Saturday, March 4, 2023

ಹೊಸಸೇತುವೆ ಕಾಮಗಾರಿ ಕಳಪೆ, ಅವೈಜ್ಞಾನಿಕ : ಪ್ರತಿಭಟನೆ

ಭದ್ರಾವತಿ ನಗರದ ಹೃದಯ ಭಾಗದಲ್ಲಿ ಭದ್ರಾ ಹಳೇಸೇತುವೆ ಪಕ್ಕದಲ್ಲಿ ನಿರ್ಮಾಣಗೊಳ್ಳುತ್ತಿರುವ ಹೊಸಸೇತುವೆ ಕಾಮಗಾರಿ ಅವೈಜ್ಞಾನಿಕವಾಗಿ, ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಆರೋಪಿಸಿ ಶನಿವಾರ ತಾಲೂಕು ಸಾರ್ವಜನಿಕ ಹಿತರಕ್ಷಣಾ ಸಮಿತಿ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಯಿತು.
    ಭದ್ರಾವತಿ, ಮಾ. ೪ : ನಗರದ ಹೃದಯ ಭಾಗದಲ್ಲಿ ಭದ್ರಾ ಹಳೇಸೇತುವೆ ಪಕ್ಕದಲ್ಲಿ ನಿರ್ಮಾಣಗೊಳ್ಳುತ್ತಿರುವ ಹೊಸಸೇತುವೆ ಕಾಮಗಾರಿ ಅವೈಜ್ಞಾನಿಕವಾಗಿ, ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಆರೋಪಿಸಿ ಶನಿವಾರ ತಾಲೂಕು ಸಾರ್ವಜನಿಕ ಹಿತರಕ್ಷಣಾ ಸಮಿತಿ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಯಿತು. 
ನಗರಸಭೆ ವಾರ್ಡ್ ನಂ.೩ರ ವ್ಯಾಪ್ತಿಯಲ್ಲಿ ಕಳೆದ ಸುಮಾರು ೫ ವರ್ಷಗಳಿಂದ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ಮಂದಗತಿಯಲ್ಲಿ ಸಾಗುವ ಜೊತೆಗೆ ಕಳಪೆಯಿಂದ ಕೂಡಿದೆ. ಅಲ್ಲದೆ ಸೇತುವೆ ಕಾಮಗಾರಿ ಮೂಲ ನೀಲನಕ್ಷೆಯಂತೆ ಕೈಗೊಳ್ಳದೆ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಒತ್ತಡಕ್ಕೆ ಮಣಿದು ತರಾತುರಿಯಲ್ಲಿ ಅವೈಜ್ಞಾನಿಕವಾಗಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. 
ಕಾಮಗಾರಿಯನ್ನು ಮೂಲ ನೀಲನಕ್ಷೆಯಂತೆ ಸೇತುವೆ ಸಮೀಪದಲ್ಲಿರುವ ಕಟ್ಟಡಗಳನ್ನು ತೆರವುಗೊಳಿಸಿ ಕೈಗೊಳ್ಳಬೇಕು. ಆದರೆ ಇದೀಗ ತರಾತುರಿಯಲ್ಲಿ ಸೇತುವೆ ರಸ್ತೆಯನ್ನು ಓರೆಯಾಗಿ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ವಾಹನಗಳ ಸಂಚಾರಕ್ಕೆ, ಪಾದಚಾರಿಗಳಿಗೆ ತೊಂದರೆಯಾಗಲಿದೆ. ತಕ್ಷಣ ಕಾಮಗಾರಿಯನ್ನು ಸ್ಥಗಿತಗೊಳಿಸಿ ಕಟ್ಟಡಗಳನ್ನು ತೆರವುಗೊಳಿಸಿ ಮೂಲ ನೀಲನಕ್ಷೆಯಂತೆ ಕೈಗೊಳ್ಳಬೇಕೆಂದು ಆಗ್ರಹಿಸಿದರು. 

    ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ನಗರಸಭಾ ಸದಸ್ಯರಾದ ಜಾರ್ಜ್, ಆರ್. ಮೋಹನ್‌ಕುಮಾರ್, ಉದಯ್‌ಕುಮಾರ್, ಬಸವರಾಜ ಬಿ. ಆನೆಕೊಪ್ಪ, ನಗರಸಭೆ ಮಾಜಿ ಅಧ್ಯಕ್ಷ ಆರ್. ಆರ್. ಕರುಣಾಮೂರ್ತಿ, ಮಾಜಿ ಉಪಾಧ್ಯಕ್ಷೆ ಸಾವಿತ್ರಮ್ಮ ಪುಟ್ಟೇಗೌಡ,  ಮಾಜಿ ಸದಸ್ಯರಾದ ಎಂ.ಎ ಅಜಿತ್, ಮೋಹನ್‌ರಾವ್, ಗುಣಶೇಖರ್, ಮಾಜಿ ಉಪಮೇಯರ್ ಮಹಮದ್ ಸನಾವುಲ್ಲಾ, ಪ್ರಮುಖರಾದ ಅಮೋಸ್, ನಕುಲ್, ಗೋಕುಲ್ ಕೃಷ್ಣ, ಪ್ರಕಾಶ್, ಸೈಯದ್ ಅಜ್ಮಲ್, ಧರ್ಮರಾಜ್, ತಬ್ರೇಸ್ ಖಾನ್, ವೆಂಕಟೇಶ್ ಉಜ್ಜನಿಪುರ, ಸೇರಿದಂತೆ ಸ್ಥಳೀಯ ಮುಖಂಡರು, ನಿವಾಸಿಗಳು ಪಾಲ್ಗೊಂಡಿದ್ದರು. 

ಎನ್‌ಡಿಪಿಎಸ್ ಪ್ರಕರಣ : ಇಬ್ಬರಿಗೆ ೬ ತಿಂಗಳ ಕಠಿಣ ಕಾರಾವಾಸ ಶಿಕ್ಷೆ


    ಭದ್ರಾವತಿ, ಮಾ. ೪ : ಎನ್‌ಡಿಪಿಎಸ್ ಪ್ರಕರಣದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ೬ ತಿಂಗಳ ಕಠಿಣ ಕಾರಾವಾಸ ಶಿಕ್ಷೆ ಮತ್ತು ೧೦ ಸಾವಿರ ರು. ದಂಡ ವಿಧಿಸಿ ತೀರ್ಪು ನೀಡಿದೆ.
    ಇಮ್ರಾನ್‌ಪಾಷಾ(೨೨) ಮತ್ತು ಸೈಯದ್ ರೋಷನ್(೩೮) ಶಿಕ್ಷೆಗೊಳಗಾಗಿದ್ದು, ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಠಾಣಾಧಿಕಾರಿ ಶಿಲ್ಪಾ ನಾಯನೇಗಲಿ ದೋಷಾರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಪ್ರಧಾನ ಸಿ.ಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಆರ್. ಯತೀಶ್ ಆರೋಪ ದೃಡಪಟ್ಟ ಹಿನ್ನಲೆಯಲ್ಲಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕ ಬಿ.ಎಚ್ ರಂಗಪ್ಪ ವಾದ ಮಂಡಿಸಿದ್ದರು.

