Friday, March 3, 2023

ಗುರುಭವನ ನೆಲಸಮ : 2 ಕೋ.ರು. ವೆಚ್ಚದ ಹೊಸ ಕಟ್ಟಡ ನಿರ್ಮಾಣಕ್ಕೆ ಸಿದ್ಧತೆ



ಭದ್ರಾವತಿ  ಮಾ. 3: ಸುಮಾರು ಒಂದು ದಶಕದಿಂದ ಪಾಳು ಬಿದ್ದಿದ್ದ ಶಿಕ್ಷಣ ಇಲಾಖೆಗೆ ಸೇರಿದ ಗುರುಭವನ ಇದೀಗ ನೆಲಸಮಗೊಂಡಿದ್ದು, ಇದೆ ಸ್ಥಳದಲ್ಲಿ ಹೊಸ ಕಟ್ಟಡ ನಿರ್ಮಾಣಗೊಳ್ಳಲಿದೆ.
   ತಾಲೂಕಿನಲ್ಲಿ ಶಿಕ್ಷಕರು ಹೆಚ್ಚಿನ ಪ್ರಮಾಣದಲ್ಲಿದ್ದು, ಶಿಕ್ಷಕರ ಅನುಕೂಲಕ್ಕಾಗಿ ಸುಮಾರು 5-6 ದಶಕಗಳ ಹಿಂದೆ  ತಾಲೂಕು ಕಚೇರಿ ರಸ್ತೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಳಿ ಗುರುಭವನ ನಿರ್ಮಿಸಲಾಗಿತ್ತು. ಆರಂಭದಲ್ಲಿ ಶಿಕ್ಷಕರ ದಿನಾಚರಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಕಾರ್ಯಾಗಾರಗಳು, ಶಿಕ್ಷಕರ ತರಬೇತಿ  ಸೇರಿದಂತೆ ಇನ್ನಿತರ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿದ್ದವು.  
    ಕಳೆದ ಸುಮಾರು ಒಂದು ದಶಕದಿಂದ ಈ ಭವನ ಪಾಳು ಬಿದ್ದಿದ್ದು, ಕೆಲವು ವರ್ಷಗಳ ವರೆಗೆ ಉಚಿತ ಸೈಕಲ್ ವಿತರಣೆಯ ಗೋದಾಮಾಗಿ ಬಳಸಿಕೊಳ್ಳಲಾಗಿತ್ತು.  ಹೊಸ ಗುರು ಭವನ ನಿರ್ಮಾಣಕ್ಕೆ ಶಿಕ್ಷಕರು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ, ತಾಲೂಕು ಆಡಳಿತ, ಜಿಲ್ಲಾಡಳಿತ, ಜನಪ್ರತಿನಿಧಿಗಳಿಗೆ,  ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.  
    ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್.  ಷಡಾಕ್ಷರಿ, ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ ಹಾಗೂ ಶಾಸಕ ಬಿ.ಕೆ ಸಂಗಮೇಶ್ವರ ಸೇರಿದಂತೆ ಇನ್ನಿತರರು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಸಂಸದ ಬಿ.ವೈ ರಾಘವೇಂದ್ರ ರವರ ಗಮನಸೆಳೆದು ಸುಮಾರು ಒಂದೂವರೆ ವರ್ಷದ ಹಿಂದೆ ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಗೆ 1 ಕೋ.ರು, ಗುರು ಭವನ ನಿರ್ಮಾಣಕ್ಕೆ 2 ಕೋ. ರು. ಹಾಗು ನ್ಯೂಟೌನ್ ವಿಐಎಸ್ಎಸ್ ಜೆ ಸರ್ಕಾರಿ ಪಾಲಿಟೆಕ್ನಿಕ್ ನೂತನ ಕಟ್ಟಡ ನಿರ್ಮಾಣಕ್ಕೆ ಸುಮಾರು 3.5 ಕೋ.ರು. ಅನುದಾನ ಸರ್ಕಾರದಿಂದ ಮಂಜುರಾತಿ ಮಾಡಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಹೊಸ ಕಟ್ಟಡ ನಿರ್ಮಾಣಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಕಳೆದ ಐದಾರು ದಿನಗಳಿಂದ ಶಿಥಿಲಗೊಂಡಿದ್ದ ಗುರುಭವನ ನೆಲಸಮಗೊಳಿಸುವ ಕಾರ್ಯ ನಡೆಯುತ್ತಿದೆ. 

