Saturday, April 1, 2023

ಸಂತರಲ್ಲಿ ಶ್ರೇಷ್ಠ ಸಂತ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ : ಬಿಳಿಕಿ ಶ್ರೀ

ಭದ್ರಾವತಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಶ್ರೀ ಮರುಳಸಿದ್ದೇಶ್ವರ ಜನ ಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯನವರ ನೇತೃತ್ವದಲ್ಲಿ ತುಮಕೂರು ಸಿದ್ದಗಂಗಾ ಮಠದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೬ನೇ ಹುಟ್ಟುಹಬ್ಬದ ಅಂಗವಾಗಿ ಒಳರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಿಸಲಾಯಿತು. ಬಿಳಿಕಿ ಶ್ರೀ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಭದ್ರಾವತಿ, ಏ. ೧ : ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರು ಸಂತರಲ್ಲಿ ಶ್ರೇಷ್ಠ ಸಂತರಾಗಿದ್ದು, ಈ ನಾಡಿಗೆ, ದೇಶಕ್ಕೆ ಚೈತನ್ಯರಾಗಿದ್ದಾರೆ. ಇಂತಹ ಸಂತರನ್ನು ಪಡೆದ ನಾವು ಪುಣ್ಯವಂತರು ಎಂದು ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
    ಶ್ರೀಗಳು ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಶ್ರೀ ಮರುಳಸಿದ್ದೇಶ್ವರ ಜನ ಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯನವರ ನೇತೃತ್ವದಲ್ಲಿ ತುಮಕೂರು ಸಿದ್ದಗಂಗಾ ಮಠದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೬ನೇ ಹುಟ್ಟುಹಬ್ಬದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಒಳರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವಹಿಸಿ ಮಾತನಾಡಿದರು.
    ಜಾತಿ, ಮತ, ಪಂಥಗಳನ್ನು ಮೀರಿ ಎಲ್ಲರ ವಿಶ್ವಾಸಕ್ಕೆ ಪಾತ್ರರಾಗಿ ನಾಡಿನ ಸಂತರ ಗೌರವ ಮತ್ತಷ್ಟು ಹೆಚ್ಚು ಮಾಡಿದ ಕೀರ್ತಿ ಶಿವಕುಮಾರ ಸ್ವಾಮೀಜಿಯವರಿಗೆ ಸಲ್ಲುತ್ತದೆ. ಶ್ರೀಗಳು ವಸತಿ, ಅನ್ನದಾಸೋಹ, ಅಕ್ಷರ ದಾಸೋಹಗಳ ಮೂಲಕ ಲಕ್ಷಾಂತರ ಜನರ ಬದುಕಿಗೆ ಬೆಳಕಾಗಿದ್ದರು. ಪ್ರತಿವರ್ಷ ಇವರ ಜನ್ಮದಿನ ವಿಶಿಷ್ಟವಾಗಿ ಆಚರಿಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.
    ನಮ್ಮ ದೇಶದ ಧಾರ್ಮಿಕ ಪರಂಪರೆ ವಿಶಿಷ್ಟವಾಗಿದ್ದು, ಗುರುಗಳನ್ನು ಸ್ಮರಿಸಿ ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಶಿವಕುಮಾರ ಸ್ವಾಮೀಜಿಯರು ತೋರಿಸಿಕೊಟ್ಟಿರುವ ಮಾರ್ಗದಲ್ಲಿ ಅವರ ಆದರ್ಶತನಗಳನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕೆಂದರು.
    ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಜಿ. ಸುರೇಶಯ್ಯ, ಉದ್ಯಮಿ ಬಿ.ಕೆ ಜಗನ್ನಾಥ್, ಸರ್ಕಾರಿ ಆಸ್ಪತ್ರೆ ವೈದ್ಯರಾದ ಡಾ. ಜಯರಾಜ್, ಡಾ. ಮಯೂರಿ, ಪ್ರಮುಖರಾದ ಮಹಾಸಭಾ ಮಹಿಳಾ ಘಟಕದ ಅಧ್ಯಕ್ಷೆ ರೂಪ ನಾಗರಾಜ್, ಯುವ ಘಟಕದ ಅಧ್ಯಕ್ಷ ಮಂಜುನಾಥ್, ಪ್ರಮುಖರಾದ ರವಿ, ಸತೀಶ್, ಎನ್.ಸಿ ಪ್ರಕಾಶ್, ವಾಗೀಶ್, ಜಗದೀಶ್, ನಾಗರತ್ನ ಸಿದ್ದಲಿಂಗಯ್ಯ, ಮಹಾದೇವ್, ರಾಮನಾಥ್ ಬರ್ಗೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಕವಿತಾ ಸುರೇಶ್ ನಿರೂಪಿಸಿದರು. ಪೂರ್ಣಿಮಾ ನಿರಂಜನ್ ವಂದಿಸಿದರು.