ವಾಹನದ ಬಣ್ಣ ಬದಲಿಸಿ, ಹೆಚ್ಚಿನ ಶಬ್ದದ ಸೈಲೆನ್ಸರ್ ಅಳವಡಿಸಿಕೊಂಡ ಯುವಕನಿಗೆ ದಂಡ

    ಭದ್ರಾವತಿ, ಮಾ. ೪ : ಸಾರಿಗೆ (ಆರ್‌ಟಿಓ) ಅಧಿಕಾರಿಗಳಿಗೆ ಮಾಹಿತಿ ನೀಡದೆ ವಾಹನದ ಬಣ್ಣ ಬದಲಿಸಿಕೊಂಡು, ಹೆಚ್ಚಿನ ಶಬ್ದದ ಸೈಲೆನ್ಸರ್ ಅಳವಡಿಸಿಕೊಂಡ ಹಿನ್ನಲೆಯಲ್ಲಿ ನ್ಯಾಯಾಲಯ ದಂಡ ವಿಧಿಸಿ ಶಿಕ್ಷೆ ನೀಡಿರುವ ಘಟನೆ ನಡೆದಿದೆ.
    ವಾಹನ ಖರೀದಿಸುವ ವೇಳೆ ಆರ್‌ಸಿ ದಾಖಲಾತಿಯಲ್ಲಿ ನಮೂದಾಗಿರುವ ವಾಹನದ ಬಣ್ಣ ಬಳಿಕ ಬದಲಿಸಿಕೊಳ್ಳಲು ಸಾರಿಗೆ(ಆರ್‌ಟಿಓ) ಅಧಿಕಾರಿಗಳಿಗೆ ಮಾಹಿತಿ ನೀಡಬೇಕಾಗುತ್ತದೆ. ಆದರೆ ಗಗನ್ ಎಂಬ ಯುವಕ ಯಾವುದೇ ಮಾಹಿತಿ ನೀಡದೆ ವಾಹನದ ಬಣ್ಣ ಬದಲಿಸಿಕೊಂಡಿದ್ದು, ಅಲ್ಲದೆ ಹೆಚ್ಚಿನ ಶಬ್ದದ ಸೈಲೆನ್ಸರ್ ಅಳವಡಿಸಿಕೊಂಡಿರುವುದು ಸಂಚಾರಿ ಪೊಲೀಸರ ತಪಾಸಣೆ ವೇಳೆ ತಿಳಿದುಬಂದಿದೆ. ಹೆಲ್ಮೆಟ್ ಧರಿಸದೆ ವಾಹನ ಚಾಲನೆ ಮಾಡುವಾಗ ಈತ ಸಿಕ್ಕಿ ಬಿದ್ದಿದ್ದು, ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
    ನ್ಯೂಟೌನ್ ಪೊಲೀಸ್ ಠಾಣಾಧಿಕಾರಿ ರಂಗನಾಥ ಅಂತರಗಟ್ಟಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಯತೀಶ್ ದಂಡದ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

