Thursday, February 23, 2023

ಫೆ.೨೪ರ ಭದ್ರಾವತಿ ಬಂದ್‌ಗೆ ಬೆಂಬಲಿಸಿ : ಶಾರದ ಅಪ್ಪಾಜಿ

ಭದ್ರಾವತಿಯಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಪಕ್ಷದ ವಿಧಾನಸಭಾ ಕ್ಷೇತ್ರದ ಅಧ್ಯರ್ಥಿ ಶಾರದ ಅಪ್ಪಾಜಿ ಮಾತನಾಡಿದರು.
    ಭದ್ರಾವತಿ, ಫೆ. ೨೩ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟದಲ್ಲಿ ಪಕ್ಷ ರಾಜಕಾರಣ ಮಾಡುವುದಿಲ್ಲ. ಹೋರಾಟ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವ ಜೊತೆಗೆ ಕ್ಷೇತ್ರದ ಸಮಸ್ತ ನಾಗರೀಕರು ಸಹ ಫೆ.೨೪ರಂದು ಹಮ್ಮಿಕೊಳ್ಳಲಾಗಿರುವ ಭದ್ರಾವತಿ ಬಂದ್ ಹೋರಾಟ ಬೆಂಬಲಿಸುವಂತೆ ಮನವಿ ಮಾಡುವುದಾಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ ಹೇಳಿದರು.
    ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಶಾಸಕರಾದ ದಿವಂಗತ ಎಂ.ಜೆ ಅಪ್ಪಾಜಿಯವರು ಕಾರ್ಮಿಕನಾಗಿ ದುಡಿಯುವ ಜೊತೆಗೆ ಕಾರ್ಮಿಕರ ಪರವಾಗಿ ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿದ್ದರು. ಒಬ್ಬ ಕಾರ್ಮಿಕನ ಹೆಂಡತಿಯಾಗಿರುವ ನಾನು ಸಹ ಈ ಕಾರ್ಖಾನೆ ಉಳಿಯಬೇಕೆಂಬ ಹೋರಾಟದಲ್ಲಿ ತೊಡಗಿಸಿಕೊಂಡಿದ್ದೇನೆ. ಪಕ್ಷದ ವತಿಯಿಂದ ಸಹ ಹೋರಾಟ ನಡೆಸಲಾಗುತ್ತಿದ್ದು, ಗುತ್ತಿಗೆ ಕಾರ್ಮಿಕರ ಹೋರಾಟಕ್ಕೂ ಸಂಪೂರ್ಣ ಬೆಂಬಲ ನೀಡಿದ್ದೇವೆ. ವಿಐಎಸ್‌ಎಲ್ ಕಾರ್ಖಾನೆ ವಿಚಾರದಲ್ಲಿ ಯಾವುದೇ ರೀತಿ ರಾಜಕಾರಣ ಮಾಡುವುದಿಲ್ಲ. ಕ್ಷೇತ್ರದ ನಾಗರೀಕರು ಸ್ವಯಂ ಪ್ರೇರಣೆಯಿಂದ ಹೋರಾಟದಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.
    ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಈ ಕಾರ್ಖಾನೆ ಅಭಿವೃದ್ಧಿಗಾಗಿ ಶ್ರಮಿಸಿದ್ದರು. ಅಂದು ಕಾರ್ಖಾನೆಯನ್ನು ಉಕ್ಕು ಪ್ರಾಧಿಕಾರಕ್ಕೆ ವಹಿಸಿಕೊಡುವ ಮೂಲಕ ಕಾರ್ಮಿಕರ ಹಿತ ಕಾಪಾಡುವಲ್ಲಿ ಯಶಸ್ವಿಯಾಗಿದ್ದರು. ಶಿವಮೊಗ್ಗ ನಗರಕ್ಕೆ ಫೆ.೨೭ರಂದು ನೂತನ ವಿಮಾನ ನಿಲ್ದಾಣ ಉದ್ಘಾಟನೆಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರಮೋದಿಯವರು ಈ ಕಾರ್ಖಾನೆ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಹೆಚ್ಚಿನ ಆಸಕ್ತಿ ತೋರಿಸುವ ಮೂಲಕ ಕ್ಷೇತ್ರದ ಜನತೆಗೆ ಶುಭ ಸಂದೇಶ ನೀಡಬೇಕೆಂದು ಮನವಿ ಮಾಡಿದರು.
    ಕಳೆದ ದಿನಗಳ ಹಿಂದೆ ಕ್ಷೇತ್ರಕ್ಕೆ ಆಗಮಿಸಿದ್ದ ಪಂಚರತ್ನ ಯಾತ್ರೆ ಯಶಸ್ವಿಯಾಗಿದೆ. ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರಲ್ಲಿ ಮತ್ತಷ್ಟು ಆತ್ಮ ವಿಶ್ವಾಸ ಹೆಚ್ಚಿಸಿದ್ದು, ಯಶಸ್ವಿ ಕಾರಣಕರ್ತರಾದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.  
    ಪಕ್ಷದ ರಾಜ್ಯ ಕಾರ್ಯದರ್ಶಿ ಜೆ.ಪಿ ಯೋಗೇಶ್ ಮಾತನಾಡಿ, ವಿಐಎಸ್‌ಎಲ್ ಉಳಿಸುವ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ತಮ್ಮ ನಿಲುವು ಈಗಾಗಲೇ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ನಾವೆಲ್ಲರೂ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದೇವೆ. ನಮ್ಮ ಹೋರಾಟ ಈ ನಿಟ್ಟಿನಲ್ಲಿ ದಾರಿಯಲ್ಲಿಯೇ ಸಾಗಲಿದೆ ಎಂದರು.
    ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಅಧ್ಯಕ್ಷರುಗಳಾದ ಆರ್. ಕರುಣಾಮೂರ್ತಿ, ಧರ್ಮಕುಮಾರ್, ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್, ಪ್ರಮುಖರಾದ ತಿಮ್ಮೇಗೌಡ, ಕರಿಯಪ್ಪ, ಮೈಲಾರಪ್ಪ, ಉಮೇಶ್, ಮಧುಸೂದನ್, ಲೋಕೇಶ್ವರ್‌ರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನೂತನ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರು ಸೂಚಿಸಿ

