Thursday, April 20, 2023

ವಿಧಾನಸಭೆ ಚುನಾವಣೆ : ಭಾರತೀಯ ಮೂಲ ನಿವಾಸಿಗಳಾದ ದ್ರಾವಿಡರ ಅಳಿವು-ಉಳಿವಿನ ಹೋರಾಟದ ಚುನಾವಣೆ

ಸಂವಿಧಾನದ ಆಶಯದಂತೆ ಮುನ್ನಡೆಯುತ್ತಿರುವ ಕಾಂಗ್ರೆಸ್ ಪಕ್ಷ ಬೆಂಬಲಿಸಿ : ಡೇವಿಡ್ ಸಿಮೆಯೋನ್

ಭದ್ರಾವತಿಯಲ್ಲಿ ಗುರುವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ, ಮಾಜಿ ಸಭಾಪತಿ ಡೇವಿಡ್ ಸಿಮೆಯೋನ್ ಮಾತನಾಡಿದರು.
    ಭದ್ರಾವತಿ, ಏ. ೨೦ : ಈ ಬಾರಿ ಚುನಾವಣೆಯನ್ನು ಇದೊಂದು ಐತಿಹಾಸಿಕ ಚುನಾವಣೆ ಅನ್ನುವುದರ ಬದಲು ಇದೊಂದು ಬಡವ-ಬಲ್ಲಿದರ ಅರ್ಥಾತ್ ಬಂಡವಾಳ ಶಾಹಿಗಳ-ಬಡವರ ಮಧ್ಯದ ಹೋರಾಟ. ಅಂದರೆ ಸುಮಾರು ೫೦೦ ವರ್ಷಗಳಿಂದ ತುಳಿತಕ್ಕೆ ಒಳಗಾಗಿದ್ದ ಭಾರತೀಯ ಮೂಲ ನಿವಾಸಿಗಳಾದ ದ್ರಾವಿಡರ ಅಳಿವು-ಉಳಿವಿನ ಹೋರಾಟದ ಚುನಾವಣೆ ಆಗಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ, ಮಾಜಿ ಸಭಾಪತಿ ಡೇವಿಡ್ ಸಿಮೆಯೋನ್ ಹೇಳಿದರು.
    ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ವಿಧಾನಸಭೆ ಚುನಾವಣೆ ರಾಜಕೀಯ ಪಕ್ಷಗಳ ರಾಜಕೀಯ ನೀತಿ ನಿರೂಪಣೆಗಳ ಪರೀಕ್ಷೆಯ ಚುನಾವಣೆಯಾಗಲಿದೆ. ೨೦೨೪ರ ಲೋಕಸಭಾ ಚುನಾವಣೆಗೆ ಇದೊಂದು ದಿಕ್ಸೂಚಿಯಾಗುವುದರಿಂದಾಗಿ ಇದಕ್ಕೆ ಎಲ್ಲಿಲ್ಲದ ಮಹತ್ವ ಎಂದರು.