Friday, March 3, 2023

ಸಮಾಜದ ಎಲ್ಲರ ಹಿತರಕ್ಷಣೆಗೆ ನಾಡಪ್ರಭು ಕೆಂಪೇಗೌಡ ವೇದಿಕೆ ಬದ್ಧ

ಅಪ್ಪರ್‌ಹುತ್ತಾದಲ್ಲಿ ನೂತನ ಕಛೇರಿ ಉದ್ಘಾಟನೆ  


ಭದ್ರಾವತಿ ಅಪ್ಪರ್‌ಹುತ್ತಾ ಶ್ರೀ ನಂದಿ ಈಶ್ವರ ಸಂಕಷ್ಟಹರ ಗಣಪತಿ ದೇವಸ್ಥಾನ ಮುಂಭಾಗ ನಾಡಪ್ರಭು ಕೆಂಪೇಗೌಡ ಹಿತರಕ್ಷಣಾ ವೇದಿಕೆಯ ನೂತನ ಕಛೇರಿ ಉದ್ಘಾಟನೆ ನೆರವೇರಿತು.
    ಭದ್ರಾವತಿ, ಮಾ. ೪: ಕ್ಷೇತ್ರದಲ್ಲಿ ಒಕ್ಕಲಿಗರು ಸಮಾಜದ ಎಲ್ಲಾ ಸಮುದಾಯಗಳೊಂದಿಗೆ ಒಗ್ಗಟ್ಟಾಗಿ ಎಲ್ಲರ ಹಿತರಕ್ಷಣೆಗೆ ಬದ್ಧವಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ನಾಡಪ್ರಭು ಕೆಂಪೇಗೌಡ ಹಿತರಕ್ಷಣಾ ವೇದಿಕೆ ಅಸ್ತಿತ್ವಕ್ಕೆ ತರಲಾಗಿದೆ. ಇದರ ಸದುಪಯೋಗ ಎಲ್ಲರೂ ಪಡೆದುಕೊಳ್ಳಬೇಕೆಂದು ವೇದಿಕೆ ಅಧ್ಯಕ್ಷ ಟಿ. ಚಂದ್ರೇಗೌಡ ಹೇಳಿದರು.
    ಅವರು ನಗರದ ಅಪ್ಪರ್‌ಹುತ್ತಾ ಶ್ರೀ ನಂದಿ ಈಶ್ವರ ಸಂಕಷ್ಟಹರ ಗಣಪತಿ ದೇವಸ್ಥಾನ ಮುಂಭಾಗ ವೇದಿಕೆಯ ನೂತನ ಕಛೇರಿ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ಒಕ್ಕಲಿಗರು ಎಲ್ಲಾ ಸಮುದಾಯದ ಪರವಾಗಿ ಇದ್ದಾರೆ. ಸಮಾಜದಲ್ಲಿ ಅನ್ಯಾಯಕ್ಕೆ ಒಳಗಾದವರು, ಶೋಷಿತರು, ಅಸಹಾಯಕರಿದ್ದು, ಅವರ ಪರವಾಗಿ ನಿಲ್ಲಲಿದೆ. ಸಮಾಜದ ಶ್ರೀಗಳ ಮಾರ್ಗದರ್ಶನದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್, ರಾಷ್ಟ್ರಕವಿ ಕುವೆಂಪು, ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗು ನಾಡಪ್ರಭು ಕೆಂಪೇಗೌಡ ಸೇರಿದಂತೆ ಮಹಾನ್ ಆದರ್ಶ ವ್ಯಕ್ತಿಗಳ ಆದರ್ಶತನಗಳನ್ನು ಮೈಗೂಡಿಸಿಕೊಂಡು ಅವರ ಹೆಸರಿಗೆ ಚ್ಯುತಿ ಬರದಂತೆ ವೇದಿಕೆ ಭವಿಷ್ಯದಲ್ಲಿ ಮುನ್ನಡೆಯಲಿದೆ ಎಂದರು.
    ವೇದಿಕೆ ಗೌರವಾಧ್ಯಕ್ಷ ಎಸ್. ಕುಮಾರ್ ಮಾತನಾಡಿ, ನಾವೆಲ್ಲರೂ ಒಂದೇ ಎಂಬ ಸಂದೇಶ ಈ ವೇದಿಕೆ ಮೂಲಕ ಸಮಾಜಕ್ಕೆ ನೀಡಬೇಕಾಗಿದೆ. ಈ ಹಿನ್ನಲೆಯಲ್ಲಿ ಪಕ್ಷಾತೀತವಾಗಿ ವೇದಿಕೆಯನ್ನು ಅಸ್ತಿತ್ವಕ್ಕೆ ತರಲಾಗಿದೆ. ವೇದಿಕೆಯನ್ನು ಯಾವುದೇ ಕಾರಣಕ್ಕೂ ರಾಜಕಾರಣಕ್ಕೆ ಬಳಸಿಕೊಳ್ಳುವುದಿಲ್ಲ ಎಂದರು.
ವೇದಿಕೆ ಪ್ರಮುಖರಾದ ಬಾಲಕೃಷ್ಣ, ಟಿ. ವೆಂಕಟೇಶ್, ನಗರಸಭಾ ಸದಸ್ಯರಾದ ಮಣಿ ಎಎನ್‌ಎಸ್, ಲತಾ ಚಂದ್ರಶೇಖರ್ ಸೇರಿದಂತೆ ಇನ್ನಿತರರು ಮಾತನಾಡಿದರು.
    ವೇದಿಕೆ ಪದಾಧಿಕಾರಿಗಳು, ಒಕ್ಕಲಿಗ ಸಮುದಾಯದ ಮುಖಂಡರು, ವಿವಿಧ ಸಮುದಾಯಗಳ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಮುಂದುವರೆದ ಹೋರಾಟ

