Wednesday, April 26, 2023

ಚುನಾವಣೆಯಲ್ಲಿ ಆಯ್ಕೆಮಾಡಿದ್ದಲ್ಲಿ ನಾನೇ ಮುಖ್ಯಮಂತ್ರಿ : ಪಕ್ಷೇತರ ಅಭ್ಯರ್ಥಿ ಬಿ.ಎನ್ ರಾಜು

ಭದ್ರಾವತಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ, ಪಕ್ಷೇತರ ಅಭ್ಯರ್ಥಿ ಬಿ.ಎನ್ ರಾಜು ಮಾತನಾಡಿದರು.
    ಭದ್ರಾವತಿ, ಏ. ೨೬ : ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಮತದಾರರು ನನ್ನನ್ನು ಆಯ್ಕೆಮಾಡಿದ್ದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗುವ ವಿಶ್ವಾಸವಿದೆ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ಬಿ.ಎನ್ ರಾಜು ಹೇಳಿದರು.
    ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನನ್ನ ಗುರುತು ಕ್ರಮ ಸಂ. ೧೦ ಟಿ.ವಿ(ದೂರದರ್ಶನ) ಆಗಿದ್ದು, ಕಳೆದ ಸುಮಾರು ೩೦ ವರ್ಷಗಳಿಂದ ದೀನದಲಿತರ, ರೈತರ, ಕಾರ್ಮಿಕರ, ಬಡವರ ಬೆನ್ನೆಲುಬಾಗಿ ನಿರಂತರ ಹೋರಾಟಗಳನ್ನು ನಡೆಸಿಕೊಂಡು ಬಂದಿದ್ದೇನೆ. ಹೋರಾಟ ಎಂದಿಗೂ ದುರ್ಬಳಕೆ ಮಾಡಿಕೊಂಡಿಲ್ಲ. ರಾಜೀರಹಿತ ಹೋರಾಟ ನನ್ನದಾಗಿದೆ ಎಂದರು.  
    ೨೦೧೩ರಲ್ಲಿ ಶಿವಮೊಗ್ಗದಿಂದ ಬೆಂಗಳೂರಿನವರೆಗೆ ವಿಐಎಸ್‌ಎಲ್ ಮತ್ತು ಎಂಪಿಎಂ ಎರಡು ಕಾರ್ಖಾನೆಗಳ ಹಾಗು ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಪಾದಯಾತ್ರೆ ನಡೆಸಲಾಗಿದ್ದು, ಡಿ.೧೦, ೨೦೨೨ರಿಂದ ಮಾನವಹಕ್ಕುಗಳ ದಿನಾಚರಣೆ ಅಂಗವಾಗಿ ಉಪ್ಪಿನ ರುಣಕ್ಕಾಗಿ ಪಾದಯಾತ್ರೆ ಕೈಗೊಂಡಿದ್ದೇನೆ. ಕ್ಷೇತ್ರದ ನೂರಾರು ಹಳ್ಳಿಗಳಲ್ಲಿ ಹಾಗೂ ನಗರಸಭೆ ವ್ಯಾಪ್ತಿಯ ೩೫ ವಾರ್ಡ್‌ಗಳಲ್ಲಿ ಪ್ರತಿ ಮನೆ ಮನೆಗೆ ತೆರಳಿ ಉಪ್ಪನ್ನು ಸಂಗ್ರಹಿಸಿ ಸುಮಾರು ೪೭ ದಿನಗಳ ಕಾಲ ೫೧೦ಕಿ.ಮೀ. ಪಾದಯಾತ್ರೆ  ಮೂಲಕ ಹೋರಾಟ ನಡೆಸಿದ್ದೇನೆ ಎಂದರು.
