Friday, September 23, 2022

೮ ಮತಗಳ ಅಂತರದಿಂದ ಅನುಸುಧಾ ಮೋಹನ್ ಪಳನಿ ಗೆಲುವು : ಭದ್ರಾವತಿ ನಗರಸಭೆ ಅಧ್ಯಕ್ಷರಾಗಿ ಆಯ್ಕೆ

ಭದ್ರಾವತಿ ನಗರಸಭೆ ನೂತನ ಅಧ್ಯಕ್ಷರಾಗಿ ವಾರ್ಡ್ ನಂ. ೧೩ರ ಸದಸ್ಯೆ ಅನುಸುಧಾ ಮೋಹನ್ ಶುಕ್ರವಾರ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಆಯ್ಕೆಯಾದರು.    
    ಭದ್ರಾವತಿ, ಸೆ.೨೩: ನಗರಸಭೆ ನೂತನ ಅಧ್ಯಕ್ಷರಾಗಿ ವಾರ್ಡ್ ನಂ. ೧೩ರ ಸದಸ್ಯೆ ಅನುಸುಧಾ ಮೋಹನ್ ಶುಕ್ರವಾರ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಆಯ್ಕೆಯಾದರು.
    ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಅನುಸುಧಾ ಮೋಹನ್, ಜೆಡಿಎಸ್ ಪಕ್ಷದಿಂದ ವಾರ್ಡ್ ನಂ.೨೧ರ ವಿಜಯ ಹಾಗು ಬಿಜೆಪಿ ಪಕ್ಷದಿಂದ ವಾರ್ಡ್ ನಂ.೪ರ ಅನುಪಮ ಚನ್ನೇಶ್ ಸ್ಪರ್ಧಿಸಿದ್ದರು. ೩೫ ನಗರಸಭಾ ಸದಸ್ಯರು, ೧ ವಿಧಾನಸಭಾ ಸದಸ್ಯರು ಮತ್ತು ೧ ಲೋಕಸಭಾ ಸದಸ್ಯರು ಒಟ್ಟು ೩೭ ಮತಗಳಿದ್ದು, ಈ ಪೈಕಿ ಲೋಕಸಭಾ ಸದಸ್ಯರು ಮತ ಚಲಾಯಿಸಿಲ್ಲ. ಉಳಿದ ೩೬ ಮತಗಳ ಪೈಕಿ ಅನುಸುಧಾ ಮೋಹನ್ ಪಳನಿ ೨೦, ವಿಜಯ ೧೨ ಹಾಗು ಅನುಪಮ ಚನ್ನೇಶ್ ೪ ಮತಗಳನ್ನು ಪಡೆದುಕೊಂಡರು. ಒಟ್ಟು ೮ ಮತಗಳ ಅಂತರದಿಂದ ಅನುಸುಧಾ ಮೋಹನ್ ಪಳನಿ ಆಯ್ಕೆಯಾಗಿದ್ದಾರೆ.  
    ತಮಿಳು ವನ್ನಿಯರ್ ಗೌಂಡರ್ ಸಮುದಾಯಕ್ಕೆ ಸೇರಿದ ಅನುಸುಧಾ ಮೊದಲ ಬಾರಿಗೆ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದು, ಮೊದಲ ಅವಧಿಯಲ್ಲಿಯೇ ಅಧ್ಯಕ್ಷರಾಗಿದ್ದಾರೆ. ಇವರ ಮಾವ ಕೆ. ಪಳನಿ ಅವರು ಸುಮಾರು ೪ ಬಾರಿ ಪುರಸಭಾ ಸದಸ್ಯರಾಗಿದ್ದು, ಇವರ ರಾಜಕೀಯ ಅನುಭವ ಅನುಸುಧಾ ಅವರಿಗೆ ಮಾರ್ಗದರ್ಶನವಾಗಿದೆ.
    ವನ್ನಿಯರ್‌ಗೆ ಪ್ರತಿಸ್ಪರ್ಧಿ ಮೊದಲಿಯಾರ್:
    ತಮಿಳು ಜನಾಂಗದ ಒಳಪಂಗಡಗಳಾಗಿರುವ ವನ್ನಿಯರ್ ಗೌಂಡರ್ ಮತ್ತು ಆಗಮುಡಿ ಮೊದಲಿಯಾರ್ ಸಮಾಜದ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿರುವುದು ವಿಶೇಷವಾಗಿತ್ತು. ಅನುಸುಧಾ ವನ್ನಿಯರ್ ಗೌಂಡರ್ ಸಮುದಾಯಕ್ಕೆ ಸೇರಿದ್ದು, ಇವರ ಪ್ರತಿಸ್ಪರ್ಧಿ ವಿಜಯ ಆಗಮುಡಿ ಮೊದಲಿಯಾರ್ ಸಮುದಾಯಕ್ಕೆ ಸೇರಿದ್ದಾರೆ.
    ಪ್ರಸ್ತುತ ನಗರಸಭೆಯಲ್ಲಿ ಕಾಂಗ್ರೆಸ್-೧೮, ಜೆಡಿಎಸ್-೧೨, ಬಿಜೆಪಿ-೦೪ ಮತ್ತು ಪಕ್ಷೇತರ-೦೧ ಸ್ಥಾನ ಹೊಂದಿದೆ. ಚುನಾವಣಾಧಿಕಾರಿಯಾಗಿ ಉಪವಿಭಾಗಾಧಿಕಾರಿ ಎಸ್.ಬಿ ದೊಡ್ಡೇಗೌಡರ್ ಕಾರ್ಯ ನಿರ್ವಹಿಸಿದರು. ಪೌರಾಯುಕ್ತ ಮನುಕುಮಾರ್ ಉಪಸ್ಥಿತರಿದ್ದರು.