ಭದ್ರಾವತಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಮಾತನಾಡಿದರು.
    ಭದ್ರಾವತಿ, ಫೆ. ೨೩ ; ಶಿವಮೊಗ್ಗ ಸೋಗಾನೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರು ಸೂಚಿಸುವಂತೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದೆ ಎಂದು ಪರಿಷತ್ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಹೇಳಿದರು.
    ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಸಂಸದ ಬಿ.ವೈ ರಾಘವೇಂದ್ರರವರ ಪರಿಶ್ರಮದ ಫಲವಾಗಿ ಸಹ್ಯಾದ್ರಿ ಗಿರಿಶೃಂಗಗಳ ತಪ್ಪಲಿನಲ್ಲಿರುವ ಮಲೆನಾಡಿನ ಹೆಬ್ಬಾಗಿಲೆಂದೇ ಪ್ರಖ್ಯಾತವಾಗಿರುವ ಶಿವಮೊಗ್ಗದ ಸೋಗಾನೆಯಲ್ಲಿ ನೂತನ ವಿಮಾನ ನಿಲ್ದಾಣ ನಿರ್ಮಾಣಗೊಂಡಿದೆ. ಈ ಹಿನ್ನಲೆಯಲ್ಲಿ ಪರಿಷತ್ ವತಿಯಿಂದ ಇವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದರು.
    ನಿಲ್ದಾಣಕ್ಕೆ ಹೆಸರನ್ನು ನಾಮಕರಣ ಮಾಡುವ ವಿಷಯದಲ್ಲಿ ಹಲವರ ಹೆಸರುಗಳು ಪ್ರಸ್ತಾಪವಾಗಿದ್ದು, ಈ ಹೆಸರುಗಳ ಪೈಕಿ ಸ್ವತಃ ಬಿ.ಎಸ್ ಯಡಿಯೂರಪ್ಪನವರು ತಮ್ಮ ಹೆಸರಿನ ಬದಲಿಗೆ ರಾಷ್ಟ್ರಕವಿ ಕುವೆಂಪುರವರ ಹೆಸರಿನ್ನಿಡಲು ಸೂಚಿಸಿರುತ್ತಾರೆ. ಅನೇಕ ಕವಿವರ್ಯರು ಹುಟ್ಟಿ ಮೆರೆದ ಹಾಗೂ ಶಿವಪ್ಪನಾಯಕರಂತಹ ಹಲವು ರಾಜಮಹಾರಾಜರುಗಳು ಆಳಿದ ಇಂತಹ ಮಲೆನಾಡಿನಲ್ಲಿ ಜನಿಸಿದಂತಹ ಕುವೆಂಪುರವರು ಸಾಹಿತ್ಯ ಕ್ಷೇತ್ರದಲ್ಲಿ ದಿಗ್ಗಜರೆನಿಸಿಕೊಂಡು, ಶ್ರೀ ರಾಮಾಯಣ
ದರ್ಶನಂ ಮಹಾಕಾವ್ಯವನ್ನು ರಚಿಸಿ ಕನ್ನಡದ ಸರ್ವಶ್ರೇಷ್ಟ ಸಾಹಿತಿ ಹಾಗೂ ಕವಿ ಎಂದು ಖ್ಯಾತಿಗೊಳಗಾಗಿ, ನಾಡಿಗೆ ಪ್ರಪ್ರಥಮ ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟ
ಮಹಾನ್ ವ್ಯಕ್ತಿಯಾಗಿದ್ದಾರೆ ಎಂದರು.
    ದೇಶಕ್ಕೆ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಚೇತನ, ಕವಿ ಕುವೆಂಪುರವರ ಹೆಸರನ್ನು ನಿರ್ಮಾಣಕ್ಕೆ ನಾಮಕರಣ ಮಾಡುವುದು ಸೂಕ್ತವಾಗಿದ್ದು, ಈ ಹಿನ್ನಲೆಯಲ್ಲಿ ಪರಿಷತ್ ವತಿಯಿಂದ ಹಕ್ಕೊತ್ತಾಯ ಮಾಡುವ ಮೂಲಕ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುತ್ತಿದೆ ಎಂದರು.
    ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ಎಚ್. ತಿಮ್ಮಪ್ಪ, ಸಂಘಟನಾ ಕಾರ್ಯದರ್ಶಿ ಬಿ. ಕಮಲಾಕರ್, ಕಾರ್ಯಕಾರಿ ಸಮಿತಿ ಸದಸ್ಯೆ ಎಂ.ಎಸ್ ಸುಧಾಮಣಿ, ಕೋಡ್ಲುಯಜ್ಞಯ್ಯ, ರೇವಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Wednesday, February 22, 2023

