Sunday, March 12, 2023

ಸರ್ಕಾರಿ ಆಸ್ಪತ್ರೆಯಲ್ಲಿ ನೆಲಕ್ಕುಳಿದ ಮರ

ಭದ್ರಾವತಿ, ಮಾ. 13:  ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಮರ ನೆಲಕ್ಕುರುಳಿ ಬಿದ್ದಿರುವ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
    ಮರ ನೆಲಕ್ಕುರುಳಿ ಬಿದ್ದ ಪರಿಣಾಮ ಆಸ್ಪತ್ರೆ ವೈದ್ಯ ಡಾ. ಜ್ಞಾನಮೂರ್ತಿರವರ ಕಾರು ಜಖಂಗೊಂಡಿದ್ದು, ವಿದ್ಯುತ್ ತಂತಿ ಕತ್ತರಿಸಿ ಹೋಗಿದೆ. ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿಗಳು ಆಗಮಿಸಿದ್ದು, ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ.

ಪರಿಷತ್ ಅಧ್ಯಕ್ಷರಾಗಿ ಕೋಡ್ಲು ಯಜ್ಞಯ್ಯ, ಎಂ.ಆರ್ ರೇವಣಪ್ಪ



ಭದ್ರಾವತಿ, ಮಾ. 13: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಹಿರಿಯ ಸದಸ್ಯರಾದ ಕೋಡ್ಲು ಯಜ್ಞಯ್ಯ ಹಾಗು ಕರ್ನಾಟಕ ಜಾನಪದ ಪರಿಷತ್ ತಾಲೂಕು ಅಧ್ಯಕ್ಷರಾಗಿ ಶಿಕ್ಷಕ ಎಂ.ಆರ್ ರೇವಣಪ್ಪ  ಇಂದು ಅಧಿಕಾರ  ಸ್ವೀಕರಿಸಲಿದ್ದಾರೆ. 
  ಸಂಜೆ ನ್ಯೂಟೌನ್ ಪರಿಷತ್ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪದಗ್ರಹಣ ಸ್ವೀಕಾರ ನಡೆಯಲಿದೆ. ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್, ಪರಿಷತ್ ಜಿಲ್ಲಾಧ್ಯಕ್ಷ ಡಿ ಮಂಜುನಾಥ್, ನಗರಸಭಾ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ನಿಕಟ ಪೂರ್ವ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ, ಕನ್ನಡ ಸಾಹಿತ್ಯ ಸಾಂಸ್ಕೃತಿ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಸೇರಿದಂತೆ ಇತರರು ಉಪಸ್ಥಿತರಿರುವರು.
    ಡಾ. ವಸುದೇವ ಭೂಪಾಳಂ ದತ್ತಿ ನಡೆಯಲಿದ್ದು, ನಿವೃತ್ತ ಪ್ರಾಂಶುಪಾಲ ಡಾ. ಎಚ್.ಟಿ ಕೃಷ್ಣಮೂರ್ತಿ ಉಪನ್ಯಾಸ ನಡೆಸಿಕೊಡಲಿದ್ದಾರೆ. 

