Thursday, August 25, 2022

ವಿನಯ್ ಗುರೂಜಿ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

ಭದ್ರಾವತಿ ತಾಲೂಕಿನ ಗೋಣಿಬೀಡು ಮಲ್ಲಿಗೇನಹಳ್ಳಿ ಶ್ರೀ ನವನಾಗ ಬ್ರಹ್ಮ ದತ್ತ ಕ್ಷೇತ್ರ ಸೇವಾ ಟ್ರಸ್ಟ್ ವತಿಯಿಂದ ಚಿಕ್ಕಮಗಳೂರು ಗೌರಿಗದ್ದೆ ಆಶ್ರಮದ ಶ್ರೀ ಅವದೂತ ವಿನಯ್ ಗುರೂಜಿ ರವರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಹಾಗೂ ಮಲ್ಲಿಗೇನಹಳ್ಳಿ ಅಂಗನವಾಡಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ನಡೆಯಿತು.
    ಭದ್ರಾವತಿ, ಆ. ೨೫ : ತಾಲೂಕಿನ ಗೋಣಿಬೀಡು ಮಲ್ಲಿಗೇನಹಳ್ಳಿ ಶ್ರೀ ನವನಾಗ ಬ್ರಹ್ಮ ದತ್ತ ಕ್ಷೇತ್ರ ಸೇವಾ ಟ್ರಸ್ಟ್ ವತಿಯಿಂದ ಚಿಕ್ಕಮಗಳೂರು ಗೌರಿಗದ್ದೆ ಆಶ್ರಮದ ಶ್ರೀ ಅವದೂತ ವಿನಯ್ ಗುರೂಜಿ ರವರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಹಾಗೂ ಮಲ್ಲಿಗೇನಹಳ್ಳಿ ಅಂಗನವಾಡಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ನಡೆಯಿತು.
    ಕಾರ್ಯಕ್ರಮಕ್ಕೆ ನಗರಸಭೆ ಮಾಜಿ ಸದಸ್ಯ ಎಂ.ಎ ಅಜಿತ್ ಚಾಲನೆ ನೀಡಿದರು. ಶ್ರೀ ನವನಾಗ ಬ್ರಹ್ಮ ದತ್ತ ಕ್ಷೇತ್ರ ಸೇವಾ ಟ್ರಸ್ಟ್ ವತಿಯಿಂದ ಮಲ್ಲಿಗೇನಹಳ್ಳಿ ಗೋಣಿಬೀಡು ಕ್ಷೇತ್ರದ ಆವರಣದಲ್ಲಿ ಪುಣ್ಯಕೋಟಿ ಎಂಬ ಗೋಶಾಲೆ ಆರಂಭಿಸುವ ಕುರಿತು ಮಾಹಿತಿ ನೀಡಲಾಯಿತು.
    ವಿನಯ್ ಗುರೂಜಿ ಭಕ್ತ ವೃಂದದವರು ಹಾಗು ಗ್ರಾಮಸ್ಥರು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡಿದ್ದರು.

