ಭದ್ರಾವತಿ, ಸೆ. ೨೪: ಕೇಂದ್ರ ಸರ್ಕಾರದ ವಿದ್ಯುಚ್ಛಕ್ತಿ ಖಾಸಗೀಕರಣ ಮತ್ತು ರೈತರ ಐ.ಪಿ ಸೆಟ್ಟುಗಳಿಗೆ ಮೀಟರ್ ಅಳವಡಿಸುವ ರೈತ ವಿರೋಧಿ ನೀತಿಯನ್ನು ಖಂಡಿಸಿ ಸೆ.೨೬ರಂದು ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಜಿಲ್ಲಾ ಶಾಖೆವತಿಯಿಂದ ರೈತರ ಬೃಹತ್ ಪ್ರತಿಭಟನೆ ಮತ್ತು ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆ ಮತ್ತು ಸಭೆಯಲ್ಲಿ ರೈತರು, ಮಹಿಳೆಯರು, ಕಾರ್ಮಿಕರು, ವಿದ್ಯಾರ್ಥಿಗಳು, ಯುವಕ-ಯುವತಿಯರು, ಚಿಂತಕರು, ಬರಹಗಾರರು ಸೇರಿದಂತೆ ಸಮಸ್ತ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷ ಎಚ್.ಪಿ ಹಿರಿಯಣಯ್ಯ, ಕಾರ್ಯದರ್ಶಿ ರಾಮಚಂದ್ರರಾವ್ ಹಾಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ವಿ ವೀರೇಶ್ ಕೋರಿದ್ದಾರೆ.
ಭದ್ರಾವತಿ, ಸೆ. ೨೪ : ನಗರ ವ್ಯಾಪ್ತಿಯ ೭ ನ್ಯಾಯಬೆಲೆ ಅಂಗಡಿಗಳನ್ನು ವ್ಯಾಪಕ ಭ್ರಷ್ಟಾಚಾರ ಹಿನ್ನಲೆಯಲ್ಲಿ ಅಮಾನತ್ತುಗೊಳಿಸಲಾಗಿದ್ದು, ಈ ನ್ಯಾಯಬೆಲೆ ಅಂಗಡಿಗಳನ್ನು ರದ್ದು ಮಾಡುವಂತೆ ಆಗ್ರಹಿಸಿ ಸೆ.೨೬ರಂದು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ನಗರ ವ್ಯಾಪ್ತಿಯ ಸುಪ್ರೀಂ, ನ್ಯಾಷನಲ್ ಮತ್ತು ಜನತಾ ನ್ಯಾಯಬೆಲೆ ಅಂಗಡಿ ಸೇರಿದಂತೆ ಒಟ್ಟು ೭ ನ್ಯಾಯಬೆಲೆ ಅಂಗಡಿಗಳನ್ನು ವ್ಯಾಪಕ ಭ್ರಷ್ಟಾಚಾರದ ಹಿನ್ನಲೆಯಲ್ಲಿ ಅಮಾನತ್ತುಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಈ ನ್ಯಾಯಬೆಲೆ ಅಂಗಡಿಗಳನ್ನು ರದ್ದು ಮಾಡುವಂತೆ ಆಗ್ರಹಿಸಿ ಬೆಳಿಗ್ಗೆ ೧೧.೩೦ಕ್ಕೆ ಜನತಾದಳ(ಸಂಯುಕ್ತ) ಕರ್ನಾಟಕ ವತಿಯಿಂದ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ಹಾಗು ಕೆಆರ್ಎಸ್ ಪಕ್ಷ ಸಹಕಾರದೊಂದಿಗೆ ಬಿ.ಎಚ್ ರಸ್ತೆ ಅಂಡರ್ಬಿಡ್ಜ್ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ತಾಲೂಕು ಕಛೇರಿವರೆಗೂ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ಪಾದಯಾತ್ರೆ ನಂತರ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ಮನವಿ ಮಾಡಿದ್ದಾರೆ.
ಭದ್ರಾವತಿ ಬಿ.ಎಚ್ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಬಿ.ಕೆ ಸಂಗಮೇಶ್ವರ ಉದ್ಘಾಟಿಸಿದರು.
ಭದ್ರಾವತಿ, ಸೆ. ೨೪ : ಪೌರಕಾರ್ಮಿಕರಲ್ಲಿ ಬಹಳಷ್ಟು ಮಂದಿ ಇಂದಿಗೂ ದುಶ್ಚಟಗಳಿಂದ ಹೊರಬಂದಿಲ್ಲ. ಇದರಿಂದಾಗಿ ಅವರ ಕುಟುಂಬಗಳಲ್ಲಿ ನೆಮ್ಮದಿ ಕಾಣಲು ಸಾಧ್ಯವಾಗುತ್ತಿಲ್ಲ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ವಿಷಾದ ವ್ಯಕ್ತಪಡಿಸಿದರು.
ಅವರು ನಗರದ ಬಿ.ಎಚ್ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮಾಜದಲ್ಲಿ ಶ್ರಮಜೀವಿಗಳಾಗಿರುವ ಪೌರಕಾರ್ಮಿಕರು ಇಂದಿಗೂ ನ್ಯಾಯಯುತವಾದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಅವರಿಗೆ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿದರು.
ಬಹಳಷ್ಟು ಪೌರಕಾರ್ಮಿಕರು ಇಂದಿಗೂ ಬದಲಾಗಿಲ್ಲ. ದುಶ್ಚಟಗಳಿಂದ ದೂರವಿದ್ದು, ಒಳ್ಳೆಯ ಗುಣಗಳನ್ನು ಮೈಗೂಡಿಸಿಕೊಳ್ಳುವ ಜೊತೆಗೆ ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕು. ಕುಟುಂಬದಲ್ಲಿ ಶಾಂತಿ, ನೆಮ್ಮದಿ ಕಂಡುಕೊಳ್ಳಬೇಕು. ಪೌರಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನಿಸಲಾಗುತ್ತಿದೆ. ಪೌರಕಾರ್ಮಿಕರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇವುಗಳ ಸದುಪಯೋಗಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.
ನಗರಸಭೆ ಉಪಾಧ್ಯಕ್ಷ ಚನ್ನಪ್ಪ ಮಾತನಾಡಿ, ಪೌರಕಾರ್ಮಿಕರು ತಮ್ಮ ಆರೋಗ್ಯಕ್ಕೆ ಹೆಚ್ಚಿನ ಗಮನ ನೀಡಬೇಕು. ಬಾಬಾ ಸಾಹೇಬ್ ಅಂಬೇಡ್ಕರ್ರವರು ಈ ದೇಶಕ್ಕೆ ನೀಡಿರುವ ಸಂವಿಧಾನದ ಫಲವಾಗಿ ಪೌರಕಾರ್ಮಿಕರು ಸಹ ನೆಮ್ಮದಿಯಾಗಿ ಬದಕಲು ಸಾಧ್ಯವಾಗಿದೆ. ಅಂಬೇಡ್ಕರ್ರವರ ಆಶಯದಂತೆ ಸಮಾಜದಲ್ಲಿ ಪ್ರತಿಯೊಬ್ಬರಿಗೂ ಹೋರಾಟ, ಸಂಘಟನೆ ಮತ್ತು ಶಿಕ್ಷಣ ಅಗತ್ಯವಾಗಿದೆ. ಇದನ್ನು ಪೌರಕಾರ್ಮಿಕರು ಅರಿತುಕೊಂಡು ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಬೇಕೆಂದರು.
ಪೌರಾಯುಕ್ತ ಮನುಕುಮಾರ್ ಮಾತನಾಡಿ, ನಾವುಗಳು ಸಮಾಜದಲ್ಲಿ ಹೆಚ್ಚಿನ ಶ್ರಮ ಜೀವಿಗಳಾಗಿದ್ದೇವೆ. ಆದರೆ ಶ್ರಮಕ್ಕೆ ತಕ್ಕಂತೆ ಗೌರವ ಲಭಿಸುತ್ತಿಲ್ಲ. ನಮ್ಮ ವೃತ್ತಿ ಗೌರವ, ಸ್ವಾಭಿಮಾನಕ್ಕೆ ಧಕ್ಕೆ ಬರದಂತೆ ನಡೆದುಕೊಳ್ಳಬೇಕಾಗಿದೆ. ಕಾಲಘಟ್ಟಗಳು ಬದಲಾದಂತೆ ನಾವುಗಳು ಸಹ ಬದಲಾಗಬೇಕಾಗಿದೆ. ನಮ್ಮ ಮಕ್ಕಳನ್ನು ಸಹ ವಿದ್ಯಾವಂತರನ್ನಾಗಿ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸುವಂತಾಗಬೇಕು. ಆಗ ಮಾತ್ರ ನಮ್ಮ ವೃತ್ತಿ ಬದುಕು ಸಾರ್ಥಕವಾಗುತ್ತದೆ ಎಂದರು.
ನಗರಸಭೆ ಸದಸ್ಯರಾದ ಬಿ.ಕೆ ಮೋಹನ್, ಜಾರ್ಜ್ ಸೇರಿದಂತೆ ಇನ್ನಿತರರು ಮಾತನಾಡಿದರು. ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ಕುಮಾರ್, ಜಾರ್ಜ್, ಆರ್. ಮೋಹನ್ಕುಮಾರ್, ಉದಯ್ಕುಮಾರ್, ಲತಾ ಚಂದ್ರಶೇಖರ್, ಟಿಪ್ಪು ಸುಲ್ತಾನ್, ಕೋಟೇಶ್ವರರಾವ್, ಬಸವರಾಜ ಬಿ. ಆನೇಕೊಪ್ಪ, ಮಣಿ ಎಎನ್ಎಸ್, ಮಂಜುಳ ಸುಬ್ಬಣ್ಣ, ಅನುಪಮ ಚನ್ನೇಶ್, ಶಶಿಕಲಾ ನಾರಾಯಣಪ್ಪ, ಶೃತಿ ವಸಂತ್, ನಾಗರತ್ನ, ಬಿ.ಎಂ ಮಂಜುನಾಥ್, ರಿಯಾಜ್ ಅಹಮದ್ ಸೇರಿದಂತೆ ನಗರಸಭೆ ಬಹುತೇಕ ಸದಸ್ಯರು, ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ್ ಹಾಗು ಪದಾಧಿಕಾರಿಗಳು ಉಪಸ್ಥಿತರಿದ್ದರು. ಪೌರಕಾರ್ಮಿಕರಿಂದ ನಾಟಕ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ನೂತನ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ ಅಧ್ಯಕ್ಷತೆ ವಹಿಸಿದ್ದರು. ಪರಿಸರ ಅಭಿಯಂತರ ಪ್ರಭಾಕರ್ ಸ್ವಾಗತಿಸಿದರು. ನರಸಿಂಹಮೂರ್ತಿ ಕಾರ್ಯಕ್ರಮ ನಿರೂಪಿಸಿದರು.
ಭದ್ರಾವತಿಯಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಶನಿವಾರ ರಾಷ್ಟ್ರಪಿತ ಮಹಾತ್ಮಗಾಂಧಿ ಹಾಗು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ರವರ ಭಾವಚಿತ್ರ ಹಾಗು ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು.
ಭದ್ರಾವತಿ, ಸೆ. ೨೪: ಪ್ರತಿ ವರ್ಷದಂತೆ ಈ ಬಾರಿ ಸಹ ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಶನಿವಾರ ರಾಷ್ಟ್ರಪಿತ ಮಹಾತ್ಮಗಾಂಧಿ ಹಾಗು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ರವರ ಭಾವಚಿತ್ರ ಹಾಗು ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು.
ಬೆಳಿಗ್ಗೆ ನಗರದ ರಂಗಪ್ಪ ವೃತ್ತದಿಂದ ಆರಂಭಗೊಂಡ ಮೆರವಣಿಗೆ ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ ಹಾಗು ಅಂಬೇಡ್ಕರ್ ವೃತ್ತದ ಮೂಲಕ ಮಧ್ಯಾಹ್ನ ೧ ಗಂಟೆಗೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪ ತಲುಪಿತು.
ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ನೂತನ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ಕುಮಾರ್, ಪೌರಾಯುಕ್ತ ಮನುಕುಮಾರ್ ಹಾಗು ನಗರಸಭಾ ಸದಸ್ಯರು, ಕಂದಾಯಾಧಿಕಾರಿ ರಾಜ್ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್, ಸಮುದಾಯ ಸಂಘಟನಾ ಅಧಿಕಾರಿ ಸುವಾಸಿನಿ ಸೇರಿದಂತೆ ಇನ್ನಿತರ ಅಧಿಕಾರಿಗಳು, ಸಿಬ್ಬಂದಿಗಳು, ಕರ್ನಾಟಕ ರಾಜ್ಯ ಪೌರನೌಕರರ ಪೌರ ಸೇವಾ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಡಿಎಸ್ಎಸ್ ಪ್ರಮುಖರಾದ ಸತ್ಯ, ಚಿನ್ನಯ್ಯ, ನಗರದ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಪೌರಕಾರ್ಮಿಕರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಭದ್ರಾವತಿಯಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಶನಿವಾರ ರಾಷ್ಟ್ರಪಿತ ಮಹಾತ್ಮಗಾಂಧಿ ಹಾಗು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ರವರ ಭಾವಚಿತ್ರ ಹಾಗು ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಪೌರಾಯುಕ್ತ ಮನುಕುಮಾರ್ ಪೌರಕಾರ್ಮಿಕರೊಂದಿಗೆ ಸಂಭ್ರಮಿಸಿದರು.
ಭದ್ರಾವತಿ, ಸೆ. ೨೩: ಪ್ರತಿ ವರ್ಷದಂತೆ ಈ ಬಾರಿ ಸಹ ಪೌರಕಾರ್ಮಿಕರ ದಿನಾಚರಣೆ ಸೆ.೨೪ರಂದು ನಡೆಯಲಿದ್ದು, ಈ ಸಂಬಂಧ ಬೆಳಿಗ್ಗೆ ೯ ಗಂಟೆಗೆ ನಗರದ ರಂಗಪ್ಪ ವೃತ್ತದಿಂದ ಮೆರವಣಿಗೆ ನಡೆಯಲಿದೆ.
ಬಿ.ಎಚ್ ರಸ್ತೆ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್, ಉಪಾಧ್ಯಕ್ಷ ಚನ್ನಪ್ಪ ಹಾಗು ನಗರಸಭಾ ಸದಸ್ಯರು, ಕರ್ನಾಟಕ ರಾಜ್ಯ ಪೌರನೌಕರರ ಪೌರ ಸೇವಾ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ನಗರದ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಪೌರಕಾರ್ಮಿಕರು ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.
ಭದ್ರಾವತಿ ರಂಗಪ್ಪ ವೃತ್ತದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಎಎಪಿ ಪಕ್ಷದ ಆಕಾಂಕ್ಷಿ ಅಭ್ಯರ್ಥಿ ಆನಂದ್(ಮಾರುತಿ ಮೆಡಿಕಲ್) ಅವರ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿದರು.
ಭದ್ರಾವತಿ, ಸೆ. ೨೩: ರಾಜ್ಯದಲ್ಲಿರುವ ಜೆಸಿಬಿ ಪಕ್ಷಗಳನ್ನು ಅಧಿಕಾರದಿಂದ ದೂರವಿಟ್ಟು, ಆಮ್ ಆದ್ಮಿ ಪಾರ್ಟಿ ಬೆಂಬಲಿಸುವಂತೆ ಪಕ್ಷದ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.
ಅವರು ನಗರದ ರಂಗಪ್ಪ ವೃತ್ತದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಆಕಾಂಕ್ಷಿ ಅಭ್ಯರ್ಥಿ ಆನಂದ್(ಮಾರುತಿ ಮೆಡಿಕಲ್) ಅವರ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಪ್ರಮುಖವಾಗಿ ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿದ್ದು, ನಾನು ಈ ೩ ಪಕ್ಷಗಳ ರಾಜಕೀಯ ಸಿದ್ದಾಂತಗಳನ್ನು ಚನ್ನಾಗಿ ಅರಿತುಕೊಂಡಿದ್ದೇನೆ. ಇವು ಸರ್ವಾಧಿಕಾರಿ ಧೋರಣೆಯೊಂದಿಗೆ ಭ್ರಷ್ಟಾಚಾರ, ಸ್ವಾರ್ಥ ರಾಜಕಾರಣ ನಡೆಸುತ್ತಿವೆ. ಅಲ್ಲದೆ ಜನರ ಹಿತಾಸಕ್ತಿಗಳನ್ನು ಕಡೆಗಣಿಸಿವೆ. ಸುಳ್ಳು ಭರವಸೆಗಳನ್ನು ನೀಡಿ ವಂಚಿಸುತ್ತಿವೆ ಎಂದು ಆರೋಪಿಸಿದರು.
ಆಮ್ ಆದ್ಮಿ ಪಾರ್ಟಿ ಜನರ ಪಕ್ಷವಾಗಿದೆ. ಉಚಿತ ಶಿಕ್ಷಣ, ಆರೋಗ್ಯ, ವಿದ್ಯುತ್ ಸೇರಿದಂತೆ ಮೂಲ ಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ. ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ನಡೆದುಕೊಳ್ಳುತ್ತಿರುವ ದೇಶದ ಏಕೈಕ ಪಕ್ಷ ಇದಾಗಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಇದಕ್ಕೆ ಉದಾಹರಣೆಯಾಗಿದೆ. ರಾಜ್ಯದ ಜನರು ಜೆಸಿಬಿ ಪಕ್ಷಗಳನ್ನು ತಿರಸ್ಕಾರ ಮಾಡಿ ಆಮ್ ಆದ್ಮಿ ಪಾರ್ಟಿ ಬೆಂಬಲಿಸುವಂತೆ ಮನವಿ ಮಾಡಿದರು.
ಪಕ್ಷದ ರಾಜ್ಯಧ್ಯಕ್ಷ ಪೃಥ್ವಿರೆಡ್ಡಿ ಮಾತನಾಡಿ, ಪ್ರಸ್ತುತ ಬೆಂಗಳೂರಿನ ಸ್ಥಿತಿ ಚಿಂತಾಜನಕವಾಗಿದೆ. ಕೆರೆಗಳ ಮೇಲೆ, ರಾಜಕಾಲುವೆಗಳ ಮೇಲೆ ಅಕ್ರಮವಾಗಿ ಮನೆ, ಕಟ್ಟಡಗಳನ್ನು ನಿರ್ಮಿಸಿಕೊಂಡಿರುವ ಪರಿಣಾಮ ಎದುರಾಗಿರುವ ಸಮಸ್ಯೆಗಳಿಂದ ಜನರು ರೋಸಿ ಹೋಗಿದ್ದಾರೆ. ಮತ್ತೊಂದೆಡೆ ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ. ಬಡವರು ಬದುಕುವುದು ಅಸಾಧ್ಯವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಆಮ್ ಆದ್ಮಿ ಪಾರ್ಟಿ ರಾಜ್ಯಕ್ಕೆ ಆಶಾಕಿರಣವಾಗಿದೆ ಎಂದರು.
ರಾಜ್ಯದಲ್ಲಿ ಪರ್ಯಾಯ ರಾಜಕಾರಣಕ್ಕೆ ಎಎಪಿ ನಾಂದಿ ಹಾಡಲಿದೆ. ರಾಜ್ಯದಲ್ಲೆಡೆ ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಕಳೆದ ಸುಮಾರು ೧ ತಿಂಗಳಿನಿಂದ ಗ್ರಾi ಸಂಪರ್ಕ ಅಭಿಯಾನ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಉತ್ತಮ ಭವಿಷ್ಯ ನಿರೀಕ್ಷಿಸುವ ಪ್ರತಿಯೊಬ್ಬರಿಗೂ ಪಕ್ಷದಲ್ಲಿ ಅವಕಾಶವಿದೆ ಎಂದರು.
ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್ ಜೈನ್, ಸ್ಥಳೀಯ ಪ್ರಮುಖರಾದ ಆನಂದ್(ಮೆಡಿಕಲ್), ಎಚ್. ರವಿಕುಮಾರ್, ರೇಷ್ಮಾಬಾನು, ಎ. ಮಸ್ತಾನ್, ಡಿ.ಎಂ ಚಂದ್ರಪ್ಪ, ಪರಮೇಶ್ವರಚಾರ್, ಎನ್.ಪಿ ಜೋಸೆಫ್, ಪರಮೇಶ್ವರನಾಯ್ಕ್, ಭಾಗ್ಯಮ್ಮ, ಜೋಸೆಫ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿ ನಗರಸಭೆ ನೂತನ ಅಧ್ಯಕ್ಷರಾಗಿ ವಾರ್ಡ್ ನಂ. ೧೩ರ ಸದಸ್ಯೆ ಅನುಸುಧಾ ಮೋಹನ್ ಶುಕ್ರವಾರ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಆಯ್ಕೆಯಾದರು.
ಭದ್ರಾವತಿ, ಸೆ.೨೩: ನಗರಸಭೆ ನೂತನ ಅಧ್ಯಕ್ಷರಾಗಿ ವಾರ್ಡ್ ನಂ. ೧೩ರ ಸದಸ್ಯೆ ಅನುಸುಧಾ ಮೋಹನ್ ಶುಕ್ರವಾರ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಆಯ್ಕೆಯಾದರು.
ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಅನುಸುಧಾ ಮೋಹನ್, ಜೆಡಿಎಸ್ ಪಕ್ಷದಿಂದ ವಾರ್ಡ್ ನಂ.೨೧ರ ವಿಜಯ ಹಾಗು ಬಿಜೆಪಿ ಪಕ್ಷದಿಂದ ವಾರ್ಡ್ ನಂ.೪ರ ಅನುಪಮ ಚನ್ನೇಶ್ ಸ್ಪರ್ಧಿಸಿದ್ದರು. ೩೫ ನಗರಸಭಾ ಸದಸ್ಯರು, ೧ ವಿಧಾನಸಭಾ ಸದಸ್ಯರು ಮತ್ತು ೧ ಲೋಕಸಭಾ ಸದಸ್ಯರು ಒಟ್ಟು ೩೭ ಮತಗಳಿದ್ದು, ಈ ಪೈಕಿ ಲೋಕಸಭಾ ಸದಸ್ಯರು ಮತ ಚಲಾಯಿಸಿಲ್ಲ. ಉಳಿದ ೩೬ ಮತಗಳ ಪೈಕಿ ಅನುಸುಧಾ ಮೋಹನ್ ಪಳನಿ ೨೦, ವಿಜಯ ೧೨ ಹಾಗು ಅನುಪಮ ಚನ್ನೇಶ್ ೪ ಮತಗಳನ್ನು ಪಡೆದುಕೊಂಡರು. ಒಟ್ಟು ೮ ಮತಗಳ ಅಂತರದಿಂದ ಅನುಸುಧಾ ಮೋಹನ್ ಪಳನಿ ಆಯ್ಕೆಯಾಗಿದ್ದಾರೆ.
ತಮಿಳು ವನ್ನಿಯರ್ ಗೌಂಡರ್ ಸಮುದಾಯಕ್ಕೆ ಸೇರಿದ ಅನುಸುಧಾ ಮೊದಲ ಬಾರಿಗೆ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದು, ಮೊದಲ ಅವಧಿಯಲ್ಲಿಯೇ ಅಧ್ಯಕ್ಷರಾಗಿದ್ದಾರೆ. ಇವರ ಮಾವ ಕೆ. ಪಳನಿ ಅವರು ಸುಮಾರು ೪ ಬಾರಿ ಪುರಸಭಾ ಸದಸ್ಯರಾಗಿದ್ದು, ಇವರ ರಾಜಕೀಯ ಅನುಭವ ಅನುಸುಧಾ ಅವರಿಗೆ ಮಾರ್ಗದರ್ಶನವಾಗಿದೆ.
ವನ್ನಿಯರ್ಗೆ ಪ್ರತಿಸ್ಪರ್ಧಿ ಮೊದಲಿಯಾರ್:
ತಮಿಳು ಜನಾಂಗದ ಒಳಪಂಗಡಗಳಾಗಿರುವ ವನ್ನಿಯರ್ ಗೌಂಡರ್ ಮತ್ತು ಆಗಮುಡಿ ಮೊದಲಿಯಾರ್ ಸಮಾಜದ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿರುವುದು ವಿಶೇಷವಾಗಿತ್ತು. ಅನುಸುಧಾ ವನ್ನಿಯರ್ ಗೌಂಡರ್ ಸಮುದಾಯಕ್ಕೆ ಸೇರಿದ್ದು, ಇವರ ಪ್ರತಿಸ್ಪರ್ಧಿ ವಿಜಯ ಆಗಮುಡಿ ಮೊದಲಿಯಾರ್ ಸಮುದಾಯಕ್ಕೆ ಸೇರಿದ್ದಾರೆ.
ಪ್ರಸ್ತುತ ನಗರಸಭೆಯಲ್ಲಿ ಕಾಂಗ್ರೆಸ್-೧೮, ಜೆಡಿಎಸ್-೧೨, ಬಿಜೆಪಿ-೦೪ ಮತ್ತು ಪಕ್ಷೇತರ-೦೧ ಸ್ಥಾನ ಹೊಂದಿದೆ. ಚುನಾವಣಾಧಿಕಾರಿಯಾಗಿ ಉಪವಿಭಾಗಾಧಿಕಾರಿ ಎಸ್.ಬಿ ದೊಡ್ಡೇಗೌಡರ್ ಕಾರ್ಯ ನಿರ್ವಹಿಸಿದರು. ಪೌರಾಯುಕ್ತ ಮನುಕುಮಾರ್ ಉಪಸ್ಥಿತರಿದ್ದರು.
ನಾಡಹಬ್ಬ ದಸರಾಗೆ ಹೊಸ ಅಧ್ಯಕ್ಷರು :
ನಗರಸಭೆ ವತಿಯಿಂದ ಸೆ.೨೬ರಿಂದ ನಾಡಹಬ್ಬ ದಸರಾ ಆಚರಣೆ ನಡೆಯಲಿದ್ದು, ಉಪಾಧ್ಯಕ್ಷರಾದ ಚನ್ನಪ್ಪ ಅವರು ಸುಮಾರು ೧ ತಿಂಗಳಿನಿಂದ ಪ್ರಭಾರ ಅಧ್ಯಕ್ಷರಾಗಿದ್ದರು. ಇದೀಗ ನಾಡಹಬ್ಬ ದಸರಾ ಆಚರಣೆ ನೂತನ ಅಧ್ಯಕ್ಷೆ ಅನುಸುಧಾ ಅವರ ನೇತೃತ್ವದಲ್ಲಿ ನಡೆಯಲಿದೆ. ಸುಮಾರು ೧೦ ದಿನಗಳ ದಸರಾ ಆಚರಣೆ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ದತೆಗಳು ನಡೆದಿವೆ.
ನೂತನ ಅಧ್ಯಕ್ಷರಿಗೆ ಶಾಸಕ ಬಿ.ಕೆ ಸಂಗಮೇಶ್ವರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ಕುಮಾರ್ ಹಾಗು ಜಂಬೂ ಮಹರ್ಷಿ ವನ್ನಿಯರ್ ಗೌಂಡರ್ ಸಮಾಜದ ರಾಜ್ಯಾಧ್ಯಕ್ಷ ನಂದಕುಮಾರ್, ತಾಲೂಕು ಅಧ್ಯಕ್ಷ ಮಣಿ ಎಎನ್ಎಸ್, ತಮಿಳು ಸಮಾಜದ ತಾಲೂಕು ಅಧ್ಯಕ್ಷ ರವಿ, ಆಗಮುಡಿ ಮೊದಲಿಯಾರ್ ಸಮಾಜದ ಅಧ್ಯಕ್ಷ ಕಣ್ಣಪ್ಪ, ಕಾಂಗ್ರೆಸ್ ಪಕ್ಷದ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಮಹಿಳಾ ಘಟಕದ ಅಧ್ಯಕ್ಷೆ ಹೇಮಾವತಿ, ಯುವ ಘಟಕದ ಅಧ್ಯಕ್ಷರಾದ ಅಫ್ತಾಬ್ ಅಹಮದ್, ವಿನೋದ್ ಸೇರಿದಂತೆ ಪಕ್ಷದ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಇನ್ನಿತರರು ಅಭಿನಂದಿಸಿದರು.
ಅನುಸುಧಾ ಅವರು ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ನಗರಸಭೆ ಮುಂಭಾಗ ಪಕ್ಷದ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ನಂತರ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಿ ಮಹಾತ್ಮಗಾಂಧಿ ವೃತ್ತದಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಕ್ಷೇತ್ರದಲ್ಲಿ ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ವನ್ನಿಯರ್ ಗೌಂಡರ್ ಸಮಾಜವನ್ನು ಗುರುತಿಸಿ ರಾಜಕೀಯದಲ್ಲಿ ಅವರಿಗೂ ಸೂಕ್ತ ಸ್ಥಾನಮಾನ ನೀಡಿರುವುದು ಸಂತಸ ಸಂಗತಿಯಾಗಿದೆ. ಗೌಂಡರ್ ಸಮಾಜ ಎಲ್ಲಾ ಸಮುದಾಯಗಳೊಂದಿಗೂ ಸೌಹಾರ್ದತೆ ಕಂಡುಕೊಂಡಿದ್ದು, ಇಂತಹ ಸಮುದಾಯಕ್ಕೆ ಅವಕಾಶ ಕಲ್ಪಿಸಿಕೊಟ್ಟಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಕಾಂಗ್ರೆಸ್ ಪಕ್ಷದ ಎಲ್ಲಾ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.