ಭದ್ರಾವತಿ, ಆ. ೨೪: ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿಯಾಗಿ ನಗರಸಭೆ ವಾರ್ಡ್ ನಂ.೩ರ ನಿವಾಸಿ ನಕುಲ್ ರೇವಣ್ಕರ್ ಅವರನ್ನು ನೇಮಕಗೊಳಿಸಲಾಗಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್ ಸೂಚನೆಯಂತೆ ನಕುಲ್ ಅವರನ್ನು ಕಾರ್ಯದರ್ಶಿಯಾಗಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಎಂ.ವಿ ಹರಿಕೃಷ್ಣ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ನಕುಲ್ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಯುವ ಮೋರ್ಚಾದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಇವನ್ನು ಪಕ್ಷದ ಸ್ಥಳೀಯ ಪ್ರಮುಖರು ಅಭಿನಂದಿಸಿದ್ದಾರೆ.
ಭದ್ರಾವತಿ, ಆ. ೨೪: ರಾಜಕೀಯಕ್ಕೆ ಬರಬೇಕೆಂಬ ಬಯಕೆ ಹೊಂದಿಲ್ಲ. ಆದರೂ ಸಹ ಅನಿವಾರ್ಯ ಕಾರಣಗಳಿಂದ ಪಕ್ಷ ಮುನ್ನಡೆಸಿಕೊಂಡು ಹೋಗುತ್ತಿದ್ದೇನೆ ಎಂದು ಮುಂಬರುವ ವಿಧಾನಸಭಾ ಚುನಾವಣೆಯ ಜೆಡಿಎಸ್ ಪಕ್ಷದ ನಿಯೋಜಿತ ಅಭ್ಯರ್ಥಿ ಶಾರದ ಎಂ.ಜೆ ಅಪ್ಪಾಜಿ ಹೇಳಿದರು.
ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎಂ.ಜೆ ಅಪ್ಪಾಜಿ ಅವರು ೩ ಬಾರಿ ಕ್ಷೇತ್ರದ ಶಾಸಕರಾದರೂ ಸಹ ನಾನು ಎಂದಿಗೂ ರಾಜಕೀಯಕ್ಕೆ ಬರಬೇಕೆಂದು ಬಯಸಲಿಲ್ಲ. ಅಲ್ಲದೆ ಅವರ ಅಧಿಕಾರವನ್ನು ನಾನಾಗಲಿ, ನನ್ನ ಮಕ್ಕಳಾಗಲಿ ಎಂದಿಗೂ ದುರ್ಬಳಕೆ ಮಾಡಿಕೊಂಡಿಲ್ಲ. ಅಪ್ಪಾಜಿ ನಿಧನದ ನಂತರ ಅವರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಪಕ್ಷ ಮುನ್ನಡೆಸಿಕೊಂಡು ಹೋಗುವಂತೆ ಮನವಿ ಮಾಡಿದ ಹಿನ್ನಲೆಯಲ್ಲಿ ರಾಜಕೀಯದಲ್ಲಿ ಮುಂದುವರೆದಿದ್ದೇನೆ. ಕ್ಷೇತ್ರದಲ್ಲಿ ಅಪ್ಪಾಜಿ ಅವರೊಂದಿಗೆ ಅವರ ರಾಜಕೀಯ ಏಳಿಗಾಗಿ ಶ್ರಮಿಸಿರುವ ಮುಖಂಡರ ಮಾರ್ಗದರ್ಶನದಲ್ಲಿ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯುತ್ತೇನೆ ಎಂದರು.
