Friday, January 6, 2023

ಜ.೧೦ರೊಳಗೆ ಎಸ್‌ಸಿ/ಎಸ್‌ಟಿ ಪಡಿತರದಾರರು ಮಾಹಿತಿ ನೀಡಲು ಮನವಿ


ಭದ್ರಾವತಿ, ಜ. ೬: ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿದಾರರ ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳಿಗೆ ಆಹಾರ ಧಾನ್ಯ ವಿತರಣೆ ಮಾಡುತ್ತಿದ್ದು, ಈ ಹಿನ್ನಲೆಯಲ್ಲಿ ಫಲಾನುಭವಿಗಳ ಮಾಹಿತಿ ನೀಡಲು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರು ತಹಸೀಲ್ದಾರ್ ಮತ್ತು ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಿದ್ದಾರೆ.
    ಪರಿಶಿಷ್ಟ ಜಾತಿ/ಪಂಗಡ(ಎಸ್‌ಸಿ/ಎಸ್‌ಟಿ)ದ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳು ನ್ಯಾಯಬೆಲೆ ಅಂಗಡಿಗೆ ತೆರಳಿ ಜ.೧೦ರೊಳಗೆ ಜಾತಿಗೆ ಸಂಬಂಧಿಸಿದ ಮಾಹಿತಿಯನ್ನು ಅಂಗಡಿ ಮಾಲೀಕರಿಗೆ ನೀಡುವ ಮೂಲಕ ಸಹಕರಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗಯ್ಯ ಮನವಿ ಮಾಡಿದ್ದಾರೆ.   