 

Thursday, March 2, 2023

ಶ್ರೀ ನವಿಲೆ ಬಸವೇಶ್ವರ ಸ್ವಾಮಿಯ ಮಹಾ ರಥೋತ್ಸವ : ಬಿಳಿಕಿ ಹಿರೇಮಠದಲ್ಲಿ ಧಾರ್ಮಿಕ ಆಚರಣೆ


ಭದ್ರಾವತಿ, ಮಾ.3:  ತಾಲೂಕಿನ ಶ್ರೀ ಹಿರೇಮಠ ಬಿಳಿಕಿ  ಟ್ರಸ್ ವತಿಯಿಂದ ಶ್ರೀ ನವಿಲೆ ಬಸವೇಶ್ವರ ಸ್ವಾಮಿಯ ಮಹಾ ರಥೋತ್ಸವ ಅಂಗವಾಗಿ ಮಾ.4ರಂದು ಸಂಜೆ 5 ಗಂಟೆಗೆ ಶ್ರೀ ಸ್ವಾಮಿಯ ದೇವತಾ ಕಾರ್ಯ ಹಾಗೂ ಪೂಜಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
     ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಗ್ರಾಮದ ಮಹಾದ್ವಾರದಿಂದ  ಮುತ್ತೈದೆಯರು, ಕಳಸ, ಕನ್ನಡಿ, ಮಂಗಳವಾದ್ಯ ಹಾಗೂ ವೀರಗಾಸೆಯೊಂದಿಗೆ ಶ್ರೀ ಬಸವೇಶ್ವರ ಸ್ವಾಮಿಯ ರಾಜಬೀದಿ  ಉತ್ಸವ ನೆರವೇರಲಿದ್ದು, ಭಕ್ತರು ಧಾರ್ಮಿಕ ಕಾರ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.

ವಿಜ್ಞಾನ ದಿನ : ಪವಾಡಗಳ ರಹಸ್ಯ ಬಯಲು ಮೂಲಕ ಜಾಗೃತಿ


ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಭದ್ರಾವತಿ ಬೊಮ್ಮನಕಟ್ಟೆ ಸರ್.ಎಂ.ವಿ ವಿಜ್ಞಾನ ಕಾಲೇಜಿನ ವಿಜ್ಞಾನ ವೇದಿಕೆ ವತಿಯಿಂದ ಪವಾಡಗಳ ರಹಸ್ಯ ಬಯಲು ಮತ್ತು ಜ್ಞಾನ ವಿಜ್ಞಾನ ಗೀತಾ ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು. 