ಕ್ಷೇತ್ರದ ಹಾಲಿ ಶಾಸಕರು ಇತ್ತೀಚೆಗೆ ಕಾಮಗಾರಿಗಳ ಗುದ್ದಲಿ ಪೂಜೆ, ಉದ್ಘಾಟನೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಪಾಲ್ಗೊಳ್ಳುತ್ತಿಲ್ಲ. ಶಾಸಕರ ಬದಲಿಗೆ ಅವರ ಸಹೋದರರು, ಪುತ್ರರರು ಪಾಲ್ಗೊಳ್ಳುತ್ತಿದ್ದಾರೆ. ಶಾಸಕರ ಬದಲಾಗಿ ಪಾಲ್ಗೊಳ್ಳುವ ನೈತಿಕತೆ ಅವರಿಗಿಲ್ಲ. ಅದರಲ್ಲೂ ಜೆಡಿಎಸ್ ಪಕ್ಷದ ನಗರಸಭಾ ಸದಸ್ಯರ ವಾರ್ಡ್ಗಳ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದು ಎಷ್ಟು ಸರಿ ?
- ಶಾರದ ಎಂ.ಜೆ ಅಪ್ಪಾಜಿ.
ಹಲವಾರು ವರ್ಷಗಳಿಂದ ಪಕ್ಷದಲ್ಲಿ ಪದಾಧಿಕಾರಿಗಳ ನೇಮಕ ನಡೆದಿರಲಿಲ್ಲ. ಇದೀಗ ವರಿಷ್ಠರ ಆದೇಶದ ಮೇರೆಗೆ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಲಾಗಿದೆ. ಪಕ್ಷವನ್ನು ಮುನ್ನಡೆಸುವ ಜೊತೆಗೆ ಕ್ಷೇತ್ರದ ನಾಗರೀಕರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುತ್ತೇನೆ. ಮುಂದಿನ ದಿನಗಳಲ್ಲಿ ಅಪ್ಪಾಜಿಯವರು ಬಿಟ್ಟು ಹೋಗಿರುವ ಕೆಲಸಗಳನ್ನು ಪೂರ್ಣಗೊಳಿಸುವ ಬಯಕೆ ಹೊಂದಿದ್ದೇನೆ. ಮತದಾರರು ನನನ್ನು ಬೆಂಬಲಿಸುವ ವಿಶ್ವಾಸವಿದೆ ಎಂದರು.
ಭದ್ರಾವತಿ, ಆ. ೨೪: ಮಾಜಿ ಶಾಸಕ ಎಂ.ಜೆ ಅಪ್ಪಾಜಿ ೨ನೇ ವರ್ಷದ ಪುಣ್ಯಸ್ಮರಣೆ ಸೆ.೫ರಂದು ತಾಲೂಕಿನ ಗೋಣಿಬೀಡು ಗ್ರಾಮದಲ್ಲಿರುವ ಅವರ ಶಕ್ತಿಧಾಮದಲ್ಲಿ ನಡೆಯಲಿದೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಶಾರದ ಎಂ.ಜೆ ಅಪ್ಪಾಜಿ ತಿಳಿಸಿದರು.
ಭದ್ರಾವತಿ, ಆ. ೨೪: ಮಾಜಿ ಶಾಸಕ ಎಂ.ಜೆ ಅಪ್ಪಾಜಿ ೨ನೇ ವರ್ಷದ ಪುಣ್ಯಸ್ಮರಣೆ ಸೆ.೫ರಂದು ತಾಲೂಕಿನ ಗೋಣಿಬೀಡು ಗ್ರಾಮದಲ್ಲಿರುವ ಅವರ ಶಕ್ತಿಧಾಮದಲ್ಲಿ ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಈ ಕುರಿತು ಮಾಹಿತಿ ನೀಡಿದ ಶಾರದ ಎಂ.ಜೆ ಅಪ್ಪಾಜಿ, ಸೆ.೨ರಂದು ಎಂ.ಜೆ ಅಪ್ಪಾಜಿ ಅವರು ನಿಧನ ಹೊಂದಿ ೨ ವರ್ಷ ಕಳೆಯಲಿದೆ. ಆದರೆ ಅಂದು ಪುಣ್ಯಸ್ಮರಣೆ ನಡೆಸದೆ ಸೆ.೫ರಂದು ಪುಣ್ಯಸ್ಮರಣೆ, ಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಣೆ ಹಾಗು ಜೆಡಿಎಸ್ ಪಕ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಗಳು ನಡೆಯಲಿವೆ. ಎಲ್ಲರಿಗೂ ಅನುಕೂಲವಾಗುವ ಉದ್ದೇಶದಿಂದ ಕಾರ್ಯಕ್ರಮಗಳನ್ನು ಒಟ್ಟಿಗೆ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಬೇರೆ ಯಾವುದೇ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದರು.
