Saturday, May 6, 2023

ಅಭಿವೃದ್ಧಿಗೆ ಮುಂದಡಿಯೊಂದಿಗೆ ಹಲವು ಭರವಸೆಗಳ ಪ್ರಣಾಳಿಕೆ

ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ ಈಡೇರಿಸುವ ವಿಶ್ವಾಸ

ಭದ್ರಾವತಿಯಲ್ಲಿ ಜಾತ್ಯತೀತ ಜನತಾದಳ ವತಿಯಿಂದ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಹಲವು ಭರವಸೆಗಳ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು. 
    ಭದ್ರಾವತಿ, ಮೇ. ೬: ಸಾಧಿಸಿದ್ದೇವೆ ಸಾಕಷ್ಟು-ಮಾಡಬೇಕಾಗಿದೆ ಮತ್ತಷ್ಟು, ಈಡೇರಿಸಿದ್ದೇವೆ ನೂರಾರು-ಇನ್ನೂ ಉಳಿದಿದೆ ಹಲವಾರು. ಅಪ್ಪಾಜಿ ಅಭಿವೃದ್ಧಿಯ ಹಾದಿಯಲ್ಲಿ ಶಾರದ ಅಪ್ಪಾಜಿ ಮುಂದಡಿ ಎಂಬ ಶೀರ್ಷಿಕೆಯೊಂದಿಗೆ ಶನಿವಾರ ಜ್ಯಾತ್ಯತೀತ ಜನತಾದಳ ಅಭ್ಯರ್ಥಿ ಶಾರದ ಅಪ್ಪಾಜಿ ಪ್ರಣಾಳಿಕೆ ಬಿಡುಗಡೆಗೊಳಿಸಿದರು.
    ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರು ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಮುಂದಿನ ಅಭಿವೃದ್ಧಿ ಕಾರ್ಯಗಳಿಗೆ ಪೂರಕವಾಗಿವೆ ಎಂದರು.
    ಪ್ರಣಾಳಿಕೆಯಲ್ಲಿ ಪ್ರಮುಖವಾಗಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಬಳಿ ಹೊಸಸೇತುವೆ(ಮುಳುಗು ಸೇತುವೆ)ಗೆ ಪರ್ಯಾಯವಾಗಿ ಸುಭದ್ರವಾದ ಸೇತುವೆ ನಿರ್ಮಿಸುವುದು. ಡಾ. ಬಿ.ಆರ್ ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಯನ್ನು ಸುಮಾರು ೧೦ ಕೋ. ರು. ಅನುದಾನದಲ್ಲಿ ಸುಸಜ್ಜಿತ ಮೂಲ ಸೌಕರ್ಯ ಕಲ್ಪಿಸಿ ಪೂರ್ಣಗೊಳಿಸುವುದು. ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳ ಸಬಲೀಕರಣ, ಬಾಕಿಯರಿಗೆ ಸುಸಜ್ಜಿತ ಶೌಚಾಲಯ ಹಾಗು ವಿಶ್ರಾಂತಿ ಕೊಠಡಿಗಳ ನಿರ್ಮಾಣ. ನೆನೆಗುದಿಗೆ ಬಿದ್ದಿರುವ ದೊಣಬಘಟ್ಟ-ಕೆ.ಕೆ ಮಗ್ಗಿ ಸಂಪರ್ಕ ಸೇತುವೆ ನಿರ್ಮಾಣ ಯೋಜನೆ ಸಾಕಾರಗೊಳಿಸುವುದು ಹಾಗು ವಿಐಎಸ್‌ಎಲ್ ಮತ್ತು ಎಂಪಿಎಂ ಎರಡು ಕಾರ್ಖಾನೆಗಳ ಪುನಶ್ಚೇತನ, ಮಹಿಳೆಯರಿಗಾಗಿ ಗಾರ್ಮೆಂಟ್ಸ್ ಫ್ಯಾಕ್ಟರಿ ಸ್ಥಾಪನೆ, ಸಣ್ಣ ಕೈಗಾರಿಕಾ ಘಟಕಗಳ ಸ್ಥಾಪನೆ ಮೂಲಕ ಉದ್ಯೋಗಾವಕಾಶ ಕಲ್ಪಿಸುವುದು ಸೇರಿದಂತೆ ಇನ್ನಿತರ ಭರವಸೆಗಳನ್ನು ನೀಡಲಾಗಿದೆ.
    ಪಕ್ಷದ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ, ಪ್ರಮುಖರಾದ ಸುರೇಶ್, ಮಹಮದ್ ಸನ್ನಾವುಲ್ಲಾ, ಎಚ್.ಎಸ್ ಸಂಜೀವಕುಮಾರ್, ಕರಿಯಪ್ಪ, ಶಿವಾಜಿರಾವ್ ಗಾಯಕ್‌ವಾಡ್, ಎನ್ ಕೃಷ್ಣಪ್ಪ, ವಿಶ್ವೇಶ್ವರ ಗಾಯಕ್‌ವಾಡ್ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.  

