Tuesday, September 6, 2022

ಹೆಲಿಪ್ಯಾಡ್ ಬಳಿ ಹಸುವಿನ ಮೃತದೇಹ ಪತ್ತೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ವಾರ್ಡ್ ನಂ.೨೫ರ ಹುಡ್ಕೋ ಕಾಲೋನಿ ಹೆಲಿಪ್ಯಾಡ್ ಬಳಿ ಹಸುವಿನ ಮೃತದೇಹ ಪತ್ತೆಯಾಗಿದೆ.
    ಭದ್ರಾವತಿ, ಸೆ. ೬: ನಗರಸಭೆ ವ್ಯಾಪ್ತಿಯ ವಾರ್ಡ್ ನಂ.೨೫ರ ಹುಡ್ಕೋ ಕಾಲೋನಿ ಹೆಲಿಪ್ಯಾಡ್ ಬಳಿ ಹಸುವಿನ ಮೃತದೇಹ ಪತ್ತೆಯಾಗಿದೆ.
    ಈ ಭಾಗದಲ್ಲಿ ವಾಯು ವಿಹಾರಕ್ಕೆ ಸಂಚರಿಸುವವರಿಗೆ ಮೃತದೇಹ ಕಂಡು ಬಂದಿದ್ದು, ಕೊಳೆತ ಸ್ಥಿತಿಯಲ್ಲಿರುವ ಮೃತದೇಹ ನಾಯಿ-ನರಿಗಳಿಗೆ ಆಹಾರವಾಗಿದೆ.
    ೨-೩ ದಿನಗಳು ಕಳೆದರೆ ಮೃತದೇಹ ಮತ್ತಷ್ಟು ಕೊಳೆತು ದುರ್ವಾಸನೆ ಬೀರುವ ಜೊತೆಗೆ ರೋಗರುಜಿನಗಳು ಹರಡುವ ಸಾಧ್ಯತೆಗಳು ಹೆಚ್ಚಾಗಿವೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ತಕ್ಷಣ ಮೃತದೇಹದ ಅಂತ್ಯಸಂಸ್ಕಾರ ನಡೆಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಸೆ.೮ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ರಾಜಬೀದಿ ಉತ್ಸವ ಮೆರವಣಿಗೆಗೆ ಸಕಲ ಸಿದ್ದತೆ

ಭದ್ರಾವತಿಯಲ್ಲಿ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿ ವತಿಯಿಂದ ನಿರ್ಮಿಸಲಾಗಿರುವ ರಾಜಮಹಾರಾಜರ ಕಾಲದ ಕೋಟೆಯಂತೆ ಕಾಣುವ ಮಹಾದ್ವಾರ.

    ಭದ್ರಾವತಿ, ಸೆ. ೬: ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿ ವತಿಯಿಂದ ಹೊಸಮನೆ ತಮಿಳು ಶಾಲೆ ಬಳಿ ಪ್ರತಿಷ್ಠಾಪಿಸಲಾಗಿರುವ ಶ್ರೀವಿನಾಯಕ ಮೂರ್ತಿ ವಿಸರ್ಜನೆ ಸೆ.೮ರಂದು ನಡೆಯಲಿದ್ದು, ಈ ಹಿನ್ನಲೆಯಲ್ಲಿ ರಾಜಬೀದಿ ಉತ್ಸವ ಮೆರವಣಿಗೆಗೆ ಸಕಲ ಸಿದ್ದತೆಗಳು ನಡೆಯುತ್ತಿವೆ.
    ಈ ಬಾರಿ ೫೦ನೇ ವರ್ಷದ ಸುವರ್ಣ ಮಹೋತ್ಸವ ಆಚರಣೆ ಹಿನ್ನಲೆಯಲ್ಲಿ ಹಲವಾರು ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ೯ ದಿನಗಳ ಕಾಲ ಮಹೋತ್ಸವ ಹಮ್ಮಿಕೊಳ್ಳಲಾಗಿದ್ದು, ಈಗಾಗಲೇ ಹಲವಾರು ಕಾರ್ಯಕ್ರಮಗಳು ಯಶಸ್ವಿಯಾಗಿನಡೆದಿವೆ. ಸೆ.೮ರಂದು ವಿಸರ್ಜನೆ ನಡೆಯಲಿದ್ದು, ಈ ಸಂಬಂಧ ನಡೆಯುವ ರಾಜಬೀದಿ ಉತ್ಸವ ಮೆರವಣಿಗೆಗೆ ಸಕಲ ಸಿದ್ದತೆಗಳು ನಡೆಯುತ್ತಿವೆ. ಈ ಬಾರಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಅಭಿಮಾನಿಗಳು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.
    ಕೇಸರಿ ಪಡೆಯಿಂದ ೨೫ ಸಾವಿರ ಲಾಡು ವಿತರಣೆ :
    ಪ್ರತಿ ವರ್ಷ ರಾಜಬೀದಿ ಉತ್ಸವದಲ್ಲಿ ವಿಶಿಷ್ಟ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿರುವ ಹಿಂದೂಪರ ಸಂಘಟನೆಗಳಲ್ಲಿ ಒಂದಾದ ಕೇಸರಿ ಪಡೆ ವತಿಯಿಂದ ಈ ಬಾರಿ ೨೫ ಸಾವಿರ ಲಾಡು ವಿತರಣೆ ನಡೆಯಲಿದೆ. ಈಗಾಗಲೇ ಲಾಡು ತಯಾರಿಕೆ ಕಾರ್ಯ ನಡೆಯುತ್ತಿದ್ದು, ಈ ಹಿಂದೆ ಸಹ ಲಾಡು ವಿತರಣೆ ಮಾಡಲಾಗಿತ್ತು.