ಕುಮಾರಸ್ವಾಮಿ-ಸಿದ್ದರಾಮಯ್ಯ ಅಭಿಮಾನಿಗಳ ನಡುವೆ ಮಾತಿನಚಕಮಕಿ : ವ್ಯಕ್ತಿಯೋರ್ವನ ಮೇಲೆ ಹಲ್ಲೆ


    ಭದ್ರಾವತಿ, ಫೆ. ೨೨ : ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗು ಎಚ್.ಡಿ ಕುಮಾರಸ್ವಾಮಿ ಅಭಿಮಾನಿಗಳ ನಡುವೆ ಮಾತಿನ ಚಕಮಕಿ ನಡೆದು ವ್ಯಕ್ತಿಯೋರ್ವನ ಮೇಲೆ ನಡೆಸಿರುವ ಘಟನೆ ನಡೆದಿದೆ.
    ತಾಲೂಕಿನ ಮಲ್ಲಿಗೇನಹಳ್ಳಿ ಕ್ಯಾಂಪ್‌ನಲ್ಲಿ ಉದ್ಯಮಿ ಆಕಾಶ್‌ಗೆ ಗೋಣಿಬೀಡು ನಿವಾಸಿಗಳಾದ ದಿನೇಶ್, ಯೋಗೇಶ್ ಮತ್ತು ಇತರೆ ಮೂವರು ಅಡ್ಡಗಟ್ಟಿದ್ದಾರೆ. ಈ ಹಿಂದೆ ಆಕಾಶ್ ೨೦೧೩ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು ಹಾಗಾಗಿ ೨೦೨೩ ರಲ್ಲಿಯೂ ಸಿದ್ದರಾಮಯ್ಯನೇ ಮುಖ್ಯಮಂತ್ರಿ ಆಗೋದು ಎಂದು ಹೇಳಿದ್ದರು.
    ಇದೇ ವಿಚಾರವಾಗಿ ದಿನೇಶ್, ಯೋಗೀಶ್ ಮತ್ತು ಇತರೆ ಮೂವರು ಕುಮಾರ ಸ್ವಾಮಿಯವರೇ ಈ ಬಾರಿ ಮುಖ್ಯಮಂತ್ರಿಯಾಗೋದು ಎಂದು ಮಾತಿನ ಚಕಮಕಿ ನಡೆಸಿ ಆಕಾಶ್ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ಸಂದರ್ಭದಲ್ಲಿ ಕೊರಳಿನಲ್ಲಿ ಇದ್ದ ಬಂಗಾರದ ಸರ ಕಳುವಾಗಿದೆ ಎಂದು ಆಕಾಶ್ ದೂರಿನಲ್ಲಿ ದಾಖಲಿಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೆ.ಎಂ ಶೋಭ ನಿಧನ