ವಿಐಎಸ್ಎಲ್ ಕಾರ್ಮಿಕರ ನಿಯೋಗದಿಂದ ಹಿರಿಯ ಚಲನಚಿತ್ರ ನಟ ದೊಡ್ಡಣ್ಣ ಭೇಟಿ


    ಭದ್ರಾವತಿ, ಮಾ. 13:  ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ  ಕಾರ್ಖಾನೆ ಇಂದಿನ ಸ್ಥಿತಿಗತಿ ಹಾಗೂ ಕಾರ್ಖಾನೆ ಉಳಿವಿನ ವಿಚಾರದಲ್ಲಿ ಗುತ್ತಿಗೆ ಕಾರ್ಮಿಕರ ಸಂಘ ನಡೆಸುತ್ತಿರುವ  ಅನಿರ್ಧಿಷ್ಟಾವಧಿ ಹೋರಾಟ ಕುರಿತು ಕಾರ್ಮಿಕರ ನಿಯೋಗ  ಬೆಂಗಳೂರಿನಲ್ಲಿ ಕಾರ್ಖಾನೆಯ ನಿವೃತ್ತ ನೌಕರ, ಹಿರಿಯ ಚಲನಚಿತ್ರ  ನಟ  ದೊಡ್ಡಣ್ಣ ಹಾಗೂ ಕಾರ್ಖಾನೆಯ ನಿವೃತ್ತ ಅಧಿಕಾರಿಗಳನ್ನು ಭೇಟಿಮಾಡಿ ಚರ್ಚೆ ನಡೆಸಿತು.
      ದೊಡ್ಡಣ್ಣ ಮಾತನಾಡಿ,  ನಮಗೆ ಅನ್ನ, ಬದುಕು ನೀಡಿರುವ ಕಾರ್ಖಾನೆ ಯಾವುದೇ ಕಾರಣಕ್ಕೂ ಮುಚ್ಚಬಾರದು.  ಮುಂದಿನ ಪೀಳಿಗೆಗೆ ಇದು ಉಳಿಯ ಬೇಕು.  ಈ ಹಿನ್ನೆಲೆಯಿಂದ  ವಿಐಎಸ್ಎಲ್  ಉಳಿಸಿ ಜಂಟಿ ಕ್ರಿಯಾ ಸಮಿತಿ ರಚಿಸಿ  ಮುಖ್ಯಮಂತ್ರಿ ಹಾಗು ರಾಜ್ಯದಿಂದ ಆಯ್ಕೆಯಾಗಿರುವ ಎಲ್ಲಾ ಸಂಸದರನ್ನು ತುರ್ತಾಗಿ ಭೇಟಿಯಾಗಿ ಕಾರ್ಖಾನೆ ಉಳುಸಿಕೊಳ್ಳಲು ಹೋರಾಟ ನಡೆಸುವುದಾಗಿ ಭರವಸೆ ನೀಡಿದರು.
    ಗುತ್ತಿಗೆ ಕಾರ್ಮಿಕರ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾಯಂ ಹಾಗು ನಿವೃತ್ತ ಕಾರ್ಮಿಕರು ಉಪಸ್ಥಿತರಿದ್ದರು.  

ಭೂ ಮಂಜೂರಾತಿ ರದ್ದುಗೊಳಿಸಲು, ಟಿಟಿ ದಂಡ ಶುಲ್ಕ ಮರುಪಾವತಿಸಲು ಕೋರಿ ಉಪವಿಭಾಗಾಧಿಕಾರಿಗಳಿಗೆ ಪ್ರಸ್ತಾವನೆ