    ಭದ್ರಾವತಿ, ಮಾ. ೨ : ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಬೊಮ್ಮನಕಟ್ಟೆ ಸರ್.ಎಂ.ವಿ ವಿಜ್ಞಾನ ಕಾಲೇಜಿನ ವಿಜ್ಞಾನ ವೇದಿಕೆ ವತಿಯಿಂದ ಪವಾಡಗಳ ರಹಸ್ಯ ಬಯಲು ಮತ್ತು ಜ್ಞಾನ ವಿಜ್ಞಾನ ಗೀತಾ ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು.
    ಹಿರಿಯೂರು ಬಸಪ್ಪಗೌಡ ಮಲ್ಲಪ್ಪಗೌಡ ಮೆಮೋರಿಯಲ್ ರೆಸಿಡೆನ್ಸಿಯಲ್ (ಎಸ್‌ಬಿಎಂಎಂಆರ್) ಪ್ರೌಢಶಾಲೆ ಮುಖ್ಯೋಪಾಧ್ಯಾಯ, ಹವ್ಯಾಸಿ ಖಗೋಳ ಶಾಸ್ತ್ರಜ್ಞ ಹಾಗು ಗಾಯಕ ಹರೋನಹಳ್ಳಿ ಸ್ವಾಮಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಪ್ರಾತ್ಯಕ್ಷಿಕೆಯೊಂದಿಗೆ ಪವಾಡಗಳ ರಹಸ್ಯ ಬಯಲು ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.
    ಹರೋನಹಳ್ಳಿ ಸ್ವಾಮಿಯವರು ರಾಜ್ಯದ ವಿವಿಧೆಡೆ ಪವಾಡಗಳ ರಹಸ್ಯ ಬಯಲು ಕಾರ್ಯಕ್ರಮ ನಡೆಸುವ ಮೂಲಕ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇವರಿಗೆ ಹಲವಾರು ಪ್ರಶಸ್ತಿಗಳು ಲಭಿಸಿವೆ.
    ಕಾಲೇಜಿನ ವಿಜ್ಞಾನ ವೇದಿಕೆ ಸಂಚಾಲಕರಾದ ಡಾ. ಬಿ. ವಸಂತ್‌ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್.ಸಿ.ವಿ ರಾಮನ್‌ರವರ ಕುರಿತು ಹಾಗು ವಿಜ್ಞಾನ ಕ್ಷೇತ್ರಕ್ಕೆ ಅವರ ಕೊಡುಗೆಗಳನ್ನು ವಿವರಿಸಿದರು.
    ಕಾಲೇಜಿನ ಪ್ರಾಂಶುಪಾಲ ಪ್ರೊ. ಡಿ. ರಮೇಶ್ ಅಧ್ಯಕ್ಷತೆ ವಹಿಸಿದ್ದರು. ಎನ್‌ಎಸ್‌ಎಸ್ ಅಧಿಕಾರಿ ಡಾ. ಅರಸಯ್ಯ, ಐಕ್ಯೂಎಸಿ ಸಂಚಾಲಕ ಡಾ. ಜಿ.ಎಸ್ ಸಿದ್ದೇಗೌಡ  ಹಾಗು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.  

ಜಗಳ ವಿಚಾರಿಸಲು ಹೋದ ವ್ಯಕ್ತಿ ಮೇಲೆ ಹಲ್ಲೆ, ಜೀವ ಬೆದರಿಕೆ


    ಭದ್ರಾವತಿ, ಮಾ. ೨ : ಜಗಳ ವಿಚಾರಿಸಲು ಹೋದ ವ್ಯಕ್ತಿಯೋರ್ವರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.
    ಜೆ. ಉಮೇಶ್(೪೨) ಎಂಬುವರು ಹಲ್ಲೆಗೊಳಗಾಗಿದ್ದು, ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಮೇಶ್‌ರವರು ತಮಗೆ ಪರಿಚಯವಿರುವ ಸಾಗರ್ ಮತ್ತು ಇತರೆ ಮೂವರು ಮಾ.೧ರ ಸಂಜೆ ಚಿದಾನಂದ, ಪ್ರವೀಣ ಹಾಗು ನಾಗರಾಜ್ ಎಂಬುವರ ಜೊತೆ ಜಗಳವಾಡುತ್ತಿದ್ದು, ಇದನ್ನು ಕಂಡು ವಿಚಾರಿಸಲು ತೆರಳಿದ್ದಾರೆ. ಈ ಸಂದರ್ಭದಲ್ಲಿ ಸಾಗರ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೊತೆಯಲ್ಲಿದ್ದವರೊಂದಿಗೆ ಹಲ್ಲೆ ನಡೆಸುವ ಮೂಲಕ ಜೀವಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
    ಈ ಸಂಬಂಧ ಉಮೇಶ್ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ನೇಮಕ

ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ನೇಮಕ

ಭದ್ರಾವತಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ನ್ಯೂಕಾಲೋನಿ ನಿವಾಸಿ ವಿಜಯಲಕ್ಷ್ಮೀರವರನ್ನು ನೇಮಕಗೊಳಿಸಲಾಗಿದೆ.
    ಭದ್ರಾವತಿ, ಮಾ. ೨ : ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ನ್ಯೂಕಾಲೋನಿ ನಿವಾಸಿ ವಿಜಯಲಕ್ಷ್ಮೀರವರನ್ನು ನೇಮಕಗೊಳಿಸಲಾಗಿದೆ.
    ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸೂಚನೆ ಮೇರೆಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ. ಚಂದ್ರೇಗೌಡ ಉಪಾಧ್ಯಕ್ಷರನ್ನಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಪಕ್ಷದ ತತ್ವ, ಸಿದ್ದಾಂತಗಳಿಗೆ ಬದ್ಧರಾಗಿ ಇನ್ನೂ ಹೆಚ್ಚಿನ ರೀತಿಯಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಿದ್ದಾರೆ. ಶಾಸಕರ ಆಪ್ತ ಕಾರ್ಯದರ್ಶಿ ಉಷಾ ಉಪಸ್ಥಿತರಿದ್ದರು.
    ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ನೇಮಕಗೊಳ್ಳಲು ಕಾರಣಕರ್ತರಾದ ಶಾಸಕ ಬಿ.ಕೆ ಸಂಗಮೇಶ್ವರ್, ಪಕ್ಷದ ಜಿಲ್ಲಾ ಹಾಗು ತಾಲೂಕು ಮುಖಂಡರುಗಳಿಗೆ ವಿಜಯಲಕ್ಷ್ಮೀ ಕೃತಜ್ಞತೆ ಸಲ್ಲಿಸಿದ್ದಾರೆ.

ಕೆಕೆಸಿ ರಾಜ್ಯ ಕಾರ್ಯದರ್ಶಿಯಾಗಿ ಎಂ. ಅನುಸೂಯಾ ನೇಮಕ



ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ಮತ್ತು ನೌಕರರ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಭದ್ರಾವತಿ ಹಳೇನಗರ ಕೇಶವಪುರ ಬಡಾವಣೆ ನಿವಾಸಿ ಎಂ. ಅನುಸೂಯಾರವರನ್ನು ನೇಮಕಗೊಳಿಸಿ ಆದೇಶಿಸಲಾಗಿದೆ. 
    ಭದ್ರಾವತಿ, ಮಾ. ೨ :  ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ಮತ್ತು ನೌಕರರ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಹಳೇನಗರ ಕೇಶವಪುರ ಬಡಾವಣೆ ನಿವಾಸಿ ಎಂ. ಅನುಸೂಯಾರವರನ್ನು ನೇಮಕಗೊಳಿಸಿ ಆದೇಶಿಸಲಾಗಿದೆ.
    ಅಖಿಲ ಭಾರತ ಅಸಂಘಟಿತ ಕಾರ್ಮಿಕರ ಮತ್ತು ನೌಕರರ (ಕೆ.ಕೆ.ಸಿ) ರಾಷ್ಟ್ರೀಯ ಅಧ್ಯಕ್ಷ ಡಾ. ಉದಿತ್ ರಾಜ್ ೫ ಹಾಗೂ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರವರ ಸೂಚನೆ ಮೇರೆಗೆ  ಅಖಿಲ ಭಾರತ ಅಸಂಘಟಿತ ಕಾರ್ಮಿಕರ ಮತ್ತು ನೌಕರರ (ಕೆ.ಕೆ.ಸಿ) ರಾಜ್ಯಾಧ್ಯಕ್ಷ ಜಿ.ಎಸ್ ಮಂಜುನಾಥ್‌ರವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
    ಅಸಂಘಟಿತ ಕಾರ್ಮಿಕರನ್ನು ಸಂಘಟಿಸಿ ಪಕ್ಷದ ಬಲವರ್ಧನೆಗೆ ಹೆಚ್ಚಿನ ಸಹಕಾರಿಯಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಾರ್ಯೋನ್ಮುಕರಾಗಬೇಕೆಂದು ಕೋರಿದ್ದಾರೆ.
    ಅಖಿಲ ಭಾರತ ಅಸಂಘಟಿತ ಕಾರ್ಮಿಕರ ಮತ್ತು ನೌಕರರ (ಕೆ.ಕೆ.ಸಿ) ಪ್ರಧಾನ ಕಾರ್ಯದರ್ಶಿ ಸಂತೋಷ್, ಸಂಚಾಲಕ ಡಾ. ವಿಜಯ್ ರಾಜೇಂದ್ರ ಹಾಗು ಉಡುಪಿ ಜಿಲ್ಲಾ ವೀಕ್ಷಕ ಎಸ್.ಎನ್ ಶಿವಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಳ್ಳಲು ಕಾರಣಕರ್ತರಾದ ಶಾಸಕ ಬಿ.ಕೆ ಸಂಗಮೇಶ್ವರ್, ಪಕ್ಷದ ಜಿಲ್ಲಾ ಹಾಗು ತಾಲೂಕು ಮುಖಂಡರುಗಳಿಗೆ ಅನುಸೂಯಾ ಕೃತಜ್ಞತೆ ಸಲ್ಲಿಸಿದ್ದಾರೆ.