Friday, March 31, 2023

ಸೈಬರ್ ಅಪರಾಧ ಕುರಿತು ತಿಳುವಳಿಕೆ ಹೊಂದಿ : ಸಂತೋಷ್ ಪಾಟೀಲ್


ಭದ್ರಾವತಿ ಬಿ.ಎಚ್ ರಸ್ತೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗು ನ್ಯೂಟೌನ್ ವಿಐಎಸ್‌ಎಸ್‌ಜೆ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಆಯೋಜಿಸಲಾಗಿದ್ದ ವಿಶ್ವ ಗ್ರಾಹಕರ ದಿನಾಚರಣೆ ಹಾಗು ಸೈಬರ್ ಜಾಗೃತಿ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಸಿ.ಇ.ಎನ್ ಮತ್ತು ಅಪರಾಧ (ಪಿಐ)ಪೊಲೀಸ್ ಠಾಣಾಧಿಕಾರಿ ಸಂತೋಷ್ ಪಾಟೀಲ್ ಪಾಲ್ಗೊಂಡು ಮಾತನಾಡಿದರು.
    ಭದ್ರಾವತಿ, ಮಾ. ೩೧ : ವಿದ್ಯಾರ್ಥಿಗಳು ಸೈಬರ್ ಅಪರಾಧಗಳ ಕುರಿತು ಹೆಚ್ಚಿನ ತಿಳುವಳಿಕೆ ಹೊಂದಬೇಕೆಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಸಿ.ಇ.ಎನ್ ಮತ್ತು ಅಪರಾಧ (ಪಿಐ)ಪೊಲೀಸ್ ಠಾಣಾಧಿಕಾರಿ ಸಂತೋಷ್ ಪಾಟೀಲ್ ಹೇಳಿದರು.
    ಅವರು ನಗರದ ಬಿ.ಎಚ್ ರಸ್ತೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗು ನ್ಯೂಟೌನ್ ವಿಐಎಸ್‌ಎಸ್‌ಜೆ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಆಯೋಜಿಸಲಾಗಿದ್ದ ವಿಶ್ವ ಗ್ರಾಹಕರ ದಿನಾಚರಣೆ ಹಾಗು ಸೈಬರ್ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಇತ್ತೀಚಿಗೆ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದ್ದು, ಇವುಗಳ ನಿಯಂತ್ರಣಕ್ಕೆ ಇಲಾಖೆ ಹೆಚ್ಚಿನ ಗಮನ ಹರಿಸುತ್ತಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಸೈಬರ್ ತಿಳುವಳಿಕೆ ಜೊತೆಗೆ ಕಾನೂನು ಅರಿವು ಹೊಂದಬೇಕೆಂದರು.
    ಕಳೆದು ಹೋದ ಮೊಬೈಲ್ ಪತ್ತೆ ಮಾಡಲು ಹಾಗು ದೂರು ನೀಡಲು ಇಲಾಖೆ ವತಿಯಿಂದ ನೂತನವಾಗಿ ಸಿದ್ದಪಡಿಸಲಾಗಿರುವ ಸಿಇಐಆರ್ ಪೋರ್ಟಲ್ ಹಾಗು ಕೆಎಸ್‌ಪಿ ಅರ್ಜಿ ಕುರಿತು ಮಾಹಿತಿ ನೀಡಲಾಯಿತು.
    ಕೈಗಾರಿಕಾ ತರಬೇತಿ ಸಂಸ್ಥೆಯ ಉಪ ಪ್ರಾಚಾರ್ಯ ಎಸ್.ಎನ್ ಚಂದ್ರಶೇಖರ್, ಡಿ. ಮಹಾಂತೇಶ್, ಸಹಾಯಕ ಪೊಲೀಸ್ ಠಾಣಾಧಿಕಾರಿ ವಿರೂಪಾಕ್ಷಪ್ಪ, ಸೂರ್ಯನಾರಾಯಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಕೈಗಾರಿಕಾ ತರಬೇತಿ ಸಂಸ್ಥೆಯ ಬೋಧಕ ಹಾಗು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿಧಾನಸಭಾ ಚುನಾವಣೆ : ಬಿಜೆಪಿ ಕಾರ್ಯಾಲಯ ಉದ್ಘಾಟನೆ