    ನಾಡಹಬ್ಬ ದಸರಾಗೆ ಹೊಸ ಅಧ್ಯಕ್ಷರು :
    ನಗರಸಭೆ ವತಿಯಿಂದ ಸೆ.೨೬ರಿಂದ ನಾಡಹಬ್ಬ ದಸರಾ ಆಚರಣೆ ನಡೆಯಲಿದ್ದು, ಉಪಾಧ್ಯಕ್ಷರಾದ ಚನ್ನಪ್ಪ ಅವರು ಸುಮಾರು ೧ ತಿಂಗಳಿನಿಂದ ಪ್ರಭಾರ ಅಧ್ಯಕ್ಷರಾಗಿದ್ದರು. ಇದೀಗ ನಾಡಹಬ್ಬ ದಸರಾ ಆಚರಣೆ ನೂತನ ಅಧ್ಯಕ್ಷೆ ಅನುಸುಧಾ ಅವರ ನೇತೃತ್ವದಲ್ಲಿ ನಡೆಯಲಿದೆ. ಸುಮಾರು ೧೦ ದಿನಗಳ ದಸರಾ ಆಚರಣೆ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ದತೆಗಳು ನಡೆದಿವೆ.
    ನೂತನ ಅಧ್ಯಕ್ಷರಿಗೆ ಶಾಸಕ ಬಿ.ಕೆ ಸಂಗಮೇಶ್ವರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್ ಹಾಗು ಜಂಬೂ ಮಹರ್ಷಿ ವನ್ನಿಯರ್ ಗೌಂಡರ್ ಸಮಾಜದ ರಾಜ್ಯಾಧ್ಯಕ್ಷ ನಂದಕುಮಾರ್, ತಾಲೂಕು ಅಧ್ಯಕ್ಷ ಮಣಿ ಎಎನ್‌ಎಸ್, ತಮಿಳು ಸಮಾಜದ ತಾಲೂಕು ಅಧ್ಯಕ್ಷ ರವಿ, ಆಗಮುಡಿ ಮೊದಲಿಯಾರ್ ಸಮಾಜದ ಅಧ್ಯಕ್ಷ ಕಣ್ಣಪ್ಪ, ಕಾಂಗ್ರೆಸ್ ಪಕ್ಷದ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಮಹಿಳಾ ಘಟಕದ ಅಧ್ಯಕ್ಷೆ ಹೇಮಾವತಿ, ಯುವ ಘಟಕದ ಅಧ್ಯಕ್ಷರಾದ ಅಫ್ತಾಬ್ ಅಹಮದ್, ವಿನೋದ್ ಸೇರಿದಂತೆ ಪಕ್ಷದ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಇನ್ನಿತರರು ಅಭಿನಂದಿಸಿದರು.
    ಅನುಸುಧಾ ಅವರು ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ನಗರಸಭೆ ಮುಂಭಾಗ ಪಕ್ಷದ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ನಂತರ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಿ ಮಹಾತ್ಮಗಾಂಧಿ ವೃತ್ತದಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.


ನಂದಕುಮಾರ್, ರಾಜ್ಯಾಧ್ಯಕ್ಷರು, ಜಂಬೂ ಮಹರ್ಷಿ ವನ್ನಿಯರ್ ಗೌಂಡರ್ ಸಮಾಜ.