ಪ್ರಧಾನಿಯವರಿಗೆ ಮನವಿ ಸಲ್ಲಿಸಲು ಅವಕಾಶ ನೀಡದಿರುವುದು ಖಂಡನೀಯ

ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಸಂಘಟನೆಗಳ ಪ್ರಮುಖರ ಆಕ್ರೋಶ

ಭದ್ರಾವತಿಯಲ್ಲಿ ವಿಐಎಸ್‌ಎಲ್ ಕಾರ್ಖಾನೆ ಗುತ್ತಿಗೆ ಕಾರ್ಮಿಕರ ಸಂಘಟನೆಗಳ ಪ್ರಮುಖರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
    ಭದ್ರಾವತಿ, ಮಾ. ೨ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಕಾರ್ಖಾನೆ ಮುಂಭಾಗ ಶಾಂತಿಯುತವಾಗಿ ಅನಿರ್ಧಿಷ್ಟಾವಧಿ ಹೋರಾಟ ನಡೆಸುತ್ತಿದ್ದು,     ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಗುತ್ತಿಗೆ ಕಾರ್ಮಿಕರು ಮನವಿ ಸಲ್ಲಿಸಲು ಅವಕಾಶ ನೀಡದಿರುವುದ ಖಂಡನೀಯ ಎಂದು ಗುತ್ತಿಗೆ ಕಾರ್ಮಿಕರ ಸಂಘಟನೆಗಳ ಪ್ರಮುಖರು ಆಕ್ರೋಶ ವ್ಯಕ್ತಪಡಿಸಿದರು.
    ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಮುಖರು, ಮುಖ್ಯವಾಗಿ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆಯಬೇಕು, ಅಗತ್ಯವಿರುವ ಬಂಡವಾಳ ತೊಡಗಿಸಬೇಕು ಹಾಗು ಗುತ್ತಿಗೆ ಕಾರ್ಮಿಕರಿಗೆ ಉದ್ಯೋಗ ನೀಡಬೇಕೆಂಬ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಜ.೧೯ರಿಂದ ಕಾರ್ಖಾನೆ ಮುಂಭಾಗ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ನಾವುಗಳು ಯಾವುದೇ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಅಥವಾ ವ್ಯಕ್ತಿಗಳ ಪರವಾಗಿಲ್ಲ. ನಮ್ಮ ಹೋರಾಟದಲ್ಲಿ ಎಲ್ಲರಿಗೂ ಮುಕ್ತವಾದ ಅವಕಾಶ ನೀಡಿದ್ದೇವೆ. ಇದುವರೆಗೂ ನಮ್ಮ ಹೋರಾಟಕ್ಕೆ ಕೇಂದ್ರ ಸರ್ಕಾರ ಅಥವಾ ಉಕ್ಕು ಪ್ರಾಧಿಕಾರ ಯಾವುದೇ ರೀತಿ ಸ್ಪಂದಿಸದಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದರು.