ಸೆ.೫ರಂದು ಬೆಳಿಗ್ಗೆ ೯ ಗಂಟೆಗೆ ಗೋಣಿಬೀಡಿನ ಅವರ ಶಕ್ತಿಧಾಮದಲ್ಲಿ ಪುಣ್ಯಸ್ಮರಣೆ ನಡೆಯಲಿದೆ. ನಂತರ ೧೧ ಗಂಟೆಯಿಂದ ಬಾಗಿನ ಸಮರ್ಪಣೆ ಹಾಗು ೧೨ ಗಂಟೆಗೆ ಜೆಡಿಎಸ್ ಪಕ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಲಿದೆ. ಅಪ್ಪಾಜಿ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು, ಹಿತೈಷಿಗಳು, ಕ್ಷೇತ್ರದ ಸಮಸ್ತ ನಾಗರೀಕರು ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದರು.
ಅಪ್ಪಾಜಿ ಒಡನಾಡಿಗಳಾದ ನಗರಸಭೆ ಮಾಜಿ ಸದಸ್ಯ ಕರಿಯಪ್ಪ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ ಮತ್ತು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜೆ.ಪಿ ಯೋಗೇಶ್ ಅವರು ಅಪ್ಪಾಜಿ ಅವರೊಂದಿಗಿನ ನೆನೆಪುಗಳನ್ನು ಸ್ಮರಿಸಿಕೊಳ್ಳುವ ಮೂಲಕ ೨ ವರ್ಷ ಪುಣ್ಯಸ್ಮರಣೆ, ಬಾಗಿನ ಸಮರ್ಪಣೆ ಹಾಗು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಜೆಡಿಎಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ಮಧುಕುಮಾರ್, ಅಲ್ಪಸಂಖ್ಯಾತರ ನಗರ ಘಟಕದ ಅಧ್ಯಕ್ಷ ಮುತುರ್ಜಾಖಾನ್, ನಗರಸಭೆ ಮಾಜಿ ಅಧ್ಯಕ್ಷೆ ವಿಶಾಲಾಕ್ಷಿ, ಡಿ.ಟಿ ಶ್ರೀಧರ್ ಸೇರಿದಂತೆ ಜೆಡಿಎಸ್ ಪಕ್ಷದ ನಗರಸಭೆ ಸದಸ್ಯರು, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರಿಗೆ ಭದ್ರಾವತಿ ನಗರಸಭೆ ಅಧ್ಯಕ್ಷೆ ಗೀತಾ ಕೆ.ಜಿ ರಾಜ್ಕುಮಾರ್ ರಾಜೀನಾಮೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ಕುಮಾರ್ ಮತ್ತು ಕೆ.ಜಿ ರಾಜ್ಕುಮಾರ್ ಉಪಸ್ಥಿತರಿದ್ದರು.
ಭದ್ರಾವತಿ, ಆ. ೨೩: ನಗರಸಭೆ ಅಧ್ಯಕ್ಷೆ ಗೀತಾ ಕೆ.ಜಿ ರಾಜ್ಕುಮಾರ್ ಅವರು ಒಡಂಬಡಿಕೆಯಂತೆ ೧೦ ತಿಂಗಳ ಅಧಿಕಾರ ಪೂರೈಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಂದಿನ ೧೦ ತಿಂಗಳ ಅವಧಿಗೆ ಅಧ್ಯಕ್ಷ ಸ್ಥಾನಕ್ಕಾಗಿ ೩ ಮಂದಿ ನಡುವೆ ಪೈಪೋಟಿ ಎದುರಾಗಿದೆ.