    ಭದ್ರಾವತಿ, ಮಾ. ೧೨ : ತಾಲೂಕಿನ ಸಿದ್ದಾಪುರ ಗ್ರಾಮದ ಸರ್ವೆ ನಂ.೧೩೫ರ ಭೂ ಮಂಜೂರಾತಿ ರದ್ದುಗೊಳಿಸುವಂತೆ ಹಾಗು ಟಿಟಿ ದಂಡ ಶುಲ್ಕ ಅರ್ಜಿದಾರರಿಗೆ ಮರು ಪಾವತಿಸಲು ಕ್ರಮ ಕೈಗೊಳ್ಳುವಂತೆ ತಾಲೂಕು ದಂಡಾಧಿಕಾರಿ ತಹಸೀಲ್ದಾರ್‌ರವರು ಉಪವಿಭಾಗಾಧಿಕಾರಿಗಳಿಗೆ ಕೋರಿದ್ದಾರೆ.
    ಜಮೀನು ಕರ್ನಾಟಕ ಭೂ ಕಂದಾಯ ನಿಯಮಗಳು ೧೯೬೬ರ ನಿಯಮ ೧೦೮ (I) ರಂತೆ ನಗರ ವ್ಯಾಪ್ತಿ ಪ್ರದೇಶವಾಗಿದ್ದು, ಹಾಗು 'ಸಿದ್ದಾಪುರ ಆರ್‌ಎಲ್ ಅರಣ್ಯ ಪ್ರದೇಶ'ವಾಗಿರುವುದರಿಂದ ಪ್ರಸ್ತಾಪಿತ ಅನಧಿಕೃತ ಸಾಗುವಳಿ ಸಕ್ರಮಾತಿಗೆ ಸದಸ್ಯ ಕಾರ್ಯದರ್ಶಿಗಳ ಸಹಮತ ಇರುವುದಿಲ್ಲ. ಆದರೆ ಸದಸ್ಯ ಕಾರ್ಯದರ್ಶಿಗಳ ಅಭಿಪ್ರಾಯಕ್ಕೆ ವಿರುದ್ಧವಾಗಿ ಸಮಿತಿಯು ಬಹುಮತದ ಸದಸ್ಯ ಏಕಪಕ್ಷೀಯ ತೀರ್ಮಾನ ಕೈಗೊಂಡು ಅನಧಿಕೃತ ಸಾಗುವಳಿ ಸಕ್ರಮೀಕರಣ ಮಾಡಿದ್ದು, ಈ ಹಿನ್ನಲೆಯಲ್ಲಿ ೧೫ ಅರ್ಜಿದಾರರಿಗೆ ನೀಡಲಾದ ಭೂ ಮಂಜೂರಾತಿಯನ್ನು ಕರ್ನಾಟಕ ಭೂ ಕಂದಾಯ ನಿಯಮಗಳು ೧೯೬೬ರ ಕಲಂ ೧೦೮ (K) ರಡಿ ರದ್ದು ಪಡಿಸಲು ಹಾಗು ಸಮಿತಿಯ ತೀರ್ಮಾನದಂತೆ ಪಾವತಿಸಲಾದ ಟಿಟಿ ದಂಡ ಶುಲ್ಕ ಅರ್ಜಿದಾರರಿಗೆ ಮರು ಪಾವತಿಸಲು ಅವಕಾಶ ಕಲ್ಪಿಸಲು ಸ್ವಯಂ ಪ್ರಸ್ತಾವನೆ ಸಲ್ಲಿಸಿ ಕೋರಿದ್ದಾರೆ.
    ತಾಲೂಕಿನಲ್ಲಿ ಅರ್ಹ ಸಾಗುವಳಿದಾರರಿಗೆ ಉಂಟಾಗುತ್ತಿರುವ ಅನ್ಯಾಯ ಹಾಗು ತಾಲೂಕು ಕಛೇರಿಯಲ್ಲಿನ ಕೆಲವು ಭ್ರಷ್ಟ ಅಧಿಕಾರಿಗಳ ವಿರುದ್ಧ ಇತ್ತೀಚೆಗೆ ತಾಲೂಕು ಬಗರ್‌ಹುಕುಂ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಗಿತ್ತು.
 