    ರಾಜಕೀಯ ಇಚ್ಛಾಶಕ್ತಿ ಇಲ್ಲದೆ ಮತ್ತು ರಾಜಕೀಯ ಲಾಭ, ನಷ್ಟದ ಪಿತೂರಿಯಿಂದ ಈ ಕಾರ್ಖಾನೆಯನ್ನು ಮುಚ್ಚಲು ಹೊರಟಿರುವುದು ಖಂಡನೀಯ. ರಾಜಕೀಯವಾಗಿ ಎಲ್ಲಾ ಪ್ರಯತ್ನಗಳಾದ ಮೇಲೂ ನಮ್ಮ ಕಾರ್ಖಾನೆಯನ್ನು ಉಳಿಸಿಕೊಳ್ಳಲು ನಮಗೆ ಉಳಿದಿದ್ದು ಒಂದೇ ಮಾರ್ಗ ಪ್ರಧಾನ ಮಂತ್ರಿಯವರೊಂದಿನ ನೇರ ಭೇಟಿ.  ಈ ಹಿನ್ನಲೆಯಲ್ಲಿ ಫೆ.೨೭ರಂದು ಶಿವಮೊಗ್ಗ ಸೋಗಾನೆಯಲ್ಲಿ ನಿರ್ಮಿಸಲಾಗಿರುವ ನೂತನ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿಯವರ ಆಗಮನ ಎದುರು ನೋಡಲಾಗುತ್ತಿತ್ತು ಎಂದರು.
    ನಮಗೆ ದೊರಕಿರುವ ಅಮೂಲ್ಯವಾದ ಅವಕಾಶ ಕಾರ್ಖಾನೆ ಹಾಗು ಭದ್ರಾವತಿಯ ಉತ್ತಮ ಭವಿಷ್ಯದ ಸಲುವಾಗಿ ಒಳ್ಳೆಯ ರೀತಿಯಲ್ಲಿ ಉಪಯೋಗಿಸಿಕೊಂಡು ಕಾರ್ಖಾನೆಯ ಸಂಕ್ಷಿಪ್ತ ವಿಚಾರವನ್ನು ಅವರ ಗಮನಕ್ಕೆ ತರಲು ಹಾಗು ಕಾರ್ಖಾನೆ ಮುಚ್ಚುವ ನಿರ್ಧಾರ ಕೈಬಿಟ್ಟು ಅಗತ್ಯವಿರುವ ಬಂಡವಾಳ ತೊಡಗಿಸುವಂತೆ ಮನವಿ ಮಾಡಿಕೊಳ್ಳಲು ತೀರ್ಮಾನಿಸಲಾಗಿತ್ತು. ನಮಗೆ ಪ್ರಧಾನ ಮಂತ್ರಿಯವರ ಅಧೀನ ಕಾರ್ಯದರ್ಶಿ(ಪಿ.ಎಸ್)ಯವರಿಗೆ ಮನವಿ ಸಲ್ಲಿಸಲು ಅವಕಾಶ ಮಾಡಿಕೊಡಲಾಯಿತು. ಆದರೆ ನಮಗೆ ನೇರವಾಗಿ ಪ್ರಧಾನಮಂತ್ರಿಯವರಿಗೆ ಮನವಿ ಸಲ್ಲಿಸಲು ಅವಕಾಶ ನೀಡುವಂತೆ ಕೋರಲಾಗಿತ್ತು. ಆದರೆ ಇದಕ್ಕೆ ಅವಕಾಶ ನೀಡಲಿಲ್ಲ. ಈ ಹಿನ್ನಲೆಯಲ್ಲಿ ಕಾರ್ಖಾನೆ ಮುಂಭಾಗದಿಂದ ಬೆಳಿಗ್ಗೆ ೬.೩೦ಕ್ಕೆ ಪಾದಯಾತ್ರೆ ಮೂಲಕ ವಿಮಾನ ನಿಲ್ದಾಣ ತಲುಪಲು ತೀರ್ಮಾನಿಸಲಾಯಿತು ಎಂದರು.