ರಂಭಾಪುರಿ ಜಗದ್ಗುರುಗಳಿಗೆ ಕಾರ್ಮಿಕ ನಿಯೋಗದಿಂದ ಮನವಿ

ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ಗುತ್ತಿಗೆ ಕಾರ್ಮಿಕರ ನಿಯೋಗ ಶ್ರೀ ಕ್ಷೇತ್ರ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದ ಜಗದ್ಗುರುಗಳಾದ ಶ್ರೀ ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರಿಗೆ ಕಾರ್ಖಾನೆ ಉಳಿವಿಗಾಗಿ ಮನವಿ ಸಲ್ಲಿಸಿದೆ.
    ಭದ್ರಾವತಿ, ಮಾ. ೩ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ಕಾರ್ಖಾನೆ ಮುಂಭಾಗ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟ ಮುಂದುವರೆಯುತ್ತಿದೆ. ಒಂದೆಡೆ ಹೋರಾಟ ಮೊಟಕುಗೊಳಿಸುವ ಹುನ್ನಾರ ನಡೆಯುತ್ತಿದ್ದು, ಮತ್ತೊಂದೆಡೆ ಎದೆಗುಂದದ ಗುತ್ತಿಗೆ ಕಾರ್ಮಿಕರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.
    ಶಿವಮೊಗ್ಗ ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣ ಉದ್ಘಾಟನೆಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರನ್ನು ನೇರವಾಗಿ ಭೇಟಿಯಾಗಿ ಮನವಿ ಸಲ್ಲಿಸುವ ಕಾರ್ಮಿಕರ ಬೇಡಿಕೆ ಈಡೇರದಿದ್ದರೂ ಸಹ ಕಾರ್ಮಿಕರು ಧೈರ್ಯಗೆಡದೆ ಹೋರಾಟ ಮುಂದುವರೆಸಿದ್ದಾರೆ. ಈ ನಡುವೆ ರಾಜಕೀಯ ಪಕ್ಷಗಳು ಹೋರಾಟದ ದಾರಿ ತಪ್ಪಿಸುವ ಮೂಲಕ ಮೊಟಕುಗೊಳಿಸುವ ಹುನ್ನಾರ ನಡೆಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ.
    ಈ ನಡುವೆ ೩ ದಿನಗಳ ಹಿಂದೆ ಶಿವಮೊಗ್ಗ ಜಿಲ್ಲೆ ವೀರಶೈವ ಲಿಂಗಾಯತ ಮಠಾಧೀಶರ ಮಹಾಸಭಾ ವತಿಯಿಂದ ವಿವಿಧ ಮಠಗಳ ಸ್ವಾಮೀಜಿಗಳು ಬೆಂಬಲ ಸೂಚಿಸುವ ಮೂಲಕ ಹೋರಾಟಕ್ಕೆ ಮತ್ತಷ್ಟು ಸ್ಪೂರ್ತಿಯನ್ನು ನೀಡಿದ್ದಾರೆ.
    ಗುತ್ತಿಗೆ ಕಾರ್ಮಿಕರ ನಿಯೋಗ ಶ್ರೀ ಕ್ಷೇತ್ರ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದ ಜಗದ್ಗುರುಗಳಾದ ಶ್ರೀ ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರಿಗೆ ಕಾರ್ಖಾನೆ ಉಳಿವಿಗಾಗಿ ಮನವಿ ಸಲ್ಲಿಸಿದೆ.
    ಮನವಿಗೆ ಸ್ಪಂದಿಸಿರುವ ಜಗದ್ಗುರುಗಳು ಮಾ.೫ರಂದು ಮಠಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಆಗಮಿಸಲಿದ್ದು, ಕಾರ್ಖಾನೆ ಉಳಿಸುವಂತೆ ಮನವರಿಕೆ ಮಾಡಿಕೊಡುವುದಾಗಿ ಹೇಳಿದರು.
    ನಿಯೋಗದಲ್ಲಿ ಪ್ರಮುಖರಾದ ಕಾಳೇಗೌಡ, ನರಸಿಂಹಚಾರ್, ಅಮೃತ್, ಹಾಲಸ್ವಾಮಿ, ವಿನಯ್‌ಕುಮಾರ್, ರಾಕೇಶ್, ಪ್ರತಾಪ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  