Saturday, March 11, 2023

ಪೈಪೋಟಿ ಪತ್ರಿಕಾ ಕ್ಷೇತ್ರದಲ್ಲಿ ಕ್ರಿಯಾಶೀಲತೆ ಮುಖ್ಯ : ಸಂಸದ ಬಿ.ವೈ.ರಾಘವೇಂದ್ರ

ಭದ್ರಾವತಿ ಹಳೇನಗರದ ಪತ್ರಿಕಾ ಭವನ ಟ್ರಸ್ಟ್ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನವೀಕೃತ ಪತ್ರಿಕಾ ಭವನ ಕಟ್ಟಡ ಶನಿವಾರ ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು.
    ಭದ್ರಾವತಿ, ಮಾ. ೧೧ : ಪ್ರಸ್ತುತ ಎಲ್ಲಾ ಕ್ಷೇತ್ರಗಳಲ್ಲೂ ಪೈಪೋಟಿ ಎದುರಾಗಿದ್ದು, ಇಂತಹ ಸಂದರ್ಭದಲ್ಲಿ ಪತ್ರಕರ್ತರು ಮತ್ತಷ್ಟು ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸಬೇಕಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
    ಅವರು ಶನಿವಾರ ಹಳೇನಗರದ ಪತ್ರಿಕಾ ಭವನ ಟ್ರಸ್ಟ್ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನವೀಕೃತ ಪತ್ರಿಕಾ ಭವನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
    ಪತ್ರಿಕಾ ಕ್ಷೇತ್ರ ಸಹ ಪೈಪೋಟಿ ಎದುರಿಸುತ್ತಿದೆ. ಪತ್ರಕರ್ತರು ಮತ್ತಷ್ಟು ಕ್ರಿಯಾಶೀಲರಾಗಬೇಕು ಹೊರತು ಪ್ರಚಾರದ ದೃಷ್ಟಿಯಿಂದ ವೈಯಕ್ತಿಕ ದ್ವೇಷದ ಸುದ್ದಿ ಬಿಂಬಿಸುವುದು ಸರಿಯಲ್ಲ ಎಂದರು.
ಜನರ ತೆರಿಗೆ ಹಣದಿಂದ ಸಮುದಾಯ ಭವನಗಳಿಗೆ ಅನುದಾನ ನೀಡಿದ್ದೇನೆ. ಕೆಲವು ಭಾಗಗಳಲ್ಲಿ ನಿರ್ಮಾಣಗೊಂಡಿರುವ ಭವನಗಳು ಧೂಳು ಹಿಡಿದಿವೆ. ಇವುಗಳ ನಿರ್ವಹಣೆಗೆ ಯಾರು ಇಲ್ಲದಂತಾಗಿದೆ. ಸಮುದಾಯ ಭವನಗಳು ಸದ್ಬಳಕೆಯಾಗಬೇಕೆಂದರು.
    ನಗರದಲ್ಲಿ ಈಗಾಗಲೇ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಆರ್‌ಎಎಫ್ ಕಾರ್ಯಾರಂಭಗೊಂಡಿದೆ.  ಸೈನಿಕರ ಶಾಲೆ ನಿರ್ಮಾಣಕ್ಕೆ ಭೂಮಿ ನೀಡುವಂತೆ  ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿದೆ.  ರೈಲ್ವೆ ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ಅಭಿವೃದ್ದಿ ಕೆಲಸಗಳು ನಡೆದಿವೆ. ಸುಂದರ ಹಾಗು ಮಾದರಿ ಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಶ್ರಮಿಸುವುದಾಗಿ ಭರವಸೆ ನೀಡಿದರು.