ಕ್ಷೇತ್ರದಲ್ಲಿ ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ವನ್ನಿಯರ್ ಗೌಂಡರ್ ಸಮಾಜವನ್ನು ಗುರುತಿಸಿ ರಾಜಕೀಯದಲ್ಲಿ ಅವರಿಗೂ ಸೂಕ್ತ ಸ್ಥಾನಮಾನ ನೀಡಿರುವುದು ಸಂತಸ ಸಂಗತಿಯಾಗಿದೆ. ಗೌಂಡರ್ ಸಮಾಜ ಎಲ್ಲಾ ಸಮುದಾಯಗಳೊಂದಿಗೂ ಸೌಹಾರ್ದತೆ ಕಂಡುಕೊಂಡಿದ್ದು, ಇಂತಹ ಸಮುದಾಯಕ್ಕೆ ಅವಕಾಶ ಕಲ್ಪಿಸಿಕೊಟ್ಟಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಕಾಂಗ್ರೆಸ್ ಪಕ್ಷದ ಎಲ್ಲಾ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.
 - ನಂದಕುಮಾರ್, ರಾಜ್ಯಾಧ್ಯಕ್ಷರು, ಜಂಬೂ ಮಹರ್ಷಿ ವನ್ನಿಯರ್ ಗೌಂಡರ್ ಸಮಾಜ.

Thursday, September 22, 2022

ಹಳೇದ್ವೇಷದ ಹಿನ್ನಲೆಯಲ್ಲಿ ಚಾಕುವಿನಿಂದ ಹಲ್ಲೆ


    ಭದ್ರಾವತಿ, ಸೆ. ೨೨: ಹಳೇದ್ವೇಷದ ಹಿನ್ನಲೆಯಲ್ಲಿ ವ್ಯಕ್ತಿಯೋರ್ವನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ ಕಳೆದ ೩ ದಿನಗಳ ಹಿಂದೆ ನಡೆದಿದೆ.
    ಮಹೇಶ ಮತ್ತು ಮನೋಜ್ ಇಬ್ಬರು ಸಹೋದರರು ಮದ್ಯ ಸೇವನೆ ಮಾಡಿ ಹಳೇದ್ವೇಷದ ಹಿನ್ನಲೆಯಲ್ಲಿ ಕಿರಣ್ ಎಂಬಾತನ ಮೇಲೆ ಜಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಕೈ ಮತ್ತು ತೊಡೆಗೆ ಗಾಯವಾಗಿದ್ದು, ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಇಬ್ಬರು ಸಹೋದರರನ್ನು ಬಂಧಿಸಿದ್ದಾರೆ.

ಹಳ್ಳಿಗಾಡಿನ ಕಲೆ ಮೂಲಕ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಲ್ಲಿ ಮಾದಾಪುರ ಕಲಾವಿದರು ಯಶಸ್ವಿ : ವೀರೇಶ್ ಆಲುವಳ್ಳಿ

ಭದ್ರಾವತಿ ತಾಲೂಕಿನ ಸುಲ್ತಾನಮಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ, ಜಾನಪದ ಕಲಾವಿದ ಎಂ.ಆರ್ ರೇವಣಪ್ಪರಿಗೆ ಸನ್ಮಾನ