    ವಿನೂತನ ಮೌನ ಪ್ರತಿಭಟನೆ ಮೂಲಕ ಪರಿಸರ ಶಿವರಾಮ್ ಮನವಿ :
    ನಗರದ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳ ಉಳಿವಿಗಾಗಿ ರಾಜ್ಯ ಪರಿಸರ ಪ್ರಶಸ್ತಿ ಮತ್ತು ಕರ್ನಾಟಕ ರಾಜ್ಯ ಬಯಲಾಟ ಜೀವಮಾನ ಸಾಧನೆ ಪ್ರಶಸ್ತಿ ಪುರಸ್ಕೃತ ಪರಿಸರ ಶಿವರಾಮ್ ರಾಜಕಾರಣಿಗಳ ಅಸಲಿ ಬಣ್ಣ ಬಯಲುಗೊಳಿಸುವ ವಿನೂತನ ಮೌನ ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿ ಸೆಲ್ವಮಣಿಯವರಿಗೆ ಮನವಿ ಸಲ್ಲಿಸಿ ಗಮನ ಸೆಳೆದರು.
    ಪರಿಸರ ಶಿವರಾಮ್‌ರವರು ಪರಿಸರ ಕುರಿತು ಜಾಗೃತಿ ಮೂಡಿಸುವ ಜೊತೆಗೆ ಸಾಮಾಜಿಕ ಕಾಳಜಿಯೊಂದಿಗೆ ಬೀದಿ ನಾಟಕಗಳನ್ನು ಆಯೋಜಿಸಿ ಸಮಾಜವನ್ನು ಎಚ್ಚರಿಸುವ ಕಾರ್ಯದಲ್ಲಿ ತೊಡಗಿಸಿ ಕೊಂಡಿದ್ದಾರೆ. ವಿಭಿನ್ನ ರೀತಿಯ ಚಟುವಟಿಕೆಗಳ ಮೂಲಕ ಗಮನ ಸೆಳೆಯುವುದು ಇವರ ವಿಶೇಷತೆಯಾಗಿದೆ. ಇದೀಗ ವಿಐಎಸ್‌ಎಲ್ ಉಳಿವಿಗಾಗಿ ಹಮ್ಮಿಕೊಂಡಿರುವ ವಿನೂತನ ಮೌನ ಪ್ರತಿಭಟನೆ ಸಹ ಎಲ್ಲರ ಗಮನ ಸೆಳೆದಿದೆ.


ಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳ ಉಳಿವಿಗಾಗಿ ರಾಜ್ಯ ಪರಿಸರ ಪ್ರಶಸ್ತಿ ಮತ್ತು ಕರ್ನಾಟಕ ರಾಜ್ಯ ಬಯಲಾಟ ಜೀವಮಾನ ಸಾಧನೆ ಪ್ರಶಸ್ತಿ ಪುರಸ್ಕೃತ ಪರಿಸರ ಶಿವರಾಮ್ ರಾಜಕಾರಣಿಗಳ ಅಸಲಿ ಬಣ್ಣ ಬಯಲುಗೊಳಿಸುವ ವಿನೂತನ ಮೌನ ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿ ಸೆಲ್ವಮಣಿಯವರಿಗೆ ಮನವಿ ಸಲ್ಲಿಸಿ ಗಮನ ಸೆಳೆದರು.

ಶಿವಾಜಿ ಸೇವಾ ಸಂಘ : ಸದಸ್ಯರ ಮಾಹಿತಿ ನೀಡಲು ಮನವಿ


    ಭದ್ರಾವತಿ, ಮಾ. ೩ : ನಗರದ ಚನ್ನಗಿರಿ ರಸ್ತೆಯಲ್ಲಿರುವ ಶ್ರೀ ಛತ್ರಪತಿ ಶಿವಾಜಿ ಸೇವಾ ಸಂಘದ ಸದಸ್ಯರು ಕಛೇರಿ ವೇಳೆಯಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಆಗಮಿಸಿ ಮಾಹಿತಿ ನೀಡುವಂತೆ ಕೋರಲಾಗಿದೆ.
    ಸದಸ್ಯರ ವಿವರಗಳನ್ನು ಸದಸ್ಯತ್ವ ರಿಜಿಸ್ಟರ್‌ನಲ್ಲಿ ನಮೂದಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಸದಸ್ಯರು ತಮ್ಮ ಇತ್ತೀಚಿನ ಎರಡು ಭಾವಚಿತ್ರ ಹಾಗೂ ಆಧಾರಕಾರ್ಡ್ ಜೆರಾಕ್ಸ್ ಪ್ರತಿಗಳೊಂದಿಗೆ ತಕ್ಷಣ ಸಂಘದ ಕಛೇರಿಗೆ ಸಲ್ಲಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ: ೬೩೬೧೭೪೬೧೦೮ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಗುರುಭವನ ನೆಲಸಮ : 2 ಕೋ.ರು. ವೆಚ್ಚದ ಹೊಸ ಕಟ್ಟಡ ನಿರ್ಮಾಣಕ್ಕೆ ಸಿದ್ಧತೆ