Thursday, January 5, 2023

ಅಂಗವೈಕಲ್ಯ ಮಕ್ಕಳು ಸಹ ಸಮಾಜದ ಆಸ್ತಿ : ಬಿ.ಆರ್ ಬಸವರಾಜಪ್ಪ

ಭದ್ರಾವತಿ ಹಳೇನಗರದ ಕ್ಷೇತ್ರ ಸಂಪನ್ಮೂಲ ಕಛೇರಿ ಆವರಣದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ವಿಕಲಚೇತನ ಮಕ್ಕಳ ಉಚಿತ ವೈದ್ಯಕೀಯ ತಪಾಸಣಾ ಶಿಬಿರದಲ್ಲಿ ೧೪ ವಿಕಲಚೇತನ ಮಕ್ಕಳಿಗೆ ಉಚಿತವಾಗಿ ಗಾಲಿ ಕುರ್ಚಿಗಳನ್ನು ವಿತರಿಸಲಾಯಿತು.  
    ಭದ್ರಾವತಿ, ಜ. ೫ : ಅಂಗವೈಕಲ್ಯ ಮಕ್ಕಳು ಸಹ ಸಮಾಜದ ಆಸ್ತಿಗಳಾಗಿದ್ದು, ಶಿಕ್ಷಣ ಇಲಾಖೆ ಇಂತಹ ಮಕ್ಕಳಿಗೆ ಉಚಿತವಾಗಿ ಅಗತ್ಯವಿರುವ ಸಾಧನ ಸಲಕರಣೆಗಳನ್ನು ವಿತರಿಸುವ ಜೊತೆಗೆ ಶಿಕ್ಷಣ ನೀಡುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಉಪನಿರ್ದೇಶಕ(ಅಭಿವೃದ್ಧಿ), ಡಯಟ್ ಪ್ರಾಂಶುಪಾಲ ಬಿ.ಆರ್ ಬಸವರಾಜಪ್ಪ ಹೇಳಿದರು.
    ಅವರು ಗುರುವಾರ ಹಳೇನಗರದ ಕ್ಷೇತ್ರ ಸಂಪನ್ಮೂಲ ಕಛೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಕಲಚೇತನ ಮಕ್ಕಳ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
    ಅಪೌಷ್ಠಿಕತೆ ಸೇರಿದಂತೆ ಕೆಲವೊಂದು ಕಾರಣಗಳಿಂದ ಮಕ್ಕಳು ತಾಯಿಯ ಗರ್ಭಾವಸ್ಥೆಯಲ್ಲಿರುವಾಗಲೇ ಅಂಗವೈಕಲ್ಯಕ್ಕೆ ತುತ್ತಾಗುತ್ತಿದ್ದು, ಇಂತಹ ಮಕ್ಕಳ ಅಂಗ ವೈಕಲ್ಯ ಸಹಜವಾಗಿದೆ. ಈ ಮಕ್ಕಳು ಸಹ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು. ಇವರಿಗೂ ಶಿಕ್ಷಣ ನೀಡಬೇಕೆಂಬ ಉದ್ದೇಶ ಇಲಾಖೆ ಹೊಂದಿದೆ.  ಪ್ರಸ್ತುತ ತಾಲೂಕಿನಲ್ಲಿ ೫೪೨ ಅಂಗವೈಕಲ್ಯದಿಂದ ಕೂಡಿರುವ ಮಕ್ಕಳನ್ನು ಗುರುತಿಸಲಾಗಿದೆ. ಕೆಲವು ಮಕ್ಕಳು ಶಾಲೆಗಳಿಗೆ ಬರುತ್ತಿದ್ದು, ಇನ್ನೂ ಕೆಲವು ಮಕ್ಕಳು ಶಾಲೆಗಳಿಗೆ ಬರಲು ಸಾಧ್ಯವಾಗದೆ ಮನೆಗಳಲ್ಲಿಯೇ ಉಳಿದುಕೊಂಡಿದ್ದಾರೆ. ಇಂತಹ ಮಕ್ಕಳಿಗೆ ಮನೆಗಳಿಗೆ ತೆರಳಿ ಶಿಕ್ಷಣ ನೀಡಲಾಗುತ್ತಿದೆ. ಶಿಬಿರದಲ್ಲಿ ಅಂಗವೈಕಲ್ಯಕ್ಕೆ ತುತ್ತಾಗಿರುವ ಮಕ್ಕಳಿಗೆ ತಜ್ಞ ವೈದ್ಯರು ತಪಾಸಣೆ ನಡೆಸಿ ಅಗತ್ಯವಿರುವ ಸಾಧನ ಸಲಕರಣೆಗಳನ್ನು ಶಿಫಾರಸ್ಸು ಮಾಡುತ್ತಿದ್ದು, ಇಲಾಖೆ ವತಿಯಿಂದ ಉಚಿತವಾಗಿ ಸಾಧನ ಸಲಕರಣೆಗಳನ್ನು ನೀಡಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.
    ಶಿಬಿರದಲ್ಲಿ ಒಟ್ಟು ೧೪ ಮಕ್ಕಳಿಗೆ ಗಾಲಿ ಕುರ್ಚಿಗಳನ್ನು ಹಾಗು ಸುಮಾರು ೪೬ ಮಕ್ಕಳಿಗೆ ಅಗತ್ಯವಿರುವ ಸಾಧನ ಸಲಕರಣೆಗಳಿಗೆ ವೈದ್ಯರು ಶಿಫಾರಸ್ಸು ಮಾಡಿದ್ದು, ಸರ್ಕಾರಿ ಹಾಗು ಅನುದಾನಿತ ಶಾಲೆಗಳ ಒಟ್ಟು ೩೧೦ ಮಕ್ಕಳು ಶಿಬಿರದಲ್ಲಿ ಪಾಲ್ಗೊಂಡಿದ್ದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಲಯನ್ಸ್ ಕ್ಲಬ್ ಅಧ್ಯಕ್ಷ ಎ.ಎನ್ ಕಾರ್ತಿಕ್, ಕಾರ್ಯದರ್ಶಿ ನಾಗರಾಜ್ ಶೇಟ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಎಸ್.ಕೆ ಮೋಹನ್, ಶ್ರೀಧರ ಗೌಡ, ತಿಪ್ಪೇಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ವಿ.ಎಚ್ ಪಂಚಾಕ್ಷರಿ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗು ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಛೇರಿ ಅಧಿಕಾರಿಗಳು, ಸಿಬ್ಬಂದಿಗಳು, ಪೋಷಕರು ಉಪಸ್ಥಿತರಿದ್ದರು.