ಕೆ.ಎಂ ಶೋಭ
    ಭದ್ರಾವತಿ, ಫೆ. ೨೨ : ನಗರದ ಹಿರಿಯ ಪತ್ರಕರ್ತ ಕೆ.ಎನ್ ರವೀಂದ್ರನಾಥ್(ಬ್ರದರ್)ರವರ ಅತ್ತಿಗೆ ಹುತ್ತಾ ಕಾಲೋನಿ ಚಂದ್ರಾಲಯ ಹಿಂಭಾಗದ ನಿವಾಸಿ ಕೆ.ಎಂ ಶೋಭ(೬೪) ನಿಧನ ಹೊಂದಿದರು.
    ೩ ಪುತ್ರರು, ಇಬ್ಬರು ಸೊಸೆಯಂದಿರು, ಮೊಮ್ಮಕ್ಕಳು ಇದ್ದರು. ಕೆ.ಎಂ ಶೋಭರವರು ಬಾಂಬೆ ಟೈಲರ್ ಎಂದು ಕರೆಯಲ್ಪಡುತ್ತಿದ್ದ ದಿವಂಗತ ಕೆ.ಎನ್ ಮಹೇಂದ್ರನಾಥ್‌ರವರ ಪತ್ನಿಯಾಗಿದ್ದಾರೆ. ಇವರ ಅಂತ್ಯಕ್ರಿಯೆ ಗುರುವಾರ ಬೆಳಿಗ್ಗೆ ಹುತ್ತಾ ಕಾಲೋನಿ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ. ಇವರ ನಿಧನಕ್ಕೆ ನಗರದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಅರಣ್ಯ ಇಲಾಖೆ ಮಣ್ಣು ದರ ನಿಗದಿಯಲ್ಲಿ ಕೋಟ್ಯಾಂತರ ರು. ಭ್ರಷ್ಟಾಚಾರ