ನಗರಸಭೆ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಮೊದಲ ಹಂತದ ೩೦ ತಿಂಗಳ ಮೀಸಲಾತಿಯನ್ವಯ ತಲಾ ೧೦ ತಿಂಗಳ ಆಡಳಿತ ಹಂಚಿಕೆ ಮಾಡಿಕೊಂಡಿದ್ದು, ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮೀಸಲಾತಿ ಹೊಂದಿದೆ. ಈಗಾಗಲೇ ೧೦ ತಿಂಗಳ ಅವಧಿಯನ್ನು ಗೀತಾ ಕೆ.ಜಿ ರಾಜ್ಕುಮಾರ್ ಪೂರೈಸಿದ್ದಾರೆ. ೨೦ ತಿಂಗಳು ಬಾಕಿ ಉಳಿದಿದ್ದು, ೨ನೇ ೧೦ ತಿಂಗಳ ಅವಧಿಗೆ ೩ ಮಂದಿ ನಡುವೆ ಪೈಪೋಟಿ ಎದುರಾಗಿದೆ.
ವಾರ್ಡ್ ನಂ.೧೩ರ ಸದಸ್ಯೆ ಅನುಸುಧಾ ಮೋಹನ್, ವಾರ್ಡ್ ನಂ.೩೪ರ ಲತಾ ಚಂದ್ರಶೇಖರ್ ಮತ್ತು ವಾರ್ಡ್ ನಂ.೩೫ರ ಶೃತಿ ವಸಂತ್ ನಡುವೆ ತೀವ್ರ ಪೈಪೋಟಿ ಎದುರಾಗಿದ್ದು, ಈ ಮೂವರ ಇಬ್ಬರು ಒಕ್ಕಲಿಗ ಸಮುದಾಯಕ್ಕೆ ಸೇರಿದ್ದು, ಒಬ್ಬರು ಗೌಂಡರ್ ಸಮುದಾಯಕ್ಕೆ ಸೇರಿದ್ದಾರೆ. ಶಾಸಕ ಬಿ.ಕೆ ಸಂಗಮೇಶ್ವರ್ ಕೈಗೊಳ್ಳುವ ನಿರ್ಧಾರ ಅಂತಿಮವಾಗಿದ್ದು, ಯಾರು ಅಧ್ಯಕ್ಷಗಿರಿ ಯಾರಿಗೆ ಎಂಬುದನ್ನು ಕಾದು ನೋಡಬೇಕಾಗಿದೆ.
ಭದ್ರಾವತಿ, ಆ. ೨೩ : ತಾಲೂಕಿನ ಸುಲ್ತಾನಮಟ್ಟಿ ಗ್ರಾಮದ ನಿವಾಸಿ, ಯುವ ಮುಖಂಡ ಗೋಕುಲಕೃಷ್ಣನ್ ಅವರನ್ನು ಬಿಜೆಪಿ ಪಕ್ಷದ ಜಿಲ್ಲಾ ಯುವಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಮುಂದುವರೆಸಲಾಗಿದೆ.
ಪಕ್ಷದ ಜಿಲ್ಲಾಧ್ಯಕ್ಷ ಡಿ.ಟಿ ಮೇಘರಾಜ್ ಅವರ ಸೂಚನೆ ಮೇರೆಗೆ ಗೋಕುಲಕೃಷ್ಣನ್ ಅವರನ್ನು ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಮುಂದುವರೆಯಲು ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಎಂ.ಬಿ ಹರಿಕೃಷ್ಣ ಆದೇಶಿಸಿದ್ದಾರೆ.
ಗೋಕುಲಕೃಷ್ಣನ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದು, ಹಂತ ಹಂತವಾಗಿ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಇವರನ್ನು ಪಕ್ಷದ ತಾಲೂಕು ಪ್ರಮುಖರು ಅಭಿನಂದಿಸಿದ್ದಾರೆ.