ಶಾಮಿಯಾನ ಮಾಲೀಕರ ಸಂಘದ ಅಧ್ಯಕ್ಷರಾಗಿ ೨ನೇ ಬಾರಿಗೆ ಸಂತೋಷ್ ಅವಿರೋಧ ಆಯ್ಕೆ


ಭದ್ರಾವತಿ ತಾಲೂಕು ಶಾಮಿಯಾನ ಮಾಲೀಕರ ಸಂಘದ ಅಧ್ಯಕ್ಷರಾಗಿ ಆನೇಕೊಪ್ಪ ಎಂಪಿಎಂ ಬಡಾವಣೆಯ ಸಂತೋಷ್ ಶಾಮಿಯಾನ ಮಾಲೀಕ ಹಾಗು ಬಿಜೆಪಿ ಪಕ್ಷದ ಯುವ ಮುಖಂಡ ಸಂತೋಷ್ ೨ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
    ಭದ್ರಾವತಿ, ಆ. ೨೫:  ತಾಲೂಕು ಶಾಮಿಯಾನ ಮಾಲೀಕರ ಸಂಘದ ಅಧ್ಯಕ್ಷರಾಗಿ ಆನೇಕೊಪ್ಪ ಎಂಪಿಎಂ ಬಡಾವಣೆಯ ಸಂತೋಷ್ ಶಾಮಿಯಾನ ಮಾಲೀಕ ಹಾಗು ಬಿಜೆಪಿ ಪಕ್ಷದ ಯುವ ಮುಖಂಡ ಸಂತೋಷ್ ೨ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
    ಸಂತೋಷ್ ಸಂಘದ ಅಧ್ಯಕ್ಷರಾಗಿ ಮೊದಲ ಅವಧಿಯಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ್ದು, ಈ ಹಿನ್ನಲೆಯಲ್ಲಿ ೨ನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂತೋಷ್ ವಿವಿಧ ಸಂಘ-ಸಂಸ್ಥೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಹಲವಾರು ಸಮಾಜಮುಖಿ ಸೇವಾಕಾರ್ಯಗಳನ್ನು ಕೈಗೊಂಡಿದ್ದಾರೆ.
    ಉಳಿದಂತೆ ಸಂಘದ ಉಪಾಧ್ಯಕ್ಷರಾಗಿ ಎಸ್‌ವಿಎಸ್ ಶಾಮಿಯಾನದ ಸುರೇಶ್, ಪ್ರಧಾನ ಕಾರ್ಯದರ್ಶಿಯಾಗಿ ಸನ್ನಿ ಡಿಸೋಜ, ಸಹಕಾರ್ಯದರ್ಶಿಯಾಗಿ ಹೆಬ್ಬಂಡಿ ರಸ್ತೆಯಲ್ಲಿರುವ ಶ್ರೀ ಮಲ್ಲಿಕಾರ್ಜುನ ಶಾಮಿಯಾನದ ರವಿ, ಖಜಾಂಚಿಯಾಗಿ ಹಳೇನಗರದ ವಿನಾಯಕ ಸೌಂಡ್ಸ್‌ನ ಶಾಮಣ್ಣ ಹಾಗು ಗೌರವಾಧ್ಯಕ್ಷರಾಗಿ ನೂರ್ ಶಾಮಿಯಾನದ ಅಸ್ಲಾಂ ಮತ್ತು ನಿರ್ದೇಶಕರಾಗಿ ಕೂಡ್ಲಿಗೆರೆ ಸಾಜನ್ ಶಾಮಿಯಾನದ ಅಕ್ಬರ್ ಸಾಬ್, ಚಂದ್ರಾಲಯದ ರಮೇಶ್(ಸುರಗಿತೋಪು), ಬೀರೇಶ್ವರ ಶಾಮಿಯಾನದ ಸಂಜು, ಪಾರ್ವತಿ ಶಾಮಿಯಾನದ ಮಹದೇವ, ಬಿಆರ್‌ಪಿ ಶಾಮಿಯಾನದ ಯಲ್ಲಪ್ಪ, ಬಾರಂದೂರು ಬಿಎಂಕೆ ಶಾಮಿಯಾನದ ಕುಮಾರ್, ಜೆಎಂಜೆ ಶಾಮಿಯಾನದ ಬ್ಯಾಪ್ಟಿಸ್ಟ್, ಲೈಟಿಂಗ್ಸ್ ರಮೇಶ್(ಸೀಗೆಬಾಗಿ) ಮತ್ತು  ಉಜ್ಜನಿಪುರ ವೆಂಕಟೇಶ್ವರ ಸೌಂಡ್ಸ್‌ನ ಶ್ರೀನಿವಾಸ್ ಸೇರಿದಂತೆ ಒಟ್ಟು ೧೨ ಜನ  ಆಯ್ಕೆಯಾಗಿದ್ದಾರೆ.