ಮುಖ್ಯಸ್ಥರ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಿಸಲು ಅನುಮತಿ ನೀಡಿ

ಶಿವಕುಮಾರ್, ಸಾಮಾಜಿಕ ಹೋರಾಟಗಾರ
    ಭದ್ರಾವತಿ, ಫೆ. ೨೨:  ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಅರಣ್ಯಪಡೆ ಮುಖ್ಯಸ್ಥರು) ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಿಸಲು ಅನುಮತಿ ನೀಡುವಂತೆ ತಾಲೂಕಿನ ಉಕ್ಕುಂದ ಗ್ರಾಮದ ನಿವಾಸಿ, ಸಾಮಾಜಿಕ ಹೋರಾಟಗಾರ ಶಿವಕುಮಾರ್ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿದ್ದಾರೆ.
    ಅರಣ್ಯ ಇಲಾಖೆಯ ಮುಂಗಡ ಗುಂಡಿ ತೆಗೆಯುವ ಕಾಮಗಾರಿಯಲ್ಲಿ ಎಸ್.ಎಸ್.ಆರ್ ದರದಲ್ಲಿ ಯಾವುದೇ ರೀತಿಯ ಮಣ್ಣು ಪರೀಕ್ಷೆ ಮಾಡಿಸದೇ ಗಟ್ಟಿ ಮಣ್ಣು ಎಂದು ಹೆಚ್ಚಿನ ದರ ಅಳವಡಿಸಿಕೊಂಡು ರಾಜ್ಯದ ಬೊಕ್ಕಸಕ್ಕೆ ಪ್ರತಿ ವರ್ಷ ನೂರಾರು ಕೋಟಿ ನಷ್ಟ ಉಂಟುಮಾಡುತ್ತಿದ್ದು, ಇದನ್ನು ಆಯಾ ವಿಭಾಗದ ಮತ್ತು ಸರ್ಕಲ್ ವ್ಯಾಪ್ತಿಯ ಸಿಸಿಎಫ್ ಮತ್ತು ಡಿಸಿಎಫ್ ಗಳನ್ನು ಮಾಹಿತಿ ಹಕ್ಕಿನಡಿ ದಾಖಲಾತಿಗಳನ್ನು ಕೇಳಿದರೆ ಮುಂಗಡ ಕಾಮಾಗಾರಿಯನ್ನು ಕೈಗೊಳ್ಳಲು ಪ್ರಧಾನ ಮುಖ್ಯ ಅರಣ್ಯ
    ಸಂರಕ್ಷಣಾಧಿಕಾರಿ(ಅರಣ್ಯ ಪಡೆ ಮುಖ್ಯಸ್ಥರು), ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಅಭಿವೃದ್ಧಿ) ಹಾಗೂ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಸಿಇಓ(ಕಾಂಪಾ), ಅರಣ್ಯ ಭವನ ಬೆಂಗಳೂರುರವರು ನಿಗದಿಪಡಿಸಿರುವ ದತ್ತಪತ್ರಗಳನ್ವಯ ದರಗಳನ್ನು ಅಳವಡಿಸಿಕೊಂಡು ಕಾಮಗಾರಿಗಳನ್ನು ನಿರ್ವಹಿಸಲಾಗಿರುತ್ತದೆ ಎಂದು ಐಎಫ್‌ಎಸ್ ಅಧಿಕಾರಿಯಾದ ಶಿವಶಂಕರ್ ಡಿಸಿಎಫ್, ಶಿವಮೊಗ್ಗ ಹಾಗೂ ಶಿವಮೊಗ್ಗ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆ.ಟಿ ಹನುಮಂತಪ್ಪರವರು ಮಾಹಿತಿ ನೀಡಿರುತ್ತಾರೆ.
    ೨೦೧೮ ರಿಂದ ೨೦೨೧ರವರೆಗಿನ ಎ.ಜೆ ಆಡಿಟ್ ವರದಿಯಲ್ಲಿ ಯಾವುದೇ ರೀತಿಯ ಮಣ್ಣು ಪರೀಕ್ಷೆ ಮಾಡದೇ ರಾಜ್ಯದ ಬೊಕ್ಕಸಕ್ಕೆ ಶಿವಮೊಗ್ಗ ಸಿಸಿಎಫ್ ವಿಭಾಗಗಳಲ್ಲಿ ಅಧಿಕಾರಿಗಳು ೨-೩ ಕೋಟಿ ಹಣ ದುರುಪಯೋಗಪಡಿಸಿಕೊಂಡಿರುವುದು ರುಜುವಾಗಿದೆ. ಅರಣ್ಯ ಇಲಾಖೆಯಲ್ಲಿ ಈ ಹಿಂದಿನಿಂದ ಸಾವಿರಾರು ಕೋಟಿ ಹಣ ದಾಖಲೆಗಳಿಲ್ಲದೆ ಅಧಿಕಾರಿಗಳು ದುರುಪಯೋಗ ಪಡಿಸಿಕೊಳ್ಳುತ್ತಿರುವುದು ನಿರಂತರವಾಗಿ ನಡೆಯುತ್ತಿದೆ. ಇದನ್ನು ಸರ್ಕಾರ ಸಿಬಿಐ ತನಿಖೆಗೆ ವಹಿಸಬೇಕೆಂದು ದೂರನ್ನು ನೀಡಿದ್ದು, ಇದುವರೆಗೂ ತಪ್ಪಿತಸ್ಥ ಅಧಿಕಾರಿಗಳಿಗೆ ಶಿಕ್ಷೆಯಾಗಿಲ್ಲದಿರುವುದು ವಿಪರ್ಯಾಸದ ಸಂಗತಿಯಾಗಿದೆ.  
    ಪುನಃ ೨೦೨೨-೨೩ನೇ ಸಾಲಿನಲ್ಲಿ ಮುಂಗಡ ಗುಂಡಿ ತೆಗೆಯುವ ಕಾಮಗಾರಿಯಲ್ಲಿ ಗಟ್ಟಿ ಮಣ್ಣು ಎಂದು ನಮೂದಿಸಿಕೊಂಡು ಮಣ್ಣು ಪರೀಕ್ಷೆ ಮಾಡಿಸದೇ ಸರ್ಕಾರಿ ಹಣ ಹೆಚ್ಚಿನ ದರ ನಿಗದಿಪಡಿಸಿಕೊಂಡು ಹಣ ಲಪಟಾಯಿಸಿರುತ್ತಾರೆ. ರಾಜ್ಯದ ಅರಣ್ಯ ಇಲಾಖೆಯಲ್ಲಿ ೧೩ ಸರ್ಕಲ್‌ಗಳು ಇದ್ದು, ಇದೇ ರೀತಿಯ ಗಟ್ಟಿ ಮಣ್ಣಿನ ದರ ಅಳವಡಿಸಿಕೊಂಡಿರುವುದು ಮಾಹಿತಿ ಹಕ್ಕಿನಡಿ ದಾಖಲಾತಿಯನ್ನು ಪಡೆದಿರುತ್ತೇನೆ. ರಾಜ್ಯದ ಅರಣ್ಯ ಇಲಾಖೆಯಲ್ಲಿ ಎಸ್‌ಎಸ್‌ಆರ್ ದರ ಉಲ್ಲಂಘನೆ ಮಾಡಿ ಕರ್ನಾಟಕ ಆರ್ಥಿಕ ಸಂಹಿತೆಯ ವಿರುದ್ಧವಾಗಿ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದರೂ ಇವರದೆ ಡಾಟ ಶೀಟಿನಂತೆ ಹೆಚ್ಚಿನ ದರ ಅಳವಡಿಸಿಕೊಂಡಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳದ ರಾಜ್ಯದ ಎಲ್ಲಾ ಅಧಿಕಾರಿಗಳು ಇವರ ಆದೇಶದ ಮೇರೆಗೆ ಕೆಲಸ ನಿರ್ವಹಿಸುತ್ತಿರುವುದರಿಂದ ೨೦೨೧-೨೨-೨೩ನೇ ಸಾಲಿನ ಈ ಅಕ್ರಮಗಳಿಗೆ ಇವರೇ ನೇರ ಕಾರಣಕರ್ತರಾಗಿದ್ದು, ಅರಣ್ಯ ಪಡೆ ಮುಖ್ಯಸ್ಥರ ವಿರುದ್ಧ ಮಾನ್ಯ ಘನ ನ್ಯಾಯಾಲಯದಲ್ಲಿ ಪ್ರಶ್ನಿಸಲು ಇವರ ವಿರುದ್ಧ ದೂರು ದಾಖಲಿಸಲು ತುರ್ತಾಗಿ ಅನುಮತಿ ನೀಡುವಂತೆ ಕೋರಿದ್ದಾರೆ.  