    ನಗರದ ಬಿ.ಹೆಚ್ ರಸ್ತೆ ತಿಮ್ಮಯ್ಯ ಮಾರ್ಕೆಟ್ ಅಕ್ರಮ ನೆಲ ಸಮ ಖಂಡಿಸಿ ೨೦೦೯ರಲ್ಲಿ ಸುಮಾರು ೫೨೩ ದಿನಗಳು ಹಗಲು-ರಾತ್ರಿ ಸತ್ಯಾಗ್ರಹ ನಡೆಸಿದ್ದೇನೆ. ಡಾ. ಬಿ.ಆರ್ ಅಂಬೇಡ್ಕರ್ ಭವನ ನಗರದ ಕೇಂದ್ರ ಭಾಗವಾದ ಕನಕ ಮಂಟಪ ಸಮೀಪ ನಿರ್ಮಾಣಗೊಳ್ಳಲು ಪ್ರಮುಖ ಕಾರಣಕರ್ತನಾಗಿದ್ದೇನೆ. ೧೦೦ ದಿನ ಉದ್ಯೋಗ ಖಾತ್ರಿ ಕೆಲಸ ನೀಡದ ಎಲ್ಲಾ ಪಂಚಾಯಿತಿಗಳ ವಿರುದ್ಧ, ನಿವೇಶನ ರಹಿತರ ಬಡ ಜನರ ಬಗ್ಗೆ ಪಡಿತರ ಚೀಟಿ ಇತರೆ ಸಮಸ್ಯೆಗಳ ಬಗ್ಗೆ ನಿರಂತರ ಹೋರಾಟ ನಡೆಸಿದ್ದೇನೆ. ಸರ್ಕಾರಿ ಶಾಲಾ ಕಾಲೇಜುಗಳ ಅಭಿವೃದ್ದಿಗಾಗಿ ನಿರಂತರ ಹೋರಾಟ ಹಾಗು ಮಾನವ ಹಕ್ಕುಗಳ ಸಂವಿಧಾನ ಹಕ್ಕುಗಳ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದ್ದು, ೨೦೧೮ರಲ್ಲಿ ವಿಧಾನಸಭೆ ಚುನಾವಣಿಯಲ್ಲಿ ಸ್ಪರ್ಧಿಸಿದ್ದು, ಇದೀಗ ೨ನೇ ಬಾರಿಗೆ ಚುನಾವಣಿಗೆ ಸ್ಪರ್ಧಿಸಿದ್ದೇನೆ ಎಂದರು.
    ಕ್ಷೇತ್ರದಲ್ಲಿ ಅನೇಕ ಮಹನೀಯರು ಶಾಸಕರಾಗಿ ಸೇವೆ ಸಲ್ಲಿಸಿದ್ದು, ಇದುವರೆಗೂ ಯಾರು ಸಹ ಮಂತ್ರಿಯಾಗದೆ ಅವಮಾನಗೊಂಡಿರುವುದು ದುರ್ದೈವದ ಸಂಗತಿಯಾಗಿದೆ. ಈ ಬಾರಿ ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ಕಂಡು ಬರುತ್ತಿದ್ದು, ಯಾವುದೇ ಪಕ್ಷ ಪೂರ್ಣ ಬಹುಮತ ಪಡೆಯಲು ಸಾಧ್ಯವಿಲ್ಲದಿರುವ ಕಾರಣದಿಂದ ಸ್ವಂತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನಾನು ಆಯ್ಕೆಯಾದರೆ ಎಲ್ಲಾ ಪಕ್ಷದ ಶಾಸಕರನ್ನು ವಿಶ್ವಾಸಕ್ಕೆ ಪಡೆದು ಸಾಧ್ಯವಾದರೆ ರಾಜ್ಯದ ಮುಖ್ಯ ಮಂತ್ರಿ ಸ್ಥಾನ ಪಡೆಯಲು ಪ್ರಯತ್ನಿಸಲಾಗುವುದು. ಇದು ಆಶ್ಚರ್ಯಪಡುವ ಸಂಗತಿಯಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲವೂ ಸಾಧ್ಯ ಎಂದರು.
    ಪತ್ರಿಕಾಗೋಷ್ಠಿಯಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಅಕ್ರಂ ಖಾನ್, ಪ್ರಧಾನ ಸಂಚಾಲಕ ಶ್ರೀನಿವಾಸ್, ಸಂಚಾಲಕ ವೀರೇಶ್, ಕಾರ್ಯದರ್ಶಿ ಅಜಿತ್, ಅಜಯ್ ಉಪಸ್ಥಿತರಿದ್ದರು.