    ಪ್ರಧಾನ ಮಂತ್ರಿಯವರಿಗೆ ನಾವುಗಳು ಮನವಿ ಸಲ್ಲಿಸುವುದನ್ನು ತಪ್ಪಿಸಲು ಪೊಲೀಸರು ನಮ್ಮನ್ನು ಬೆಳಗಿನ ಜಾವ ಸುಮಾರು ೩ ಗಂಟೆ ಸಮಯದಲ್ಲಿ ಏಕಾಏಕಿ ಮನೆಯಿಂದ ಬಂಧಿಸಿ ಹೊಳೆಹೂನ್ನೂರು ಮಂಟದದಲ್ಲಿಡಲಾಗಿತ್ತು. ಸಂಜೆ ೪ ಗಂಟೆ ಸಮಯದಲ್ಲಿ ಬಿಡುಗಡೆಗೊಳಿಸಿದರು. ಈ ನಡುವೆ ನಮ್ಮನ್ನು ಬಂಧಿಸಿರುವ ವಿಷಯ ತಿಳಿದ ಗುತ್ತಿಗೆ ಕಾರ್ಮಿಕರು ಧೈರ್ಯಗೆಡದೆ ಹೋರಾಟ ಮುಂದುವರೆಸುವ ಮೂಲಕ ಪಾದಯಾತ್ರೆ ಆರಂಭಿಸಿದರು. ಆದರೆ ಮಾರ್ಗಮಧ್ಯ ಬಿಳಿ ಕ್ರಾಸ್ ಪಾದಯಾತ್ರೆ ತಡೆದು ವಶಕ್ಕೆ ಪಡೆಯಲಾಯಿತು. ನಮಗೆ ಮನವಿ ಸಲ್ಲಿಸಲು ಅವಕಾಶ ನೀಡದಿರುವುದು ಖಂಡನೀಯವಾಗಿದ್ದು, ಇದರ ವಿರುದ್ಧ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದರು.
    ನಮಗೆ ಯಾರ ಮೇಲೂ ವೈಯಕ್ತಿಕವಾಗಿ ದ್ವೇಷವಿಲ್ಲ. ನಮ್ಮ ಹೋರಾಟಕ್ಕೆ ಬೆಂಬಲ ನೀಡುವ ನೆಪದಲ್ಲಿ ಕೆಲವರು ನಮ್ಮನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ನಮ್ಮ ಹೋರಾಟಕ್ಕೆ ಕಪ್ಪು ಚುಕ್ಕೆಯನ್ನು ತರಲು ಯತ್ನಿಸುತ್ತಿದ್ದಾರೆ. ಇದನ್ನು ಸಹ ನಾವುಗಳು ಖಂಡಿಸುತ್ತೇವೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಮತ್ತು ಸಂಸದ ಬಿ.ವೈ ರಾಘವೇಂದ್ರರವರ ಮೇಲೆ ನಮಗೆ ತುಂಬಾ ಗೌರವಿದೆ. ನಮ್ಮ ಹೋರಾಟ ಕಾರ್ಖಾನೆ ಉಳಿಸಿಕೊಳ್ಳುವುದಾಗಿದೆ ಎಂದರು.
 ನಮಸಂಘವು ನಮ್ಮ ಎಂದರು.
    ಪತ್ರಿಕಾಗೋಷ್ಠಿಯಲ್ಲಿ ಕಾರ್ಮಿಕ ಸಂಘಟನೆಗಳ ಅಧ್ಯಕ್ಷರಾದ ಎಚ್.ಜಿ ಸುರೇಶ್, ಕುಮಾರಸ್ವಾಮಿ, ಪ್ರಮುಖರಾದ ಆರ್. ಮಂಜುನಾಥ್, ಪಿ. ರಾಕೇಶ್, ಎನ್.ಆರ್ ವಿನಯ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.