೃತಿ ಸೇರಿದಂತೆ ಇನ್ನಿತರ ಸಿಬ್ಬಂದಿಗಳು, ಪೌರಕಾರ್ಮಿಕರು ಪಾಲ್ಗೊಂಡಿದ್ದರು.