ಭದ್ರಾವತಿಯಲ್ಲಿ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ಮೆರವಣಿಗೆಯಲ್ಲಿ ಹಿಂದೂಪರ ಸಂಘಟನೆಗಳಲ್ಲಿ ಒಂದಾದ ಕೇಸರಿ ಪಡೆ ವತಿಯಿಂದ ಈ ಬಾರಿ ೨೫ ಸಾವಿರ ಲಾಡು ವಿತರಣೆ ನಡೆಯಲಿದ್ದು, ಈ ಹಿನ್ನೆಯಲ್ಲಿ ಕಾರ್ಯಕರ್ತರು ಲಾಡು ತಯಾರಿಸುತ್ತಿರುವುದು.

    ಕೋಟೆಯಂತೆ ಮಹಾದ್ವಾರ ನಿರ್ಮಾಣ :
    ೫೦ನೇ ವರ್ಷದ ಸುವರ್ಣ ಮಹೋತ್ಸವ ಆಚರಣೆ ಹಿನ್ನಲೆಯಲ್ಲಿ ವಿನಾಯಕ ಸೇವಾ ಸಮಿತಿ ವತಿಯಿಂದ ಈ ಬಾರಿ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತ, ಮಾಧವಚಾರ್ ವೃತ್ತಗಳಲ್ಲಿ ರಾಜಮಹಾರಾಜರ ಕಾಲದ ಕೋಟೆಯಂತೆ ಮಹಾದ್ವಾರಗಳನ್ನು ನಿರ್ಮಿಸಲಾಗಿದೆ. ಮಹಾದ್ವಾರಗಳು ಆಕರ್ಷಕವಾಗಿ ಕಂಡು ಬರುವ ಜೊತೆಗೆ ಎಲ್ಲರ ಗಮನ ಸೆಳೆಯುತ್ತಿವೆ.
    ಪೊಲೀಸ್ ಇಲಾಖೆ ವತಿಯಿಂದ ಪಥ ಸಂಚಲನ :
    ನಗರದಲ್ಲಿ ಶಾಂತಿ-ಸುವ್ಯವಸ್ಥೆ ಕುರಿತು ಜನರಲ್ಲಿ ಮೂಡಿಸುವ ಜೊತೆಗೆ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಭರವಸೆ ಮೂಡಿಸುವ ಉದ್ದೇಶದೊಂದಿಗೆ ಪೊಲೀಸ್ ಇಲಾಖೆ ವತಿಯಿಂದ ಮಂಗಳವಾರ ಹೊಸಮನೆ ಶಿವಾಜಿ ವೃತ್ತದಿಂದ ರಂಗಪ್ಪ ವೃತ್ತದ ವರೆಗೂ ಪಥ ಸಂಚಲನ ನಡೆಸಲಾಯಿತು.
ಪಥ ಸಂಚಲನದಲ್ಲಿ ಪೊಲೀಸ್ ಇಲಾಖೆ ಹಾಗು ಆರ್‌ಎಎಫ್ ಸಿಬ್ಬಂದಿಗಳು, ಅಧಿಕಾರಿಗಳು ಪಾಲ್ಗೊಂಡಿದ್ದರು. ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ವಿಕ್ರಮ್ ಅಮಟೆ ನೇತೃತ್ವದಲ್ಲಿ ಪಥ ಸಂಚಲನ ನಡೆಯಿತು.