ಅಭ್ಯರ್ಥಿಗಳಿಂದ ಕಾರ್ಖಾನೆಗಳನ್ನು ಉಳಿಸಿಕೊಳ್ಳುವ ಒಮ್ಮತದ ನಿರ್ಣಯ


ಭದ್ರಾವತಿ, ಮೇ. 6 : ಮೈಸೂರು ಕಾಗದ ಕಾರ್ಖಾನೆ ನೊಂದ ನಿವೃತ್ತ ಕಾರ್ಮಿಕರ ಹೋರಾಟ ವೇದಿಕೆ ವತಿಯಿಂದ ಶನಿವಾರ  ಹಳೇನಗರದ ಶ್ರೀ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಮತದಾನ ಜಾಗೃತಿ ಮತ್ತು ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು.  
       ಪ್ರಮುಖವಾಗಿ ಮೈಸೂರು ಕಾಗದ ಕಾರ್ಖಾನೆ ಪುನರ್ ಆರಂಭಿಸುವುದು, ವಿಐಎಸ್ಎಲ್ ಅಭಿವೃದ್ಧಿಪಡಿಸುವುದು ಸೇರಿದಂತೆ  ಇನ್ನಿತರ ವಿಚಾರಗಳ ಕುರಿತು ಚರ್ಚಿಸಲಾಯಿತು. ಅಭ್ಯರ್ಥಿಗಳು  ಎರಡೂ ಕಾರ್ಖಾನೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಒಮ್ಮತದ ನಿರ್ಣಯ ಕೈಗೊಂಡರು.
     ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿಕೆ ಸಂಗಮೇಶ್, ಜೆಡಿಯು  ಅಭ್ಯರ್ಥಿ ಶಶಿಕುಮಾರ್ ಎಸ್ ಗೌಡ, ಪಕ್ಷೇತರ ಅಭ್ಯರ್ಥಿಗಳಾದ ಸುಮಿತ್ರ ಬಾಯಿ, ಬಿ.ಎನ್ ರಾಜು ಮತ್ತು ವೇದಿಕೆ ಪ್ರಧಾನ ಸಂಚಾಲಕ ಟಿ.ಜಿ ಬಸವರಾಜಯ್ಯ ಉಪಸ್ಥಿತರಿದ್ದರು.