    ಭಾರತೀಯ ಜನತಾ ಪಕ್ಷ(ಭಾಜಪ) ರಾಷ್ಟ್ರೀಯ ಸ್ವಯಂ ಸೇವಕದ ರಾಜಕೀಯ ಪಕ್ಷವಾಗಿದೆ. ಇದರ ನಿಲುವು, ನೀತಿ-ಸಿದ್ದಾಂತ ಬಂಡವಾಳ ಶಾಹಿಗಳ ಅನುಷ್ಠಾನವಾಗಿದೆ. ಈ ಹಿನ್ನಲೆಯಲ್ಲಿ ಕಳೆದ ೭-೮ ವರ್ಷಗಳಲ್ಲಿ ಸಾರ್ವಜನಿಕ ಉದ್ಯಮಗಳು, ರೈಲ್ವೆಗಳು, ವಿಮಾನ ನಿಲ್ದಾಣಗಳು ಕಾಲಕ್ರಮೇಣ ಖಾಸಗೀಕರಣವಾಗುತ್ತಿರುವುದು ಸರ್ವವಿಧಿತ ಎಂದು ಆರೋಪಿಸಿದರು
    ಭಾರತೀಯ ಜನತಾ ಪಕ್ಷದ ರಾಜಕೀಯ ನಿಲುವುಗಳು ಭಾರತೀಯ ಸಂವಿಧಾನದಲ್ಲಿ ನಿರೂಪಿಸಿರುವ ತುಳಿತಕ್ಕೆ ಒಳಗಾದವರ ಮೀಸಲಾತಿ, ಕಲ್ಯಾಣ ರಾಜ್ಯದ ಪರಿಕಲ್ಪನೆಗಳಿಗೆ, ವಾಕ್ ಸ್ವಾತಂತ್ರ್ಯಕ್ಕೆ ತದ್‌ವಿರುದ್ಧ ನಿಲುವು  ಹೊಂದಿದೆ ಎಂದು ದೂರಿದರು.
    ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ರಾಜಕೀಯ ನಿಲುವು ಕಮ್ಯೂನಿಸ್ಟ್ ಪಕ್ಷಗಳಂತೆ  ಇದು ಎಡ ಪಂಥಿಯವೂ ಅಲ್ಲ ಹಾಗು ಬಂಡವಾಳಶಾಯಿಗಳಂತೆ ಬಲಪಂಥೀಯವೂ ಅಲ್ಲ. ಅಂದರೆ ಇವೆರಡರ ಮಧ್ಯದ ನಿಲುವು ಸ್ಪಷ್ಟವಾಗಿರುವುದರಿಂದಾಗಿ ಸಾರ್ವಜನಿಕ ಉದ್ಯಮಗಳ ಸ್ಥಾಪನೆಗಳಾದವು. ಕೃಷಿ ಕ್ಷೇತ್ರದಲ್ಲಿ ಉಳುವವನೇ ಒಡೆಯನೆಂಬ ನಿಲುವು ಹೀಗೆಯೇ ಹತ್ತಾರು ಯೋಜನೆಗಳು ಸಾರ್ವಜನಿಕರ ಹಿತದೃಷ್ಟಿಯಲ್ಲಿ ಸಂವಿಧಾನದ ಮೂಲ ಸ್ವರೂಪದಂತೆ ರಚನೆಯಾದವು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿಸುವುದು ಅಗತ್ಯವಾಗಿದೆ ಎಂದರು.
    ಪತ್ರಿಕಾಗೋಷ್ಠಿಯಲ್ಲಿ ಉದ್ಯಮಿ ಬಿ.ಕೆ ಜಗನ್ನಾಥ್, ನಗರಸಭೆ ಮಾಜಿ ಸದಸ್ಯ ಮುಕುಂದಪ್ಪ, ಅಂತೋಣಿ ವಿಲ್ಸನ್ ಮತ್ತು ವಿಲ್ಸನ್ ಬಾಬು ಉಪಸ್ಥಿತರಿದ್ದರು.