ಭದ್ರಾವತಿ ಕೆಎಸ್‌ಆರ್‌ಟಿಸಿ ಬಸ್ ಘಟಕದ ಹಿಂಭಾಗದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಿಜೆಪಿ ತಾಲೂಕು ಮಂಡಲ ಕಛೇರಿಯಲ್ಲಿ ಸೋಮವಾರ ವಿಧಾನಸಭಾ ಚುನಾವಣಾ ಕಾರ್ಯಾಲಯ ಉದ್ಘಾಟಿಸಲಾಯಿತು.
    ಭದ್ರಾವತಿ, ಮಾ. ೩೧ : ನಗರದ ಕೆಎಸ್‌ಆರ್‌ಟಿಸಿ ಬಸ್ ಘಟಕದ ಹಿಂಭಾಗದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಿಜೆಪಿ ತಾಲೂಕು ಮಂಡಲ ಕಛೇರಿಯಲ್ಲಿ ಸೋಮವಾರ ವಿಧಾನಸಭಾ ಚುನಾವಣಾ ಕಾರ್ಯಾಲಯ ಉದ್ಘಾಟಿಸಲಾಯಿತು.
    ಕಾರ್ಯಾಲಯದ ಉದ್ಘಾಟನೆ ಅಂಗವಾಗಿ ಧಾರ್ಮಿಕ ಆಚರಣೆಗಳು ಜರುಗಿದವು. ಈ ಹಿಂದೆ ಬಹಳ ವರ್ಷಗಳಿಂದ ಹಳೇನಗರದ ಬಸವೇಶ್ವರ ವೃತ್ತದಲ್ಲಿ ಬಾಡಿಗೆ ಕಟ್ಟಡದಲ್ಲಿ ಬಿಜೆಪಿ ತಾಲೂಕು ಮಂಡಲ ಕಛೇರಿ ಕಾರ್ಯ ನಿರ್ವಹಿಸುತ್ತಿತ್ತು. ಕಳೆದ ಕೆಲವು ತಿಂಗಳ ಹಿಂದೆ ಪಕ್ಷದ ಸ್ವಂತ ಜಾಗದಲ್ಲಿ ನೂತನ ಕಛೇರಿ ನಿರ್ಮಾಣಗೊಂಡಿದ್ದು, ಮೊದಲ ಬಾರಿಗೆ ನೂತನ ಕಛೇರಿಯಲ್ಲಿ ಚುನಾವಣಾ ಕಾರ್ಯಾಲಯ ಆರಂಭಿಸಲಾಗಿದೆ.
    ಪಕ್ಷದ ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಚುನಾವಣಾ ಪ್ರಭಾರಿ ಅಶೋಕ್ ಮೂರ್ತಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಂಗಸ್ವಾಮಿ, ಚನ್ನೇಶ್, ಉಪಾಧ್ಯಕ್ಷರಾದ ಜಯರಾಮ್, ಮಣಿ,  ಅನ್ನಪೂರ್ಣ ಸಾವಂತ್,  ಗೌರಮ್ಮ, ಕಾರ್ಯದರ್ಶಿಗಳಾದ ಚಂದ್ರು ದೇವರನರಸೀಪುರ, ಸರಸ್ವತಿ, ಕವಿತಾ ಸುರೇಶ್, ನಗರಸಭಾ ಸದಸ್ಯೆ ಶಶಿಕಲಾ ನಾರಾಯಣಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ. ಮಂಜುನಾಥ್ ಕದಿರೇಶ್, ಪಕ್ಷದ ಪ್ರಮುಖರಾದ ಪವಿತ್ರ ರಾಮಯ್ಯ, ಕೂಡ್ಲಿಗೆರೆ ಹಾಲೇಶ್, ತೀರ್ಥಯ್ಯ, ಎಂ. ಮಂಜುನಾಥ್, ಮಂಗೋಟೆ ರುದ್ರೇಶ್, ಕವಿತಾ ರಾವ್, ರಾಮನಾಥ್ ಬರ್ಗೆ ಹಾಗು ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ರಾಷ್ಟ್ರಪತಿ, ಮುಖ್ಯಮಂತ್ರಿ ಪ್ರಶಸ್ತಿ ಪುರಸ್ಕೃತ ದಾನಂ ಕರ್ತವ್ಯದಿಂದ ವಯೋನಿವೃತ್ತಿ

