![](https://blogger.googleusercontent.com/img/a/AVvXsEh8sqzoB9tbmppUKqE0DDVjXTn2IzwDAR-Lc6wwkdXolQyY3-VSDCQ1Kgt9Py5UwvTWmb9zh2EUg11dfoHmRUvsb25EHqG5_qQxsHqdZb367XBG8j6UF_wgMF-h2g2tELm8boYLb25Qm2k31hYJ2jlkZ7qsS06QPIz9EBHpMLPKg-Or6PSDuBYcPO6QeA=w400-h210-rw)
ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ನಡೆದ ಕನಕಜಯಂತಿ ಹಾಗೂ ಒನಕೆ ಓಬವ್ವ ಜಯತ್ಯೋಂತ್ಸವ ಶಾಸಕ ಬಿ.ಕೆ.ಸಂಗಮೇಶ್ವರ್ ಉದ್ಘಾಟಿಸಿದರು.
ಭದ್ರಾವತಿ, ನ. ೧೧ ; ದಾಸ ಶ್ರೇಷ್ಠ ಕನಕದಾಸರ ವಿಚಾರಧಾರೆಗಳು ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ನಿತ್ಯನಿರಂತರವಾದಾಗ ಮಾತ್ರ ಆವರ ಜನ್ಮದಿನಾಚರಣೆ ಸಾರ್ಥಕಗೊಳ್ಳುತ್ತದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
ಅವರು ಶುಕ್ರವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ಕುರುಬರ ಸಮಾಜ ಮತ್ತು ಛಲವಾದಿ ಸಮಾಜದ ವತಿಯಿಂದ ತಾಲೂಕು ಪಂಚಾಯತಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ದಾಸ ಶ್ರೇಷ್ಠ ಕನಕದಾಸ ಜಯಂತಿ ಹಾಗೂ ಒನಕೆ ಓಬವ್ವ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕನಕದಾಸರು ಕೇವಲ ಒಂದು ಕುಲಕ್ಕೆ ಸೀಮಿತರಾದವರಲ್ಲ ಇಡೀ ಮಾನವಕುಲಕ್ಕೆ ಸೀಮಿತರಾದವರು. ಅವರ ತತ್ವ, ಆದರ್ಶಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಇಂತಹ ದಾರ್ಶನಿಕರ ಜಯಂತಿಗೆ ಅರ್ಥ ಬರುತ್ತದೆ. ಸಮಾಜದಲ್ಲಿ ಜಾತೀಯತೆ, ಅಸೂಯೆ ಭಾವನೆಗಳು ಹೋಗಲಾಡಿಸಿ ಸಹೋದರತ್ವ ಸಹಬಾಳ್ವೆಗಳನ್ನು ಬೆಳಸಿಕೊಳ್ಳಬೇಕೆಂದರು.
ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು. ವೀರವನಿತೆ ಒನಕೆ ಓಬವ್ವ ಅವರು ಈ ನಾಡಿಗೆ ಕೊಟ್ಟಂತಹ ಕೊಡುಗೆ ಅಪಾರವಾಗಿದೆ. ಅವರು ನಾಡಿನ ರಕ್ಷಣೆಯಲ್ಲಿ ತೋರಿದ ಹೋರಾಟದ ಗುಣಗಳು, ಆದರ್ಶತನಗಳು ಎಲ್ಲರಿಗೂ ಮಾದರಿಯಾಗಿದೆ ಎಂದರು.
ತಾಲೂಕು ಕುರುಬರ ಸಂಘದ ಅಧ್ಯಕ್ಷ ಬಿ.ಎಂ ಸಂತೋಷ್ ಮಾತನಾಡಿ, ಕನಕದಾಸರಂತೆ ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಸಹ ಈ ನಾಡಿನ ಅಭಿವೃದ್ದಿಗೆ ಶ್ರಮಿಸಿದವರು. ಕನಕದಾಸರ ಜಯಂತಿಯಂದು ಅವರ ಪ್ರತಿಮೆ ಅನಾವರಣಗೊಳ್ಳುತ್ತಿರುವುದು ಈ ನಾಡಿನ ಜನರ ಹೆಮ್ಮೆಯ ಸಂಗತಿಯಾಗಿದೆ. ಕನಕದಾಸರು ಮತ್ತು ಒನಕೆ ಓಬವ್ವ ಜಯಂತ್ಯೋತ್ಸವ ಈ ಬಾರಿ ಒಟ್ಟಿಗೆ ಆಚರಣೆ ಮಾಡುತ್ತಿರುವುದು ಅರ್ಥ ಪೂರ್ಣವಾಗಿದ್ದು, ಈ ಇಬ್ಬರು ಮಹಾನ್ ವ್ಯಕ್ತಿಗಳ ಆದರ್ಶ ಗುಣಗಳನ್ನು ಮೈಗೂಡಿಸಿಕೊಂಡಾಗ ಬದುಕು ಸಾರ್ಥಕವಾಗುತ್ತದೆ ಎಂದರು.