ವಿಐಎಸ್‌ಎಲ್ ಕಾರ್ಖಾನೆ ಉಳಿಸಿ ಬೆಳೆಸಿ ಕಾರ್ಮಿಕರ ಹೋರಾಟಕ್ಕೆ ಕಾಶಿ ಶ್ರೀ ಬೆಂಬಲ

ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಕಾರ್ಖಾನೆ ಮುಂಭಾಗದಲ್ಲಿ ಗುತ್ತಿಗೆ ಕಾರ್ಮಿಕರು ಕಳೆದ ಸುಮಾರು ೩ ತಿಂಗಳಿನಿಂದ ನಡೆಸುತ್ತಿರುವ ಹೋರಾಟಕ್ಕೆ ಶ್ರೀಮದ್ ಕಾಶಿ ಜ್ಞಾನ ಸಿಂಹಾಸನಾಧೀಶ್ವರ ಶ್ರೀ ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಬೆಂಬಲ ಸೂಚಿಸಿ ಮಾತನಾಡಿದರು.
    ಭದ್ರಾವತಿ, ಏ. ೨೦ : ದೇಶದ ಸ್ವಾತಂತ್ರ್ಯ ಪೂರ್ವದಲ್ಲಿ ಆರಂಭಗೊಂಡು ಶತಮಾನೋತ್ಸವ ಸಂಭ್ರಮಾಚರಣೆಯಲ್ಲಿರುವ ಕೇಂದ್ರ ಉಕ್ಕು ಪ್ರಾಧಿಕಾರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ಹೂಡಿ ಆಧುನೀಕರಣಗೊಳಿಸುವಂತೆ ಶ್ರೀಮದ್ ಕಾಶಿ ಜ್ಞಾನ ಸಿಂಹಾಸನಾಧೀಶ್ವರ ಶ್ರೀ ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದರು.
    ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಕಾರ್ಖಾನೆ ಮುಂಭಾಗದಲ್ಲಿ ಗುತ್ತಿಗೆ ಕಾರ್ಮಿಕರು ಕಳೆದ ಸುಮಾರು ೩ ತಿಂಗಳಿನಿಂದ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ ಶ್ರೀಗಳು ಮಾತನಾಡಿದರು.
    ಮನೆಯಲ್ಲಿರುವ ಹಸುವಿಗೆ ಉತ್ತಮವಾದ ಮೇವು, ಹಿಂಡಿ, ಹುಲ್ಲು ಇತ್ಯಾದಿಗಳನ್ನು ನೀಡಿದಾಗ ಅದು ಸದೃಢವಾಗಿ ಬೆಳವಣಿಗೆ ಹೊಂದುವ ಮೂಲಕ ಹಾಲಿನ ಪ್ರಮಾಣ ಹೆಚ್ಚಾಗುತ್ತದೆ. ಅಲ್ಲದೆ ಆರ್ಥಿಕ ಸದೃಢತೆ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ. ಇದೆ ರೀತಿ ಈ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ಹೂಡಿ ಆಧುನಿಕ ತಂತ್ರಜ್ಞಾನ ಅಳವಡಿಸಿದರೆ ಅಭಿವೃದ್ಧಿ ಹೊಂದುವ ಮೂಲಕ ಕಾರ್ಮಿಕರಿಗೆ ಉದ್ಯೋಗ ಲಭಿಸುವ ಜೊತೆಗೆ ಜಿಲ್ಲೆಯಲ್ಲಿನ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಾಯ್ದುಕೊಳ್ಳಬಹುದಾಗಿದೆ ಎಂದರು.
    ಕಾರ್ಖಾನೆಯ ಪ್ರಸ್ತುತ ಪರಿಸ್ಥಿತಿ ಕುರಿತು ಪ್ರಧಾನ ಮಂತ್ರಿ ಸೇರಿದಂತೆ ಸಂಬಂಧಿಸಿದ ಕೇಂದ್ರ ಮಂತ್ರಿಗಳು, ಅಧಿಕಾರಿಗಳು ಸೇರಿದಂತೆ ಇತರರ ಜೊತೆ ಮಾತುಕತೆ ನಡೆಸಿ ಗಮನಹರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
    ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ವೀರಶೈವ ಸಮಾಜದ ಮುಖಂಡರುಗಳಾದ ಸಿದ್ದಲಿಂಗಯ್ಯ, ಸುರೇಶಯ್ಯ, ಎಸ್.ಆರ್ ಮಂಜುನಾಥ್, ಎನ್.ಸಿ ಲೋಕೇಶ್, ವಾಗೀಶ್, ಎಸ್. ನರಸಿಂಹಾಚಾರ್, ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳಾದ ರಾಕೇಶ್, ಸುರೇಶ್, ವಿನೋದ, ಅಮೃತ್, ದಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Wednesday, April 19, 2023