ಹೊಸನಗರ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಶ್ರೀ ಶನಿಪರಮೇಶ್ವರ ಯುವಕ ಸಂಘದವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಭದ್ರಾವತಿ ತಾಲೂಕಿನ ಸುಲ್ತಾನಮಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ಜಾನಪದ ಕಲಾವಿದ ಡಾ. ಎಂ.ಆರ್ ರೇವಣಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.  
    ಭದ್ರಾವತಿ, ಸೆ. ೨೨ : ಹಳ್ಳಿಗಾಡಿನ ಕಲೆ ಮೂಲಕ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಲ್ಲಿ ಹೊಸನಗರ ತಾಲೂಕಿನ ಮಾದಾಪುರ ಕಲಾವಿದರು ಯಶಸ್ವಿಯಾಗಿದ್ದಾರೆಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ ಹೇಳಿದರು.
    ಅವರು ಮಾದಾಪುರ ಗ್ರಾಮದಲ್ಲಿ ಶ್ರೀ ಶನಿಪರಮೇಶ್ವರ ಯುವಕ ಸಂಘದವತಿಯಿಂದ ಹಮ್ಮಿಕೊಳ್ಳಲಾಗಿದ್ದ ಭದ್ರಾವತಿ ತಾಲೂಕಿನ ಸುಲ್ತಾನಮಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ಜಾನಪದ ಕಲಾವಿದ ಡಾ. ಎಂ.ಆರ್ ರೇವಣಪ್ಪ ಅವರಿಗೆ ಸನ್ಮಾನ, ಚಲನಚಿತ್ರ ನಟ ದಿವಂಗತ ಡಾ. ವಿಷ್ಣುವರ್ಧನ್ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಹಳ್ಳಿಗಾಡಿನ ಕಲೆ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪಸರಿಸುವಲ್ಲಿ ಮಾದಾಪುರ ಕಲಾವಿದರ ಶ್ರಮ ಹೆಚ್ಚಿನದ್ದಾಗಿದ್ದು, ಇಲ್ಲಿನ ಕಲಾವಿದರು ರಾಜ್ಯಕ್ಕೆ ಮಾದರಿಯಾಗಿದ್ದಾರೆಂದು ಪ್ರಶಂಸೆ ವ್ಯಕ್ತಪಡಿಸಿದರು.
    ಬಟ್ಟೆಮಲ್ಲಪ್ಪ ವ್ಯಾಸ ಮಹರ್ಷಿ ಗುರುಕುಲ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಮಂಜುನಾಥ ಬ್ಯಾಣದ ಮಾತನಾಡಿ, ಶಿಕ್ಷಣವೇ ಶಕ್ತಿ, ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡುವ ಮೂಲಕ ಸಾರ್ಥಕ ಬದುಕಿಗೆ ಪ್ರೇರೇಪಿಸಿ ಸಾಧನೆ ಮಾರ್ಗದಲ್ಲಿ ಸಾಗಲು ಕಾರಣಕರ್ತರಾಗಬೇಕೆಂದರು.
    ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಎಂ.ಆರ್ ರೇವಣಪ್ಪ, ಕುಗ್ರಾಮವಾಗಿರುವ ಮಾದಾಪುರ ಕಲಾವಿದರ ಕಣಜವಾಗಿದ್ದು, ನಮ್ಮ ಕುಟುಂಬದವರು, ಗ್ರಾಮಸ್ಥರು, ಸಹೋದ್ಯೋಗಿಗಳು, ಕಲಾವಿದರು, ಹಿರಿಯುರು ನೀಡಿದ ಸಹಕಾರದಿಂದಾಗಿ ರಾಷ್ಟ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ನಾನು ಗುರುತಿಸಿಕೊಳ್ಳಲು ಕಾರಣವಾಗಿದೆ. ನನ್ನ ಸಾಧನೆಯನ್ನು ಗುರುತಿಸಿ ಹುಟ್ಟೂರಲ್ಲಿ ಸನ್ಮಾನ ನೆರವೇರಿಸಿರುವುದು ತುಂಬಾ ಸಂತಸವನ್ನುಂಟು ಮಾಡಿದೆ ಎಂದರು.
    ಡಾ. ಎಂ.ಆರ್ ರೇವಣಪ್ಪ ಅವರ ತಾಯಿ ಭರಮಮ್ಮ, ಹಿರಿಯ ಕಲಾವಿದರಾದ ಎಂ.ಆರ್ ಲೋಕಪ್ಪ, ಎಂ.ಆರ್ ಗಿರೀಶ್‌ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಮಹಮದ್ ಷರೀಫ್, ಕೃಷ್ಣೋಜಿರಾವ್, ರವಿ, ರಮ್ಯಾ, ಧರ್ಮರಾಜ್, ಈರಪ್ಪ, ಚಂದ್ರಪ್ಪ ಕೊರಟೀಕೆರೆ, ಆರ್. ಪ್ರಕಾಶ್, ಎಂ.ಎಂ ಧರ್ಮಪ್ಪ, ದೇವೇಂದ್ರ, ಇಮಾಮ್,   ಸೋಮಶೇಖರ್, ಗೋಮೇಧ, ನಾಗರಾಜು, ದೇವರಾಜು, ಮಂಜುನಾಥ್, ಮೈಲಾರಿ, ಲಕ್ಷ್ಮಣಪ್ಪ ಹಾಗೂ ಶನಿ ಪರಮೇಶ್ವರ ಯುವಕ  ಸಂಘದ ಹರೀಶ್, ಪ್ರೇಮ್ ಕುಮಾರ್, ಮಂಜು, ಚಿನ್ನು, ವಿನಿ, ವೆಂಕಟೇಶ್, ಮನು, ದೇವರಾಜ್, ಪವನ್ ಹೇಮಂತ್, ತ್ಯಾಗ ಹಾಗು ಮಾದಾಪುರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಹಿರಿಯರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

Wednesday, September 21, 2022

ಭದ್ರಾ ವಲಯ ಮಟ್ಟದ ಕ್ರೀಡಾಕೂಟದಲ್ಲಿ ವಿಇಎಸ್ ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

ಭದ್ರಾವತಿ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರು ಭದ್ರಾ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
    ಭದ್ರಾವತಿ, ಸೆ. ೨೧ : ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರು ಭದ್ರಾ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
    ಮೊಹಮ್ಮದ್ ಸೈಯದ್ ಅಲಿ ಹಾಗೂ ಭಾವನ ವೈಯಕ್ತಿಕ ಪ್ರಶಸ್ತಿ ಹಾಗು ಬಾಲಕ-ಬಾಲಕಿಯರು ವಿವಿಧ ಸ್ಪರ್ಧೆಗಳಲ್ಲಿ ತಂಡ ಪ್ರಶಸ್ತಿ ಹಾಗು ೨೦೨೨-೨೩ನೇ ಸಾಲಿನ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.
    ವಿದ್ಯಾ ಸಂಸ್ಥೆ ಅಧ್ಯಕ್ಷ ಬಿ. ಸಿದ್ದಬಸಪ್ಪ, ಆಡಳಿತಾಧಿಕಾರಿ ಡಾ. ಎಸ್.ಪಿ ರಾಕೇಶ್, ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ, ಎಲ್ಲಾ ವಿಭಾಗಗಳ ಮುಖ್ಯಶಿಕ್ಷಕರು, ದೈಹಿಕ ಶಿಕ್ಷಕರಾದ ರವಿ, ರೇವತಿ ಹಾಗೂ ಶಿಕ್ಷಕ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