ಜಿಲ್ಲಾ ಪೊಲೀಸ್ ವತಿಯಿಂದ ಸನ್ಮಾನ, ಬೀಳ್ಕೊಡುಗೆ

ಭದ್ರಾವತಿ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯ ಸಹಾಯಕ ಠಾಣಾಧಿಕಾರಿ(ಎಎಸ್‌ಐ)ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಾನಂ ಶುಕ್ರವಾರ ನಿವೃತ್ತಿ ಹೊಂದಿದ್ದು, ಇವರನ್ನು ಜಿಲ್ಲಾ ಪೊಲೀಸ್ ವತಿಯಿಂದ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು. 
    ಭದ್ರಾವತಿ, ಮಾ. ೩೧ : ನಗರದ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯ ಸಹಾಯಕ ಠಾಣಾಧಿಕಾರಿ(ಎಎಸ್‌ಐ)ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಾನಂ ಶುಕ್ರವಾರ ನಿವೃತ್ತಿ ಹೊಂದಿದ್ದು, ಇವರನ್ನು ಜಿಲ್ಲಾ ಪೊಲೀಸ್ ವತಿಯಿಂದ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.
    ಕಾನ್ಸ್‌ಟೇಬಲ್ ಹುದ್ದೆಗೆ ನೇಮಕಗೊಂಡು ತೀರ್ಥಹಳ್ಳಿಯಲ್ಲಿ ವೃತ್ತಿ ಆರಂಭಿಸಿದ ದಾನಂರವರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು, ಜಿಲ್ಲಾ ರಕ್ಷಣಾಧಿಕಾರಿಗಳ ಕಛೇರಿಯಲ್ಲಿ ಹೆಚ್ಚಿನ ಅವಧಿ ೨೫ ವರ್ಷಗಳಿಂದ ಗಣಕ ಯಂತ್ರ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.
    ಇವರು ಉತ್ತಮವಾಗಿ ಕರ್ತವ್ಯ  ನಿರ್ವಹಿಸಿ ರಾಷ್ಟ್ರಪತಿ ಪದಕ ಮತ್ತು ಮುಖ್ಯಮಂತ್ರಿಗಳ ಪದಕ ಪಡೆದುಕೊಂಡಿದ್ದರು. ಕಳೆದ ಸುಮಾರು ೬ ವರ್ಷಗಳಿಂದ ಸಹಾಯಕ ಠಾಣಾಧಿಕಾರಿ ಹುದ್ದೆಗೆ ಮುಂಬಡ್ತಿ ಹೊಂದಿ ಶಿವಮೊಗ್ಗ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಕಳೆದ ೩ ತಿಂಗಳಿನಿಂದ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು.
    ಇವರು ಕರ್ತವ್ಯದಿಂದ ವಯೋನಿವೃತ್ತಿ ಹೊಂದಿದ್ದು, ಇವರಿಗೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್‌ಕುಮಾರ್‌ರವರು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು.
    ದಾನಂರವರು ಮೂಲತಃ ಭದ್ರಾವತಿಯವರಾಗಿದ್ದು, ಇಲ್ಲಿಯೇ ಹುಟ್ಟಿ ಬೆಳೆದು, ವಿದ್ಯಾಭ್ಯಾಸ ಪೂರೈಸಿದ್ದಾರೆ. ವಿದ್ಯಾಮಂದಿರದಲ್ಲಿ ವಾಸವಾಗಿದ್ದಾರೆ.