ಜೆಡಿಯು ಅಭ್ಯರ್ಥಿಯಾಗಿ ೨ನೇ ಬಾರಿಗೆ ಶಶಿಕುಮಾರ್ ಎಸ್. ಗೌಡ ನಾಮಪತ್ರ ಸಲ್ಲಿಕೆ

ಭದ್ರಾವತಿಯಲ್ಲಿ ವಿಧಾನಸಭಾ ಚುನಾವಣೆಗೆ ಸಂಯುಕ್ತ ಕರ್ನಾಟಕ ಜನತಾದಳ(ಜೆಡಿಯು) ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ನಾಮಪತ್ರ ಸಲ್ಲಿಸಿದರು. 
    ಭದ್ರಾವತಿ, ಏ. ೧೯ : ವಿಧಾನಸಭಾ ಚುನಾವಣೆಗೆ ಸಂಯುಕ್ತ ಕರ್ನಾಟಕ ಜನತಾದಳ(ಜೆಡಿಯು) ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ನಾಮಪತ್ರ ಸಲ್ಲಿಸಿದರು.
    ಶಶಿಕುಮಾರ್ ಎಸ್ ಗೌಡ್‌ರವರು ಬೆಳಿಗ್ಗೆ ಮಿನಿವಿಧಾನಸೌಧ ತಾಲೂಕು ಕಛೇರಿಗೆ ತೆರಳಿ ಚುನಾವಣಾಧಿಕಾರಿ ರವಿಚಂದ್ರನಾಯಕರವರಿಗೆ ನಾಮಪತ್ರ ಸಲ್ಲಿಸಿದರು.
    ಜೆಡಿಯು ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಬು ದೀಪಕ್ ಕುಮಾರ್, ತಾಲೂಕು ಘಟಕದ ಅಧ್ಯಕ್ಷ ರಘು ಸಂಕ್ಲಿಪುರ, ದಿವ್ಯಶ್ರೀ ಶಶಿಕುಮಾರ್ ಎಸ್ ಗೌಡ ಉಪಸ್ಥಿತರಿದ್ದರು.
    ಕೊಳಚೆ ಪ್ರದೇಶದ ನಿವಾಸಿ ಶಶಿಕುಮಾರ್ :  
    ಸುಮಾರು ೪೧ ವರ್ಷ ವಯಸ್ಸಿನ ಜನ್ನಾಪುರ ಹಾಲಪ್ಪ ಶೆಡ್ ಕೊಳಚೆ ಪ್ರದೇಶದ ನಿವಾಸಿ ಶಶಿಕುಮಾರ್ ಎಸ್. ಗೌಡ ೨ನೇ ಬಾರಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ನಾಮಪತ್ರ ಸಲ್ಲಿಸಿದ್ದಾರೆ. ಹಲವಾರು ವರ್ಷಗಳಿಂದ ಕೊಳಚೆ ಪ್ರದೇಶದಲ್ಲಿ ವಾಸವಿದ್ದರೂ ಇನ್ನೂ ಹಕ್ಕುಪತ್ರ ನೀಡಿಲ್ಲ. ಈ ಹಿನ್ನಲೆಯಲ್ಲಿ ಇವರ ಹೆಸರಿನಲ್ಲಿ ಸ್ವಂತ ಮನೆ ಇಲ್ಲ. ಇಬ್ಬರು ಮಕ್ಕಳಿದ್ದು, ಇವರು ೫೦ ಸಾವಿರ ರು. ನಗದು ಹೊಂದಿದ್ದಾರೆ. ಬ್ಯಾಂಕ್ ಖಾತೆಯಲ್ಲಿ ೧ ಸಾವಿರು ರು. ಹಣವಿದ್ದು, ಉಳಿದಂತೆ ಯಾವುದೇ ನಿವೇಶನ, ಜಮೀನು ಹೊಂದಿಲ್ಲ. ಇವರ ಬಳಿ ಸುಮಾರು ೨೫ ಗ್ರಾಂ ಚಿನ್ನಾಭರಣವಿದೆ. ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡಿದ್ದಾರೆ.