ಅಸಂಘಟಿತ ಕಾರ್ಮಿಕರು ಸರ್ಕಾರಿ ಸೌಲಭ್ಯ ಪಡೆಯಲು ಸಂಘಟಿತರಾಗಿ : ಸುಂದರ್ ಬಾಬು

ಭದ್ರಾವತಿ ರೋಟರಿಕ್ಲಬ್ ಸಭಾಂಗಣದಲ್ಲಿ ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟ ಹಾಗು ರೋಟರಿ ಕ್ಲಬ್ ಸಹಯೋಗದೊಂದಿಗೆ ಕಾರ್ಮಿಕ ಇಲಾಖೆ ವತಿಯಿಂದ ನಗರದ ಬ್ಯೂಟಿಷಿಯನ್ ಮಾಲೀಕರು ಹಾಗು ಕೆಲಸಗಾರರಿಗೆ  ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಸೆ. ೨೧: ಅಸಂಘಟಿತ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಂಘಟಿತರಾಗಬೇಕೆಂದು ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು ಹೇಳಿದರು.
    ಅವರು ರೋಟರಿಕ್ಲಬ್ ಸಭಾಂಗಣದಲ್ಲಿ ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟ ಹಾಗು ರೋಟರಿ ಕ್ಲಬ್ ಸಹಯೋಗದೊಂದಿಗೆ ಕಾರ್ಮಿಕ ಇಲಾಖೆ ವತಿಯಿಂದ ನಗರದ ಬ್ಯೂಟಿಷಿಯನ್ ಮಾಲೀಕರು ಹಾಗು ಕೆಲಸಗಾರರಿಗೆ ಹಮ್ಮಿಕೊಳ್ಳಲಾಗಿದ್ದ ಮಾಹಿತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದರು.
    ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳ ಕುರಿತು ಜಾಗೃತಿ ಮೂಡಿಸುವ ಜೊತೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಂಘಟಿತರಾಗುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಂಸದ ಬಿ.ವೈ ರಾಘವೇಂದ್ರ ಮತ್ತು ಶಾಸಕ ಬಿ.ಕೆ ಸಂಗಮೇಶ್ವರ್ ಅವರು ಅಸಂಘಟಿತ ಕಾರ್ಮಿಕರು ಸಂಘಟಿತರಾಗಲು ಹೆಚ್ಚಿನ ಸಹಕಾರ ನೀಡುತ್ತಿದ್ದಾರೆ. ಬ್ಯೂಟಿಷಿಯನ್ ಕೆಲಸಗಾರರನ್ನು ಸಹ ಸರ್ಕಾರ ಅಸಂಘಟಿತ ಕಾರ್ಮಿಕರೆಂದು ಗುರುತಿಸಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಬಲವಾದ ಸಂಘಟನೆ ರೂಪುಗೊಳ್ಳಬೇಕೆಂದರು.
    ಕಾರ್ಮಿಕ ನಿರೀಕ್ಷಕಿ ಮುಮ್ತಾಜ್ ಬೇಗಂ, ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು, ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ರೋಟರಿ ಕ್ಲಬ್ ಅಧ್ಯಕ್ಷ ಅಡವೀಶಯ್ಯ, ಕಾರ್ಯದರ್ಶಿ ಶಿವಕುಮಾರ್, ಪ್ರಮುಖರಾದ ಪದ್ಮಾವತಿ, ಕವಿತ ಸುರೇಶ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ಪದಾಧಿಕಾರಿಗಳಾದ ಕವಿತ, ಸುಮಿತ್ರ, ಶಾರದ, ಶಶಿ, ನೇತ್ರ, ಸವಿತಾ, ಆರತಿ, ವಿಜಯ್ ಸೇರಿದಂತೆ ಬ್ಯೂಟಿಷಿಯನ್ ಮಾಲೀಕರು, ಕೆಲಸಗಾರರು ಪಾಲ್ಗೊಂಡಿದ್ದರು.  