ತಾಲೂಕು ಪಂಚಾಯಿತಿ ಬೂತ್ ಮಟ್ಟದಲ್ಲಿ ಇವಿಎಂ, ವಿವಿ ಪ್ಯಾರ್ಡ್‌ಗಳ ಜಾಗೃತಿ ಕಾರ್ಯಕ್ರಮ

ಭದ್ರಾವತಿ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇವಿಎಂ ಮತ್ತು ವಿವಿ ಪ್ಯಾಡ್‌ಗಳ ಕಾರ್ಯವೈಕರಿ ಮತ್ತು ಉಪಯೋಗಿಸುವಿಕೆ ಕುರಿತು ಜಾಗೃತಿ ಮತ್ತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಕಲ್ಲಹಳ್ಳಿ ಗ್ರಾಮಪಂಚಾಯಿತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಇವಿಎಂ ಮತ್ತು ವಿವಿ ಪ್ಯಾಡ್‌ಗಳ ಪ್ರಾತ್ಯಕ್ಷತೆ ಮೂಲಕ ಮತದಾನ ಮಾಡಿಸಿ ಜಾಗೃತಿ ಮೂಡಿಸಲಾಯಿತು.
    ಭದ್ರಾವತಿ, ಫೆ. ೨೨: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇವಿಎಂ ಮತ್ತು ವಿವಿ ಪ್ಯಾಡ್‌ಗಳ ಕಾರ್ಯವೈಕರಿ ಮತ್ತು ಉಪಯೋಗಿಸುವಿಕೆ ಕುರಿತು ಜಾಗೃತಿ ಮತ್ತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.
    ತಾಲೂಕಿನಲ್ಲಿ ನಗರ ಹಾಗು ಗ್ರಾಮಾಂತರ ಸೇರಿ ಒಟ್ಟು ೨೫೩ ಬೂತ್‌ಗಳಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಯಾ ಬೂತ್‌ಗಳಲ್ಲಿ ಕಾರ್ಯಕ್ರಮ ಆಯೋಜಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಹಾಗು ಅರಿವು ಮೂಡಿಸಲಾಗುತ್ತಿದೆ. ಫೆ. ೯ರಿಂದ ಕಾರ್ಯಕ್ರಮ ಆಯೋಜಿಸಿಕೊಂಡು ಬರಲಾಗುತ್ತಿದ್ದು, ತಾಲೂಕಿನಲ್ಲಿ ಒಟ್ಟು ೩೯ ಗ್ರಾಮ ಪಂಚಾಯಿತಿಗಳಿವೆ. ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು, ಸಹಾಯಕ ನಿರ್ದೇಶಕರು ಹಾಗು ಚುನಾವಣಾಧಿಕಾರಿಗಳು ಮತ್ತು ಸಿಬ್ಬಂದಿಗಳು ಮುಂದಾಗಿದ್ದಾರೆ.
    ತಾಲೂಕಿನ ಕಲ್ಲಹಳ್ಳಿ ಗ್ರಾಮಪಂಚಾಯಿತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಇವಿಎಂ ಮತ್ತು ವಿವಿ ಪ್ಯಾಡ್‌ಗಳ ಪ್ರಾತ್ಯಕ್ಷತೆ ಮೂಲಕ ಮತದಾನ ಮಾಡಿಸಿ ಜಾಗೃತಿ ಮೂಡಿಸಲಾಯಿತು. ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಅಭಿವೃದ್ಧಿ ಅಧಿಕಾರಿ ಸವಿತಾ ಮತ್ತು ಪಂಚಾಯಿತಿ ಸದಸ್ಯರು, ಕೈಗಾರಿಕಾ ತರಬೇತಿ ಸಂಸ್ಥೆಯ ಲಿಂಗರಾಜು, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿಐಎಸ್‌ಎಲ್ ಉಳಿಸಲು ಖಾಸಗಿ ಅನುದಾನರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಆಗ್ರಹ

ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಪ್ರಧಾನಮಂತ್ರಿಗೆ ಮನವಿ

ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿವಿಗಾಗಿ ತಾಲೂಕು ಖಾಸಗಿ ಅನುದಾನರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ವತಿಯಿಂದ ಬುಧವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಫೆ. ೨೨: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿವಿಗಾಗಿ ತಾಲೂಕು ಖಾಸಗಿ ಅನುದಾನರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ವತಿಯಿಂದ ಬುಧವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಲಾಯಿತು.
    ಭಾರತರತ್ನ ಸರ್ ಎಂ. ವಿಶ್ವೇಶ್ವರಾಯ ಅವರ ದೂರ ದೃಷ್ಟಿಯ ಕಾರಣದಿಂದ ಅಂದಿನ ಮೈಸೂರು ಮಹಾರಾಜರಾಗಿದ್ದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಂದ ನಿರ್ಮಾಣಗೊಂಡು ಮೈಸೂರು ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಎನ್ನುವ ಹೆಸರಿನಿಂದ ಕರೆಯಲ್ಪಡುತ್ತಿದ್ದ ಈ ಕಾರ್ಖಾನೆ ೧೯೨೩ರಲ್ಲಿ ಉತ್ಪಾದನೆ ಪ್ರಾರಂಭಿಸಿತು.  ಭಾರತದ ಸ್ವಾತಂತ್ರ್ಯ ಪೂರ್ವದಲ್ಲಿ ಪ್ರಾರಂಭಗೊಂಡ ಸರ್ಕಾರದ ಮಾಲಿಕತ್ವದ ಮೊದಲ ಏಕೈಕ ಕಾರ್ಖಾನೆ ಇದಾಗಿದ್ದು, ನಂತರ ವಿಶ್ವೇಶ್ವರಾಯ ಐರನ್ ಅಂಡ್ ಸ್ಟೀಲ್ ಕಂಪನಿ, ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಎಂಬ ಬದಲಾದ ಹೆಸರಿನಿಂದ ವಿಶೇಷ ಉಕ್ಕು ಉತ್ಪಾದನೆಗೆ ದೇಶ ವಿದೇಶಗಳಲ್ಲಿ ಹೆಸರು ಮಾಡಿ ಪ್ರಸ್ತುತ ಭಾರತ ಸರ್ಕಾರದ ನೀತಿಯಿಂದಾಗಿ ಮುಚ್ಚಲ್ಪಡುವ ಹಂತಕ್ಕೆ ಬಂದು ನಿಂತಿರುವುದು ವಿಷಾದನೀಯ ಬೆಳವಣಿಗೆಯಾಗಿದೆ.

ವಿದ್ಯಾರ್ಥಿಗಳು ಭವಿಷ್ಯದ ಪ್ರಜೆಗಳಾಗಿದ್ದು, ಇವರ ಉತ್ತಮ ಭವಿಷ್ಯದ ಹಿನ್ನಲೆಯಲ್ಲಿ ಹಾಗು ಕಾರ್ಖಾನೆಯನ್ನು ನಂಬಿ ಬದುಕುವ ಕಾರ್ಮಿಕರು, ಕುಟುಂಬ ವರ್ಗದವರ ಮತ್ತು ಸಮಸ್ತ ನಾಗರೀಕರಿಗಾಗಿ ಈ ಕಾರ್ಖಾನೆ ಉಳಿಯುವುದು ಅಗತ್ಯವಾಗಿದೆ. ಈ ಹಿನ್ನಲೆಯಲ್ಲಿ ದೇಶದ ಪ್ರಧಾನಮಂತ್ರಿಗಳು ಮನಸ್ಸು ಮಾಡಿ ಈ ಕಾರ್ಖಾನೆಯನ್ನು ಉಳಿಸಿಕೊಡುವ ಮೂಲಕ ನೆರವಿಗೆ ಮುಂದಾಗಬೇಕು.
  - ಶ್ರೀ ಪ್ರಸನ್ನನಾಥ ಸ್ವಾಮೀಜಿ, 
 ಕಾರ್ಯದರ್ಶಿಗಳು, ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠ.