ವಿಐಎಸ್ಎಲ್ ಉಳಿವಿಗಾಗಿ ಗಣ ಹೋಮ

 


ಭದ್ರಾವತಿ, ಮಾ. ೩೧: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರ ಸಂಘ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟ ೭೨ನೇ ದಿನಕ್ಕೆ ಕಾಲಿಟ್ಟಿದೆ.  ಹೋರಾಟದ ಭಾಗವಾಗಿ ಶುಕ್ರವಾರ ಕಾರ್ಖಾನೆಯಲ್ಲಿರುವ ಶ್ರೀ ಚೌಡಮ್ಮ ದೇವಸ್ಥಾನದಲ್ಲಿ ಟ್ರಾಫಿಕ್ ಇಲಾಖೆ ಸಹಯೋಗದೊಂದಿಗೆ ಗುತ್ತಿಗೆ, ಕಾಯಂ ಕಾರ್ಮಿಕರು ಮತ್ತು ಅಧಿಕಾರಿಗಳಿಂದ ಗಣ ಹೋಮ ಧಾರ್ಮಿಕ ಆಚರಣೆ ನಡೆಸಲಾಯಿತು.  
    ಶ್ರೀ ಧರ್ಮಜಾಗರಣ ಅರ್ಚಕರ ಮಹಾಸಭಾ ವತಿಯಿಂದ ಗಣಹೋಮ ನಡೆಸಿಕೊಡಲಾಯಿತು. ಮಹಾಸಭಾ ಗೌರವಾಧ್ಯಕ್ಷರಾದ ವೇದಬ್ರಹ್ಮ ಶ್ರೀ ಕೃಷ್ಣಮೂರ್ತಿ ಸೋಮಯಾಜಿ ಮತ್ತು ಅಧ್ಯಕ್ಷ ಎಸ್.ವಿ ರಾಮಾನುಜ ಅಯ್ಯಂಗಾರ್ ನೇತೃತ್ವ ವಹಿಸಿದ್ದರು. 
ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಗುತ್ತಿಗೆ ಹಾಗು ಕಾಯಂ ಕಾರ್ಮಿಕರ ಮತ್ತು ಅಧಿಕಾರಿಗಳ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.



ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಯಲ್ಲಿರುವ ಶ್ರೀ  ಚೌಡಮ್ಮ ದೇವಸ್ಥಾನದಲ್ಲಿ ಟ್ರಾಫಿಕ್ ಇಲಾಖೆ ವತಿಯಿಂದ ಗುತ್ತಿಗೆ ಕಾಯಂ ಕಾರ್ಮಿಕರು ಮತ್ತು ಅಧಿಕಾರಿಗಳಿಂದ ಕಾರ್ಖಾನೆ ಉಳಿವಿಗಾಗಿ ಗಣ ಹೋಮ ಧಾರ್ಮಿಕ ಆಚರಣೆ ನಡೆಸಲಾಯಿತು.  

Thursday, March 30, 2023

ಚುನಾವಣೆ ನೀತಿ ಸಂಹಿತೆ ನಡುವೆ ವಿಜೃಂಭಣೆಯಿಂದ ಜರುಗಿದ ಶ್ರೀ ರಾಮನವಮಿ ಉತ್ಸವ

ಭದ್ರಾವತಿ ನಗರದ ವಿವಿಧ ದೇವಾಲಯಗಳಲ್ಲಿ ಗುರುವಾರ ಶ್ರೀ ರಾಮನವಮಿ ಉತ್ಸವ ವಿಜೃಂಭಣೆಯಿಂದ ಜರುಗಿತು. ಚುನಾವಣೆ ನೀತಿ ಸಂಹಿತೆ ಧಾರ್ಮಿಕ ಆಚರಣೆಗಳ ಮೇಲೆ ಯಾವುದೇ ರೀತಿ ಪರಿಣಾಮ ಉಂಟು ಮಾಡಲಿಲ್ಲ. 
    ಭದ್ರಾವತಿ, ಮಾ. ೩೦: ನಗರದ ವಿವಿಧ ದೇವಾಲಯಗಳಲ್ಲಿ ಗುರುವಾರ ಶ್ರೀ ರಾಮನವಮಿ ಉತ್ಸವ ವಿಜೃಂಭಣೆಯಿಂದ ಜರುಗಿತು. ಚುನಾವಣೆ ನೀತಿ ಸಂಹಿತೆ ಧಾರ್ಮಿಕ ಆಚರಣೆಗಳ ಮೇಲೆ ಯಾವುದೇ ರೀತಿ ಪರಿಣಾಮ ಉಂಟು ಮಾಡಲಿಲ್ಲ.
    ಬೆಳಿಗ್ಗೆಯಿಂದಲೇ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಧಾರ್ಮಿಕ ಆಚರಣೆಗಳು ಜರುಗಿದವು. ಮಧ್ಯಾಹ್ನ ಪಾನಕ, ಕೋಸಂಬರಿ ವಿತರಣೆ ನಡೆಯಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾದರು.