    ಎಂಪಿಎಂ ಮತ್ತು ವಿಐಎಸ್‌ಎಲ್ ಕಾರ್ಖಾನೆಗಳ ಉಳಿಸುವ ವಿಚಾರದಲ್ಲಿ ನನ್ನ ಕರ್ತವ್ಯ ಮರೆತಿಲ್ಲ. ಕೈಚೆಲ್ಲಿಯೂ ಇಲ್ಲ. ಮಾ. ೩೦ರಂದು ವಿಐಎಸ್‌ಎಲ್ ಸ್ಥಗಿತ ವಿಚಾರ ಗೊತ್ತಾಗಿದೆ. ಹೇಗಾದರೂ ಮಾಡಿ ಉಳಿಸಿಕೊಳ್ಳಲು ಸೋಮವಾರ ಮುಖ್ಯಮಂತ್ರಿಗಳನ್ನು ಭೇಟಿಯಾಗುತ್ತಿದ್ದೇನೆ. ಜನರಿಗೆ ನ್ಯಾಯ ಸಿಗುವ ಕೆಲಸದಲ್ಲಿ ನಾವು ಶಾಸಕರು ಮಾಡುತ್ತಿದ್ದೇವೆ ಎಂದರು.
   ಶಾಸಕ ಬಿ.ಕೆ ಸಂಗಮೇಶ್ವರ್ ಭವನದ ಪದಾಧಿಕಾರಿಗಳ ನಾಮಫಲಕ ಅನಾವರಣ ಮಾಡಿ ಮಾತನಾಡಿ, ಪತ್ರಕರ್ತರು ಸತ್ಯ ಬರೆದು ಘನತೆ ಮತ್ತು ಮೌಲ್ಯ ಹೆಚ್ಚಿಸಿಕೊಳ್ಳಬೇಕು. ಸಾರ್ವಜನಿಕರ ಕುಂದು ಕೊರತೆಗಳಿಗೆ ಬೆಳಕು ಚೆಲ್ಲಬೇಕೆಂದರು.
    ಸಂಘದ ಮಾಜಿ ಅಧ್ಯಕ್ಷ ಎನ್. ಬಾಬು ಪ್ರಾಸ್ತಾವಿಕವಾಗಿ ಮಾತನಾಡಿ, ಪತ್ರಿಕಾ ಭವನಕ್ಕಾಗಿ ಸಾಕಷ್ಟು ಶ್ರಮಿಸಲಾಯಿತು. ಎಲ್ಲರ ಸಹಕಾರದಿಂದ ಬೃಹತ್ ಕಟ್ಟಡ ನಿರ್ಮಾಣಗೊಂಡಿದೆ. ರಾಜ್ಯದಲ್ಲಿಯೇ ಮೊದಲ ಪತ್ರಿಕಾಭವನ ನಮ್ಮದು ಎಂಬ ಹೆಗ್ಗಳಿಕೆ ಇದೆ. ಅಲ್ಲದೆ ನಾವು ರೂಪಿಸಿದ ಹಲವಾರು ಕಾರ್ಯಕ್ರಮಗಳು ಇದೀಗ ಜಿಲ್ಲಾ ಮಟ್ಟದಲ್ಲಿ ನಡೆಯುತ್ತಿವೆ ಎಂದರು.
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ, ಧರ್ಮ, ಜಾತಿ, ಸಮುದಾಯ ಮೀರಿದ ಭವನ ಇದಾಗಿದೆ. ಈ ಭವನ ನಿರ್ಮಾಣಕ್ಕೆ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
    ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪತ್ರಿಕಾಭವನ ಟ್ರಸ್ಟ್ ಟ್ರಸ್ಟಿಗಳಾದ ಗಣೇಶ್‌ರಾವ್ ಸಿಂಧ್ಯಾ, ಎಚ್.ಕೆ ಶಿವಶಂಕರ್, ಕೆ.ಎನ್ ರವೀಂದ್ರನಾಥ್(ಬ್ರದರ್), ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳಾದ ಉಪಾಧ್ಯಕ್ಷ ಕೂಡ್ಲಿಗೆರೆ ಮಂಜುನಾಥ್, ಖಜಾಂಚಿ ಅನಂತಕುಮಾರ್, ಸಹ ಕಾರ್ಯದರ್ಶಿ ಫಿಲೋಮಿನಾ, ಸದಸ್ಯರಾದ ಟಿ.ಎಸ್ ಆನಂದಕುಮಾರ್, ಸುದರ್ಶನ್, ಶೈಲೇಶ್ ಕೋಠಿ, ಸೈಯೀದ್ ಖಾನ್, ಕೆ.ಆರ್ ಶಂಕರ್, ಪ್ರಶಾಂತ್, ರಾಬರ್ಟ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.
    ಕಲಾವಿದ ಸುಬ್ರಹ್ಮಣ್ಯ ಪ್ರಾರ್ಥಿಸಿದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್.ಶ್ರೀಹರ್ಷ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಬಸವರಾಜ್ ವಂದಿಸಿದರು. ಗಂಗಾನಾಯ್ಕ್ ಮತ್ತು ಸುಭಾಷ್‌ರಾವ್ ಸಿಂಧ್ಯಾ ನಿರೂಪಿಸಿದರು.