ಕಬ್ಬು ಬೆಳೆಗಾರರು, ಕೃಷಿ ಪಂಪ್‌ಸೆಟ್ ರೈತರಿಂದ ಸೆ.೨೬ರಂದು ಬೆಂಗಳೂರು ವಿಧಾನಸೌಧ ಚಲೋ

ಭದ್ರಾವತಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಜಿಲ್ಲಾ ಸಂಚಾಲಕ ಎನ್.ಎಚ್ ದೇವಕುಮಾರ್ ಮಾತನಾಡಿದರು. 
    ಭದ್ರಾವತಿ, ಸೆ. ೨೧ : ಪ್ರಸಕ್ತ ಸಾಲಿನ ಕಬ್ಬಿನ ಎಫ್‌ಆರ್‌ಪಿ ದರ ನಿಗದಿಯಲ್ಲಿ ರೈತರಿಗೆ ದ್ರೋಹ ಬಗೆದಿರುವ ಕೇಂದ್ರ ಸರ್ಕಾರದ ನೀತಿಯ ವಿರುದ್ಧ, ದರ ಪುನರ್ ಪರಿಶೀಲನೆ ನಡೆಸಲು, ವಿದ್ಯುತ್ ಕಾಯ್ದೆ ಖಾಸಗಿಕರಣ ತಿದ್ದುಪಡಿ ಕೈಬಿಡಬೇಕು ಹಾಗು ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನಿಲ್ಲಿಸುವ ಹುನ್ನಾರ ಕೈಬಿಡಬೇಕೆಂದು ಒತ್ತಾಯಿಸಿ ಸೆ.೨೬ರಂದು ಬೆಂಗಳೂರು ವಿಧಾನಸೌಧ ಚಲೋ ನಡೆಸಲಾಗುತ್ತಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಜಿಲ್ಲಾ ಸಂಚಾಲಕ ಎನ್.ಎಚ್ ದೇವಕುಮಾರ್ ತಿಳಿಸಿದರು.
    ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಬ್ಬು ಬೆಳೆಗಾರರು ಹಾಗು ಕೃಷಿ ಪಂಪ್‌ಸೆಟ್ ರೈತರಿಂದ ಬೆಂಗಳೂರು ವಿಧಾನಸೌಧ ಚಲೋ ನಡೆಸಲಾಗುತ್ತಿದ್ದು, ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರೀಯ ರೈತ ಮುಖಂಡರು ಈ ರ‍್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದರು.
    ಕೇಂದ್ರ ಸರ್ಕಾರ ನವಂಬರ್, ೨೦೨೧ರಂದು ೩ ಕೃಷಿ ಕಾಯ್ದೆಗಳನ್ನು ರದ್ದುಮಾಡಿ ಹೋರಾಟದಲ್ಲಿ ಮಡಿದ ಸುಮಾರು ೭೫೦ ರೈತ ಕುಟುಂಬಗಳಿಗೆ ಪರಿಹಾರ ನೀಡುವ ಜೊತೆಗೆ ಹಲವು ಬೇಡಿಕೆ ಈಡೇರಿಸಿ ಕೊಡುವುದಾಗಿ ಭರವಸೆ ನೀಡಿತ್ತು. ಆದರೆ ಭರವಸೆ ಇದುವರೆಗೂ ಹುಸಿಯಾಗಿ ಉಳಿದು ಕೊಂಡಿದೆ. ಕನಿಷ್ಠ ಬೆಂಬಲ ಬೆಲೆ ನಿಗದಿ ಕಾನೂನು ಜಾರಿ ಮಾಡಲು ಸಮಿತಿ ರಚಿಸಿದ್ದೇವೆ ಎನ್ನುವ ಮೂಲಕ ಹೋರಾಟ ನಡೆಸಿದ ರೈತ ಮುಖಂಡರನ್ನು ಹೊರಗಿಟ್ಟು ಸಮಿತಿ ರಚಿಸಿ ನಾಟಕವಾಡುತ್ತಿದೆ ಎಂದು ಆರೋಪಿಸಿದರು.
    ದೇಶಾದ್ಯಂತ ರೈತ ಚಳುವಳಿಯನ್ನು ಮತ್ತಷ್ಟು ಪ್ರಬಲಗೊಳಿಸಲು ದಕ್ಷಿಣ ಭಾರತದ ಕೇಂದ್ರ ಸ್ಥಾನ ಬೆಂಗಳೂರಿನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರೀಯ ರೈತ ಮುಖಂಡರ ಅಧಿವೇಶನ ಸೆ.೨೫ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಎಂಎಸ್‌ಪಿ ಕಾತರಿ ಕಾನೂನು ಜಾರಿಗೊಳಿಸುವ ಮೂಲಕ ಡಾ. ಸ್ವಾಮಿನಾಥನ್ ವರದಿಯಂತೆ ಬೆಂಬಲ ಬೆಲೆ ನಿಗದಿಗೊಳಿಸಬೇಕು. ಕೃಷಿ ಉತ್ಪನ್ನಗಳ ಹಾಗು ಉಪಕರಣಗಳ ಮೇಲಿನ ಜಿಎಸ್‌ಟಿ ರದ್ದುಪಡಿಸಬೇಕು. ದೇಶದಲ್ಲಿ ಸುಮಾರು ೩.