ತಾಲುಕು ಕಛೇರಿಯಲ್ಲಿ ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೩ ಗಂಟೆವರೆಗೆ
![](https://blogger.googleusercontent.com/img/a/AVvXsEheeV5vnjzLh2gF2lpYpSwwqp-ONoquxXMbNL7BLWHUPgIfZGNcUj5CgItLV8P6v-YVA238tpsHwgD-WldWlxeUV2nTY6-9oJSEg4UPMblWxepCylaY0HCx8bjWORqKufd4__DJCUpKzKyvEL_NhZhC7pGAKWarPIhbpmbV_FUDjfksm6HkFChn71s8bA=w400-h145-rw)
ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಸಭೆಯಲ್ಲಿ ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ರವಿಚಂದ್ರನಾಯಕ್ ಮಾಹಿತಿ ನೀಡಿದರು.
ಭದ್ರಾವತಿ, ಮಾ. ೩೦ : ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಈಗಾಗಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಏ.೧೩ರಿಂದ ಚುನಾವಣಾಧಿಕಾರಿಗಳ ಕಛೇರಿ ತಾಲೂಕು ಕಛೇರಿಯಲ್ಲಿ ನಾಮಪತ್ರ ಸ್ವೀಕರಿಸಲಾಗುವುದು ಎಂದು ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ರವಿಚಂದ್ರನಾಯಕ್ ತಿಳಿಸಿದರು.
ಅವರು ಗುರುವಾರ ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಮಾತನಾಡಿ, ಏ.೧೦ರಿಂದ ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಅಂದಿನಿಂದ ನಾಮಪತ್ರ ಸ್ವೀಕರಿಸಲಾಗುವುದು. ವಿನಿ ವಿಧಾನಸೌಧ ತಾಲೂಕು ಕಛೇರಿಯಲ್ಲಿ ಚುನಾವಣಾಧಿಕಾರಿಗಳ ಕಛೇರಿ ತೆರೆಯಲಾಗಿದ್ದು, ಇಲ್ಲಿ ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೩ ಗಂಟೆವರೆಗೆ ಏ.೨೦ರವರೆಗೆ ನಾಮಪತ್ರ ಸ್ವೀಕರಿಸಲಾಗುವುದು.
ಏ.೨೧ ನಾಮಪತ್ರ ಪರಿಶೀಲನೆ, ಏ.೨೪ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ.೧೦ರಂದು ಮತದಾನ ನಡೆಯಲಿದ್ದು, ಮೇ.೧೩ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ ಎಂದರು.
ಅಭ್ಯರ್ಥಿಗಳು ಚುನಾವಣಾ ಅಕ್ರಮಗಳು ನಡೆಸದಂತೆ ಎಚ್ಚರವಹಿಸಬೇಕು. ಇಲ್ಲವಾದಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು. ಪ್ರಚಾರ ಕಾರ್ಯ ಕೈಗೊಳ್ಳಲು, ಸಭೆ-ಸಮಾರಂಭ ನಡೆಸಲು ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು. ಕರಪತ್ರ ಸೇರಿದಂತೆ ಪ್ರಚಾರ ಸಾಮಗ್ರಿಗಳ ಕುರಿತು ಸಹ ಸಂಬಂಧಿಸಿದ ನೋಡಲ್ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ರೀತಿ ಗೊಂದಲಗಳು ಇದ್ದಲ್ಲಿ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದರು.
ಈ ಸಂದರ್ಭದಲ್ಲಿ ವಿವಿಧ ಪಕ್ಷದ ಪ್ರಮುಖರು ಮಾತನಾಡಿ, ಚುನಾವಣಾ ಅಕ್ರಮಕ್ಕೆ ಕಾರಣರಾದವರ ಮೇಲೆ ಮಾತ್ರ ಕಾನೂನು ಕ್ರಮ ಕೈಗೊಳ್ಳಬೇಕು. ವಿನಾಕಾರಣ ಸಂಬಂಧವಿಲ್ಲದವರ ಮೇಲೆ ಕ್ರಮ ಕೈಗೊಳ್ಳುವುದು ಸರಿಯಲ್ಲ. ಆಯೋಗ ಚುನಾವಣೆಗೆ ನಿಗದಿಪಡಿಸಿರುವ ವೆಚ್ಚ ಮೀರಿ ಹೆಚ್ಚಿನ ವೆಚ್ಚ ಮಾಡುವ ಅಭ್ಯರ್ಥಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನಗರದ ಪ್ರಮುಖ ಸ್ಥಳಗಳಲ್ಲಿ ಅಳವಡಿಸಲಾಗಿರುವ ಸಿಸಿ ಕ್ಯಾಮೆರಾಗಳು ಹಾಳಾಗಿದ್ದು, ದುರಸ್ತಿಪಡಿಸುವ ಮೂಲಕ ಚುನಾವಣಾ ಅಕ್ರಮಗಳನ್ನು ತಡೆಯಲು ಮುಂದಾಗಬೇಕು. ಹಲವು ವರ್ಷಗಳಿಂದ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳನ್ನು ಬೇರೆ ಸ್ಥಳಕ್ಕೆ ನಿಯೋಜನೆಗೊಳಿಸಬೇಕೆಂದರು.
ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರಾದ ಆರ್. ಕರುಣಾಮೂರ್ತಿ, ಡಿ.ಸಿ ಮಾಯಣ್ಣ, ಆನಂದ್(ಮೆಡಿಕಲ್), ಟಿ. ಚಂದ್ರೇಗೌಡ, ಮೊಸಹಳ್ಳಿ ಸುರೇಶ್, ಲೋಕೇಶ್ವರ್ ರಾವ್, ಶಶಿಕುಮಾರ್ ಗೌಡ, ಸುರೇಶಪ್ಪ, ಪಕ್ಷೇತರ ಅಭ್ಯರ್ಥಿ ಜಾನ್ಬೆನ್ನಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ತಹಸೀಲ್ದಾರ್ ಸುರೇಶ್ ಆಚಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ನಗರಸಭೆ ಪೌರಾಯುಕ್ತ ಮನುಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.