ಭದ್ರಾವತಿ, ಆ. ೨೩: ಜಾತ್ಯತೀತ ಜನತಾದಳ ವಿಧಾನಸಭಾ ಕ್ಷೇತ್ರದ ನೂತನ ಪದಾಧಿಕಾರಿಗಳನ್ನು ಪಕ್ಷದ ವರಿಷ್ಠರ ಆದೇಶದ ಮೇರೆಗೆ ಪಕ್ಷದ ಮುಖಂಡರಾದ ಶಾರದ ಎಂ.ಜೆ ಅಪ್ಪಾಜಿ ನೇಮಕಗೊಳಿಸಿ ಪಟ್ಟಿ ಬಿಡುಗಡೆಗೊಳಿಸಿದ್ದಾರೆ.
ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಮಧುಕುಮಾರ್, ತಾಲೂಕು ನಗರ ಘಟಕದ ಅಧ್ಯಕ್ಷರಾಗಿ ಆರ್. ಕರುಣಾಮೂರ್ತಿ, ಗ್ರಾಮಂತರ ಘಟಕದ ಅಧ್ಯಕ್ಷರಾಗಿ ಕೆ. ಧರ್ಮಕುಮಾರ, ನಗರ ಘಟಕದ ಮಹಿಳಾ ಅಧ್ಯಕ್ಷರಾಗಿ ವಿಶಾಲಾಕ್ಷಿ, ಗ್ರಾಮಾಂತರ ಘಟಕದ ಅಧ್ಯಕ್ಷರಾಗಿ ಪಾರ್ವತಿಬಾಯಿ, ಅಲ್ಪ ಸಂಖ್ಯಾಂತರ ನಗರ ಘಟಕದ ಅಧ್ಯಕ್ಷರಾಗಿ ಮುತುರ್ಜಾಖಾನ್, ತಾಲೂಕು ಯುವ ಘಟಕದ ಅಧ್ಯಕ್ಷರಾಗಿ ಎಂ.ಎ ಅಜಿತ್, ನಗರ ಘಟಕದ ಕಾರ್ಯಾಧ್ಯಕ್ಷರಾಗಿ ಬಿ.ಸಿ ಉಮೇಶ್, ಪರಿಶಿಷ್ಟ ಜಾತಿ ನಗರ ಘಟಕದ ಅಧ್ಯಕ್ಷರಾಗಿ ಮೈಲಾರಪ್ಪ, ಪರಿಶಿಷ್ಟ ಜಾತಿ ಗ್ರಾಮಾಂತರ ಘಟಕದ ಅಧ್ಯಕ್ಷರಾಗಿ ಶ್ರೀಧರನಾಯ್ಕ, ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗು ವಕ್ತಾರರಾಗಿ ಎಂ. ರಾಜು ಮತ್ತು ನಗರ ಘಟಕದ ಮಹಿಳಾ ಕಾರ್ಯದರ್ಶಿಯಾಗಿ ಭಾಗ್ಯಮ್ಮ ಅವರನ್ನು ನೇಮಕಗೊಳಿಸಿ ಪಕ್ಷದ ತತ್ವ ಸಿದ್ದಾಂತಗಳಿಗೆ ಅನುಗುಣವಾಗಿ ಜವಾಬ್ದಾರಿ ನಿರ್ವಹಿಸುವಂತೆ ಶಾರದ ಎಂ.ಜೆ ಅಪ್ಪಾಜಿ ಸೂಚಿಸಿದ್ದಾರೆ.
ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹೊಸಮನೆ ನೃಪತುಂಗ ಬಡಾವಣೆಯಲ್ಲಿರುವ ಶ್ರೀ ಜ್ಞಾನೇಶ್ವರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಅನುದಾನ ಮತ್ತು ಅನುದಾನರಹಿತ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟಕ್ಕೆ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಚಾಲನೆ ನೀಡಿ ಮಾತನಾಡಿದರು.
ಭದ್ರಾವತಿ, ಆ. ೨೩ : ವಿದ್ಯಾರ್ಥಿಗಳಿಗೆ ಕ್ರೀಡೆ ಜೊತೆಗೆ ಅವರಲ್ಲಿನ ಕೌಶಲ್ಯಗಳನ್ನು ಗುರುತಿಸಿ ಮುಂದಿನ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಿಸಬೇಕೆಂದು ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಹೇಳಿದರು.