ಪೊಲೀಸ್ ಇಲಾಖೆ ವತಿಯಿಂದ ಮಂಗಳವಾರ ಭದ್ರಾವತಿ ಹೊಸಮನೆ ಶಿವಾಜಿ ವೃತ್ತದಿಂದ ರಂಗಪ್ಪ ವೃತ್ತದ ವರೆಗೂ ಪಥ ಸಂಚಲನ ನಡೆಸಲಾಯಿತು.

    ನಗರಸಭೆ ವತಿಯಿಂದ ಬ್ಯಾರಿಗೇಡ್‌ಗಳ ನಿರ್ಮಾಣ :
ರಾಜಬೀದಿ ಉತ್ಸವ ಮೆರವಣಿಗೆ ಹಿನ್ನಲೆಯಲ್ಲಿ ಪ್ರಮುಖ ವೃತ್ತ ಹಾಗು ರಸ್ತೆಗಳಲ್ಲಿ ನಗರಸಭೆ ವತಿಯಿಂದ ಬ್ಯಾರಿಗೇಡ್‌ಗಳ ನಿರ್ಮಾಣ ನಡೆಯುತ್ತಿದ್ದು, ಈ ಬಾರಿ ಸಹ ಹೆಚ್ಚಿನ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ.



ಅಭಿಮಾನಿಗಳು, ಕಾರ್ಯಕರ್ತರು ಅಪ್ಪಾಜಿ ಕುಟುಂಬ : ಶಾರದ ಅಪ್ಪಾಜಿ

ಭದ್ರಾವತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರ ೨ನೇ ವರ್ಷದ ಪುಣ್ಯಸ್ಮರಣೆ, ಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಣೆ ಹಾಗು ಜೆಡಿಎಸ್ ಪಕ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಶಾರದ ಅಪ್ಪಾಜಿ ಉದ್ಘಾಟಿಸಿದರು.
    ಭದ್ರಾವತಿ, ಸೆ. ೬: ಕ್ಷೇತ್ರದ ರಾಜಕಾರಣಕ್ಕೆ ತಾಯಿ-ಮಗ ಬರಲ್ಲ ಎಂದು ಅಪಪ್ರಚಾರ ನಡೆಸಲಾಗುತ್ತಿದ್ದು, ಕಾರ್ಯಕರ್ತರು ಅಪ್ಪಾಜಿ ಕುಟುಂಬ ಎಂಬುದನ್ನು ವಿರೋಧಿಗಳಿಗೆ ಮನವರಿಕೆ ಮಾಡಿಕೊಡಬೇಕೆಂದು ಮುಂಬರುವ ವಿಧಾನಸಭಾ ಚುನಾವಣೆಯ ಜೆಡಿಎಸ್ ಪಕ್ಷದ ನಿಯೋಜಿತ ಅಭ್ಯರ್ಥಿ ಶಾರದ ಅಪ್ಪಾಜಿ ಹೇಳಿದರು.
    ಅವರು ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರ ೨ನೇ ವರ್ಷದ ಪುಣ್ಯಸ್ಮರಣೆ, ಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಣೆ ಹಾಗು ಜೆಡಿಎಸ್ ಪಕ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಅಪ್ಪಾಜಿ ಹೆಸರಿನಲ್ಲಿ ಯಾವುದೇ ಕೆಲಸ ಮಾಡಿದರೂ ಖಂಡಿತವಾಗಿ ಯಶಸ್ಸು ಲಭಿಸುತ್ತದೆ. ಕ್ಷೇತ್ರದ ಜನರ ಹೃದಯದಲ್ಲಿ ಅಪ್ಪಾಜಿ ಎಂದಿಗೂ ಅಚ್ಚಳಿಯದಂತೆ ಉಳಿದುಕೊಂಡಿದ್ದಾರೆ. ಇವರನ್ನು ಹೃದಯದಿಂದ ಕಿತ್ತು ಹಾಕಲು ಅಥವಾ ಅಳಿಸಿ ಹಾಕಲು ಸಾಧ್ಯವಿಲ್ಲ. ಅಭಿಮಾನಿಗಳು, ಕಾರ್ಯಕರ್ತರೇ ಅಪ್ಪಾಜಿ ಕುಟುಂಬವಾಗಿದ್ದಾರೆ. ತಾಯಿ-ಮಗ ರಾಜಕಾರಣಕ್ಕೆ ಬರುವುದಿಲ್ಲ ಎಂದು ಅಪಪ್ರಚಾರ ನಡೆಸಲಾಗುತ್ತಿದೆ. ಅಭಿಮಾನಿಗಳು, ಕಾರ್ಯಕರ್ತರು ಅಪ್ಪಾಜಿ ಅವರು ಬಿಟ್ಟು ಹೋಗಿರುವ ಆಸ್ತಿಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಯಾರು ಸಹ ಇಂತಹ ಅಪಪ್ರಚಾರಗಳಿಗೆ ಕಿಡಿಕೊಡಬಾರದು ಎಂದರು.
    ಕಮಿಷನ್ ಹೊಡೆಯಲು ಪ್ರೋಟೋ ಕಾಲ್ ಇಲ್ಲ :