ದೇವಸ್ಥಾನದ ನೂತನ ಮಳಿಗೆಗಳ ಉದ್ಘಾಟನೆ : ಸನ್ಮಾನ

ಭದ್ರಾವತಿ ನಗರಸಭೆ ವಾರ್ಡ್ ನಂ.೨೦ರ ವ್ಯಾಪ್ತಿಯ ಸುರುಗಿತೋಪಿನ ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ದೇವಸ್ಥಾನದ ಮಳಿಗೆಗಳ ಉದ್ಘಾಟನೆ ಸಂದರ್ಭದಲ್ಲಿ ಮಳಿಗೆಗಳ ನಿರ್ಮಾಣಕ್ಕೆ ಶ್ರಮಿಸಿದ ಪ್ರಮುಖರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಆ. ೨೫: ನಗರಸಭೆ ವಾರ್ಡ್ ನಂ.೨೦ರ ವ್ಯಾಪ್ತಿಯ ಸುರುಗಿತೋಪಿನ ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ದೇವಸ್ಥಾನದ ಮಳಿಗೆಗಳನ್ನು ಉದ್ಘಾಟಿಸಲಾಯಿತು.
    ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ಅಸ್ತಿತ್ವಕ್ಕೆ ಬಂದ ನಂತರ ಹಲವಾರು ಅಭಿವೃದ್ಧಿ ಕಾರ್ಯಗಳು ಹಂತ ಹಂತವಾಗಿ ನಡೆಯುತ್ತಿವೆ. ಇದೀಗ ನೂತನವಾಗಿ ನಿರ್ಮಿಸಲಾಗಿರುವ ಮಳಿಗೆಗಳ ಉದ್ಘಾಟನೆ ನೆರವೇರಿಸಲಾಯಿತು. ದೇವಸ್ಥಾನದ ಅರ್ಚಕ ಮುರಳಿಧರ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಮಳಿಗೆಗಳ ನಿರ್ಮಾಣಕ್ಕೆ ಶ್ರಮಿಸಿದ ಪ್ರಮುಖರನ್ನು ಸನ್ಮಾನಿಸಿ ಗೌರವಿಸಲಾಯಿತು.
    ನಗರಸಭೆ ಸದಸ್ಯೆ ಜಯಶೀಲ, ಟ್ರಸ್ಟ್ ಗೌರವಾಧ್ಯಕ್ಷ ರಾಮಕೃಷ್ಣ, ಅಧ್ಯಕ್ಷ ಶಿವರಾಜ್, ಉಪಾಧ್ಯಕ್ಷ ಉಮೇಶ್, ಕಾರ್ಯದರ್ಶಿ ಪರಮೇಶ್ ಮತ್ತು ಖಜಾಂಚಿ ರವಿ, ಮುಖಂಡ ಕ್ಲಬ್ ಸುರೇಶ್ ಸೇರಿದಂತೆ ಸ್ಥಳೀಯ ಪ್ರಮುಖರು, ಭಕ್ತರು ಪಾಲ್ಗೊಂಡಿದ್ದರು.  

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಸಾಧನೆ : ತಾಲೂಕು ಮಟ್ಟಕ್ಕೆ ಆಯ್ಕೆ

ಭದ್ರಾವತಿ ತಾಲೂಕಿನ ಹೊಸ ಸಿದ್ದಾಪುರ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜಯಶ್ರೀ ವೃತ್ತದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ನಗರದ ಬಿ.ಎಚ್ ರಸ್ತೆ ಹಾಲಪ್ಪ ವೃತ್ತದ ಸಮೀಪದಲ್ಲಿರುವ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಪ್ರಶಸ್ತಿ ಪತ್ರ ಮತ್ತು ಬಹುಮಾನವನ್ನು ನಗರಸಭಾ ಸದಸ್ಯೆ ನಾಗರತ್ನ ವಿತರಿಸಿದರು.
    ಭದ್ರಾವತಿ, ಆ. ೨೫ : ತಾಲೂಕಿನ ಹೊಸ ಸಿದ್ದಾಪುರ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜಯಶ್ರೀ ವೃತ್ತದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ನಗರದ ಬಿ.ಎಚ್ ರಸ್ತೆ ಹಾಲಪ್ಪ ವೃತ್ತದ ಸಮೀಪದಲ್ಲಿರುವ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
      ವಿದ್ಯಾರ್ಥಿಗಳಾದ ಆರ್.ಎಸ್ ಯಶವಂತ್ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಆರ್. ಸುಶ್ಮಿತಾ ನೀತಿ ಕಥೆಯಲ್ಲಿ ಪ್ರಥಮ, ಖುಷಿ ಅಭಿನಯ ಗೀತೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪತ್ರ ಮತ್ತು ಬಹುಮಾನವನ್ನು ನಗರಸಭಾ ಸದಸ್ಯೆ ನಾಗರತ್ನ ವಿತರಿಸಿದರು.
    ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯ ಶಿಕ್ಷಕ ಶಿವರುದ್ರಯ್ಯ,  ಸಹ ಶಿಕ್ಷರುಗಳಾದ ವೈ.ಕೆ ಲಕ್ಷ್ಮಣ್, ಶಿವಕುಮಾರ್, ಕಲ್ಪನಾ, ಸುಧಾ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು ಅಭಿನಂದಿಸಿದ್ದಾರೆ.
--