Tuesday, April 25, 2023

ತುಮಕೂರಿನ ಯುವಕ ಭದ್ರಾನದಿಯಲ್ಲಿ ಮುಳುಗಿ ಸಾವು

    ಭದ್ರಾವತಿ, ಏ. ೨೫: ಸೋದರ ಮಾವ ನಿಧನರಾದ ಹಿನ್ನೆಲೆಯಲ್ಲಿ ತುಮಕೂರಿನಿಂದ ನಗರಕ್ಕೆ ಬಂದಿದ್ದ ಯುವಕ ಭದ್ರಾನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.
    ಸಮೀರ್ (೨೦) ಮೃತ ಯುವಕ ಈತ ಕಳೆದ ೧೫ ದಿನಗಳ ಹಿಂದೆ ಸೋದರ ಮಾವ ನಿಧನರಾದ ಕಾರಣ ನಗರದ ಖಾಜೀ ಮೊಹಲ್ಲಾದಲ್ಲಿರುವ ಅಜ್ಜಿ ಮನೆಗೆ ಬಂದಿದ್ದ. ರಂಜಾನ್ ಹಬ್ಬ ಮುಗಿಸಿಕೊಂಡು ಊರಿಗೆ ಹೋಗುವಂತೆ ಮನೆಯವರೆಲ್ಲ ಹೇಳಿದ್ದರಿಂದ ಇಲ್ಲಿಯೇ ಉಳಿದಿದ್ದ. ಸೋಮವಾರ ಮಧ್ಯಾಹ್ನ ೩.೪೦ಕ್ಕೆ ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುವ ರೈಲಿನಲ್ಲಿ ತುಮಕೂರಿಗೆ ಪ್ರಯಾಣಿಸಬೇಕಿತ್ತು. ಆದರೆ ಬೆಳಗ್ಗೆ ಸ್ನೇಹಿತರೊಂದಿಗೆ ಮನೆಯ ಹತ್ತಿರವಿದ್ದ ಭದ್ರಾನದಿಗೆ ಈಜಲು ತೆರಳಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಮತದಾನ ಜಾಗೃತಿ : ಗೋಡೆ ಬರವಣಿಗೆ ಅಭಿಯಾನಕ್ಕೆ ಚಾಲನೆ

ಭದ್ರಾವತಿ ಕಾಗದನಗರದ ಗುರು ಬ್ರದರ್ ಆರ್ಟ್ಸ್ ವತಿಯಿಂದ ಹಮ್ಮಿಕೊಳ್ಳಲಾಗಿರುವ ಮತದಾನ ಕುರಿತು ಜಾಗೃತಿ ಮೂಡಿಸುವ ಗೋಡೆ ಬರವಣಿಗೆ ಅಭಿಯಾನಕ್ಕೆ ಮಂಗಳವಾರ ತಹಸೀಲ್ದಾರ್ ಸುರೇಶ್ ಆಚಾರ್ ಚಾಲನೆ ನೀಡಿದರು.
    ಭದ್ರಾವತಿ, ಏ. ೨೫: ಕ್ಷೇತ್ರದಾದ್ಯಂತ ಮತದಾರರಿಗೆ ಮತದಾನ ಕುರಿತು ಜಾಗೃತಿ ಮೂಡಿಸುವ ವಿಭಿನ್ನ ರೀತಿಯ ಪ್ರಯತ್ನಗಳು ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಕಾಗದ ನಗರದ ಗುರು ಬ್ರದರ್ ಆರ್ಟ್ಸ್ ವತಿಯಿಂದ ಜಾಗೃತಿ ಮೂಡಿಸುವ ಗೋಡೆ ಬರವಣಿಗೆ ಅಭಿಯಾನ ಕೈಗೊಳ್ಳಲಾಗಿದೆ.
    ಜಾಗೃತಿ ಮೂಡಿಸುವ ಗೋಡೆ ಬರವಣಿಗೆ ಅಭಿಯಾನದ ಮೂಲಕ ಮತದಾನ ಹೆಚ್ಚಿಸುವ ಆಶಯ ಗುರು ಬ್ರದರ‍್ಸ್ ಆರ್ಟ್ಸ್ ಹೊಂದಿದ್ದು, ಮಂಗಳವಾರ ಸಂಜೆ ಕಾಗದನಗರದ ಚೌಡೇಶ್ವರಿ ದೇವಸ್ಥಾನ ಸಮೀಪದ ಬಯಲು ರಂಗಮಂದಿದಲ್ಲಿ ಅಭಿಯಾನಕ್ಕೆ ತಹಸೀಲ್ದಾರ್ ಸುರೇಶ್ ಆಚಾರ್ ಚಾಲನೆ ನೀಡಿದರು.