ವಿಧಾನಸಭಾ ಚುನಾವಣೆ ೫ನೇ ದಿನ : ೩ ಪಕ್ಷೇತರರ ನಾಮಪತ್ರ

ಜಾನ್‌ಬೆನ್ನಿ, ಕೆ. ಮೋಹನ್ ಮತ್ತು ಮಾರ್ವಿನ್ ಅಕ್ಕಿದಾಸರಿ

ಭದ್ರಾವತಿಯಲ್ಲಿ ವಿಧಾನಸಭಾ ಚುನಾವಣೆಗೆ ೨ನೇ ಬಾರಿಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಾನ್ ಬೆನ್ನಿ ಬುಧವಾರ ನಾಮಪತ್ರ ಸಲ್ಲಿಸಿದರು.
    ಭದ್ರಾವತಿ, ಏ. ೧೯: ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ೫ನೇ ದಿನವಾದ ಬುಧವಾರ ಒಟ್ಟು ೩ ಮಂದಿ ಪಕ್ಷೇತರರು ನಾಮಪತ್ರ ಸಲ್ಲಿಸಿದ್ದಾರೆ.
    ಪಕ್ಷೇತರ ಅಭ್ಯರ್ಥಿಯಾಗಿ ನಗರಸಭೆ ವ್ಯಾಪ್ತಿಯ ಸಿದ್ದಾಪುರ ನಿವಾಸಿ ಜಾನ್‌ಬೆನ್ನಿ ಬೆಳಿಗ್ಗೆ ಮಿನಿವಿಧಾನಸೌಧ ತಾಲೂಕು ಕಛೇರಿಗೆ ಪತ್ನಿ ಹಾಗು ಕುಮಾರ್, ಗೋಪಾಲ್ ಮತ್ತು ಕೃಪಾದಾನಂ ಅವರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
    ಜಾನ್ ಬೆನ್ನಿ ಆಸ್ತಿ ಮೌಲ್ಯ ೧೭ ಲಕ್ಷ ರು. :
    ೨ ಬಾರಿಗೆ ಸ್ಪರ್ಧಿಸಿ ನಾಮಪತ್ರ ಸಲ್ಲಿಸಿರುವ ೫೪ ವರ್ಷ ವಯಸ್ಸಿನ ಜಾನ್ ಬೆನ್ನಿ ಡ್ರೈವಿಂಗ್ ಸ್ಕೂಲ್ ಮಾಲೀಕರಾಗಿದ್ದು, ವಾಯು ಮಾಲಿನ್ಯ ಹೊಗೆ ತಪಾಸಣೆ ಕೇಂದ್ರ ಸಹ ಹೊಂದಿದ್ದಾರೆ. ಸಿದ್ದಾಪುರದಲ್ಲಿ ಒಂದು ಮನೆ, ಇವರ ಹೆಸರಿನಲ್ಲಿ ೪ ಕಾರುಗಳಿದ್ದು, ಇವರ ಬಳಿ ೫೦ ಸಾವಿರ ರು. ನಗದು, ವಿವಿಧ ಬ್ಯಾಂಕ್ ಖಾತೆಗಳಲ್ಲಿ ಒಟ್ಟು ೮೪,೭೯೭ ರು. ಹೊಂದಿದ್ದಾರೆ. ಅಲ್ಲದೆ ೭೦ ಗ್ರಾಂ ಚಿನ್ನಾಭರಣವಿದೆ. ಒಟ್ಟು ೧೭,೨೨,೦೦೦ ರು. ಆಸ್ತಿ ಮೌಲ್ಯ ಹೊಂದಿದ್ದಾರೆ. ಇವರ ದ್ವಿತೀಯ ಪಿಯುಸಿ ವಿಜ್ಞಾನ ವ್ಯಾಸಂಗ ಮಾಡಿದ್ದಾರೆ.
    ನಗರದ ಹೊಸೇತುವೆ ರಸ್ತೆಯಲ್ಲಿರುವ ಶ್ರೀ ಮಂಜುನಾಥ ಸಾಮಿಲ್ ನಿವಾಸಿ ಕೆ. ಮೋಹನ್ ಮೊದಲ ಬಾರಿಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಬಿ. ರಮೇಶ್, ಗಣೇಶ್, ಹೇಮಂತ್ ಕುಮಾರ್ ಉಪಸ್ಥಿತರಿದ್ದರು.
    ಕೆ. ಮೋಹನ್ ಪಿಯುಸಿ ವಿದ್ಯಾಭ್ಯಾಸ :
    ಕೆ. ಮೋಹನ್ ಅವರ ಕುಟುಂಬದ ಆಸ್ತಿಗೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು, ಈ ಹಿನ್ನಲೆಯಲ್ಲಿ ಯಾವುದೇ ಆಸ್ತಿ ವಿವರ ನಮೂದಿಸಿಲ್ಲ. ಕೆ. ಮೋಹನ್ ಪಿಯುಸಿ ವಿದ್ಯಾಭ್ಯಾಸ ಹೊಂದಿದ್ದು, ಇಬ್ಬರು ಮಕ್ಕಳನ್ನು ಹೊಂದಿದ್ದಾರೆ.
ಉಳಿದಂತೆ ಮಾರ್ವಿನ್ ಅಕ್ಕಿದಾಸರಿ ಎಂಬುವರು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ರವಿಚಂದ್ರನಾಯಕ್ ಅವರಿಗೆ ನಾಮಪತ್ರ ಸಲ್ಲಿಸಿದರು. ಸಹಾಯಕ ಚುನಾವಣಾಧಿಕಾರಿ ಸುರೇಶ್ ಆಚಾರ್ ಉಪಸ್ಥಿತರಿದ್ದರು.


ಭದ್ರಾವತಿಯಲ್ಲಿ ವಿಧಾನಸಭಾ ಚುನಾವಣೆಗೆ ಮೊದಲ ಬಾರಿಗೆ ಸ್ಪರ್ಧಿಕಿ ಕೆ. ಮೋಹನ್ ನಾಮಪತ್ರ  ಸಲ್ಲಿಸಿದರು.