    ಕ್ಷೇತ್ರದಲ್ಲಿ ಅಪ್ಪಾಜಿ ಕುಟುಂಬ ಎಂದಿಗೂ ಯಾವುದೇ ಅಧಿಕಾರಿಗಳಿಗೆ ತೊಂದರೆ ನೀಡಿಲ್ಲ. ನಾನು ಇದುವರೆಗೂ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿಲ್ಲ. ಅದರ ಅಗತ್ಯ ಸಹ ನಮಗೆ ಇರಲಿಲ್ಲ ಕಾರಣ ಅಪ್ಪಾಜಿ ಹೆಸರಿನಲ್ಲಿಯೇ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತಿದ್ದರು. ಆದರೆ ಇದೀಗ ಪರಿಸ್ಥಿತಿ ಬದಲಾಗಿದೆ. ಅಧಿಕಾರಿಗಳು ಸ್ವತಂತ್ರ್ಯವಾಗಿ ಕೆಲಸ ಮಾಡಲು ಬಿಡುತ್ತಿಲ್ಲ ಎಂದು ಆರೋಪಿಸಿ ರಸ್ತೆ ಉದ್ಘಾಟನೆಗೂ ಪ್ರೋಟೋಕಾಲ್, ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಮುದ್ರಿಸಲು ಪ್ರೋಟೋಕಾಲ್, ಆದರೆ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿ ಕಮೀಷನ್ ಹೊಡೆಯಲು ಯಾವುದೇ ಪ್ರೋಟೋಕಾಲ್ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ಪ್ರಸ್ತುತ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಅಪ್ಪಾಜಿಯವರು ಕ್ಷೇತ್ರದಲ್ಲಿ ಬಿಟ್ಟು ಹೋಗಿರುವ ಕೆಲಸಗಳನ್ನು ಪೂರ್ಣಗೊಳಿಸಬೇಕು. ಈ ನಿಟ್ಟಿನಲ್ಲಿ ಮುಂಬರುವ ಚುನಾವಣೆಯಲ್ಲಿ ಯೋಚನೆ ಮಾಡಿ ತಮ್ಮ ಮತ ಚಲಾಯಿಸಬೇಕೆಂದರು.
    ಜೆಡಿಎಸ್ ಪಕ್ಷದ ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್ ಮಾತನಾಡಿ, ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಶಾರದ ಅಪ್ಪಾಜಿ ಅವರನ್ನು ಗೆಲ್ಲಿಸುವ ಪಣ ತೊಡುವ ಮೂಲಕ ಪಕ್ಷ ಸಂಘಟನೆ ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಯಾರು ಈ ಕ್ಷೇತ್ರದಲ್ಲಿ ದರ್ಪದಿಂದ ಮೆರೆಯುತ್ತಿದ್ದಾರೆಯೋ ಅವರಿಗೆ ಎಲ್ಲರೂ ಒಗ್ಗಟ್ಟಾಗಿ ಸೇರಿ ಉತ್ತರ ಕೊಡಬೇಕಾಗಿದೆ ಎಂದರು.
    ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜೆ.ಪಿ ಯೋಗೇಶ್, ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸತೀಶ್, ತಾಲೂಕು ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ, ಗ್ರಾಮಂತರ ಘಟಕದ ಅಧ್ಯಕ್ಷ ಕೆ. ಧರ್ಮಕುಮಾರ, ನಗರ ಘಟಕದ ಮಹಿಳಾ ಅಧ್ಯಕ್ಷೆ ವಿಶಾಲಾಕ್ಷಿ, ಗ್ರಾಮಾಂತರ ಘಟಕದ ಅಧ್ಯಕ್ಷೆ ಪಾರ್ವತಿಬಾಯಿ, ಅಲ್ಪ ಸಂಖ್ಯಾಂತರ ನಗರ ಘಟಕದ ಅಧ್ಯಕ್ಷ ಮುತುರ್ಜಾಖಾನ್, ತಾಲೂಕು ಯುವ ಘಟಕದ ಅಧ್ಯಕ್ಷ ಎಂ.ಎ ಅಜಿತ್, ನಗರ ಘಟಕದ ಕಾರ್ಯಾಧ್ಯಕ್ಷ ಬಿ.ಸಿ ಉಮೇಶ್, ಪರಿಶಿಷ್ಟ ಜಾತಿ ನಗರ ಘಟಕದ ಅಧ್ಯಕ್ಷ ಮೈಲಾರಪ್ಪ, ಪರಿಶಿಷ್ಟ ಜಾತಿ ಗ್ರಾಮಾಂತರ ಘಟಕದ ಅಧ್ಯಕ್ಷ ಶ್ರೀಧರನಾಯ್ಕ, ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗು ವಕ್ತಾರ ಎಂ. ರಾಜು ನಗರ ಘಟಕದ ಮಹಿಳಾ ಕಾರ್ಯದರ್ಶಿ ಭಾಗ್ಯಮ್ಮ ಹಾಗು ಮುಖಂಡರಾದ ಕರಿಯಪ್ಪ, ಡಿ.ಟಿ ಶ್ರೀಧರ್, ಲೋಕೇಶ್ವರ್ ರಾವ್, ಧರ್ಮೇಗೌಡ ಹಾಗು ನಗರಸಭೆ ಮತ್ತು ಗ್ರಾಮ ಪಂಚಾಯಿತಿ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Monday, September 5, 2022

