Monday, April 24, 2023

ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು, ಪಕ್ಷದ ಜನಪರ ಯೋಜನೆಗಳು ಸಂಗಮೇಶ್ವರ್ ಗೆಲುವಿಗೆ ಸಹಕಾರಿ

ಪತ್ರಿಕಾಗೋಷ್ಠಿಯಲ್ಲಿ 'ಭದ್ರಾವತಿ ಕ್ಷೇತ್ರದಲ್ಲಿ ಶಾಸಕರ ಅಭಿವೃದ್ಧಿ ಕೆಲಸಗಳು' ಪ್ರಗತಿಯತ್ತ ಭದ್ರಾವತಿ ಬಿಡುಗಡೆ

ಭದ್ರಾವತಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ 'ಭದ್ರಾವತಿ ಕ್ಷೇತ್ರದಲ್ಲಿ ಶಾಸಕರ ಅಭಿವೃದ್ಧಿ ಕೆಲಸಗಳು' ಪ್ರಗತಿಯತ್ತ ಭದ್ರಾವತಿ ಕಾಂಗ್ರೆಸ್ ಪಕ್ಷದ ಮುಖಂಡರು ಬಿಡುಗಡೆಗೊಳಿಸಿದರು.
    ಭದ್ರಾವತಿ, ಏ. ೨೪ : ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ತಮ್ಮ ಅವಧಿಯಲ್ಲಿ ಕೋಟ್ಯಾಂತರ ರು. ವೆಚ್ಚದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಅಲ್ಲದೆ ಕಾಂಗ್ರೆಸ್ ಪಕ್ಷದ ಜನಪರ ಯೋಜನೆಗಳು ಅವರ ಗೆಲುವಿಗೆ ಸಹಕಾರಿಯಾಗಿವೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಮುಖಂಡರು ಹೇಳಿದರು.
    ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರದ ಎಲ್ಲಾ ಭಾಗಗಳಲ್ಲೂ ಶಾಸಕರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು  ಕೈಗೊಂಡಿದ್ದಾರೆ. ಅವರ ಅವಧಿಯಲ್ಲಿ ಕೈಗೊಂಡಿರುವ ಅಭಿವೃದ್ಧಿಗಳನ್ನು ಜನಸಾಮಾನ್ಯರಿಗೆ ತಿಳಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ. ಸುಮಾರು ೪೦ ಪುಟಗಳ 'ಭದ್ರಾವತಿ ಕ್ಷೇತ್ರದಲ್ಲಿ ಶಾಸಕರ ಅಭಿವೃದ್ಧಿ ಕೆಲಸಗಳು' ಪ್ರಗತಿಯತ್ತ ಭದ್ರಾವತಿ ಚುನಾವಣಾ ಆಯೋಗದ ಅನುಮತಿ ಪಡೆದು ಮುದ್ರಣಗೊಳಿಸಲಾಗಿದ್ದು, ಇದನ್ನು ಇದೀಗ ಬಿಡುಗಡೆಗೊಳಿಸಲಾಗುತ್ತಿದೆ ಎಂದರು.
    ಕಾಂಗ್ರೆಸ್ ಜನಪರ ಪಕ್ಷವಾಗಿದ್ದು, ಈಗಾಗಲೇ ಹೊಸ ಯೋಜನೆಗಳನ್ನು ಘೋಷಿಸಿ ಪ್ರತಿಯೊಬ್ಬರ ಮನೆ ಬಾಗಿಲಿಗೆ ಗ್ಯಾರಂಟಿ ಕಾರ್ಡ್ ನೀಡುವ ಮೂಲಕ ಭರವಸೆ ಮೂಡಿಸಿದೆ. ಪಕ್ಷ ಅಧಿಕಾರಕ್ಕೆ ಬಂದಲ್ಲಿ ಈ ಯೋಜನೆಗಳು ಜಾರಿಗೆ ಬರಲಿವೆ. ಬಿಜೆಪಿ ಪಕ್ಷದ ಸುಳ್ಳು ಭರವಸೆಗಳಿಗೆ ಮತದಾರರು ಕಿವಿಗೊಡಬಾರದು. ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು.
    ಕ್ಷೇತ್ರದ ಮತದಾರರು ಶಾಸಕರ ಪರವಾಗಿದ್ದು, ಈ ಬಾರಿ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸುವ ವಿಶ್ವಾಸವಿದೆ. ಪಕ್ಷದ ಮುಖಂಡರು, ಕಾರ್ಯಕರ್ತರು ಅವರ ಗೆಲುವಿಗಾಗಿ ಒಗ್ಗಟ್ಟಿನಿಂದಾಗಿ ಶ್ರಮಿಸುತ್ತಿದ್ದಾರೆ ಎಂದರು.
    ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಯುವ ಘಟಕದ ಅಧ್ಯಕ್ಷ ಅಫ್ತಾಬ್ ಅಹಮದ್, ಮಹಿಳಾ ಘಟಕದ ಅಧ್ಯಕ್ಷೆ ಹೇಮಾವತಿ, ಪ್ರಮುಖರಾದ ಬಿ.ಕೆ ಮೋಹನ್, ಅನುಸುಧ ಮೋಹನ್ ಪಳನಿ, ಸರ್ವಮಂಗಳ ಬೈರಪ್ಪ, ಬಲ್ಕೀಶ್‌ಬಾನು, ಬಿ.ಟಿ ನಾಗರಾಜ್, ಲಕ್ಷ್ಮೀದೇವಿ, ಲತಾ ಚಂದ್ರಶೇಖರ್, ಅನುಸೂಯ, ಅಂತೋಣಿ ವಿಲ್ಸನ್, ಕಾಂತರಾಜ್, ದಿಲ್‌ದಾರ್, ಪೀರ್‌ಷರೀಫ್, ಅಬ್ದುಲ್ ಖದೀರ್, ಶಾಂತರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Sunday, April 23, 2023