ಕಾಲ್ವರಿ ಕಾರುಣ್ಯ ಟ್ರಸ್ಟ್ ವತಿಯಿಂದ ಅಂಬ್ಯುಲೆನ್ಸ್ ಸೇವೆಗೆ ಚಾಲನೆ

ಭದ್ರಾವತಿ ಕಾಲ್ವರಿ ಕಾರುಣ್ಯ ಟ್ರಸ್ಟ್ ವತಿಯಿಂದ ನೂತನವಾಗಿ ಅಂಬ್ಯುಲೆನ್ಸ್ ಸೇವೆ ಆರಂಭಿಸಲಾಗಿದ್ದು, ಗುರುವಾರ ಸೇವೆಗೆ ಚಾಲನೆ ನೀಡಲಾಯಿತು.
    ಭದ್ರಾವತಿ, ಜ. ೫ : ನಗರದ ಕಾಲ್ವರಿ ಕಾರುಣ್ಯ ಟ್ರಸ್ಟ್ ವತಿಯಿಂದ ನೂತನವಾಗಿ ಅಂಬ್ಯುಲೆನ್ಸ್ ಸೇವೆ ಆರಂಭಿಸಲಾಗಿದ್ದು, ಗುರುವಾರ ಸೇವೆಗೆ ಚಾಲನೆ ನೀಡಲಾಯಿತು.
    ತುರ್ತು ಸಂದರ್ಭದಲ್ಲಿ ಕಡುಬಡವರಿಗೆ ಕಡಿಮೆ ದರದಲ್ಲಿ ಸೇವೆ ನೀಡುವ ಉದ್ದೇಶ ಟ್ರಸ್ಟ್ ಹೊಂದಿದ್ದು, ಅಂಬ್ಯುಲೆನ್ಸ್ ರಾಜ್ಯದ ಎಲ್ಲೆಡೆ ಸಂಚರಿಸಲಿದೆ. ಚಾಲನೆ ನೀಡಿದ ಪ್ರಮುಖರು ಮಾತನಾಡಿ, ಟ್ರಸ್ಟ್ ಕಾರ್ಯ ಶ್ಲಾಘನೀಯವಾಗಿದೆ. ಉತ್ತಮ ಸೇವೆ ನೀಡುವ ಕಡೆ ಹೆಚ್ಚಿನ ಗಮನ ಹರಿಸಿ ಸೇವಾ ಕಾರ್ಯ ಸಾರ್ಥಕಗೊಳಿಸಬೇಕೆಂದು ಕರೆ ನೀಡಿದರು.  
    ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಸ್ಟೀವನ್ ಜೋನಾಥನ್, ಕಾರ್ಯದರ್ಶಿ ಮನೋಹರ್ ಬಾಬು, ಪಾಸ್ಟರ್ ರವಿಕುಮಾರ್, ಪಾಸ್ಟರ್ ರೈಮಂಡ್, ತೆಲುಗು ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಬಾಸ್ಕರ್ ಬಾಬು, ಯುವ ಮುಖಂಡ ವಿಲ್ಸನ್ ಬಾಬು, ನಗರಸಭೆ ಮಾಜಿ ಸದಸ್ಯ ಮುಕುಂದಪ್ಪ, ಯಂಗ್ ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಆರ್. ಮೋಸಸ್, ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿಯಂತ್ರಣ ಮಂಡಳಿ ತಾಲೂಕು ಅಧ್ಯಕ್ಷ ಸಂತೋಷ್ ಕುಮಾರ್, ಕಾಕನಿ ಪ್ರಕಾಶ್, ಬಾಬು, ಕೇವಿನ, ಬಾಲಾಜಿ, ಅಶೋಕ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸಾಮಾಜಿಕ ಜಾಲತಾಣಗಳ ಬಳಕೆ ಮಿತಿಯಲ್ಲಿರಲಿ, ಎಚ್ಚರಿಕೆ ವಹಿಸಿ : ಜಿ.ಕೆ ಮಿಥುನ್ ಕುಮಾರ್