ಛಲವಾಧಿ ಸಮಾಜದ ಅಧ್ಯಕ್ಷ ಸುರೇಶ್ ಮಾತನಾಡಿ, ಸರ್ಕಾರ ಈ ಬಾರಿ ಒನಕೆ ಓಬವ್ವ ಜಯಂತ್ಯೋತ್ಸವ ಆಚರಣೆ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಆದರೆ ಒನಕೆ ಓಬವ್ವ ಅವರನ್ನು ಒಂದು ಜಾತಿಗೆ ಸೀಮಿತಗೊಳಿಸುವ ಹುನ್ನಾರ ಮಾಡಬಾರದು. ರಾಜಪ್ರಭುತ್ವವನ್ನು ಉಳಿಸಿಕೊಳ್ಳಲು ಹೋರಾಟ ಮಾಡಿದ ಓಬವ್ವರಂತೆ ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳನ್ನು ಮಟ್ಟ ಹಾಕಲು ಛಲವಾಧಿ ಸಮಾಜದಿಂದ ಹೋರಾಟ ಮಾಡಲಾಗುವುದು ಎಂದರು.
ಉಪನ್ಯಾಸ ನೀಡಿದ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಮಾತನಾಡಿ, ಹಿಂದುಳಿದ ಶೋಷಿತ ಸಮುದಾಯದಲ್ಲಿ ಜನಿಸಿದ ಕನಕದಾಸರು, ಜಾತಿ ಅಂಧಕಾರ, ಮೌಡ್ಯತೆಯಿಂದ ತುಂಬಿದ ಅಂದಿನ ಸಮಾಜದಲ್ಲಿ ತಮ್ಮದೇ ವಿಚಾರಧಾರೆಗಳ ಮೂಲಕ ದಾಸರಲ್ಲಿಯೇ ಅಗ್ರಗಣ್ಯ ಸ್ಥಾನದಲ್ಲಿ ಗುರುತಿಸಿಕೊಳ್ಳುವ ಜೊತೆಗೆ ಸಮಾಜ ಸುಧಾರಣೆಗಾಗಿ ಶ್ರಮಿಸಿದವರು. ಕನ್ನಡ ಭಾಷೆ, ಸಾಹಿತ್ಯಕ್ಕೆ ಅವರ ಕೊಡುಗೆ ಅಪಾರವಾಗಿದೆ. ಕನಕದಾಸರ ವಿಚಾರಧಾರೆಗಳು ಸರ್ವಕಾಲಿಕವಾಗಿದ್ದು, ಇವರ ಕುರಿತ ವಿಚಾರಧಾರೆಗಳನ್ನು ಪ್ರತಿಯೊಬ್ಬರು ತಿಳಿದುಕೊಳ್ಳಬೇಕೆಂದರು
ತಹಸೀಲ್ದಾರ್ ಆರ್. ಪ್ರದೀಪ್, ಗ್ರೇಡ್-೨ ತಹಸೀಲ್ದಾರ್ ರಂಗಮ್ಮ, ನಗರಸಭೆ ಪೌರಾಯುಕ್ತ ಮನುಕುಮಾರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ನಗರಸಭಾ ಸದಸ್ಯರಾದ ಶಶಿಕಲಾ, ಕಾಂತರಾಜ್, ಮಂಜುಳಾ, ಆರ್. ಶ್ರೇಯಸ್(ಚಿಟ್ಟೆ), ತಾಲೂಕು ಕುರುಬ ಸಮಾಜದ ನಿರ್ದೇಶಕರಾದ ಬಿ.ಎಸ್ ನಾರಾಯಣಪ್ಪ, ಹೇಮಾವತಿ, ಮಂಜುನಾಥ್(ಕೊಯ್ಲಿ), ಕೆ. ಕೇಶವ, ಪ್ರವೀಣ್, ಜಿ. ವಿನೋದ್ ಕುಮಾರ್, ನಾಗರಾಜ್, ಸಣ್ಣಯ್ಯ, ಬಿ.ಎಚ್ ವಸಂತ, ಬಿ.ಎ ರಾಜೇಶ್, ಜೆ. ಕುಮಾರ್, ಛಲವಾದಿ ಸಮಾಜದ ಹಿರಿಯ ಮುಖಂಡ ಎನ್. ಶ್ರೀನಿವಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸಂಗೊಳ್ಳಿ ರಾಯಣ್ಣ ಯುವ ಪಡೆ ಅಧ್ಯಕ್ಷ ಅಭಿಲಾಷ್ ನಿರೂಪಿಸಿದರು. ಉಪತಹಸೀಲ್ದಾರ್ ಮಂಜಾನಾಯ್ಕ ಸ್ವಾಗತಿಸಿದರು. ನಗರದ ಗಾಯಕ ಸುಬ್ರಮಣ್ಯ ಅವರ ಕಂಠದಲ್ಲಿ ಕನಕದಾಸರ ಕೀರ್ತನೆಗಳ ಧ್ವನಿ ಸುರಳಿ ಬಿಡುಗಡೆಗೊಳಿಸಲಾಯಿತು. ತಾಲೂಕು ಕುರುಬರ ಸಂಘ ಹಾಗು ಕನಕ ವಿದ್ಯಾಸಂಸ್ಥೆಗೆ ಸಂಗೊಳ್ಳಿ ರಾಯಣ್ಣನವರ ಭಾವಚಿತ್ರ ದಾನಿಗಳಿಂದ ಕೊಡುಗೆಯಾಗಿ ನೀಡಲಾಯಿತು.