ವಿಕಲಚೇತನ ಮಕ್ಕಳ ನ್ಯೂನ್ಯತೆಗಳು ಅವರ ಬೆಳವಣಿಗೆಗೆ ಮಾರಕವಾಗಬಾರದು : ಡಾ. ಧನಂಜಯ ಸರ್ಜಿ

ಭದ್ರಾವತಿ ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಶ್ರೀ ಸತ್ಯಸಾಯಿ ಮಂದಿರದಲ್ಲಿ ಶಿಕ್ಷಣಾಧಿಕಾರಿಗಳು ಹಾಗು ಪದವಿನಿಮಿತ್ತ ಬ್ಲಾಕ್ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶೇಷ ಚೇತನ ಮಕ್ಕಳ ನ್ಯೂನ್ಯತೆಗಳ ಬಗ್ಗೆ ತಾಲೂಕಿನ ಗೃಹಾಧಾರಿತ ಮಕ್ಕಳ ಪೋಷಕರಿಗೆ ಒಂದು ದಿನದ ಕಾರ್ಯಾಗಾರದಲ್ಲಿ ಶಿವಮೊಗ್ಗ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವ್ಯದ್ಯ ಡಾ. ಧನಂಜಯ ಸರ್ಜಿ ಅವರನ್ನು ಸನ್ಮಾನಿಸಲಾಯಿತು.
    ಭದ್ರಾವತಿ, ಆ. ೨೫ : ವಿಕಲಚೇತನ ಮಕ್ಕಳ ನ್ಯೂನ್ಯತೆಗಳು ಅವರ ಬೆಳವಣಿಗೆಗೆ ಮಾರಕವಾಗಬಾರದು. ಈ ನಿಟ್ಟಿನಲ್ಲಿ ಪೋಷಕರು ಹೆಚ್ಚಿನ ಜಾಗ್ರತೆವಹಿಸಬೇಕೆಂದು ಶಿವಮೊಗ್ಗ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವ್ಯದ್ಯ ಡಾ. ಧನಂಜಯ ಸರ್ಜಿ ಹೇಳಿದರು.
    ಅವರು ಗುರುವಾರ ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಶ್ರೀ ಸತ್ಯಸಾಯಿ ಮಂದಿರದಲ್ಲಿ ಶಿಕ್ಷಣಾಧಿಕಾರಿಗಳು ಹಾಗು ಪದವಿನಿಮಿತ್ತ ಬ್ಲಾಕ್ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶೇಷ ಚೇತನ ಮಕ್ಕಳ ನ್ಯೂನ್ಯತೆಗಳ ಬಗ್ಗೆ ತಾಲೂಕಿನ ಗೃಹಾಧಾರಿತ ಮಕ್ಕಳ ಪೋಷಕರಿಗೆ ಒಂದು ದಿನದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದರು.