ಭದ್ರಾವತಿ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಎಸ್‌ಎವಿ ಶಾಲೆ ಮತ್ತು ಕಾಲೇಜುಗಳ ವಾರ್ಷಿಕೋತ್ಸವ ೨೫ನೇ ವರ್ಷದ ಬೆಳ್ಳಿ ಉತ್ಸವ ಸಮಾರಂಭದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಪಾಲ್ಗೊಂಡು ಮಾತನಾಡಿದರು.
    ಭದ್ರಾವತಿ, ಜ. ೫ : ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ಬಳಸುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಹೇಳಿದರು.
    ಅವರು ನಗರದ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಎಸ್‌ಎವಿ ಶಾಲೆ ಮತ್ತು ಕಾಲೇಜುಗಳ ವಾರ್ಷಿಕೋತ್ಸವ ೨೫ನೇ ವರ್ಷದ ಬೆಳ್ಳಿ ಉತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
    ಸಾಮಾಜಿಕ ಜಾಲತಾಣಗಳ ಬಳಕೆ ಮಿತಿಯಲ್ಲಿರಬೇಕು. ಅಲ್ಲದೆ ಹೆಚ್ಚಿನ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಯಾವುದೇ ರೀತಿಯ ದುಶ್ಚಟಗಳಿಗೆ ಬಲಿಯಾಗದಂತೆ, ಮಾದಕ ದ್ರವ್ಯ ವ್ಯಸನದಿಂದ ದೂರವಿರುವಂತೆ ಹಾಗೂ ದಿನನಿತ್ಯದ  ಜೀವನದಲ್ಲಿ ಉತ್ತಮ ಹವ್ಯಾಸಗಳನ್ನು ರೂಡಿಸಿಕೊಳ್ಳುವಂತೆ ಕರೆ ನೀಡಿದರು.
    ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿ ಶ್ರೀ ಪ್ರಸನ್ನನಾಥಸ್ವಾಮೀಜಿ ದಿವ್ಯ ಸಾನಿಧ್ಯವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ವೇದಿಕೆ ಕಾರ್ಯಕ್ರಮದ ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶಿಕ್ಷಣ ಸಂಸ್ಥೆಯ ಶಿಕ್ಷಕರು, ಸಿಬ್ಬಂದಿ ವರ್ಗದವರು, ಪೋಷಕರು ಮತ್ತು ಮಕ್ಕಳು ಪಾಲ್ಗೊಂಡಿದ್ದರು.