ಕರಪತ್ರ ಮುದ್ರಣ ಆರೋಪ : ಶಾರದ ಅಪ್ಪಾಜಿ ವಿರುದ್ಧ ದೂರು ದಾಖಲು

ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ
    ಭದ್ರಾವತಿ, ಏ. ೨೩ : ಚುನಾವಣಾಧಿಕಾರಿಗಳ ಅನುಮತಿ ಪಡೆಯದೆ ಕರಪತ್ರಗಳನ್ನು ಮುದ್ರಿಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಆರೋಪಿಸಿ
    ಜಾತ್ಯತೀತ ಜನತಾದಳ ಅಭ್ಯರ್ಥಿ ಶಾರದಾ ಅಪ್ಪಾಜಿ ಹಾಗು ಶಿವಮೊಗ್ಗ ಕೆ.ಆರ್ ಪುರಂ ಸ್ಟಾರ್ ಪ್ರಿಂಟಿಂಗ್ ಪ್ರೆಸ್ ಮಾಲೀಕ ಅಬ್ದುಲ್ ಸಲಾಂ ವಿರುದ್ಧ ದೂರು ನೀಡಿರುವುದು ತಿಳಿದು ಬಂದಿದೆ.
ಶಾರದಾ ಅಪ್ಪಾಜಿಯವರಿಗೆ ಸಂಬಂಧಿಸಿದ ಕರಪತ್ರಗಳು ಕನ್ನಡ ಮತ್ತು ಉರ್ದು ಭಾಷೆಯಲ್ಲಿ ಪ್ರಿಂಟ್ ಮಾಡಲಾಗುತ್ತಿದ್ದು, ಈ ವೇಳೆ ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿ ಪರಿಶೀಲಿಸಿದಾಗ ಕರಪತ್ರಗಳು ಲಭ್ಯವಾಗಿದೆ ಎನ್ನಲಾಗಿದೆ.
    ಕನ್ನಡ ಭಾಷೆಯಲ್ಲಿ ಹಾಗು ಉರ್ದು ಭಾಷೆಯಲ್ಲಿ ತಲಾ ೫ ಸಾವಿರ ಮುದ್ರಣ ಎಂದು ಕರಪತ್ರದಲ್ಲಿ ಕಂಡು ಬಂದಿದೆ. ಈ ಸಂಬಂಧ ಶಾರದ ಅಪ್ಪಾಜಿ ಹಾಗು ಅಬ್ದುಲ್ ಸಲಾಂ ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಚುನಾವಣಾಧಿಕಾರಿಗಳು ದೂರು ದಾಖಲಿಸಿದ್ದಾರೆ.