Friday, May 5, 2023

ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಮತದಾನ ಕುರಿತು ಜಾಗೃತಿ

ಭದ್ರಾವತಿಯಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತಿ, ನಗರಸಭೆ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಶುಕ್ರವಾರ ನಗರದ ನ್ಯೂಟೌನ್ ವಿಐಎಸ್‌ಎಸ್‌ಜೆ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಯುವ ಮತದಾರರಿಗೆ ಮತದಾನ ಜಾಗೃತಿ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಮೇ. ೫ :  ತಾಲೂಕು ಆಡಳಿತ, ತಾಲೂಕು ಪಂಚಾಯತಿ, ನಗರಸಭೆ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಶುಕ್ರವಾರ ನಗರದ ನ್ಯೂಟೌನ್ ವಿಐಎಸ್‌ಎಸ್‌ಜೆ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಯುವ ಮತದಾರರಿಗೆ ಮತದಾನ ಜಾಗೃತಿ ಹಮ್ಮಿಕೊಳ್ಳಲಾಗಿತ್ತು.
    ಮತದಾನ ಜಾಗೃತಿ ಫಲಕಗಳನ್ನು ಹಿಡಿದು ಜಾಥಾ ನಡೆಸಲಾಯಿತು. ಮತದಾನ ಮಹತ್ವ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಯಿತು. ಮೇ.೧೦ರಂದು ವಿಧಾನಸಭೆ ಚುನಾವಣೆ ಮತದಾನ ಹಿನ್ನಲೆಯಲ್ಲಿ ಕಳೆದ ಸುಮಾರು ೨ ತಿಂಗಳಿನಿಂದ ಕ್ಷೇತ್ರದಾದ್ಯಂತ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಾಗಿ ಆಯೋಜಿಸಿಕೊಂಡು ಬರಲಾಗುತ್ತಿದೆ.


  ತಾಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ರಮೇಶ್, ನಗರಸಭೆ ಪೌರಾಯುಕ್ತ ಮನುಕುಮಾರ್, ಸಹಾಯಕ ನಿರ್ದೇಶಕ ಉಪೇಂದ್ರ, ಪಾಲಿಟೆಕ್ನಿಕ್ ಯುವ ಮತದಾರರು, ಬೋಧನಾ ಮತ್ತು ಬೋಧಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಚುನಾವಣೆಯಲ್ಲಿ ಹಣ, ಹೆಂಡ, ಅಮಿಷಗಳಿಗೆ ಬಲಿಯಾಗಿ ಮತ ಮಾರಿಕೊಳ್ಳದಿರಿ

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಿಂದ ಜಾಗೃತಿ ಕರಪತ್ರ ವಿತರಣೆಗೆ ಚಾಲನೆ

ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಭದ್ರಾವತಿಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾ ಶಾಖೆವತಿಯಿಂದ ಶುಕ್ರವಾರ ಜಾಗೃತಿ ಕರಪತ್ರ ವಿತರಣೆಗೆ ಚಾಲನೆ ನೀಡಲಾಯಿತು.
    ಭದ್ರಾವತಿ, ಮೇ. ೫ : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಭವಿಷ್ಯದ ಚಿಂತನೆಗಳೊಂದಿಗೆ ಮಾದರಿ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸುತ್ತಿರುವ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಹಲವಾರು ವರ್ಷಗಳಿಂದ ಮತದಾನ ಜಾಗೃತಿ ನಡೆಯುತ್ತಿದ್ದು, ಪ್ರಸ್ತುತ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾ ಶಾಖೆ ವತಿಯಿಂದ ಮುಗ್ದ ಮತದಾರರು ಹಣ, ಹೆಂಡದ ಅಮಿಷಗಳಿಗೆ ಬಲಿಯಾಗದಂತೆ ಕರಪತ್ರ ವಿತರಿಸಿ ಜಾಗೃತಿ ಮೂಡಿಸಲಾಗುತ್ತಿದೆ.
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-೨ರ ಕಛೇರಿ ವತಿಯಿಂದ ಶುಕ್ರವಾರ ಕರಪತ್ರಗಳ ವಿತರಣೆಗೆ ಚಾಲನೆ ನೀಡಲಾಯಿತು. ಮೇ. ೧೦ರಂದು ಚುನಾವಣೆ ನಡೆಯಲಿದ್ದು, ಮುಗ್ದ ಮತದಾರರಿಗೆ ಮದ್ಯ ಕುಡಿಸಿ, ಹಣ ಅಥವಾ ಅಮಿಷಗಳಿಂದ  ಮತ ಪಡೆಯುವ ಪ್ರಯತ್ನಗಳು ನಡೆಯಬಹುದು. ಇದನ್ನು ಎಲ್ಲರೂ ಒಗ್ಗಟ್ಟಾಗಿ ವಿರೋಧಿಸಬೇಕು. ರಾಜಕೀಯ ಪಕ್ಷಗಳು ಹಣ, ಮದ್ಯ ಹಂಚುವುದಿಲ್ಲ ಎನ್ನುವ ತೀರ್ಮಾನಕ್ಕೆ ಬರಬೇಕು. ಈ ನಿಟ್ಟಿನಲ್ಲಿ ಜಾಗೃತಿ ಕಾರ್ಯ ನಡೆಯುತ್ತಿದೆ.
    ಜನಜಾಗೃತಿ ವೇದಿಕೆ ಸದಸ್ಯರಾದ ಜಿ. ಆನಂದ ಕುಮಾರ್, ಪಾಲಾಕ್ಷಪ್ಪ, ರಾಜೇಶ್, ರೇವಣಕರ್ ಹಾಗೂ ನವಜೀವನ ಸಮಿತಿ ಸದಸ್ಯರುಗಳು, ಯೋಜನಾಧಿಕಾರಿಗಳು, ಒಕ್ಕೂಟದ ಪದಾಧಿಕಾರಿಗಳು, ಸಂಘದ ಸದಸ್ಯರು ಉಪಸ್ಥಿತರಿದ್ದರು.