ಅಂತಿಮ ಮತದಾರರ ಪಟ್ಟಿ ಪ್ರಕಟ: ಹೊಸ ಸೇರ್ಪಡೆ 6,191, ಕೈ ಬಿಟ್ಟಿರುವುದು 5,323

ಭದ್ರಾವತಿ,  ಜ. 5: ಭದ್ರಾವತಿ ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಗುರುವಾರ ತಹಸೀಲ್ದಾರ್ ಆರ್. ಪ್ರದೀಪ್ ಪ್ರಕಟಿಸಿದರು.
    ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ  ಸಂಜೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಹೊಸದಾಗಿ 6,191 ಮತದಾರರು ಸೇರ್ಪಡೆಗೊಂಡಿದ್ದು, ಉಳಿದಂತೆ 5,323 ಮತದಾರರನ್ನು ಕೈ ಬಿಡಲಾಗಿದೆ. 2,405 ತಿದ್ದುಪಡಿಯಲಿದ್ದು, ಅಂತಿಮವಾಗಿ 2,07,609 ಮತದಾರರಿದ್ದಾರೆ. ಈ ಪೈಕಿ 1,01,058 ಪುರುಷ ಹಾಗು 1,06,546 ಮಹಿಳಾ ಮತ್ತು 5 ತೃತೀಯ ಲಿಂಗ ಮತದಾರರಿದ್ದು, ಒಟ್ಟಾರೆ ಅಂತಿಮ ಮತಪಟ್ಟೆಯಲ್ಲಿ 2,885 ಮತದಾರರ ಸಂಖ್ಯೆ ಹೆಚ್ಚಳವಾಗಿದೆ  ಎಂದರು.
    ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 1266 ಮಂದಿ ಮತದಾರರು ಮರಣ ಹೊಂದಿದ್ದು, 3,366 ಮತದಾರರು ಸ್ಥಳಾಂತರ, 161 ಮತದಾರರು ಪುನರಾವರ್ತನೆ ಹಾಗು 530 ಮತದಾರರು ವಲಸೆ ಗೊಂಡಿದ್ದು,  ಈ ಹಿನ್ನೆಲೆಯಿಂದ  ಒಟ್ಟು 5323 ಮಂದಿ ಮತದಾರರನ್ನು ಕೈ ಬಿಡಲಾಗಿದೆ ಎಂದು ಸ್ಪಷ್ಟಪಡಿಸಿದರು.
     18 ರಿಂದ 19 ವಯಸ್ಸಿನ 911 ಯುವ ಮತದಾರರು ಹಾಗೂ 1776 ವಿಕಲಚೇತನ ಮತ್ತು 355 ಗಣ್ಯ ವ್ಯಕ್ತಿ ಮತದಾರರಿದ್ದು, 253 ಮತಕಟ್ಟೆ ಅಧಿಕಾರಿಗಳು ಇದ್ದಾರೆ ಎಂದು ಮಾಹಿತಿ ನೀಡಿದರು.
     ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರಾದ ಟಿ. ಚಂದ್ರೇಗೌಡ, ಡಿ.ಸಿ ಮಾಯಣ್ಣ, ಆರ್.  ಕರುಣಾ ಮೂರ್ತಿ, ಬಿ.ಟಿ ನಾಗರಾಜ್, ಸಿ.ಎಂ ಖಾದರ್, ಮೊಸರಹಳ್ಳಿ ಸುರೇಶ್, ಎನ್ ರಾಮಕೃಷ್ಣ  ಮೆಡಿಕಲ್ ಆನಂದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Wednesday, January 4, 2023