    ವಿಕಲಚೇತನ ಮಕ್ಕಳ ಪೋಷಣೆಯಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ. ಯಾವುದೇ ಕಾರಣಕ್ಕೂ ಇಂತಹ ಮಕ್ಕಳನ್ನು ನಿರ್ಲಕ್ಷ್ಯತನದಿಂದ ಕಾಣಬಾರದು.   ಆತ್ಮಸ್ಥೈರ್ಯ ಹೆಚ್ಚಿಸುವ ಜೊತೆಗೆ ಅವರ ಆರೋಗ್ಯ ಮತ್ತು ಸ್ವಚ್ಛತೆಗೆ ಹೆಚ್ಚಿನ ಗಮನ ಹರಿಸಬೇಕು. ಇಂತಹ ಮಕ್ಕಳಿಗೆ ಪೋಷಕರೇ ಶಿಕ್ಷಕರು, ವೈದ್ಯರು ಎಲ್ಲವೂ ಆಗಿರುತ್ತಾರೆ ಎಂಬುದನ್ನು ಅರಿತುಕೊಳ್ಳಬೇಕೆಂದು ಸಲಹೆ ನೀಡಿದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿಯ ಡಿವೈಪಿಸಿಗಳಾದ ಉಮಾಮಹೇಶ್, ಗಣಪತಿ, ಡಿಯಟ್ ಹಿರಿಯ ಉಪನ್ಯಾಸಕಿಯರಾದ ಫಾತೀಮಾ, ರೇಣುಕಾ, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಪ್ರಭಾಕರ ಬೀರಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಧರಗೌಡ, ತಾಲೂಕು ಅಧ್ಯಕ್ಷ ಪೃಥ್ವಿರಾಜ್, ಪ್ರಧಾನ ಕಾರ್ಯದರ್ಶಿ ಎಸ್.ಕೆ ಮೋಹನ್, ವೈದ್ಯಾಧಿಕಾರಿ ದತ್ತಾತ್ರೇಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ತೀರ್ಥಹಳ್ಳಿ ಸೊಪ್ಪುಗುಡ್ಡೆ ಶಿಕ್ಷಕ ಕುಮಾರ್ ಗೃಹಾಧಾರಿತ ಮಕ್ಕಳಿಗೆ ಫಿಜಿಯೋಥೆರಫಿ ಮಾಡುವ ಕ್ರಮದ ಬಗ್ಗೆ ಪ್ರೋಜೆಕ್ಟರ್ ಮೂಲಕ ವಿವರವಾದ ಮಾಹಿತಿಯನ್ನು ಪೋಷಕರಿಗೆ ತಿಳಿಸಿದರು.
    ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ವಿ.ಎಚ್ ಪಂಚಾಕ್ಷರಿ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ರೇಣುಕಾ, ಪ್ರತಿಭಾ, ಲಿಲಿತಾಕುಮಾರಿ ಸಂಗಡಿಗರು ಪ್ರಾರ್ಥಿಸಿದರು. ಡಿ.ಎಚ್ ತೀರ್ಥಪ್ಪ ನಿರೂಪಿಸಿ, ಕವಿತ ವಂದಿಸಿದರು.