ಖಾತೆ ಪಹಣಿ ಮ್ಯುಟೇಷನ್ ದಾಖಲೆ ವಿಳಂಬ : ಡಿಎಸ್‌ಎಸ್ ಪ್ರತಿಭಟನೆ

ರೈತರಿಗೆ ಸಾಗುವಳಿ ಚೀಟಿ ನೀಡಿದ್ದರೂ ಸಹ ಖಾತೆ ಪಹಣಿ ಮ್ಯುಟೇಷನ್ ದಾಖಲೆ ಮಾಡದೆ ವಿಳಂಬ ನೀತಿ ಮತ್ತು ೯೪ಸಿ ಅಡಿಯ ಫಲಾನುಭವಿಗಳಿಗೆ ಹಕ್ಕು ಪತ್ರ ಮತ್ತು ಹಿಂದೂ ರುದ್ರಭೂಮಿ ಮಂಜೂರಾತಿಗೆ ಆಗ್ರಹಿಸಿ ಸೋಮವಾರ ತಾಲೂಕು ಕಛೇರಿ ಮುಂಭಾಗ ದಲಿತ ಸಂಘರ್ಷ ಸಮಿತಿ(ಸಂಯೋಜಕ) ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಸೆ. ೫: ರೈತರಿಗೆ ಸಾಗುವಳಿ ಚೀಟಿ ನೀಡಿದ್ದರೂ ಸಹ ಖಾತೆ ಪಹಣಿ ಮ್ಯುಟೇಷನ್ ದಾಖಲೆ ಮಾಡದೆ ವಿಳಂಬ ನೀತಿ ಮತ್ತು ೯೪ಸಿ ಅಡಿಯ ಫಲಾನುಭವಿಗಳಿಗೆ ಹಕ್ಕು ಪತ್ರ ಮತ್ತು ಹಿಂದೂ ರುದ್ರಭೂಮಿ ಮಂಜೂರಾತಿಗೆ ಆಗ್ರಹಿಸಿ ಸೋಮವಾರ ತಾಲೂಕು ಕಛೇರಿ ಮುಂಭಾಗ ದಲಿತ ಸಂಘರ್ಷ ಸಮಿತಿ(ಸಂಯೋಜಕ) ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
    ತಾಲೂಕಿನಲ್ಲಿ ೨೦೨೧-೨೨ನೇ ಸಾಲಿನಲ್ಲಿ ಬಗರ್ ಹುಕುಂ ಜಮೀನು ಅಳತೆ ಮಾಡಿ ಸ್ಕೆಚ್ ಮಾಡಿ ಸಾಗುವಳಿ ಚೀಟಿ ನೀಡಿದ್ದು, ಆದರೆ ಇದುವರೆಗೂ ಖಾತೆ ಪಹಣಿ ಮ್ಯುಟೇಷನ್ ದಾಖಲೆ ಮಾಡದೆ ವಿಳಂಬ ನೀತಿ ಅನುಸರಿಸಲಾಗುತ್ತಿದ್ದು, ತಕ್ಷಣ  ಪರಿಶೀಲಿಸಿ ಖಾತೆ ಪಹಣಿ ಮ್ಯುಟೇಷನ್ ಮಾಡಿಕೊಡುವುದು.
    ತಾಲೂಕಿನಾದ್ಯಂತ ೯೪ಸಿ ಅಡಿಯಲ್ಲಿ ಮನೆಗಳಿಗೆ ಹಕ್ಕು ಪತ್ರ ಕೊಡುವುದಾಗಿ ಸರ್ಕಾರಕ್ಕೆ ಹಣ ಸಂದಾಯ ಮಾಡಿಕೊಂಡು ಇದುವರೆಗೂ ಹಕ್ಕು ಪತ್ರ ನೀಡದೆ ಬಡ ಕುಟುಂಬಗಳಿಗೆ ಅನ್ಯಾಯ ಮಾಡಲಾಗಿದ್ದು, ತಕ್ಷಣ ಅನ್ಯಾಯ ಸರಿಪಡಿಸುವುದು.
    ತಾಲೂಕಿನ ಕೂಡ್ಲಿಗೆರೆ ಹೋಬಳಿ ದೇವರಹಳ್ಳಿ ಅಂಚೆ ಗುಡ್ಡದ ನೇರಳೆಕೆರೆ ಗ್ರಾಮದ ಸರ್ವೆ ನಂ. ೩೪ ಮತ್ತು ೩೫ರಲ್ಲಿ ೨ ಎಕರೆ ಜಮೀನು ಹಿಂದೂ ರುದ್ರಭೂಮಿಗೆ ಮಂಜೂರು ಮಾಡುವಂತೆ ಹಲವಾರು ಬಾರಿ ಅರ್ಜಿ ಸಲ್ಲಿಸಿ ಕೋರಲಾಗಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ತಕ್ಷಣ ಹಿಂದೂ ರುದ್ರಭೂಮಿ ಮಂಜೂರು ಮಾಡಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
    ಸಮಿತಿ ತಾಲೂಕು ಸಂಯೋಜಕ ಅಣ್ಣಾದೊರೈ, ಸಂಘಟನಾ ಸಂಯೋಜಕ ಬಸವರಾಜು ಮತ್ತು ರಾಜು ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಅಪ್ಪಾಜಿ ಪುಣ್ಯಸ್ಮರಣೆ, ಬಾಗಿನ ಸಮರ್ಪಣೆ, ಜೆಡಿಎಸ್ ಶಕ್ತಿ ಪ್ರದರ್ಶನ