ಶಾಸಕ ಸಂಗಮೇಶ್ವರ್ ಗೆಲುವಿಗೆ ತಮಿಳುನಾಡಿನ ಕ್ರೈಸ್ತ ದೇವಾಲಯದಲ್ಲಿ ಪ್ರಾರ್ಥನೆ

ತಮಿಳುನಾಡಿನ ವೆಳ್ಳಾಂಗಣಿ ಮಾತೆ ದೇವಾಲಯದಲ್ಲಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ ಗೆಲುವು ಸಾಧಿಸುವಂತೆ ಪ್ರಾರ್ಥಿಸಲಾಯಿತು. 
    ಭದ್ರಾವತಿ, ಏ. ೨೩ : ತಮಿಳುನಾಡಿನ ವೆಳ್ಳಾಂಗಣಿ ಮಾತೆ ದೇವಾಲಯದಲ್ಲಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಗೆಲುವು ಸಾಧಿಸುವಂತೆ ಪ್ರಾರ್ಥಿಸಲಾಯಿತು.
    ಕ್ರೈಸ್ತರ ಪುಣ್ಯ ಕ್ಷೇತ್ರವಾಗಿರುವ ವೆಳ್ಳಾಂಗಣಿ ಮಾತೆ ದೇವಾಲಯದಲ್ಲಿ ಮಾಜಿ ನಗರಸಭಾ ಸದಸ್ಯ ಪ್ರಾನ್ಸಿಸ್ ಮತ್ತು ಕುಟುಂಬ ವರ್ಗದವರು ಪ್ರಾರ್ಥನೆ ಸಲ್ಲಿಸಿದ್ದು, ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಗೆಲುವು ಸಾಧಿಸುವ ಮೂಲಕ ಸಚಿವರಾಗಿ ಕ್ಷೇತ್ರವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿ ಪಡಿಸುವಂತಾಗಲಿ ಎಂದು ಪ್ರಾರ್ಥಿಸಿದ್ದಾರೆ.
    ಪ್ರಾನ್ಸಿಸ್ ಶಾಸಕ ಬಿ.ಕೆ ಸಂಗಮೇಶ್ವರ್ ಅಭಿಯಾನಿಯಾಗಿದ್ದು, ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಹಾಗು ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಈ ಹಿಂದೆ ನಗರಸಭೆಯಲ್ಲಿ ನಾಮನಿರ್ದೇಶನ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಪುರಂದರದಾಸರ, ತ್ಯಾಗರಾಜರ, ಕನಕದಾಸರ ಆರಾಧನೆ : ವಿದೂಷಿ ದಿವಂಗತ ಹನುಮಂತಮ್ಮ ಸ್ವಾರಕ ಪ್ರಶಸ್ತಿ ವಿತರಣೆ