ಜೆಡಿಎಸ್ ಅಭ್ಯರ್ಥಿಗೆ ವ್ಯಾಪಕ ಬೆಂಬಲ : ಗೆಲುವು ಖಚಿತ

ರಾಜ್ಯ ಸಂಘಟನಾ ಕಾರ್ಯದರ್ಶಿ ಮಹಮದ್ ಸನ್ನಾವುಲ್ಲಾ


ಭದ್ರಾವತಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಮಹಮದ್ ಸನ್ನಾವುಲ್ಲಾ ಮಾತನಾಡಿದರು.
    ಭದ್ರಾವತಿ, ಮೇ. ೫ : ಜಾತ್ಯತೀತ ಜನತಾದಳ ಅಭ್ಯರ್ಥಿ ಶಾರದ ಅಪ್ಪಾಜಿಯವರಿಗೆ ಈ ಬಾರಿ ಕ್ಷೇತ್ರದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯದ ಶೇ.೬೦ರಷ್ಟು ಮತ ಲಭಿಸುವ ವಿಶ್ವಾಸವಿದೆ ಎಂದು ಮಾಜಿ ಉಪಮೇಯರ್, ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮಹಮದ್ ಸನ್ನಾವುಲ್ಲಾ ಹೇಳಿದರು.
    ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ೩೦ ವರ್ಷಗಳಲ್ಲಿ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಎರಡು ಬೃಹತ್ ಕಾರ್ಖಾನೆಗಳು ಬೆಳವಣಿಗೆ ಕಾಣದೆ ನಿರುದ್ಯೋಗ ಸಮಸ್ಯೆ ಉಲ್ಬಣವಾಗಿದೆ. ಸಮರ್ಪಕವಾಗಿ ಮೂಲ ಸೌಕರ್ಯಗಳನ್ನು ಕಲ್ಪಿಸಿಲ್ಲ. ಇದರಿಂದಾಗಿ ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ ಎಂದರು.
    ಈ ಬಾರಿ ಚುನಾವಣೆಯಲ್ಲಿ ಶಾರದ ಅಪ್ಪಾಜಿ ಗೆಲುವು ಖಚಿತವಾಗಿದ್ದು, ಇವರ ಗೆಲುವಿಗಾಗಿ ಎಲ್ಲಾ ರೀತಿಯ ಪ್ರಯತ್ನ ನಡೆಸಲಾಗುತ್ತಿದೆ. ಮತಯಾಚನೆ ಸಂದರ್ಭದಲ್ಲಿ ಇವರಿಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಜೆಡಿಎಸ್  ಅಧಿಕಾರಕ್ಕೆ ಬಂದಲ್ಲಿ ಎರಡು ಕಾರ್ಖಾನೆಗಳನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.
    ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕರಿಯಪ್ಪ, ತ್ಯಾಗರಾಜ್, ಇಬ್ರಾಹಿಂ ಖಾನ್, ಎ. ಮಸ್ತಾನ್, ಸೈಯದ್ ಅಜ್ಮಲ್, ತರುಣ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿಜೃಂಭಣೆಯಿಂದ ಜರುಗಿದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವ

ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯವರ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ಜರುಗಿತು.
    ಭದ್ರಾವತಿ, ಮೇ. ೫ : ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಸ್ವಾಮಿಯ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ಜರುಗಿತು.
    ಮಧ್ಯಾಹ್ನ ಸುಮಾರು ೧೨.೩೦ರ ಅಭಿಜಿನ್ ಮುಹೂರ್ತದಲ್ಲಿ ಬ್ರಹ್ಮರಥೋತ್ಸವ ಆರಂಭಗೊಂಡಿತು. ಈ ಬಾರಿ ದೇವಸ್ಥಾನದ ಪ್ರಾಂಗಣದಲ್ಲಿಯೇ ಧಾರ್ಮಿಕ ಆಚರಣೆಗಳೊಂದಿಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
    ರಥೋತ್ಸವ ಆರಂಭಗೊಳ್ಳುತ್ತಿದ್ದಂತೆ ಭಕ್ತಾಧಿಗಳು ಸ್ವಾಮಿಗೆ ಜೈಕಾರ ಹಾಕಿ ಸಂಭ್ರಮಿಸಿದರು. ಸೇವಾಕರ್ತರಿಂದ ಪಾನಕ, ಕೋಸಂಬರಿ ಸೇರಿದಂತೆ ಪ್ರಸಾದ ವಿತರಣೆ ನಡೆಯಿತು.
ದೇವಸ್ಥಾನದ ಪ್ರಧಾನ ಅರ್ಚಕ ವೇದಬ್ರಹ್ಮ ಎಸ್. ರಂಗನಾಥ ಶರ್ಮ, ಸಹಾಯಕ ಅರ್ಚಕ ಎಸ್. ಶ್ರೀನಿವಾಸ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಮುಜರಾಯಿ ಇಲಾಖೆ ಅಧಿಕಾರಿಗಳು, ದೇವಸ್ಥಾನದ ಸೇವಾಕರ್ತರು, ಭಕ್ತರು ಪಾಲ್ಗೊಂಡಿದ್ದರು.