೫ ಲಕ್ಷ ರೈತರು ಕೃಷಿ ಸಂಕಷ್ಟದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊರೋನಾ ಲಾಕ್‌ಡೌನ್, ಅತಿವೃಷ್ಟಿ ಮಳೆ ಹಾನಿ ಸಂಕಷ್ಟದಿಂದ ನಲುಗಿದ್ದಾರೆ. ಈ ಹಿನ್ನಲೆಯಲ್ಲಿ ದೇಶದ ಉದ್ಯಮಿಗಳ ೧೦ ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ರೀತಿಯಲ್ಲಿ ರೈತರ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿದರು.  
    ರಾಜ್ಯದಲ್ಲಿ ಅಂದಾಜು ೧೦ ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಮಳೆ ಹಾನಿಯಿಂದ ರೈತರ ಬೆಳೆ ನಷ್ಟವಾಗಿದ್ದು, ಕೇಂದ್ರ ತಂಡ ನಾಟಕೀಯವಾಗಿ ನಾಮಕಾವಸ್ತೆ ಪರಿಶೀಲನೆ ನಡೆಸಿದೆ. ರೈತರ ಜಮೀನುಗಳಿಗೆ ನಷ್ಟ ಅಂದಾಜು ಮಾಡಲು ವಿಫಲವಾಗಿದೆ. ಕೆಲವು ಜಿಲ್ಲೆಗಳಲ್ಲಿ ಜಿಲ್ಲಾ ಮಂತ್ರಿಗಳು, ಅಧಿಕಾರಿಗಳು ಕಾಣೆಯಾಗಿದ್ದಾರೆ. ಈಗಾಗಲೇ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮಳೆ ಹಾನಿಯಾಗಿರುವ ಹಳ್ಳಿಗಳಿಗೆ ಭೇಟಿ ನೀಡಿ ರೈತರ ನೈಜ ಬೆಳೆ ನಷ್ಟ ಸಮೀಕ್ಷೆ ನಡೆಸಿ ಅಂದಾಜಿನ ಸಂಪೂರ್ಣ ಪರಿಹಾರ ನೀಡಲು ಮುಂದಾಗಬೇಕು. ರೈತರಿಕೆ ಭಿಕ್ಷೆ ರೂಪದ ಪರಿಹಾರ ಬೇಡ, ನೈಜ ನಷ್ಟ ಪರಿಹಾರ ನೀಡಬೇಕು. ಒಂದು ವೇಳೆ ಅವೈಜ್ಞಾನಿಕವಾಗಿ ಸಣ್ಣಪುಟ್ಟ ಮೊತ್ತದ ಚೆಕ್ ನೀಡಿದರೆ ನೀಡಿದರೆ ತಹಸೀಲ್ದಾರ್, ಜಿಲ್ಲಾಧಿಕಾರಿ ಕಛೇರಿ ಮುಂದೆ ಚೆಕ್ ಸುಡುವ ಚಳುವಳಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
    ಪ್ರಸ್ತುತ ರೈತರು ಸಂಕಷ್ಟದಲ್ಲಿದ್ದು, ರೈತರ ಸಾಲ ವಸೂಲಾತಿ ನಿಲ್ಲಿಸಿ ಆರ್‌ಬಿಐ ನಿಯಮದಂತೆ ಸಾಲದ ಮೇಲೆ ಶೇ.೨೫ರಷ್ಟು ಹೆಚ್ಚುವರಿ ಸಾಲ ನೀಡಬೇಕು. ರಾಜ್ಯದಲ್ಲಿ ಜಾರಿಗೊಳಿಸಿರುವ ಎಪಿಎಂಸಿ ಕಾಯ್ದೆಯನ್ನು ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದರು.
    ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘ ಜಿಲ್ಲಾಧ್ಯಕ್ಷ ಕೆ. ಈರಣ್ಣ, ಉಪಾಧ್ಯಕ್ಷ ನಾಗರಾಜ, ಪ್ರಧಾನ ಕಾರ್ಯದರ್ಶಿ ಸಣ್ಣಯ್ಯ, ಕಾರ್ಯದರ್ಶಿ ಬಿ.ಎಚ್ ವಸಂತ, ಖಜಾಂಚಿ ಆರ್. ಕೃಷ್ಣೋಜಿರಾವ್, ಗೊಂದಿ ಜಯರಾಂ, ದೇವೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tuesday, September 20, 2022