    ಬಿ. ಗುರು, ಅಶೋಕ್, ಹರೀಶ್ ಕುಮಾರ್, ಮಹಮದ್ ರಫಿ, ಜಿ. ರವಿಕುಮಾರ್, ಸತೀಶ್, ಶಿವಲಿಂಗೇಗೌಡ, ಕೆ. ಶಿವರಾಜು, ನಟರಾಜ್,  ಶಂಕರ್ ಲಿಂಗೇಗೌಡ , ಕೆ.ಎಸ್ ರವಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಈ ಹಿಂದೆ ಮಹಾಮಾರಿ ಕೊರೋನಾ ಸಂದರ್ಭದಲ್ಲೂ ಗುರು ಬ್ರದರ‍್ಸ್ ಆರ್ಟ್ಸ್ ವತಿಯಿಂದ ಗೋಡೆ ಬರವಣಿಗೆ ಅಭಿಯಾನ ಹಾಗು ರಸ್ತೆಗಳ ಮೇಲೆ ಬೃಹತ್ ಕೊರೋನಾ ರಂಗು ರಂಗಿನ ಚಿತ್ತಾರಗಳ ಮೂಲಕ ಅಭಿಯಾನ ನಡೆಸುವ ಮೂಲಕ ಎಲ್ಲರ ಗಮನ ಸೆಳೆಯಲಾಗಿತ್ತು.

ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಮತದಾನ ಕುರಿತು ಜಾಗೃತಿ

ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಭದ್ರಾವತಿ ನಗರಸಭೆ ವತಿಯಿಂದ ಮಂಗಳವಾರ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು.
    ಭದ್ರಾವತಿ, ಏ. ೨೫ : ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ನಗರಸಭೆ ವತಿಯಿಂದ ಮಂಗಳವಾರ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು.
ನಗರಸಭೆ ವತಿಯಿಂದ ಹಲವು ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಿಕೊಂಡು ಬರಲಾಗುತ್ತಿದೆ. ನಿಲ್ದಾಣದಲ್ಲಿ ವಿದ್ಯಾರ್ಥಿಗಳಿಗೆ ಚುನಾವಣೆ ಸಂಬಂಧ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸುವ ಜೊತೆಗೆ ಮತದಾನ ಪ್ರತಿಜ್ಞಾ ವಿಧಿ ನಡೆಸಲಾಯಿತು.
    ನಗರಸಭೆ ಸಮುದಾಯ ಸಂಘಟನಾ ಅಧಿಕಾರಿ ಎಂ. ಸುಹಾಸಿನಿ, ಸಂಘಟಕರಾದ ಎಂ. ಈಶ್ವರಪ್ಪ, ಸುಮಿತ್ರ ಎಚ್. ಹರಪ್ಪನಹಳ್ಳಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಡಾ. ವಿಜಯದೇವಿಗೆ ‘ಅಕ್ಕಮಹಾದೇವಿ ಪ್ರಶಸ್ತಿ’