ಭದ್ರಾವತಿ ಹಳೇನಗರದ ಪತ್ರಿಕಾ ಭವನ ಟ್ರಸ್ಟ್ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನವೀಕೃತ ಪತ್ರಿಕಾ ಭವನ ಕಟ್ಟಡ ಉದ್ಘಾಟನೆ ವೇದಿಕೆ ಕಾರ್ಯಕ್ರಮ ಸಂಸದ ಬಿ.ವೈ ರಾಘವೇಂದ್ರ, ಶಾಸಕ ಬಿ.ಕೆ.ಸಂಗಮೇಶ್ವರ್, ಕೆ.ಎನ್.ಶ್ರೀಹರ್ಷ, ಕಣ್ಣಪ್ಪ, ಅನುಸುಧಾ ಮೋಹನ್, ಸರ್ವಮಂಗಳ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.              

ಪುರುಷ-ಮಹಿಳೆ ಇಬ್ಬರ ದುಡಿಮೆಯಿಂದ ದೇಶದ ಅಭಿವೃದ್ಧಿ ಸಾಧ್ಯ : ಸಂಸದ ಬಿ.ವೈ ರಾಘವೇಂದ್ರ

ಭದ್ರಾವತಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ನ್ಯೂಟೌನ್ ಸಿಲ್ವರ್ ಜ್ಯೂಬಿಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಾಗು ಹೊಸ ಸೇತುವೆ ರಸ್ತೆ ಸಿದ್ದರೂಢನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಶ್ರಿತ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಕಾರ್ಯಾಗಾರ, ಸರ್ಕಾರಿ ನೌಕರರ ತಾಲೂಕು ಮಟ್ಟದ ಸಮ್ಮೇಳನ ಮತ್ತು ಮಹಿಳಾ ದಿನಾಚರಣೆ ಸಂಸದ ಬಿ.ವೈ ರಾಘವೇಂದ್ರ, ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
    ಭದ್ರಾವತಿ, ಮಾ. ೧೧ : ಮಹಿಳೆ ಮತ್ತು ಪುರುಷ ಇಬ್ಬರು ಸಹ ಸಮಾನತೆ ಕಾಯ್ದುಕೊಂಡು, ದುಡಿಮೆ ಕೈಗೊಂಡಾಗ ದೇಶದ ಅಭಿವೃದ್ಧಿ ಸಾಧ್ಯ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
    ಅವರು ಶನಿವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ನ್ಯೂಟೌನ್ ಸಿಲ್ವರ್ ಜ್ಯೂಬಿಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಾಗು ಹೊಸ ಸೇತುವೆ ರಸ್ತೆ ಸಿದ್ದರೂಢನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಶ್ರಿತ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಕಾರ್ಯಾಗಾರ, ಸರ್ಕಾರಿ ನೌಕರರ ತಾಲೂಕು ಮಟ್ಟದ ಸಮ್ಮೇಳನ ಮತ್ತು ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
    ಸರ್ಕಾರಿ ನೌಕರರು ಮಹಿಳಾ ದಿನಾಚರಣೆ ಆಚರಿಸುವ ಮೂಲಕ ಸಮಾಜದಲ್ಲಿ ಸಮಾನ ದುಡಿಮೆ ಪರಿಕಲ್ಪನೆ ಮೂಡಿಸುತ್ತಿರುವುದು ಶ್ಲಾಘನೀಯವಾಗಿದ್ದು, ೧೨ನೇ ಶತಮಾನದಲ್ಲಿಯೇ ಅಕ್ಕ ಮಹಾದೇವಿಯವರು ಸಮಾಜದಲ್ಲಿ ಸ್ತ್ರೀ ಮತ್ತು ಪುರುಷರ ನಡುವಿನ ಸಮಾನತೆಗಾಗಿ ಶ್ರಮಿಸಿದ್ದರು. ಇಂತಹ ಮಹಾನ್ ಆದರ್ಶ ಮಹಿಳೆಯ ಸುಮಾರು ೬೦ ಅಡಿ ಎತ್ತರದ ಪ್ರತಿಮೆಯನ್ನು ಅವರ ಜನ್ಮ ಸ್ಥಳ ಶಿಕಾರಿಪುರ ಉಡುತಡಿಯಲ್ಲಿ ಸುಮಾರು ೧ ಎಕರೆ ಜಾಗದಲ್ಲಿ ಪ್ರತಿಷ್ಠಾಪಿಸಲಾಗಿದ್ದು, ಮುಂದಿನ ತಿಂಗಳು ೧೭ರಂದು ಇದರ ಲೋಕಾರ್ಪಣೆ ನಡೆಯಲಿದೆ ಎಂದರು.