    ಲಕ್ಷಾಂತರ ಕಾರ್ಮಿಕರ ಕುಟುಂಬಗಳ ಜೀವನ ನಿರ್ವಹಣೆಗೆ ಕಾರಣವಾಗಿದ್ದ ಈ ಕಾರ್ಖಾನೆ ದೇಶದ ಪ್ರಗತಿಗೆ ತನ್ನ ಕೊಡುಗೆಯನ್ನು ನೀಡಿದೆ. ನೂರು ವರ್ಷಗಳ ಇತಿಹಾಸವನ್ನು ಹೊಂದಿರುವ ಕರ್ನಾಟಕದ ಹೆಮ್ಮೆಯ ಆಸ್ತಿಯನ್ನು ತನ್ನ ನೀತಿಯ ಹೊರತಾಗಿಯು ಈಗಿನ ತಂತ್ರಜ್ಞಾನ ಬಳಸಿ, ಆಧುನೀಕರಣಗೊಳಿಸಿ ಮುಂದಿನ ಪೀಳಿಗೆಗೆ ಉಳಿಸಿಕೊಳ್ಳುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿರುತ್ತದೆ.
    ಈ ಹಿನ್ನಲೆಯಲ್ಲಿ  ಪ್ರಧಾನಮಂತ್ರಿಯವರು ದೇಶದ ಪ್ರತಿಷ್ಠಿತ ಸರ್ಕಾರಿ ಕ್ಷೇತ್ರದ ಕಾರ್ಖಾನೆಗಳಲ್ಲಿ ಹಿರಿಯದಾದ ಈ ಕಾರ್ಖಾನೆಯನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ತಕ್ಷಣವೇ ಕೈಬಿಟ್ಟು, ಆಧುನಿಕ ತಂತ್ರಜ್ಞಾನ ಬಳಸಿ ಆಧುನೀಕರಣಗೊಳಿಸಲು ಬೇಕಾಗುವ ಬಂಡವಾಳ ತೊಡಗಿಸಿ ಅಭಿವೃದ್ಧಿಪಡಿಸಬೇಕಾಗಿ ಮನವಿಯಲ್ಲಿ ಕೋರಲಾಗಿದೆ.
   ಒಕ್ಕೂಟದ ಮಹಾ ಪೋಷಕರು, ಶ್ರೀ ಕ್ಷೇತ್ರ ಆದಿಚುಂಚನಗಿರಿ ಕ್ಷೇತ್ರದ ಕಾರ್ಯದರ್ಶಿ ಶ್ರೀ ಪ್ರಸನ್ನನಾಥಸ್ವಾಮೀಜಿ, ಉಪಾಧ್ಯಕ್ಷರಾದ ಡಾ. ವಿನೀತ್ ಆನಂದ್, ಲತಾ ರಾಬರ್ಟ್, ಕಾರ್ಯದರ್ಶಿ ಶಿವಲಿಂಗೇಗೌಡ, ಸಹಕಾರ್ಯದರ್ಶಿಗಳಾದ ಬಿ.ಎಂ ಸಂತೋಷ್, ಬಿ. ದೇವರಾಜ, ಖಜಾಂಚಿ ರೆವರೆಂಡ್ ಫಾಸ್ಟರ್ ಹೇನ್ಸ್ ಜಾನ್, ನಿರ್ದೇಶಕರಾದ ಬಿ. ಜಗದೀಶ್, ಜಿ.ಎಸ್ ಮಹೇಶ್ವರಪ್ಪ, ಕೆ. ನಾಗರಾಜ್, ಸಿಸ್ಟರ್ ರೀತಾ, ಜರೇನಾ ಬೇಗಂ, ಆರ್. ಸುರೇಶ್ ಬಾಬು, ಪ್ರಭಾಕರ್, ಬಿ.ಸಿ ಪ್ರಸಾದ್, ಸಲಹೆಗಾರರಾದ ಬಿ.ಎಲ್ ರಂಗಸ್ವಾಮಿ, ಡಾ. ಮಹಾಬಲೇಶ್ವರ ಮತ್ತು ಕಾಳೇಗೌಡ, ಗುತ್ತಿಗೆ ಕಾರ್ಮಿಕರ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಸೇರಿದಂತೆ ತಾಲೂಕಿನ ಎಲ್ಲಾ ಅನುದಾನರಹಿತ ಶಾಲೆಗಳ ಸುಮಾರು ೫ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು, ಸಿಬ್ಬಂದಿ ವರ್ಗದವರು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ವಿಐಎಸ್‌ಎಲ್ ಕಾರ್ಖಾನೆ ಮುಂಭಾಗದಿಂದ ಆರಂಭಗೊಂಡ ಮೆರವಣಿಗೆ ಡಬ್ಬಲ್ ರಸ್ತೆ ಮೂಲಕ ಅಂಬೇಡ್ಕರ್ ವೃತ್ತ, ಹಾಲಪ್ಪವೃತ್ತ, ಮಾಧವಚಾರ್ ವೃತ್ತ ಮತ್ತು ರಂಗಪ್ಪ ವೃತ್ತ ಮೂಲಕ ತಾಲೂಕು ಕಛೇರಿ ತಲುಪಿತು.

ವಿದ್ಯಾರ್ಥಿಗಳು, ನಾಗರೀಕರ ಹಿತರಕ್ಷಣೆ ಬಹಳ ಮುಖ್ಯವಾಗಿದ್ದು, ಕಾರ್ಖಾನೆಯನ್ನು ಅನಗತ್ಯವಾಗಿ ರಾಜಕೀಯಕ್ಕೆ ಬಳಸಿಕೊಳ್ಳದೆ ಎಲ್ಲಾ ರಾಜಕೀಯ ಪಕ್ಷಗಳು, ಜನಪ್ರತಿನಿಧಿಗಳು ಈ ಕಾರ್ಖಾನೆ ಉಳಿಸಿಕೊಡುವ ನಿಟ್ಟಿನಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಈ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸಿ ಅಭಿವೃದ್ಧಿಗೊಳಿಸುವಂತೆ ಕೋರುತ್ತೇವೆ.
                         - ಕಾಳೇಗೌಡ,  ಸಲಹೆಗಾರರು, ಹಿರಿಯ ಕಾರ್ಮಿಕರು ಮುಖಂಡರು.