ಅತಿಯಾದ ಮೊಬೈಲ್ ಬಳಕೆ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಮಾರಕ

ಭದ್ರಾವತಿ ಕಾಗದನಗರದ ಪೇಪರ್‌ಟೌನ್ ಆಂಗ್ಲ ಶಾಲೆಯಲ್ಲಿ ೪೦ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕ್ರೀಡಾ ಚಟುವಟಿಕೆಗಳ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಪೇಪರ್‌ಟೌನ್ ಪೊಲೀಸ್ ಠಾಣಾಧಿಕಾರಿ ಭಾರತಿ, ವಿ. ಸಂತೋಷ್‌ಕುಮಾರ್, ಆರ್. ಸತೀಶ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
    ಭದ್ರಾವತಿ, ಜ. ೪ : ಮೊಬೈಲ್ ವ್ಯಸನ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ವೈಯಕ್ತಿಕ ಜೀವನದ ಮೇಲೆ ದುಷ್ಪರಿಣಾಮ ಉಂಟು ಮಾಡಲಿದ್ದು, ಈ ಹಿನ್ನಲೆಯಲ್ಲಿ ಎಚ್ಚರವಹಿಸುವಂತೆ ಮಾಚೇನಹಳ್ಳಿ ಟಿಎಂಎಇಎಸ್ ಆಯುರ್ವೇದಿಕ್ ಕಾಲೇಜಿನ ಮನೋ ಚಿಕಿತ್ಸಕರು ಮತ್ತು ಆಧ್ಯಾತ್ಮಿಕ ಚಿಂತಕರಾದ ವಿ. ಸಂತೋಷ್‌ಕುಮಾರ್ ಹೇಳಿದರು.
    ಅವರು ಬುಧವಾರ ಕಾಗದನಗರದ ಪೇಪರ್‌ಟೌನ್ ಆಂಗ್ಲ ಶಾಲೆಯಲ್ಲಿ ೪೦ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕ್ರೀಡಾ ಚಟುವಟಿಕೆಗಳ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
    ಅತಿಯಾದ ಮೊಬೈಲ್ ಬಳಕೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತವೆ. ಪೋಷಕರು ತಮ್ಮ ಮಕ್ಕಳು ಈ ವ್ಯಸನದಿಂದ ಹೊರಬರಲು ಮಕ್ಕಳಿಗೆ ಮೊಬೈಲ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು. ಕೆಲವು ಆಪ್‌ಗಳನ್ನು ಮಕ್ಕಳು ಬಳಸದಂತೆ ತಡೆಯುವಲ್ಲಿ ಕ್ರಮ ಕೈಗೊಳ್ಳಬೇಕೆಂದರು.
    ಶಿಕ್ಷಣ ಸಂಯೋಜಕ ರವಿಕುಮಾರ್ ಮಾತನಾಡಿ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ವಿಷಯವಾರು ಅಭ್ಯಾಸಕ್ಕೆ ಹೆಚ್ಚಿನ ಗಮನ ಹರಿಸಬೇಕು. ಹೆಚ್ಚಿನ ಅಂಕಗಳನ್ನು ಪಡೆಯಲು ಪ್ರಯತ್ನಿಸಬೇಕೆಂದರು.
    ಕಾಲೇಜಿನ ಪ್ರಾಂಶುಪಾಲ ಆರ್. ಸತೀಶ್, ಉಪ ಪ್ರಾಂಶುಪಾಲ ಡಿ. ನಾಗರಾಜ್, ಪೇಪರ್‌ಟೌನ್ ಪೊಲೀಸ್ ಠಾಣಾಧಿಕಾರಿ ಭಾರತಿ, ಸಿ. ಚನ್ನಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸಿರಿ ಪ್ರಾರ್ಥಿಸಿ, ಹರ್ಷಿತ ವಂದಿಸಿದರು. ಬಿಂದು ಕಾರ್ಯಕ್ರಮ ನಿರೂಪಿಸಿದರು.  


ಭದ್ರಾವತಿ ಕಾಗದನಗರದ ಪೇಪರ್‌ಟೌನ್ ಆಂಗ್ಲ ಶಾಲೆಯಲ್ಲಿ ೪೦ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕ್ರೀಡಾ ಚಟುವಟಿಕೆಗಳ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾಚೇನಹಳ್ಳಿ ಟಿಎಂಎಇಎಸ್ ಆಯುರ್ವೇದಿಕ್ ಕಾಲೇಜಿನ ಮನೋ ಚಿಕಿತ್ಸಕರು ಮತ್ತು ಆಧ್ಯಾತ್ಮಿಕ ಚಿಂತಕರಾದ ವಿ. ಸಂತೋಷ್‌ಕುಮಾರ್ ಪಾಲ್ಗೊಂಡು ಮಾತನಾಡಿದರು.