ಭದ್ರಾವತಿ ನಿವಾಸಿ, ವಿಜಯಪುರ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕಿ, ಎಮೆರಿಟಸ್ ಪ್ರೊಫೆಸರ್ ಡಾ. ವಿಜಯದೇವಿಯವರಿಗೆ 'ಅಕ್ಕಮಹಾದೇವಿ ಪ್ರಶಸ್ತಿ' ನೀಡಿ ಗೌರವಿಸಲಾಗಿದೆ.
    ಭದ್ರಾವತಿ, ಏ. ೨೫ : ನಗರದ ನಿವಾಸಿ, ವಿಜಯಪುರ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕಿ, ಎಮೆರಿಟಸ್ ಪ್ರೊಫೆಸರ್ ಡಾ. ವಿಜಯದೇವಿಯವರಿಗೆ 'ಅಕ್ಕಮಹಾದೇವಿ ಪ್ರಶಸ್ತಿ' ನೀಡಿ ಗೌರವಿಸಲಾಗಿದೆ.
    ಡಾ. ವಿಜಯದೇವಿಯವರ ಸಾಹಿತ್ಯ ಹಾಗು ಸಮಾಜ ಸೇವೆಯನ್ನು ಗುರುತಿಸಿ ಬೆಂಗಳೂರಿನ ಜೋಳನಾಯಕನಹಳ್ಳಿಯ ಸುಮಂಗಲಿ ಸೇವಾ ಆಶ್ರಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
  ಡಾ. ವಿಜಯದೇವಿಯವರು ಹಲವು ಪುಸ್ತಕಗಳನ್ನು ಹೊರತಂದಿದ್ದು, ಅಲ್ಲದೆ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಇವರನ್ನು ನಗರದ ಗಣ್ಯರು, ವಿವಿಧ ಸಂಘ-ಸಂಸ್ಥೆಗಳು ಅಭಿನಂದಿಸಿವೆ.
    ಏ.೨೬ರಂದು ಉಪನ್ಯಾಸ:
    ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ, ಕಲಬುರಗಿ, ಬಸವಪರ ಸಂಘಟನೆಗಳು ಹಾಗು ಕಾಯಕ ಶರಣರ ಒಕ್ಕೂಟ ಕಲಬುರಗಿ ವತಿಯಿಂದ ಏ.೨೮ರ ವರೆಗೆ ಕಲಬುರಗಿ ಜಗತ್, ಬಸವೇಶ್ವರ ವೃತ್ತದ ಬಸವ ಸಾಂಸ್ಕೃತಿಕ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿರುವ ಬಸವ ಜಯಂತಿ ಉತ್ಸವದಲ್ಲಿ ಏ.೨೬ರ ಸಂಜೆ ೬ ಗಂಟೆಗೆ ಬಸವಣ್ಣ, ಮಹಿಳೆ ಮತ್ತು ಸಂವಿಧಾನ್ಮಕ ಚಿಂತನೆಗಳು ಕುರಿತು ಡಾ. ವಿಜಯದೇವಿ ಉಪನ್ಯಾಸ ನೀಡಲಿದ್ದಾರೆ.