ಓಸಿ, ಮಟ್ಕಾ ಜೂಜಾಟ : ಪ್ರಕರಣ ದಾಖಲು


    ಭದ್ರಾವತಿ, ಏ. ೧೯: ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ಮನೆಯೊಂದರ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ಓಸಿ, ಮಟ್ಕಾ ಜೂಜಾಟ ಸಂಬಂಧ ಪ್ರಕರಣ ದಾಖಲಾಗಿದೆ.
    ಹಣ ಪಣವಾಗಿ ಕಟ್ಟಿಸಿಕೊಂಡು ಒಂದು ಚೀಟಿಯಲ್ಲಿ ಓ.ಸಿ ಅಂಕೆಗಳನ್ನು ಬರೆದುಕೊಳ್ಳುತ್ತಿರುವುದಾಗಿ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 

ವಾಹನ ಹಿಂದಿಕ್ಕಲು ಅಪಘಾತ : ದೂರು ದಾಖಲು

    ಭದ್ರಾವತಿ, ಏ. ೧೯ : ಟಾಟಾ ಯೋಧ ಗೂಡ್ಸ್ ವಾಹನ ಚಾಲಕ ಮುಂದೆ ಚಲಿಸುತಿದ್ದ ವಾಹನ ಹಿಂದಿಕ್ಕಲು(ಓವರ್‌ಟೇಕ್) ಹೋಗಿ ಮುಂದೆ ಬರುತ್ತಿದ್ದ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿರುವ ಘಟನೆ ನಡೆದಿದೆ.
    ನಗರದ ಬೈಪಾಸ್ ರಸ್ತೆಯಲ್ಲಿ ಏ.೧೫ರಂದು ಸಂಜೆ ೫ ಗಂಟೆ ಸಮಯದಲ್ಲಿ ಟಾಟಾ ಯೋಧ ಗೂಡ್ಸ್ ವಾಹನ ಚಾಲಕ ಗಿರೀಶ್ ಅಪಘಾತಪಡಿಸಿದ್ದು, ವಾಹನದಲ್ಲಿ ಉಳಿತುಕೊಂಡಿದ್ದ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವ್ಯಕ್ತಿಯೊಬ್ಬರು ತೀವ್ರ ಗಾಯಗೊಂಡಿದ್ದು, ಮಣಿಪಾಲ ಕಸ್ತೂರಬಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡೂ ವಾಹನಗಳು ಜಖಂಗೊಂಡಿವೆ. ಈ ಸಂಬಂಧ ವರಣ್ ಎಂಬುವರು ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Tuesday, April 18, 2023