    ಬಹುತೇಕ ದೇವಸ್ಥಾನಗಳ ಬಳಿ ಯಾವುದೇ ರೀತಿಯ ಫ್ಲೆಕ್ಸ್‌ಗಳು, ಬ್ಯಾನರ್‌ಗಳು, ಬಂಟಿಂಗ್ಸ್‌ಗಳು ಕಂಡು ಬರಲಿಲ್ಲ. ದೇವಸ್ಥಾನ ಸಮಿತಿಗಳ ಪದಾಧಿಕಾರಿಗಳು, ಸೇವಾಕರ್ತರು ಹೊರತುಪಡಿಸಿ ಯಾವುದೇ ರಾಜಕೀಯ ಪಕ್ಷಗಳ, ಜನಪ್ರತಿನಿಧಿಗಳು ಸುಳಿವು ಕಂಡು ಬರಲಿಲ್ಲ.

ವಿಐಎಸ್‌ಎಲ್ ನಿವೃತ್ತ ಉದ್ಯೋಗಿ ಪೆಂಡೆಂ ಪೊಗಲಯ್ಯ ನಿಧನ

ಪೆಂಡೆಂ ಪೊಗಲಯ್ಯ
    ಭದ್ರಾವತಿ, ಮಾ. ೩೦ : ಜನ್ನಾಪುರ ಗಣೇಶ್ ಕಾಲೋನಿ ನಿವಾಸಿ, ಜೆಡಿಎಸ್ ಜಿಲ್ಲಾ ಕ್ರೈಸ್ತ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಡಾರ್ವಿನ್‌ರವರ ತಂದೆ ಪೆಂಡೆಂ ಪೊಗಲಯ್ಯ(೭೩) ಬುಧವಾರ ನಿಧನ ಹೊಂದಿದರು.
    ಪತ್ನಿ ನಿವೃತ್ತ ಶಿಕ್ಷಕಿ ಶಾಂತಕುಮಾರಿ, ಪುತ್ರ ಡಾರ್ವಿನ್ ಹಾಗು ಇಬ್ಬರು ಪುತ್ರಿಯರು ಇದ್ದರು. ಪೆಂಡೆಂ ಪಗುಲಯ್ಯ ವಿಐಎಸ್‌ಎಲ್ ಕಾರ್ಖಾನೆ ನಿವೃತ್ತ ಉದ್ಯೋಗಿಯಾಗಿದ್ದು, ಅಲ್ಲದೆ ನ್ಯೂಟೌನ್ ಸಿಎಸ್‌ಐ ವೇನ್ಸ್ ಸ್ಮಾರಕ ದೇವಾಲಯ ಸದಸ್ಯರಾಗಿದ್ದರು. ಇವರ ಅಂತ್ಯಕ್ರಿಯೆ ನಗರದ ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್ ಸಮೀಪದ ಸಂಯುಕ್ತ ಕ್ರೈಸ್ತ ಸಮಾಧಿಯಲ್ಲಿ ಗುರುವಾರ ಸಂಜೆ ನೆರವೇರಿತು.
    ಇವರ ನಿಧನಕ್ಕೆ ವಿವಿಧ ಚರ್ಚ್ ಧರ್ಮಗಳು, ಜೆಡಿಎಸ್ ಪಕ್ಷದ ಮುಖಂಡರಾದ ಶಾರದ ಅಪ್ಪಾಜಿ, ಆಲ್ ಇಂಡಿಯಾ ಕ್ಯಾಥೋಲಿಕ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಅಂತೋಣಿ ವಿಲ್ಸನ್, ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ತಾಲೂಕು ಅಧ್ಯಕ್ಷ ಸೆಲ್ವರಾಜ್, ನಗರಸಭೆ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಕ್ರೈಸ್ತ ಸಮಾಜದ ಮುಖಂಡರು, ನಿವೃತ್ತ ಕಾರ್ಮಿಕರು ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.