ಬಿಜೆಪಿ ೭ ವಿಧಾನಸಭಾ ಕ್ಷೇತ್ರಗಳಲ್ಲೂ ಗೆಲುವು : ಆರ್.ಕೆ ಸಿದ್ರಾಮಣ್ಣ

ಭದ್ರಾವತಿಯಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಕೆ ಸಿದ್ರಾಮಣ್ಣ ಮಾತನಾಡಿದರು.
    ಭದ್ರಾವತಿ, ಏ. ೨೫: ಈ ಬಾರಿ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿರುವ ೭ ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಪಕ್ಷ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಕೆ ಸಿದ್ರಾಮಣ್ಣ ಹೇಳಿದರು.
    ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಪಕ್ಷ ಕೇಂದ್ರ ಹಾಗು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಸಾಕಷ್ಟು ಬದಲಾವಣೆಗಳಾಗಿವೆ. ಮತದಾರರು ಬಿಜೆಪಿ ಪಕ್ಷದ ಪರವಾಗಿದ್ದಾರೆ. ರಾಜ್ಯ ಹಾಗು ಜಿಲ್ಲೆಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು, ಕೇಂದ್ರ ಸರ್ಕಾರದ ಜನಪರ ಯೋಜನೆಗಳಿಂದಾಗಿ ಅದರಲ್ಲೂ ವಿಶೇಷವಾಗಿ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಅವಧಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಈ ಬಾರಿ ಜಿಲ್ಲೆಯಲ್ಲಿರುವ ೭ ವಿಧಾನಸಭಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆಂಬ ಭರವಸೆ ಮೂಡಿಸಿವೆ ಎಂದರು.
    ಈ ಬಾರಿ ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲೂ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂಬ ಗುರಿ ಹೊಂದಲಾಗಿದೆ. ಮಂಗೋಟೆ ರುದ್ರೇಶ್‌ರವರನ್ನು ಅಭ್ಯರ್ಥಿಯನ್ನಾಗಿಸಲಾಗಿದೆ. ಇವರ ಗೆಲುವಿಗೆ ಈಗಾಗಲೇ ಪಕ್ಷದ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸುತ್ತಿದ್ದಾರೆ. ದೇಶದ ವಿವಿಧ ರಾಜ್ಯಗಳಿಂದ ಪಕ್ಷದ ಪ್ರಮುಖರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪ್ರಚಾರ ಕಾರ್ಯ ಮತ್ತಷ್ಟು ತೀವ್ರಗೊಳ್ಳಲಿದ್ದು, ಈ ಬಾರಿ ಚುನಾವಣೆಯಲ್ಲಿ ಮಂಗೋಟೆ ರುದ್ರೇಶ್‌ರವರು ಗೆಲುವು ಸಾಧಿಸಿದ್ದಲ್ಲಿ ಕ್ಷೇತ್ರದ ಚಿತ್ರಣ ಸಂಪೂರ್ಣವಾಗಿ ಬದಲಾಗುವ ಭರವಸೆ ಹೊಂದಿದ್ದೇನೆ. ಮತದಾರರು ಹೆಚ್ಚಿನ ಮತಗಳನ್ನು ನೀಡಿ ಗೆಲುವಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.
    ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಪಕ್ಷದ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಕಾರ್ಯದರ್ಶಿಗಳಾದ ಚನ್ನೇಶ್, ರಂಗಸ್ವಾಮಿ, ಚುನಾವಣಾ ಪ್ರಭಾರಿ ಅಶೋಕ್‌ಮೂರ್ತಿ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಆರ್.ಎಸ್ ಶೋಭಾ, ಕೂಡ್ಲಿಗೆರೆ ಹಾಲೇಶ್, ಚುನಾವಣಾ ಸಂಚಾಲಕರಾದ ಎಂ. ಮಂಜುನಾಥ್, ಎಂ.ಎಸ್ ಸುರೇಶಪ್ಪ, ಗೋಕುಲ್ ಕೃಷ್ಣ, ಧನುಷ್‌ಬೋಸ್ಲೆ, ಅವಿನಾಶ್, ಕವಿತಾರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Monday, April 24, 2023