Thursday, May 4, 2023

ಅಭ್ಯರ್ಥಿಗಳೊಂದಿಗೆ ಮೇ.೬ರಂದು ಸಂವಾದ : ಸೂಚನೆ

ಮೇ.೫ರ ಮಧ್ಯಾಹ್ನದೊಳಗೆ ಹೆಸರು ನೋಂದಾಯಿಸಿ


    ಭದ್ರಾವತಿ, ಮೇ. ೪ : ಮೈಸೂರು ಕಾಗದ ಕಾರ್ಖಾನೆ ನೊಂದ ನಿವೃತ್ತ ಕಾರ್ಮಿಕರ ಹೋರಾಟ ವೇದಿಕೆ ವತಿಯಿಂದ ಮೇ.೬ರಂದು ಬೆಳಿಗ್ಗೆ ೧೧.೧೫ ರಿಂದ ೧೨.೩೦ರವರೆಗೆ ಹಳೇನಗರದ ಶ್ರೀ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಮತದಾನ ಜಾಗೃತಿ ಮತ್ತು ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
    ಮೈಸೂರು ಕಾಗದ ಕಾರ್ಖಾನೆ ಪುನರ್ ಆರಂಭಿಸುವುದು. ನಿವೃತ್ತ ಕಾರ್ಮಿಕರಿಗೆ ಬರಬೇಕಾಗಿರುವ ಲಕ್ಷಾಂತರ ರು. ಬಾಕಿ ಹಣ ಕೊಡಿಸುವ ಕುರಿತು ಮತ್ತು ಕಾರ್ಖಾನೆಯನ್ನು ಮುಚ್ಚುವ ಸ್ಥಿತಿಗೆ ತಂದು ಈಗಲೂ ಭ್ರಷ್ಟಾಚಾರದೊಂದಿಗೆ ಹಿಂಬಾಗಿಲಿಂದ ಅಧಿಕಾರದ ಚುಕ್ಕಾಣಿ ಹೊತ್ತಿರುವವರ ಮೇಲೆ ಕ್ರಮ ಕೈಗೊಳ್ಳುವ ಬಗ್ಗೆ ಸ್ಪಷ್ಟ ನಿಲುವು ಹಾಗು ಮುಂದಿನ ನಡೆಯ ಬಗ್ಗೆ ಸಂವಾದದಲ್ಲಿ ಚರ್ಚಿಸುವ ಅವಕಾಶ ಒದಗಿ ಬಂದಿದೆ. ಈ ಅವಕಾಶ ಕ್ಷೇತ್ರದ ಮತದಾರರಾದ ಕಾರ್ಮಿಕರು ಸದುಪಯೋಗಪಡಿಸಿಕೊಳ್ಳುವುದು.
    ಸಂವಾದದಲ್ಲಿ ಪಾಲ್ಗೊಳ್ಳಲು ಇಚ್ಛೆ ಇರುವ ಕಾರ್ಮಿಕರು ಮೇ.೫ರ ಮಧ್ಯಾಹ್ನ ೧೨ ಗಂಟೆಯೊಳಗಾಗಿ ತಿಳಿಸುವುದು. ಹೆಸರು ನೋಂದಾಯಿಸಿದವರು ಮಾತ್ರ ಸಂವಾದದಲ್ಲಿ ಭಾಗವಹಿಸಬಹುದಾಗಿದೆ. ಒಬ್ಬ ಅಭ್ಯರ್ಥಿಯೊಂದಿಗೆ ಅವರ ಅನುಯಾಯಿಗಳಲ್ಲಿ ಕೇವಲ ಒಬ್ಬರಿಗೆ ಮಾತ್ರ ಪ್ರವೇಶವಿರುತ್ತದೆ. ಮೊತ್ತಮೊದಲ ಬಾರಿಗೆ ಎಲ್ಲಾ ಅಭ್ಯರ್ಥಿಗಳನ್ನು ಒಂದೇ ವೇದಿಕೆಯ ಮೇಲೆ ಕೂರಿಸುವ ಮೂಲಕ ಕ್ಷೇತ್ರದ ಒಗ್ಗಟ್ಟನ್ನು ಪ್ರದರ್ಶಿಸುವುದು ನಮ್ಮ ಉದ್ದೇಶವಾಗಿದೆ. ವೇದಿಕೆಯಲ್ಲಿ ವೈಯಕ್ತಿಕ ನಿಂದನೆ ಮತ್ತು ಗಲಾಟೆಗಳಿಗೆ ಆಸ್ಪದ ನೀಡದಂತೆ ಸಹಕರಿಸುವುದು. ಹೆಚ್ಚಿನ ಮಾಹಿತಿಗೆ ಮೊ: ೯೪೮೧೪೯೩೯೮೩ ಸಂಖ್ಯೆಗೆ ಕರೆಮಾಡಬಹುದಾಗಿದೆ ಎಂದು ವೇದಿಕೆ ಪ್ರಧಾನ ಸಂಚಾಲಕ ಟಿ.ಜಿ ಬಸವರಾಜಯ್ಯ ತಿಳಿಸಿದ್ದಾರೆ.