ಶಾರದ ಅಪ್ಪಾಜಿ ಸಮ್ಮುಖದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸ್ವೀಕಾರ


ಭದ್ರಾವತಿ ಗೋಣಿಬೀಡಿನಲ್ಲಿರುವ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರ ಶಕ್ತಿಧಾಮದಲ್ಲಿ ಅಪ್ಪಾಜಿ ಪ್ರತಿಮೆಗೆ ಶಾರದ ಅಪ್ಪಾಜಿ ಹಾಗು ಕುಟುಂಬ ವರ್ಗದವರು ಅಭಿಮಾನಿಗಳು, ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.

ಶಾರದ ಅಪ್ಪಾಜಿ ಕುಟುಂಬ ವರ್ಗದವರು ಭದ್ರಾವತಿ ಬಿಆರ್‌ಪಿ ಭದ್ರಾ ಜಲಾಶಯದಲ್ಲಿ ಬಾಗಿನ ಸಮರ್ಪಿಸಿದರು. 

ಭದ್ರಾವತಿಯಲ್ಲಿ ಸೋಮವಾರ ಶಾರದ ಅಪ್ಪಾಜಿ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಯಿತು.

ಭದ್ರಾವತಿ ನ್ಯೂಟೌನ್ ಉಂಬ್ಳೆಬೈಲು ರಸ್ತೆ, ರೋಟರಿ ಕ್ಲಬ್ ಸಮೀಪದಲ್ಲಿರುವ ಅಪ್ಪಾಜಿ ನಿವಾಸದಿಂದ ಗೋಣಿಬೀಡಿನ ಶಕ್ತಿಧಾಮದವರೆಗೂ ನಂತರ ಶಂಕರಘಟ್ಟ, ಬಿಆರ್‌ಪಿ ವ್ಯಾಪ್ತಿಯಲ್ಲಿ  ಬೈಕ್ ರ‍್ಯಾಲಿ ನಡೆಸಲಾಯಿತು.
    ಭದ್ರಾವತಿ, ಸೆ. ೫ : ಒಂದೆಡೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ೨ನೇ ವರ್ಷದ ಪುಣ್ಯಸ್ಮರಣೆ, ಮತ್ತೊಂದೆಡೆ ತುಂಬಿದ ಭದ್ರೆಗೆ ಬಾಗಿನ ಸಮರ್ಪಣೆ, ಇನ್ನೊಂದೆಡೆ ಜೆಡಿಎಸ್ ಪಕ್ಷದ ಶಕ್ತಿ ಪ್ರದರ್ಶನ ಸೋಮವಾರ ತಾಲೂಕಿನ ಗೋಣಿಬೀಡು, ಶಂಕರಘಟ್ಟ, ಬಿಆರ್‌ಪಿ ವ್ಯಾಪ್ತಿಯಲ್ಲಿ  ನಡೆಯಿತು.
    ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರ ೨ನೇ ವರ್ಷದ ಪುಣ್ಯಸ್ಮರಣೆ ಗೋಣಿಬೀಡಿನ ಅವರ ತೋಟದಲ್ಲಿರುವ ಶಕ್ತಿಧಾಮದಲ್ಲಿ ಬೆಳಿಗ್ಗೆ ನಡೆಯಿತು. ಅಪ್ಪಾಜಿ ಪ್ರತಿಮೆಗೆ ಶಾರದ ಅಪ್ಪಾಜಿ ಹಾಗು ಕುಟುಂಬ ವರ್ಗದವರು ಅಭಿಮಾನಿಗಳು, ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ನಂತರ ಬಿಆರ್‌ಪಿ ಭದ್ರಾ ಜಲಾಶಯದಲ್ಲಿ ಬಾಗಿನ ಸಮರ್ಪಿಸಲಾಯಿತು. ಮಧ್ಯಾಹ್ನ ಜೆಡಿಎಸ್ ಪಕ್ಷದ ಶಕ್ತಿ ಪ್ರದರ್ಶನ ನಡೆಯಿತು. ನೂತನ ಪದಾಧಿಕಾರಿಗಳು ಪದಗ್ರಹಣ ಸ್ವೀಕರಿಸಿದರು.