ಭದ್ರಾವತಿ  ಮಾ. 3: ಸುಮಾರು ಒಂದು ದಶಕದಿಂದ ಪಾಳು ಬಿದ್ದಿದ್ದ ಶಿಕ್ಷಣ ಇಲಾಖೆಗೆ ಸೇರಿದ ಗುರುಭವನ ಇದೀಗ ನೆಲಸಮಗೊಂಡಿದ್ದು, ಇದೆ ಸ್ಥಳದಲ್ಲಿ ಹೊಸ ಕಟ್ಟಡ ನಿರ್ಮಾಣಗೊಳ್ಳಲಿದೆ.
   ತಾಲೂಕಿನಲ್ಲಿ ಶಿಕ್ಷಕರು ಹೆಚ್ಚಿನ ಪ್ರಮಾಣದಲ್ಲಿದ್ದು, ಶಿಕ್ಷಕರ ಅನುಕೂಲಕ್ಕಾಗಿ ಸುಮಾರು 5-6 ದಶಕಗಳ ಹಿಂದೆ  ತಾಲೂಕು ಕಚೇರಿ ರಸ್ತೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಳಿ ಗುರುಭವನ ನಿರ್ಮಿಸಲಾಗಿತ್ತು. ಆರಂಭದಲ್ಲಿ ಶಿಕ್ಷಕರ ದಿನಾಚರಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಕಾರ್ಯಾಗಾರಗಳು, ಶಿಕ್ಷಕರ ತರಬೇತಿ  ಸೇರಿದಂತೆ ಇನ್ನಿತರ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿದ್ದವು.  
    ಕಳೆದ ಸುಮಾರು ಒಂದು ದಶಕದಿಂದ ಈ ಭವನ ಪಾಳು ಬಿದ್ದಿದ್ದು, ಕೆಲವು ವರ್ಷಗಳ ವರೆಗೆ ಉಚಿತ ಸೈಕಲ್ ವಿತರಣೆಯ ಗೋದಾಮಾಗಿ ಬಳಸಿಕೊಳ್ಳಲಾಗಿತ್ತು.  ಹೊಸ ಗುರು ಭವನ ನಿರ್ಮಾಣಕ್ಕೆ ಶಿಕ್ಷಕರು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ, ತಾಲೂಕು ಆಡಳಿತ, ಜಿಲ್ಲಾಡಳಿತ, ಜನಪ್ರತಿನಿಧಿಗಳಿಗೆ,  ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.  
    ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್.  ಷಡಾಕ್ಷರಿ, ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ ಹಾಗೂ ಶಾಸಕ ಬಿ.ಕೆ ಸಂಗಮೇಶ್ವರ ಸೇರಿದಂತೆ ಇನ್ನಿತರರು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಸಂಸದ ಬಿ.ವೈ ರಾಘವೇಂದ್ರ ರವರ ಗಮನಸೆಳೆದು ಸುಮಾರು ಒಂದೂವರೆ ವರ್ಷದ ಹಿಂದೆ ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಗೆ 1 ಕೋ.ರು, ಗುರು ಭವನ ನಿರ್ಮಾಣಕ್ಕೆ 2 ಕೋ. ರು. ಹಾಗು ನ್ಯೂಟೌನ್ ವಿಐಎಸ್ಎಸ್ ಜೆ ಸರ್ಕಾರಿ ಪಾಲಿಟೆಕ್ನಿಕ್ ನೂತನ ಕಟ್ಟಡ ನಿರ್ಮಾಣಕ್ಕೆ ಸುಮಾರು 3.5 ಕೋ.ರು. ಅನುದಾನ ಸರ್ಕಾರದಿಂದ ಮಂಜುರಾತಿ ಮಾಡಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಹೊಸ ಕಟ್ಟಡ ನಿರ್ಮಾಣಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಕಳೆದ ಐದಾರು ದಿನಗಳಿಂದ ಶಿಥಿಲಗೊಂಡಿದ್ದ ಗುರುಭವನ ನೆಲಸಮಗೊಳಿಸುವ ಕಾರ್ಯ ನಡೆಯುತ್ತಿದೆ.