ಭದ್ರಾವತಿ ಹಳೇನಗರದ ಮಹಿಳಾ ಸೇವಾ ಸಮಾಜದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಪುರಂದರದಾಸರ, ತ್ಯಾಗರಾಜರ ಮತ್ತು ಕನಕದಾಸರ ಆರಾಧನೆ ನಡೆಯಿತು.  
    ಭದ್ರಾವತಿ, ಏ. ೨೩ : ಹಳೇನಗರದ ಮಹಿಳಾ ಸೇವಾ ಸಮಾಜದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಪುರಂದರದಾಸರ, ತ್ಯಾಗರಾಜರ ಮತ್ತು ಕನಕದಾಸರ ಆರಾಧನೆ ನಡೆಯಿತು.  
    ಪ್ರತಿವರ್ಷ ಸಂಗೀತ, ಭರತನಾಟ್ಯ, ವೀಣಾವಾದನದಲ್ಲಿ ತಾಲೂಕಿಗೆ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದವರಿಗೆ ವಿದೂಷಿ ದಿವಂಗತ ಹನುಮಂತಮ್ಮ ಸ್ವಾರಕ ಪ್ರಶಸ್ತಿ ನೀಡುತ್ತಿದ್ದು, ಈ ಬಾರಿ ಸಂಗೀತ ಸೀನಿಯರ್ ವಿಭಾಗದಲ್ಲಿ ಶೋಭಾ ಗಂಗರಾಜ್, ಜ್ಯೂನಿಯರ್ ವಿಭಾಗದಲ್ಲಿ ಚರಿತಾ, ವೀಣಾವಾದನದಲ್ಲಿ ವೀಣಾ, ಭರತನಾಟ್ಯ ವಿದ್ವತ್ ವಿಭಾಗದಲ್ಲಿ ಅರ್ಚನಾ, ಸೀನಿಯರ್ ವಿಭಾಗದಲ್ಲಿ ಕೃತಿಕಾ, ಜ್ಯೂನಿಯರ್ ವಿಭಾಗದಲ್ಲಿ ಕೀರ್ತನ, ರವರುಗಳಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
    ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥರಾವ್ ಅಧ್ಯಕ್ಷತೆ ವಹಿಸಿದ್ದರು. ವೀಣಾವಾದನ ಶಿಕ್ಷಕ ಸೋಮಶೇಖರ್ ವಿದೂಷಿ ದಿವಂಗತ ಹನುಮಂತಮ್ಮರವರ ಪರಿಚಯ ಮಾಡಿ ನಂತರ ಇವರ ನೇತೃತ್ವದಲ್ಲಿ ವೀಣಾವಾದನ ಕಾರ್ಯಕ್ರಮ ನಡೆಯಿತು. ವಿದೂಷಿ ಪುಷ್ಪಾ ಸುಬ್ರಮಣ್ಯಂ ನೇತೃತ್ವದಲ್ಲಿ ಪಂಚರತ್ನ ಕೃತಿ ಹಾಡುಗಾರಿಕೆ ನಡೆಸಿದರು.
       ಶಾಂತಿ ಶೇಟ್ ಸ್ವಾಗತಿಸಿದರು. ಪುಷ್ಪಾ ಸುಬ್ರಮಣ್ಯ ಪ್ರಸ್ತಾವಿಕ ನುಡಿಗಳನ್ನಾಡಿದರು. ಪುರಂದರದಾಸರ ಕುರಿತು ಚಂದನ, ತ್ಯಾಗರಾಜರ ಕುರಿತು ಶೋಭಾ ಮಾತನಾಡಿದರು. ಅನ್ನಪೂರ್ಣ ಸತೀಶ್ ಕಾರ್ಯಕ್ರಮ ನಿರೂಪಿಸಿದರು.

ರಸ್ತೆ ಅಪಘಾತ : ದ್ವಿಚಕ್ರ ವಾಹನ ಸವಾರ ಸಾವು

    ಭದ್ರಾವತಿ, ಏ. ೨೩ : ದ್ವಿಚಕ್ರ ವಾಹನ ಸವಾರನೋರ್ವ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಏ.೨೨ರ ಶನಿವಾರ ಮಧ್ಯಾಹ್ನ ನಗರದ ಸೀಗೆಬಾಗಿಯಲ್ಲಿ ನಡೆದಿದೆ.
    ಪವನು ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದು, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರು ಹೋಂಡಾ ಎಕ್ಟಿವಾ ದ್ವಿಚಕ್ರ ವಾಹನದಲ್ಲಿ ಹಿಂಬದಿಯಲ್ಲಿ ಉಲ್ಲಾಸ್ ಎಂಬುವರನ್ನು ಕೂರಿಸಿಕೊಂಡು ಸೀಗೆಬಾಗಿ ಕಡೆ ಹೋಗುತ್ತಿದ್ದು, ಈ ಸಂದರ್ಭದಲ್ಲಿ ಇನ್ನೋವಾ ಕಾರು  ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಹಿನ್ನಲೆಯಲ್ಲಿ ಪವನು ಮತ್ತು ಉಲ್ಲಾಸ್ ಇಬ್ಬರು ಗಾಯಗೊಂಡಿದ್ದು, ಇಬ್ಬರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪವನು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಇವರ ಸಹೋದರ ಹೊಸಮನೆ ನಿವಾಸಿ ಸಚಿನ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.   