    ನ್ಯೂಟೌನ್ ಉಂಬ್ಳೆಬೈಲು ರಸ್ತೆ, ರೋಟರಿ ಕ್ಲಬ್ ಸಮೀಪದಲ್ಲಿರುವ ಅಪ್ಪಾಜಿ ನಿವಾಸದಿಂದ ಗೋಣಿಬೀಡಿನ ಶಕ್ತಿಧಾಮದವರೆಗೂ ನಂತರ ಶಂಕರಘಟ್ಟ, ಬಿಆರ್‌ಪಿ ವ್ಯಾಪ್ತಿಯಲ್ಲಿ  ಬೈಕ್ ರ‍್ಯಾಲಿ ನಡೆಸಲಾಯಿತು. ಈ ನಡುವೆ ಶಾರದ ಅಪ್ಪಾಜಿ ನೇತೃತ್ವದಲ್ಲಿ ಪಾದಯಾತ್ರೆ ಸಹ ನಡೆಯಿತು. 
     ನೂತನ    ಪದಾಧಿಕಾರಿಗಳ ಪದಗ್ರಹಣ :
    ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಮಧುಕುಮಾರ್, ತಾಲೂಕು ನಗರ ಘಟಕದ ಅಧ್ಯಕ್ಷರಾಗಿ ಆರ್. ಕರುಣಾಮೂರ್ತಿ, ಗ್ರಾಮಂತರ ಘಟಕದ ಅಧ್ಯಕ್ಷರಾಗಿ ಕೆ. ಧರ್ಮಕುಮಾರ, ನಗರ ಘಟಕದ ಮಹಿಳಾ ಅಧ್ಯಕ್ಷರಾಗಿ ವಿಶಾಲಾಕ್ಷಿ, ಗ್ರಾಮಾಂತರ ಘಟಕದ ಅಧ್ಯಕ್ಷರಾಗಿ ಪಾರ್ವತಿಬಾಯಿ, ಅಲ್ಪ ಸಂಖ್ಯಾಂತರ ನಗರ ಘಟಕದ ಅಧ್ಯಕ್ಷರಾಗಿ ಮುತುರ್ಜಾಖಾನ್, ತಾಲೂಕು ಯುವ ಘಟಕದ ಅಧ್ಯಕ್ಷರಾಗಿ ಎಂ.ಎ ಅಜಿತ್, ನಗರ ಘಟಕದ ಕಾರ್ಯಾಧ್ಯಕ್ಷರಾಗಿ ಬಿ.ಸಿ ಉಮೇಶ್, ಪರಿಶಿಷ್ಟ ಜಾತಿ ನಗರ ಘಟಕದ ಅಧ್ಯಕ್ಷರಾಗಿ ಮೈಲಾರಪ್ಪ, ಪರಿಶಿಷ್ಟ ಜಾತಿ ಗ್ರಾಮಾಂತರ ಘಟಕದ ಅಧ್ಯಕ್ಷರಾಗಿ ಶ್ರೀಧರನಾಯ್ಕ, ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗು ವಕ್ತಾರರಾಗಿ ಎಂ. ರಾಜು ಮತ್ತು ನಗರ ಘಟಕದ ಮಹಿಳಾ ಕಾರ್ಯದರ್ಶಿಯಾಗಿ ಭಾಗ್ಯಮ್ಮ ಅವರು ಪದಗ್ರಹಣ ಸ್ವೀಕರಿಸಿದರು.  
    ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸತೀಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜೆ.ಪಿ ಯೋಗೇಶ್, ಮುಖಂಡರಾದ ಕರಿಯಪ್ಪ, ಡಿ.ಟಿ ಶ್ರೀಧರ್, ಲೋಕೇಶ್ವರ್ ರಾವ್, ಧರ್ಮೇಗೌಡ ಹಾಗು ನಗರಸಭೆ ಮತ್ತು ಗ್ರಾಮ ಪಂಚಾಯಿತಿ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳು ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Sunday, September 4, 2022

ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ ಚಾಲನೆ


 ಭದ್ರಾವತಿ, ಸೆ. ೩: ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗು ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ಸೋಮವಾರ ಹಳೇನಗರದ ಶ್ರೀ ವೀರಶೈವ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ  ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನಾಚರಣೆ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ ಚಾಲನೆ ನೀಡಿದರು.
    ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಶಿಕ್ಷಕರಿಗೆ ಶುಭ ಕೋರಿದರು.  ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
     ತಾಲೂಕು ಮಟ್ಟದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ, ನಿವೃತ್ತ ಶಿಕ್ಷಕರಿಗೆ ಹಾಗು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ ಪಡೆದ ಶಾಲೆಗಳಿಗೆ ಸನ್ಮಾನ ಹಾಗು ಶಿಕ್ಷಕರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
     ತಹಸೀಲ್ದಾರ್ ಆರ್.ಪ್ರದೀಪ್, ನಗರಸಭೆ  ಅಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಮನುಕುಮಾರ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ರಮೇಶ್, ನಗರಸಭೆ ಸದಸ್ಯರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.




೪ ಮಂದಿಗೆ ಜಿಲ್ಲಾಮಟ್ಟದ ಶಿಕ್ಷಕ ಪ್ರಶಸ್ತಿ

ಕೆ. ಕೋಕಿಲಾ


ಜಿ.ಪಿ ಇಬ್ರಾಹಿಂ


ಎನ್. ಅಣ್ಣಪ್ಪ


ಎ.ಎಂ ಪ್ರಸನ್ನ

    ಭದ್ರಾವತಿ, ಸೆ. ೪ : ಈ ಬಾರಿ ೪ ಮಂದಿಗೆ ಜಿಲ್ಲಾಮಟ್ಟದ ಶಿಕ್ಷಕ ಪ್ರಶಸ್ತಿ ಲಭಿಸಿದ್ದು, ತಾಲೂಕಿನ ಶಿಕ್ಷಕ ವೃಂದದವರಲ್ಲಿ ಸಂತಸವನ್ನುಂಟು ಮಾಡಿದೆ.
    ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ತಾಲೂಕಿನ ಹಡ್ಲಘಟ್ಟ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಜಿ.ಪಿ ಇಬ್ರಾಹಿಂ, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಹಳೇನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಕೆ. ಕೋಕಿಲಾ, ಪ್ರೌಢಶಾಲಾ ವಿಭಾಗದಲ್ಲಿ ಅರಹತೊಳಲು ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕ ಎನ್. ಅಣ್ಣಪ್ಪ ಹಾಗು ಜಿಲ್ಲಾಮಟ್ಟದ ಉತ್ತಮ ಶಿಕ್ಷಕರ ವಿಶೇಷ ಪ್ರಶಸ್ತಿಯನ್ನು ಅತ್ತಿಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎ.ಎಂ ಪ್ರಸನ್ನ ಪಡೆದುಕೊಂಡಿದ್ದಾರೆ.
    ಪ್ರಶಸ್ತಿಗೆ ಭಾಜನರಾಗಿರುವ ಶಿಕ್ಷಕರಿಗೆ ಶಾಸಕ ಬಿ.ಕೆ ಸಂಗಮೇಶ್ವರ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.