ಅವರು ಮಂಗಳವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹೊಸಮನೆ ನೃಪತುಂಗ ಬಡಾವಣೆಯಲ್ಲಿರುವ ಶ್ರೀ ಜ್ಞಾನೇಶ್ವರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಅನುದಾನ ಮತ್ತು ಅನುದಾನರಹಿತ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆ ಸಹ ಮುಖ್ಯವಾಗಿದೆ. ಎಲ್ಲರೂ ಇಂದು ತಮ್ಮ ಮಕ್ಕಳು ಉನ್ನತ ಶಿಕ್ಷಣ ಪಡೆದು ವೈದ್ಯರು, ಇಂಜಿನಿಯರ್ಗಳಾಗಬೇಕೆಂದು ಬಯಸುತ್ತಾರೆ. ಆದರೆ ಮಕ್ಕಳಲ್ಲಿರುವ ಕೌಶಲ್ಯಗಳನ್ನು ಗುರುತಿಸುವ ಕೆಲಸ ಯಾರು ಸಹ ಮಾಡುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಶಿಕ್ಷಕರು ಮತ್ತು ಪೋಷಕರು ಮಕ್ಕಳ ಕೌಶಲ್ಯಗಳನ್ನು ಗುರುತಿಸಿ ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಿಸಿದಾಗ ಅವರು ಬೇರೆ ಬೇರೆ ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಸಲಹೆ ವ್ಯಕ್ತಪಡಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ನಗರಸಭಾ ಸದಸ್ಯೆ ಮಂಜುಳಾ ಸುಬ್ಬಣ್ಣ, ಶಿಕ್ಷಣ ಸಂಯೋಜಕ ರವಿಕುಮಾರ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಜಿ. ಪ್ರಭು, ಸಿ. ಚನ್ನಪ್ಪ, ಶಿವಲಿಂಗೇಗೌಡ, ಶ್ರೀ ಜ್ಞಾನೇಶ್ವರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಆಡಳಿತ ಮಂಡಳಿ ನಿರ್ದೇಶಕ ಕೇಶವ, ದೈಹಿಕ ಶಿಕ್ಷಕಿ, ಸಮಾಜ ಸೇವಕಿ ಅನಿತಾ ಮೇರಿ, ಕನಕ ವಿದ್ಯಾಸಂಸ್ಥೆ ಪ್ರಾಂಶುಪಾಲ ಸಿ.ಡಿ ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಶ್ರೀ ಜ್ಞಾನೇಶ್ವರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷ ವಿಜಯ್ ಅಧ್ಯಕ್ಷತೆ ವಹಿಸಿದ್ದರು. ಕ್ರೀಡಾಕೂಟದಲ್ಲಿ ಸೆಂಟ್ ಮೇರಿಸ್, ವಿಜಯ, ಎಸ್ಎವಿ (ಕಾರೇಹಳ್ಳಿ), ನವಚೇತನ, ಅಕ್ಕಮಹಾದೇವಿ, ಜೆಎನ್ಇಎಸ್, ಸೆಂಟ್ ಡೊಮಿನಿಕ್, ಜ್ಞಾನದೀಪಿಕ, ಸ್ವಾಮಿ ವಿವೇಕಾನಂದ, ವಿಶ್ವ ಬಂಧು, ರಾಘವೇಂದ್ರ ಮತ್ತು ವಿಶ್ವೇಶ್ವರಾಯ ಸೇರಿದಂತೆ ಒಟ್ಟು ೧೨ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಚರಣ್ಸಿಂಗ್, ಶಿವರಾಜ್, ಲೋಕೇಶ್, ರವಿ, ರಂಗನಾಥ ಸೇರಿದಂತೆ ವಿವಿಧ ಶಾಲೆಗಳ ದೈಹಿಕ ಶಿಕ್ಷಕರುಗಳು, ಸಿಆರ್ಪಿಗಳು ಪಾಲ್ಗೊಂಡಿದ್ದರು.