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸೆ.೨೩ರಂದು ಚುನಾವಣೆ :

ಅನುಸುಧಾ ಮೋಹನ್ ಪಳನಿ ಅಧ್ಯಕ್ಷೆ ಬಹುತೇಕ ಖಚಿತ

ಅನುಸುಧಾ ಮೋಹನ್
    ಭದ್ರಾವತಿ, ಸೆ. ೨೦: ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸೆ. ೨೩ರಂದು ಚುನಾವಣೆ ನಡೆಯಲಿದ್ದು, ಸಾಮಾನ್ಯ ಮಹಿಳೆಗೆ ಮೀಸಲಾದ ಸ್ಥಾನಕ್ಕೆ ವಾರ್ಡ್ ನಂ.೧೩ರ ಸದಸ್ಯೆ ಅನುಸುಧಾ ಮೋಹನ್ ಪಳನಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
    ನಗರಸಭೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್  ಮೀಸಲಾತಿಯ ಮೊದಲ ೩೦ ತಿಂಗಳ ಅವಧಿಯನ್ನು ಆಂತರಿಕವಾಗಿ ಹಂಚಿಕೆ ಮಾಡಿಕೊಂಡಿದ್ದು, ಅದರಂತೆ ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನದ ಮೊದಲ ೧೦ ತಿಂಗಳು ವಾರ್ಡ್ ನಂ.೨ರ ಗೀತಾರಾಜ್‌ಕುಮಾರ್ ಅಧಿಕಾರ ನಡೆಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇದೀಗ ೧೦ ತಿಂಗಳ ೨ನೇ ಅವಧಿಗೆ ಸೆ.೨೩ರಂದು ಚುನಾವಣೆ ನಡೆಯಲಿದೆ.
    ಅಧ್ಯಕ್ಷ ಸ್ಥಾನಕ್ಕೆ ವಾರ್ಡ್ ನಂ.೧೩ರ ಸದಸ್ಯೆ ಅನುಸುಧಾ ಮೋಹನ್ ಪಳನಿ, ವಾರ್ಡ್ ನಂ. ೩೪ರ ಲತಾ ಚಂದ್ರಶೇಖರ್ ಹಾಗು ವಾರ್ಡ್ ನಂ.೩೫ರ ಶೃತಿ ವಸಂತ್ ಮೂರು ಮಂದಿ ಪೈಪೋಟಿಗೆ ಮುಂದಾಗಿದ್ದಾರೆ. ಶಾಸಕ ಬಿ.ಕೆ ಸಂಗಮೇಶ್ವರ್ ನಿರ್ಧಾರವೇ ಅಂತಿಮವಾಗಿದ್ದು, ಅನುಸುಧಾ ಮೋಹನ್ ಪಳನಿ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ.
ಪ್ರಸ್ತುತ ನಗರಸಭೆಯಲ್ಲಿ ಕಾಂಗ್ರೆಸ್-೧೮, ಜೆಡಿಎಸ್-೧೨, ಬಿಜೆಪಿ-೦೪ ಮತ್ತು ಪಕ್ಷೇತರ-೦೧ ಸ್ಥಾನ ಹೊಂದಿದೆ. ಉಳಿದಂತೆ ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು, ಚನ್ನಪ್ಪ ಮುಂದುವರೆಯಲಿದ್ದಾರೆ.
    ಸಾಮಾಜಿಕ ಜಾಲತಾಣಗಳಲ್ಲಿ ರಾಜೀನಾಮೆ ಪತ್ರ:
    ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ವಾರ್ಡ್ ನಂ.೩೫ರ ಸದಸ್ಯೆ ಶೃತಿ ವಸಂತ್ ಅವರು ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಶೃತಿ ವಸಂತ್ ಅವರು ಸೆ.೧೨ರಂದು ಜಿಲ್ಲಾಧಿಕಾರಿಗಳಿಗೆ ರಾಜೀನಾಮೆ ಸಲ್ಲಿಸಿರುವ ಪತ್ರ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಯಾವುದೇ ಸ್ಪಷ್ಟನೆ ವ್ಯಕ್ತವಾಗಿಲ್ಲ.
    ಸೆ.೨೩ರಂದು ಚುನಾವಣೆ :
    ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸೆ.೨೩ರಂದು ಚುನಾವಣೆ ನಡೆಯಲಿದ್ದು, ಉಪವಿಭಾಗಾಧಿಕಾರಿ ಎಸ್.ಬಿ ದೊಡ್ಡಗೌಡರ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.
    ಬೆಳಿಗ್ಗೆ ೧೦ ರಿಂದ ೧೧ ಗಂಟೆವರೆಗೆ ನಾಮಪತ್ರ ಸಲ್ಲಿಕೆ, ಮಧ್ಯಾಹ್ನ ೧ ಗಂಟೆಗೆ ಪರಿಶೀಲನೆ, ೧.೧೫ರ ವರೆಗೆ ನಾಮಪತ್ರ ಹಿಂಪಡೆಯಲು ಕಾಲಾವಕಾಶ, ಚುನಾವಣೆ ಅಗತ್ಯವಿದ್ದಲ್ಲಿ ೧.೩೦ಕ್ಕೆ ನಡೆಯಲಿದೆ.