ವಿಜೃಂಭಣೆಯಿಂದ ಜರುಗಿದ ಶ್ರೀ ಮಾರಿಯಮ್ಮ ಜಾತ್ರಾ ಮಹೋತ್ಸವ

ಕಣ್ಮನ ಸೆಳೆದ ಅಮ್ಮನವರ ಲಕ್ಷ್ಮೀ ಅಲಂಕಾರ, ಸಾವಿರಾರು ಮಂದಿಗೆ ಅನ್ನಸಂತರ್ಪಣೆ

ಭದ್ರಾವತಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಬುಧವಾರ ವಿಶೇಷವಾಗಿ ಅಮ್ಮನವರಿಗೆ ಕೈಗೊಳ್ಳಲಾಗಿದ್ದ ಲಕ್ಷ್ಮೀ ಅಲಂಕಾರ ಭಕ್ತರ ಕಣ್ಮನ ಸೆಳೆಯಿತು.
    ಭದ್ರಾವತಿ, ಜ. ೪ : ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
    ಜಾತ್ರಾ  ಮಹೋತ್ಸವ ಅಂಗವಾಗಿ ಭದ್ರಾ ನದಿ ಶಕ್ತಿ ತೀರ್ಥದಿಂದ ಸೋಮವಾರ ಬೆಳಿಗ್ಗೆ ಅಮ್ಮನವರಿಗೆ ಅಭಿಷೇಕ ನೆರವೇರಿಸಲಾಯಿತು. ಮಂಗಳವಾರ ಸಂಜೆ ಭದ್ರಾನದಿ ದಡದಲ್ಲಿ ಅಮ್ಮನವರ ಶಕ್ತಿ ಕರಗ ನಿರ್ಮಿಸಿ ಅಗ್ನಿಕುಂಡ, ತ್ರಿಶೂಲ ಮುದ್ರೆಯೊಂದಿಗೆ ವರ್ಣರಂಜಿತ ಸಿಡಿಮದ್ದು ಹಾಗು ವಿಶೇಷ ಮಂಗಳ ವಾದ್ಯಗಳೊಂದಿಗೆ ದೇವಸ್ಥಾನಕ್ಕೆ ತರಲಾಯಿತು.
    ಬುಧವಾರ ಮಧ್ಯಾಹ್ನ ಸಾವಿರಾರು ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು. ಸಂಜೆ ೫ ಅಮ್ಮನವರ ಭವ್ಯ ರಾಜಬೀದಿ ಉತ್ಸವ ಮೆರವಣಿಗೆ ನಡೆಯಿತು. ಗುರುವಾರ ಜಾತ್ರಾ ಮಹೋತ್ಸವ ಸಂಪನ್ನಗೊಳ್ಳಲಿದೆ.
    ಸಮಿತಿ ಅಧ್ಯಕ್ಷ, ಉದ್ಯಮಿ ಎ. ಮಾಧು ನೇತೃತ್ವದಲ್ಲಿ ಕಾರ್ಯಕ್ರಮಗಳು ಯಶಸ್ವಿಯಾಗಿ ಜರುಗಿದವು. ಸಮಿತಿ ಪದಾಧಿಕಾರಿಗಳು, ಸೇವಾಕರ್ತರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಜನಪ್ರತಿನಿಧಿಗಳು, ಗಣ್ಯರು ಸೇರಿದಂತೆ ನಗರದ ವಿವಿಧೆಡೆಗಳಿಂದ ಸಾವಿರಾರು ಮಂದಿ ಭಕ್ತಾಧಿಗಳು ದೇವಸ್ಥಾನಕ್ಕೆ ಆಗಮಿಸಿ ಅಮ್ಮನವರ ದರ್ಶನ ಪಡೆದರು. ವಿಶೇಷವಾಗಿ ಅಮ್ಮನವರಿಗೆ ಕೈಗೊಳ್ಳಲಾಗಿದ್ದ ಲಕ್ಷ್ಮೀ ಅಲಂಕಾರ ಭಕ್ತರ ಕಣ್ಮನ ಸೆಳೆಯಿತು.


ಭದ್ರಾವತಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಬುಧವಾರ ಸಾವಿರಾರು ಮಂದಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು.