Wednesday, September 28, 2022

ನಾಡಹಬ್ಬ ದಸರಾ : ಸೆ.೨೯ರಂದು ಪರಿಸರ ದಸರಾ


    ಭದ್ರಾವತಿ, ಸೆ. ೨೮ : ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಅಂಗವಾಗಿ ಸೆ.೨೯ರಂದು ಪರಿಸರ ದಸರಾ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
    ಬೆಳಿಗ್ಗೆ ೭ ಗಂಟೆಗೆ ಮಾಧವಚಾರ್ ವೃತ್ತದ ಎಡ ಮತ್ತು ಬಲ ಬದಿಯ ನದಿ ತಟದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಭದ್ರಾ ನದಿ ತಟದಲ್ಲಿ ಸ್ವಚ್ಛತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನಂತರ ೧೧ ಗಂಟೆಗೆ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಿಂದ ಪರಿಸರ ಜನಜಾಗೃತಿ ಜಾಥಾ ಮತ್ತು ಕಲಾ ತಂಡಗಳಿಂದ ಪರಿಸರ ಜಾಗೃತಿ ಕುರಿತು ಬೀದಿ ನಾಟಕ ಪ್ರದರ್ಶನ ನಡೆಯಲಿದೆ.
    ಹಳೇನಗರದ ಕನಕಮಂಟಪ ಮೈದಾನದಲ್ಲಿ ಸಂಜೆ ೬.೩೦ಕ್ಕೆ ಗಾಂಧಿ ಕಂಡ ಕನಸು ಸ್ವಚ್ಛತೆ ಕುರಿತು ನಗರಸಭಾ ಪೌರ ಕಾರ್ಮಿಕರಿಂದ ರೂಪಕ ಹಾಗು ಕಾಲಾಯ ತಸ್ಮೈ ನಮಃ ವಿಡಂಬನಾತ್ಮಕ ರೂಪಕ ನಗರಸಭೆ ಸಿಬ್ಬಂದಿಗಳಿಂದ ನಡೆಯಲಿದ್ದು, ಕಿರುತೆರೆ ನಟ, ರಂಗಕರ್ಮಿ ಅಪರಂಜಿ ಶಿವರಾಜ್ ರೂಪಕ ರಚಿಸಿ ನಿರ್ದೇಶಿಸಿದ್ದಾರೆ.
    ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶರಣಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಅಧ್ಯಕ್ಷತೆ ವಹಿಸಲಿದ್ದಾರೆ. ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್ ಮತ್ತು ಪೌರಾಯುಕ್ತ  ಎಚ್.ಎಂ ಮನುಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.

ಪ್ರೊ. ಬಿ. ಕೃಷ್ಣಪ್ಪನವರ ಡಿಎಸ್‌ಎಸ್ ದುರ್ಬಳಕೆ : ಕಠಿಣ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ

ಕೆಲವು ಕಿಡಿಗೇಡಿಗಳು ಪ್ರೊ. ಬಿ. ಕೃಷ್ಣಪ್ಪನವರು ಸ್ಥಾಪಿಸಿರುವ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಂಘಟನೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ವಂಚಿಸುತ್ತಿದ್ದು, ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬುಧವಾರ ಭದ್ರಾವತಿಯಲ್ಲಿ ಪೇಪರ್‌ಟೌನ್ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಸೆ. ೨೮ : ಕೆಲವು ಕಿಡಿಗೇಡಿಗಳು ಪ್ರೊ. ಬಿ. ಕೃಷ್ಣಪ್ಪನವರು ಸ್ಥಾಪಿಸಿರುವ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಂಘಟನೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ವಂಚಿಸುತ್ತಿದ್ದು, ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬುಧವಾರ ಪೇಪರ್‌ಟೌನ್ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
    ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಹಾಗು ಜಿಲ್ಲಾ ಸಂಚಾಲಕ ಚಿನ್ನಯ್ಯ ನೇತೃತ್ವದಲ್ಲಿ ಠಾಣೆ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿದ್ದು, ನ್ಯಾಯ ಲಭಿಸುವವರೆಗೂ ಹೋರಾಟ ನಡೆಸುವುದಾಗಿ ಎಚ್ಚರಿಸಲಾಯಿತು.
    ಜಿಲ್ಲಾ ಸಂಚಾಲಕ ಚಿನ್ನಯ್ಯ ಮಾತನಾಡಿ, ಕೆ.ಟಿ ಪ್ರಸನ್ನ, ರವಿನಾಯ್ಕ ಸೇರಿದಂತೆ ಇನ್ನೂ ಕೆಲವು ವ್ಯಕ್ತಿಗಳು ಪ್ರೊ. ಬಿ. ಕೃಷ್ಣಪ್ಪನವರು ಸ್ಥಾಪಿಸಿರುವ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಂಘಟನೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ತಾಲೂಕಿನ ಹಿರಿಯೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಹಾಗು ಸದಸ್ಯರಿಗೆ ಬೆದರಿಕೆ ಹಾಕುತ್ತಿದ್ದಾರೆ. ಗ್ರಾಮ ಪಂಚಾಯಿತಿ ಕಾಮಗಾರಿಗಳಲ್ಲಿ ಕಮಿಷನ್ ನೀಡುವಂತೆ ಪೀಡಿಸುತ್ತಿದ್ದಾರೆ. ಗ್ರಾಮಠಾಣಾ ಜಾಗಕ್ಕೆ ಸಂಬಂಧಿಸಿದಂತೆ ವಿನಾಕಾರಣ ಗ್ರಾಮದಲ್ಲಿ ಗೊಂದಲದ ವಾತಾವರಣ ಮೂಡಿಸುತ್ತಿದ್ದಾರೆ. ಇಷ್ಟೆ ಅಲ್ಲದೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗು ಸದಸ್ಯರ ವಿರುದ್ಧ ಜಾತಿನಿಂದನೆ ಸುಳ್ಳು ದೂರು ದಾಖಲಿಸಿದ್ದಾರೆ ಎಂದು ಆರೋಪಿಸಿದರು.
    ಪ್ರೊ. ಬಿ ಕೃಷ್ಣಪ್ಪನವರು ಸ್ಥಾಪಿಸಿರುವ ಸಂಘಟನೆ ನಮ್ಮದ್ದಾಗಿದ್ದು, ನ್ಯಾಯಾಲಯದಲ್ಲಿ ಈ ಸಂಬಂಧ ಆದೇಶವಾಗಿದೆ ಎಂದು ಸುಳ್ಳು ಹೇಳಿಕೊಂಡು ಎಲ್ಲೆಡೆ ವಂಚಿಸಲಾಗುತ್ತಿದೆ. ಈಗಾಗಲೇ ಈ ವಿಚಾರಕ್ಕೆ ಸಂಬಂಧಿಸಿದಂತೆ ಎಂ. ಗುರುಮೂರ್ತಿ ಎಂಬುವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದೆ. ಈ ನಡುವೆಯೂ ಇದೀಗ ಹಿರಿಯೂರು ಗ್ರಾಮದಲ್ಲಿ ಸಂಘಟನೆ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸಂಘಟನೆಯ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಲಾಗುತಿದೆ. ಇಂತಹವರನ್ನು ತಕ್ಷಣ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಸಿದರು.
    ಪ್ರಮುಖರಾದ ವಿ. ವಿನೋದ್, ಕೆ. ರಂಗನಾಥ್, ಕುಪೇಂದ್ರಪ್ಪ, ಜಿಂಕ್‌ಲೈನ್ ಮಣಿ, ಕಾಣಿಕ್‌ರಾಜ್, ಎನ್. ಗೋವಿಂದ ಹಾಗು ಹಿರಿಯೂರು ಗ್ರಾಮ ಮುಖಂಡರು ಹಾಗು ಡಿಎಸ್‌ಎಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಕೆಎಸ್‌ಆರ್‌ಟಿಸಿ ಬಸ್-ದ್ವಿಚಕ್ರ ವಾಹನ ನಡುವೆ ಅಪಘಾತ : ಓರ್ವ ಸ್ಥಳದಲ್ಲಿಯೇ ಸಾವು

ಭದ್ರಾವತಿ ನಗರದ ಉಂಬ್ಳೆಬೈಲು ರಸ್ತೆ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಮುಂಭಾಗ ಬುಧವಾರ ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಆಂಜನೇಯ ಅಗ್ರಹಾರ ಮೂರನೇ ಕ್ರಾಸ್ ನಿವಾಸಿ ಲೋಕೇಶ್.
    ಭದ್ರಾವತಿ, ಸೆ. ೨೮: ನಗರದ ಉಂಬ್ಳೆಬೈಲು ರಸ್ತೆ  ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಮುಂಭಾಗ ಬುಧವಾರ ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ  ದ್ವಿಚಕ್ರ  ವಾಹನ ಸವಾರನೋರ್ವ ಸ್ಥಳದಲ್ಲಿಯೇ ಮತಪಟ್ಟಿರುವ  ಘಟನೆ ನಡೆದಿದೆ.
    ಆಂಜನೇಯ ಅಗ್ರಹಾರ ಮೂರನೇ ಕ್ರಾಸ್ ನಿವಾಸಿ ಲೋಕೇಶ್(೩೬) ಮೃತಪಟ್ಟಿದ್ದು, ಈತ ಮಧ್ಯಾಹ್ನ ದ್ವಿಚಕ್ರ ವಾಹನದಲ್ಲಿ  ಹೋಗುವಾಗ ಕೆಎಸ್‌ಆರ್ ಟಿ ಸಿ ಬಸ್ ನಡುವೆ ಅಪಘಾತ ಸಂಭವಿಸಿ ತಲೆಗೆ ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಮತಪಟ್ಟಿದ್ದಾನೆ.
    ಈ ರಸ್ತೆಯಲ್ಲಿ ಶಾಲಾ-ಕಾಲೇಜು, ಪೊಲೀಸ್ ಠಾಣೆ, ಚರ್ಚ್ ಗಳು ಅಧಿಕವಾಗಿವೆ. ಈ ರಸ್ತೆಯನ್ನು ಇತ್ತೀಚೆಗೆ ಅಗಲೀಕರಣಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿ ಕಲ್ಪಿಸಿಕೊಡಲಾಗಿದೆ. ಆದರೂ ಸಹ ಈ ರಸ್ತೆಯಲ್ಲಿ ವಾಹನ ದಟ್ಟನೆ ಅಧಿಕವಾಗಿ ಅಪಘಾತಗಳು ಹೆಚ್ಚಾಗುತ್ತಿವೆ. ಅಲ್ಲದೆ  ವೇಗ ಮಿತಿ ಇಲ್ಲದಿರುವುದು ಸಹ ಅಪಘಾತ ಹೆಚ್ಚಳಕ್ಕೆ ಕಾರಣ ಎನ್ನಲಾಗಿದೆ. ನ್ಯೂ ಟೌನ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಭದ್ರಾವತಿ ನಗರದ ಉಂಬ್ಳೆಬೈಲು ರಸ್ತೆ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಮುಂಭಾಗ ಬುಧವಾರ ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ದ್ವಿಚಕ್ರವಾಹನ ವಾಹನ ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿಕೊಂಡಿರುವುದು.

Tuesday, September 27, 2022

7ನೇ ಆಲ್ ಇಂಡಿಯನ್ ನ್ಯಾಷನಲ್-2022 ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಬಹುಮಾನ

 ಕೆ. ಪವನ್ ಕುಮಾರ್ ಅಂತರಾಷ್ಟ್ರೀಯ ಮಟ್ಟಕ್ಕೆ  ಆಯ್ಕೆ

ಕೆ. ಪವನ್ ಕುಮಾರ್
    ಭದ್ರಾವತಿ, ಸೆ. 28: ಮೂಲತಃ ಕಾಗದ ನಗರದ 6ನೇ ವಾರ್ಡ್ ನಿವಾಸಿ  ಕೆ. ಪವನ್ ಕುಮಾರ್  7ನೇ ಆಲ್ ಇಂಡಿಯನ್ ನ್ಯಾಷನಲ್-2022 ಷಟಲ್ ಬ್ಯಾಡ್ಮಿಂಟನ್   ಪಂದ್ಯಾವಳಿಯಲ್ಲಿ ಭಾಗವಹಿಸಿ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.   
     ಸಿಂಗಲ್ಸ್  ಮತ್ತು ಡಬಲ್ಸ್ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನ ಹಾಗೂ ಮಿಕ್ಸೆಡ್ ಡಬಲ್ಸ್ ನಲ್ಲಿ ಬೆಳ್ಳಿ ಪದಕ ಪಡೆಯುವ ಮೂಲಕ ಕೀರ್ತಿ ತಂದಿದ್ದಾರೆ.  ಅಲ್ಲದೆ ಅಂತರಾಷ್ಟ್ರೀಯ ಮಟ್ಟಕ್ಕೆ  ಆಯ್ಕೆಯಾಗಿದ್ದಾರೆ.
      ಕೆ. ಪವನ್ ಕುಮಾರ್ ಅವರನ್ನು ಕ್ರೀಡಾಭಿಮಾನಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಸಾರ್ವಜನಿಕರು ಅಭಿನಂದಿಸಿದ್ದಾರೆ.

ನಗರ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗಕ್ಕೆ ೪ ಮಂದಿ ನೇಮಕ


ಭದ್ರಾವತಿ ನಗರ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗಕ್ಕೆ ಹೊಸದಾಗಿ ನೇಮಕಗೊಂಡ ನೂತನ ಪದಾಧಿಕಾರಿಗಳಿಗೆ ನೇಮಕ ಆದೇಶ ಪ್ರತಿ ವಿತರಿಸಿ ಶಾಸಕ ಬಿ.ಕೆ ಸಂಗಮೇಶ್ವರ್ ಅಭಿನಂದಿಸಿದರು.
    ಭದ್ರಾವತಿ, ಸೆ. ೨೭: ನಗರ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗಕ್ಕೆ ಹೊಸದಾಗಿ ೪ ಮಂದಿ ಪದಾಧಿಕಾರಿಗಳನ್ನು ನೇಮಕಗೊಳಿಸಿ ನಗರ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಬಿ.  ಗಂಗಾಧರ್ ಆದೇಶ ಹೊರಡಿಸಿದ್ದಾರೆ.
    ಶಾಸಕ ಬಿ.ಕೆ ಸಂಗಮೇಶ್ವರ್‌ರವರ ನಿರ್ದೇಶನದ ಮೇರೆಗೆ ಪ್ರಧಾನ ಸಂಚಾಲಕರಾಗಿ ಎಚ್. ಮಂಜಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಎಂ. ಬಸವರಾಜ್, ಸಂಘಟನಾ ಕಾರ್ಯದರ್ಶಿಗಳಾಗಿ ಸಂತೋಷ್ ಮತ್ತು ಜಿ. ಹರೀಶ್ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.
    ನೂತನ ಪದಾಧಿಕಾರಿಗಳಿಗೆ ನೇಮಕ ಆದೇಶ ಪ್ರತಿ ವಿತರಿಸಿ ಶಾಸಕ ಬಿ.ಕೆ ಸಂಗಮೇಶ್ವರ್ ಅಭಿನಂದಿಸಿದರು. ಪ್ರಮುಖರಾದ ಬಲ್ಕೀಶ್ ಬಾನು, ಸಿ.ಎಂ ಖಾದರ್, ಟಿ.ವಿ ಗೋವಿಂದಸ್ವಾಮಿ, ವೈ. ರೇಣುಕಮ್ಮ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್ ಸುಂದರೇಶ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಮಹಿಳಾ ಘಟಕದ ಅಧ್ಯಕ್ಷೆ ಹೇಮಾವತಿ, ಯುವ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷ ಅಫ್ತಾಬ್ ಅಹಮದ್, ಅಮೀರ್‌ಜಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ದಸರಾ ಕ್ರೀಡಾಕೂಟದ ರಾಜ್ಯಮಟ್ಟದ ಕರಾಟೆ ಸ್ಪರ್ಧೆ : ಇಬ್ಬರು ವಿದ್ಯಾರ್ಥಿನಿಯರಿಗೆ ಚಿನ್ನದ ಪದಕ

ಶಿವಮೊಗ್ಗದಲ್ಲಿ ನಡೆದ ಮಕ್ಕಳ ದಸರಾ ಕ್ರೀಡಾಕೂಟದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭದ್ರಾವತಿ ಸೆಂಟ್ ಜೋಸೆಫ್ ಕಾಲೇಜಿನ ವಿದ್ಯಾರ್ಥಿಗಳಾದ  ಸಿಂಚನ ಎಂ ಪಾಟೀಲ್ ಹಾಗೂ ಪ್ರಕೃತಿ ಆರ್ ಗೌಡ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
    ಭದ್ರಾವತಿ, ಸೆ. ೨೭: ಶಿವಮೊಗ್ಗದಲ್ಲಿ ನಡೆದ ಮಕ್ಕಳ ದಸರಾ ಕ್ರೀಡಾಕೂಟದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಗರದ ಸೆಂಟ್ ಜೋಸೆಫ್ ಕಾಲೇಜಿನ ವಿದ್ಯಾರ್ಥಿಗಳಾದ  ಸಿಂಚನ ಎಂ ಪಾಟೀಲ್ ಹಾಗೂ ಪ್ರಕೃತಿ ಆರ್ ಗೌಡ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
    ಸಿಂಚನ ಎಂ. ಪಾಟೀಲ್ ಹಾಗು ಪ್ರಕೃತಿ ಆರ್. ಗೌಡ ಅವರು ಈಗಾಗಲೇ ತಾಲೂಕು, ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆದುಕೊಂಡಿದ್ದು, ರಾಜ್ಯಮಟ್ಟಕ್ಕೂ ಸಹ ಆಯ್ಕೆಯಾಗಿ ಕೀರ್ತಿ ತಂದಿದ್ದಾರೆ.
    ಇದೀಗ ದಸರಾ ಕ್ರೀಡಾಕೂಟದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಈ ಇಬ್ಬರು ವಿದ್ಯಾರ್ಥಿಗಳನ್ನು  ಬಾರಂದೂರು ಮಂಜುನಾಥ್ ಸೇರಿದಂತೆ ಇನ್ನಿತರರು ಅಭಿನಂದಿಸಿದ್ದಾರೆ.  

ಉಕ್ಕಿನ ನಗರದ ಮೂವರು ಪಿಎಫ್‌ಐ ಕಾರ್ಯಕರ್ತರು ಪೊಲೀಸರ ವಶಕ್ಕೆ

ಭದ್ರಾವತಿ ಖಾಜಿ ಮೊಹಲ್ಲಾ ಕೋಟೆ ಏರಿಯಾದ ಇಬ್ಬರು ಹಾಗೂ ಅನ್ವರ್ ಕಾಲೋನಿಯ ಒಬ್ಬನನ್ನು ಬಂಧಿಸಿ, ಮಂಗಳವಾರ ತಹಸೀಲ್ದಾರ್ ಮುಂದೆ ಹಾಜರುಪಡಿಸಲಾಯಿತು. 
    ಭದ್ರಾವತಿ, ಸೆ. ೨೭:  ಹಳೇನಗರ ಠಾಣೆ ಪೊಲೀಸರು ಮಂಗಳ ಬೆಳಿಗ್ಗೆ ನಡೆಸಿದ ದಾಳಿಯಲ್ಲಿ ಬಂಧನಕ್ಕೆ ಒಳಗಾಗಿರುವ ಮೂವರು ಪಿಎಫ್'ಐ ಕಾರ್ಯಕರ್ತರನ್ನು ಒಂದು ವಾರಗಳ ಕಾಲ ಪೊಲೀಸರ ವಶಕ್ಕೆ ವಹಿಸಲಾಗಿದೆ ಎಂಬ ತಿಳಿದು ಬಂದಿದೆ.
    ರಾಜ್ಯದಾದ್ಯಂತ ಬೆಳಗ್ಗಿನ ಜಾವ ಪಿಎಫ್‌ಐ ಹಾಗೂ ಎಸ್‌ಡಿಪಿಐ ಕಾರ್ಯಕರ್ತರುಗಳ ನಿವಾಸಗಳ ಮೇಲೆ ಪೊಲೀಸರು ದಾಳಿ ನಡೆಸಿರುವಂತೆಯೇ ನಗರದಲ್ಲೂ ಸಹ ದಾಳಿ ನಡೆಸಲಾಗಿದ್ದು, ಹಳೇನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
    ಖಾಜಿ ಮೊಹಲ್ಲಾ ಕೋಟೆ ಏರಿಯಾದ ಇಬ್ಬರು ಹಾಗೂ ಅನ್ವರ್ ಕಾಲೋನಿಯ ಒಬ್ಬನನ್ನು ಬಂಧಿಸಿ, ತಹಸೀಲ್ದಾರ್ ಮುಂದೆ ಹಾಜರುಪಡಿಸಲಾಯಿತು. ಈ ಮೂವರನ್ನು ಒಂದು ವಾರಗಳ ಕಾಲ ಪೊಲೀಸ್ ವಶಕ್ಕೆ ವಹಿಸಿ ತಹಸೀಲ್ದಾರ್‌ರವರು ಆದೇಶಿಸಿದ್ದಾರೆಂಬ ಮಾಹಿತಿ ತಿಳಿದು ಬಂದಿದೆ.
    ಬಂಧಿತರನ್ನು ತಾಹಿರ್, ಸಾಧಿಕ್ ಹಾಗೂ ಖುರೇಷಿ ಎಂದು ಗುರುತಿಸಲಾಗಿದ್ದು, ಬೆಳಗ್ಗಿನ ಜಾವ ಸುಮಾರು ೩ ಗಂಟೆ ಸಮಯದಲ್ಲಿ ಈ ಮೂವರ ನಿವಾಸಗಳ ಮೇಲೆ ದಾಳಿ ನಡೆಸಿ ಬಂಧಿಸಲಾಗಿದೆ ಎನ್ನಲಾಗಿದೆ.
    ಶಾಂತಿ, ಸುವ್ಯವಸ್ಥೆ ಕದಡುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಕಾರ್ಯಕರ್ತರನ್ನು ಬಂಧಿಸಿ, ಸೆಕ್ಷನ್ ೧೦೭, ೧೫೧ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.