ಅಪ್ಪಾಜಿಯವರ ಅಭಿವೃದ್ಧಿ ಕಾರ್ಯಗಳ ಮುಂದುವರೆದ ಭಾಗ ನಾನು : ಶಾರದ ಅಪ್ಪಾಜಿ

ಕ್ಷೇತ್ರದ ಮತದಾರರು ಬದಲಾವಣೆ ಬಯಸಿದ್ದು, ಗೆಲುವು ಖಚಿತ

ಭದ್ರಾವತಿಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿ ನಾಮಪತ್ರ ಸಲ್ಲಿಸಿದ ನಂತರ ಶಾರದ ಅಪ್ಪಾಜಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
    ಭದ್ರಾವತಿ, ಏ. ೧೮ : ಕ್ಷೇತ್ರದಲ್ಲಿ ೩ ಬಾರಿ ಶಾಸಕರಾಗಿರುವ ಎಂ.ಜೆ ಅಪ್ಪಾಜಿಯವರ ದಾರಿಯಲ್ಲಿ ನಾನು ಸಹ ಮುನ್ನಡೆಯುತ್ತೇನೆ. ಅವರ ಅಭಿವೃದ್ಧಿ ಕಾರ್ಯಗಳ ಮುಂದುವರೆದ ಭಾಗವಾಗಿದ್ದೇನೆಂದು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ ಹೇಳಿದರು.
    ಅವರು ಮಂಗಳವಾರ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ನಾಮಪತ್ರ ಸಲ್ಲಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಘೋಷಿಸಿದ ನಂತರ ಕ್ಷೇತ್ರದಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ಜಾರಿಗೆ ತಂದಿರುವ ಜನಪರ ಯೋಜನೆಗಳು ಹಾಗು ಕ್ಷೇತ್ರದಲ್ಲಿ ಎಂ.ಜೆ ಅಪ್ಪಾಜಿಯವರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟು ಮತಯಾಚನೆ ನಡೆಸಲಾಗುತ್ತಿದೆ. ಅಪ್ಪಾಜಿಯವರು ಯಾವುದೇ ಧರ್ಮ, ಜಾತಿಗೆ ಸೀಮಿತವಾಗಿರದೆ ಎಲ್ಲರ ಪರವಾಗಿದ್ದರು. ಅವರ ದಾರಿಯಲ್ಲಿ ನಾನು ಸಹ ಸಾಗುತ್ತಿದ್ದೇನೆ ಎಂದರು.
    ಮುಂದಿನ ದಿನಗಳಲ್ಲಿ ಪಕ್ಷದ ಪ್ರಣಾಳಿಕೆ ಜೊತೆಗೆ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರತ್ಯೇಕವಾಗಿ ಪ್ರಣಾಳಿಕೆ ಸಹ ಬಿಡುಗಡೆಗೊಳಿಸಲಾಗುವುದು. ಕ್ಷೇತ್ರದಲ್ಲಿ ಮುಖ್ಯವಾಗಿ ಆರೋಗ್ಯಕ್ಕೆ ಸಂಬಂಧಿಸಿದಂತೆ ಉನ್ನತಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಿಕೊಡುವುದು. ವಿಐಎಸ್‌ಎಲ್ ಮತ್ತು ಎಂಪಿಎಂ ಎರಡು ಕಾರ್ಖಾನೆಗಳನ್ನು ಪುನಶ್ಚೇತನಗೊಳಿಸುವುದು ಸೇರಿದಂತೆ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವ ಭರವಸೆ ಹೊಂದಿದ್ದೇನೆ. ಕ್ಷೇತ್ರದ ಮತದಾರರು ಈ ಬಾರಿ ಬದಲಾವಣೆ ಬಯಸಿದ್ದು, ನಾನು ಗೆಲ್ಲುವ ವಿಶ್ವಾಸ ಹೊಂದಿದ್ದೇನೆ ಎಂದರು.  
    ಜೆಡಿಎಸ್ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ ಮಾತನಾಡಿ, ಕ್ಷೇತ್ರದ ಮತದಾರರು ಅಪ್ಪಾಜಿಯವರನ್ನು ೩ ಬಾರಿ ಆಯ್ಕೆ ಮಾಡಿದ್ದಾರೆ. ಇದೀಗ ಶಾರದ ಅಪ್ಪಾಜಿಯವರನ್ನು ಸಹ ಬೆಂಬಲಿಸುವಂತೆ ಮನವಿ ಮಾಡಿದರು.
    ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಗ್ರಾಮಾಂತರ ಅಧ್ಯಕ್ಷ ಧರ್ಮಕುಮಾರ್, ಪ್ರಮುಖರಾದ ರಾಜ್ಯ ಕಾರ್ಯದರ್ಶಿ ಜೆ.ಪಿ ಯೋಗೇಶ್, ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್, ಕರಿಯಪ್ಪ, ಡಿ.ಟಿ ಶ್ರೀಧರ್, ಮೈಲಾರಪ್ಪ, ನಂಜುಂಡೇಗೌಡ, ತಿಮ್ಮೇಗೌಡ, ಅಮೋಸ್, ಮಧುಸೂದನ್, ಮುರ್ತುಜಾಖಾನ್, ಲೋಕೇಶ್ವರ್‌ರಾವ್, ಎನ್. ರಾಮಕೃಷ್ಣ, ಧರ್ಮರಾಜ್, ಎನ್. ಕೃಷ್ಣಪ್ಪ, ನಗರಸಭಾ ಸದಸ್ಯರು, ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
    ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ :
    ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ನಿರ್ದೇಶಕ, ತರಳಬಾಳು ಯುವ ವೇದಿಕೆ ಅಧ್ಯಕ್ಷ ಎಚ್.ಎಸ್ ಸಂಜೀವಕುಮಾರ್, ಗ್ರಾಮಾಂತರ ಯುವ ಕಾಂಗ್ರೆಸ್ ಉಪಾಧ್ಯಕ್ಷ ಝಡ್.ಪಿ ತಬ್ರೇಸ್ ಖಾನ್ ಶಾರದ ಅಪ್ಪಾಜಿ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.