    ಸರ್ಕಾರಿ ನೌಕರರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಕ್ಷೇತ್ರದ ಬೆಳವಣಿಗೆಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಸ್ಪಂದಿಸುವುದಾಗಿ ಭರವಸೆ ನೀಡಿದರು.
    ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಮಾತನಾಡಿ, ಸರ್ಕಾರಿ ನೌಕರರ ಬಹಳಷ್ಟು ಬೇಡಿಕೆಗಳು ಈಡೇರುವಲ್ಲಿ  ಮಾಜಿ ಬಿ.ಎಸ್ ಯಡಿಯೂರಪ್ಪ ಮತ್ತು ಸಂಸದ ಬಿ.ವೈ ರಾಘವೇಂದ್ರರವರ ಸಹಕಾರ ಹೆಚ್ಚಿನದ್ದಾಗಿದೆ. ಇತ್ತೀಚೆಗೆ ೭ನೇ ವೇತನ ಆಯೋಗ ಜಾರಿಗೆ ಹಾಗು ಎನ್‌ಪಿಎಸ್ ಪಿಂಚಣಿ ರದ್ದುಗೊಳಿಸಲು ಒತ್ತಾಯಿಸಿ ನಡೆಸಿದ ಹೋರಾಟದ ಪರಿಣಾಮವಾಗಿ ಶೇ.೧೭ರಷ್ಟು ವೇತನ ಹೆಚ್ಚಳವಾಗಿದ್ದು, ಅಲ್ಲದೆ ಎನ್‌ಪಿಎಸ್ ರದ್ದುಗೊಳಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿ ವರದಿ ಪಡೆಯುವುದಾಗಿ ಸರ್ಕಾರ ಭರವಸೆ ನೀಡಿದೆ. ಮುಂದಿನ ದಿನಗಳಲ್ಲಿ ನಮ್ಮ ಹೋರಾಟ ಇನ್ನಷ್ಟು ಬಲಗೊಳ್ಳಬೇಕೆಂದರು.
    ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಕ್ಷೇತ್ರದ ಶಾಸಕನಾಗಿ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿದ್ದೇನೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಸ್ಪಂದಿಸುವುದಾಗಿ ಭರವಸೆ ನೀಡಿ ಬೆಂಬಲಿಸುವಂತೆ ಮನವಿ ಮಾಡಿದರು.
    ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ವಿಇಎಸ್ ವಿದ್ಯಾಸಂಸ್ಥೆ ಆಡಳಿತ ಭವನ ನಿರ್ಮಾಣಕ್ಕೆ ೧ ಕೋ. ರು. ಹಾಗು ಗುರುಭವನ ನಿರ್ಮಾಣಕ್ಕೆ ೨ ಕೋ. ರು. ಮತ್ತು ಸಿಲ್ವರ್ ಜ್ಯೂಬಿಇ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ನೂತನ ಕಟ್ಟಡ ನಿರ್ಮಾಣಕ್ಕೆ ಸುಮಾರು ೩ ಕೋ. ರೂ. ಸೇರಿದಂತೆ ಒಟ್ಟು ೬ ಕೋ.ರು ವೆಚ್ಚದ ಕಾಮಗಾರಿಗಳಿಗೆ ಸರ್ಕಾರದಿಂದ ಅನುದಾನ ಮಂಜೂರಾತಿ ಮಾಡಿಸಿಕೊಡುವಲ್ಲಿ ಸಂಘದ ರಾಜ್ಯಾಧ್ಯಕ್ಷರು, ಸಂಸದರು, ಶಾಸಕರ ಪ್ರಯತ್ನ ಹೆಚ್ಚಿನದ್ದಾಗಿದೆ. ಶಿವಮೊಗ್ಗ ನಗರದಂತೆ ಭದ್ರಾವತಿ ಸಹ ಎಲ್ಲಾ ರೀತಿಯಿಂದಲೂ ಅಭಿವೃದ್ಧಿ ಹೊಂದಬೇಕು. ಈ ನಿಟ್ಟಿನಲ್ಲಿ ಸಂಸದರು ಹೆಚ್ಚಿನ ಗಮನ ನೀಡಬೇಕೆಂದು ಮನವಿ ಮಾಡಿದರು.
    ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ನಿರ್ದೇಶಕರು, ವಿಇಎಸ್ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಪದಾಧಿಕಾರಿಗಳು, ಸರ್ಕಾರಿ ನೌಕರರ ಸಂಘದ ವಿವಿಧ ಸಂಘಟನೆಗಳು ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.