Saturday, April 22, 2023

ಮುಸ್ಲಿಂ ಸಮುದಾಯದವರಿಂದ ಪವಿತ್ರ ರಂಜಾನ್ ಹಬ್ಬ ಆಚರಣೆ : ಸಾಮೂಹಿಕ ಪ್ರಾರ್ಥನೆ

ಕ್ರೈಸ್ತ ಸಮಾಜದವರು ಭದ್ರಾವತಿ ತರೀಕೆರೆ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಹಬ್ಬದ ಶುಭಾಶಯ ಕೋರುವ ಮೂಲಕ ಗಮನ ಸೆಳೆದರು
    ಭದ್ರಾವತಿ, ಏ. ೨೨: ಮುಸ್ಲಿಂ ಸಮುದಾಯದವರು ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬದ ಸಂಭ್ರಮ ಹಂಚಿಕೆ ಕೊಂಡರು.
    ತರೀಕೆರೆ ರಸ್ತೆಯಲ್ಲಿರುವ ಹಜರತ್ ಸೈಯದ್ ಸಾದಾತ್ ಈದ್ಗಾ ಮೈದಾನದಲ್ಲಿ ಬೆಳಿಗ್ಗೆಯೇ ಮುಸ್ಲಿಂ ಸಮುದಾಯದ ಧರ್ಮ ಗುರುಗಳು, ವಿವಿಧ ಮಸೀದಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಸೇರಿದಂತೆ ಸಾವಿರಾರು ಮಂದಿ ಪಾಲ್ಗೊಂಡು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ವಿಶೇಷವಾಗಿ ಈ ಬಾರಿ ಕ್ರೈಸ್ತ ಸಮಾಜದವರು ಈದ್ಗಾ ಮೈದಾನಕ್ಕೆ ತೆರಳಿ ಹಬ್ಬದ ಶುಭಾಶಯ ಕೋರುವ ಮೂಲಕ ಗಮನ ಸೆಳೆದರು. ಈ ಸಂದರ್ಭದಲ್ಲಿ ಕ್ರೈಸ್ತ ಧರ್ಮಗುರು ಫಾದರ್ ಸಾಜಿಶ್, ಅಂತೋನಿ ವಿಲ್ಸನ್, ಎನ್.ಪಿ ಡೇವಿಸ್, ಎನ್.ಪಿ ಜೋಸೆಫ್, ಆಂತೋಣಿ, ಟಿ.ವಿ ಜೋಸೆಫ್ ಸೇರಿದಂತೆ ಇನ್ನಿತರ ಕ್ರೈಸ್ತ ಮುಖಂಡರು ಉಪಸ್ಥಿತರಿದ್ದರು.
    ವಿವಿಧ ರಾಜಕೀಯ ಪಕ್ಷಗಳ ಪ್ರಮುಖರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಸಹ ಈದ್ಗಾ ಮೈದಾನಕ್ಕೆ ತೆರಳಿ ಹಬ್ಬದ ಶುಭಾಶಯ ಕೋರಿದರು.

ಮೊಬೈಲ್ ಮಾರಾಟ ಹಿನ್ನಲೆಯಲ್ಲಿ ಹಣಕಾಸಿನ ಸಂಘರ್ಷ : ಯುವಕನ ಕೊಲೆ

ಹೊಸಮನೆ ಶಿವಾಜಿ ಸರ್ಕಲ್ ಠಾಣೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ೪ ಜನರ ಬಂಧನ