Wednesday, August 24, 2022

ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಪರವಾನಗಿ ಪಡೆಯಲು ನಗರಸಭೆಯಲ್ಲಿ ಏಕ ಗವಾಕ್ಷಿ

ಗ್ರಾಮಾಂತರದಲ್ಲಿ ಆಯಾ ಪಂಚಾಯಿತಿಗಳಲ್ಲಿ ಅರ್ಜಿ ಸ್ವೀಕಾರ

ಭದ್ರಾವತಿ ತಾಲೂಕು ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ಅಧ್ಯಕ್ಷತೆಯಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಮುಂಜಾಗ್ರತೆ ಸಭೆ ನಡೆಯಿತು.
    ಭದ್ರಾವತಿ, ಆ. ೨೪:  ಸಾರ್ವಜನಿಕ ಸ್ಥಳಗಳಲ್ಲಿ ಈ ಬಾರಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ವಿವಿಧ ಇಲಾಖೆಗಳಿಂದ ಪರವಾನಗಿ ಪಡೆಯಲು ನಗರ ವ್ಯಾಪ್ತಿಯಲ್ಲಿ ನಗರಸಭೆ  ಕಚೇರಿಯಲ್ಲಿ ಏಕ ಗವಾಕ್ಷಿ ಹಾಗೂ ಗ್ರಾಮಾಂತರ ಭಾಗದಲ್ಲಿ ಆಯಾ ಗ್ರಾಮ ಪಂಚಾಯಿತಿಯಲ್ಲಿ ನೇರವಾಗಿ ಅರ್ಜಿಗಳನ್ನು ಸ್ವೀಕರಿಸಲು ಅವಕಾಶ ಕಲ್ಪಿಸಲಾಗಿದೆ.
       ತಾಲೂಕು ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ಅಧ್ಯಕ್ಷತೆಯಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ನಡೆದ ಮುಂಜಾಗ್ರತ ಸಭೆಯಲ್ಲಿ ಈ ನಿರ್ಣಯ  ಕೈಗೊಳ್ಳಲಾಗಿದೆ.
      ಗ್ರಾಮಾಂತರ ಭಾಗದಲ್ಲಿ ನೇರವಾಗಿ ಪರವಾನಗಿ ಕೋರಿ ಬರುವ ಅರ್ಜಿಗಳನ್ನು ಪರಿಶೀಲಿಸಿ ಮೆಸ್ಕಾಂ ಅಭಿಪ್ರಾಯ ಪಡೆದು ಸಂಬಂಧಿಸಿದ ಪೊಲೀಸ್ ಠಾಣೆಯಿಂದ ಕನಿಷ್ಠ ಎರಡು ದಿನಗಳಲ್ಲಿ ಅನುಮತಿ ನೀಡುವಂತೆ ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿ ಸಮಸ್ಯೆಯಾಗದಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಖುದ್ದಾಗಿ ಸ್ಥಳ ಪರಿಶೀಲಿಸಿ  ಕ್ರಮ ವಹಿಸಲು ಸೂಚಿಸಲಾಯಿತು.
    ಪೆಂಡಾಲ್‌ಗಳಲ್ಲಿ ಆಯೋಜಕರೇ ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳಲು, ಅಗ್ನಿ ಅವಘಡಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಲು, ಸ್ವಯಂಸೇವಕರನ್ನು ಗುರುತಿಸಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಹಾಗೂ ಸಾಧ್ಯವಾದಷ್ಟು ಪರಿಸರ ಸ್ನೇಹಿ ಮತ್ತು ರಾಸಾಯನಿಕ ಮುಕ್ತ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಮತ್ತು ವಿಸರ್ಜನೆ ಸಂದರ್ಭದಲ್ಲಿ ಈಜು ತಜ್ಞರನ್ನು ನೇಮಿಸಿಕೊಳ್ಳುವಂತೆ ತಿಳಿಸಲು ಕ್ರಮ ಕೈಗೊಳ್ಳುವುದು.
    ಪ್ಲೆಕ್ಸ್ ವಿಚಾರದಲ್ಲಿ ಸ್ಥಳೀಯ ಪಂಚಾಯಿತಿಗಳು ಮುನ್ನೆಚ್ಚರಿಕೆ ಕ್ರಮವಹಿಸುವುದು. ಈ ಸಂಬಂಧ ಪಂಚಾಯಿತಿ ಮಟ್ಟದಲ್ಲಿ ಶಾಂತಿ ಸಭೆ ಮಾದರಿಯಲ್ಲಿ ಪೂರ್ವಭಾವಿ ಸಭೆ ನಡೆಸುವುದು ಹಾಗೂ ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಪಡೆಯುವಂತೆ ಮತ್ತು ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ ಎಲ್ಲರೂ ಹಬ್ಬವನ್ನು ಸಂಭ್ರಮದಿಂದ ಶಾಂತಿ ಸೌಹಾರ್ದತೆಯಿಂದ ಆಚರಿಸುವಂತೆ ನೋಡಿಕೊಳ್ಳಲು ತಿಳಿಸಲಾಯಿತು.
     ಸಭೆಯಲ್ಲಿ ಸಹಾಯಕ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ನಗರ, ಗ್ರಾಮಾಂತರ, ಪೇಪರ್ ಟೌನ್ ಮತ್ತು ಹೊಳೆಹೊನ್ನೂರು ಪೊಲೀಸ್ ವೃತ್ತ ನಿರೀಕ್ಷಕರು, ವಿವಿಧ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು, ಕಂದಾಯ, ಮೆಸ್ಕಾಂ, ತಾಲೂಕ್ ಪಂಚಾಯಿತಿ, ಅಬಕಾರಿ, ಅರಣ್ಯ, ಅಗ್ನಿಶಾಮಕ ಅಧಿಕಾರಿಗಳು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಪಾಲ್ಗೊಂಡಿದ್ದರು.