ವಿಧಾನಸಭಾ ಚುನಾವಣೆ : ಅಂತಿಮ ಕಣದಲ್ಲಿ ೧೪ ಮಂದಿ

ಭದ್ರಾವತಿ ವಿಧಾನಸಭಾ ಕ್ಷೇತ್ರದ ೨೦೨೩ರ ಚುನಾವಣೆಯಲ್ಲಿ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳು
    ಭದ್ರಾವತಿ, ಏ. ೨೧ : ಈ ಬಾರಿ ವಿಧಾನಸಭಾ ಚುನಾವಣೆ ಅಂತಿಮ ಕಣದಲ್ಲಿ ಒಟ್ಟು ೧೪ ಮಂದಿ ಉಳಿದುಕೊಂಡಿದ್ದು, ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಸೋಮವಾರ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ.
    ಚುನಾವಣೆಗೆ ಸ್ಪರ್ಧಿಸಿ ಒಟ್ಟು ೧೭ ಮಂದಿ ೨೫ ನಾಮಪತ್ರ ಸಲ್ಲಿಸಿದ್ದು, ಈ ಪೈಕಿ ಶುಕ್ರವಾರ ನಾಮಪತ್ರ ಪರಿಶೀಲನೆ ನಡೆದು ೧೭ ಮಂದಿಯಲ್ಲಿ ಓರ್ವ ಪಕ್ಷೇತರ ಅಭ್ಯರ್ಥಿ ನಾಮಪತ್ರ ತಿರಸ್ಕೃತಗೊಂಡಿತ್ತು. ೧೬ ನಾಮಪತ್ರಗಳ ಪೈಕಿ ಪಕ್ಷೇತರ ಅಭ್ಯರ್ಥಿಗಳಾದ ಕೆ. ಮೋಹನ್ ಮತ್ತು ನೀಲಂ ತಮ್ಮ ನಾಮಪತ್ರ ಹಿಂಪಡೆದುಕೊಂಡಿದ್ದಾರೆ.
     ಶಾಸಕ ಬಿ.ಕೆ ಸಂಗಮೇಶ್ವರ್(ಕಾಂಗ್ರೆಸ್), ಶಾರದ ಅಪ್ಪಾಜಿ(ಜೆಡಿಎಸ್), ಮಂಗೋಟೆ ರುದ್ರೇಶ್(ಬಿಜೆಪಿ), ಆನಂದ್(ಎಎಪಿ), ಸುಮಿತ್ರಾ ಬಾಯಿ (ಕೆಆರ್‌ಎಸ್), ಶಶಿಕುಮಾರ್ ಎಸ್. ಗೌಡ(ಜೆಡಿಯು), ಇ.ಪಿ ಬಸವರಾಜ(ಆರ್‌ಪಿಐಕೆ), ಬಿ.ಎನ್ ರಾಜು(ಪಕ್ಷೇತರ), ಅಹಮದ್ ಅಲಿ(ಪಕ್ಷೇತರ), ಜಾನ್‌ಬೆನ್ನಿ(ಪಕ್ಷೇತರ), ಎಸ್.ಕೆ ಸುಧೀಂದ್ರ(ಪಕ್ಷೇತರ), ವೈ. ಶಶಿಕುಮಾರ್(ಪಕ್ಷೇತರ), ಡಿ. ಮೋಹನ್(ಪಕ್ಷೇತರ) ಮತ್ತು ರಾಜಶೇಖರ್(ಪಕ್ಷೇತರ) ಅಂತಿಮ ಕಣದಲ್ಲಿ ಉಳಿದುಕೊಂಡಿರುವ ಅಭ್ಯರ್ಥಿಗಳಾಗಿದ್ದಾರೆ.
    ವಿವಿಧ ರಾಜಕೀಯ ಪಕ್ಷಗಳಿಂದ ೭ ಮಂದಿ ಹಾಗು ಪಕ್ಷೇತರರಾಗಿ ೭ ಮಂದಿ ಒಟ್ಟು ೧೪ ಮಂದಿ ಇದ್ದು, ಈ ಬಾರಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತ್ತು ಪಕ್ಷೇತರರು ಸಮಾನವಾಗಿರುವುದು ವಿಶೇಷತೆಯಾಗಿದೆ.
    ಕಳೆದ ಚುನಾವಣೆ ೨೦೧೮ರಲ್ಲೂ ೧೪ ಮಂದಿ ಕಣದಲ್ಲಿದ್ದರು. ೨೦೧೩ರಲ್ಲಿ ಅತಿಹೆಚ್ಚು ೧೭ ಮಂದಿ ಹಾಗು ೨೦೦೮ರಲ್ಲಿ ಕೇವಲ ೭ ಮಂದಿ ಕಣದಲ್ಲಿದ್ದರು.