    ಭದ್ರಾವತಿ, ಏ. ೨೨: ಹೊಸಮನೆ ಸತ್ಯಸಾಯಿ ನಗರದಲ್ಲಿ ಮೊಬೈಲ್ ಮಾರಾಟ ಹಿನ್ನಲೆಯಲ್ಲಿ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಸಂಘರ್ಷ ಉಂಟಾಗಿ ನವೀನ್(೨೮) ಎಂಬ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದ್ದು, ಈ ಸಂಬಂಧ ಪೊಲೀಸರು ೪ ಜನರನ್ನು ಬಂಧಿಸಿದ್ದಾರೆ.
    ಕೋಡಿಹಳ್ಳಿ ನಿವಾಸಿ ನವೀನ್ ಮತ್ತು ಅರುಣ್ ಅಲಿಯಾಸ್ ಕೊಕ್ಕು ಇಬ್ಬರು ಸ್ನೇಹಿತರಾಗಿದ್ದು, ಸುಹೇಲ್ ಅಲಿಯಾಸ್ ಕೊಲವೇರಿ ಎಂಬಾತನಿಗೆ ಮೊಬೈಲ್ ಮಾರಾಟ ಮಾಡಿದ್ದಾರೆ. ಸುಹೇಲ್ ಹಣ ಬಾಕಿ ಉಳಿಸಿಕೊಂಡಿದ್ದು, ಈ ಹಿನ್ನಲೆಯಲ್ಲಿ ನವೀನ್ ಮತ್ತು ಅರುಣ್ ಇಬ್ಬರು ಬಾಕಿ ಹಣ ಕೇಳಲು ಸತ್ಯಸಾಯಿ ನಗರಕ್ಕೆ ತೆರಳಿದ್ದಾರೆ. ಮೊಬೈಲ್ ಕೊಡು ಇಲ್ಲವಾದಲ್ಲಿ ಬಾಕಿ ಹಣ ನೀಡು ಎಂದು ಪಟ್ಟು ಹಿಡಿದಿದ್ದು, ಈ ಸಂದರ್ಭದಲ್ಲಿ ಸಂಘರ್ಷ ಉಂಟಾಗಿ ನವೀನ್‌ಗೆ ಚಾಕುವಿನಿಂದ ಇರಿಯಲಾಗಿದೆ ಎನ್ನಲಾಗಿದೆ.
    ಸಂಘರ್ಷ ಉಂಟಾದ ಸಂದರ್ಭದಲ್ಲಿ ಅರುಣ್ ಸ್ಥಳದಿಂದ ಓಡಿ ಹೋಗಿದ್ದು, ಪುನಃ ಹಿಂದಿರುಗಿ ಬಂದು ನೋಡಿದಾಗ ನವೀನ್ ಕೆಳಗೆ ಬಿದ್ದಿರುವುದು ಕಂಡು ಬಂದಿದೆ. ಈತನನ್ನು ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಆದರೆ ಈತ ಮಾರ್ಗ ಮದ್ಯದಲ್ಲಿಯೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
    ಆಸ್ಪತ್ರೆ ಬಳಿ ಗುಂಪು ಸೇರಿದ ಜನ :
    ಕೊಲೆ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆ ಬಳಿ ಜನರು ಜಮಾಯಿಸಿದ್ದು, ಅಲ್ಲದೆ ಒಂದು ಹಂತದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ನಡುವೆ ಪೊಲೀಸ್ ಠಾಣೆ ಮುಂಭಾಗ ಸಹ ಜನರು ಜಮಾಯಿಸಿದ್ದರು. ಜನರಲ್ಲಿ ಒಂದೆಡೆ ಗೊಂದಲ, ಮತ್ತೊಂದೆಡೆ ಭಯದ ಆತಂಕ ಮೂಡಿರುವುದು ಕಂಡು ಬಂದಿತು. ರಾತ್ರಿಯೇ ಘಟನಾ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ನೇತೃತ್ವದ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
    ಕ್ಷಿಪ್ರ ಕಾರ್ಯಾಚರಣೆ : ೪ ಜನರ ಬಂಧನ
    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಮನೆ ಶಿವಾಜಿ ಸರ್ಕಲ್ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ಸುಹೇಲ್, ಸಾದತ್ ಸೇರಿದಂತೆ ೫ ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಪೈಕಿ ೪ ಜನರನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
    ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ಜಿತೇಂದ್ರಕುಮಾರ್ ದಯಾಮ ಮತ್ತು ನಗರ ಪೊಲೀಸ್ ವೃತ್ತ ನಿರೀಕ್ಷಕ ಶಾಂತಿನಾಥ್ ಮಾರ್ಗದರ್ಶನದಲ್ಲಿ ಹೊಸಮನೆ ಶಿವಾಜಿ ಸರ್ಕಲ್ ಠಾಣೆ ಪೊಲೀಸರ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು. ಪೊಲೀಸರ ಕಾರ್ಯಾಚರಣೆಗೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.