ಗೌರಿ-ಗಣೇಶ ಹಬ್ಬದ ಹಿನ್ನಲೆಯಲ್ಲಿ ಭದ್ರಾವತಿ ನಗರಸಭೆಯಲ್ಲಿ ಬುಧವಾರ ಅಧ್ಯಕ್ಷೆ ಗೀತಾರಾಜ್‌ಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
         ನಗರಸಭೆ ವ್ಯಾಪ್ತಿಯಲ್ಲಿ ಫ್ಲೆಕ್ಸ್ ಅಳವಡಿಕೆಗೆ ವಿರೋಧ :
    ಯಾವುದೇ ಸಂದರ್ಭದಲ್ಲೂ ನಗರಸಭೆ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಫ್ಲೆಕ್ಸ್‌ಗಳನ್ನು ಅಳವಡಿಸದಂತೆ ಕ್ರಮ ಕೈಗೊಳ್ಳಬೇಕೆಂದು ನಗರಸಭಾ ಸದಸ್ಯರು ಆಗ್ರಹಿಸಿದರು.
    ಗೌರಿ-ಗಣೇಶ ಹಬ್ಬದ ಹಿನ್ನಲೆಯಲ್ಲಿ ಬುಧವಾರ ಅಧ್ಯಕ್ಷೆ ಗೀತಾರಾಜ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಿ.ಕೆ ಮೋಹನ್ ಸೇರಿದಂತೆ ಬಹುತೇಕ ಸದಸ್ಯರು ಮಾತನಾಡಿ, ಈಗಾಗಲೇ ನಗರಸಭೆ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಫ್ಲೆಕ್ಸ್‌ಗಳನ್ನು ಅಳವಡಿಸದಂತೆ ನಿರ್ಣಯ ಕೈಗೊಳ್ಳಲಾಗಿದೆ. ಆದರೆ ಇದು ಕಾರ್ಯಗತಗೊಂಡಿಲ್ಲ. ಫ್ಲೆಕ್ಸ್ ಅಳವಡಿಕೆಯಿಂದ ಸಾಕಷ್ಟು ಸಮಸ್ಯೆಗಳು ಎದುರಾಗಲಿವೆ ಎಂದು ಮನವರಿಕೆ ಮಾಡಿ ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿ ಅಧ್ಯಕ್ಷ, ನಗರಸಭಾ ಸದಸ್ಯ ವಿ. ಕದಿರೇಶ್ ಮಾತನಾಡಿ, ಮಹಾಸಭಾ ವತಿಯಿಂದ ಅನೇಕ ವರ್ಷಗಳಿಂದ ರಾಜಕೀಯ ಪ್ರೇರಿತವಲ್ಲದ ಫ್ಲೆಕ್ಸ್‌ಗಳನ್ನು ಅಳವಡಿಸಿಕೊಂಡು ಬರಲಾಗುತ್ತಿದೆ. ಈ ಸಂಬಂಧ ಈಗಾಗಲೇ ಜಿಲ್ಲಾಧಿಕಾರಿಗಳು ಹಾಗು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದರು.
    ವಿಸರ್ಜನೆ ಸಂದರ್ಭದಲ್ಲಿ ಸೂಕ್ಷ್ಮ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ:
    ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ವಿನಾಯಕ ಮೂರ್ತಿಯ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ಮೆರವಣಿಗೆ ಸಂದರ್ಭದಲ್ಲಿ ಪ್ರಮುಖ ವೃತ್ತಗಳು ಸೇರಿದಂತೆ ಸೂಕ್ಷ್ಮ ಸ್ಥಳಗಳಲ್ಲಿ ನಗರಸಭೆ ವತಿಯಿಂದ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಕದಿರೇಶ್ ಕೋರಿದರು.
    ಇದಕ್ಕೆ ಪ್ರತಿಕ್ರಿಯಿಸಿದ ಪೌರಾಯುಕ್ತ ಮನುಕುಮಾರ್ ನಗರಸಭೆಯಲ್ಲಿ ಎಲ್ಲಾ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವಷ್ಟು ಹಣ ಇಲ್ಲ. ಆದರೆ ಎಲ್ಲೆಡೆ ಬ್ಯಾರಿಗೇಡ್‌ಗಳನ್ನು ಅಳವಡಿಸಿಕೊಡಲಾಗುವುದು. ಅಲ್ಲದೆ ವಿಸರ್ಜನಾ ಸ್ಥಳದಲ್ಲಿ ಬೆಳಕಿನ ವ್ಯವಸ್ಥೆ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.

ಕಾರ್ಯದರ್ಶಿಯಾಗಿ ನಕುಲ್ ರೇವಣ್ಕರ್

ನಕುಲ್ ರೇವಣ್ಕರ್
    ಭದ್ರಾವತಿ, ಆ. ೨೪:  ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿಯಾಗಿ ನಗರಸಭೆ ವಾರ್ಡ್ ನಂ.೩ರ ನಿವಾಸಿ ನಕುಲ್ ರೇವಣ್ಕರ್ ಅವರನ್ನು ನೇಮಕಗೊಳಿಸಲಾಗಿದೆ.
    ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್ ಸೂಚನೆಯಂತೆ ನಕುಲ್ ಅವರನ್ನು ಕಾರ್ಯದರ್ಶಿಯಾಗಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಎಂ.ವಿ ಹರಿಕೃಷ್ಣ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
    ನಕುಲ್ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಯುವ ಮೋರ್ಚಾದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಇವನ್ನು ಪಕ್ಷದ ಸ್ಥಳೀಯ ಪ್ರಮುಖರು ಅಭಿನಂದಿಸಿದ್ದಾರೆ.